Home Blog

ಜೀರೋ ಬಿಲ್ ಬರ್ತಿದ್ದ ಮನೆಗಳಿಗೆ ದಿಢೀರ್ ₹5,000 ಕರೆಂಟ್ ಬಿಲ್! ಬೆಸ್ಕಾಂ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಬೆಂಗಳೂರು: ಪ್ರತಿ ತಿಂಗಳು ‘ಜೀರೋ ಬಿಲ್’ ನೋಡಿ ನಿರಾಳವಾಗುತ್ತಿದ್ದ ರಾಜಧಾನಿಯ ಜನರಿಗೆ ಈ ಬಾರಿ ಬಂದಿರುವ ಕರೆಂಟ್ ಬಿಲ್ ನೋಡಿ ತೀವ್ರ ಆಘಾತವಾಗಿದೆ. ಸರ್ಕಾರದ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿದ್ದ ಬೆಂಗಳೂರಿನ ನೂರಾರು ಕುಟುಂಬಗಳಿಗೆ ಯಾವುದೇ ಮುನ್ಸೂಚನೆ ಇಲ್ಲದೆ ದಿಢೀರನೇ 4,000 ದಿಂದ 5,000 ರೂಪಾಯಿ ಬಿಲ್ ಕೈಸೇರಿದ್ದು, ರಾಜಧಾನಿಯಲ್ಲಿ ಬೆಸ್ಕಾಂ (BESCOM) ವಿರುದ್ಧ ಸಾರ್ವಜನಿಕರ ಆಕ್ರೋಶ ಭುಗಿಲೆದ್ದಿದೆ.

ಸಣ್ಣ ಮನೆಗಳಿಗೂ ಭಾರಿ ಮೊತ್ತದ ಬಿಲ್: ಕರ್ನಾಟಕ ಸರ್ಕಾರದ ಗೃಹಜ್ಯೋತಿ ಯೋಜನೆಯಡಿ ಈವರೆಗೆ ನಿಯಮಿತವಾಗಿ ಜೀರೋ ಬಿಲ್ ಪಡೆಯುತ್ತಿದ್ದ ಬೆಂಗಳೂರಿನ ಶಿವಾಜಿನಗರದ ಮಖಾನ್ ಕಾಂಪೌಂಡ್ ಸೇರಿದಂತೆ ಹಲವು ಭಾಗಗಳ ನಿವಾಸಿಗಳಿಗೆ, ಈ ಬಾರಿ ಇದ್ದಕ್ಕಿದ್ದಂತೆ ಬೆಸ್ಕಾಂನಿಂದ ಭಾರಿ ಮೊತ್ತದ ವಿದ್ಯುತ್ ಬಿಲ್ ನೀಡಲಾಗಿದೆ. ಸಣ್ಣ ಮನೆಗಳಿಗೂ ಇಷ್ಟೊಂದು ದೊಡ್ಡ ಮೊತ್ತದ ಬಿಲ್ ಬಂದಿರುವುದನ್ನು ವಿರೋಧಿಸಿ ಸ್ಥಳೀಯರು ಬೆಸ್ಕಾಂ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಉಚಿತ ಸೌಲಭ್ಯ ಸಿಗುತ್ತದೆ ಎಂದು ನಿರಾಳವಾಗಿದ್ದ ಕುಟುಂಬಗಳಿಗೆ ಏಕಾಏಕಿ ಬಂದ ಈ ಬಿಲ್ ತೀವ್ರ ಆತಂಕಕ್ಕೆ ಕಾರಣವಾಗಿದೆ.

ಸಾಫ್ಟ್‌ವೇರ್ ತಾಂತ್ರಿಕ ದೋಷ ಎಂದ ಬೆಸ್ಕಾಂ: ಈ ಗೊಂದಲದ ಕುರಿತು ಸ್ಪಷ್ಟನೆ ನೀಡಿರುವ ಬೆಸ್ಕಾಂ ಅಧಿಕಾರಿಗಳು, ಕಳೆದ ಎರಡು ತಿಂಗಳುಗಳಿಂದ ಬಿಲ್ಲಿಂಗ್ ಸಾಫ್ಟ್‌ವೇರ್ ಅಥವಾ ಸರ್ವರ್‌ಗಳಲ್ಲಿ ಎದುರಾಗಿರುವ ತಾಂತ್ರಿಕ ಸಮಸ್ಯೆಯಿಂದಾಗಿ ಉಚಿತ ಯೂನಿಟ್‌ಗಳು ಸರಿಯಾಗಿ ಲೆಕ್ಕಾಚಾರವಾಗದೆ ಪೂರ್ಣ ಬಿಲ್ ಜನರೇಟ್ ಆಗಿದೆ ಎಂದು ತಿಳಿಸಿದ್ದಾರೆ.

ಗ್ರಾಹಕರಲ್ಲಿ ತೀವ್ರ ಆತಂಕ ಹಾಗೂ ಗೊಂದಲ: ಈ ಹಿಂದಿನ ತಿಂಗಳುಗಳಲ್ಲಿ ಜೀರೋ ಬಿಲ್ ಪಡೆಯುತ್ತಿದ್ದ ಗ್ರಾಹಕರು, ಇದು ಕೇವಲ ತಾಂತ್ರಿಕ ದೋಷದಿಂದ ಬಂದಿರುವ ಬಿಲ್ ಆಗಿದೆಯೇ ಅಥವಾ ತಾವು ನಿಜವಾಗಿಯೂ ಈ ಭಾರಿ ಮೊತ್ತವನ್ನು ಪಾವತಿಸಬೇಕೇ ಎಂಬ ಗೊಂದಲ ಹಾಗೂ ಆತಂಕದಲ್ಲಿದ್ದಾರೆ.

ಎಲ್ಲಾ ಸೇವೆಗಿಂತ ಶಿಕ್ಷಕರ ಸೇವೆ ಮಿಗಿಲು: ಪ್ರೊ. ಎಸ್.ವಿ.ಸಂಕನೂರ

0

ವಿಜಯಸಾಕ್ಷಿ ಸುದ್ದಿ, ಗದಗ: ಶಿಕ್ಷಕರು ಸಮಾಜದ ಆಸ್ತಿ. ಅವರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳಾಗಿದ್ದು, ಶಿಕ್ಷಣ ನೀಡಿ ಸಮಾಜ ನಿರ್ಮಾಣ ಮಾಡುವ ಶಿಕ್ಷಕರ ಸೇವೆ ಎಲ್ಲ ಸೇವೆಗಿಂತಲೂ ಮಿಗಿಲಾದದ್ದು ಎಂದು ವಿಧಾನ ಪರಿಷತ್ ಸದಸ್ಯ ಪ್ರೊ. ಎಸ್.ವಿ.ಸಂಕನೂರ ಹೇಳಿದರು.

