Home Blog

ನಾರಾಯಣಪುರ ಡ್ಯಾಂನಿಂದ 1.11 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ: ರಾಯಚೂರು, ಯಾದಗಿರಿಯಲ್ಲಿ ಹೈ ಅಲರ್ಟ್ ಘೋಷಣೆ

ರಾಯಚೂರು/ಯಾದಗಿರಿ: ಮಹಾರಾಷ್ಟ್ರ ಸೇರಿದಂತೆ ಕೃಷ್ಣಾ ನದಿ ಮೇಲ್ಭಾಗದ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಇದರ ಪರಿಣಾಮ ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗಿದ್ದು, ನದಿ ಮೈದುಂಬಿ ಹರಿಯುತ್ತಿದೆ.

ಕೃಷ್ಣಾ ನದಿಯ ನೀರಿನ ಮಟ್ಟ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ನದಿ ಪಾತ್ರದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ ರೈತರು ನದಿ ಪಾತ್ರಕ್ಕೆ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಪ್ರಸ್ತುತ ನಾರಾಯಣಪುರ ಜಲಾಶಯದ 24 ಕ್ರಸ್ಟ್ ಗೇಟ್‌ಗಳ ಮೂಲಕ ಸುಮಾರು 1.11 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಇದರಿಂದ ಲಿಂಗಸುಗೂರು, ದೇವದುರ್ಗ ಹಾಗೂ ರಾಯಚೂರು ತಾಲೂಕಿನ ನದಿ ದಂಡೆಯ ಗ್ರಾಮಗಳ ನಿವಾಸಿಗಳು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯ ಹಂತಕ್ಕೆ ತಲುಪಿದ್ದು, ಸೇತುವೆ ಜಲಾವೃತವಾಗಲು ಕೆಲವೇ ಅಡಿಗಳ ಅಂತರ ಉಳಿದಿದೆ. ನೀರಿನ ಮಟ್ಟ ಮತ್ತಷ್ಟು ಏರಿಕೆಯಾದರೆ ಸಂಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಆಲಮಟ್ಟಿ ಜಲಾಶಯದಿಂದ ನಿರಂತರವಾಗಿ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ನಾರಾಯಣಪುರ ಜಲಾಶಯದ ಒಳಹರಿವು ಹೆಚ್ಚುತ್ತಿದ್ದು, ಪರಿಸ್ಥಿತಿಗೆ ಅನುಗುಣವಾಗಿ ನೀರಿನ ಹೊರಹರಿವಿನ ಪ್ರಮಾಣವನ್ನು ಹಂತ ಹಂತವಾಗಿ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ.

ನದಿ ತೀರದ ನಿವಾಸಿಗಳು, ರೈತರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದ್ದು, ನದಿ ಹಾಗೂ ಜಲಾವೃತ ಪ್ರದೇಶಗಳ ಸಮೀಪ ಅನಗತ್ಯವಾಗಿ ತೆರಳದಂತೆ ಸೂಚನೆ ನೀಡಿದೆ.

ಬೆಂಗಳೂರಿನ ಖಾಲಿ ನಿವೇಶನದ ಮಾಲೀಕರಿಗೆ GBA ಬಿಗ್ ಶಾಕ್! ಸ್ವಚ್ಛಗೊಳಿಸದಿದ್ದರೆ 1 ಲಕ್ಷ ರೂ ವರೆಗೆ ದಂಡ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಖಾಲಿ ನಿವೇಶನಗಳಲ್ಲಿ ಕಸ ಸುರಿಯುವುದು ಹಾಗೂ ತ್ಯಾಜ್ಯ ಸಂಗ್ರಹವಾಗುತ್ತಿರುವ ಸಮಸ್ಯೆಗೆ ಕಡಿವಾಣ ಹಾಕಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮಹತ್ವದ ಕ್ರಮ ಕೈಗೊಂಡಿದೆ. ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರ ಸೂಚನೆ ಮೇರೆಗೆ ಆಗಸ್ಟ್ ತಿಂಗಳಿನಿಂದ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ ಆರಂಭವಾಗಲಿದ್ದು, ನಗರದ ಸ್ವಚ್ಛತೆಗೆ ವಿಶೇಷ ಒತ್ತು ನೀಡಲಾಗುತ್ತಿದೆ.

ಅಭಿಯಾನದ ಭಾಗವಾಗಿ ನಗರದ ರಸ್ತೆಗಳಲ್ಲಿನ ಬ್ಲಾಕ್ ಸ್ಪಾಟ್‌ಗಳು, ಕಟ್ಟಡ ನಿರ್ಮಾಣ ತ್ಯಾಜ್ಯ, ರಸ್ತೆ ಬದಿಯ ಮರದ ಕೊಂಬೆಗಳು, ಬಿದ್ದಿರುವ ವಿದ್ಯುತ್ ಕಂಬಗಳು ಹಾಗೂ ಪೈಪ್‌ಗಳನ್ನು ಸಾಮೂಹಿಕವಾಗಿ ತೆರವುಗೊಳಿಸಲು ಪಾಲಿಕೆಗಳು ಮುಂದಾಗಿವೆ. ಜೊತೆಗೆ ನಗರದಲ್ಲಿರುವ ಎಲ್ಲಾ ಖಾಲಿ ನಿವೇಶನಗಳ ಮಾಲೀಕರಿಗೆ ಆಗಸ್ಟ್ 15ರವರೆಗೆ ಗಡುವು ನೀಡಲಾಗಿದೆ.

ನಿಗದಿತ ಅವಧಿಯೊಳಗೆ ನಿವೇಶನಗಳನ್ನು ಮಾಲೀಕರು ಸ್ವಚ್ಛಗೊಳಿಸದಿದ್ದರೆ, ಪಾಲಿಕೆಯೇ ತ್ಯಾಜ್ಯ ತೆರವುಗೊಳಿಸಲಿದೆ. ಆದರೆ ಅದಕ್ಕೆ ತಗುಲುವ ಸಂಪೂರ್ಣ ವೆಚ್ಚವನ್ನು ನಿವೇಶನದ ವಿಸ್ತೀರ್ಣ ಹಾಗೂ ತೆರವುಗೊಳಿಸಿದ ತ್ಯಾಜ್ಯದ ಪ್ರಮಾಣದ ಆಧಾರದ ಮೇಲೆ ಸಂಬಂಧಿತ ಮಾಲೀಕರಿಂದಲೇ ವಸೂಲಿ ಮಾಡಲಾಗುತ್ತದೆ.

ಘನತ್ಯಾಜ್ಯ ನಿರ್ವಹಣಾ ಉಪವಿಧಿಗಳು–2020 ಹಾಗೂ ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ–2024ರ ಅನ್ವಯ ಈ ವೆಚ್ಚವನ್ನು ಆಸ್ತಿ ತೆರಿಗೆಯೊಂದಿಗೆ ಸೇರಿಸಿ ವಸೂಲಿ ಮಾಡಲು ನಿರ್ಧರಿಸಲಾಗಿದೆ.

