Home Blog

ಕ್ವಿನ್ ಸಿಟಿಗೆ ಬಂಪರ್ ಹೂಡಿಕೆ: ಟೊಯೋಟಾದಿಂದ 1,200 ಕೋಟಿ ಇನ್ವೆಸ್ಟ್‌ಮೆಂಟ್!

ಬೆಂಗಳೂರು: ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿ ಯೋಜನೆಗೆ ಮೊದಲ ದೊಡ್ಡ ಹೂಡಿಕೆ ಸೇರ್ಪಡೆಯಾಗಿದೆ.

ಡಾಬಸಪೇಟೆ–ದೊಡ್ಡಬಳ್ಳಾಪುರ ನಡುವೆ ನಿರ್ಮಾಣವಾಗುತ್ತಿರುವ ಈ ಹೊಸ ಕೈಗಾರಿಕಾ ನಗರದಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂ. ಹೂಡಿಕೆಯಲ್ಲಿ ‘ಬಿಸಿನೆಸ್ ಇಂಟೆಲಿಜೆಂಟ್ ಹಬ್’ ಸ್ಥಾಪಿಸಲು ಮುಂದಾಗಿದೆ.

ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರ ಸಮ್ಮುಖದಲ್ಲಿ ಈ ಸಂಬಂಧ ಒಪ್ಪಂದಕ್ಕೆ ಅಧಿಕೃತ ಅಂಕಿತ ಹಾಕಲಾಯಿತು. ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಹಾಗೂ ಟೊಯೋಟಾ ಕಂಪನಿಯ ಸಿಓಒ ಮತ್ತು ವಿಶೇಷ ಯೋಜನೆ ನಿರ್ದೇಶಕ ಸುದೀಪ್ ದಳವಿ ಒಪ್ಪಂದಕ್ಕೆ ಸಹಿ ಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಹೂಡಿಕೆಗೆ ಸರ್ಕಾರ ಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. “ವಿಶ್ವದಲ್ಲೇ ಮೊದಲ ಬಾರಿಗೆ ಈ ರೀತಿಯ ಘಟಕ ಸ್ಥಾಪನೆಯಾಗುತ್ತಿರುವುದು ಸಂತಸದ ವಿಷಯ” ಎಂದು ಅವರು ಹೇಳಿದರು.

ಸಚಿವ ಎಂ.ಬಿ. ಪಾಟೀಲ್ ಅವರು ಮಾತನಾಡಿ, ಕ್ವಿನ್ ಸಿಟಿಯಲ್ಲಿ ನಡೆಯುತ್ತಿರುವ ಇದು ಪ್ರಥಮ ದೊಡ್ಡ ಹೂಡಿಕೆ ಎಂದು ತಿಳಿಸಿದರು. ಟೊಯೋಟಾ ಕಂಪನಿಯು ಮುಂದಿನ ಐದು ವರ್ಷಗಳಲ್ಲಿ ಹಂತ ಹಂತವಾಗಿ 1,200 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ ಸುಮಾರು 200 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು. ಜೊತೆಗೆ ಕಂಪನಿಗೆ ಸುಮಾರು 300 ಎಕರೆ ಭೂಮಿ ನೀಡಲಾಗುವುದು ಎಂದರು.

ಕ್ವಿನ್ ಸಿಟಿಯಲ್ಲಿ ವಾಹನ ತಯಾರಿಕೆ, ಪರೀಕ್ಷಾ ಘಟಕಗಳು ಹಾಗೂ ಆಧುನಿಕ ಉತ್ಪಾದನಾ ಕೇಂದ್ರಗಳು ಸ್ಥಾಪನೆಯಾಗಲಿವೆ. ನವೀನತೆ, ಆರೋಗ್ಯ ಸೇವೆ ಮತ್ತು ಐಟಿ ತಂತ್ರಜ್ಞಾನಕ್ಕೆ ವಿಶೇಷ ಆದ್ಯತೆ ನೀಡಲಾಗುತ್ತಿದ್ದು, ಜಾಗತಿಕ ಮಟ್ಟದ ವಿಶ್ವವಿದ್ಯಾಲಯಗಳು ಹಾಗೂ ಸಂಶೋಧನಾ ಸಂಸ್ಥೆಗಳು ಕೂಡ ಇಲ್ಲಿ ಹೂಡಿಕೆ ಮಾಡಲು ಮುಂದಾಗಿವೆ ಎಂದು ಮಾಹಿತಿ ನೀಡಲಾಗಿದೆ.

ಒಟ್ಟು 5,800 ಎಕರೆ ಪ್ರದೇಶದಲ್ಲಿ ಹಂತಹಂತವಾಗಿ ಅಭಿವೃದ್ಧಿಯಾಗುತ್ತಿರುವ ಕ್ವಿನ್ ಸಿಟಿ ಯೋಜನೆಗೆ 48 ಸಾವಿರ ಕೋಟಿ ರೂ. ಹೂಡಿಕೆ ನಿರೀಕ್ಷಿಸಲಾಗಿದ್ದು, ಸುಮಾರು 1 ಲಕ್ಷ ಉದ್ಯೋಗಾವಕಾಶಗಳು ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಟೊಯೋಟಾ ಕಂಪನಿಯ ಉನ್ನತ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಭಾರತದಲ್ಲಿ ಥೈರಾಯ್ಡ್ ಪ್ರಕರಣಗಳು ಏರಿಕೆ: 4.2 ಕೋಟಿ ಜನರಿಗೆ ಸಮಸ್ಯೆ!

ಭಾರತದಲ್ಲಿ ಥೈರಾಯ್ಡ್ ಸಮಸ್ಯೆ ದಿನೇದಿನೇ ಹೆಚ್ಚುತ್ತಿರುವುದು ವೈದ್ಯಕೀಯ ತಜ್ಞರ ಗಮನ ಸೆಳೆದಿದೆ.