ಹೊಳೆಆಲೂರಿನ ಎಸ್.ಎಸ್.ಆಡಿನ ಜನಸೇವಾ ಸಂಸ್ಥೆ ವತಿಯಿಂದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ೧೩೮ನೇ ಜನ್ಮದಿನದ ಅಂಗವಾಗಿ ಜೆ.ಟಿ. ಮಹಾವಿದ್ಯಾಲಯದ ಸಭಾಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ, ‘ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿ’ ಪ್ರದಾನ, ನಿವೃತ್ತ ಹಾಗೂ ಸಾಧಕ ಶಿಕ್ಷಕರ ಸನ್ಮಾನ, ‘ವಸುಂಧರೆ’ ಕವನ ಸಂಕಲನ ಬಿಡುಗಡೆ ಮತ್ತು ಕಲಾ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕರ ಸಮಸ್ಯೆ ಹಾಗೂ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ನೀಡಿದ್ದು, ಮುಂದೆಯೂ ಶಿಕ್ಷಕರ ಸೇವೆಗೆ ಬದ್ಧನಾಗಿರುವುದಾಗಿ ತಿಳಿಸಿದರು. ಶಿಕ್ಷಕರನ್ನು ಗೌರವಿಸುವುದರೊಂದಿಗೆ ಪ್ರತಿಭಾವಂತರನ್ನು ಪ್ರೋತ್ಸಾಹಿಸಿ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಆಡಿನ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದರು.

ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಮಹಾಸ್ವಾಮಿಗಳು ಮಾತನಾಡಿ, ಶಿಕ್ಷಣದಿಂದ ಸಮಾಜ ಪರಿವರ್ತನೆಯತ್ತ ಸಾಗುತ್ತಿದೆ. ಅಂತಹ ಶಿಕ್ಷಣ ನೀಡಿದ ಶಿಕ್ಷಕರನ್ನು ಸ್ಮರಿಸುವುದು ಕೃತಜ್ಞತೆಯ ಸಂಕೇತ. ಡಾ.ರಾಧಾಕೃಷ್ಣನ್ ಅವರಂತೆ ಸಾವಿತ್ರಿಬಾಯಿ ಫುಲೆ ಅವರನ್ನೂ ಸ್ಮರಿಸುವ ಕಾರ್ಯವಾಗಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

‘ವಸುಂಧರೆ’ ಕವನ ಸಂಕಲನ ಬಿಡುಗಡೆಗೊಳಿಸಿದ ಉತ್ತಮ ಶಿಕ್ಷಕ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಎಸ್.ಎನ್.ಬಳ್ಳಾರಿ, ಶಿಕ್ಷಣದ ಜತೆಗೆ ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಸಾಮಾಜಿಕ ಸೇವೆಗೆ ವೇದಿಕೆ ಕಲ್ಪಿಸುತ್ತಿರುವ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು.

ಜೆ.ಟಿ. ವಿದ್ಯಾಪೀಠದ ಆಡಳಿತಾಧಿಕಾರಿ ಶಿವಾನಂದ ಎಸ್.ಪಟ್ಟಣಶೆಟ್ಟಿ ಮಾತನಾಡಿ, ಶಿಕ್ಷಕರನ್ನು ಗೌರವಿಸುವುದು ಜ್ಞಾನವನ್ನು ಗೌರವಿಸಿದಂತೆ ಎಂದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ.ನಂದಾ ಹಣಬರಟ್ಟಿ ತಮ್ಮ ಬಾಲ್ಯದ ಗುರುಗಳನ್ನು ಸ್ಮರಿಸಿದರು.

ಸಂಸ್ಥೆಯ ಅಧ್ಯಕ್ಷೆ ಶೋಭಾ ಎಸ್.ಆಡಿನ ಅಧ್ಯಕ್ಷತೆ ವಹಿಸಿ, ಶಿಕ್ಷಕರು ಮಕ್ಕಳ ಬದುಕು ರೂಪಿಸುವ ಶಿಲ್ಪಿಗಳು. ನಿವೃತ್ತ ಶಿಕ್ಷಕರು ಬಿತ್ತಿದ ಜ್ಞಾನದ ಬೀಜಗಳು ತಲೆಮಾರುಗಳವರೆಗೆ ಫಲ ನೀಡುತ್ತವೆ ಎಂದರು.

ಸಮಾರಂಭದಲ್ಲಿ ‘ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿ–೨೦೨೬’ ಪ್ರದಾನ ಮಾಡಿ, ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಪ್ರಶಸ್ತಿ ಪುರಸ್ಕೃತರು ಮತ್ತು ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ವಚನಗೀತೆ, ಸಂಗೀತ, ಚಿತ್ರಕಲೆ ಹಾಗೂ ಗಾಂಧಾರಿ ವಿದ್ಯಾ ಪ್ರದರ್ಶನಗಳು ಗಮನ ಸೆಳೆದವು.

ಬಸವರಾಜ ಎಂ.ಕಡೆಮನಿ, ವಿವೇಕಾನಂದಗೌಡ ಪಾಟೀಲ, ಡಿ.ಎಸ್.ತಳವಾರ, ಎಸ್.ಕೆ.ಆಡಿನ, ಪಾಂಡುರಂಗ ಪತ್ತಾರ ಸೇರಿದಂತೆ ಗಣ್ಯರು, ಸಂಸ್ಥೆಯ ಪದಾಧಿಕಾರಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಆದರ್ಶ ಮೌಲ್ಯಗಳಿಗೆ ರೈತರೇ ಪ್ರತಿರೂಪ: ಅನಿಲ ಮೆಣಸಿನಕಾಯಿ

0

ವಿಜಯಸಾಕ್ಷಿ ಸುದ್ದಿ, ಗದಗ: ಧಾರ್ಮಿಕ ಕಾರ್ಯಕ್ರಮಗಳಲ್ಲಿ ರಾಜಕಾರಣಿಗಳು ಭಾಗವಹಿಸುವುದರಿಂದ ರಾಜಕೀಯದಲ್ಲೂ ನ್ಯಾಯ, ನೀತಿ ಹಾಗೂ ಧರ್ಮದ ಮೌಲ್ಯಗಳನ್ನು ಅನುಸರಿಸಲು ಸಾಧ್ಯವಾಗುತ್ತದೆ ಎಂದು ಗದಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಅನಿಲ ಮೆಣಸಿನಕಾಯಿ ಹೇಳಿದರು.

