ರಾಯಚೂರು/ಯಾದಗಿರಿ: ಮಹಾರಾಷ್ಟ್ರ ಸೇರಿದಂತೆ ಕೃಷ್ಣಾ ನದಿ ಮೇಲ್ಭಾಗದ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಇದರ ಪರಿಣಾಮ ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗಿದ್ದು, ನದಿ ಮೈದುಂಬಿ ಹರಿಯುತ್ತಿದೆ.
ಕೃಷ್ಣಾ ನದಿಯ ನೀರಿನ ಮಟ್ಟ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ನದಿ ಪಾತ್ರದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ ರೈತರು ನದಿ ಪಾತ್ರಕ್ಕೆ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಪ್ರಸ್ತುತ ನಾರಾಯಣಪುರ ಜಲಾಶಯದ 24 ಕ್ರಸ್ಟ್ ಗೇಟ್ಗಳ ಮೂಲಕ ಸುಮಾರು 1.11 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಇದರಿಂದ ಲಿಂಗಸುಗೂರು, ದೇವದುರ್ಗ ಹಾಗೂ ರಾಯಚೂರು ತಾಲೂಕಿನ ನದಿ ದಂಡೆಯ ಗ್ರಾಮಗಳ ನಿವಾಸಿಗಳು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯ ಹಂತಕ್ಕೆ ತಲುಪಿದ್ದು, ಸೇತುವೆ ಜಲಾವೃತವಾಗಲು ಕೆಲವೇ ಅಡಿಗಳ ಅಂತರ ಉಳಿದಿದೆ. ನೀರಿನ ಮಟ್ಟ ಮತ್ತಷ್ಟು ಏರಿಕೆಯಾದರೆ ಸಂಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಆಲಮಟ್ಟಿ ಜಲಾಶಯದಿಂದ ನಿರಂತರವಾಗಿ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ನಾರಾಯಣಪುರ ಜಲಾಶಯದ ಒಳಹರಿವು ಹೆಚ್ಚುತ್ತಿದ್ದು, ಪರಿಸ್ಥಿತಿಗೆ ಅನುಗುಣವಾಗಿ ನೀರಿನ ಹೊರಹರಿವಿನ ಪ್ರಮಾಣವನ್ನು ಹಂತ ಹಂತವಾಗಿ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ.
ನದಿ ತೀರದ ನಿವಾಸಿಗಳು, ರೈತರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದ್ದು, ನದಿ ಹಾಗೂ ಜಲಾವೃತ ಪ್ರದೇಶಗಳ ಸಮೀಪ ಅನಗತ್ಯವಾಗಿ ತೆರಳದಂತೆ ಸೂಚನೆ ನೀಡಿದೆ.