ಒಂದು ವೇಳೆ ಈ ಮೊತ್ತವನ್ನು ಪಾವತಿಸದಿದ್ದರೆ, ಕರ್ನಾಟಕ ಭೂಕಂದಾಯ ಕಾಯ್ದೆ–1964ರ ಅನ್ವಯ ಕಠಿಣ ವಸೂಲಾತಿ ಕ್ರಮ ಜರುಗಿಸಲಾಗುತ್ತದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ನಿಯಮ ಉಲ್ಲಂಘಿಸುವ ನಿವೇಶನ ಮಾಲೀಕರಿಗೆ ದಂಡವೂ ವಿಧಿಸಲಾಗುತ್ತದೆ. ಮೊದಲ ಬಾರಿಗೆ ಉಲ್ಲಂಘನೆ ಕಂಡುಬಂದರೆ ₹25,000 ದಂಡ ವಿಧಿಸಲಾಗುತ್ತದೆ. ನಂತರವೂ ನಿಯಮ ಪಾಲಿಸದಿದ್ದರೆ ₹50,000 ರಿಂದ ₹1 ಲಕ್ಷದವರೆಗೆ ದಂಡ ವಿಧಿಸುವ ಅವಕಾಶವಿದೆ.

ಇದರ ಜೊತೆಗೆ, ನಿವೇಶನ ಸ್ವಚ್ಛಗೊಳಿಸಿದ ಬಳಿಕ ಮತ್ತೆ ಕಸ ಸುರಿಯದಂತೆ ಸುತ್ತಲೂ ಬೇಲಿ ಅಥವಾ ಕಾಂಪೌಂಡ್ ಗೋಡೆ ನಿರ್ಮಿಸಿ ನಿರ್ವಹಿಸುವ ಜವಾಬ್ದಾರಿಯೂ ನಿವೇಶನ ಮಾಲೀಕರದ್ದೇ ಆಗಿರಲಿದೆ.

ಇನ್ನು ಸಾರ್ವಜನಿಕರಿಗೂ ದೂರು ನೀಡಲು ಅವಕಾಶ ಕಲ್ಪಿಸಲಾಗಿದೆ. ಆಗಸ್ಟ್ 15ರೊಳಗೆ ಖಾಲಿ ನಿವೇಶನವನ್ನು ಸ್ವಚ್ಛಗೊಳಿಸದಿದ್ದರೆ, ಸಾರ್ವಜನಿಕರು ಆ ನಿವೇಶನದ ಛಾಯಾಚಿತ್ರ ಹಾಗೂ GPS ಸ್ಥಳ ಮಾಹಿತಿಯೊಂದಿಗೆ 9448197197 ಸಂಖ್ಯೆಗೆ ವಾಟ್ಸ್‌ಆಪ್ ಮೂಲಕ ದೂರು ಸಲ್ಲಿಸಬಹುದು. ದೂರುದಾರರ ವಿವರವನ್ನು ಗೌಪ್ಯವಾಗಿಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟಾರೆ, ನಗರದಲ್ಲಿನ ಖಾಲಿ ನಿವೇಶನಗಳನ್ನು ಕಸದ ತಾಣವನ್ನಾಗಿ ಬಿಡುವ ಮಾಲೀಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದ್ದು, ನಿಯಮ ಪಾಲಿಸದಿದ್ದರೆ ದಂಡ ಹಾಗೂ ವೆಚ್ಚ ಎರಡನ್ನೂ ಭರಿಸಬೇಕಾಗುವ ಪರಿಸ್ಥಿತಿ ಎದುರಾಗಲಿದೆ.

ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ಟ್ವಿಸ್ಟ್: ಕೊನೆಗೂ DNA ಪರೀಕ್ಷೆಯಲ್ಲಿ ಬಯಲಾಯ್ತು ಮೂರು ಅಸ್ಥಿಪಂಜರಗಳ ರಹಸ್ಯ!

ಮಂಗಳೂರು: ಧರ್ಮಸ್ಥಳದ ಆಸುಪಾಸಿನಲ್ಲಿ ನಡೆದ ಉತ್ಖನನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಂಗ್ಲೆಗುಡ್ಡೆಯಲ್ಲಿ ಎಸ್‌ಐಟಿ ಪತ್ತೆಹಚ್ಚಿದ್ದ ಅಸ್ಥಿಪಂಜರಗಳ ಪೈಕಿ ಮೂರು ಅಸ್ಥಿಪಂಜರಗಳ ಗುರುತು ಡಿಎನ್‌ಎ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಎಸ್‌ಐಟಿ ಅಧಿಕಾರಿಗಳು ಸಂಬಂಧಿತ ಕುಟುಂಬಸ್ಥರಿಂದ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿ ಅಸ್ಥಿಪಂಜರಗಳ ಮಾದರಿಗಳೊಂದಿಗೆ ಹೋಲಿಕೆ ನಡೆಸಿದ್ದರು. ಈ ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಡಿಎನ್‌ಎ ಕುಟುಂಬಸ್ಥರ ಮಾದರಿಗಳೊಂದಿಗೆ ಹೊಂದಾಣಿಕೆಯಾಗಿರುವುದು ದೃಢಪಟ್ಟಿದೆ.

ಡಿಎನ್‌ಎ ಪರೀಕ್ಷೆಯಲ್ಲಿ ಗುರುತು ಪತ್ತೆಯಾದವರಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಟಿ. ಶೆಟ್ಟಿಗೇರಿ ಗ್ರಾಮದ ಯು.ಬಿ. ಅಯ್ಯಪ್ಪ (70), ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದಾಸರಕಲ್ಲಹಳ್ಳಿಯ ಆದಿಶೇಷ ನಾರಾಯಣ (27) ಹಾಗೂ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮೀಸಗಾಣಹಳ್ಳಿ ಗ್ರಾಮದ ಕೃಷ್ಣಪ್ಪ (85) ಸೇರಿದ್ದಾರೆ. ಮೂವರೂ ಪುರುಷರಾಗಿದ್ದು, ಅವರ ಗುರುತು ಅಧಿಕೃತವಾಗಿ ದೃಢಪಟ್ಟಿದೆ.

ಧರ್ಮಸ್ಥಳದ ಸುತ್ತಮುತ್ತ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪಗಳ ನಡುವೆಯೇ ನಡೆದ ಉತ್ಖನನದಲ್ಲಿ ಪತ್ತೆಯಾದ ಅಸ್ಥಿಪಂಜರಗಳ ಪೈಕಿ ಡಿಎನ್‌ಎ ಪರೀಕ್ಷೆಯಲ್ಲಿ ಗುರುತಾದ ಮೂವರೂ ಪುರುಷರು ಎಂಬುದು ಪ್ರಕರಣದಲ್ಲಿ ಹೊಸ ತಿರುವು ಪಡೆದುಕೊಂಡಿದೆ.