ತಾಲೂಕಿನ ಹಿರೇಹಂದಿಗೋಳ ಗ್ರಾಮದಲ್ಲಿ ನಡೆದ ಶರಣ ಬಸವೇಶ್ವರ 41ನೇ ಪುರಾಣ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬರಗಾಲದ ನಡುವೆಯೂ ಪುರಾಣ ಪ್ರವಚನ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿರುವುದು ಗಮನಾರ್ಹ ಎಂದರು.

ಎಷ್ಟೇ ಬರಗಾಲವಿದ್ದರೂ ಧಾರ್ಮಿಕ ಕಾರ್ಯಕ್ರಮಗಳಿಗೆ ರೈತರು ದಾನ-ಧರ್ಮದಲ್ಲಿ ಎಂದಿಗೂ ಹಿಂದೆ ಬೀಳುವುದಿಲ್ಲ. ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಜೋಳಿಗೆ ಕಾರ್ಯಕ್ರಮ ಹಮ್ಮಿಕೊಂಡಾಗ ಹಿರೇಹಂದಿಗೋಳ ಗ್ರಾಮಸ್ಥರು ದವಸ-ಧಾನ್ಯಗಳನ್ನು ನೀಡಿ ಹಸಿದವರ ಹೊಟ್ಟೆ ತುಂಬಿಸುವ ಕಾರ್ಯ ಮಾಡಿದ್ದರು. ಈ ಮೂಲಕ ಆದರ್ಶ ಮೌಲ್ಯಗಳು ಇಂದಿಗೂ ಸಮಾಜದಲ್ಲಿ ಜೀವಂತವಾಗಿವೆ ಎಂಬುದನ್ನು ರೈತರು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು.

ಅಭಿನವ ಭೂದೀಶ್ವರ ಶ್ರೀಗಳು ಮಾತನಾಡಿ, ಬದುಕಿಗೆ ಎಲ್ಲವೂ ಬೇಕು. ಎಲ್ಲವೂ ಬೇಕು ಎಂದಾಗ ಅನ್ಯಾಯದ ಮಾರ್ಗದಲ್ಲಿ ಗಳಿಸದೆ ನ್ಯಾಯದ ಮಾರ್ಗದಲ್ಲಿ ಸಂಪಾದಿಸಬೇಕು. ಆಗ ಮಾತ್ರ ಆನಂದದಿಂದ ಬದುಕಲು ಸಾಧ್ಯ ಎಂದರು.

ಸುಖವಿದ್ದಾಗ ನಮ್ಮನ್ನೇ ನಾವು ಮರೆತು, ದುಃಖ ಬಂದಾಗ ಮಾತ್ರ ದೇವರನ್ನು ನೆನೆಯುತ್ತೇವೆ. ಕಷ್ಟ-ಸುಖ ಎಲ್ಲವನ್ನೂ ದೇವರು ನೀಡಿದ್ದಾನೆ. ಆದ್ದರಿಂದ ಎಲ್ಲ ಕಾಲದಲ್ಲೂ ದೇವರ ಕೃಪೆಗೆ ಪಾತ್ರರಾಗಬೇಕು. ದೇವರನ್ನು ಕೇವಲ ಅನುಕೂಲಕ್ಕಾಗಿ ಪ್ರೀತಿಸಬಾರದು. ಮನುಷ್ಯ ದೇವನಾಗಲು ಸಾಧ್ಯವಿಲ್ಲ; ಆದರೆ ದೇವರ ಪ್ರೀತಿಗೆ ಪಾತ್ರನಾಗಬಹುದು. ಮನುಷ್ಯ ಭೂತನಾಗುವತ್ತ ಸಾಗುತ್ತಿರುವುದು ಇಂದಿನ ಕಲಿಗಾಲದ ಉದಾಹರಣೆಯಾಗಿದೆ ಎಂದು ಶ್ರೀಗಳು ಹೇಳಿದರು.

ಯುವ ಮುಖಂಡರಾದ ವಸಂತ ಪಡಗದ, ಸಿದ್ದು ಪಲ್ಲೇದ ಸೇರಿದಂತೆ ಹಿರೇಹಂದಿಗೋಳ ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಸೌರ ವಿದ್ಯುತ್ ಘಟಕ ಲೋಕಾರ್ಪಣೆ

0

ವಿಜಯಸಾಕ್ಷಿ ಸುದ್ದಿ, ಗದಗ: ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ಭಾನುವಾರ ಗದಗದ ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಅಳವಡಿಸಲಾಗಿರುವ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳು ಹಾಗೂ ಸೌರ ವಿದ್ಯುತ್ ಉತ್ಪಾದನಾ ಘಟಕವನ್ನು ಲೋಕಾರ್ಪಣೆ ಮಾಡಿದರು.

ಆಸ್ಪತ್ರೆಯ ವೈದ್ಯಕೀಯ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ವಿವಿಧ ವಿಭಾಗಗಳಿಗೆ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗಿದ್ದು, ವಿದ್ಯುತ್ ಅಗತ್ಯತೆಯನ್ನು ಪೂರೈಸಲು ಸೌರ ವಿದ್ಯುತ್ ಉತ್ಪಾದನಾ ಘಟಕವನ್ನು ಸ್ಥಾಪಿಸಲಾಗಿದೆ.

ಈ ಸಂದರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್., ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ, ಡಾ.ಕರಿಗೌಡ್ರ, ಡಾ.ರಾಘವೇಂದ್ರ ಸೇರಿದಂತೆ ಅಧಿಕಾರಿಗಳು ಹಾಗೂ ವೈದ್ಯರು ಉಪಸ್ಥಿತರಿದ್ದರು.

