Home Blog

ಸುದೀಪ್ ಜೊತೆ ನಿಗೂಢ ಬಾಡಿಗಾರ್ಡ್: ಹೊಸ ಎಂಟ್ರಿಯ ಹಿಂದೆ ಕುತೂಹಲ

ಕನ್ನಡ ಚಿತ್ರರಂಗದ ‘ಕಿಚ್ಚ’ ಸುದೀಪ್ ಅವರ ಸುತ್ತ ಹೊಸ ಬಾಡಿಗಾರ್ಡ್ ಕಾಣಿಸಿಕೊಂಡಿರುವುದು ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿಸಿದೆ. ರಾಮ್ ಚರಣ್ ಅವರ ಇತ್ತೀಚಿನ ಪ್ರಚಾರ ಕಾರ್ಯಕ್ರಮದಲ್ಲಿ ಹೊಸ ಬಾಡಿಗಾರ್ಡ್ ಕೆವಿನ್ ಕುಂಟಾ ಗಮನ ಸೆಳೆದಿದ್ದ ಬೆನ್ನಲ್ಲೇ, ಈಗ ಸುದೀಪ್ ಜೊತೆ ಕೂಡ ವಿದೇಶಿ ದೇಹದಾಕಾರದ ಬಾಡಿಗಾರ್ಡ್ ಕಾಣಿಸಿಕೊಂಡಿದ್ದಾರೆ.

ಸುದೀಪ್ ಅವರ ದೀರ್ಘಕಾಲದ ವೈಯಕ್ತಿಕ ಬಾಡಿಗಾರ್ಡ್ ಕಿರಣ್ ಆಗಿದ್ದರೂ, ಇತ್ತೀಚಿನ ಸಾರ್ವಜನಿಕ ಕಾರ್ಯಕ್ರಮದಲ್ಲಿ ಹೊಸ ವ್ಯಕ್ತಿಯೊಬ್ಬರು ಅವರ ಭದ್ರತಾ ತಂಡದ ಭಾಗವಾಗಿ ಕಾಣಿಸಿಕೊಂಡಿದ್ದಾರೆ. 6.1 ಅಡಿ ಎತ್ತರದ ಸುದೀಪ್ ಅವರಿಗಿಂತಲೂ ಎತ್ತರದ ಈ ವ್ಯಕ್ತಿಯ ಉಪಸ್ಥಿತಿ ಅಭಿಮಾನಿಗಳ ಗಮನ ಸೆಳೆದಿದೆ.

ಇವರು ಹೊಸ ನೇಮಕಾತಿಯೇ ಅಥವಾ ತಾತ್ಕಾಲಿಕ ಭದ್ರತಾ ವ್ಯವಸ್ಥೆಯ ಭಾಗವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಕಾರ್ಯಕ್ರಮದ ಸಮಯದಲ್ಲಿ ಸುದೀಪ್ ಕುಟುಂಬವನ್ನು ಸುರಕ್ಷಿತವಾಗಿ ಸಂರಕ್ಷಿಸುತ್ತಿರುವುದು ಸ್ಪಷ್ಟವಾಗಿ ಕಂಡುಬಂದಿದೆ.

ಈ ಘಟನೆ ‘ಮ್ಯಾಂಗೋ ಪಚ್ಚ’ ಚಿತ್ರದ ಬಿಡುಗಡೆ ಕಾರ್ಯಕ್ರಮದ ಸಂದರ್ಭದಲ್ಲಿ ನಡೆದಿದೆ. ಅಲ್ಲಿ ಸುದೀಪ್ ಕುಟುಂಬ ಸಮೇತ ಆಗಮಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೋ ವೈರಲ್ ಆಗಿದ್ದು, ಹೊಸ ಬಾಡಿಗಾರ್ಡ್ ಬಗ್ಗೆ ಚರ್ಚೆ ಹೆಚ್ಚಾಗಿದೆ.

ಈಗಾಗಲೇ ‘ಮಾರ್ಕ್’ ನಂತರ ಯಾವುದೇ ಹೊಸ ಸಿನಿಮಾ ಘೋಷಿಸದ ಸುದೀಪ್, ‘ಬಿಲ್ಲ ರಂಗ ಭಾಷ’ ಪ್ರಾಜೆಕ್ಟ್‌ನಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಬಿಗ್ ಬಾಸ್ ಹೊಸ ಸೀಸನ್ ಶೀಘ್ರದಲ್ಲೇ ಆರಂಭವಾಗಲಿದೆ ಎಂಬ ನಿರೀಕ್ಷೆಯೂ ಇದೆ.

ಹೊಸ ಬಾಡಿಗಾರ್ಡ್ ಕುರಿತ ಅಧಿಕೃತ ಮಾಹಿತಿ ಇನ್ನಷ್ಟೇ ಬಹಿರಂಗವಾಗಬೇಕಿದೆ.

ಶಿವಕುಮಾರ್ ನೇತೃತ್ವದ ಸಿದ್ದರಾಮಯ್ಯ ಕ್ಯಾಬಿನೆಟ್ ಮೊದಲ ವಿಕೆಟ್ ಪತನ: ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಿದ್ದರಾಮಯ್ಯನವರ ಸಚಿವಸಂಪುಟದ ಮೊದಲನೇ ವಿಕೆಟ್ ಇವತ್ತು ಪತನವಾಗಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ರಾಮಲಿಂಗಾರೆಡ್ಡಿಯವರು ಹಿರಿಯರಿದ್ದಾರೆ. ಅವರ ಬಗ್ಗೆ ಮಾತನಾಡಲು ಹೋಗುವುದಿಲ್ಲ; ಕಾಂಗ್ರೆಸ್ಸಿನವರಿಗೆ ರಾಜ್ಯದ ಅಭಿವೃದ್ಧಿಯ ಬಗ್ಗೆ ಚಿಂತನೆ ಇಲ್ಲ ಎಂಬುದು ವಾಸ್ತವಿಕ ಸತ್ಯ ಎಂದು ನುಡಿದರು. ನಾಡಿನ ರೈತರ ಸಮಸ್ಯೆ ಪರಿಹಾರದ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಟೀಕಿಸಿದರು.

ಹಗ್ಗಜಗ್ಗಾಟದಲ್ಲೇ 3 ವರ್ಷ ಕಳೆದಿದ್ದಾರೆ. ಯಾವುದೇ ಒಬ್ಬ ಸಚಿವರು ನಾಮಕಾವಾಸ್ತೆ ಉಸ್ತುವಾರಿ ಸಚಿವರಾಗಿದ್ದರು. ರಾಜ್ಯದ ಸಚಿವರು ತಮ್ಮ ಜಿಲ್ಲೆಗೆ ಸೀಮಿತವಾಗಿದ್ದರೇ ಹೊರತು ಯಾವುದೇ ಇತರ ಜಿಲ್ಲೆಗೆ ಪ್ರವಾಸ ಮಾಡಿಲ್ಲ.

ಈಗ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಸರಕಾರ ಅಸ್ತಿತ್ವಕ್ಕೆ ಬಂದಿದೆ. ಇರುವುದು ಕೇವಲ 2 ವರ್ಷ ಮಾತ್ರ. ಈಗ ಮತ್ತೆ ಹಗ್ಗಜಗ್ಗಾಟ, ಯಾವ ಖಾತೆ, ಯಾವ ಜಿಲ್ಲೆ ಉಸ್ತುವಾರಿ ಪಡೆದುಕೊಳ್ಳಬೇಕೆಂಬ ಕಿತ್ತಾಟದಲ್ಲಿ ಇವತ್ತು ರಾಮಲಿಂಗಾರೆಡ್ಡಿಯವರು ರಾಜೀನಾಮೆ ನೀಡಿದ್ದಾರೆ ಎಂದು ನುಡಿದರು.

ರಾಮಲಿಂಗಾರೆಡ್ಡಿ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ʼಗೆ ಮತ್ತೊಂದು ಶಾಕ್: ಖಾತೆ ಬದಲಾವಣೆಗೆ ಕೆ.ಎಚ್. ಮುನಿಯಪ್ಪ ಆಗ್ರಹ

ಬೆಂಗಳೂರು: ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಚರ್ಚೆಯಲ್ಲಿರುವ ನಡುವೆಯೇ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ಖಾತೆ ಹಂಚಿಕೆ ವಿಚಾರದಲ್ಲಿ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೊಂದು ರಾಜಕೀಯ ಚರ್ಚೆಗೆ ಕಾರಣವಾಗಿದೆ.

ದೇವನಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಸೀನಿಯಾರಿಟಿಗೆ ತಕ್ಕ ಗೌರವ ನೀಡಿಲ್ಲ ಎಂದು ಅಸಮಾಧಾನ ಹೊರಹಾಕಿದರು. ಇದೇ ಪರಿಸ್ಥಿತಿ ಮುಂದುವರಿದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಗಂಭೀರ ಪರಿಣಾಮ ಎದುರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದರು.

ಕಳೆದ ಮೂರು ವರ್ಷಗಳಿಂದ ಆಹಾರ ಇಲಾಖೆಯನ್ನು ನಿರ್ವಹಿಸುತ್ತಿರುವ ತಮಗೆ ಮತ್ತೆ ಅದೇ ಖಾತೆ ನೀಡಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಮುನಿಯಪ್ಪ, ತಾವು ಎಂಟು ಬಾರಿ ಚುನಾವಣೆಯಲ್ಲಿ ಗೆದ್ದಿರುವ ಹಿರಿಯ ನಾಯಕನಾಗಿದ್ದರೂ ಖಾತೆ ಹಂಚಿಕೆಯಲ್ಲಿ ತಮ್ಮ ಅನುಭವ ಮತ್ತು ಸೀನಿಯಾರಿಟಿಯನ್ನು ಪರಿಗಣಿಸಲಾಗಿಲ್ಲ ಎಂದು ಹೇಳಿದರು.

“ಸಚಿವ ಸಂಪುಟದಲ್ಲಿ ಪ್ರೊಟೊಕಾಲ್ ಮತ್ತು ಅನುಭವದ ಆಧಾರದ ಮೇಲೆ ಖಾತೆಗಳನ್ನು ಹಂಚಿಕೆ ಮಾಡಬೇಕಿತ್ತು. ಸಮಾಜ ಕಲ್ಯಾಣ, ಕೃಷಿ ಅಥವಾ ಜನಸೇವೆಗೆ ನೇರವಾಗಿ ಸಂಬಂಧಿಸಿದ ಪ್ರಮುಖ ಇಲಾಖೆಯನ್ನು ನೀಡುವಂತೆ ನಾನು ಮೊದಲೇ ಮನವಿ ಮಾಡಿದ್ದೆ. ಆದರೆ ಖಾತೆ ಹಂಚಿಕೆಯಲ್ಲಿ ಸಮತೋಲನ ಕಾಯ್ದುಕೊಂಡಿಲ್ಲ” ಎಂದು ಅವರು ಹೇಳಿದರು.