ಜುಲೈ 15ರಂದು ಎಸ್‌ಐಟಿ ಸಲ್ಲಿಸಿದ್ದ ವರದಿಯಲ್ಲಿ ಅಸ್ಥಿಪಂಜರಗಳ ಗುರುತು ಪತ್ತೆ ಹಾಗೂ ಡಿಎನ್‌ಎ ಪರೀಕ್ಷೆಯ ವಿವರಗಳನ್ನು ಉಲ್ಲೇಖಿಸಲಾಗಿತ್ತು. ಸಂಬಂಧಿತ ಕುಟುಂಬಸ್ಥರು ಎಸ್‌ಐಟಿಗೆ ಮನವಿ ಸಲ್ಲಿಸಿದರೆ, ನಿಯಮಾನುಸಾರ ಅಸ್ಥಿಪಂಜರಗಳನ್ನು ಅವರಿಗೆ ಹಸ್ತಾಂತರಿಸುವ ಅವಕಾಶವಿದೆ ಎಂದು ತಿಳಿದುಬಂದಿದೆ.

ಕೊಡಗು ಜಿಲ್ಲೆಯ ಯು.ಬಿ. ಅಯ್ಯಪ್ಪ ಅವರು 2017ರ ಜೂನ್ 25ರಂದು ಚಿಕಿತ್ಸೆಗಾಗಿ ಮೈಸೂರಿಗೆ ತೆರಳಿದ ಬಳಿಕ ನಾಪತ್ತೆಯಾಗಿದ್ದರು. ಈ ಕುರಿತು ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ತುಮಕೂರು ಜಿಲ್ಲೆಯ ಆದಿಶೇಷ ನಾರಾಯಣ ಅವರು ಬೆಂಗಳೂರಿನ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದು, 2013ರ ಅಕ್ಟೋಬರ್ 2ರಂದು ಮನೆಗೆ ಬಂದು ಮೊಬೈಲ್ ಇಟ್ಟು ಹೊರಹೋದ ಬಳಿಕ ನಾಪತ್ತೆಯಾಗಿದ್ದರು. ಆರಂಭದಲ್ಲಿ ಅವರು ಪದೇಪದೆ ಮನೆ ಬಿಟ್ಟು ಹೋಗುತ್ತಿದ್ದ ಕಾರಣ ಕುಟುಂಬಸ್ಥರು ದೂರು ದಾಖಲಿಸಿರಲಿಲ್ಲ. ಬಳಿಕ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಕೋಲಾರ ಜಿಲ್ಲೆಯ ಕೃಷ್ಣಪ್ಪ ಅವರು 2024ರ ಅಕ್ಟೋಬರ್ 22ರಂದು ಮನೆಯಿಂದ ಹೊರಹೋಗಿ ಮರಳಿ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಈ ಮೂರು ನಾಪತ್ತೆ ಪ್ರಕರಣಗಳಲ್ಲಿನ ವ್ಯಕ್ತಿಗಳ ಡಿಎನ್‌ಎ ಮಾದರಿಗಳು ಧರ್ಮಸ್ಥಳದ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರಗಳೊಂದಿಗೆ ಹೊಂದಾಣಿಕೆಯಾಗಿರುವುದು ಎಸ್‌ಐಟಿ ತನಿಖೆಗೆ ಮಹತ್ವದ ಸಾಕ್ಷ್ಯವಾಗಿ ಪರಿಣಮಿಸಿದ್ದು, ಪ್ರಕರಣದ ತನಿಖೆ ಹೊಸ ಹಂತಕ್ಕೆ ಪ್ರವೇಶಿಸಿದೆ.

ಶಾಲೆಗೆ ತೆರಳುವಾಗ ಭೀಕರ ಅಪಘಾತ: 10 ವರ್ಷದ ಬಾಲಕಿ ಸ್ಥಳದಲ್ಲೇ ಸಾವು!

0

ನೆಲಮಂಗಲ: ಶಾಲೆಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ 10 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಬೀರವಾರ ಗ್ರಾಮದ ಬಳಿ ನಡೆದಿದೆ.

ಮೃತ ಬಾಲಕಿಯನ್ನು ಲಿಖಿತಾ (10) ಎಂದು ಗುರುತಿಸಲಾಗಿದೆ. ಲಿಖಿತಾ ಸರ್ಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಮಾಹಿತಿಯ ಪ್ರಕಾರ, ಬೆಳಗ್ಗೆ ತಾಯಿ ಕೆಲಸಕ್ಕೆ ತೆರಳಿದ ಬಳಿಕ ಲಿಖಿತಾ ತನ್ನ ದೊಡ್ಡಮ್ಮನೊಂದಿಗೆ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ನೆಲಮಂಗಲದಿಂದ ಕುಣಿಗಲ್ ಕಡೆಗೆ ವೇಗವಾಗಿ ಸಾಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಲಿಖಿತಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಕೆಯ ದೊಡ್ಡಮ್ಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಘಟನೆ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದೇ ಬೀರವಾರ ಗ್ರಾಮದ ಸಮೀಪ ಪದೇ ಪದೇ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ, ಈ ಭಾಗದಲ್ಲಿ ತಕ್ಷಣ ಸ್ಕೈವಾಕ್ ಅಥವಾ ಸುರಕ್ಷಿತ ಪಾದಚಾರಿ ದಾಟುವ ವ್ಯವಸ್ಥೆ ನಿರ್ಮಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನಿವೃತ್ತ ಬಸ್ ಚಾಲಕನ ಮನೆಯಲ್ಲಿ ₹48 ಕೋಟಿ ಖಜಾನೆ! ದಾಳಿಯಲ್ಲಿ ₹28.5 ಕೋಟಿ ನಗದು, ₹20 ಕೋಟಿ ಚಿನ್ನ ಜಪ್ತಿ

0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭಮ್ ಜಿಲ್ಲೆಯಲ್ಲಿ ಮರಳು ಮಾಫಿಯಾ ವಿರುದ್ಧದ ಕಾರ್ಯಾಚರಣೆ ವೇಳೆ ಪೊಲೀಸರಿಗೆ ಬೆಚ್ಚಿಬೀಳಿಸುವ ಅಕ್ರಮ ಆಸ್ತಿ ಪತ್ತೆಯಾಗಿದೆ. ನಿವೃತ್ತ ಸರ್ಕಾರಿ ಬಸ್ ಚಾಲಕನ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ₹28.5 ಕೋಟಿ ನಗದು ಹಾಗೂ ₹20 ಕೋಟಿಗೂ ಅಧಿಕ ಮೌಲ್ಯದ 15 ಕೆಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ದಾಳಿಯ ಬಳಿಕ ಆರೋಪಿಯನ್ನು ಹಾಗೂ ಆತನ ಮಗನನ್ನು ಬಂಧಿಸಲಾಗಿದ್ದು, ಪ್ರಕರಣದ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ.

