Home Blog

ಆನ್‌ಲೈನ್ ಔಷಧಿ ಮಾರಾಟಕ್ಕೆ ಬ್ರೇಕ್ ಹಾಕಿ!

ವಿಜಯಸಾಕ್ಷಿ ಸುದ್ದಿ, ಗದಗ: ಕಾಮರ್ಸ್ ಹಾಗೂ ಆನ್‌ಲೈನ್ ಮೂಲಕ ಕಾನೂನುಬಾಹಿರವಾಗಿ ನಡೆಯುತ್ತಿರುವ ಔಷಧಿ ಮಾರಾಟವನ್ನು ಸಂಪೂರ್ಣ ನಿಷೇಧಿಸಬೇಕೆಂದು ಆಗ್ರಹಿಸಿ ಅಖಿಲ ಭಾರತ ಔಷಧ ವ್ಯಾಪಾರಸ್ಥರ ಸಂಘ ನೀಡಿದ್ದ ಬಂದ್ ಕರೆಗೆ ಜಿಲ್ಲೆಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಯಿತು.
ಬುಧವಾರ ಬೆಳಗ್ಗಿನಿಂದಲೇ ಜಿಲ್ಲೆಯಾದ್ಯಂತ ಔಷಧ ವ್ಯಾಪಾರಸ್ಥರು ತಮ್ಮ ಮೆಡಿಕಲ್ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆಯಲ್ಲಿ ಭಾಗವಹಿಸಿದರು. ಆನ್‌ಲೈನ್ ಔಷಧಿ ಮಾರಾಟದಿಂದ ಸಾರ್ವಜನಿಕರ ಆರೋಗ್ಯಕ್ಕೆ ಅಪಾಯ ಎದುರಾಗಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಗಾಂಧಿ ವೃತ್ತದಿಂದ ಆರಂಭವಾದ ಔಷಧ ವ್ಯಾಪಾರಸ್ಥರ ಬೃಹತ್ ಬೈಕ್ ರ‌್ಯಾಲಿ ಟಾಂಗಾಕೂಟ, ಜೋಡಮಾರುತಿ ದೇವಸ್ಥಾನ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾಡಳಿತ ಭವನ ತಲುಪಿತು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಜಿಲ್ಲಾ ಔಷಧ ವ್ಯಾಪಾರಸ್ಥರ ಮುಖಂಡ ರಾಮನಗೌಡ ದಾನಪ್ಪಗೌಡ್ರ, ಇ-ಕಾಮರ್ಸ್ ಆನ್‌ಲೈನ್ ವ್ಯವಸ್ಥೆಯಲ್ಲಿ ಚೈನ್ ಸಿಸ್ಟಮ್ ದುರ್ಬಳಕೆಯಾಗುತ್ತಿದೆ ಎಂದು ಆರೋಪಿಸಿದರು. ಸಾರ್ವಜನಿಕರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಕೆಲವು ಆನ್‌ಲೈನ್ ಸಂಸ್ಥೆಗಳು ನಕಲಿ ಹಾಗೂ ಗುಣಮಟ್ಟವಿಲ್ಲದ ಔಷಧಿಗಳನ್ನು ರಾಜಾರೋಷವಾಗಿ ಮಾರಾಟ ಮಾಡುತ್ತಿವೆ. ನಾರ್ಕೋಟಿಕ್ಸ್ ಹಾಗೂ ಆಂಟಿಬಯೋಟಿಕ್ ಔಷಧಿಗಳನ್ನೂ ನಿರ್ಬಂಧವಿಲ್ಲದೇ ವಿತರಿಸಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಕೆಲವು ಆನ್‌ಲೈನ್ ಕಂಪನಿಗಳು ವೈದ್ಯರ ಅಧಿಕೃತ ಪ್ರಿಸ್ಕ್ರಿಪ್ಷನ್ ಇಲ್ಲದೇ ಔಷಧಿಗಳನ್ನು ರವಾನಿಸುತ್ತಿವೆ. ಇನ್ನೂ ಕೆಲವು ಕಡೆ ನಕಲಿ ವೈದ್ಯಕೀಯ ಚೀಟಿಗಳನ್ನು ಸೃಷ್ಟಿಸಿ ಔಷಧಿ ವಿತರಿಸಿರುವ ಪ್ರಕರಣಗಳೂ ಬೆಳಕಿಗೆ ಬಂದಿವೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಜ್ಞಾನೇಶ್ವರ್ ಖೋಕಲೆ, ಎಂ.ಡಿ. ಕಾಬಳ್ಳಿ, ಮಹದೇಗೌಡ ಲಿಂಗನಗೌಡ, ಸುರೇಶ ನಡುಗುಂದಿ, ರಂಜಾನ್ ಸಾಬ್ ನದಾಫ್, ಬರಡ್ಡಿ ಪಂಕಜ್ವಾರ್ಕರ್, ಜಾಫರ್ ಹೊಂಬಾಳ್, ಪುರುಷೋತ್ತಮ ಪುಣ್ಯ, ವಿಕ್ರಂ ಜೈನ್, ಸುರೇಂದ್ರ ಪತೇಪುರ್, ವಿನೋದ್ ಜೈನ್, ಉಮೇಶ್ ತುಪ್ಪದ, ಗಣೇಶ್ ಕಬಾಡಿ, ರಾಜಣ್ಣ ತ್ರಿಮಲೆ, ಭೀಮನಗೌಡ, ಶಪಿ ಕೊಪ್ಪಳ, ರಾಜು ಚೋಳಿ, ಅನಿಲ್ ಕುಣಿಕರ್, ಅನಿಲ್ ಬೂದಿಹಾಳ, ನಿವೃತ್ತಿನಾಥ್ ಖೋಕಲೆ, ಮಲ್ಲನಗೌಡ, ಸುರೇಶ ನಿಡಗುಂದಿ ಸೇರಿದಂತೆ ಜಿಲ್ಲೆಯ ನೂರಾರು ಮೆಡಿಕಲ್ ಹಾಗೂ ಫಾರ್ಮಾ ಸಂಸ್ಥೆಗಳ ಮಾಲೀಕರು ಹಾಗೂ ಪ್ರತಿನಿಧಿಗಳು ಭಾಗವಹಿಸಿದ್ದರು.
“ಸಾರ್ವಜನಿಕರ ಪ್ರಾಣಕ್ಕೆ ಕುತ್ತು ತರುತ್ತಿರುವ ಈ ಇ-ಕಾಮರ್ಸ್ ಔಷಧಿ ವಿತರಣಾ ವ್ಯವಸ್ಥೆಯನ್ನು ಸರ್ಕಾರ ತಕ್ಷಣ ಶಾಶ್ವತವಾಗಿ ಬಂದ್ ಮಾಡಬೇಕು”
ರಾಮನಗೌಡ ದಾನಪ್ಪಗೌಡ್ರ
ಜನೌಷಧಿ ಕೇಂದ್ರಗಳಿಂದ ಸೇವೆ ಮುಂದುವರಿಕೆ
ಜಿಲ್ಲಾದ್ಯಂತ ಖಾಸಗಿ ಮೆಡಿಕಲ್ ಸ್ಟೋರ್‌ಗಳು ಬಂದ್ ಆಗಿದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ನಗರದ ಟಾಂಗಾಕೂಟ ಹಾಗೂ ಪೊಲೀಸ್ ಠಾಣೆ ಆವರಣದಲ್ಲಿರುವ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳು ಎಂದಿನಂತೆ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಸೇವೆ ನೀಡಿದವು.

“ಆನ್‌ಲೈನ್ ಔಷಧಿ ಮಾರಾಟಕ್ಕೆ ಲಾಕ್ ಹಾಕಿ!”

