Home Blog

Cauvery Issue: ಆಗಸ್ಟ್ 13ರ ಕರ್ನಾಟಕ ಬಂದ್‌ಗೆ ರಮ್ಯಾ ಸಾಥ್, ಹೇಳಿದ್ದೇನು?

ಬೆಂಗಳೂರು: ಆಗಸ್ಟ್‌ 13ರಂದು ಕರೆ ನೀಡಲಾಗಿರುವ ಅಖಂಡ ಕರ್ನಾಟಕ ಬಂದ್‌ಗೆ ನಟಿ ರಮ್ಯಾ ಬೆಂಬಲ ಘೋಷಿಸಿದ್ದಾರೆ.

ಕಾವೇರಿ ನೀರಿನ ವಿಚಾರದಲ್ಲಿ ರೈತರ ಪರವಾಗಿ ತಮ್ಮ ಬೆಂಬಲ ಇರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕಾವೇರಿ ಹೋರಾಟ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ನಟಿ ರಮ್ಯಾ ತಮ್ಮ ಪ್ರತಿಕ್ರಿಯೆ ನೀಡಿದ್ದು, “ನಾನು ಮಂಡ್ಯದವಳು. ಕಾವೇರಿ ವಿಚಾರ ಬಂದಾಗ ರೈತರ ಪರವಾಗಿ ನಿಲ್ಲುವುದು ನನ್ನ ಜವಾಬ್ದಾರಿ. ನನ್ನ ಬೆಂಬಲ ಖಂಡಿತ ಇರುತ್ತದೆ” ಎಂದು ಹೇಳಿದ್ದಾರೆ.

ಕಾವೇರಿ ನೀರಿನ ವಿಚಾರದಲ್ಲಿ ಈ ಹಿಂದೆಯೂ ಹೋರಾಟಗಳಲ್ಲಿ ಭಾಗಿಯಾಗಿದ್ದೇನೆ ಎಂದು ಹೇಳಿರುವ ರಮ್ಯಾ, ಕಾವೇರಿ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿದ್ದ ಸಂದರ್ಭದಲ್ಲೂ ಹಾಜರಾಗಿದ್ದೆ ಎಂದು ತಿಳಿಸಿದ್ದಾರೆ.

“ರೈತರ ಹಿತದ ಪ್ರಶ್ನೆ ಬಂದಾಗ ಯಾವುದೇ ಹಿಂಜರಿಕೆಯಿಲ್ಲದೆ ಬೆಂಬಲ ನೀಡುತ್ತೇನೆ. ನಾನು ಯಾವಾಗಲೂ ರೈತರ ಪರವಾಗಿಯೇ ಇರುತ್ತೇನೆ” ಎಂದು ರಮ್ಯಾ ಹೇಳಿದ್ದಾರೆ.

ಕಾವೇರಿ ನೀರಿನ ವಿವಾದ ಮತ್ತೆ ರಾಜ್ಯದಲ್ಲಿ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಗೆ ಕಾರಣವಾಗಿರುವ ಸಂದರ್ಭದಲ್ಲಿ ರಮ್ಯಾ ಅವರ ಬೆಂಬಲ ಬಂದ್‌ಗೆ ಮತ್ತಷ್ಟು ಬಲ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಆದರೆ, ಆಗಸ್ಟ್‌ 13ರಂದು ನಡೆಯುವ ಬಂದ್‌ನಲ್ಲಿ ರಮ್ಯಾ ಸ್ವತಃ ಬೀದಿಗಿಳಿದು ಹೋರಾಟದಲ್ಲಿ ಭಾಗಿಯಾಗುತ್ತಾರೆಯೇ ಅಥವಾ ಬೆಂಬಲಕ್ಕೆ ಮಾತ್ರ ಸೀಮಿತರಾಗುತ್ತಾರೆಯೇ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.

 

ರಾಘವೇಂದ್ರ ಹಿಟ್ನಾಳ್‌ಗೆ ಕೈತಪ್ಪಿದ ಸಚಿವ ಸ್ಥಾನ: ಕೊಪ್ಪಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ

ಕೊಪ್ಪಳ: ರಾಜ್ಯದಲ್ಲಿ ನೂತನ ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಬೆಳವಣಿಗೆಗಳು ಮುಂದುವರಿದಿವೆ.