ಮರಳು ಮಾಫಿಯಾ ವಿರುದ್ಧ ನಡೆಯುತ್ತಿದ್ದ ವಿಶೇಷ ಕಾರ್ಯಾಚರಣೆಯ ಭಾಗವಾಗಿ ಬಿರ್ಭಮ್‌ನಲ್ಲಿ ನಿವೃತ್ತ ಸರ್ಕಾರಿ ಬಸ್ ಚಾಲಕ ಮಿನಾರ್ ಅವರ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ನಿವೃತ್ತಿಯ ನಂತರ ಕಲ್ಲು ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದ ಮಿನಾರ್ ಅವರ ಮನೆಯಲ್ಲಿ ಭಾರೀ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದ್ದು, ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ.

ದಾಳಿಯ ವೇಳೆ ₹28.5 ಕೋಟಿ ನಗದು ಹಾಗೂ ಸುಮಾರು 15 ಕೆಜಿ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜಪ್ತಿ ಮಾಡಲಾದ ಚಿನ್ನದ ಮೌಲ್ಯ ₹20 ಕೋಟಿಗೂ ಅಧಿಕ ಎಂದು ಅಂದಾಜಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿನಾರ್ ಹಾಗೂ ಅವರ ಪುತ್ರನನ್ನು ಬಂಧಿಸಲಾಗಿದ್ದು, ಇನ್ನಿತರ ಸ್ಥಳಗಳಲ್ಲೂ ಹಣ ಮತ್ತು ಆಸ್ತಿ ಅಡಗಿಸಿಟ್ಟಿರುವ ಶಂಕೆ ಹಿನ್ನೆಲೆಯಲ್ಲಿ ವಿಚಾರಣೆ ಮುಂದುವರಿದಿದೆ.

ಪ್ರಾಥಮಿಕ ತನಿಖೆಯಲ್ಲಿ ಮಿನಾರ್, ತಲೆಮರೆಸಿಕೊಂಡಿರುವ ಟಿಲ್ಲು ಮಂಡಲ್ ಅಲಿಯಾಸ್ ಮೊಹಮ್ಮದ್ ನಜೀಬುದ್ದೀನ್ ಅವರ ಸೋದರ ಮಾವ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಟಿಲ್ಲು ಮಂಡಲ್ ಬಿರ್ಭಮ್ ತೃಣಮೂಲ ಕಾಂಗ್ರೆಸ್‌ನ ಪ್ರಭಾವಿ ನಾಯಕ ಅನುಬ್ರತಾ ಮಂಡಲ್ ಅವರ ಆಪ್ತನಾಗಿದ್ದಾನೆ ಎನ್ನಲಾಗಿದ್ದು, ಪ್ರಕರಣಕ್ಕೆ ರಾಜಕೀಯ ಆಯಾಮವೂ ಸಿಕ್ಕಿದೆ.

ಇದೇ ಮಿನಾರ್ ವಿರುದ್ಧ ಈ ಹಿಂದೆ ಬಹುಕೋಟಿ ದನ ಕಳ್ಳಸಾಗಣೆ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೂಡ ವಿಚಾರಣೆ ನಡೆಸಿತ್ತು. ಇದೀಗ ಮತ್ತೊಮ್ಮೆ ಭಾರೀ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿರುವುದು ತನಿಖಾ ಸಂಸ್ಥೆಗಳ ಗಮನ ಸೆಳೆದಿದೆ.

ಈ ಕಾರ್ಯಾಚರಣೆಯನ್ನು ಪಶ್ಚಿಮ ಬಂಗಾಳ ಸರ್ಕಾರ ಶ್ಲಾಘಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, ಮರಳು ಮಾಫಿಯಾ ವಿರುದ್ಧ ನಿಖರ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಬಿರ್ಭಮ್ ಪೊಲೀಸ್, ಜಿಲ್ಲಾ ಎಸ್‌ಪಿ, ಡಿಜಿಪಿ ಸೇರಿದಂತೆ ಎಲ್ಲಾ ಪೊಲೀಸ್ ಸಿಬ್ಬಂದಿಯ ತ್ವರಿತ ಹಾಗೂ ವೃತ್ತಿಪರ ಕಾರ್ಯವನ್ನು ಪ್ರಶಂಸಿಸಿದ್ದಾರೆ.

ಇದೇ ವೇಳೆ, “ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿ ನಮ್ಮ ಸರ್ಕಾರದ ಬದ್ಧತೆ. ಸಾರ್ವಜನಿಕ ಸಂಪತ್ತನ್ನು ಲೂಟಿ ಮಾಡಿದವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಮಾಫಿಯಾ ಜಾಲ ಹಾಗೂ ಅಕ್ರಮ ಸಂಪತ್ತು ವಿರುದ್ಧದ ಕಾರ್ಯಾಚರಣೆ ಇನ್ನಷ್ಟು ತೀವ್ರಗೊಳ್ಳಲಿದೆ” ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದ್ದಾರೆ.

ಮೆಲ್ಬೋರ್ನ್ʼನ ಹೀರೋ, ಸೋಲರಿಯದ ನಾಯಕ ಅಜಿಂಕ್ಯ ರಹಾನೆ ನಿವೃತ್ತಿ ಘೋಷಣೆ!

0

ಭಾರತೀಯ ಕ್ರಿಕೆಟ್ ತಂಡದ ಅತ್ಯಂತ ವಿಶ್ವಾಸಾರ್ಹ ಹಾಗೂ ಸಂಯಮದ ಬ್ಯಾಟರ್‌ಗಳಲ್ಲಿ ಒಬ್ಬರಾಗಿದ್ದ ಅಜಿಂಕ್ಯ ರಹಾನೆ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಅಧಿಕೃತವಾಗಿ ವಿದಾಯ ಘೋಷಿಸಿದ್ದಾರೆ. 38 ವರ್ಷದ ರಹಾನೆ ಇಂದು (ಜುಲೈ 30, 2026) ಸಾಮಾಜಿಕ ಜಾಲತಾಣದ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದು, 15 ವರ್ಷಗಳ ಸುದೀರ್ಘ ಅಂತಾರಾಷ್ಟ್ರೀಯ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.

ನಿವೃತ್ತಿ ಘೋಷಿಸಿದ ಬಳಿಕ ಭಾವುಕ ಸಂದೇಶ ಹಂಚಿಕೊಂಡಿರುವ ರಹಾನೆ, “ಸಾಮಾನ್ಯ ಕುಟುಂಬದಿಂದ ಬಂದು ವಿಶ್ವದ ಅತಿದೊಡ್ಡ ವೇದಿಕೆಗಳಲ್ಲಿ ಭಾರತವನ್ನು ಪ್ರತಿನಿಧಿಸುವ ಅವಕಾಶ ಸಿಕ್ಕಿದ್ದು ನನ್ನ ಜೀವನದ ಅತ್ಯಂತ ದೊಡ್ಡ ಸೌಭಾಗ್ಯ. ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ ಎಲ್ಲಾ ತರಬೇತುದಾರರು, ಮಾರ್ಗದರ್ಶಕರು, ಸಹ ಆಟಗಾರರು ಹಾಗೂ ಪೋಷಕ ಸಿಬ್ಬಂದಿಗೆ ಹೃತ್ಪೂರ್ವಕ ಧನ್ಯವಾದಗಳು” ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.