ಇತ್ತೀಚಿನ ವರದಿಗಳ ಪ್ರಕಾರ ದೇಶದಲ್ಲಿ ಸುಮಾರು 4.2 ಕೋಟಿ ಜನರು ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. ವಿಶೇಷವಾಗಿ ಮಹಿಳೆಯರಲ್ಲಿ ಈ ಕಾಯಿಲೆ ಹೆಚ್ಚು ಕಂಡುಬರುತ್ತಿದ್ದರೂ, ಇತ್ತೀಚೆಗೆ ಮಕ್ಕಳು ಮತ್ತು ಪುರುಷರಲ್ಲಿಯೂ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ತಜ್ಞರ ಪ್ರಕಾರ, ಥೈರಾಯ್ಡ್‌ನಲ್ಲಿ ಮುಖ್ಯವಾಗಿ ಎರಡು ವಿಧಗಳಿವೆ — ಹೈಪೋಥೈರಾಯ್ಡಿಸಮ್ ಮತ್ತು ಹೈಪರ್‌ಥೈರಾಯ್ಡಿಸಮ್. ಇವುಗಳ ಲಕ್ಷಣಗಳು ವಿಭಿನ್ನವಾಗಿರುವುದರಿಂದ ಆರಂಭಿಕ ಹಂತದಲ್ಲೇ ಗುರುತಿಸಿ ಚಿಕಿತ್ಸೆ ಪಡೆಯುವುದು ಅತ್ಯಂತ ಮುಖ್ಯವಾಗಿದೆ. ಆರಂಭಿಕ ಲಕ್ಷಣಗಳನ್ನು ನಿರ್ಲಕ್ಷಿಸಿದರೆ ಆರೋಗ್ಯ ಸಮಸ್ಯೆ ಗಂಭೀರವಾಗುವ ಸಾಧ್ಯತೆ ಇದೆ ಎಂದು ಸೀನಿಯರ್ ಡೈಟಿಷಿಯನ್ ಗೀತಿಕಾ ಚೋಪ್ರಾ ಅವರು ತಿಳಿಸಿದ್ದಾರೆ.

ಆಹಾರ ಕ್ರಮದ ಬಗ್ಗೆ ಸಲಹೆ ನೀಡಿರುವ ಅವರು, ಥೈರಾಯ್ಡ್ ಸಮಸ್ಯೆ ಇರುವವರು ಪ್ರೋಟೀನ್ ಸಮೃದ್ಧ ಆಹಾರಗಳನ್ನು ಹೆಚ್ಚು ಸೇವಿಸಬೇಕು ಎಂದು ಹೇಳಿದ್ದಾರೆ. ದಾಲ್, ಪನೀರ್, ಮೊಟ್ಟೆ, ಮೊಸರು, ಮೀನು ಮತ್ತು ಚಿಕನ್ ಮೆಟಾಬಾಲಿಸಂ ಸುಧಾರಿಸಲು ಸಹಾಯ ಮಾಡುತ್ತವೆ ಹಾಗೂ ದಣಿವು ಕಡಿಮೆ ಮಾಡುತ್ತವೆ ಎಂದು ವಿವರಿಸಿದ್ದಾರೆ.

ಅದೇ ರೀತಿ, ಪಂಪ್ಕಿನ್ ಸೀಡ್ಸ್, ನಟ್ಸ್, ಸಮುದ್ರ ಆಹಾರ ಮತ್ತು ಸಂಪೂರ್ಣ ಧಾನ್ಯಗಳಲ್ಲಿ ಇರುವ ಸೆಲೆನಿಯಂ ಮತ್ತು ಜಿಂಕ್ ಥೈರಾಯ್ಡ್ ಹಾರ್ಮೋನ್ ಸಮತೋಲನಕ್ಕೆ ಸಹಾಯಕವಾಗುತ್ತವೆ ಎಂದು ತಜ್ಞರು ಹೇಳಿದ್ದಾರೆ. ಐಯೋಡಿನ್ ಕೂಡ ಅಗತ್ಯವಾಗಿದ್ದರೂ ಅದರ ಅತಿಯಾದ ಸೇವನೆ ಹಾನಿಕಾರಕವಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

ಸಾಫ್ಟ್ ಡ್ರಿಂಕ್ಸ್, ಪ್ಯಾಕೆಟ್ ಸ್ನ್ಯಾಕ್ಸ್, ಫ್ರೈಡ್ ಆಹಾರ ಹಾಗೂ ಹೆಚ್ಚು ಸಕ್ಕರೆ ಇರುವ ಆಹಾರಗಳನ್ನು ಕಡಿಮೆ ಮಾಡುವುದು ಅಗತ್ಯ ಎಂದು ಸಲಹೆ ನೀಡಲಾಗಿದೆ. ಇವು ದೇಹದಲ್ಲಿ ಉರಿಯನ್ನು ಹೆಚ್ಚಿಸಿ ತೂಕ ಹೆಚ್ಚಾಗುವ ಸಾಧ್ಯತೆಯನ್ನು ಹೆಚ್ಚಿಸುತ್ತವೆ ಎಂದು ತಿಳಿಸಿದ್ದಾರೆ.

ಗಟ್ ಆರೋಗ್ಯಕ್ಕೂ ವಿಶೇಷ ಗಮನ ನೀಡಬೇಕೆಂದು ತಜ್ಞರು ಸಲಹೆ ನೀಡಿದ್ದು, ಮೊಸರು, ಮಜ್ಜಿಗೆ, ಫರ್ಮೆಂಟೆಡ್ ಫುಡ್ಸ್ ಮತ್ತು ಫೈಬರ್ ಸಮೃದ್ಧ ಆಹಾರಗಳು ಥೈರಾಯ್ಡ್ ನಿಯಂತ್ರಣಕ್ಕೆ ಸಹಾಯಕವಾಗುತ್ತವೆ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ, ಔಷಧಿಯ ಜೊತೆಗೆ ಸರಿಯಾದ ಆಹಾರ, ಉತ್ತಮ ನಿದ್ರೆ, ನಿಯಮಿತ ವ್ಯಾಯಾಮ ಹಾಗೂ ಥೈರಾಯ್ಡ್ ಪರೀಕ್ಷೆಗಳನ್ನು ನಿರಂತರವಾಗಿ ಮಾಡಿಸಿಕೊಳ್ಳುವುದು ಅತ್ಯಂತ ಮುಖ್ಯ ಎಂದು ತಜ್ಞರು ಒತ್ತಾಯಿಸಿದ್ದಾರೆ.