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಆನ್‌ಲೈನ್ ಮೂಲಕ ನಡೆಯುತ್ತಿರುವ ಔಷಧಿ ಮಾರಾಟವನ್ನು ತಕ್ಷಣ ತಡೆಹಿಡಿಯಬೇಕು ಎಂದು ಆಗ್ರಹಿಸಿ ಔಷಧ ವ್ಯಾಪಾರಸ್ಥರ ಸಂಘ ನೀಡಿದ್ದ ಬಂದ್ ಕರೆಗೆ ಬುಧವಾರ ಲಕ್ಷ್ಮೇಶ್ವರ ಹಾಗೂ ಶಿರಹಟ್ಟಿ ತಾಲೂಕುಗಳಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಯಿತು.
ತಾಲೂಕಿನ ಬಹುತೇಕ ಮೆಡಿಕಲ್ ಅಂಗಡಿಗಳು ಸಂಪೂರ್ಣ ಬಂದ್ ಆಗಿದ್ದರಿಂದ ನಿತ್ಯದ ಔಷಧಿಗಾಗಿ ಬಂದ ಸಾರ್ವಜನಿಕರು ಪರದಾಡುವಂತಾಯಿತು. ಆದರೂ ತುರ್ತು ಆರೋಗ್ಯ ಸೇವೆಗೆ ಯಾವುದೇ ತೊಂದರೆಯಾಗದಂತೆ ವ್ಯಾಪಾರಸ್ಥರು ಅಗತ್ಯ ಔಷಧಿ ಪೂರೈಕೆಗೆ ಕ್ರಮ ಕೈಗೊಂಡಿದ್ದರು.
ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದ ಔಷಧ ವ್ಯಾಪಾರಸ್ಥರು ತಹಸೀಲ್ದಾರ್ ಕಚೇರಿಗೆ ತೆರಳಿ ತಹಸೀಲ್ದಾರ್ ಧನಂಜಯ ಎಂ. ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯ ವೇಳೆ ಮಾತನಾಡಿದ ತಾಲೂಕು ಔಷಧ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಚಂದ್ರಶೇಖರಗೌಡ ಪಾಟೀಲ, ಇ-ಫಾರ್ಮಸಿ ಮೂಲಕ ಔಷಧಿ ಮಾರಾಟ ಮಾಡುತ್ತಿರುವ ಕಾರ್ಪೊರೇಟ್ ಕಂಪನಿಗಳು ಭಾರೀ ಪ್ರಮಾಣದ ರಿಯಾಯಿತಿ ನೀಡುವ ಮೂಲಕ ಸ್ಥಳೀಯ ವ್ಯಾಪಾರಸ್ಥರ ಬದುಕಿಗೆ ಸಂಕಷ್ಟ ತಂದಿವೆ ಎಂದು ಆರೋಪಿಸಿದರು.
ಆನ್‌ಲೈನ್ ಔಷಧಿ ಮಾರಾಟದಿಂದ ಸ್ಥಳೀಯ ಮೆಡಿಕಲ್ ಅಂಗಡಿಗಳ ವಹಿವಾಟು ಕುಸಿಯುತ್ತಿದೆ. ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಸಾವಿರಾರು ಔಷಧ ವ್ಯಾಪಾರಸ್ಥರು ನಿರುದ್ಯೋಗಿಗಳಾಗುವ ಪರಿಸ್ಥಿತಿ ಎದುರಾಗಲಿದೆ ಎಂದು ಹೇಳಿದರು.
ಗದಗ ಜಿಲ್ಲೆಯಲ್ಲಿ ಸುಮಾರು 480ಕ್ಕೂ ಹೆಚ್ಚು ಔಷಧ ಅಂಗಡಿಗಳು ಬಂದ್‌ನಲ್ಲಿ ಭಾಗವಹಿಸಿ ಆನ್‌ಲೈನ್ ಔಷಧಿ ಮಾರಾಟದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ ಎಂದು ತಿಳಿಸಿದರು.
ಮೆಡಿಕಲ್ ಅಂಗಡಿಗಳು ಬಂದ್ ಆಗಿದ್ದರೂ ಮಾನವೀಯತೆಯ ದೃಷ್ಟಿಯಿಂದ ತುರ್ತು ಸೇವೆಗೆ ಅಗತ್ಯ ಔಷಧಿ ಪೂರೈಕೆ ಮಾಡಲಾಗಿದೆ ಎಂದು ಹೇಳಿದರು.
ಮನವಿ ಸ್ವೀಕರಿಸಿದ ತಹಸೀಲ್ದಾರ್ ಧನಂಜಯ ಎಂ., ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಕಳುಹಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ವಿನಾಯಕ ಹೆಬ್ಬಳ್ಳಿ, ಆನಂದ ಓದು, ಮಲ್ಲಿಕಾರ್ಜುನ ದೊಡ್ಡೂರ, ಸಿ.ಆರ್. ಪಾಟೀಲ, ಗಂಗಾಧರ ಮೆಕ್ಕಿ, ಶಿವಪುತ್ರಪ್ಪ ಮಲ್ಲಾಡದ, ಪ್ರಕಾಶ ವಡಕಣ್ಣವರ, ಮಲ್ಲಿಕಾರ್ಜುನ ಕೊಟಗಿ, ರಂಗನಾಥ ಬದಿ, ಬಸವರಾಜ ಕೂಸನೂರ, ಜಯಣ್ಣ ಮೇಗಿಲಮನಿ, ಪ್ರಸಾದ ಗುಡಗೇರಿ, ಸಾಹಿಲ್ ಡಿ., ಫಕ್ಕೀರಸ್ವಾಮಿ ದಿಗಂಬರಮಠ, ಎಸ್.ಬಿ. ಮುಳಗುಂದ ಸೇರಿದಂತೆ ಹಲವರು ಉಪಸ್ಥಿತರಿದ್ದರು.
“ಆನ್‌ಲೈನ್ ಔಷಧಿ ಮಾರಾಟದಿಂದ ಸ್ಥಳೀಯ ಮೆಡಿಕಲ್ ಅಂಗಡಿಗಳ ವಹಿವಾಟು ಕುಸಿಯುತ್ತಿದೆ. ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಸಾವಿರಾರು ಔಷಧ ವ್ಯಾಪಾರಸ್ಥರು ನಿರುದ್ಯೋಗಿಗಳಾಗುವ ಪರಿಸ್ಥಿತಿ ಎದುರಾಗಲಿದೆ.”
ಚಂದ್ರಶೇಖರಗೌಡ ಪಾಟೀಲ
ಅಧ್ಯಕ್ಷರು, ತಾಲೂಕು ಔಷಧ ವ್ಯಾಪಾರಸ್ಥರ ಸಂಘ

“ಪುಲಿಗೆರೆ ಕನ್ನಡದ ಮೊದಲ ಸಾಹಿತ್ಯ ರಾಜಧಾನಿ!”