ಅಜಿಂಕ್ಯ ರಹಾನೆ ಟೆಸ್ಟ್, ಏಕದಿನ ಹಾಗೂ ಟಿ20 ಸೇರಿ ಮೂರೂ ಮಾದರಿಯ ಕ್ರಿಕೆಟ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದು, ವಿಶೇಷವಾಗಿ ಟೆಸ್ಟ್ ಕ್ರಿಕೆಟ್‌ನಲ್ಲಿ ಮಧ್ಯಮ ಕ್ರಮಾಂಕದ ಪ್ರಮುಖ ಬ್ಯಾಟರ್ ಆಗಿ ತಂಡಕ್ಕೆ ಅನೇಕ ಅಮೂಲ್ಯ ಗೆಲುವುಗಳನ್ನು ತಂದುಕೊಟ್ಟಿದ್ದಾರೆ. ವಿದೇಶಿ ನೆಲದಲ್ಲಿ ಅವರ ಬ್ಯಾಟಿಂಗ್ ಭಾರತದ ಹಲವು ಐತಿಹಾಸಿಕ ಗೆಲುವುಗಳಿಗೆ ಭದ್ರ ಅಡಿಪಾಯ ಹಾಕಿತ್ತು.

2020-21ರ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಅಡಿಲೇಡ್‌ನಲ್ಲಿ ಭಾರತ ಅನುಭವಿಸಿದ ಹೀನಾಯ ಸೋಲಿನ ಬಳಿಕ ತಂಡದ ನಾಯಕತ್ವ ವಹಿಸಿದ್ದ ರಹಾನೆ, ಮೆಲ್ಬೋರ್ನ್ ಟೆಸ್ಟ್‌ನಲ್ಲಿ ಅದ್ಭುತ ಶತಕ ಸಿಡಿಸಿ ಭಾರತವನ್ನು ಐತಿಹಾಸಿಕ ಗೆಲುವಿನತ್ತ ಮುನ್ನಡೆಸಿದ್ದರು. ಆ ಸರಣಿಯಲ್ಲಿ ಆಸ್ಟ್ರೇಲಿಯಾ ನೆಲದಲ್ಲೇ ಭಾರತ ಸರಣಿ ಜಯ ಸಾಧಿಸಿದ್ದು, ರಹಾನೆ ನಾಯಕತ್ವದ ಅತ್ಯಂತ ದೊಡ್ಡ ಸಾಧನೆಗಳಲ್ಲಿ ಒಂದಾಗಿದೆ.

ಟೆಸ್ಟ್ ನಾಯಕನಾಗಿ ರಹಾನೆ ಭಾರತಕ್ಕೆ ಎಂದಿಗೂ ಸೋಲು ಕಾಣಿಸಲಿಲ್ಲ. ಪ್ರಮುಖ ಆಟಗಾರರ ಅನುಪಸ್ಥಿತಿಯ ನಡುವೆಯೂ ಯುವ ಆಟಗಾರರ ತಂಡವನ್ನು ಸಮರ್ಥವಾಗಿ ಮುನ್ನಡೆಸಿ ಆಸ್ಟ್ರೇಲಿಯಾದಲ್ಲಿ ಸರಣಿ ಗೆದ್ದ ಸಾಧನೆ ಅವರಿಗೆ ಶಾಶ್ವತ ಗೌರವ ತಂದುಕೊಟ್ಟಿದೆ.

ಅಜಿಂಕ್ಯ ರಹಾನೆ 2023ರ ಜುಲೈನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ತಮ್ಮ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಬಳಿಕ ರಾಷ್ಟ್ರೀಯ ತಂಡದಲ್ಲಿ ಅವಕಾಶ ಸಿಗದ ಹಿನ್ನೆಲೆಯಲ್ಲಿ ಇದೀಗ ಅಧಿಕೃತವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

ಶಾಂತ ಸ್ವಭಾವ, ಜವಾಬ್ದಾರಿಯುತ ಬ್ಯಾಟಿಂಗ್ ಹಾಗೂ ಅದ್ಭುತ ನಾಯಕತ್ವದ ಮೂಲಕ ಭಾರತೀಯ ಕ್ರಿಕೆಟ್‌ಗೆ ಅನನ್ಯ ಕೊಡುಗೆ ನೀಡಿರುವ ಅಜಿಂಕ್ಯ ರಹಾನೆ ಅವರ ನಿವೃತ್ತಿಯೊಂದಿಗೆ ಭಾರತೀಯ ಕ್ರಿಕೆಟ್‌ನ ಒಂದು ಸ್ಮರಣೀಯ ಅಧ್ಯಾಯ ಅಂತ್ಯಗೊಂಡಿದೆ.

ರಾತ್ರೋರಾತ್ರಿ ಜ್ಯುವೆಲ್ಲರಿಯಿಂದ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮಾಯ: ಸಿಸಿಟಿಯಲ್ಲಿ ಬಯಲಾಯ್ತು ಬೆಚ್ಚಿ ಬೀಳಿಸುವ ಸತ್ಯ

0

ತುಮಕೂರು: ಇಲ್ಲಿನ ಪ್ರತಿಷ್ಠಿತ ಜ್ಯುವೆಲ್ಲರಿ ಅಂಗಡಿಯಲ್ಲಿ ನಡೆದಿದ್ದ ₹10 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ವಜ್ರಾಭರಣ ನಾಪತ್ತೆ ಪ್ರಕರಣ ಸಿನಿಮಾವನ್ನೇ ಮೀರಿಸುವ ತಿರುವು ಪಡೆದುಕೊಂಡಿದೆ. ಶಟರ್ ಒಡೆದಿಲ್ಲ, ಕಳ್ಳನ ಸುಳಿವಿಲ್ಲ ಎನ್ನುವ ಗೊಂದಲದ ನಡುವೆ ಸಿಸಿಟಿವಿ ಪರಿಶೀಲಿಸಿದಾಗ, ಆಭರಣಗಳನ್ನು ಎಗರಿಸಿದ್ದು ಕಳ್ಳನಲ್ಲ, ಇಲಿ ಎಂಬ ಅಚ್ಚರಿಯ ಸತ್ಯ ಬೆಳಕಿಗೆ ಬಂದಿದೆ.

ನಗರದ ಕಾಲ್‌ಟೆಕ್ಸ್ ಸರ್ಕಲ್ ಸಮೀಪದ ವಿಶ್ವಾಸ್ ಜ್ಯುವೆಲ್ಲರಿಯಲ್ಲಿ ಬೆಳಗ್ಗೆ ಅಂಗಡಿ ತೆರೆದಾಗ 50 ಗ್ರಾಂಗೂ ಅಧಿಕ ತೂಕದ ಚಿನ್ನ ಹಾಗೂ ವಜ್ರಾಭರಣಗಳು ಕಾಣೆಯಾಗಿದ್ದವು. ಸರಗಳು, ಉಂಗುರಗಳು ಸೇರಿ ಸುಮಾರು ₹10 ಲಕ್ಷ ಮೌಲ್ಯದ ಆಭರಣಗಳು ನಾಪತ್ತೆಯಾಗಿದ್ದರಿಂದ ಸಿಬ್ಬಂದಿ ಕಳ್ಳತನದ ಶಂಕೆ ವ್ಯಕ್ತಪಡಿಸಿದ್ದರು.