ಪಕ್ಷದ ನಾಯಕತ್ವದ ವಿರುದ್ಧ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, “ಪಕ್ಷದಲ್ಲಿ ತಾಯಿಯ ಸ್ಥಾನದಲ್ಲಿರುವ ನಾಯಕತ್ವ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಈ ವಿಚಾರವನ್ನು ನಾನು ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ಗಮನಕ್ಕೆ ತಂದಿದ್ದೇನೆ. ಯಾವುದೇ ಗೊಂದಲಕ್ಕೆ ಅವಕಾಶ ನೀಡದೆ ನನ್ನ ಖಾತೆಯನ್ನು ಬದಲಾಯಿಸುವ ಬಗ್ಗೆ ನಾಯಕತ್ವ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂಬ ವಿಶ್ವಾಸವಿದೆ” ಎಂದು ತಿಳಿಸಿದರು.

ಇದೇ ವೇಳೆ ಸಮಾಜ ಕಲ್ಯಾಣ, ಕೃಷಿ ಅಥವಾ ನೀರಾವರಿ ಇಲಾಖೆಯಂತಹ ಪ್ರಮುಖ ಖಾತೆಗಳನ್ನು ನೀಡಿದರೆ ಜನಸೇವೆ ಮತ್ತು ರೈತರ ಪರ ಇನ್ನಷ್ಟು ಪರಿಣಾಮಕಾರಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ರಾಮಲಿಂಗಾ ರೆಡ್ಡಿ ರಾಜೀನಾಮೆ: ಬೆಂಬಲಿಗರ ಭಾರಿ ಪ್ರತಿಭಟನೆ

ಬೆಂಗಳೂರು: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ರಾಜಕೀಯ ತಾಪಮಾನ ಏರಿಕೆಯಾಗಿದೆ. ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ ವ್ಯಕ್ತಪಡಿಸಿ ಅವರು ತಮ್ಮ ಸಚಿವ ಸ್ಥಾನ ತ್ಯಜಿಸಿದ ಬೆನ್ನಲ್ಲೇ, ಕೋರಮಂಗಲದಲ್ಲಿರುವ ಅವರ ಕಚೇರಿ ಎದುರು ಬೆಂಬಲಿಗರು ಭಾರಿ ಪ್ರತಿಭಟನೆ ನಡೆಸಿದ್ದಾರೆ.

‘ರಾಮಲಿಂಗಾ ರೆಡ್ಡಿಗೆ ಅನ್ಯಾಯವಾಗಿದೆ’ ಎಂದು ಘೋಷಣೆಗಳನ್ನು ಕೂಗಿದ ಬೆಂಬಲಿಗರು, ಅವರ ನಿರ್ಧಾರಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು. ಖಾತೆ ಬದಲಾವಣೆ ಮೂಲಕ ಹಿರಿಯ ನಾಯಕನಿಗೆ ಅನ್ಯಾಯ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಹೈಕಮಾಂಡ್ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆ ತೀವ್ರಗೊಂಡ ಸಂದರ್ಭದಲ್ಲಿ, ಕಾರ್ಯಕರ್ತರು ರಾಮಲಿಂಗಾ ರೆಡ್ಡಿ ಅವರ ಕಾರಿಗೆ ಅಡ್ಡಬಿದ್ದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ತಳ್ಳಾಟ-ನೂಕಾಟ ಸಂಭವಿಸಿತು.

ಪರಿಸ್ಥಿತಿ ಕೆಲಕಾಲ ಉದ್ವಿಗ್ನಗೊಂಡಿದ್ದರೂ, ಬಳಿಕ ಪೊಲೀಸರು ಜನರನ್ನು ನಿಯಂತ್ರಿಸಿದರು. ರಾಜಕೀಯ ವಲಯದಲ್ಲಿ ಈ ಘಟನೆ ಹೊಸ ಚರ್ಚೆಗೆ ಕಾರಣವಾಗಿದ್ದು, ಕಾಂಗ್ರೆಸ್ ಒಳಗಿನ ಅಸಮಾಧಾನ ಮತ್ತೆ ಬಹಿರಂಗವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಬಿಜೆಪಿಗೆ ಗುಡ್‌ಬೈ ಹೇಳಿದ ಅಣ್ಣಾಮಲೈ: ಹೊಸ ರಾಜಕೀಯ ಆಂದೋಲನಕ್ಕೆ ಚಾಲನೆ

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಅಣ್ಣಾಮಲೈ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಚೆನ್ನೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಣ್ಣಾಮಲೈ, “ನನ್ನ ರಾಜಕೀಯ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತಿದೆ. ಇಂದಿನಿಂದ ಹೊಸ ಪ್ರಯಾಣ ಶುರುವಾಗುತ್ತದೆ. ಜನರ ಆಶಯಗಳು, ಸಮಸ್ಯೆಗಳು ಮತ್ತು ನಿರೀಕ್ಷೆಗಳನ್ನು ನೇರವಾಗಿ ಪ್ರತಿನಿಧಿಸುವ ಹೊಸ ರಾಜಕೀಯ ವೇದಿಕೆಯನ್ನು ನಿರ್ಮಿಸುತ್ತೇನೆ” ಎಂದು ಘೋಷಿಸಿದರು.

ಹೊಸ ಆಂದೋಲನವು ಸಾಮಾನ್ಯ ನಾಗರಿಕರನ್ನು ನೇರವಾಗಿ ರಾಜಕೀಯ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವ ಉದ್ದೇಶ ಹೊಂದಿದ್ದು, ಜನಕೇಂದ್ರಿತ ಪರ್ಯಾಯ ರಾಜಕೀಯ ಮಾದರಿಯನ್ನು ರೂಪಿಸುವ ಗುರಿ ಹೊಂದಿದೆ ಎಂದು ಅವರು ಸ್ಪಷ್ಟಪಡಿಸಿದರು.