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: “ಆದಿಕವಿ ಪಂಪನ ನಾಡಾದ ಪುಲಿಗೆರೆ, ಇಂದಿನ ಲಕ್ಷ್ಮೇಶ್ವರ, 6-7ನೇ ಶತಮಾನದಲ್ಲೇ ಕನ್ನಡ ಸಾಹಿತ್ಯದ ರಾಜಧಾನಿಯಾಗಿ ಗುರುತಿಸಿಕೊಂಡಿತ್ತು. ಹಳಗನ್ನಡ ಸಾಹಿತ್ಯದ ಘಟಿಕಾಸ್ಥಾನವಾಗಿ ಈ ನೆಲ ಕನ್ನಡ ಸಂಸ್ಕೃತಿ, ಸಾಹಿತ್ಯ ಮತ್ತು ಇತಿಹಾಸದ ವೈಭವವನ್ನು ಜಗತ್ತಿಗೆ ಪರಿಚಯಿಸಿದೆ” ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ರಾಜ್ಯಾಧ್ಯಕ್ಷ ನಾಡೋಜ ಡಾ. ಮನು ಬಳಿಗಾರ ಹೇಳಿದರು.
ಪಟ್ಟಣದ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಸಮುದಾಯ ಭವನದಲ್ಲಿ ಬುಧವಾರ ನಡೆದ ‘ಪುಲಿಗೆರೆ ಪರಿಸರದ ಪ್ರಾಚೀನ ಕನ್ನಡ ಸಾಹಿತ್ಯ’ ಕುರಿತ ಮೂರು ದಿನಗಳ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ, ಭಾರತೀಯ ಭಾಷಾ ಸಂಸ್ಥಾನ, ಉನ್ನತ ಶಿಕ್ಷಣ ಇಲಾಖೆ, ಶಿಕ್ಷಣ ಸಚಿವಾಲಯ, ಭಾರತ ಸರ್ಕಾರ, ಮೈಸೂರಿನ ಮಾನಸಗಂಗೋತ್ರಿ, ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಲಕ್ಷ್ಮೇಶ್ವರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತುಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಪುಲಿಗೆರೆ ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ಕೊಡುಗೆ ನೀಡಿದ ನೆಲವಾಗಿದ್ದು, ಸಂಶೋಧನಾ ಲಿಪಿಗಳ ಕೇಂದ್ರವಾಗಿಯೂ ಮಹತ್ವ ಪಡೆದಿದೆ ಎಂದು ಹೇಳಿದರು.
ಪುಲಿಗೆರೆಯ ಶಾಸನಗಳು, ಸಾಹಿತ್ಯ, ಶಿಲ್ಪಕಲೆ, ನಾಟಕ ಹಾಗೂ ಸಂಗೀತ ಕ್ಷೇತ್ರಗಳ ಕುರಿತು ಇನ್ನಷ್ಟು ಆಳವಾದ ಸಂಶೋಧನೆ ನಡೆಯಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು.
ಆದಿಕವಿ ಪಂಪನ ಸಾಹಿತ್ಯ ಕ್ಷೇತ್ರವೇ ಪುಲಿಗೆರೆ ಎಂಬುದನ್ನು ಬ್ರಿಟಿಷ್ ಸಂಶೋಧಕ ಬಿ.ಎಲ್. ರೈಸ್ ಸಾಕ್ಷೀಕರಿಸಿದ್ದಾರೆ. ಹರಿಹರ, ರಾಘವಾಂಕ, ಪಾಲ್ಕುರಿಕೆ ಸೋಮನಾಥ ಹಾಗೂ ಆದಯ್ಯ ಕವಿಗಳು ಇಲ್ಲಿನ ಸೋಮೇಶ್ವರ ದೇವಸ್ಥಾನದಿಂದ ಸ್ಫೂರ್ತಿ ಪಡೆದಿದ್ದರು ಎಂದು ತಿಳಿಸಿದರು.
 “ದೇಶದ ಯಾವುದೇ ಭಾಗದಲ್ಲಿ ಕಾಣದಂತಹ ನಂದಿಯ ಮೇಲೆ ಸೋಮೇಶ್ವರ ಮತ್ತು ಪಾರ್ವತಿ ಮೂರ್ತಿಗಳು ಇಲ್ಲಿರುವುದು ಪುಲಿಗೆರೆಯ ಹೆಮ್ಮೆ. ಇಂತಹ ಮಹತ್ವದ ಇತಿಹಾಸವನ್ನು ಮುಂದಿನ ಪೀಳಿಗೆಗೆ ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದು ಹೇಳಿದರು.
ಮೂರು ದಿನಗಳ ವಿಚಾರ ಸಂಕಿರಣದ ವಿಷಯಾಧಾರಿತ ಪುಸ್ತಕ ಪ್ರಕಟವಾಗಬೇಕು ಎಂದು ಸಲಹೆ ನೀಡಿದ ಅವರು, ತ್ರಿಭಾಷಾ ನೀತಿಯಿಂದ ಕನ್ನಡ ಭಾಷೆಗೆ ಆತಂಕ ಎದುರಾಗಿದೆ. ಮಾಧ್ಯಮಿಕ ಶಿಕ್ಷಣದವರೆಗೆ ಮಾತೃಭಾಷೆಯಲ್ಲೇ ಶಿಕ್ಷಣ ನೀಡಬೇಕು ಎಂದು ಒತ್ತಾಯಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಭಾರತೀಯ ಭಾಷಾ ಸಂಸ್ಥಾನದ ಯೋಜನಾ ನಿರ್ದೇಶಕ ಡಾ. ನೀಲಗಿರಿ ತಳವಾರ, “ಪಂಪನಿಗೂ ಪುಲಿಗೆರಿಗೂ ಅವಿನಾಭಾವ ಸಂಬಂಧವಿದೆ. ಐತಿಹಾಸಿಕ ಸಾಹಿತ್ಯ ಪರಂಪರೆಯ ಈ ನೆಲದಲ್ಲಿ ನಡೆಯುತ್ತಿರುವ ವಿಚಾರ ಸಂಕಿರಣಕ್ಕೆ ಎಲ್ಲರೂ ಬೆಂಬಲ ನೀಡಬೇಕು” ಎಂದರು.
ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಕನ್ನಡ ನಾಡು-ನುಡಿಗಾಗಿ ಪ್ರತಿಯೊಬ್ಬರೂ ಕೆಲಸ ಮಾಡಬೇಕು. ಪಟ್ಟಣದಲ್ಲಿ ನಿರ್ಮಾಣವಾಗಲಿರುವ ಕನ್ನಡ ಸಾಹಿತ್ಯ ಭವನಕ್ಕೆ ಸಹಕಾರ ನೀಡುವುದಾಗಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಜಿಲ್ಲಾಧ್ಯಕ್ಷ ವಿವೇಕಾನಂದಗೌಡ ಪಾಟೀಲ ವಹಿಸಿದ್ದರು. ಮಾಜಿ ಶಾಸಕ ಜಿ.ಎಂ. ಮಹಾಂತಶೆಟ್ಟರ, ರಾಮಣ್ಣ ಲಮಾಣಿ, ವಿಶ್ರಾಂತ ಪ್ರಾಚಾರ್ಯ ಪ್ರೊ. ಶಿವಕುಮಾರ ಶಿಗ್ಲಿ, ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಆರ್.ಬಿ. ಬನ್ನೂರ, ಪ್ರೊ. ಆರ್.ಎನ್. ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.
 “ಪುಲಿಗೆರೆ ಮುನ್ನೂರು ಪ್ರಾಂತ್ಯಗಳ ರಾಜಧಾನಿಯಾಗಿತ್ತು. ಇಲ್ಲಿನ ಸೋಮೇಶ್ವರ ದೇವಸ್ಥಾನ ಹಾಗೂ ಶಂಖ ಬಸದಿಗಳಲ್ಲಿರುವ ನೂರಾರು ಶಾಸನಗಳು ಈ ನೆಲದ ಹಿರಿಮೆ-ಗರಿಮೆಗೆ ಸಾಕ್ಷಿಯಾಗಿವೆ”
ಡಾ. ಮನು ಬಳಿಗಾರ
ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ರಾಜ್ಯಾಧ್ಯಕ್ಷ

“ಇನ್ನು ಕಸಕ್ಕೂ ಕಾನೂನಿನ ಕಟ್ಟುಪಾಡು!”