ಪೊಲೀಸರಿಗೆ ದೂರು ನೀಡುವ ಮುನ್ನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಅಂಗಡಿಯೊಳಗೆ ಓಡಾಡುತ್ತಿದ್ದ ಇಲಿ ಒಂದೊಂದೇ ಆಭರಣವನ್ನು ಎಳೆದುಕೊಂಡು ಹೋಗುತ್ತಿರುವ ದೃಶ್ಯ ಸ್ಪಷ್ಟವಾಗಿ ದಾಖಲಾಗಿತ್ತು. ಬಳಿಕ ಸಿಬ್ಬಂದಿ ಇಲಿಯ ಚಲನವಲನವನ್ನು ಗಮನಿಸಿ ಅದು ಸೇರಿದ್ದ ಬಿಲವನ್ನು ಪತ್ತೆಹಚ್ಚಿದರು.

ಬಿಲವನ್ನು ತೋಡಿದಾಗ 10 ಉಂಗುರಗಳು ಹಾಗೂ 3 ಸರಗಳು ಸೇರಿದಂತೆ ನಾಪತ್ತೆಯಾಗಿದ್ದ ಬಹುತೇಕ ಆಭರಣಗಳು ಸುರಕ್ಷಿತವಾಗಿ ಪತ್ತೆಯಾಗಿವೆ. ಈ ಅಚ್ಚರಿಯ ಘಟನೆಯಿಂದ ಮಾಲೀಕರು ಹಾಗೂ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದು, ಸಿಸಿಟಿವಿ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬಾಲರಾಮನ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್‌ ಯೋಗಿರಾಜ್‌ರಿಂದ ಪ್ರಧಾನಿಗೆ ವಿಶೇಷ ಉಡುಗೊರೆ

0

ಮೈಸೂರಿಗೆ ಆಗಸ್ಟ್‌ 1ರಂದು ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಮಲಲ್ಲಾ ಬಾಲರಾಮನ ಮೂರ್ತಿ ಖ್ಯಾತಿಯ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ಸ್ವಾಮಿ ವಿವೇಕಾನಂದರ ಅಪರೂಪದ ಏಕಶಿಲಾ ಮೂರ್ತಿಯನ್ನು ವಿಶೇಷ ಕಾಣಿಕೆಯಾಗಿ ನೀಡಲಾಗುತ್ತಿದೆ. ಪ್ರಧಾನಿ ಇದೇ ವೇಳೆ ₹45 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.

ರಾಮಕೃಷ್ಣ ಆಶ್ರಮದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅರುಣ್ ಯೋಗಿರಾಜ್ ಅವರು ಕೇವಲ 15 ದಿನಗಳಲ್ಲಿ ಕೆತ್ತಿರುವ 8.5 ಕೆಜಿ ತೂಕ ಮತ್ತು 1.5 ಅಡಿ ಎತ್ತರದ ವಿಯೆಟ್ನಾಂ ಮಾರ್ಬಲ್‌ನ ಸ್ವಾಮಿ ವಿವೇಕಾನಂದರ ಮೂರ್ತಿಯನ್ನು ಪ್ರಧಾನಿಗೆ ಅರ್ಪಿಸಲಾಗುತ್ತದೆ. ಕನ್ಯಾಕುಮಾರಿಯ ವಿವೇಕಾನಂದ ರಾಕ್ ಮೆಮೋರಿಯಲ್ ಮಾದರಿಯಲ್ಲಿ ಈ ಶಿಲ್ಪವನ್ನು ರೂಪಿಸಲಾಗಿದ್ದು, ಪ್ರಧಾನಿ ಸುಲಭವಾಗಿ ಕೈಯಲ್ಲಿ ಹಿಡಿಯುವಂತೆ 10 ಕೆಜಿಗಿಂತ ಕಡಿಮೆ ತೂಕದಲ್ಲಿ ವಿನ್ಯಾಸಗೊಳಿಸಿರುವುದು ವಿಶೇಷ.

ಇದರೊಂದಿಗೆ ಮೈಸೂರಿನ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ಮತ್ತೊಂದು ವಿಶೇಷ ಉಡುಗೊರೆಯನ್ನೂ ಪ್ರಧಾನಿಗೆ ನೀಡಲಾಗುತ್ತದೆ ಎಂದು ಮೈಸೂರು ರಾಮಕೃಷ್ಣ ಆಶ್ರಮದ ಮುಕ್ತಿದಾನಂದ ಜೀ ಮಹಾರಾಜ್ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರು ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟಿಸಿದ ಬಳಿಕ ಶ್ರೀ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲಿದ್ದಾರೆ. ಬಳಿಕ ಆಶ್ರಮದ ಆಡಿಟೋರಿಯಂನಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ಸುಮಾರು 30 ನಿಮಿಷಗಳ ಕಾಲ ಭಾಗವಹಿಸಲಿದ್ದಾರೆ.

ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಸುಮಾರು 6,000 ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ವಿಶೇಷ ಪಾಸ್ ಹೊಂದಿರುವವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಹರೀಶ್ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಗಣ್ಯರು ಉಪಸ್ಥಿತರಿರಲಿದ್ದಾರೆ.

‘ರಾಮಾಯಣ’ ಟ್ರೇಲರ್ ರಿಲೀಸ್‌: ರಾಮನಾಗಿ ರಣಬೀರ್, ರಾವಣನಾಗಿ ಯಶ್ ಅಬ್ಬರ

‘ರಾಮಾಯಣ’ ಚಿತ್ರದ ಮೊದಲ ಟ್ರೇಲರ್ ಬಿಡುಗಡೆಗೊಂಡಿದ್ದು, ಭಾರತೀಯ ಸಿನಿಮಾದ ತಾಂತ್ರಿಕ ಸಾಮರ್ಥ್ಯವನ್ನು ಜಾಗತಿಕ ಮಟ್ಟದಲ್ಲಿ ಪ್ರದರ್ಶಿಸುವ ಭವ್ಯ ಪ್ರಯತ್ನವಾಗಿ ಹೊರಹೊಮ್ಮಿದೆ. ರಾವಣನಾಗಿ ಯಶ್ ಅವರ ರೌದ್ರಾವತಾರ, ರಾಮನಾಗಿ ರಣಬೀರ್ ಕಪೂರ್ ಅವರ ಘನತೆ, ಸಾಯಿ ಪಲ್ಲವಿ ಅವರ ಸೀತೆ ಪಾತ್ರ ಹಾಗೂ ವಿಶ್ವಮಟ್ಟದ VFX ಟ್ರೇಲರ್‌ನ ಪ್ರಮುಖ ಹೈಲೈಟ್‌ಗಳಾಗಿವೆ.