2009ರಲ್ಲಿ ರಾಜಕೀಯ ಕ್ಷೇತ್ರದೊಂದಿಗೆ ತಮ್ಮ ಸಂಪರ್ಕ ಆರಂಭಿಸಿದ್ದ ಅಣ್ಣಾಮಲೈ, 2020ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಬಳಿಕ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಆದರೆ ಕಳೆದ ಕೆಲವು ತಿಂಗಳುಗಳಿಂದ ಪಕ್ಷದ ಹೈಕಮಾಂಡ್‌ನೊಂದಿಗೆ ಹಲವು ವಿಷಯಗಳಲ್ಲಿ ಭಿನ್ನಾಭಿಪ್ರಾಯ ಉಂಟಾಗಿತ್ತು ಎನ್ನಲಾಗಿದೆ. ವಿಶೇಷವಾಗಿ ಎಐಎಡಿಎಂಕೆ ಜೊತೆಗಿನ ಮೈತ್ರಿ, 2026ರ ವಿಧಾನಸಭೆ ಚುನಾವಣೆಯ ತಂತ್ರಗಾರಿಕೆ ಹಾಗೂ ರಾಜ್ಯ ರಾಜಕಾರಣದಲ್ಲಿ ತಮ್ಮ ಪಾತ್ರಕ್ಕೆ ಸಂಬಂಧಿಸಿದ ಬೆಳವಣಿಗೆಗಳು ಅಣ್ಣಾಮಲೈ ಅಸಮಾಧಾನಕ್ಕೆ ಕಾರಣವಾಗಿದ್ದವು ಎಂಬ ಮಾತುಗಳು ಕೇಳಿಬಂದಿವೆ.

ರಾಜೀನಾಮೆಗೂ ಮುನ್ನ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ನಾಯಕತ್ವದೊಂದಿಗೆ ಸಮಾಲೋಚನೆ ನಡೆಸಿದ್ದರು. ಅಂತಿಮವಾಗಿ ಬಿಜೆಪಿ ತೊರೆದು ಸ್ವತಂತ್ರ ರಾಜಕೀಯ ದಾರಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ತಮಿಳುನಾಡಿನಲ್ಲಿ ಯುವಜನರಲ್ಲಿ ಅಪಾರ ಜನಪ್ರಿಯತೆ ಹೊಂದಿರುವ ಅಣ್ಣಾಮಲೈ ಅವರ ಮುಂದಿನ ರಾಜಕೀಯ ಹೆಜ್ಜೆ ಇದೀಗ ರಾಷ್ಟ್ರೀಯ ಮಟ್ಟದಲ್ಲೂ ಕುತೂಹಲಕ್ಕೆ ಕಾರಣವಾಗಿದೆ.

ಸಿಎಂ ಆದ ಬಳಿಕ ಹರಕೆ ತೀರಿಸಿದ ಡಿ.ಕೆ. ಶಿವಕುಮಾರ್: ಅಣ್ಣಮ್ಮದೇವಿ ಸನ್ನಿಧಿಯಲ್ಲಿ ವಿಶೇಷ ಪೂಜೆ

ಬೆಂಗಳೂರು: ದೇವರ ಮೇಲೆ ಅಪಾರ ಭಕ್ತಿ ಮತ್ತು ನಂಬಿಕೆ ಹೊಂದಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಗರದ ಅಣ್ಣಮ್ಮದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದಾರೆ.

ರಾಜ್ಯದ ಪ್ರಮುಖ ದೇವಾಲಯಗಳಿಗೆ ಆಗಾಗ ಭೇಟಿ ನೀಡುವ ಡಿ.ಕೆ. ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ತೆರಳಿ ವಿಶೇಷ ಪೂಜೆ ಸಲ್ಲಿಸುವುದು ರೂಢಿಯಾಗಿದೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ತಕ್ಷಣವೇ ಅಜ್ಜಯ್ಯನ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜಾಕೈಂಕರ್ಯ ನೆರವೇರಿಸಿದ್ದ ಅವರು, ಇದೀಗ ನಗರದ ಅಧಿದೇವತೆ ಎಂದೇ ಪ್ರಸಿದ್ಧವಾಗಿರುವ ಅಣ್ಣಮ್ಮದೇವಿ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಮುಖ್ಯಮಂತ್ರಿಯಾಗುವ ಅವಕಾಶ ದೊರೆತರೆ ಅಣ್ಣಮ್ಮದೇವಿ ದೇವಸ್ಥಾನಕ್ಕೆ ಬಂದು ಹರಕೆ ತೀರಿಸುವುದಾಗಿ ಈ ಹಿಂದೆ ಸಂಕಲ್ಪ ಮಾಡಿಕೊಂಡಿದ್ದ ಡಿ.ಕೆ. ಶಿವಕುಮಾರ್ ಅವರು, ಇಂದು ಆ ಹರಕೆಯನ್ನು ನೆರವೇರಿಸಿದರು. ದೇವಸ್ಥಾನದಲ್ಲಿ ಉಪ್ಪು ಮತ್ತು ಮೊಸರು ಸಮರ್ಪಿಸಿ ರಾಜ್ಯದಲ್ಲಿ ಸುಖ, ಶಾಂತಿ ಹಾಗೂ ನೆಮ್ಮದಿ ನೆಲೆಸಲೆಂದು ದೇವರಲ್ಲಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ತಾಯಿ ಅಣ್ಣಮ್ಮದೇವಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಅವರು, ಬಳಿಕ ಬಿಸಿಲು ಮಾರಮ್ಮ ದೇವಿಯ ಸನ್ನಿಧಿಗೂ ಭೇಟಿ ನೀಡಿ ಉಪ್ಪು ಮತ್ತು ಮೊಸರು ಸಮರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.