ವಿಜಯಸಾಕ್ಷಿ ಸುದ್ದಿ, ಗದಗ: “ಪರಿಸರ ಸಂರಕ್ಷಣೆ ಹಾಗೂ ನಗರಗಳ ಸ್ವಚ್ಛತೆಗಾಗಿ ಹೊಸ ಘನ ತ್ಯಾಜ್ಯ ನಿರ್ವಹಣಾ ನಿಯಮಗಳು–2026ನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ನಿಯಮ ಪಾಲಿಸದವರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ಹಿಂದೇಟು ಹಾಕಬಾರದು” ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಎಚ್ಚರಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಘನ ತ್ಯಾಜ್ಯ ನಿರ್ವಹಣಾ ನಿಯಮಗಳು–2026ರ ಅನುಷ್ಠಾನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ನಿಯಮಗಳ ಅನ್ವಯ ಸಾರ್ವಜನಿಕರು, ಮನೆಮಠಗಳು ಹಾಗೂ ವ್ಯಾಪಾರೋದ್ಯಮಿಗಳು ತಮ್ಮ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಕಸವನ್ನು ಕಡ್ಡಾಯವಾಗಿ ನಾಲ್ಕು ವಿಭಾಗಗಳಾಗಿ ವಿಂಗಡಿಸಿ ನಗರಸಭೆಯ ಕಸ ಸಂಗ್ರಹ ವಾಹನಗಳಿಗೆ ನೀಡಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಬೃಹತ್ ಕಸ ಉತ್ಪಾದಕರನ್ನು (Bulk Waste Generators) ಗುರುತಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. ದಿನಕ್ಕೆ 100 ಕೆಜಿಗೂ ಅಧಿಕ ಕಸ ಉತ್ಪಾದಿಸುವ ಅಥವಾ 40 ಸಾವಿರ ಲೀಟರ್‌ಗಿಂತ ಹೆಚ್ಚು ನೀರು ಬಳಸುವ ಹಾಗೂ 20 ಸಾವಿರ ಚದರ ಮೀಟರ್‌ಗಿಂತ ಹೆಚ್ಚು ವಿಸ್ತೀರ್ಣ ಹೊಂದಿರುವ ಸಂಸ್ಥೆಗಳು ಈ ನಿಯಮದ ವ್ಯಾಪ್ತಿಗೆ ಬರುತ್ತವೆ ಎಂದರು.
ಹೊಸ ಘನ ತ್ಯಾಜ್ಯ ನಿರ್ವಹಣಾ ನಿಯಮಗಳು ಹಾಗೂ ತ್ಯಾಜ್ಯ ವಿಲೇವಾರಿ ಕುರಿತಂತೆ ಸಾರ್ವಜನಿಕರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.
ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ ಮಾತನಾಡಿ, ಘನ ತ್ಯಾಜ್ಯ ನಿರ್ವಹಣಾ ನಿಯಮಗಳು–2026 ಎಪ್ರಿಲ್ 1ರಿಂದ ಜಾರಿಗೆ ಬಂದಿವೆ ಎಂದು ಹೇಳಿದರು.
 “ಸೆಪ್ಟೆಂಬರ್ 30, 2026ರೊಳಗೆ ಎಲ್ಲಾ ರಾಜ್ಯಗಳು ಹಾಗೂ ಸ್ಥಳೀಯ ಸಂಸ್ಥೆಗಳು ತಮ್ಮದೇ ಆದ ರಾಜ್ಯ ನೀತಿಯನ್ನು ಅಂತಿಮಗೊಳಿಸಬೇಕು” ಎಂದು ಬಸನಗೌಡ ಕೋಟೂರ ತಿಳಿಸಿದರು.
ಅಕ್ಟೋಬರ್ 30, 2026ರೊಳಗೆ ನಗರ ಪ್ರದೇಶಗಳಲ್ಲಿನ ಹಳೆಯ ಕಸದ ರಾಶಿಗಳ ಭೌಗೋಳಿಕ ಮ್ಯಾಪಿಂಗ್ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಅಕ್ಟೋಬರ್ 31, 2027ರೊಳಗೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಕಸ ನಿರ್ವಹಣೆಗೆ ಸಂಬಂಧಿಸಿದ ಉಪ-ಕಾಯ್ದೆಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಚಳಗೇರಿ, ಪರಿಸರ ಅಧಿಕಾರಿ ಲೋಹಿತ್ ಕುಮಾರ್ ಪಿ.ಜೆ., ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ, ಗದಗ-ಬೆಟಗೇರಿ ನಗರಸಭೆಯ ಕಾರ್ಯಕಾರಿ ಅಭಿಯಂತರ (ಪರಿಸರ) ಆನಂದ ಬದಿ, ಎಸ್‌ಡಬ್ಲ್ಯುಎಂ ತಜ್ಞ ಕೊಟ್ರೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
“ಹಸಿ ತ್ಯಾಜ್ಯ, ಒಣ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ ಹಾಗೂ ವಿಶೇಷ ಕಾಳಜಿ ತ್ಯಾಜ್ಯ ಎಂದು ಕಸವನ್ನು ಪ್ರತ್ಯೇಕಿಸುವುದು ಕಡ್ಡಾಯ. ಪರಿಸರ ರಕ್ಷಣೆಗಾಗಿ ಪ್ರತಿಯೊಬ್ಬರೂ ಸಹಕಾರ ನೀಡಬೇಕು”
ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ
ಯಾವ ಕಸ ಯಾವ ವಿಭಾಗಕ್ಕೆ..?
ಹಸಿ ತ್ಯಾಜ್ಯ:
ಅಡುಗೆ ಮನೆಯ ತ್ಯಾಜ್ಯ, ತರಕಾರಿ, ಹಣ್ಣು, ಹೂವು, ಮಾಂಸದ ತ್ಯಾಜ್ಯ ಹಾಗೂ ಕೊಳೆಯುವ ವಸ್ತುಗಳು
ಒಣ ತ್ಯಾಜ್ಯ:
ಪ್ಲಾಸ್ಟಿಕ್, ಬಟ್ಟೆ, ಕಬ್ಬಿಣ, ರಬ್ಬರ್, ಮರದ ವಸ್ತುಗಳು
ಸ್ಯಾನಿಟರಿ ತ್ಯಾಜ್ಯ:
ಡೈಪರ್‌, ಸ್ಯಾನಿಟರಿ ನ್ಯಾಪ್ಕಿನ್‌ಗಳು
ವಿಶೇಷ ಕಾಳಜಿ ತ್ಯಾಜ್ಯ:
ಪೇಂಟ್ ಡಬ್ಬಿಗಳು, ಔಷಧ ಬಾಟಲಿಗಳು, ಇ-ವೇಸ್ಟ್‌, ಬಲ್ಬ್‌, ಹಳೆಯ ಬ್ಯಾಟರಿ, ಬಳಸಿದ ಸಿರಿಂಜ್‌, ಬ್ಯಾಂಡೇಜ್‌ಗಳು

ರಾಹುಲ್ ಗಾಂಧಿ ಹೇಳಿಕೆ ನಾಚಿಕೆಗೇಡು: ‘ದೇಶ ದ್ರೋಹಿ’ ಮಾತಿಗೆ ಜೋಶಿ ತಿರುಗೇಟು!

ನವದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಆರ್‌ಎಸ್‌ಎಸ್ ವಿರುದ್ಧ “ದೇಶದ್ರೋಹಿಗಳು” ಎಂಬ ಹೇಳಿಕೆ ನೀಡಿರುವುದು ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.

ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ, ರಾಹುಲ್ ಗಾಂಧಿಯ ಹೇಳಿಕೆ “ನಾಚಿಕೆಗೇಡಿನದು” ಎಂದು ಟೀಕಿಸಿದ್ದಾರೆ. ರಾಷ್ಟ್ರಕ್ಕಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವವರನ್ನು ದೇಶದ್ರೋಹಿಗಳೆಂದು ಕರೆಯುವುದು ದೇಶಭಕ್ತರಿಗೆ ಮಾಡಿದ ಅವಮಾನ ಎಂದು ಅವರು ಹೇಳಿದ್ದಾರೆ.

ತುರ್ತು ಪರಿಸ್ಥಿತಿಯ ಕಾಲದಲ್ಲಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕಿದ ಇತಿಹಾಸವನ್ನು ಹೊಂದಿರುವ ಕಾಂಗ್ರೆಸ್ ಪಕ್ಷವೇ ಈಗ ಪ್ರಜಾಪ್ರಭುತ್ವದ ಪಾಠ ಹೇಳುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳನ್ನು ನಿಯಂತ್ರಿಸುವುದು, ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಹಾಕುವುದು ಹಾಗೂ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸುವುದು ಕಾಂಗ್ರೆಸ್‌ನ ಇತಿಹಾಸ ಎಂದು ಆರೋಪಿಸಿದ್ದಾರೆ.

ಚೀನಾದೊಂದಿಗೆ ಸಂಬಂಧ, 1962ರ ಯುದ್ಧದ ಪರಿಣಾಮಗಳು, ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಸಿಗಬೇಕಿದ್ದ ಸ್ಥಾನಗಳನ್ನು ಉಲ್ಲೇಖಿಸಿದ ಜೋಶಿ, ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ದೇಶದ ಜಾಗತಿಕ ಸ್ಥಾನಮಾನ ದುರ್ಬಲಗೊಂಡಿದೆ ಎಂದು ಟೀಕಿಸಿದ್ದಾರೆ.