ಬಹುನಿರೀಕ್ಷಿತ ಈ ಟ್ರೇಲರ್ ಅನ್ನು ಚಿತ್ರತಂಡ ಬ್ರಾಹ್ಮೀ ಮುಹೂರ್ತವಾದ ಬೆಳಗ್ಗೆ 4.15ಕ್ಕೆ ಬಿಡುಗಡೆ ಮಾಡಿದೆ. ಬಿಡುಗಡೆಯಾದ ಕ್ಷಣದಿಂದಲೇ ಟ್ರೇಲರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಿನಿಪ್ರಿಯರು ದೃಶ್ಯ ವೈಭವ ಮತ್ತು ತಾಂತ್ರಿಕ ಗುಣಮಟ್ಟವನ್ನು ಮುಕ್ತಕಂಠದಿಂದ ಶ್ಲಾಘಿಸುತ್ತಿದ್ದಾರೆ.

ಸುಮಾರು ನಾಲ್ಕು ನಿಮಿಷಗಳ ಟ್ರೇಲರ್‌ನಲ್ಲಿ ರಾಮಾಯಣದ ಕಥೆಯನ್ನು ಸಂಪೂರ್ಣ ಹೇಳದೆ, ಅದರ ಪ್ರಮುಖ ಘಟ್ಟಗಳನ್ನು ಮಾತ್ರ ಪರಿಣಾಮಕಾರಿಯಾಗಿ ಕಟ್ಟಿಕೊಡಲಾಗಿದೆ. ಅಯೋಧ್ಯೆ, ವನವಾಸ, ಸೀತಾ ಸ್ವಯಂವರ, ರಾವಣನ ಲಂಕೆ, ರಾಕ್ಷಸ ಸಾಮ್ರಾಜ್ಯ ಹಾಗೂ ಯುದ್ಧದ ಸನ್ನಿವೇಶಗಳು ಅದ್ದೂರಿ VFX ಮೂಲಕ ಕಣ್ಣಿಗೆ ಹಬ್ಬವಾಗಿವೆ.

ಟ್ರೇಲರ್‌ನಲ್ಲಿ ಯಶ್ ಅವರ ರಾವಣ ಪಾತ್ರವೇ ಹೆಚ್ಚು ಗಮನ ಸೆಳೆಯುತ್ತದೆ. ರಾಜಸಿಕ ವೇಷಭೂಷಣ, ಚಿನ್ನದ ಸಿಂಹಾಸನ, ತೀಕ್ಷ್ಣ ನೋಟ ಹಾಗೂ ರೌದ್ರಾಭಿನಯದ ಮೂಲಕ ಅವರು ಪಾತ್ರಕ್ಕೆ ವಿಭಿನ್ನ ಆಯಾಮ ನೀಡಿದ್ದಾರೆ. ರಣಬೀರ್ ಕಪೂರ್ ಶ್ರೀರಾಮನಾಗಿ ಸಮಚಿತ್ತ, ಶಾಂತ ಮತ್ತು ಶಕ್ತಿಶಾಲಿ ವ್ಯಕ್ತಿತ್ವವನ್ನು ಮೂಡಿಸಿದ್ದರೆ, ಸಾಯಿ ಪಲ್ಲವಿ ಸೀತೆಯ ಪಾತ್ರಕ್ಕೆ ಜೀವ ತುಂಬಿದ್ದಾರೆ. ಲಕ್ಷ್ಮಣನಾಗಿ ರವಿ ದುಬೆ ಅವರ ಪಾತ್ರವೂ ಟ್ರೇಲರ್‌ನಲ್ಲಿ ಪ್ರಭಾವ ಮೂಡಿಸಿದೆ.

ಹಾಲಿವುಡ್‌ನ ಡಿಎನ್‌ಇಜಿ ತಂಡ ರೂಪಿಸಿರುವ ದೃಶ್ಯ ಪರಿಣಾಮಗಳು ಚಿತ್ರದ ಮಟ್ಟವನ್ನು ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಕೊಂಡೊಯ್ದಿವೆ. ಹಾನ್ಸ್ ಜಿಮ್ಮರ್ ಮತ್ತು ಎ.ಆರ್. ರೆಹಮಾನ್ ಅವರ ಸಂಗೀತ ಟ್ರೇಲರ್‌ಗೆ ಮತ್ತಷ್ಟು ಭವ್ಯತೆ ಹಾಗೂ ಭಾವನಾತ್ಮಕ ಆಳವನ್ನು ನೀಡಿದೆ.

ಚಿತ್ರದಲ್ಲಿ ಯಶ್, ರಣಬೀರ್ ಕಪೂರ್, ಸಾಯಿ ಪಲ್ಲವಿ, ಸನ್ನಿ ಡಿಯೋಲ್, ರವಿ ದುಬೆ, ಲಾರಾ ದತ್ತಾ, ರಕುಲ್ ಪ್ರೀತ್ ಸಿಂಗ್, ಕಾಜಲ್ ಅಗರವಾಲ್, ಅರುಣ್ ಗೋವಿಲ್, ವಿವೇಕ್ ಒಬೆರಾಯ್, ಕುನಾಲ್ ಕಪೂರ್, ಆದಿನಾಥ್ ಕೊಠಾರೆ ಮತ್ತು ಅನುಪಮ್ ಖೇರ್ ಸೇರಿದಂತೆ ಬೃಹತ್ ತಾರಾಗಣ ಅಭಿನಯಿಸಿದೆ. ಸುಮಾರು 4,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ‘ರಾಮಾಯಣ’ ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪೌರಾಣಿಕ ಸಿನಿಮಾಗಳಲ್ಲಿ ಒಂದಾಗಿ ದಾಖಲೆ ಬರೆಯುವತ್ತ ಹೆಜ್ಜೆ ಇಟ್ಟಿದೆ.

₹2 ಲಕ್ಷ ಕೋಟಿ ದಾಟಿದ IPL ಬ್ರ್ಯಾಂಡ್ ಮೌಲ್ಯ: RCB ನಂ.1 ಫ್ರಾಂಚೈಸಿ, CSKಗೆ ಭಾರಿ ಹಿನ್ನಡೆ

0

ಭಾರತೀಯ ಪ್ರೀಮಿಯರ್ ಲೀಗ್ (ಐಪಿಎಲ್) ವಿಶ್ವ ಕ್ರಿಕೆಟ್‌ನ ಅತ್ಯಂತ ಪ್ರತಿಷ್ಠಿತ ಹಾಗೂ ಶ್ರೀಮಂತ ಟೂರ್ನಿಯಾಗಿ ತನ್ನ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ. ಪ್ರತಿ ವರ್ಷ ಆದಾಯ, ವ್ಯವಹಾರ ಹಾಗೂ ಬ್ರ್ಯಾಂಡ್ ಮೌಲ್ಯದಲ್ಲಿ ಹೊಸ ದಾಖಲೆಗಳನ್ನು ನಿರ್ಮಿಸುತ್ತಿರುವ ಐಪಿಎಲ್,

ಇದೀಗ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ತಲುಪಿದೆ. 2026ರ ಬ್ರ್ಯಾಂಡ್ ಮೌಲ್ಯಮಾಪನ ವರದಿ ಪ್ರಕಾರ, ಐಪಿಎಲ್‌ನ ಒಟ್ಟು ವ್ಯವಹಾರ ಮೌಲ್ಯ 20.6 ಬಿಲಿಯನ್ ಅಮೆರಿಕನ್ ಡಾಲರ್‌ಗೆ ಏರಿಕೆಯಾಗಿದ್ದು, ಭಾರತೀಯ ಕರೆನ್ಸಿಯಲ್ಲಿ ಇದು ಸುಮಾರು ₹2 ಲಕ್ಷ ಕೋಟಿಗೂ ಅಧಿಕವಾಗಿದೆ.