ಮಳೆ ವಿಳಂಬವಾದರೆ ಬಿಕ್ಕಟ್ಟು ಖಚಿತ: ಖಾಲಿ ಹಂತಕ್ಕೆ ತಲುಪಿದ ಹಿಡಕಲ್ ಜಲಾಶಯ

ಚಿಕ್ಕೋಡಿ: ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ಜೀವನಾಡಿ ಎಂದೇ ಗುರುತಿಸಲ್ಪಡುವ ಹಿಡಕಲ್ ಜಲಾಶಯ ಬಿರು ಬೇಸಿಗೆಯ ಪರಿಣಾಮವಾಗಿ ಗಂಭೀರ ಸಂಕಷ್ಟದ ಹಂತಕ್ಕೆ ತಲುಪಿದೆ.

ಮುಂಗಾರು ಮಳೆಯು ಇನ್ನೂ ದೂರದಲ್ಲಿರುವ ಸಂದರ್ಭದಲ್ಲೇ ಜಲಾಶಯದ ನೀರಿನ ಮಟ್ಟ ತೀವ್ರವಾಗಿ ಕುಸಿದಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ.

ಒಟ್ಟು 51 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಈ ಜಲಾಶಯದಲ್ಲಿ ಸದ್ಯ ಕೇವಲ 8 ಟಿಎಂಸಿ ನೀರು ಮಾತ್ರ ಉಳಿದಿದೆ ಎಂದು ಮೂಲಗಳು ತಿಳಿಸಿವೆ. ಇತ್ತೀಚಿನ ವರ್ಷಗಳಲ್ಲಿ ಬೇಸಿಗೆಯ ಆರಂಭಕ್ಕೂ ಮುನ್ನವೇ ಇಷ್ಟು ದೊಡ್ಡ ಪ್ರಮಾಣದಲ್ಲಿ ನೀರು ಕಡಿಮೆಯಾಗಿರುವುದು ಇದೇ ಮೊದಲು ಎಂದು ಹೇಳಲಾಗುತ್ತಿದೆ.

ಹಿಡಕಲ್ ಜಲಾಶಯವು ಕೇವಲ ಕೃಷಿ ನೀರಾವರಿಗೆ ಮಾತ್ರವಲ್ಲದೆ, ಬೆಳಗಾವಿ ಮಹಾನಗರ, ಹುಕ್ಕೇರಿ ಹಾಗೂ ಸಂಕೇಶ್ವರ ಪಟ್ಟಣಗಳ ಕುಡಿಯುವ ನೀರಿನ ಪ್ರಮುಖ ಮೂಲವಾಗಿದೆ. ಜೊತೆಗೆ 100ಕ್ಕೂ ಹೆಚ್ಚು ಗ್ರಾಮಗಳಿಗೆ ಇದೇ ಜಲಾಶಯದಿಂದ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಇಂತಹ ಸ್ಥಿತಿಯಲ್ಲಿ ನೀರಿನ ಮಟ್ಟ ಕುಸಿತವಾಗಿರುವುದು ಗ್ರಾಮೀಣ ಹಾಗೂ ನಗರ ಭಾಗದ ಜನರಲ್ಲಿ ಭಾರಿ ಚಿಂತೆ ಮೂಡಿಸಿದೆ.

ಈ ಜಲಾಶಯದಿಂದ ನಡೆಸಲಾಗುತ್ತಿದ್ದ ಏತ ನೀರಾವರಿ ಯೋಜನೆಗಳಿಗೂ ನೀರಿನ ಕೊರತೆಯಿಂದ ಅಡ್ಡಿಯಾಗುವ ಸಾಧ್ಯತೆ ಹೆಚ್ಚಿದೆ. ಮುಂದಿನ ದಿನಗಳಲ್ಲಿ ಮಳೆಯ ಕೊರತೆ ಮುಂದುವರಿದರೆ, ಉಳಿದಿರುವ ನೀರು ಕೂಡ ಆವಿಯಾಗಿ ಜಲಾಶಯ “ಡೆಡ್ ಸ್ಟೋರೇಜ್” ಹಂತಕ್ಕೆ ತಲುಪುವ ಭೀತಿ ವ್ಯಕ್ತವಾಗಿದೆ.

ಈ ನಡುವೆ ಸಾರ್ವಜನಿಕರು ಹಾಗೂ ರೈತರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದು, ಉಳಿದಿರುವ ನೀರನ್ನು ಕೃಷಿ ಅಥವಾ ಇತರೆ ಬಳಕೆಗಳಿಗೆ ಹರಿಸದೆ ಕೇವಲ ಕುಡಿಯುವ ನೀರಿಗೆ ಮೀಸಲಿಡಬೇಕು ಎಂದು ಒತ್ತಾಯಿಸಿದ್ದಾರೆ. ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

ಒಟ್ಟಿನಲ್ಲಿ ಹಿಡಕಲ್ ಜಲಾಶಯದ ನೀರಿನ ಮಟ್ಟ ಕುಸಿತದಿಂದ ಉತ್ತರ ಕರ್ನಾಟಕ ಭಾಗದಲ್ಲಿ ಮುಂದಿನ ದಿನಗಳಲ್ಲಿ ನೀರಿನ ಸಂಕಷ್ಟ ಇನ್ನಷ್ಟು ಹೆಚ್ಚುವ ಭೀತಿ ಎದುರಾಗಿದೆ.