ಸಂಯೋಜಿತ ಆರೋಗ್ಯ ಪ್ರಯೋಗಾಲಯ ಕಟ್ಟಡ ಉದ್ಘಾಟನೆ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಸಚಿವ ಯು.ಟಿ.ಖಾದರ್ ಅವರು ಭಾನುವಾರ ಗದಗದ ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ನಿರ್ಮಿಸಲಾಗಿರುವ ಸಂಯೋಜಿತ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯದ ನೂತನ ಕಟ್ಟಡವನ್ನು ಉದ್ಘಾಟಿಸಿದರು.

ಸಾರ್ವಜನಿಕ ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನಿರ್ಮಿಸಲಾಗಿರುವ ಪ್ರಯೋಗಾಲಯ ಕಟ್ಟಡವನ್ನು ಸಚಿವರು ಉದ್ಘಾಟಿಸಿ, ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸುವಲ್ಲಿ ಇಂತಹ ಸೌಲಭ್ಯಗಳ ಮಹತ್ವವನ್ನು ಒತ್ತಿಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಡಾ.ಎಚ್.ಕೆ.ಪಾಟೀಲ, ಜಿಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್., ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ, ಡಾ.ಕರಿಗೌಡ್ರ ಸೇರಿದಂತೆ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಧರ್ಮಭೇದ ಮರೆತು ಮಕ್ಕಳ ಕೈಹಿಡಿಯುವ ಸಮಾಜ ನಿರ್ಮಾಣವಾಗಲಿ: ಯು.ಟಿ. ಖಾದರ್

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಹಿಂದೂ, ಮುಸ್ಲಿಂ, ಕ್ರೈಸ್ತ, ಜೈನ ಸೇರಿದಂತೆ ವಿವಿಧ ಧರ್ಮಗಳ ಮಕ್ಕಳು ಯಾವುದೇ ಭೇದಭಾವವಿಲ್ಲದೆ ಕೈಕೈ ಹಿಡಿದು ಓಡಾಡುವಂತಹ ಸಾಮರಸ್ಯದ ಸಮಾಜ ನಿರ್ಮಾಣವಾಗಬೇಕು. ಕ್ಷೇತ್ರದಲ್ಲಿ ಇಂತಹ ವಾತಾವರಣ ನಿರ್ಮಿಸಲು ಆದ್ಯತೆ ನೀಡುವ ಜನಪ್ರತಿನಿಧಿಯೇ ನಿಜವಾದ ಅರ್ಥದಲ್ಲಿ ಯಶಸ್ವಿ ನಾಯಕನಾಗಬಲ್ಲರು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಹೇಳಿದರು.

ಪಟ್ಟಣದ ಭಾವೈಕ್ಯತೆಯ ಕೇಂದ್ರ ಹಜರತ್ ಸಯ್ಯದ್ ಸುಲೇಮಾನ್ ಬಾದಷಾ ಖಾದ್ರಿ (ದೂದನಾನಾ) ದರ್ಗಾಕ್ಕೆ ಭಾನುವಾರ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಶಾದಿಮಹಲ್‌ನಲ್ಲಿ ದರ್ಗಾ ಕಮಿಟಿ, ಅಂಜುಮನ್ ಕಮಿಟಿ ಹಾಗೂ ವಿವಿಧ ಸಮಾಜಗಳ ವತಿಯಿಂದ ನಡೆದ ನಾಗರಿಕ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಭಾವೈಕ್ಯತೆಗೆ ಮತ್ತೊಂದು ಹೆಸರು ಲಕ್ಷ್ಮೇಶ್ವರ. ಈ ನೆಲದಲ್ಲಿ ನಡೆದಾಡಿದ ದೇವಮಾನವರು ‘ಮಾನವ ಧರ್ಮಕ್ಕೆ ಜಯವಾಗಲಿ, ದ್ವೇಷ ಬಿಡು, ಪ್ರೀತಿ ಮಾಡು’ ಎಂಬ ಸಾರ್ವಕಾಲಿಕ ಸಂದೇಶ ನೀಡಿದ್ದಾರೆ. ಇಲ್ಲಿನ ಜನರು ಪ್ರೀತಿ ಮತ್ತು ವಿಶ್ವಾಸದಿಂದ ಬದುಕುತ್ತಿರುವುದು ಹೆಮ್ಮೆಯ ಸಂಗತಿ. ಭಾರತದ ಸಂಸ್ಕೃತಿಯೇ ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವುದಾಗಿದೆ. ಸಂತರು, ಶರಣರು ಹಾಗೂ ಸೂಫಿ ಸಂತರು ಪರಸ್ಪರ ಪ್ರೀತಿ, ಸೌಹಾರ್ದತೆ ಮತ್ತು ಸಹಬಾಳ್ವೆಯ ಮಾರ್ಗ ತೋರಿಸಿಕೊಟ್ಟಿದ್ದಾರೆ. ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಎಲ್ಲರ ಜವಾಬ್ದಾರಿ ಎಂದರು.

ಧರ್ಮ, ಜಾತಿ ಸೇರಿದಂತೆ ಯಾವುದೇ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾದರೂ ಸಮಾಜದ ಶಾಂತಿಗೆ ಧಕ್ಕೆ ಬಾರದಂತೆ ಪರಸ್ಪರ ಕುಳಿತು ಪ್ರೀತಿ, ವಿಶ್ವಾಸದಿಂದ ಚರ್ಚಿಸಿ ಪರಿಹರಿಸಿಕೊಳ್ಳಬೇಕು. ‘ನಾವೆಲ್ಲರೂ ಭಾರತೀಯರು’ ಎಂಬ ಭಾವನೆಯೊಂದಿಗೆ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು. ಯುವಕರು ಹಿರಿಯರ ಜೀವನಾನುಭವದಿಂದ ಮಾರ್ಗದರ್ಶನ ಪಡೆದು ಮುನ್ನಡೆಯಬೇಕು ಎಂದರು.

ಪಾಲಕರು ಮಕ್ಕಳಿಗೆ ಊಟ, ಬಟ್ಟೆ ಸೇರಿದಂತೆ ಸೌಲಭ್ಯಗಳನ್ನು ಒದಗಿಸುವುದಕ್ಕಿಂತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಉತ್ತಮ ಶಿಕ್ಷಣ ದೊರೆತರೆ ಮಕ್ಕಳು ಜೀವನದಲ್ಲಿ ಯಾವುದೇ ಉನ್ನತ ಸ್ಥಾನ ಅಲಂಕರಿಸುವ ಸಾಮರ್ಥ್ಯ ಪಡೆಯುತ್ತಾರೆ. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ನೋಡಿಕೊಳ್ಳುವುದು ಕುಟುಂಬ ಹಾಗೂ ಸಮಾಜದ ಜವಾಬ್ದಾರಿಯಾಗಿದೆ ಎಂದರು.