ಈ ಬಾರಿ ಬ್ರ್ಯಾಂಡ್ ಮೌಲ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಅಗ್ರಸ್ಥಾನಕ್ಕೇರಿದೆ. 2025 ಹಾಗೂ 2026ರಲ್ಲಿ ಸತತ ಎರಡು ಬಾರಿ ಐಪಿಎಲ್ ಟ್ರೋಫಿ ಗೆದ್ದಿರುವ ಆರ್‌ಸಿಬಿಯ ಬ್ರ್ಯಾಂಡ್ ಮೌಲ್ಯ ಗಣನೀಯವಾಗಿ ಏರಿಕೆಯಾಗಿ 312 ಮಿಲಿಯನ್ ಅಮೆರಿಕನ್ ಡಾಲರ್‌ಗೆ ತಲುಪಿದೆ. ಇದರಿಂದ ಬ್ರ್ಯಾಂಡ್ ವ್ಯಾಲ್ಯೂ ಪಟ್ಟಿಯಲ್ಲಿ ಆರ್‌ಸಿಬಿ ಮೊದಲ ಸ್ಥಾನವನ್ನು ಅಲಂಕರಿಸಿದೆ.

2026ರ ಐಪಿಎಲ್ ಆರಂಭಕ್ಕೂ ಮುನ್ನ ಆರ್‌ಸಿಬಿ ಫ್ರಾಂಚೈಸಿಯನ್ನು ಬಿರ್ಲಾ ಗ್ರೂಪ್, ಬೋಲ್ಟ್ ವೆಂಚರ್ಸ್ ಹಾಗೂ ಟೈಮ್ಸ್ ಆಫ್ ಇಂಡಿಯಾ ಗ್ರೂಪ್ ಜಂಟಿಯಾಗಿ ಸುಮಾರು ₹16,600 ಕೋಟಿಗೆ ಖರೀದಿಸಿತ್ತು. ಇದು ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತಕ್ಕೆ ಮಾರಾಟವಾದ ಫ್ರಾಂಚೈಸಿ ಎಂಬ ದಾಖಲೆಯನ್ನೂ ನಿರ್ಮಿಸಿತ್ತು.

ಇನ್ನು ಐದು ಬಾರಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಬ್ರ್ಯಾಂಡ್ ಮೌಲ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದು, ತಂಡದ ಮೌಲ್ಯ 264 ಮಿಲಿಯನ್ ಅಮೆರಿಕನ್ ಡಾಲರ್‌ಗೆ ಏರಿಕೆಯಾಗಿದೆ.

ಒಂದು ಕಾಲದಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಬ್ರ್ಯಾಂಡ್ ಮೌಲ್ಯದಲ್ಲಿ ಅಗ್ರಸ್ಥಾನದಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಇದೀಗ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಇತ್ತೀಚಿನ ಋತುಗಳಲ್ಲಿ ತಂಡದ ಸಾಧನೆ ನಿರೀಕ್ಷಿತ ಮಟ್ಟದಲ್ಲಿರದ ಕಾರಣ ಬ್ರ್ಯಾಂಡ್ ಮೌಲ್ಯದಲ್ಲೂ ಕುಸಿತ ಕಂಡಿದೆ. ಈ ನಡುವೆ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಸಿಎಸ್‌ಕೆಯನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದೆ.

ಒಟ್ಟಾರೆ ಐಪಿಎಲ್ ಲೀಗ್‌ನ ಬ್ರ್ಯಾಂಡ್ ಮೌಲ್ಯವೂ ಶೇಕಡಾ 10.3ರಷ್ಟು ಏರಿಕೆಯಾಗಿದ್ದು, 4.3 ಬಿಲಿಯನ್ ಅಮೆರಿಕನ್ ಡಾಲರ್‌ಗೆ (ಸುಮಾರು ₹36,000 ಕೋಟಿ) ತಲುಪಿದೆ. ಪ್ರತಿ ಪಂದ್ಯದ ಆದಾಯದ ಆಧಾರದ ಮೇಲೆ ಅಮೆರಿಕದ ಎನ್‌ಎಫ್‌ಎಲ್ (NFL) ನಂತರ ವಿಶ್ವದ ಎರಡನೇ ಅತ್ಯಂತ ಮೌಲ್ಯಯುತ ಕ್ರೀಡಾ ಲೀಗ್ ಎಂಬ ಹೆಗ್ಗಳಿಕೆಯನ್ನು ಐಪಿಎಲ್ ಮುಂದುವರಿಸಿಕೊಂಡಿದೆ.

ಐಪಿಎಲ್ ಫ್ರಾಂಚೈಸಿಗಳಲ್ಲಿ ಜಾಗತಿಕ ಹೂಡಿಕೆದಾರರ ಆಸಕ್ತಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಇತ್ತೀಚೆಗೆ ಬ್ಲ್ಯಾಕ್‌ಸ್ಟೋನ್ ಹಾಗೂ ಪೂನಾವಾಲಾ ಗ್ರೂಪ್ ಸೇರಿದಂತೆ ಹಲವು ಪ್ರಮುಖ ಹೂಡಿಕೆ ಸಂಸ್ಥೆಗಳು ಐಪಿಎಲ್ ಫ್ರಾಂಚೈಸಿಗಳಲ್ಲಿ ಭಾರಿ ಮೊತ್ತದ ಹೂಡಿಕೆ ಮಾಡಿರುವುದು ಈ ಮೌಲ್ಯವರ್ಧನೆಗೆ ಪ್ರಮುಖ ಕಾರಣವೆಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಐಪಿಎಲ್ ಈಗ ಕೇವಲ ಕ್ರಿಕೆಟ್ ಟೂರ್ನಿಯಾಗಿರದೆ, ವಿಶ್ವದ ಅತ್ಯಂತ ಯಶಸ್ವಿ ಕ್ರೀಡಾ ವ್ಯವಹಾರ ಮಾದರಿಗಳಲ್ಲಿ ಒಂದಾಗಿ ಹೊರಹೊಮ್ಮಿದೆ.