ಕೊಪ್ಪಳ ಜಿಲ್ಲೆಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಬೆಂಬಲಿಗರಿಂದ ರಾಜೀನಾಮೆ ಪರ್ವ ಆರಂಭವಾಗಿದೆ.

ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಮರೇಗೌಡ ಬಯ್ಯಪುರ ಅವರಿಗೆ ಸಲ್ಲಿಸಿದ್ದಾರೆ.

ರಾಘವೇಂದ್ರ ಹಿಟ್ನಾಳ್ ಅವರ ಆಪ್ತೆಯಾಗಿರುವ ಜ್ಯೋತಿ ಗೊಂಡಬಾಳ್, ಕೊಪ್ಪಳ ಜಿಲ್ಲೆಗೆ ಸಚಿವ ಸ್ಥಾನ ನೀಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ 75 ವರ್ಷಗಳಿಂದ ಕೊಪ್ಪಳ ಜಿಲ್ಲಾ ಕೇಂದ್ರಕ್ಕೆ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ನೀಡದಿರುವುದು ತೀವ್ರ ನೋವು ತಂದಿದೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯ ಬಳಿಕ ಕೊಪ್ಪಳ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಈ ಬೆಳವಣಿಗೆ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

 

ವಿಮೆ ಇಲ್ಲದ ವಾಹನಗಳಿಗೆ ಇನ್ಮುಂದೆ ಪೆಟ್ರೋಲ್ ಸಿಗಲ್ಲ? ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ!

ನವದೆಹಲಿ: ದೇಶದಲ್ಲಿ ವಿಮೆ ಇಲ್ಲದೆ ಸಂಚರಿಸುವ ವಾಹನಗಳ ಸಂಖ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್‌ ಮಹತ್ವದ ಕ್ರಮಕ್ಕೆ ಮುಂದಾಗಿದೆ.

ಮಾನ್ಯ ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್‌ ಬಂಕ್‌ಗಳಲ್ಲಿ ಇಂಧನ ನೀಡದಿರುವ ಕುರಿತು ಪ್ರಾಯೋಗಿಕ ಯೋಜನೆ ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಹಾಗೂ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಪೈಲಟ್ ಯೋಜನೆ ಸಿದ್ಧಪಡಿಸುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. ಈ ಯೋಜನೆಯಡಿ ಪೆಟ್ರೋಲ್‌ ಅಥವಾ ಡೀಸೆಲ್‌ ತುಂಬಿಸುವ ಮೊದಲು ವಾಹನದ ವಿಮೆ ಮಾನ್ಯವಾಗಿದೆಯೇ ಎಂಬುದನ್ನು ಪರಿಶೀಲಿಸುವ ವ್ಯವಸ್ಥೆ ಜಾರಿಗೆ ಬರಬಹುದು.

ಮಾನ್ಯ ವಿಮೆ ಇಲ್ಲದ ವಾಹನಗಳಿಗೆ ಅಗತ್ಯ ವಿಮೆ ಮಾಡಿಸಿಕೊಳ್ಳುವವರೆಗೆ ಇಂಧನ ನಿರಾಕರಿಸುವ ಸಾಧ್ಯತೆಯಿದೆ. ಕಡ್ಡಾಯ ಮೋಟಾರು ವಿಮಾ ನಿಯಮಗಳ ಪಾಲನೆ ಹೆಚ್ಚಿಸುವುದು ಹಾಗೂ ವಿಮೆ ಇಲ್ಲದ ವಾಹನಗಳ ಸಂಚಾರ ತಡೆಯುವುದು ಈ ಕ್ರಮದ ಉದ್ದೇಶವಾಗಿದೆ.