ಪಟ್ಟಣದ ಸೋಮೇಶ್ವರ ದೇವಸ್ಥಾನ ಹಾಗೂ ದೂದನಾನಾ ದರ್ಗಾಕ್ಕೆ ಭೇಟಿ ನೀಡಿ ಜನರ ಆಶೀರ್ವಾದ ಪಡೆದಿರುವುದು ಸಂತಸ ತಂದಿದೆ. ಮಂದಿರ, ಮಸೀದಿ, ಬಸದಿಗಳ ಜೀರ್ಣೋದ್ಧಾರ ಹಾಗೂ ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿಗೆ ಬಂದ ಮನವಿಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸುವುದಾಗಿ ಖಾದರ್ ತಿಳಿಸಿದರು.

ಶಿಗ್ಗಾಂವ ಕ್ಷೇತ್ರದ ಶಾಸಕ ಯಾಸೀರಅಹ್ಮದ್ ಖಾನ್ ಪಠಾಣ ಮಾತನಾಡಿ, ಜನಪ್ರತಿನಿಧಿಯ ಯಶಸ್ಸನ್ನು ಕೇವಲ ರಸ್ತೆ, ಚರಂಡಿ ಹಾಗೂ ಕಟ್ಟಡಗಳಂತಹ ಅಭಿವೃದ್ಧಿ ಕಾಮಗಾರಿಗಳಿಂದ ಅಳೆಯಲಾಗದು. ಕ್ಷೇತ್ರದ ಜನರಲ್ಲಿ ಪರಸ್ಪರ ವಿಶ್ವಾಸ ಬೆಳೆಸಿ, ಎಲ್ಲ ಸಮುದಾಯಗಳ ಜನರು ನೆಮ್ಮದಿಯಿಂದ ಬದುಕುವ ವಾತಾವರಣ ನಿರ್ಮಿಸುವುದೂ ಜನಪ್ರತಿನಿಧಿಯ ಪ್ರಮುಖ ಕರ್ತವ್ಯ. ಮಕ್ಕಳಲ್ಲಿ ಬಾಲ್ಯದಿಂದಲೇ ಸಮಾನತೆ, ಸಹೋದರತೆ ಹಾಗೂ ಸಹಬಾಳ್ವೆಯ ಮೌಲ್ಯಗಳನ್ನು ಬೆಳೆಸಬೇಕು ಎಂದರು.

ದರ್ಗಾ ಕಮೀಟಿ ಅಧ್ಯಕ್ಷ ಸುಲೇಮಾನ ಕಣಕೆ ಅಧ್ಯಕ್ಷತೆ ವಹಿಸಿದ್ದರು. ಕೆಪಿಸಿಸಿ ಕಾರ್ಯದರ್ಶಿ ಟಿ.ಈಶ್ವರ, ಮಾಜಿ ಶಾಸಕ ರಾಮಣ್ಣ ಲಮಾಣಿ, ಹಾವೇರಿ ಲೋಕಸಭಾ ಕ್ಷೇತ್ರದ ಮುಖಂಡ ಆನಂದಸ್ವಾಮಿ ಗಡ್ಡದೇವರಮಠ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹುಮಾಯೂನ್ ಮಾಗಡಿ, ಗುರುನಾಥ ದಾನಪ್ಪನವರ, ಜಿ.ಆರ್.ಕೊಪ್ಪದ, ಅಂಜುಮನ್ ಸಂಸ್ಥೆ ಅಧ್ಯಕ್ಷ ಜಮೀಲ ಸೂರಣಗಿ, ಎಸ್.ಕೆ.ಹವಾಲ್ದಾರ, ಫಿರ್ಧೋಶ ಆಡೂರ, ಸಿಕಂದರ ಕಣಿಕೆ, ಜಮೀಲಮ್ಮದ ಸೂರಣಗಿ, ಎಂ.ಎಂ.ಗದಗ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಜನಪ್ರತಿನಿಧಿಯ ಯಶಸ್ಸನ್ನು ಕೇವಲ ರಸ್ತೆ, ಚರಂಡಿ ಹಾಗೂ ಕಟ್ಟಡಗಳ ಅಭಿವೃದ್ಧಿಯಿಂದ ಅಳೆಯಲಾಗದು. ಎಲ್ಲ ಸಮುದಾಯಗಳ ಜನರು ನೆಮ್ಮದಿಯಿಂದ ಬದುಕುವ ವಾತಾವರಣ ನಿರ್ಮಿಸುವುದೂ ಪ್ರಮುಖ ಕರ್ತವ್ಯ.

— ಯಾಸೀರಅಹ್ಮದ್ ಖಾನ್ ಪಠಾಣ, ಶಾಸಕ

ತಾಲೂಕು ಆಸ್ಪತ್ರೆ ಮೇಲ್ದರ್ಜೆಗೇರಿಸಲು ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ೩೫ ವರ್ಷಗಳಿಂದ ಕೇವಲ ೩೦ ಹಾಸಿಗೆಗಳಲ್ಲೇ ಕಾರ್ಯನಿರ್ವಹಿಸುತ್ತಿರುವ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಮಟ್ಟದ ಸಾರ್ವಜನಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವಂತೆ ಕನ್ನಡಪರ ಸಂಘಟನೆಗಳು ಹಾಗೂ ನಾಗರಿಕರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.