ಇನ್ನು ರಾಹುಲ್ ಗಾಂಧಿಗೆ ಹತಾಶೆ ಹೆಚ್ಚಾಗಿದೆ ಎಂದು ಹೇಳಿರುವ ಅವರು, ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಆರ್ಥಿಕವಾಗಿ ಮತ್ತು ಜಾಗತಿಕವಾಗಿ ಬಲಿಷ್ಠ ರಾಷ್ಟ್ರವಾಗಿ ಬೆಳೆಯುತ್ತಿದೆ. ರಾಷ್ಟ್ರವಾದಿ ಶಕ್ತಿಗಳನ್ನು ಟೀಕಿಸುವ ಮೂಲಕ ಕಾಂಗ್ರೆಸ್ ತನ್ನ ಇತಿಹಾಸವನ್ನು ಮುಚ್ಚಿಹಾಕಲು ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

ಮತ್ತೊಂದೆಡೆ, ರಾಹುಲ್ ಗಾಂಧಿ ತಮ್ಮ ಹೇಳಿಕೆಯಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಸಂವಿಧಾನದ ಮೇಲೆ ದಾಳಿ ಮಾಡುತ್ತಿದೆ, ಇಂಧನ ಬೆಲೆಗಳ ವಿಷಯದಲ್ಲಿ ಜನರಿಗೆ ತಪ್ಪು ಭರವಸೆ ನೀಡಲಾಗಿದೆ ಹಾಗೂ ಆರ್ಥಿಕ ನೀತಿಗಳ ಕುರಿತು ಗಂಭೀರ ಪ್ರಶ್ನೆಗಳು ಇವೆ ಎಂದು ಆರೋಪಿಸಿದ್ದಾರೆ.

ಈ ಹೇಳಿಕೆ–ಪ್ರತಿಹೇಳಿಕೆಗಳ ನಡುವೆ ರಾಷ್ಟ್ರ ರಾಜಕೀಯದಲ್ಲಿ ಮತ್ತೊಮ್ಮೆ ತೀವ್ರ ವಾಗ್ವಾದದ ವಾತಾವರಣ ನಿರ್ಮಾಣವಾಗಿದೆ.

ಮೇ 22ರಿಂದ ರಾಷ್ಟ್ರಮಟ್ಟದ ‘ಮೂಟ್ ಕೋರ್ಟ್’ ಮಹಾಸ್ಪರ್ಧೆ

ವಿಜಯಸಾಕ್ಷಿ ಸುದ್ದಿ, ಗದಗಳ ಗದಗ ನಗರ ಮತ್ತೊಮ್ಮೆ ರಾಷ್ಟ್ರಮಟ್ಟದ ಕಾನೂನು ಚಟುವಟಿಕೆಗಳಿಗೆ ಸಾಕ್ಷಿಯಾಗಲಿದ್ದು, ಕೆ.ಎಲ್.ಇ. ಸಂಸ್ಥೆಯ ಎಸ್.ಎ. ಮಾನ್ವಿ ಕಾನೂನು ಮಹಾವಿದ್ಯಾಲಯ ವತಿಯಿಂದ ಮೇ 22ರಿಂದ 24ರವರೆಗೆ 3ನೇ ರಾಷ್ಟ್ರೀಯ ಕಲ್ಪಿತ ನ್ಯಾಯಾಲಯ ಸ್ಪರ್ಧೆ–2026 ಆಯೋಜಿಸಲಾಗಿದೆ. ದೇಶದ ವಿವಿಧ ರಾಜ್ಯಗಳಿಂದ 27 ಕಾನೂನು ವಿದ್ಯಾರ್ಥಿ ತಂಡಗಳು ಭಾಗವಹಿಸುತ್ತಿದ್ದು, ಮೂರು ದಿನಗಳ ಕಾಲ ಗದಗದಲ್ಲಿ ಕಾನೂನು ವಾದ-ಪ್ರತಿವಾದಗಳ ಸಿಡಿಲು ಮೊಳಗಲಿದೆ.

ಈ ಕುರಿತು ಕಾಲೇಜಿನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸಂಜೀವ ಎಂ. ಹುಲ್ಲೂರ ಮಾಹಿತಿ ನೀಡಿದರು.

ಈ ವರ್ಷದ ಸ್ಪರ್ಧೆ “ಹಿಂದೂ ಕಾನೂನಿನ ದಾಂಪತ್ಯ ಹಕ್ಕುಗಳ ಮರುಸ್ಥಾಪನೆ” ವಿಷಯವನ್ನು ಆಧರಿಸಿಕೊಂಡಿದ್ದು, ಕಾನೂನು ವಿದ್ಯಾರ್ಥಿಗಳಲ್ಲಿ ವಾದ ಮಂಡನೆ, ಕಾನೂನು ಸಂಶೋಧನೆ ಹಾಗೂ ನ್ಯಾಯಾಂಗ ಪ್ರಕ್ರಿಯೆಯ ಅರಿವು ಬೆಳೆಸುವ ಉದ್ದೇಶ ಹೊಂದಿದೆ. ರಾಷ್ಟ್ರಮಟ್ಟದ ಈ ಸ್ಪರ್ಧೆ ಯುವ ಕಾನೂನು ಪ್ರತಿಭೆಗಳಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಮಹತ್ವದ ವೇದಿಕೆಯಾಗಲಿದೆ ಎಂದರು.

ಮೇ 22ರಂದು ಸಂಜೆ 5 ಗಂಟೆಗೆ ಗದಗದ ಜೆ.ಟಿ. ಕಾಲೇಜು ಆವರಣದ ಸಭಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಮಹಾತ್ಮ ಗಾಂಧೀ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿಗಳು (ಪ್ರ) ಹಾಗೂ ಕುಲಸಚಿವರಾದ ಪ್ರೊ. (ಡಾ.) ಸುರೇಶ ವಿ. ನಾಡಗೌಡ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಡಾ. ಸಂಜೀವ ಎಂ. ಹುಲ್ಲೂರ ಹೇಳಿದರು.

ಕರ್ನಾಟಕ ಉಚ್ಚ ನ್ಯಾಯಾಲಯದ ವಕೀಲರಾದ ಡಾ. ಜಗದೀಶ ಎಸ್. ಹಾಲಶೆಟ್ಟಿ ಹಾಗೂ ಜೆ.ಟಿ. ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ.ಜಿ. ಪಾಟೀಲ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಎಸ್.ಎ. ಮಾನ್ವಿ ಕಾನೂನು ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಎಸ್.ಎ. ಮಾನ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಸ್ಪರ್ಧೆಯಲ್ಲಿ ಪ್ರಾಥಮಿಕ ಸುತ್ತು, ಕ್ವಾರ್ಟರ್ ಫೈನಲ್, ಸೆಮಿ ಫೈನಲ್ ಹಾಗೂ ಅಂತಿಮ ಸುತ್ತುಗಳು ನಡೆಯಲಿವೆ.

ಮೇ 24ರಂದು ಮಧ್ಯಾಹ್ನ 3 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಬಿ.ಎ. ಪಾಟೀಲ ಸಮಾರೋಪ ಭಾಷಣ ಮಾಡಲಿದ್ದಾರೆ.

ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಉಮೇಶ ಮಂಜುನಾಥ ಭಟ್ ಅಡಿಗ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗದ ಅಧ್ಯಕ್ಷ ಎಂ.ಐ. ಶಿಗ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಕೆ.ಎಲ್.ಇ. ಕಾನೂನು ಮಹಾವಿದ್ಯಾಲಯ, ಬೆಂಗಳೂರಿನ ಪ್ರಾಚಾರ್ಯ ಹಾಗೂ ಕಾನೂನು ಅಕಾಡೆಮಿ ನಿರ್ದೇಶಕ ಡಾ. ಜೆ.ಎಂ. ಮಲ್ಲಿಕಾರ್ಜುನಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸ್ಥಾನಿಕ ಆಡಳಿತ ಮಂಡಳಿ ಸದಸ್ಯರಾದ ಬಿ.ಜಿ. ಶೆಲ್ಲಿಕೇರಿ ಮತ್ತು ಎಸ್.ಎಫ್. ಹಾದಿಮನಿ ಉಪಸ್ಥಿತರಿರುವರು ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸಂಜೀವ ಎಂ. ಹುಲ್ಲೂರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಎಸ್.ಎ. ಮಾನ್ವಿ, ಎಸ್.ಎಫ್. ಹಾದಿಮನಿ, ಬಿ.ಜಿ. ಶೆಲ್ಲಿಕೇರಿ, ಪಿ.ಜಿ. ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಜೂ.30ರಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಆರಂಭ

ವಿಜಯಸಾಕ್ಷಿ ಸುದ್ದಿ, ಧಾರವಾಡ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಧಾರವಾಡ ಜಿಲ್ಲೆಯಲ್ಲಿ ಜೂನ್ 30ರಿಂದ ಅಕ್ಟೋಬರ್ 7ರವರೆಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026 ಕಾರ್ಯ ನಡೆಯಲಿದ್ದು, ಈ ಪ್ರಕ್ರಿಯೆ ಯಶಸ್ವಿಯಾಗಿ ಜರುಗಲು ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳು ಸಹಕಾರ ನೀಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮನವಿ ಮಾಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಸಮಗ್ರತೆ ಕಾಪಾಡಿಕೊಳ್ಳುವುದು ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅತ್ಯಗತ್ಯ ಎಂದರು.
“ಜಿಲ್ಲೆಯಲ್ಲಿ ಮತದಾರರ ಮ್ಯಾಪಿಂಗ್ ಕಾರ್ಯ ಈಗಾಗಲೇ ಶೇ.89.94ರಷ್ಟು ಪೂರ್ಣಗೊಂಡಿದ್ದು, ಶೇ.100 ಸಾಧಿಸುವ ಗುರಿ ಹೊಂದಲಾಗಿದೆ. ಮತಗಟ್ಟೆ ಮಟ್ಟದ ಏಜೆಂಟರು (ಬಿಎಲ್‌ಎ) ಹಾಗೂ ಮತಗಟ್ಟೆ ಅಧಿಕಾರಿಗಳು (ಬಿಎಲ್‌ಒ) ಸಮನ್ವಯದಿಂದ ಕಾರ್ಯನಿರ್ವಹಿಸಬೇಕು” ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಎಡಿಸಿ ಗೀತಾ ಸಿ.ಡಿ., ಚುನಾವಣಾ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಪರಿಷ್ಕರಣೆ ವೇಳಾಪಟ್ಟಿ ಪ್ರಕಟ
ಭಾರತ ಚುನಾವಣಾ ಆಯೋಗ ಪ್ರಕಟಿಸಿದ ವೇಳಾಪಟ್ಟಿಯಂತೆ ಜೂನ್ 20ರಿಂದ 29ರವರೆಗೆ ಪೂರ್ವ ಸಿದ್ಧತೆ, ತರಬೇತಿ ಮತ್ತು ಮುದ್ರಣ ಕಾರ್ಯ, ಜೂನ್ 30ರಿಂದ ಜುಲೈ 29ರವರೆಗೆ ಮನೆಮನೆಗೆ ಭೇಟಿ, ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟ, ಆಗಸ್ಟ್ 5ರಿಂದ ಸೆಪ್ಟೆಂಬರ್ 4ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆ,
ಸೆಪ್ಟೆಂಬರ್ 5ರಿಂದ ಅಕ್ಟೋಬರ್ 3ರವರೆಗೆ ಅರ್ಜಿಗಳ ವಿಲೇವಾರಿ, ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ
“20 ವರ್ಷಗಳ ಬಳಿಕ ಸಮಗ್ರ ಪರಿಷ್ಕರಣೆ”
“2002-04ರ ನಂತರ ಇದೀಗ 20 ವರ್ಷಗಳ ಬಳಿಕ ಸಮಗ್ರ ಪರಿಷ್ಕರಣೆ ನಡೆಯುತ್ತಿದೆ. ಪುನರಾವರ್ತಿತ ಹೆಸರುಗಳು, ಮೃತರ ಹೆಸರುಗಳು ಹಾಗೂ ವಲಸೆಯಿಂದ ಉಂಟಾಗಿರುವ ದೋಷಗಳನ್ನು ಸರಿಪಡಿಸಲು ಈ ಪ್ರಕ್ರಿಯೆ ಸಹಕಾರಿಯಾಗಲಿದೆ” ಎಂದು ಜಿಲ್ಲಾಧಿಕಾರಿ ಹೇಳಿದರು.
ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 1,665 ಮತಗಟ್ಟೆಗಳಿದ್ದು, ಮೇ 19ರ ವೇಳೆಗೆ ಒಟ್ಟು 16,23,933 ಮತದಾರರಿದ್ದಾರೆ. ಇದರಲ್ಲಿ 8,06,478 ಪುರುಷರು, 8,17,358 ಮಹಿಳೆಯರು ಹಾಗೂ 97 ಲಿಂಗತ್ವ ಅಲ್ಪಸಂಖ್ಯಾತ ಮತದಾರರು ಸೇರಿದ್ದಾರೆ.