ಬಡವರ ಅಕ್ಕಿ ಕಾಳಸಂತೆಗೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನಲ್ಲಿ ಪಡಿತರ ಅಕ್ಕಿಯ ಅಕ್ರಮ ಮಾರಾಟ ಮತ್ತು ಸಾಗಾಟ ಜಾಲ ದೊಡ್ಡ ಮಟ್ಟದಲ್ಲಿ ನಡೆಯುತ್ತಿದ್ದು, ದಂಧೆಕೋರರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಯಕರ್ನಾಟಕ ಸಂಘಟನೆಯವರು ಗ್ರೇಡ್-2 ತಹಸೀಲ್ದಾರ ಮಂಜುನಾಥ ಅಮಾಸಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಈ ವೇಳೆ ಸಂಘಟನೆಯ ತಾಲೂಕು ಅಧ್ಯಕ್ಷ ಇಸ್ಮಾಯಿಲ್ ಆಡೂರ ಹಾಗೂ ಮುಖಂಡ ರಮೇಶ ಹಂಗನಕಟ್ಟಿ ಮಾತನಾಡಿ, “ಬಡಜನರ ಹಸಿವು ನೀಗಿಸಲು ಸರ್ಕಾರ ಉಚಿತವಾಗಿ ನೀಡುವ ಪಡಿತರ ಅಕ್ಕಿಯನ್ನು ಕೆಲ ದಂಧೆಕೋರರು ಮನೆಮನೆಗೆ ತೆರಳಿ ಕೆಜಿಗೆ ₹12ರಿಂದ ₹15ಕ್ಕೆ ಖರೀದಿಸಿ, ಬಳಿಕ ಹೆಚ್ಚಿನ ದರಕ್ಕೆ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.
ಅಕ್ರಮವಾಗಿ ಸಂಗ್ರಹಿಸಲಾಗುವ ಅಕ್ಕಿಯನ್ನು ಲಾರಿಗಳ ಮೂಲಕ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಗೆ ಸಾಗಾಟ ಮಾಡಲಾಗುತ್ತಿದೆ. ಹಲವು ವರ್ಷಗಳಿಂದ ಈ ಜಾಲ ನಡೆಯುತ್ತಿದ್ದರೂ ಆಹಾರ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಪರಿಣಾಮಕಾರಿ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಕ್ರಮ ಅಕ್ಕಿ ಖರೀದಿ, ಸಂಗ್ರಹ ಹಾಗೂ ಸಾಗಾಟದಲ್ಲಿ ತೊಡಗಿರುವವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು. ಸಂಬಂಧಪಟ್ಟ ಅಧಿಕಾರಿಗಳ ಪಾತ್ರದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಲಕ್ಷ್ಮೇಶ್ವರ ತಾಲೂಕಿನಲ್ಲಿ ಚೆಕ್‌ಪೋಸ್ಟ್ ಹಾಗೂ ವಿಶೇಷ ನಿಗಾ ಘಟಕ ಸ್ಥಾಪಿಸಿ, ಬಡವರ ಪಾಲಿನ ಪಡಿತರ ಅಕ್ಕಿ ಕಾಳಸಂತೆಗೆ ಹೋಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಇಸಾಕಭಾಷಾ ಹರಪನಹಳ್ಳಿ, ಸದಾನಂದ ನಂದೆಣ್ಣವರ, ಶರಣಪ್ಪ ಬಸಾಪುರ, ಪೀರಸಾಬ್ ರಿತ್ತಿ, ಮೈನು ಮೊಮೀನ್, ತನ್ವೀರ್ ರಿತ್ತಿ, ಕರೀಂಸಾಬ್ ಶಿರಹಟ್ಟಿ, ಸಿದ್ದಲಿಂಗೇಶ ಮರಳಿಹಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಬೆಳಗಾವಿಯಲ್ಲೇ ಚಳಿಗಾಲ ಅಧಿವೇಶನ: ಸಚಿವ ಎಚ್‌.ಕೆ. ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ: ಬೆಳಗಾವಿಯಲ್ಲೇ ಚಳಿಗಾಲದ ಅಧಿವೇಶನ ನಡೆಯಲಿದ್ದು, ಅದನ್ನು ಬೇರೆಡೆಗೆ ಸ್ಥಳಾಂತರಿಸುವ ಕುರಿತು ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ ಸ್ಪಷ್ಟಪಡಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಚಳಿಗಾಲದ ಅಧಿವೇಶನದ ಸ್ಥಳ ಬದಲಾವಣೆ ಕುರಿತು ಸಚಿವ ಸಂಪುಟದಲ್ಲಿ ಇನ್ನೂ ಯಾವುದೇ ಚರ್ಚೆ ಅಥವಾ ನಿರ್ಣಯವಾಗಿಲ್ಲ. ಮೇ 29ರಂದು ನಡೆಯುವ ಸಾಧ್ಯತೆಯಿರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಬಹುದು” ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಮಾತನಾಡಿದ ಸಚಿವರು, “ಕೆಲವು ತಾಂತ್ರಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ಫಲಾನುಭವಿಗಳಿಗೆ ತೊಂದರೆ ಉಂಟಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ” ಎಂದರು.
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮತದಾನದ ಹಕ್ಕು ಕಳೆದುಕೊಂಡರೆ ಗ್ಯಾರಂಟಿ ಸೌಲಭ್ಯಗಳು ನಿಲ್ಲುತ್ತವೆ ಎಂಬ ಆತಂಕ ಜನರಲ್ಲಿ ಇದೆ. ಜಿಎಸ್‌ಟಿ ಸಂಬಂಧಿತ ಕಾರಣಗಳಿಂದ ಕೆಲವರ ಯೋಜನೆಗಳು ಸ್ಥಗಿತಗೊಂಡಿದ್ದರೂ, ಸ್ಪಷ್ಟೀಕರಣ ನೀಡಿದ ಪ್ರಕರಣಗಳನ್ನು ಮರುಪರಿಶೀಲಿಸಿ ಸೌಲಭ್ಯ ಮರುಜಾರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಟೀಕಿಸಿದ ಸಚಿವರು, “ದೇಶದ ಆರ್ಥಿಕ ಸ್ಥಿತಿ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಬೆಲೆ ಏರಿಕೆ ಮಾಡದೇ, ಈಗ ಎರಡು–ಮೂರು ದಿನಕ್ಕೊಮ್ಮೆ ದರ ಹೆಚ್ಚಿಸಲಾಗುತ್ತಿದೆ. ಜನರ ಬದುಕಿನೊಂದಿಗೆ ಕೇಂದ್ರ ಸರ್ಕಾರ ಚಲ್ಲಾಟ ಆಡಬಾರದು” ಎಂದು ವಾಗ್ದಾಳಿ ನಡೆಸಿದರು.