ಆರೋಗ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಲಕ್ಷ್ಮೇಶ್ವರಕ್ಕೆ ಆಗಮಿಸಿದ್ದ ಸಚಿವರಿಗೆ, ಪಟ್ಟಣದ ಸೋಮೇಶ್ವರ ದೇವಸ್ಥಾನ ಹಾಗೂ ದೂದಪೀರಾಂ ದರ್ಗಾಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಸಚಿವರು, ಆಸ್ಪತ್ರೆ ಮೇಲ್ದರ್ಜೆಗೇರಿಸುವ ವಿಚಾರಕ್ಕೆ ಮೊದಲ ಆದ್ಯತೆ ನೀಡಿ ಅಗತ್ಯ ಕ್ರಮ ಕೈಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಲಕ್ಷ್ಮೇಶ್ವರ ತಾಲೂಕು ಕೇಂದ್ರವಾಗಿ ಒಂಬತ್ತು ವರ್ಷ ಕಳೆದಿದ್ದು, ಸಮುದಾಯ ಆರೋಗ್ಯ ಕೇಂದ್ರಕ್ಕೆ ಪ್ರತಿದಿನ ೪೦೦ಕ್ಕೂ ಹೆಚ್ಚು ರೋಗಿಗಳು ಚಿಕಿತ್ಸೆಗಾಗಿ ಆಗಮಿಸುತ್ತಿದ್ದಾರೆ. ಸುತ್ತಮುತ್ತಲಿನ ನಾಲ್ಕು ತಾಲೂಕುಗಳ ಜನರೂ ಆರೋಗ್ಯ ಸೇವೆಗಾಗಿ ಇಲ್ಲಿಗೆ ಅವಲಂಬಿತರಾಗಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ತಜ್ಞ ವೈದ್ಯರು, ಹಾಸಿಗೆಗಳು ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದ ಗಂಭೀರ ಪ್ರಕರಣಗಳನ್ನು ಗದಗ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ದೂರದ ಆಸ್ಪತ್ರೆಗಳಿಗೆ ಕಳುಹಿಸುವ ಅನಿವಾರ್ಯತೆ ಎದುರಾಗಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ಆಸ್ಪತ್ರೆಯನ್ನು ತಾಲೂಕು ಮಟ್ಟದ ಸಾರ್ವಜನಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ ಹೆಚ್ಚುವರಿ ಹಾಸಿಗೆಗಳ ವ್ಯವಸ್ಥೆ ಮಾಡಬೇಕು. ತಜ್ಞ ವೈದ್ಯರು ಹಾಗೂ ಅಗತ್ಯ ವೈದ್ಯಕೀಯ ಸಿಬ್ಬಂದಿಯನ್ನು ನೇಮಕ ಮಾಡಬೇಕು. ತುರ್ತು ಚಿಕಿತ್ಸೆ, ಶಸ್ತ್ರಚಿಕಿತ್ಸೆ, ಹೆರಿಗೆ ಹಾಗೂ ಮಕ್ಕಳ ಚಿಕಿತ್ಸಾ ವಿಭಾಗಗಳನ್ನು ಬಲಪಡಿಸುವ ಮೂಲಕ ಲಕ್ಷ್ಮೇಶ್ವರದಲ್ಲೇ ಸಮರ್ಪಕ ಹಾಗೂ ಸುಸಜ್ಜಿತ ಆರೋಗ್ಯ ಸೇವೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಹಾವೇರಿ ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಹಾಗೂ ಯುವ ಮುಖಂಡ ಆನಂದ ಗಡ್ಡದೇವರಮಠ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಗದಗ ಜಿಲ್ಲಾಧ್ಯಕ್ಷ ಶರಣು ಗೋಡಿ ಅವರು ಆಸ್ಪತ್ರೆಯ ಅಗತ್ಯತೆ ಕುರಿತು ಸಚಿವರಿಗೆ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಜೈನ ಸಮಾಜದ ಮುಖಂಡ ಪದ್ಮರಾಜ ಪಾಟೀಲ ಅವರು ಐತಿಹಾಸಿಕ ಶಂಖ ಬಸದಿ ಜೀರ್ಣೋದ್ಧಾರ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ನೀಡುವಂತೆ ಸಚಿವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಟಿ.ಈಶ್ವರ, ಎಸ್.ಪಿ.ಬಳಿಗಾರ, ಗುರುನಾಥ ದಾನಪ್ಪನವರ, ಜಿ.ವಿ.ಪಾಟೀಲ, ಮಹೇಶ ಲಮಾಣಿ, ದೀಪಕ ಲಮಾಣಿ, ರಾಜು ಪಾಟೀಲ, ಜಿ.ಆರ್.ಕೊಪ್ಪದ, ನಾಗರಾಜ ಮಡಿವಾಳರ, ಯಲ್ಲಪ್ಪ ತಳವಾರ, ರಾಜು ಕುಂಬಿ, ಅಂಬರೀಶ ತೆಂಬದಮನಿ, ವಿರೂಪಾಕ್ಷ ನಂದೆಣ್ಣವರ, ಸೋಮಣ್ಣ ಬೆಟಗೇರಿ, ಎಂ.ಎಂ.ಗಾಡಗೋಳಿ, ಮುತ್ತಣ್ಣ ಗಡೆಪ್ಪನವರ, ಪರಮೇಶ ಲಮಾಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ತಾಲೂಕು ಕೇಂದ್ರವಾಗಿ ಒಂಬತ್ತು ವರ್ಷ ಕಳೆದಿರುವ ಲಕ್ಷ್ಮೇಶ್ವರದಲ್ಲಿ ಜನಸಂಖ್ಯೆ ಹಾಗೂ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ೩೦ ಹಾಸಿಗೆಗಳ ವ್ಯವಸ್ಥೆಯಲ್ಲಿ ೪೦೦ಕ್ಕೂ ಹೆಚ್ಚು ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ನೀಡುವುದು ಕಷ್ಟವಾಗಿದ್ದು, ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವುದು ಅತ್ಯಗತ್ಯವಾಗಿದೆ.

— ಆನಂದ ಗಡ್ಡದೇವರಮಠ, ಯುವ ಮುಖಂಡ

ಉತ್ತಮ ಶಿಕ್ಷಕರು ಪ್ರಭಾವ ಬೀರುವ ಶಕ್ತಿಗಳು: ಕವಿತಾ ದಂಡಿನ

0

ವಿಜಯಸಾಕ್ಷಿ ಸುದ್ದಿ, ಗದಗ: ಶಿಕ್ಷಕರು ಕೇವಲ ಪಾಠ ಬೋಧನೆಗೆ ಸೀಮಿತರಲ್ಲ. ವಿದ್ಯಾರ್ಥಿಗಳ ಜ್ಞಾನಾಭಿವೃದ್ಧಿ, ವ್ಯಕ್ತಿತ್ವ ವಿಕಸನ, ಚಿಂತನಶೀಲತೆ ಹಾಗೂ ಜೀವನ ಮೌಲ್ಯಗಳನ್ನು ರೂಪಿಸುವ ಮೂಲಕ ಆಧುನಿಕ ಸಮಾಜದ ನಿರ್ಮಾತರಾಗಿದ್ದಾರೆ ಎಂದು ಸಂಪನ್ಮೂಲ ವ್ಯಕ್ತಿ ಕವಿತಾ ದಂಡಿನ ಹೇಳಿದರು.