‘ಹಿಂದೂ ಸಮಾವೇಶ’ಕ್ಕೆ ತೀವ್ರ ಪ್ರತಿರೋಧ

ವಿಜಯಸಾಕ್ಷಿ ಸುದ್ದಿ, ಗದಗ: “ಕೋಮುದ್ವೇಷ ಬಿತ್ತುವ ಕನ್ಹೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಇದೇ ತಿಂಗಳ ೩೧ರಂದು ನಗರದಲ್ಲಿ ಆಯೋಜಿಸಿರುವ ‘ಹಿಂದೂ ಸಮಾವೇಶ’ವು ಬಸವಾದಿ ಶರಣ ಪರಂಪರೆಯನ್ನು ನಾಶಗೊಳಿಸುವ ಹುನ್ನಾರವಾಗಿದೆ” ಎಂದು ಆರೋಪಿಸಿ, ಸಮಾನ ಮನಸ್ಕರು, ಬಸವಾದಿ ಶರಣರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಪ್ರವಾಸಿ ಮಂದಿರದ ಸಭಾಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರು, “ಹಿಂದೂ ಸಮಾವೇಶ”ಕ್ಕೆ ಸಂಘಟಿತ ಪ್ರತಿರೋಧ ವ್ಯಕ್ತಪಡಿಸುವ ನಿರ್ಧಾರ ಕೈಗೊಂಡರು.
ಜಾಗತಿಕ ಲಿಂಗಾಯತ ಮಹಾಸಭಾ ಮುಖಂಡ ಅಶೋಕ ಬರಗುಂಡಿ ಮಾತನಾಡಿ, “ಸಮತೆಯ ಬದುಕು ಕಟ್ಟಿಕೊಟ್ಟ ಶರಣರು ಇಷ್ಟಲಿಂಗದಲ್ಲಿ ಬೆರೆತು ಎಲ್ಲರೂ ಒಂದೇ ಎನ್ನುವ ಭಾವದಲ್ಲಿ ಬದುಕಿದರು. ಇದನ್ನು ಸಹಿಸದ ಮನುವಾದಿಗಳು ಹಾಗೂ ವೈದಿಕ ಮನಸ್ಥಿತಿಯವರು ಶರಣ ಪರಂಪರೆಯನ್ನು ನಾಶ ಮಾಡಲು ಪ್ರಯತ್ನಿಸುತ್ತಿದ್ದಾರೆ. ಗದಗದಲ್ಲಿ ಹಿಂದೂ ಸಮಾವೇಶ ನಡೆಸುವ ಮೂಲಕ ಬಸವಣ್ಣನವರ ವಿಚಾರಧಾರೆಗೆ ನುಗ್ಗುವ ಯತ್ನ ನಡೆಯುತ್ತಿದೆ. ಇದನ್ನು ನಾವೆಲ್ಲರೂ ಖಂಡಿಸಬೇಕು” ಎಂದು ಹೇಳಿದರು.
“ಗದಗದಲ್ಲಿ ಪ್ರತಿರೋಧ ವ್ಯಕ್ತವಾಗುವುದಿಲ್ಲವೆಂದು ಭಾವಿಸಿ ಆರ್‌ಎಸ್‌ಎಸ್ ಹಾಗೂ ಮನುವಾದಿ ಶಕ್ತಿಗಳು ಸಮಾವೇಶ ಹಮ್ಮಿಕೊಂಡಿವೆ. ಇದಕ್ಕೆ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಪ್ರತಿರೋಧ ವ್ಯಕ್ತವಾಗಬೇಕು” ಎಂದು ಅವರು ಕರೆ ನೀಡಿದರು.
ದಲಿತ ಹೋರಾಟಗಾರ ಶರೀಫ್ ಬಿಳೆಯಲಿ ಮಾತನಾಡಿ, “ಒಂದು ವರ್ಷದ ಹಿಂದೆ ಆರ್‌ಎಸ್‌ಎಸ್ ಹಾಗೂ ಹಿಂದೂ ಸಂಘಟನೆಗಳು ಮಹಾಯಜ್ಞ, ಕುಂಭಮೇಳ ನಡೆಸಿದ್ದವು. ಈಗ ಶರಣರ ಹೆಸರಿನಲ್ಲಿ ಹಿಂದೂ ಸಮಾವೇಶ ನಡೆಸಲು ಮುಂದಾಗಿವೆ. ಬಸವಣ್ಣನವರ ವಚನಗಳನ್ನು ಮಾತ್ರವಲ್ಲ, ಇಡೀ ಶೋಷಿತ ವರ್ಗದ ಚಿಂತನೆಗಳನ್ನೇ ನಾಶಗೊಳಿಸುವ ಪ್ರಯತ್ನ ಇದಾಗಿದೆ. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಲೇಬೇಕು” ಎಂದು ಹೇಳಿದರು.
ದಲಿತ ಮುಖಂಡ ಮುತ್ತು ಬಿಳೆಯಲಿ ಮಾತನಾಡಿ, “ಆರ್‌ಎಸ್‌ಎಸ್ ಪ್ರಚಾರಕರಾದ ಕನ್ಹೇರಿ ಸ್ವಾಮೀಜಿ ಎಲ್ಲೆಡೆ ಅಶ್ಲೀಲ ಹಾಗೂ ಪ್ರಚೋದನಕಾರಿ ಭಾಷಣಗಳ ಮೂಲಕ ಕೋಮುದ್ವೇಷ ಹರಡುತ್ತಿದ್ದಾರೆ. ಈಗ ಗದಗದ ಸೌಹಾರ್ದತೆಯನ್ನೇ ಹಾಳು ಮಾಡುವ ಪ್ರಯತ್ನ ನಡೆಯುತ್ತಿದೆ” ಎಂದು ಆರೋಪಿಸಿದರು.
“ಈ ಹಿಂದೆ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಅವರಿಗೆ ಪ್ರವೇಶ ನಿರಾಕರಿಸಲಾಗಿತ್ತು. ಗದಗದಲ್ಲೂ ಜಿಲ್ಲೆಗೆ ಪ್ರವೇಶಿಸದಂತೆ ನೋಡಿಕೊಳ್ಳಬೇಕು. ವಚನ ದರ್ಶನ ಕಾರ್ಯಕ್ರಮದ ಸಂದರ್ಭದಲ್ಲಿಯೇ ನಾವು ಪ್ರತಿರೋಧ ವ್ಯಕ್ತಪಡಿಸಿದ್ದೆವು. ಇಂತಹ ಕೋಮುವಾದಿಗಳ ವಿರುದ್ಧ ಜಿಲ್ಲಾವ್ಯಾಪಿ ಹೋರಾಟ ನಡೆಸಬೇಕು” ಎಂದು ಹೇಳಿದರು.
“ಮಠಗಳ ನಿಲುವುಗಳ ಬಗ್ಗೆ ಆತ್ಮಾವಲೋಕನ ಅಗತ್ಯ”
ಬಂಡಾಯ ಸಾಹಿತಿ ಬಸವರಾಜ ಸೂಳಿಬಾವಿ ಮಾತನಾಡಿ, “ನಾವು ಭಾವನಾತ್ಮಕ ಹಾಗೂ ವೈಚಾರಿಕವಾಗಿ ಬಸವಣ್ಣನವರ ಆಶಯಗಳನ್ನು ಒಪ್ಪಿಕೊಂಡವರು. ಆದರೆ ಕೆಲವು ಮಠಗಳು ಲಿಂಗಾಯತ ಹಾಗೂ ಶರಣ ಸಂಸ್ಕೃತಿಯಂತೆ ನಡೆದುಕೊಳ್ಳುತ್ತಿಲ್ಲ. ಇಡೀ ಜಿಲ್ಲೆಯ ವಾತಾವರಣವೇ ಬೇರೆಯಾಗಬಹುದಾಗಿತ್ತು” ಎಂದು ಬೇಸರ ವ್ಯಕ್ತಪಡಿಸಿದರು.
ದಲಿತ ಹಿರಿಯ ಮುಖಂಡರಾದ ಎಸ್.ಎನ್. ಬಳ್ಳಾರಿ ಅವರು ಮಾತನಾಡಿ, “ತಿಳಿದವರೇ, ಅರಿವಿರುವವರೇ ಆಮಿಷಗಳಿಗೆ ಒಳಗಾಗಿ ಹಿಂದೂ ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ. ಇದು ದುಃಖಕರ ಸಂಗತಿ. ಆದ್ದರಿಂದ ಮನೆ ಮನೆಗೆ, ವಾರ್ಡ್ ವಾರ್ಡ್‌ಗೆ ತೆರಳಿ ಜಾಗೃತಿ ಮೂಡಿಸುವ ಮೂಲಕ ಸಮಾವೇಶದ ವಿರುದ್ಧ ಜನಾಭಿಪ್ರಾಯ ನಿರ್ಮಿಸಬೇಕು” ಎಂದು ಹೇಳಿದರು.
ಸಭೆಯಲ್ಲಿ ಬಸವರಾಜ ಎಂ. ಕಡೇಮನಿ, ಎಚ್.ಎಸ್. ಸೊಂಪೂರ, ಕೊಟ್ರಬಸಪ್ಪ ಚಟ್ಟಿ, ವಿ.ಕೆ. ಕರೇಗೌಡ್ರ, ದಿಲೀಪಕುಮಾರ ಹಲವಾಗಲಿ, ಪ್ರಕಾಶ ಅಸುಂಡಿ, ಮಂಜುನಾಥ ಹಗೇದಾಳ, ಎಸ್.ಐ. ಪವಾಡಗೌಡ್ರ, ಆನಂದ ಶಿಂಗಾಡಿ, ನಾಗಭೂಷಣ ಬಡಗನ್ನವರ, ಸುವರ್ಣ ಗಾಳಪ್ಪನವರ, ಸುಜಾತಾ ವಾರದ, ಮಂಗಳಾ ನಾಲವಾಡ, ಬಾಲರಾಜ ಅರಬರ, ಶಿವಾನಂದ ತಮ್ಮಣ್ಣವರ, ಪರಶು ಕಾಳೆ, ಅನಿಲ್ ಕಾಳೆ, ಬಸೂ ಬಿಳೆಯಲಿ, ಮಂಜುನಾಥ ಹಗೇದಾಳ ಸೇರಿದಂತೆ ಜಾಗತಿಕ ಲಿಂಗಾಯತ ಮಹಾಸಭಾ, ಬಸವ ಕೇಂದ್ರ, ಬಸವದಳ, ಮೇ ಸಾಹಿತ್ಯ ಮೇಳ, ದಲಿತ ಕಲಾ ಮಂಡಳಿ, ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಪೂರ್ವಭಾವಿ ಸಭೆಯ ಪ್ರಮುಖ ತೀರ್ಮಾನಗಳು
  • ಸಭೆಯಲ್ಲಿ ಚರ್ಚಿಸಿ ಈ ಕೆಳಗಿನ ತೀರ್ಮಾನಗಳನ್ನು ಕೈಗೊಳ್ಳಲಾಯಿತು
  • ನಿಜ ಶರಣರ ಸಮಾವೇಶ ಆಯೋಜಿಸಿ ವಚನ ಚಳುವಳಿಯನ್ನು ಮನೆಮನೆಗೂ ತಲುಪಿಸುವುದು
  • ಕೋಮುದ್ವೇಷ ಬಿತ್ತುತ್ತಿದ್ದಾರೆ ಎನ್ನಲಾದ ಕನ್ಹೇರಿ ಮಠದ ಸ್ವಾಮೀಜಿಗೆ ಗದಗ ಜಿಲ್ಲೆ ಪ್ರವೇಶ ನಿರ್ಬಂಧಿಸಲು ಆಗ್ರಹಿಸುವುದು
  • ಜಿಲ್ಲೆಯಾದ್ಯಂತ ಜಾಗೃತಿ ಅಭಿಯಾನ ನಡೆಸುವುದು
  • ಹಿಂದೂ ಸಮಾವೇಶಕ್ಕೆ ಸಂಘಟಿತ ರೀತಿಯಲ್ಲಿ ಪ್ರತಿರೋಧ ವ್ಯಕ್ತಪಡಿಸುವುದು
“ ತೋಂಟದಾರ್ಯ ಮಠದ ಜಾತ್ರಾ ಸಮಿತಿಯ ಅಧ್ಯಕ್ಷರೇ ಈ ಹಿಂದೂ ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ ಎಂದರೆ, ಆ ಮಠದ ಆಯ್ಕೆಗಳ ಬಗ್ಗೆ ಯೋಚನೆ ಮಾಡಬೇಕಿದೆ. ಇದು ಆರೋಪದ ಭಾಷೆಯಲ್ಲ, ಒಳಸಂಕಟದಿಂದ ಹೇಳುತ್ತಿರುವ ಮಾತು. ನಡೆಯಲಿರುವ ಹಿಂದೂ ಸಮಾವೇಶವನ್ನು ನಾವೆಲ್ಲರೂ ಪ್ರತಿಭಟಿಸಬೇಕಿದೆ”
ಬಸವರಾಜ ಸೂಳಿಬಾವಿ
ಬಂಡಾಯ ಸಾಹಿತಿ