ಭಾರತದಲ್ಲಿ ವಿಧ್ವಂಸಕ ಕೃತ್ಯ ಸಂಚು? ಗುಪ್ತಚರ ಮಾಹಿತಿ ಮೇರೆಗೆ ಇಬ್ಬರ ಬಂಧನ

ದಾವಣಗೆರೆ: ದೇಶದ ಭದ್ರತೆಗೆ ಸಂಬಂಧಿಸಿದ ಮಹತ್ವದ ಕಾರ್ಯಾಚರಣೆಯಲ್ಲಿ ತುಮಕೂರು ಪೊಲೀಸರು ಇಬ್ಬರು ಶಂಕಿತ ಯುವಕರನ್ನು ಬಂಧಿಸಿದ್ದು, ಪಾಕಿಸ್ತಾನ ಮೂಲದ ಉಗ್ರ ಜಾಲದೊಂದಿಗೆ ಸಂಪರ್ಕ ಹೊಂದಿದ್ದ ಆರೋಪ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ದಾವಣಗೆರೆಯ ಜಮೀರ್ ಖಾನ್ ಹಾಗೂ ತುಮಕೂರಿನ ಅಲ್ಲಾಭಕ್ಷಿ ಬಂಧಿತ ಆರೋಪಿಗಳು. ಗುಪ್ತಚರ ಇಲಾಖೆಯಿಂದ ಲಭಿಸಿದ ನಿರ್ದಿಷ್ಟ ಮಾಹಿತಿಯಂತೆ ಇವರು ಪಾಕಿಸ್ತಾನದಲ್ಲಿರುವ ಶಂಕಿತ ಉಗ್ರರಾದ ಶಾಬಾಸ್ ಭುಟ್ಟಿ ಮತ್ತು ರಾಣಾ ಉನೇನ್ ಜೊತೆ ಡಿಜಿಟಲ್ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ.

ತನಿಖಾಧಿಕಾರಿಗಳ ಪ್ರಕಾರ, ಆರೋಪಿಗಳು ವಾಟ್ಸಾಪ್, ಇನ್‌ಸ್ಟಾಗ್ರಾಂ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳ ಮೂಲಕ ವಿದೇಶಿ ಸಂಪರ್ಕಗಳನ್ನು ನಿರ್ವಹಿಸುತ್ತಿದ್ದರು. ಈ ಸಂಪರ್ಕಗಳ ಮೂಲಕ ಭಾರತದಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶದ ಚಟುವಟಿಕೆಗಳಿಗೆ ಬೆಂಬಲ ಜಾಲ ನಿರ್ಮಿಸಲು ಯತ್ನ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಪ್ರಕರಣದ ತನಿಖೆಯಲ್ಲಿ ಕೆಲ ಸ್ಥಳೀಯ ಯುವಕರನ್ನು ಪ್ರಭಾವಿತಗೊಳಿಸಿ ಸಂಘಟಿತ ಜಾಲ ರೂಪಿಸುವ ಪ್ರಯತ್ನಗಳ ಸುಳಿವು ಸಿಕ್ಕಿದೆ. ಅಲ್ಲದೆ, ದೇಶದ ಪ್ರಮುಖ ನಗರಗಳಲ್ಲಿ ನಿರ್ದಿಷ್ಟ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ನಡೆಸುವ ಬಗ್ಗೆ ಚರ್ಚೆಗಳು ನಡೆದಿದ್ದವೆಯೇ ಎಂಬುದನ್ನೂ ತನಿಖಾ ತಂಡ ಪರಿಶೀಲಿಸುತ್ತಿದೆ.

ಬಂಧಿತರಿಂದ ವಶಪಡಿಸಿಕೊಳ್ಳಲಾದ ಮೊಬೈಲ್ ಫೋನ್‌ಗಳು, ಡಿಜಿಟಲ್ ಡೇಟಾ ಹಾಗೂ ಸಂಪರ್ಕ ವಿವರಗಳ ಆಧಾರದ ಮೇಲೆ ತನಿಖೆ ವಿಸ್ತರಿಸಲಾಗಿದೆ. ಇವರ ಸಂಪರ್ಕ ಜಾಲದಲ್ಲಿ ಇನ್ನೂ ಯಾರು ಭಾಗಿಯಾಗಿದ್ದಾರೆ ಎಂಬುದರ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಸದ್ಯ ಇಬ್ಬರನ್ನು ನ್ಯಾಯಾಂಗ ಪ್ರಕ್ರಿಯೆಗೆ ಒಳಪಡಿಸಲಾಗಿದ್ದು, ಉಗ್ರ ಸಂಪರ್ಕ, ಡಿಜಿಟಲ್ ಸಂವಹನ ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಅಂಶಗಳ ಮೇಲೆ ಬಹು ಆಯಾಮದ ತನಿಖೆ ಮುಂದುವರಿದಿದೆ.