ನಗರದ ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರದ ವತಿಯಿಂದ ಶನಿವಾರ ತೋಂಟದಾರ್ಯ ಮಠದ ಅನುಭವ ಮಂಟಪದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ‘ಶಿಕ್ಷಕರು ಆಧುನಿಕ ಸಮಾಜದ ನಿರ್ಮಾತರು’ ವಿಷಯ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡಿದರು.

ಉತ್ತಮ ಶಿಕ್ಷಕರು ಪ್ರಭಾವ ಬೀರುವ ಶಕ್ತಿಗಳಾಗಿದ್ದು, ಅವರ ಪ್ರಭಾವ ಒಬ್ಬ ವಿದ್ಯಾರ್ಥಿಯ ಜೀವನಕ್ಕೆ ಮಾತ್ರ ಸೀಮಿತವಾಗುವುದಿಲ್ಲ. ಶಿಕ್ಷಕರಿಂದ ಜ್ಞಾನ ಪಡೆದ ಮಕ್ಕಳು ಮುಂದೆ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಾರೆ. ಹೀಗಾಗಿ ಶಿಕ್ಷಕರು ರಾಷ್ಟ್ರದ ಉಜ್ವಲ ಭವಿಷ್ಯಕ್ಕೆ ಮಕ್ಕಳನ್ನು ಸಿದ್ಧಪಡಿಸುವ ಶಕ್ತಿಯಾಗಿದ್ದಾರೆ ಎಂದರು.

ಮೈಸೂರಿನ ವಿವೇಕಾನಂದ ಯೋಗ ಎಜುಕೇಷನ್ ಆ್ಯಂಡ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನಿಂದ ‘ರಾಜಯೋಗಿ ಟಿ. ಕೃಷ್ಣಮಾಚಾರ್ಯ ಪ್ರಶಸ್ತಿ-೨೦೨೬’ ಪಡೆದ ಗದಗದ ಯೋಗಾಚಾರ್ಯ ಕೆ.ಎಸ್. ಪಲ್ಲೇದ ಮಾತನಾಡಿ, ಉತ್ತಮ ಶಿಕ್ಷಕರು ಉತ್ತಮ ವಿದ್ಯಾರ್ಥಿಗಳನ್ನು ರೂಪಿಸುವ ಮೂಲಕ ಸಮಾಜ ನಿರ್ಮಾಣದ ಕೈಂಕರ್ಯಕ್ಕೆ ಅಣಿಯಾಗುತ್ತಾರೆ. ವಿದ್ಯಾರ್ಥಿಗಳನ್ನು ಮೌಲ್ಯಯುತ ನಾಗರಿಕರನ್ನಾಗಿ ರೂಪಿಸಿದಾಗ ಉತ್ತಮ ನಾಗರಿಕರಿಂದ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಶಿಕ್ಷಕರು ಸಮಾಜದ ಮಾರ್ಗದರ್ಶಕರಾಗಿ ಜ್ಞಾನ ದೀವಿಗೆ ಬೆಳಗಿಸುವ ನಿರಂತರ ಜ್ಯೋತಿಗಳಾಗಿದ್ದಾರೆ ಎಂದರು.

ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರದ ವತಿಯಿಂದ ಗದಗ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ ವಿಜೇತೆ ಶ್ರೀಮತಿ ಭಾರತಿ ಕುಲಕರ್ಣಿ, ಸಂಪನ್ಮೂಲ ವ್ಯಕ್ತಿ ಕವಿತಾ ದಂಡಿನ, ಯೋಗಾಚಾರ್ಯ ಕೆ.ಎಸ್. ಪಲ್ಲೇದ ಹಾಗೂ ಯೋಗ ಶಿಕ್ಷಕರಾದ ಸುನಂದಾ ಜಾನೋಪಂತರ, ಜಯಶ್ರೀ ಡಾವಣಗೆರೆ, ಲಕ್ಷ್ಮೀ ನಿಡವಣಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನಿತರು ಕೃತಜ್ಞತೆ ವ್ಯಕ್ತಪಡಿಸಿ ಮಾತನಾಡಿದರು.

ಅರುಣಾ ಹಳಕಟ್ಟಿ ವಚನ ಪ್ರಾರ್ಥನೆ ನೆರವೇರಿಸಿದರು. ಶಾರದಾ ಬೊಮ್ಮಸಾಗರ ನಿರೂಪಿಸಿದರು. ರೇಣುಕಾ ಅಮಾತ್ಯ ಹಾಗೂ ಶಶಿಕಲಾ ಮಾಲೀಪಾಟೀಲ ಪರಿಚಯಿಸಿದರು. ಸುಗ್ಗಲಾ ಯಳಮಲಿ ಕಾರ್ಯಕ್ರಮ ನಿರ್ವಹಿಸಿದರು. ಪುಷ್ಪಾ ಬಂಡಾರಿ ವಂದಿಸಿದರು.

ಗೌರವಾಧ್ಯಕ್ಷರಾದ ನಿರ್ಮಲಾ ಪಾಟೀಲ, ಅಕ್ಕಮಹಾದೇವಿ ಚಟ್ಟಿ, ಸದಸ್ಯರಾದ ಶೀಲಾ ಗೋಟಡಕಿ, ಶಾರದಾ ಸಜ್ಜನರ, ಜಯಶ್ರೀ ಹುಬ್ಬಳ್ಳಿ, ಅಕ್ಕಮ್ಮ ವಸ್ತ್ರದ, ಶಕುಂತಲಾ ಹಿರೇಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಿಕೆಟ್ ದರದ ಜೊತೆಗೆ ಜಾಹೀರಾತಿನಿಂದಲೂ ಆದಾಯ ಹೆಚ್ಚಿಸಿಕೊಳ್ಳಲು BMTC ಪ್ಲ್ಯಾನ್!