ರಸ್ತೆ ಸುರಕ್ಷತಾ ಕ್ರಮಗಳ ಭಾಗವಾಗಿ ವಾಹನಗಳ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ (ANPR) ಕ್ಯಾಮೆರಾಗಳನ್ನು ವಾಹನ ಹಾಗೂ ವಿಮಾ ಡೇಟಾಬೇಸ್‌ಗಳಿಗೆ ಸಂಪರ್ಕಿಸುವುದು, ಸಂಚಾರ ಪೊಲೀಸರಿಗೆ ವಿಮೆ ಪರಿಶೀಲನೆಗೆ ಮೊಬೈಲ್‌ ಸಾಧನಗಳನ್ನು ಒದಗಿಸುವುದು ಸೇರಿದಂತೆ ಹಲವು ಪ್ರಸ್ತಾವನೆಗಳನ್ನು ಸುಪ್ರೀಂ ಕೋರ್ಟ್‌ ಮುಂದಿಟ್ಟಿದೆ.

ಇದಲ್ಲದೆ, ಹೊಸದಾಗಿ ಖರೀದಿಸುವ ವಾಹನಗಳಿಗೆ ಕಡ್ಡಾಯವಾಗಿರುವ ಮೂರನೇ ವ್ಯಕ್ತಿ ವಿಮೆಯ ಅವಧಿಯನ್ನು ವಿಸ್ತರಿಸುವ ಬಗ್ಗೆಯೂ ಚರ್ಚೆ ನಡೆದಿದೆ. ವಿಮೆ ಇಲ್ಲದ ವಾಹನಗಳಿಂದ ಉಂಟಾಗುವ ಅಪಘಾತ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ಸಿಗುವಂತೆ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ.

 

Chikkamagaluru News: ಕಾಫಿ ಎಸ್ಟೇಟ್‌ಗಳಲ್ಲಿ ಕೆಲಸ ಮಾಡುತ್ತಿದ್ದ ಐವರು ಅಕ್ರಮ ನಿವಾಸಿಗಳು ಪತ್ತೆ!

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ ಎನ್ನಲಾದ ಐವರು ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾಫಿ ತೋಟಗಳು, ಹೋಂಸ್ಟೇ ಹಾಗೂ ರೆಸಾರ್ಟ್‌ಗಳಲ್ಲಿ ಅಕ್ರಮ ನಿವಾಸಿಗಳಿರುವ ಆರೋಪಗಳ ನಡುವೆ ಈ ಬೆಳವಣಿಗೆ ಚರ್ಚೆಗೆ ಕಾರಣವಾಗಿದೆ.

ಕೇಂದ್ರ ಗುಪ್ತಚರ ಇಲಾಖೆಯಿಂದ ಬಂದ ಮಾಹಿತಿಯ ಆಧಾರದ ಮೇಲೆ ಪೊಲೀಸರು ನಡೆಸಿದ ತಪಾಸಣೆ ವೇಳೆ ಐವರು ಪತ್ತೆಯಾಗಿದ್ದಾರೆ. ಅವರ ಬಳಿ ಬಾಂಗ್ಲಾದೇಶದ ಗುರುತಿನ ಚೀಟಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಎರಡು ತಿಂಗಳಿಂದ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಬಂದಿರುವ ಕಾರ್ಮಿಕರ ಮಾಹಿತಿ ಸಂಗ್ರಹಿಸುವ ಕಾರ್ಯ ನಡೆಯುತ್ತಿತ್ತು. ಈ ವೇಳೆ ನಡೆಸಿದ ಪರಿಶೀಲನೆಯಲ್ಲಿ ಐವರು ಕಾಫಿ ಎಸ್ಟೇಟ್‌ಗಳು ಸೇರಿದಂತೆ ವಿವಿಧೆಡೆ ದಿನಗೂಲಿ ಕೆಲಸ ಮಾಡುತ್ತಿರುವುದು ಪತ್ತೆಯಾಗಿದೆ.