ಮೊದಲ ಮಳೆಗೆ ಮೈದುಂಬಿದ ಮಾಲವಿ ಜಲಾಶಯ

ಹಗರಿಬೊಮ್ಮನಹಳ್ಳಿ: ತಾಲೂಕಿನಾದ್ಯಂತ ಸುರಿದ ವರ್ಷದ ಮೊದಲ ಭಾರೀ ಮಳೆಯಿಂದ ಹಗರಿಬೊಮ್ಮನಹಳ್ಳಿ ತಾಲೂಕಿನ ಜೀವನಾಡಿಯಾಗಿರುವ ಮಾಲವಿ ಜಲಾಶಯಕ್ಕೆ ಹೊಸ ಜೀವಕಳೆ ಬಂದಿದೆ. ಜಲಾಶಯದತ್ತ ಮಳೆ ನೀರು ಹರಿದು ಬರುತ್ತಿರುವ ದೃಶ್ಯ ರೈತರಲ್ಲಿ ಹೊಸ ಭರವಸೆ ಮೂಡಿಸಿದೆ.
ಬೇಸಿಗೆಯ ತೀವ್ರ ಬಿಸಿಲಿನಿಂದ ನೀರಿನ ಮಟ್ಟ ಕುಸಿದಿದ್ದ ಜಲಾಶಯ, ಮೊದಲ ಮಳೆಯಲ್ಲೇ ಮತ್ತೆ ಚೇತರಿಕೆ ಕಾಣತೊಡಗಿದೆ. ಮಳೆಯ ಆಗಮನದಿಂದ ತಾಲೂಕಿನ ಜನರು ಹಾಗೂ ರೈತರು ಸಂತಸಗೊಂಡಿದ್ದು, ಕೃಷಿ ಚಟುವಟಿಕೆಗಳಿಗೆ ಹೊಸ ಚೈತನ್ಯ ದೊರೆತಂತಾಗಿದೆ.
ಇತ್ತೀಚೆಗೆ ಜಲಾಶಯದಲ್ಲಿ ಹೊಸ ಗೇಟ್ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದ್ದು, ಈ ಮಳೆಯೊಂದಿಗೆ ಅದರ ಉಪಯೋಗ ಸ್ಪಷ್ಟವಾಗತೊಡಗಿದೆ. ಹೊಸ ಗೇಟ್‌ನಿಂದ ನೀರಿನ ಸಂಗ್ರಹಣೆ ಹಾಗೂ ನಿರ್ವಹಣೆ ಸುಧಾರಣೆಯಾಗಲಿದ್ದು, ಮುಂದಿನ ದಿನಗಳಲ್ಲಿ ಕೃಷಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ.
ಮಾಲವಿ ಜಲಾಶಯ ತಾಲೂಕಿಗೆ ಕುಡಿಯುವ ನೀರು ಹಾಗೂ ನೀರಾವರಿ ವ್ಯವಸ್ಥೆಯ ಪ್ರಮುಖ ಆಧಾರವಾಗಿದ್ದು, ಮೊದಲ ಮಳೆಯಲ್ಲೇ ಜಲಾಶಯಕ್ಕೆ ನೀರು ಹರಿದು ಬಂದಿರುವುದು ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ.

ಸಂತ್ರಸ್ತರ ಅಳಲು ಆಲಿಸಿದ ಸಚಿವ ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ: ಅಧಿಕ ಮಳೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಗದಗ ನಗರದ ಗಂಗಿಮಡಿ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಸೋಮವಾರ ಭೇಟಿ ನೀಡಿ, ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಸ್ಥಳದಲ್ಲೇ ಅಧಿಕಾರಿಗಳಿಂದ ಮಾಹಿತಿ ಪಡೆದು ತುರ್ತು ನೆರವು ಹಾಗೂ ಶಾಶ್ವತ ಪುನರ್ವಸತಿ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಸಂತ್ರಸ್ತರೊಂದಿಗೆ ನೇರವಾಗಿ ಮಾತನಾಡಿದ ಸಚಿವರು, “ನಿಮ್ಮ ಪರಿಸ್ಥಿತಿಯನ್ನು ಖುದ್ದಾಗಿ ಅವಲೋಕನ ಮಾಡಿದ್ದೇನೆ. ಸಂಕಷ್ಟದಲ್ಲಿರುವ ಜನರ ನೆರವಿಗೆ ಸರ್ಕಾರ ಸದಾ ಬದ್ಧವಾಗಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ” ಎಂದು ಧೈರ್ಯ ತುಂಬಿದರು.
ಗಂಗಿಮಡಿ ಪ್ರದೇಶದಲ್ಲಿ ಒಟ್ಟು 96 ಕುಟುಂಬಗಳು ತಗಡಿನ ಶೇಡ್‌ಗಳಲ್ಲಿ ಜೀವನ ಸಾಗಿಸುತ್ತಿದ್ದು, ಭಾರೀ ಮಳೆಯಿಂದ 9 ಶೇಡ್‌ಗಳು ಸಂಪೂರ್ಣ ಕುಸಿದಿವೆ. ಈಗಾಗಲೇ ಜಿಲ್ಲಾಡಳಿತದಿಂದ 88 ಕುಟುಂಬಗಳಿಗೆ ತಲಾ ₹5 ಸಾವಿರ ನೆರವು ವಿತರಿಸಲಾಗಿದ್ದು, ಉಳಿದವರಿಗೆ ಶೀಘ್ರವೇ ಸಹಾಯಧನ ನೀಡಲಾಗುವುದು ಎಂದು ಸಚಿವರು ತಿಳಿಸಿದರು.
ಕೆಲವರು ಮನೆಗಳಿದ್ದರೂ ಶೇಡ್‌ಗಳಲ್ಲಿ ವಾಸಿಸುತ್ತಿರುವ ಮಾಹಿತಿ ಗಮನಕ್ಕೆ ಬಂದಿದೆ. ಅರ್ಹರನ್ನು ಗುರುತಿಸಿ ಮೊದಲ ಹಂತದಲ್ಲಿ ನಿರ್ಮಾಣವಾಗುತ್ತಿರುವ 1000 ಮನೆಗಳಲ್ಲಿ ನಿಜವಾದ ಸಂತ್ರಸ್ತರಿಗೆ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.
“₹5 ಸಾವಿರ ಸಾಲದು” – ಸಂತ್ರಸ್ತರ ಮನವಿ
ಸಂಪೂರ್ಣ ಹಾನಿಗೊಳಗಾದ 9 ಕುಟುಂಬಗಳು, “₹5 ಸಾವಿರ ನೆರವು ಸಾಕಾಗುವುದಿಲ್ಲ. ಕನಿಷ್ಠ ₹20 ಸಾವಿರ ಸಹಾಯಧನ ನೀಡಬೇಕು” ಎಂದು ಸಚಿವರ ಮುಂದೆ ಮನವಿ ಮಾಡಿದರು. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಪ್ರಸ್ತುತ ಸಂತ್ರಸ್ತರು ಶಾಲಾ ಕೊಠಡಿಗಳಲ್ಲಿ ಆಶ್ರಯ ಪಡೆದಿದ್ದು, ಶಾಲೆಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಜಿಲ್ಲಾಧಿಕಾರಿಗಳು ಈಗಾಗಲೇ ಆಹಾರ, ಆರೋಗ್ಯ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿದ್ದಾರೆ. 96 ಕುಟುಂಬಗಳಲ್ಲಿ ಯಾರಿಗೆ ಮನೆ ಇದೆ, ಯಾರಿಗೆ ಇಲ್ಲ ಎಂಬುದರ ಸಮಗ್ರ ಪರಿಶೀಲನೆ ನಡೆಸಿ, ನಗರಸಭೆ ನಿಯಮಾವಳಿಗಳ ಅನ್ವಯ ಅರ್ಹರಿಗೆ ಮನೆ ಮಂಜೂರು ಮಾಡುವ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಸಾರ್ವಜನಿಕರು, ಸಚಿವರ ಮುಂದೆ ಮಂಜೂರಾದ ಮನೆಗಳ ಮರುಸರ್ವೇ ನಡೆಸಬೇಕು, ಮನೆ ಪಡೆದು ಬಾಡಿಗೆಗೆ ನೀಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು, ಶಾಶ್ವತ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಬೇಕು, ಸೋಲಾರ್ ಲೈಟ್ ಅಳವಡಿಸಬೇಕು, ಮೂಲಭೂತ ಸೌಲಭ್ಯ ಒದಗಿಸಬೇಕು,
ಮನೆ ಸಿಗುವವರೆಗೆ ಇಲ್ಲಿಯೇ ವಾಸಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಬಿ.ಬಿ. ಅಸೂಟಿ, ತಾಲ್ಲೂಕು ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾ ಕೆಡಿಪಿ ಸಮಿತಿ ಸದಸ್ಯ ಎಸ್‌.ಎನ್‌. ಬಳ್ಳಾರಿ, ನೀಲವ್ವ ಬೋಳನವರ, ಸಿದ್ದು ಪಾಟೀಲ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ತಹಸೀಲ್ದಾರ್ ಶ್ರೀನಿವಾಸಮೂರ್ತಿ, ಡಾ. ಎಸ್‌.ಎಸ್‌. ನೀಲಗುಂದ, ಆರ್‌.ಎಸ್‌. ಬುರಡಿ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
“ಸಂತ್ರಸ್ತರಿಗೆ ಶಾಶ್ವತ ಸೂರು ಕಲ್ಪಿಸುವುದು ಸರ್ಕಾರದ ಜವಾಬ್ದಾರಿ. ಅರ್ಹರಿಗೆ ಮನೆ ಮಂಜೂರು ಮಾಡಲು ಕ್ರಮ ಕೈಗೊಳ್ಳಲಾಗುವುದು.”
ಎಚ್‌.ಕೆ. ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ 
 “ನಮ್ಮ ಅಳಲಿಗೆ ಸ್ಪಂದಿಸಿ ಸಚಿವರು ಸ್ಥಳಕ್ಕೆ ಬಂದು ಪರಿಶೀಲಿಸಿರುವುದು ನಮಗೆ ಧೈರ್ಯ ತಂದಿದೆ.”
ಗಂಗಿಮಡಿ ನಿವಾಸಿಗಳು

