ಬೆಂಗಳೂರು: ಪಶುವೈದ್ಯರ ನೇಮಕಾತಿ ವಿಚಾರದಲ್ಲಿ ಅಕ್ರಮ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ, ಪರೀಕ್ಷೆ ಇಲ್ಲದೆ ಮೆರಿಟ್ ಮತ್ತು ರೋಸ್ಟರ್ ಆಧಾರದಲ್ಲಿ ಪಶುವೈದ್ಯರನ್ನು ನೇರವಾಗಿ ನೇಮಕ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಎ. ಮಂಜು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ ಕೆಪಿಎಸ್ಸಿ ಪಶುವೈದ್ಯರ ನೇಮಕಾತಿ ಅಕ್ರಮ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಪಶುವೈದ್ಯರ ಹುದ್ದೆಗೆ 80 ಲಕ್ಷ ರೂಪಾಯಿ ಹಣ ಪಡೆದು ಕೆಲಸ ನೀಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ ಎಂದು ಹೇಳಿದ್ದಾರೆ.
2017ರ ಸೆಪ್ಟೆಂಬರ್ನಲ್ಲಿ ತಾವು ಸಚಿವರಾಗಿದ್ದ ಸಂದರ್ಭದಲ್ಲಿ 650 ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಸಚಿವ ಸಂಪುಟ ಅನುಮೋದನೆ ನೀಡಲಾಗಿತ್ತು. ಮೀಸಲಾತಿ ನಿಯಮದಂತೆ ನೇರ ನೇಮಕಾತಿ ನಡೆಸಿ ರೈತರ ಜಾನುವಾರುಗಳಿಗೆ ಚಿಕಿತ್ಸೆ ನೀಡುವ ಉದ್ದೇಶದಿಂದ ಹುದ್ದೆಗಳನ್ನು ಭರ್ತಿ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.
ಆದರೆ, ಈಗಿನ ಸರ್ಕಾರ ಪಶುವೈದ್ಯರ ನೇಮಕಾತಿಯನ್ನು ನೇರವಾಗಿ ಏಕೆ ಮಾಡಿಲ್ಲ ಎಂಬ ಪ್ರಶ್ನೆ ಮೂಡುತ್ತಿದೆ. ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಅರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಮೆರಿಟ್ ಮತ್ತು ರೋಸ್ಟರ್ ಆಧಾರದಲ್ಲಿ ನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಮೆರಿಟ್ ಇರುವವರಿಗೆ ನೇರ ನೇಮಕಾತಿ ಮಾಡದೆ ಇದ್ದರೆ, ಇದರ ಹಿಂದೆ ಬೇರೆ ಉದ್ದೇಶವಿದೆ ಎಂಬ ಅನುಮಾನ ಮೂಡುತ್ತದೆ. ಎಲ್ಲಾ ವೆಟರ್ನರಿ ವೈದ್ಯರಿಗೆ ಅಗತ್ಯ ಅವಕಾಶ ನೀಡಲಾಗಿತ್ತು. ಹೀಗಾಗಿ ಕೂಡಲೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಇದೇ ವೇಳೆ ಕಾವೇರಿ ನೀರು ಹಂಚಿಕೆ ವಿಚಾರವಾಗಿಯೂ ಮಾತನಾಡಿದ ಎ. ಮಂಜು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕಾವೇರಿ ಕೊಳ್ಳದ ಪ್ರದೇಶದಲ್ಲಿ ನೀರಿನ ಪ್ರಮಾಣ ಶೇ.60ರಷ್ಟು ಕಡಿಮೆಯಾಗಿದೆ. ಕೆರೆ-ಕಟ್ಟೆಗಳು ಖಾಲಿಯಾಗಿದ್ದು, ತಮಿಳುನಾಡಿಗೆ ನೀರು ಬಿಟ್ಟರೆ ರಾಜ್ಯದ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ನೀರಿನ ಸಮಸ್ಯೆ ಎದುರಾಗಲಿದೆ ಎಂದು ಎಚ್ಚರಿಸಿದ್ದಾರೆ.