ಬಂಧಿತರನ್ನು ಜಹಾಂಗೀರ್, ಫೈಸುದ್ದಿನ್, ನುಮನ್ ಬಶೀರ್, ಮಹಮದ್ ಹುಮೈನ್ ಹಾಗೂ ಮಹಮದ್ ಹಸೀಬುಲ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ವಿಚಾರಣೆಯಲ್ಲಿ ಕೆಲವರು ಒಂಟಿಯಾಗಿ ಹಾಗೂ ಕೆಲವರು ಕುಟುಂಬ ಸಮೇತರಾಗಿ ಚಿಕ್ಕಮಗಳೂರಿಗೆ ಬಂದಿರುವುದು ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಯಾರು ಕರೆತಂದರು? ಪೊಲೀಸರಿಂದ ತನಿಖೆ:

ಬಂಧಿತರು ಚಿಕ್ಕಮಗಳೂರಿಗೆ ಹೇಗೆ ಬಂದರು, ಅವರನ್ನು ಯಾರು ಕರೆತಂದರು, ಅವರ ಏಜೆಂಟ್ ಯಾರು ಹಾಗೂ ಸ್ಥಳೀಯ ಸಂಪರ್ಕ ಹೇಗೆ ಬೆಳೆದಿದೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಸಂಗ್ರಹಿಸಲು ವಿಚಾರಣೆ ಮುಂದುವರಿದಿದೆ.

ಇನ್ನು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಾರ್ಮಿಕರ ದಾಖಲೆಗಳು ಹಾಗೂ ಫೋಟೋಗಳನ್ನು ಸಂಗ್ರಹಿಸುವ ಕಾರ್ಯ ನಡೆಯುತ್ತಿದ್ದು, ಅಕ್ರಮ ವಲಸಿಗರ ಪತ್ತೆ ಕಾರ್ಯ ಮುಂದುವರಿದಿದೆ.

ಈ ನಡುವೆ, ಮಲೆನಾಡು ಭಾಗದಲ್ಲಿ ಸಾವಿರಾರು ಅಕ್ರಮ ಬಾಂಗ್ಲಾದೇಶಿ ನಿವಾಸಿಗಳಿದ್ದಾರೆ ಎಂದು ಬಿಜೆಪಿ ಹಾಗೂ ಕೆಲವು ಹಿಂದೂಪರ ಸಂಘಟನೆಗಳು ಈ ಹಿಂದೆ ಆರೋಪಿಸಿದ್ದವು. ಇದೀಗ ಐವರು ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಇನ್ನಷ್ಟು ಮಂದಿ ಇದ್ದಾರೆಯೇ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

 

ನೆಲಮಂಗಲದಲ್ಲಿ ಭೀಕರ ಅಪಘಾತ: ಥಾರ್ ಜೀಪ್ ಪಲ್ಟಿಯಾಗಿ ಇಬ್ಬರು ಸಾವು, ಮೂವರಿಗೆ ಗಂಭೀರ ಗಾಯ

ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಥಾರ್‌ ಜೀಪ್‌ ಪಲ್ಟಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕಂಬಾಳು ಗ್ರಾಮದ ಬಳಿ ನಡೆದಿದೆ.

ಮೃತರನ್ನು ಪವನ್ ಮತ್ತು ದೀಪಕ್ ಎಂದು ಗುರುತಿಸಲಾಗಿದೆ. ಸ್ನೇಹಿತನ ಹುಟ್ಟುಹಬ್ಬದ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್‌ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಕಂಬಾಳು ಗ್ರಾಮದ ಕೆರೆಯ ರಸ್ತೆಯಲ್ಲಿ ತೆರಳುತ್ತಿದ್ದ ಥಾರ್‌ ಜೀಪ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗದ್ದೆಗೆ ಬಿದ್ದಿದೆ. ಬಳಿಕ ಜೀಪ್‌ ನಾಲ್ಕೈದು ಬಾರಿ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅತಿವೇಗವೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದ್ದು, ಡಾಬಸ್‌ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Karnataka Rain Alert: ಕರ್ನಾಟಕದ 6 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; ಇಂದು ಯಾವ ಜಿಲ್ಲೆಗಳಿಗೆ ಅಲರ್ಟ್?

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಳೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ಕೂಡ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳ ಕೆಲವೆಡೆ ಗಂಟೆಗೆ 40 ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಇನ್ನು ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಮಳೆ ಮತ್ತು ಗಾಳಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

 

ಬೆಂಗಳೂರು ಸೇರಿ ಕರ್ನಾಟಕದಲ್ಲಿ ಗಾಳಿಯ ಗುಣಮಟ್ಟ ಅತ್ಯುತ್ತಮ; ಇಂದು AQI ಎಷ್ಟಿದೆ?