ಬೆಂಗಳೂರು ರಸ್ತೆಯಲ್ಲಿ ಮತ್ತೆ ಪಂಕ್ಚರ್ ಮಾಫಿಯಾ ದಂಧೆ! ಪೊಲೀಸ್ ಠಾಣೆ ಕೂಗಳತೆಯಲ್ಲೇ ಕೃತ್ಯ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಕುಖ್ಯಾತ ‘ಪಂಕ್ಚರ್ ಮಾಫಿಯಾ’ ಮತ್ತೆ ಸಕ್ರಿಯವಾಗಿರುವುದು ಬೆಳಕಿಗೆ ಬಂದಿದೆ.

ನಗರದ ಕೆಲ ಪ್ರಮುಖ ರಸ್ತೆಗಳಲ್ಲಿಯೇ ತಡರಾತ್ರಿ ನೂರಾರು ಮೊಳೆಗಳನ್ನು ಉದ್ದೇಶಪೂರ್ವಕವಾಗಿ ಚೆಲ್ಲಿ ವಾಹನ ಸವಾರರಿಗೆ ಬಲೆ ಬೀಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ವಿಶೇಷವೆಂದರೆ ಈ ಬಾರಿ ಪೊಲೀಸ್ ಠಾಣೆಯೊಂದರ ಸಮೀಪದ ರಸ್ತೆಯಲ್ಲೇ ಇಂತಹ ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.

ವರದಿಗಳ ಪ್ರಕಾರ, ಈ ಜಾಲವು ರಾತ್ರಿ ವೇಳೆ ರಸ್ತೆಗಳ ಮೇಲೆ ಚೂಪಾದ ಮೊಳೆಗಳನ್ನು ಹರಡುತ್ತದೆ. ಬೆಳಗ್ಗೆ ಆ ಮಾರ್ಗದಲ್ಲಿ ಸಾಗುವ ದ್ವಿಚಕ್ರ ವಾಹನ ಹಾಗೂ ಕಾರುಗಳ ಟೈರ್‌ಗಳು ಪಂಕ್ಚರ್ ಆಗುತ್ತವೆ. ನಂತರ ಸವಾರರು ಹತ್ತಿರದ ಪಂಕ್ಚರ್ ಅಂಗಡಿಗಳಿಗೆ ತೆರಳುವಂತೆ ಮಾಡಲಾಗುತ್ತದೆ. ಅಲ್ಲಿ ಅನಗತ್ಯವಾಗಿ ಟೈರ್ ಬದಲಾವಣೆ, ರಿಪೇರಿ ಹೆಸರಿನಲ್ಲಿ ಸಾವಿರಾರು ರೂಪಾಯಿ ವಸೂಲಿ ಮಾಡಲಾಗುತ್ತದೆ ಎಂಬ ಆರೋಪ ಇದೆ.