ರಾಮಲಿಂಗಾ ರೆಡ್ಡಿ ರಾಜೀನಾಮೆ ಕಾಂಗ್ರೆಸ್ ಸರ್ಕಾರದ ಅಸ್ಥಿರತೆಗೆ ಸಾಕ್ಷಿ: ಟಿ.ಎ. ಶರವಣ ವಾಗ್ದಾಳಿ

ಬೆಂಗಳೂರು: ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನಗೊಂಡು ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡಿರುವ ಬೆಳವಣಿಗೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಅಸ್ಥಿರತೆಯನ್ನು ಬಯಲಿಗೆಳೆದಿದೆ ಎಂದು ಜೆಡಿಎಸ್ ಹಿರಿಯ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಟಿ.ಎ. ಶರವಣ ಟೀಕಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಸಚಿವ ಸಂಪುಟದ ಹಿರಿಯ ಸದಸ್ಯರೊಬ್ಬರು ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಿರುವುದು ಸರ್ಕಾರದ ಒಳಗಿನ ಅಸಮಾಧಾನ ಮತ್ತು ಗೊಂದಲಕ್ಕೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ.

ಸಂಪುಟ ರಚನೆ ಹಾಗೂ ಖಾತೆ ಹಂಚಿಕೆಯ ಪ್ರಕ್ರಿಯೆಯನ್ನು ಗಮನಿಸಿದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಂಪೂರ್ಣ ಸ್ವಾತಂತ್ರ್ಯ ಅಥವಾ ನಿಯಂತ್ರಣ ಇಲ್ಲದಿರುವುದು ಸ್ಪಷ್ಟವಾಗುತ್ತಿದೆ. ಸರ್ಕಾರದ ಕಾರ್ಯವೈಖರಿಯಲ್ಲಿ ಮುಖ್ಯಮಂತ್ರಿ ಮತ್ತು ಇತರ ಹಿರಿಯ ನಾಯಕರ ನಡುವಿನ ಭಿನ್ನಾಭಿಪ್ರಾಯಗಳು ಗೋಚರಿಸುತ್ತಿವೆ ಎಂದು ಅವರು ಆರೋಪಿಸಿದರು.

ಇದಲ್ಲದೆ, ಮುಖ್ಯಮಂತ್ರಿ ಪರವಾಗಿ ಗುರುತಿಸಿಕೊಂಡಿರುವ ಹಲವು ನಾಯಕರಿಗೆ ಸಚಿವ ಸಂಪುಟದಲ್ಲಿ ಅವಕಾಶ ದೊರೆಯದಿರುವುದನ್ನು ಉಲ್ಲೇಖಿಸಿದ ಶರವಣ, ಸರ್ಕಾರವು ಹೈಕಮಾಂಡ್ ಹಾಗೂ ಇತರ ನಾಯಕರ ಪ್ರಭಾವದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂಬ ಸಂದೇಶ ಸಾರ್ವಜನಿಕ ವಲಯದಲ್ಲಿ ಮೂಡಿದೆ ಎಂದು ಹೇಳಿದರು.

ರಾಜ್ಯದ ಆಡಳಿತದ ಕುರಿತು ಜನರಲ್ಲಿ ಮೂಡಿದ್ದ ನಿರೀಕ್ಷೆಗಳು ಕ್ರಮೇಣ ಕುಸಿಯುತ್ತಿದ್ದು, ರಾಮಲಿಂಗಾ ರೆಡ್ಡಿ ಮಾತ್ರವಲ್ಲದೆ ಮತ್ತೊಬ್ಬ ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ ಕೂಡ ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ಪಕ್ಷದೊಳಗಿನ ಬೆಳವಣಿಗೆಗಳು ಆಂತರಿಕ ಅರಾಜಕತೆ ಮತ್ತು ಸಮನ್ವಯದ ಕೊರತೆಯನ್ನು ಪ್ರತಿಬಿಂಬಿಸುತ್ತಿವೆ. ಇದೇ ಪರಿಸ್ಥಿತಿ ಮುಂದುವರಿದರೆ ಸರ್ಕಾರ ಆಂತರಿಕ ಭಿನ್ನಾಭಿಪ್ರಾಯಗಳ ಒತ್ತಡಕ್ಕೆ ಸಿಲುಕಿ ಸಂಕಷ್ಟ ಎದುರಿಸಬೇಕಾಗಬಹುದು ಎಂದು ಟಿ.ಎ. ಶರವಣ ಅಭಿಪ್ರಾಯಪಟ್ಟಿದ್ದಾರೆ.

ಪೊಲೀಸ್ ಕ್ವಾರ್ಟರ್ಸ್ ಜಾಗ ಮಾರಾಟ ಪ್ರಕರಣ: ಇದಕ್ಕೆ ಅವಕಾಶ ಕೊಟ್ಟರೆ ಹೈಕೋರ್ಟ್ ಕಟ್ಟಡವೂ ಸುರಕ್ಷಿತವಲ್ಲ ಎಂದ ಹೈಕೋರ್ಟ್

ಬೆಂಗಳೂರು: ನಗರದ ಮಲ್ಲೇಶ್ವರಂನಲ್ಲಿರುವ ಪೊಲೀಸ್ ಕ್ವಾರ್ಟರ್ಸ್ ಜಾಗವನ್ನು ಅಕ್ರಮವಾಗಿ ಮಾರಾಟ ಮಾಡಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪರಿಗಣಿಸಲು ರಾಜ್ಯ ಹೈಕೋರ್ಟ್ ನಿರಾಕರಿಸಿದೆ.

