ಮಂಗಳೂರು: ಸ್ವಾತಂತ್ರ್ಯೋತ್ಸವದಂದು ಸಚಿವ ಜಮೀರ್ ಅಹ್ಮದ್ ಖಾನ್ ಕಾರ್ಯಕ್ರಮಕ್ಕೆ ಗೈರುಹಾಜರಾದ ವಿಚಾರ ಇದೀಗ ಆಡಳಿತ ಪಕ್ಷ ಮತ್ತು ಪ್ರತಿಪಕ್ಷದ ನಡುವೆ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಜಮೀರ್ ಪರ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಬ್ಯಾಟ್ ಬೀಸಿದ್ದರೆ, ಸಂಸದ ಬ್ರಿಜೇಶ್ ಚೌಟ ಸಚಿವರ ವಿರುದ್ಧ ಕಿಡಿಕಾರಿದ್ದಾರೆ.
ನೆಹರೂ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಬಳಿಕ ಮಾತನಾಡಿದ ಯು.ಟಿ. ಖಾದರ್, ಜಮೀರ್ ಅಹ್ಮದ್ ಖಾನ್ ಅನಿವಾರ್ಯ ಕಾರಣಗಳಿಂದ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗದೆ ಪತ್ರ ಬರೆದಿದ್ದಾರೆ. ಅವರ ಪತ್ರದ ಹಿಂದಿನ ಉದ್ದೇಶವನ್ನು ಅರ್ಥಮಾಡಿಕೊಳ್ಳಬೇಕು. ಕೆಲ ಪದಗಳನ್ನು ಮಾತ್ರ ಹಿಡಿದುಕೊಂಡು ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುವುದು ಸರಿಯಲ್ಲ ಎಂದರು.
ಜಮೀರ್ ದೇಶದ ಸತ್ಪ್ರಜೆಯಾಗಿದ್ದು, ದೇಶಪ್ರೇಮ ಮತ್ತು ಸೌಹಾರ್ದತೆಯನ್ನು ಸದಾ ಎತ್ತಿಹಿಡಿದಿದ್ದಾರೆ. ಅವರ ದೇಶಪ್ರೇಮವನ್ನು ಪ್ರಶ್ನಿಸುವಂತಿಲ್ಲ ಎಂದು ಖಾದರ್ ಹೇಳಿದರು.
ಕಾರ್ಯಕ್ರಮಕ್ಕೆ ಜಮೀರ್ ಹಾಜರಾಗುತ್ತಾರೆ ಎಂಬ ಮಾಹಿತಿ ಆಧರಿಸಿ ಅವರನ್ನು ನಿಯೋಜಿಸಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಗೈರಾಗಬೇಕಾದ ಹಿನ್ನೆಲೆಯಲ್ಲಿ ಬದಲಿ ವ್ಯವಸ್ಥೆ ಮಾಡಲಾಗಿದೆ. ಕಾಂಗ್ರೆಸ್ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ ಎಂದು ಸ್ಪಷ್ಟಪಡಿಸಿದರು.
ಪಾನ್ ಮಸಾಲಾ ನಿಷೇಧದ ವಿಚಾರದಲ್ಲೂ ಮಾತನಾಡಿದ ಖಾದರ್, ತಂಬಾಕು, ನಿಕೋಟಿನ್ ಹಾಗೂ ಗುಟ್ಕಾ ಮಿಶ್ರಿತ ಉತ್ಪನ್ನಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಅಡಿಕೆ ಬೆಳೆಗಾರರಿಗೆ ನಷ್ಟವಾಗುವುದಿಲ್ಲ ಎಂದು ಹೇಳಿದರು. 2014ರಲ್ಲಿ ಗುಟ್ಕಾ ನಿಷೇಧಿಸಿದ ಸಂದರ್ಭದಲ್ಲೂ ಅಡಿಕೆ ಬೆಲೆ ಕುಸಿಯಲಿದೆ ಎಂಬ ಅಪಪ್ರಚಾರ ನಡೆದಿತ್ತು. ಆದರೆ ಬಳಿಕ ಅಡಿಕೆ ಧಾರಣೆ ಹೆಚ್ಚಾಗಿತ್ತು ಎಂದು ಅವರು ತಿಳಿಸಿದರು.
ಆರೋಗ್ಯದ ಉದ್ದೇಶದಿಂದ ಕೈಗೊಂಡ ನಿರ್ಧಾರವನ್ನು ರಾಜಕೀಯಗೊಳಿಸಬಾರದು ಎಂದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ ಖಾದರ್, ಧಾರ್ಮಿಕ ಸಭೆ-ಸಮಾರಂಭಗಳ ಕುರಿತು ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲೇ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದರು.
ಇತ್ತ ಸಂಸದ ಬ್ರಿಜೇಶ್ ಚೌಟ, ಜಮೀರ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಸ್ವಾತಂತ್ರ್ಯ ದಿನದಂದು ಧ್ವಜಾರೋಹಣ ಮಾಡಲು ಸಮಯವಿಲ್ಲ ಎಂಬ ರೀತಿಯ ಹೇಳಿಕೆ ಜವಾಬ್ದಾರಿಯುತ ಸಚಿವರಿಗೆ ಶೋಭೆ ತರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಡೀ ಕರ್ನಾಟಕದ ಜನತೆ ತಲೆತಗ್ಗಿಸುವಂತಹ ಹೇಳಿಕೆಯನ್ನು ಸಚಿವರು ನೀಡಿದ್ದಾರೆ. ಮುಖ್ಯಮಂತ್ರಿಗಳು ಜಮೀರ್ ಅವರನ್ನು ಸಚಿವ ಸಂಪುಟದಿಂದ ತಕ್ಷಣ ವಜಾಗೊಳಿಸಬೇಕಿತ್ತು. ಅವರ ಕೋರಿಕೆಯನ್ನು ಮನ್ನಿಸಿ ಬದಲಿಗೆ ಮತ್ತೊಬ್ಬರನ್ನು ಧ್ವಜಾರೋಹಣಕ್ಕೆ ನೇಮಿಸಿರುವುದು ರಾಜ್ಯಕ್ಕೆ ನಾಚಿಕೆಗೇಡಿನ ಸಂಗತಿ ಎಂದು ಚೌಟ ವಾಗ್ದಾಳಿ ನಡೆಸಿದರು.
ಜಮೀರ್ ಗೈರುಹಾಜರಿ ಸುತ್ತ ಆಡಳಿತ ಪಕ್ಷದ ಸಮರ್ಥನೆ ಮತ್ತು ಪ್ರತಿಪಕ್ಷದ ವಾಗ್ದಾಳಿ ಮುಂದುವರಿದಿದ್ದು, ಈ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