ಬೆಂಗಳೂರು: ಸಕ್ರಿಯ ಮುಂಗಾರು ಮಳೆಯ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಗಾಳಿಯ ಗುಣಮಟ್ಟ ಉತ್ತಮ ಮಟ್ಟದಲ್ಲಿದ್ದು, ವಾಯು ಮಾಲಿನ್ಯ ಪ್ರಮಾಣ ಗಮನಾರ್ಹವಾಗಿ ಕಡಿಮೆಯಾಗಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಬಿಡುಗಡೆ ಮಾಡಿರುವ ಇತ್ತೀಚಿನ ಮಾಹಿತಿಯ ಪ್ರಕಾರ, ಬೆಂಗಳೂರಿನ ಸರಾಸರಿ AQI ಇಂದು 38 ರಿಂದ 41ರ ನಡುವೆ ದಾಖಲಾಗಿದೆ. ನಗರದ PM10 ಪ್ರಮಾಣ ಸುಮಾರು 47 ಮೈಕ್ರೋಗ್ರಾಂ/ಘನ ಮೀಟರ್ ಹಾಗೂ PM2.5 ಪ್ರಮಾಣ 20 ಮೈಕ್ರೋಗ್ರಾಂ/ಘನ ಮೀಟರ್ ಆಗಿದ್ದು, ಗಾಳಿಯ ಗುಣಮಟ್ಟ ‘ಉತ್ತಮ’ (Good) ವರ್ಗದಲ್ಲಿದೆ.

ಜಯನಗರ, ಮಲ್ಲೇಶ್ವರಂ ಹಾಗೂ ಕೆಂಗೇರಿ ಪ್ರದೇಶಗಳಲ್ಲಿ ಅತ್ಯಂತ ಶುದ್ಧ ಗಾಳಿ ದಾಖಲಾಗಿದ್ದು, ಸಿಲ್ಕ್ ಬೋರ್ಡ್, ಹೆಬ್ಬಾಳ ಮತ್ತು ಟಿನ್‌ಫ್ಯಾಕ್ಟರಿ ಜಂಕ್ಷನ್‌ಗಳಲ್ಲಿಯೂ AQI 50 ರಿಂದ 68ರ ನಡುವೆ ದಾಖಲಾಗಿದ್ದು, ಸಾಧಾರಣ ಮಟ್ಟದಲ್ಲಿದೆ.

ರಾಜ್ಯದ ಇತರೆ ಪ್ರಮುಖ ನಗರಗಳಲ್ಲೂ ಗಾಳಿಯ ಗುಣಮಟ್ಟ ಉತ್ತಮವಾಗಿದೆ. ಮೈಸೂರು ಹಾಗೂ ಮಡಿಕೇರಿಯಲ್ಲಿ AQI 30 ರಿಂದ 35ರ ನಡುವೆ ದಾಖಲಾಗಿದ್ದು, ರಾಜ್ಯದಲ್ಲೇ ಅತ್ಯಂತ ಶುದ್ಧ ವಾತಾವರಣ ಇರುವ ನಗರಗಳಾಗಿವೆ. ಕೋಲಾರ ಮತ್ತು ತುಮಕೂರಿನಲ್ಲಿ AQI 45 ರಿಂದ 50ರ ನಡುವೆ ಇದ್ದು, ಉತ್ತಮ ಶ್ರೇಣಿಯಲ್ಲಿದೆ.

ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿಯಲ್ಲಿ AQI 50 ರಿಂದ 65ರ ನಡುವೆ ದಾಖಲಾಗಿದ್ದು, ಸಾಧಾರಣ ಮಟ್ಟದಲ್ಲಿದೆ. ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಭಾಗಗಳಲ್ಲಿ ನಿರಂತರ ಮಳೆಯ ಪರಿಣಾಮ AQI 32ಕ್ಕಿಂತ ಕಡಿಮೆಯಿದ್ದು, ಅತ್ಯಂತ ಉತ್ತಮ ಗಾಳಿಯ ಗುಣಮಟ್ಟ ದಾಖಲಾಗಿದೆ.

