ಹಾವೇರಿ: ಹಾವೇರಿ ತಾಲೂಕಿನ ಗಣಜೂರಿನಲ್ಲಿ ಚಿನ್ನದ ಗಣಿಗಾರಿಕೆ ಆರಂಭವಾಗುವ ಸಾಧ್ಯತೆ ಕುರಿತು ಮತ್ತೆ ಚರ್ಚೆಗಳು ಜೋರಾಗಿದ್ದು, ಈ ಬೆಳವಣಿಗೆ ರೈತರಲ್ಲಿ ಆತಂಕ ಮೂಡಿಸಿದೆ.
ಗ್ರಾಮದಲ್ಲಿ ಚಿನ್ನದ ನಿಕ್ಷೇಪಗಳು ಇರುವುದನ್ನು 2015ರಲ್ಲೇ ಸಂಶೋಧನೆಯ ಮೂಲಕ ದೃಢಪಡಿಸಲಾಗಿತ್ತು. ಇದೀಗ ಗಣಿಗಾರಿಕೆ ಪ್ರಕ್ರಿಯೆಗೆ ಮತ್ತೆ ಚೈತನ್ಯ ಸಿಗುವ ಸಾಧ್ಯತೆ ವ್ಯಕ್ತವಾಗಿರುವುದರಿಂದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
2015ರಲ್ಲಿ ಡೆಕ್ಕನ್ ಗೋಲ್ಡ್ ಮೈನ್ಸ್ ಕಂಪನಿ ಪ್ರಾಥಮಿಕ ಪರವಾನಗಿ ಪಡೆದು ಗಣಜೂರು ಪ್ರದೇಶದಲ್ಲಿ ಸಂಶೋಧನೆ ಆರಂಭಿಸಿತ್ತು. ಡೆಕ್ಕನ್ ಎಕ್ಸ್ಪ್ಲೋರೇಶನ್ ಸರ್ವೀಸಸ್ ಹೆಸರಿನಲ್ಲಿ ರೈತರ ಜಮೀನುಗಳನ್ನು ಲೀಸ್ ಪಡೆದು ಕೊಳವೆ ಬಾವಿ ಕೊರೆದು ಕಲ್ಲಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಕಲ್ಲುಗಳಲ್ಲಿ ಗಣನೀಯ ಪ್ರಮಾಣದ ಚಿನ್ನದ ಅಂಶ ಇರುವುದನ್ನು ಪತ್ತೆಹಚ್ಚಲಾಗಿತ್ತು.
ಸಂಶೋಧನೆಗಾಗಿ ಕಂಪನಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿದ್ದು, ಸುಮಾರು ಏಳು ರಿಂದ ಎಂಟು ವರ್ಷಗಳ ಕಾಲ ಅಧ್ಯಯನ ನಡೆಸಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಬಳಿಕ ಪೂರ್ಣ ಪ್ರಮಾಣದ ಗಣಿಗಾರಿಕೆಗೆ ಅರ್ಜಿ ಸಲ್ಲಿಸಿದ್ದರೂ ಕೆಲ ಕಾನೂನು ತೊಡಕುಗಳಿಂದ ಅದು ಮುಂದುವರಿಯಲಿಲ್ಲ.
ಇದೀಗ ಮಹಾರಾಷ್ಟ್ರದ ಗಣಿಗಾರಿಕೆ ಸಂಬಂಧಿತ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶವು ಗಣಜೂರು ಯೋಜನೆಗೆ ಪೂರಕವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯದಲ್ಲೇ ಗಣಿಗಾರಿಕೆ ಪ್ರಕ್ರಿಯೆ ಆರಂಭವಾಗುವ ಲಕ್ಷಣಗಳು ಕಂಡುಬರುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಗಣಜೂರು ಪ್ರದೇಶದಲ್ಲಿ ಸುಮಾರು 400 ಎಕರೆ ವ್ಯಾಪ್ತಿಯನ್ನು ಗುರುತಿಸಲಾಗಿದ್ದು, ಅದರಲ್ಲೂ 70ಕ್ಕೂ ಅಧಿಕ ಎಕರೆ ಪ್ರದೇಶದಲ್ಲಿ ಹೇರಳ ಪ್ರಮಾಣದ ಚಿನ್ನದ ನಿಕ್ಷೇಪವಿದೆ ಎಂದು ಹೇಳಲಾಗುತ್ತಿದೆ. ರಾಯಚೂರಿನ ಹಟ್ಟಿ ಚಿನ್ನದ ಗಣಿ ಹಾಗೂ ಕೋಲಾರದ ಕೆಜಿಎಫ್ಗಿಂತಲೂ ಹೆಚ್ಚಿನ ಪ್ರಮಾಣದ ಚಿನ್ನ ಇಲ್ಲಿರಬಹುದು ಎಂಬ ಅಂದಾಜು ವ್ಯಕ್ತವಾಗಿದೆ.
ಆದರೆ ಗಣಿಗಾರಿಕೆ ಪ್ರಾರಂಭದ ಸಾಧ್ಯತೆ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ. “ನಮಗೆ ಇರುವುದೇ ಒಂದೆರಡು ಎಕರೆ ಜಮೀನು. ಅದನ್ನೂ ಕೊಟ್ಟರೆ ನಾವು ಎಲ್ಲಿಗೆ ಹೋಗಬೇಕು? ಕಂಪನಿ ಮೊದಲು ರೈತರೊಂದಿಗೆ ಸಭೆ ನಡೆಸಿ ಸ್ಪಷ್ಟನೆ ನೀಡಬೇಕು” ಎಂದು ರೈತ ಸುರೇಶ್ ಚಲವಾದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಟ್ಟಾರೆ, ಇತಿಹಾಸದಲ್ಲಿ ‘ಚಿನ್ನದೂರು’ ಎಂಬ ಹೆಸರಿನಿಂದಲೂ ಗುರುತಿಸಿಕೊಂಡಿರುವ ಗಣಜೂರಿನಲ್ಲಿ ಚಿನ್ನದ ಗಣಿಗಾರಿಕೆ ಆರಂಭವಾಗುವ ಕುರಿತು ಚರ್ಚೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಸರ್ಕಾರ, ಕಂಪನಿ ಹಾಗೂ ರೈತರ ನಿಲುವು ಯಾವ ರೀತಿಯಲ್ಲಿ ರೂಪುಗೊಳ್ಳುತ್ತದೆ ಎಂಬುದು ಕುತೂಹಲ ಮೂಡಿಸಿದೆ.