ಈ ರೀತಿಯ ದಂಧೆ ನಗರದಲ್ಲಿ ಹಿಂದೆಯೂ ಬೆಳಕಿಗೆ ಬಂದಿದ್ದರೂ, ಇದೀಗ ಪೊಲೀಸ್ ಠಾಣೆಯ ಸುತ್ತಮುತ್ತಲೇ ನಡೆದಿರುವ ಘಟನೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಕಾನೂನು ವ್ಯವಸ್ಥೆಯ ಕಣ್ಣೆದುರಲ್ಲೇ ಇಂತಹ ಚಟುವಟಿಕೆ ನಡೆಯುತ್ತಿರುವುದು ಪೊಲೀಸ್ ಗಸ್ತು ಹಾಗೂ ಭದ್ರತಾ ವ್ಯವಸ್ಥೆಯ ಮೇಲೆ ಪ್ರಶ್ನೆ ಎತ್ತಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದ್ದು, ಅದನ್ನು @Karnataka Portfolio ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಸಾರ್ವಜನಿಕರು ಇಂತಹ ಪ್ರದೇಶಗಳಲ್ಲಿ ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಸಲಹೆ ನೀಡಲಾಗಿದೆ.

ಮುಂಗಾರು ಅಬ್ಬರಕ್ಕೆ ನರೇಗಲ್ಲ ತತ್ತರ!

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ನರೇಗಲ್ಲ ಪಟ್ಟಣ ಸೇರಿದಂತೆ ಹೋಬಳಿಯ ಜಕ್ಕಲಿ, ಅಬ್ಬಿಗೇರಿ, ಬೂದಿಹಾಳ, ಮಾರನಬಸರಿ, ನಿಡಗುಂದಿ, ನಿಡಗುಂದಿ ಕೊಪ್ಪ, ಹಾಳಕೆರೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಶನಿವಾರ ಸಂಜೆ ಎರಡು ತಾಸಿಗೂ ಅಧಿಕ ಕಾಲ ಸುರಿದ ಭರ್ಜರಿ ಮಳೆ ರೈತರಲ್ಲಿ ಹೊಸ ಉತ್ಸಾಹ ಮೂಡಿಸಿದೆ.
ಬೇಸಿಗೆಯ ಬಿಸಿಗೆ ಕಂಗೆಟ್ಟಿದ್ದ ಜನರು ಮಳೆಯಿಂದ ತಂಪು ಅನುಭವಿಸಿದ್ದು, ಹೊಲಗಳಲ್ಲಿ ತೇವಾಂಶ ಹೆಚ್ಚಿದ ಹಿನ್ನೆಲೆ ರೈತರು ಬಿತ್ತನೆ ಕಾರ್ಯಕ್ಕೆ ಸಜ್ಜಾಗಿದ್ದಾರೆ. ಹಲವೆಡೆ ಹೊಲಗದ್ದೆಗಳು ನೀರಿನಿಂದ ತುಂಬಿ ಕೃಷಿ ಚಟುವಟಿಕೆಗಳಿಗೆ ಚೈತನ್ಯ ತುಂಬಿದವು.
ಆದರೆ ಇದೇ ಮಳೆ ಜಕ್ಕಲಿ ಗ್ರಾಮದಲ್ಲಿ ಅವಾಂತರಕ್ಕೂ ಕಾರಣವಾಯಿತು. ಗ್ರಾಮದ ಅಗಸರ ಹಳ್ಳ ತುಂಬಿ ಹರಿದ ಪರಿಣಾಮ ಮುಳ್ಳಿನ ಕೊಂಪೆ ರಸ್ತೆ ಮಧ್ಯೆ ಬಿದ್ದು, ಜಕ್ಕಲಿ–ರೋಣ ಸಂಪರ್ಕ ರಸ್ತೆ ಶನಿವಾರ ರಾತ್ರಿ ಹಾಗೂ ರವಿವಾರ ಬೆಳಿಗ್ಗೆ ಕೆಲ ಗಂಟೆಗಳ ಕಾಲ ಬಂದ್ ಆಗಿತ್ತು.
ರವಿವಾರ ಬೆಳಿಗ್ಗೆ ರೋಣದಿಂದ ಜಕ್ಕಲಿ ಕಡೆ ಬರುತ್ತಿದ್ದ ಕೆಲವು ಬಸ್‌ಗಳು ದಾರಿ ಮಧ್ಯೆ ಅಡ್ಡಿಯಾದ ಮುಳ್ಳಿನ ಕೊಂಪೆಯಿಂದ ಮುಂದೆ ಸಾಗಲು ಸಾಧ್ಯವಾಗದೆ ಹಿಂತಿರುಗಿದವು ಎಂದು ತಿಳಿದು ಬಂದಿದೆ.
ಹಳ್ಳದ ನೀರು ರಭಸವಾಗಿ ಹರಿದು ಸುತ್ತಮುತ್ತಲಿನ ಜಮೀನುಗಳಿಗೆ ನುಗ್ಗಿದ ಪರಿಣಾಮ ರೈತರು ಆತಂಕಕ್ಕೀಡಾಗಿದ್ದಾರೆ. ಕೆಲ ಹೊಲಗಳಲ್ಲಿ ನೀರು ನಿಂತು ಬೆಳೆ ಹಾನಿಯ ಭೀತಿ ಎದುರಾಗಿದೆ.
ನಂತರ ಗ್ರಾಮಸ್ಥರೇ ಸ್ವಯಂಪ್ರೇರಿತವಾಗಿ ತೆರವು ಕಾರ್ಯಾಚರಣೆ ನಡೆಸಿ ರಸ್ತೆ ಮಧ್ಯೆ ಬಿದ್ದಿದ್ದ ಮುಳ್ಳಿನ ಕೊಂಪೆಯನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
“ವಿಂಡ್ ಪವರ್ ರಸ್ತೆಯೇ ಸಮಸ್ಯೆಗೆ ಮೂಲ”
ಅಗಸರ ಹಳ್ಳಕ್ಕೆ ವಿಂಡ್ ಪವರ್ ಕಂಪನಿ ಅಡ್ಡಲಾಗಿ ರಸ್ತೆ ನಿರ್ಮಿಸಿರುವುದರಿಂದ ನೀರಿನ ಸಹಜ ಹರಿವಿಗೆ ತೊಂದರೆಯಾಗುತ್ತಿದೆ. ರಸ್ತೆಯ ಕೆಳಭಾಗದಲ್ಲಿ ಸಣ್ಣ ಸೇತುವೆ ನಿರ್ಮಿಸಿರುವುದರಿಂದಲೇ ನೀರು ಉಕ್ಕಿ ಹರಿದು ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. “ತಕ್ಷಣ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು” ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಪ್ರಾಣ ಕೊಟ್ಟರೂ ಭೂಮಿ ಬಿಡೋದಿಲ್ಲ!