ತಜ್ಞರ ಪ್ರಕಾರ, ಮುಂಗಾರು ಮಳೆಯ ಪರಿಣಾಮ ಧೂಳು ಹಾಗೂ ಹೊಗೆಯ ಕಣಗಳ ಪ್ರಮಾಣ ಕಡಿಮೆಯಾಗಿರುವುದರಿಂದ ಗಾಳಿಯ ಗುಣಮಟ್ಟ ಸುಧಾರಿಸಿದೆ. ಹೀಗಾಗಿ ಉಸಿರಾಟದ ಸಮಸ್ಯೆ ಇರುವವರು, ಹಿರಿಯ ನಾಗರಿಕರು ಹಾಗೂ ಮಕ್ಕಳಿಗೂ ಹೊರಾಂಗಣ ಚಟುವಟಿಕೆಗಳಿಗೆ ಯಾವುದೇ ವಿಶೇಷ ತೊಂದರೆಯಿಲ್ಲ. ಮುಂಗಾರು ಮಳೆ ಮುಂದುವರಿಯುವ ಹಿನ್ನೆಲೆಯಲ್ಲಿ ರಾಜ್ಯದ ವಾಯು ಗುಣಮಟ್ಟ ಮುಂದಿನ ದಿನಗಳಲ್ಲೂ ಉತ್ತಮ ಮಟ್ಟದಲ್ಲೇ ಇರುವ ಸಾಧ್ಯತೆ ಇದೆ.

ಆನೇಕಲ್‌ನಲ್ಲಿ ಭಾರಿ ಮಳೆಗೆ ಖಾಸಗಿ ಶಾಲೆಯ ಗೋಡೆ ಕುಸಿತ; ಇಂದು ಶಾಲೆಗೆ ರಜೆ ಘೋಷಣೆ

ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪದ ಬಿಲ್ವಾರದಹಳ್ಳಿ ಗ್ರಾಮದಲ್ಲಿ ನಿನ್ನೆ ಸಂಜೆ ಸುರಿದ ಭಾರಿ ಮಳೆಗೆ ಖಾಸಗಿ ಶಾಲೆಯ ಕಾಂಪೌಂಡ್‌ ಗೋಡೆ ಏಕಾಏಕಿ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ.

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ಪಿಡಿಒ ರಮೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಂಜಾಗ್ರತಾ ಕ್ರಮವಾಗಿ ಕುಸಿದ ಗೋಡೆಯ ಪಕ್ಕದಲ್ಲಿದ್ದ ಕಟ್ಟಡದಲ್ಲಿ ವಾಸಿಸುತ್ತಿದ್ದ ಎರಡು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಅಲ್ಲದೆ, ಅಪಾಯದ ಹಿನ್ನೆಲೆಯಲ್ಲಿ ಆ ರಸ್ತೆಯಲ್ಲಿ ಸಾರ್ವಜನಿಕರ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಇಂದು ಶಾಲೆಗೆ ರಜೆ ಘೋಷಿಸಲಾಗಿದೆ. ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರ್‌ಗಳು ಕಟ್ಟಡವನ್ನು ಪರಿಶೀಲಿಸಿ ಸುರಕ್ಷಿತವಾಗಿದೆ ಎಂದು ವರದಿ ನೀಡಿದ ಬಳಿಕವೇ ಶಾಲೆಯ ಶೈಕ್ಷಣಿಕ ಚಟುವಟಿಕೆಗಳನ್ನು ಪುನರಾರಂಭಿಸಲು ಸೂಚಿಸಲಾಗಿದೆ.

ಸ್ಥಳೀಯ ಆಡಳಿತವು ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದು, ಯಾವುದೇ ಅನಾಹುತ ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಗದಗ ಜಿಲ್ಲೆಗೆ ₹78 ಕೋಟಿ ಬೆಳೆ ವಿಮೆ ಪರಿಹಾರ ಬಿಡುಗಡೆ

0

ವಿಜಯಸಾಕ್ಷಿ ಸುದ್ದಿ, ಗದಗ: 2025-26ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಗದಗ ಜಿಲ್ಲೆಯ ರೈತರಿಗೆ ₹78 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರಾಗಿದೆ.