ಈ ವೇಳೆ ಪ್ರಕರಣದ ಗಂಭೀರತೆಯನ್ನು ಉಲ್ಲೇಖಿಸಿದ ನ್ಯಾಯಾಲಯ, ಇಂತಹ ಕೃತ್ಯಗಳಿಗೆ ಅವಕಾಶ ನೀಡಿದರೆ ಮುಂದೊಂದು ದಿನ ಹೈಕೋರ್ಟ್ ಕಟ್ಟಡವೂ ಸುರಕ್ಷಿತವಾಗಿರುವುದಿಲ್ಲ ಎಂದು ಕಟುವಾಗಿ ಅಭಿಪ್ರಾಯಪಟ್ಟಿದೆ.

ಶಿವಮೊಗ್ಗದ ಶ್ರೀನಾಥ್ ನಗರಗದ್ದೆ ಎಂಬುವರು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸಿತು.

ವಿಚಾರಣೆ ವೇಳೆ ನ್ಯಾಯಪೀಠ, “ನಿಮ್ಮ ಧೈರ್ಯವನ್ನು ಮೆಚ್ಚಬೇಕು. ಕಳೆದ 15 ವರ್ಷಗಳಿಂದ ಪೊಲೀಸ್ ಕ್ವಾರ್ಟರ್ಸ್ ಇರುವ ಜಾಗವನ್ನೇ ಮಾರಾಟ ಮಾಡಿದ್ದೀರಿ” ಎಂದು ಅರ್ಜಿದಾರರ ಪರ ವಕೀಲರಿಗೆ ತಿಳಿಸಿತು. ಜೊತೆಗೆ ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 9ಕ್ಕೆ ಮುಂದೂಡಿತು.

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಪ್ರಕರಣದ ಮೊದಲ ಆರೋಪಿ ಎಂ.ಆರ್. ಮಹಾಲಕ್ಷ್ಮಿ ಅವರಿಗೆ ವಿವಾದಿತ ಜಾಗ ಸೇರಿದ್ದು, ತಮ್ಮ ಸ್ವತ್ತೆಂದು ನಂಬಿ ಅವರು ಅದನ್ನು ಮಾರಾಟ ಮಾಡಿದ್ದಾರೆ ಎಂದು ತಿಳಿಸಿದರು. ಈ ಸಂಬಂಧ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಲಾಗಿದ್ದು, ಎನ್‌ಕಂಬರೆನ್ಸ್ ಪ್ರಮಾಣಪತ್ರದಲ್ಲಿಯೂ ಅವರ ಹೆಸರೇ ದಾಖಲಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಇದಲ್ಲದೆ, ವಿವಾದಿತ ಜಾಗ ಪೊಲೀಸ್ ಇಲಾಖೆಗೆ ಸೇರಿದೆ ಎಂಬುದನ್ನು ಸಾಬೀತುಪಡಿಸುವ ಯಾವುದೇ ದಾಖಲೆಗಳನ್ನು ಪ್ರಾಸಿಕ್ಯೂಷನ್ ಸಲ್ಲಿಸಿಲ್ಲ ಎಂದು ವಕೀಲರು ವಾದಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, “ಇಂತಹ ವಾದಗಳನ್ನು ಒಪ್ಪಿಕೊಂಡರೆ ಸಾರ್ವಜನಿಕ ಆಸ್ತಿಗಳ ಭದ್ರತೆ ಪ್ರಶ್ನಾರ್ಥಕವಾಗುತ್ತದೆ. ಈ ಕಾರಣಕ್ಕಾಗಿಯೇ ಹೈಕೋರ್ಟ್ ಕಟ್ಟಡವೂ ಸುರಕ್ಷಿತವಾಗಿರುವುದಿಲ್ಲ ಎಂದು ಹೇಳಿದ್ದೇನೆ” ಎಂದು ತಿಳಿಸಿತು. ಜೊತೆಗೆ, “ಹಾಗಾದರೆ ಪೊಲೀಸರೇ ಒತ್ತುವರಿದಾರರೇ?” ಎಂದು ಪ್ರಶ್ನಿಸಿತು.

ಇದೇ ವೇಳೆ ಅರ್ಜಿದಾರರ ಪರ ವಕೀಲರು, ವಿವಾದಿತ ಜಾಗಕ್ಕೆ ಸಂಬಂಧಿಸಿದಂತೆ ಸಿವಿಲ್ ನ್ಯಾಯಾಲಯದಲ್ಲಿ ಎರಡು ಪ್ರತ್ಯೇಕ ದಾವೆಗಳು ದಾಖಲಾಗಿದ್ದು, ಅವುಗಳಲ್ಲಿ ಒಂದರಲ್ಲಿ ಪೊಲೀಸರು ಪಕ್ಷಕಾರರಾಗಿದ್ದಾರೆ ಎಂದು ವಿವರಿಸಿದರು. ಸರ್ಕಾರವು ಜಾಗ ತನ್ನದೇ ಎಂಬುದಕ್ಕೆ ಒಂದೇ ಒಂದು ದಾಖಲೆ ಸಲ್ಲಿಸಿದರೂ ಅರ್ಜಿಯನ್ನು ಹಿಂಪಡೆಯಲು ಸಿದ್ಧ ಎಂದು ಹೇಳಿದರು.

ಇದಕ್ಕೆ ಸರ್ಕಾರದ ಪರ ವಕೀಲರು ಪ್ರತಿಕ್ರಿಯಿಸಿ, ವಿವಾದಿತ ಜಾಗವು 1930ರಿಂದಲೇ ಪೊಲೀಸ್ ಇಲಾಖೆಯ ಸ್ವಾಧೀನದಲ್ಲಿದ್ದು, ಇಲಾಖೆಗೆ ಸೇರಿದ ಆಸ್ತಿಯಾಗಿದೆ ಎಂದು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.