ವಿಜಯಸಾಕ್ಷಿ ಸುದ್ದಿ, ಗದಗ: ನರಸಾಪುರ–ನಾಗಸಮುದ್ರ ಸರಹದ್ದಿನ ಫಲವತ್ತಾದ ಕೃಷಿಭೂಮಿಯನ್ನು ಕೆಐಎಡಿಬಿ ಮೂಲಕ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದನ್ನು ಖಂಡಿಸಿ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿದ ಕರವೇ ಎಚ್. ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷ ಎಂ.ಪಿ. ಪರ್ವತಗೌಡ್ರ ಮಾತನಾಡಿ, “ರೈತರ ವಿರೋಧದ ನಡುವೆಯೇ 250 ಎಕರೆಗಿಂತ ಹೆಚ್ಚು ಭೂಮಿಯನ್ನು ಕೆಐಎಡಿಬಿ ಅಧಿಕಾರಿಗಳು ಒತ್ತಾಯಪೂರ್ವಕವಾಗಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವುದು ಖಂಡನೀಯ” ಎಂದು ಹೇಳಿದರು.
ಈ ಹಿಂದೆ ಇದೇ ಭಾಗದಲ್ಲಿ 170 ಎಕರೆಗೂ ಅಧಿಕ ಭೂಮಿಯನ್ನು ಕೈಗಾರಿಕಾ ಪ್ರದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಬಳಿಕ ಚಿಕ್ಕೊಪ್ಪ–ನಾಗಸಮುದ್ರ ಮಧ್ಯದ ಸುಮಾರು 198 ಎಕರೆ ಭೂಮಿಯನ್ನು ಒಳಚರಂಡಿ ಶುದ್ಧೀಕರಣ ಘಟಕಕ್ಕಾಗಿ ವಶಪಡಿಸಿಕೊಳ್ಳಲಾಗಿದೆ. ಈಗ ಉಳಿದಿರುವ ಅಲ್ಪಭೂಮಿಯನ್ನೂ ಕಸಿದುಕೊಳ್ಳಲು ಮುಂದಾಗಿರುವುದರಿಂದ ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದೆ ಎಂದು ಆರೋಪಿಸಿದರು.
ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಅಧಿನಿಯಮ–1966ರ ನಿಯಮಗಳನ್ನು ಉಲ್ಲಂಘಿಸಲಾಗಿದೆ. ರೈತರಿಗೆ ನೀಡಿರುವ ನೋಟಿಸ್‌ಗಳನ್ನು ಮುಂದಿನ 15 ದಿನಗಳೊಳಗೆ ಹಿಂಪಡೆಯಬೇಕು. ಜೊತೆಗೆ ರೈತರ ವಿರೋಧದ ನಡುವೆಯೇ ಫಲವತ್ತಾದ ಜಮೀನಿನಲ್ಲಿ ವಿಂಡ್ ಪ್ಯಾನ್ ಅಳವಡಿಸುವ ಕಾರ್ಯವನ್ನು ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಪ್ರಗತಿಪರ ರೈತ ಯಮನೂರಸಾಬ ನದಾಫ್ ಮಾತನಾಡಿ, “ಅಭಿವೃದ್ಧಿ ಹೆಸರಿನಲ್ಲಿ ರೈತರ ಭೂಮಿ ಕಸಿದುಕೊಳ್ಳುವುದನ್ನು ನಾವು ಸಹಿಸುವುದಿಲ್ಲ. ಕೈಗಾರಿಕಾ ಪ್ರದೇಶಗಳನ್ನು ಸಚಿವರ ಕ್ಷೇತ್ರದಲ್ಲೇ ಸ್ಥಾಪಿಸಲಿ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ವಿರುದ್ಧ ವಾಗ್ದಾಳಿ ನಡೆಸಿದರು.
ಪ್ರಗತಿಪರ ಹೋರಾಟಗಾರ ಶಾಂತಯ್ಯ ಮುತ್ತಿನಿಪೆಂಡಿಮಠ ಮಾತನಾಡಿ, “ಕೆಐಎಡಿಬಿ ಹಾಗೂ ವಿಂಡ್ ಪ್ಯಾನ್ ಕಂಪನಿಗಳು ಭೂಸ್ವಾಧೀನ ಪ್ರಕ್ರಿಯೆಯನ್ನು ತಕ್ಷಣ ರದ್ದುಪಡಿಸಬೇಕು. ಇಲ್ಲದಿದ್ದರೆ ರೈತರು ಮತ್ತು ಗ್ರಾಮಸ್ಥರೊಂದಿಗೆ ಅಹೋರಾತ್ರಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಸಂಚಾಲಕ ಬಸಯ್ಯ ಗುಡ್ಡಿಮಠ, ಸಂತೋಷ ಹಿರೇಮಠ, ಕುಮಾರಗೌಡ ಬರಮಗೌಡ್ರ, ಯಶವಂತ ಉಪ್ಪಾರ, ಗುರುಯ್ಯ, ಶಾಂತಯ್ಯ, ಶಿವರಾಜ್ ಸೇರಿದಂತೆ ಅನೇಕ ರೈತ ಮುಖಂಡರು ಉಪಸ್ಥಿತರಿದ್ದರು.
“ಪ್ರಾಣ ಕೊಟ್ಟರೂ ಭೂಮಿ ಬಿಡುವುದಿಲ್ಲ. ನಮ್ಮ ಭೂಮಿಗೆ ಕೈ ಹಾಕಿದರೆ ರೈತರು ಸುಮ್ಮನಿರುವುದಿಲ್ಲ”
ಮಲ್ಲಿಕಾರ್ಜುನ ಕಿರೇಸೂರ,
ಕರವೇ ಗೌರವಾಧ್ಯಕ್ಷ
error: Content is protected !!