ಹತ್ತಿ, ಶೇಂಗಾ, ಮೆಕ್ಕೆಜೋಳ, ಈರುಳ್ಳಿ, ತೊಗರಿ, ಭತ್ತ ಹಾಗೂ ಸಜ್ಜೆ ಬೆಳೆಗಳಿಗೆ ಬೆಳೆ ಕಟಾವು ಆಧಾರಿತ ವಿಮೆ ಪರಿಹಾರವನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆಯಾಗಲಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

38 ವರ್ಷ ದೇಶಸೇವೆ ಸಲ್ಲಿಸಿದ ಯೋಧನಿಗೆ ಅಭೂತಪೂರ್ವ ಸ್ವಾಗತ

0

ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯ ಭದ್ರತಾ ಪಡೆಗಳಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿ ತಾಯ್ನಾಡಿಗೆ ಮರಳಿದ ಸಬ್ ಇನ್‌ಸ್ಪೆಕ್ಟರ್ ರಾಚಪ್ಪ ಮಸಗಿ ಅವರಿಗೆ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಗದಗ ಜಿಲ್ಲಾ ಘಟಕದ ವತಿಯಿಂದ ಭವ್ಯ ಸ್ವಾಗತ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.

ರೋಣ ತಾಲೂಕಿನ ನಾಗರಾಳ ಮೂಲದ ಹಾಗೂ ನರಸಾಪುರ ನಿವಾಸಿಯಾಗಿರುವ ರಾಚಪ್ಪ ಮಸಗಿ ಅವರು ಭಾರತೀಯ ಸೇನೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ವಾಪಸ್ಸಾದ ಹಿನ್ನೆಲೆಯಲ್ಲಿ, ಗದಗ ರೈಲ್ವೆ ನಿಲ್ದಾಣದಲ್ಲಿ ಮಾಜಿ ಸೈನಿಕರ ಸಂಘದ ಜಿಲ್ಲಾ ಅಧ್ಯಕ್ಷ ಬಸಲಿಂಗಪ್ಪ ಮುಂಡರಗಿ ನೇತೃತ್ವದಲ್ಲಿ ಹೂವಿನ ಸುರಿಮಳೆಗೈದು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ಬಳಿಕ ರೈಲ್ವೆ ನಿಲ್ದಾಣದಿಂದ ಹೆಲ್ತ್ ಕ್ಯಾಂಪ್, ಬೆಟಗೇರಿ ಮಾರ್ಗವಾಗಿ ನರಸಾಪುರದವರೆಗೆ ದೇಶಭಕ್ತಿ ಗೀತೆಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ನಂತರ ನಡೆದ ಸಮಾರಂಭದಲ್ಲಿ ರಾಚಪ್ಪ ಮಸಗಿ ಅವರ ಕುಟುಂಬದವರು ಮಾಜಿ ಸೈನಿಕರು ಹಾಗೂ ವೀರನಾರಿಯರನ್ನು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾ ಅಧ್ಯಕ್ಷ ಬಸಲಿಂಗಪ್ಪ ಮುಂಡರಗಿ, ದೇಶದ ಗಡಿಯಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ದೇಶವನ್ನು ಕಾಪಾಡುವ ಸೈನಿಕರ ಸೇವೆ ಅತ್ಯಂತ ಶ್ರೇಷ್ಠವಾಗಿದೆ. ಇಂದು ನಾವೆಲ್ಲರೂ ನೆಮ್ಮದಿಯಿಂದ ಬದುಕುತ್ತಿರುವುದಕ್ಕೆ ಭಾರತೀಯ ಸೈನಿಕರ ತ್ಯಾಗವೇ ಕಾರಣ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು, ಮಾಜಿ ಸೈನಿಕರು, ವೀರನಾರಿಯರು, ಅರೆಸೇನಾ ಪಡೆಗಳ ಯೋಧರು ಹಾಗೂ ನಾಗರಾಳ ಮತ್ತು ನರಸಾಪುರ ಗ್ರಾಮದ ಗಣ್ಯರು, ಸಾರ್ವಜನಿಕರು ಮತ್ತು ದೇಶಪ್ರೇಮಿಗಳು ಉಪಸ್ಥಿತರಿದ್ದರು.