ಶಾಂತಿ-ಸೌಹಾರ್ದತೆಯಿಂದ ಬಕ್ರೀದ್ ಆಚರಿಸಿ: ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಜಿ. ಸುಬ್ಬಾಪೂರಮಠ

ವಿಜಯಸಾಕ್ಷಿ ಸುದ್ದಿ, ಮುಳಗುಂದ: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸುವುದರ ಜೊತೆಗೆ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಜಿ. ಸುಬ್ಬಾಪೂರಮಠ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ನಿಮಿತ್ತ ಆಯೋಜಿಸಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, “ಮುಳಗುಂದ ಪಟ್ಟಣವು ಶಾಂತಿ ಮತ್ತು ಸೌಹಾರ್ದತೆಗೆ ಹೆಸರಾಗಿದ್ದು, ಇಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಎಲ್ಲಾ ಹಬ್ಬ ಹರಿದಿನಗಳನ್ನು ಪರಸ್ಪರ ಸಹಕಾರದಿಂದ ಆಚರಿಸುತ್ತಿದ್ದಾರೆ” ಎಂದು ಹೇಳಿದರು.
“ಗೋವುಗಳ ಹತ್ಯೆ ಅಥವಾ ಅಕ್ರಮ ಸಾಗಾಟ ಕಂಡು ಬಂದಲ್ಲಿ ಕಾನೂನಿನ ಚೌಕಟ್ಟಿನಲ್ಲಿ ಅಪರಾಧ ಪ್ರಕರಣ ದಾಖಲಾಗುತ್ತದೆ. ತಪ್ಪಿತಸ್ಥರು ಶಿಕ್ಷೆಗೆ ಗುರಿಯಾಗುತ್ತಾರೆ. ಆದ್ದರಿಂದ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದರ ಜೊತೆಗೆ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು” ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಪಿಎಸ್‌ಐ ಡಿ.ಎಂ. ಮುಲ್ಲಾ, ಸುಧಾ ಹಲಕಿ, ಮುಖಂಡರಾದ ಎ.ಡಿ. ಮುಜಾವಾರ, ದಾವಲಸಾಬ ಲಕ್ಷ್ಮೇಶ್ವರ, ದಾವೂದ್ ಜಮಾಲಸಾಬನವರ, ಲಾಲಾಸಾಬಪೀರ ಮಕಾಂದಾರ, ಮುನ್ನಾ ಡಾಲಾಯತ, ಎಂ.ಎ. ನದ್ದಿಮುಲ್ಲಾ, ಇಸಾಕ್ ಹೊಸಮನಿ, ರಾಜೇಸಾಬ ಸೈಯದಬಡೆ, ಜಾಫರ್ ಭದ್ರಾಪೂರ, ಖಲಂದರ ಗಾಡಿ ಹಾಗೂ ರಮೇಶ್ ಮ್ಯಾಗೇರಿ ಉಪಸ್ಥಿತರಿದ್ದರು.

IPL 2026: ಆರ್‌ಸಿಬಿಗೆ ಬಿಗ್ ರಿಲೀಫ್; ತಂಡಕ್ಕೆ ಸ್ಟಾರ್‌ ಆಟಗಾರ ರಿಟರ್ನ್‌!

ಐಪಿಎಲ್‌ನಲ್ಲಿ ಭರ್ಜರಿ ಫಾರ್ಮ್‌ನಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ಪ್ರಮುಖ ಆರಂಭಿಕ ಆಟಗಾರ ಫಿಲ್ ಸಾಲ್ಟ್ ವಾಪಸ್ಸಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಎಡಗೈ ಬೆರಳಿನ ಗಾಯಕ್ಕೆ ಒಳಗಾಗಿ ಕೆಲವು ಪಂದ್ಯಗಳನ್ನು ತಪ್ಪಿಸಿಕೊಂಡಿದ್ದ ಅವರು ಇದೀಗ ಚೇತರಿಸಿಕೊಂಡಿದ್ದು, ಈ ವಾರಾಂತ್ಯದಲ್ಲಿ ತಂಡಕ್ಕೆ ಮರಳಲಿದ್ದಾರೆ ಎನ್ನಲಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಬೌಂಡರಿ ತಡೆಯಲು ಹೋಗಿ ಫಿಲ್ ಸಾಲ್ಟ್ ಗಾಯಕ್ಕೆ ತುತ್ತಾಗಿದ್ದರು. ಗಾಯದ ನಂತರ ಅವರು ಇಂಗ್ಲೆಂಡ್‌ಗೆ ಮರಳಿದ್ದರೆ, ಅವರ ಸ್ಥಾನಕ್ಕೆ ಜಾಕೋಬ್ ಬೆಥೆಲ್ ತಂಡದಲ್ಲಿ ಅವಕಾಶ ಪಡೆದಿದ್ದರು.

ಈಗ ಸಾಲ್ಟ್ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಭಾರತಕ್ಕೆ ವಾಪಸ್ ಆಗುವುದು ಖಚಿತವಾಗಿದೆ. ಆದರೆ ಶುಕ್ರವಾರ ಹೈದರಾಬಾದ್ (SRH) ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಅವರು ಪ್ಲೇಯಿಂಗ್ ಇಲೆವೆನ್‌ನಲ್ಲಿ ಕಾಣಿಸಿಕೊಳ್ಳುತ್ತಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ತಂಡದ ಮೂಲಗಳು ತಿಳಿಸಿವೆ.

ಸಾಲ್ಟ್ ಗಾಯಕ್ಕಿಂತ ಮುನ್ನ 6 ಪಂದ್ಯಗಳಲ್ಲಿ ಆಡಿದ್ದು, 168.33ರ ಸ್ಟ್ರೈಕ್ ರೇಟ್‌ನಲ್ಲಿ 202 ರನ್ ಕಲೆಹಾಕಿದ್ದರು. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಅವರು ಕೇವಲ 36 ಎಸೆತಗಳಲ್ಲಿ 78 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದು, ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಪಾತ್ರರಾಗಿದ್ದರು.

ಇದೇ ವೇಳೆ ಅಂಕಪಟ್ಟಿಯಲ್ಲಿ 18 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿರುವ ಆರ್‌ಸಿಬಿ, ಹೈದರಾಬಾದ್ ವಿರುದ್ಧ ಗೆಲುವು ಸಾಧಿಸಿದರೆ ಕ್ವಾಲಿಫೈಯರ್-1 ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ. ಉತ್ತಮ ನೆಟ್ ರನ್‌ರೇಟ್ ಕಾಯ್ದುಕೊಳ್ಳುವುದು ಕೂಡ ತಂಡಕ್ಕೆ ಮುಖ್ಯವಾಗಿದೆ.

ಮತ್ತೊಂದೆಡೆ ಸನ್‌ರೈಸರ್ಸ್ ಹೈದರಾಬಾದ್ ಕೂಡ ತನ್ನ ಕೊನೆಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿ ಆತ್ಮವಿಶ್ವಾಸದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ಈ ಪಂದ್ಯ ತೀವ್ರ ಪೈಪೋಟಿಯ ನಿರೀಕ್ಷೆ ಹುಟ್ಟಿಸಿದೆ.

error: Content is protected !!