‘ಸಿಕ್ಸರ್ ಅಂತ ಹೇಳಿದ್ದರು, ಈಗ ಹಿಟ್ ವಿಕೆಟ್ ಆಗಿದೆ’: ಡಿಕೆ ಸರ್ಕಾರಕ್ಕೆ ಸಿ.ಟಿ. ರವಿ ಟಾಂಗ್

ಚಿಕ್ಕಮಗಳೂರು: ಡಿ.ಕೆ. ಶಿವಕುಮಾರ್ ಸರ್ಕಾರದಲ್ಲಿ ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡಿರುವ ಬೆಳವಣಿಗೆಯನ್ನು ಬಿಜೆಪಿ ನಾಯಕ ಸಿ.ಟಿ. ರವಿ ಗಂಭೀರ ರಾಜಕೀಯ ಬೆಳವಣಿಗೆಯೆಂದು ಬಣ್ಣಿಸಿದ್ದು, ಇದು ಕಾಂಗ್ರೆಸ್ ಸರ್ಕಾರದೊಳಗಿನ ಅಸಮಾಧಾನದ ಮೊದಲ ಲಕ್ಷಣ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೊದಲ ಸಂಪುಟ ಸಭೆಯ ಬಳಿಕ ಸರ್ಕಾರ ಭರ್ಜರಿ ಆರಂಭ ಮಾಡಿದೆ ಎಂದು ಹೇಳಲಾಗಿತ್ತು. ಆದರೆ ಈಗ ಸಂಪುಟದ ಮೊದಲ ವಿಕೆಟ್ ಬಿದ್ದಿದೆ. ಇದು ಸರ್ಕಾರದೊಳಗಿನ ಬೇಗುದಿಗೆ ಸ್ಪಷ್ಟ ಸಾಕ್ಷಿ” ಎಂದು ಟೀಕಿಸಿದರು.

ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆ ಕೇವಲ ಖಾತೆ ಹಂಚಿಕೆ ವಿಚಾರಕ್ಕೆ ಸೀಮಿತವಲ್ಲ. ಇದು ಸರ್ಕಾರದೊಳಗಿನ ಆಂತರಿಕ ಅಸಮಾಧಾನ ಮತ್ತು ನಾಯಕತ್ವದ ನಿರ್ಧಾರಗಳ ವಿರುದ್ಧದ ಅಸಹನೆಯನ್ನು ತೋರಿಸುತ್ತದೆ ಎಂದು ಹೇಳಿದರು.

“ಯಾರು ಯಾರಿಗೆ ಯಾವ ಭರವಸೆ ನೀಡಿದ್ದರು ಎಂಬುದು ನಮಗೆ ತಿಳಿದಿಲ್ಲ. ಆದರೆ ಹಿರಿಯ ಸಚಿವರೊಬ್ಬರು ಆತ್ಮಸಾಕ್ಷಿಯ ಹೆಸರಿನಲ್ಲಿ ರಾಜೀನಾಮೆ ನೀಡಿರುವುದು ಸಣ್ಣ ವಿಷಯವಲ್ಲ. ಇದು ಮುಂದಿನ ದಿನಗಳಲ್ಲಿ ಇನ್ನಷ್ಟು ರಾಜಕೀಯ ಬೆಳವಣಿಗೆಗಳಿಗೆ ದಾರಿ ಮಾಡಿಕೊಡಬಹುದು” ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ಸಚಿವ ಸತೀಶ್ ಜಾರಕಿಹೊಳಿ ರಾಜ್ಯದ ಆರ್ಥಿಕ ಸ್ಥಿತಿಯ ಕುರಿತು ವ್ಯಕ್ತಪಡಿಸಿರುವ ಕಳವಳವನ್ನೂ ಉಲ್ಲೇಖಿಸಿದ ಸಿ.ಟಿ. ರವಿ, ಸರ್ಕಾರದೊಳಗೆ ಎಲ್ಲವೂ ಸರಿಯಾಗಿಲ್ಲ ಎಂಬ ಸಂದೇಶ ಹೊರಬರುತ್ತಿದೆ ಎಂದು ಹೇಳಿದರು.

“ಪೂರ್ಣ ಸಚಿವ ಸಂಪುಟ ರಚನೆಯಾಗುವ ಮೊದಲೇ ಈ ರೀತಿಯ ಅಸಮಾಧಾನಗಳು ಕಾಣಿಸುತ್ತಿವೆ. ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಪೂರ್ಣಗೊಂಡ ಬಳಿಕ ಪರಿಸ್ಥಿತಿ ಇನ್ನಷ್ಟು ಸಂಕೀರ್ಣವಾಗುವ ಸಾಧ್ಯತೆ ಇದೆ” ಎಂದು ಅವರು ಎಚ್ಚರಿಸಿದರು.

ರಾಜಕೀಯ ಬಣಗಳು ಯಾವುದೇ ಪಕ್ಷದಲ್ಲಿ ಇರಬಹುದು. ಆದರೆ ಅವು ಆಡಳಿತ ಮತ್ತು ರಾಜ್ಯದ ಹಿತಾಸಕ್ತಿಯನ್ನು ಮೀರಿದಾಗ ಅದರ ಪರಿಣಾಮ ಸರ್ಕಾರದ ಕಾರ್ಯಕ್ಷಮತೆಯ ಮೇಲೆ ಬೀಳುತ್ತದೆ ಎಂದು ಸಿ.ಟಿ. ರವಿ ಹೇಳಿದರು.

error: Content is protected !!