0

ಬೆಂಗಳೂರು: ಟಿಕೆಟ್ ದರದ ಹೊರತಾಗಿ ಜಾಹೀರಾತುಗಳ ಮೂಲಕವೂ ಆದಾಯ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಹೊಸ ಯೋಜನೆಗೆ ಮುಂದಾಗಿದೆ. ನಗರದ ಬಿಎಂಟಿಸಿ ಬಸ್‌ಗಳಲ್ಲಿ ಆಡಿಯೋ ಜಾಹೀರಾತು ವ್ಯವಸ್ಥೆ ಅಳವಡಿಸಿ ನಿರ್ವಹಿಸಲು ಸಂಸ್ಥೆ ಕಳೆದ ವಾರ ಟೆಂಡರ್ ಕರೆದಿದೆ. ಹೀಗಾಗಿ ಇನ್ನು ಮುಂದೆ ಬಿಎಂಟಿಸಿ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರು ತಮ್ಮ ಪ್ರಯಾಣದ ವೇಳೆ ಜಾಹೀರಾತುಗಳನ್ನೂ ಕೇಳಬೇಕಾಗಬಹುದು.

ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ ಸಂಚರಿಸುವ 300 ನಾನ್‌-ಎಸಿ ಬಿಎಂಟಿಸಿ ಬಸ್‌ಗಳಲ್ಲಿ ಆಡಿಯೋ ಜಾಹೀರಾತುಗಳನ್ನು ಪ್ರಸಾರ ಮಾಡಲು ಉದ್ದೇಶಿಸಲಾಗಿದೆ. ಟೆಂಡರ್‌ನಲ್ಲಿ ಆಯ್ಕೆಯಾಗುವ ಏಜೆನ್ಸಿಯು ಸಂಪೂರ್ಣ ವ್ಯವಸ್ಥೆಯನ್ನು ಪೂರೈಸುವುದು, ಅಳವಡಿಸುವುದು, ನಿರ್ವಹಣೆ ಹಾಗೂ ಕಾರ್ಯಾಚರಣೆಯ ಜವಾಬ್ದಾರಿ ವಹಿಸಬೇಕಾಗುತ್ತದೆ.

ದಕ್ಷಿಣ ಭಾರತದಲ್ಲೇ ಮೊದಲ ಪ್ರಯತ್ನ

ಬಿಎಂಟಿಸಿ ಪ್ರಕಾರ, ದಕ್ಷಿಣ ಭಾರತದಲ್ಲೇ ಇದೇ ಮೊದಲ ಬಾರಿಗೆ ಸಾರ್ವಜನಿಕ ಸಾರಿಗೆ ಬಸ್‌ಗಳಲ್ಲಿ ಈ ರೀತಿಯ ಆಡಿಯೋ ಜಾಹೀರಾತು ವ್ಯವಸ್ಥೆ ಜಾರಿಗೆ ಬರಲಿದೆ. ಬಿಎಂಟಿಸಿಯ ಸಾಮಾನ್ಯ, ಎಕ್ಸ್‌ಪ್ರೆಸ್ ಹಾಗೂ ರಾತ್ರಿ ಸೇವೆಯ ಬಸ್‌ಗಳಲ್ಲಿ ಜಾಹೀರಾತುಗಳನ್ನು ಪ್ರಸಾರ ಮಾಡಲು ಯೋಜಿಸಲಾಗಿದೆ.

ಕನ್ನಡದ ಪ್ರತಿ ಆಡಿಯೋ ಜಾಹೀರಾತಿನ ಸ್ಲಾಟ್ ಗರಿಷ್ಠ 10 ಸೆಕೆಂಡ್‌ಗಳವರೆಗೆ ಇರಲಿದೆ. ಜಾಹೀರಾತಿನ ಇಂಗ್ಲಿಷ್ ಅನುವಾದ ಐಚ್ಛಿಕವಾಗಿರಲಿದೆ. ಪ್ರತಿ ಬಸ್‌ಗೆ ಮಾಸಿಕ ಶುಲ್ಕ ವಿಧಿಸುವ ವ್ಯವಸ್ಥೆ ಇರಲಿದ್ದು, ಆಯ್ಕೆಯಾಗುವ ಸಂಸ್ಥೆಗೆ ಮೂರು ವರ್ಷಗಳ ಗುತ್ತಿಗೆ ನೀಡಲಾಗುತ್ತದೆ. ಬಳಿಕ ಗುತ್ತಿಗೆಯನ್ನು ವಿಸ್ತರಿಸುವ ಅವಕಾಶವೂ ಇರಲಿದೆ.

GPS ಜೊತೆ ಜಾಹೀರಾತು ವ್ಯವಸ್ಥೆ ಸಂಯೋಜನೆ

ಈಗಾಗಲೇ ಬಿಎಂಟಿಸಿ ಬಸ್‌ಗಳಲ್ಲಿ ಅಳವಡಿಸಲಾಗಿರುವ GPS ವ್ಯವಸ್ಥೆಯೊಂದಿಗೆ ಆಡಿಯೋ ಜಾಹೀರಾತು ವ್ಯವಸ್ಥೆಯನ್ನು ಸಂಯೋಜಿಸಲು ಯೋಜಿಸಲಾಗಿದೆ. ಇದರ ಮೂಲಕ ಸ್ಥಳ ಆಧಾರಿತ ಜಾಹೀರಾತುಗಳನ್ನು ಪ್ರಸಾರ ಮಾಡಲು ಸಂಸ್ಥೆ ಉದ್ದೇಶಿಸಿದೆ.

ಆದರೆ ಪ್ರಯಾಣಿಕರ ನಿಲ್ದಾಣಗಳ ಘೋಷಣೆಗಳಿಗೆ ಯಾವುದೇ ರೀತಿಯ ಅಡ್ಡಿಯಾಗದಂತೆ ಜಾಹೀರಾತುಗಳನ್ನು ಪ್ರಸಾರ ಮಾಡಲಾಗುತ್ತದೆ ಎಂದು ಬಿಎಂಟಿಸಿ ತಿಳಿಸಿದೆ. ಒಟ್ಟು ಜಾಹೀರಾತು ಪ್ರಸಾರದ ಸಮಯದಲ್ಲಿ ಶೇ.10ರಷ್ಟು ಸಮಯವನ್ನು ಬಿಎಂಟಿಸಿ ತನ್ನದೇ ಘೋಷಣೆಗಳು, ಸಾರ್ವಜನಿಕ ಸೇವಾ ಸಂದೇಶಗಳು ಹಾಗೂ ಅಧಿಕೃತ ಮಾಹಿತಿಗಾಗಿ ಮೀಸಲಿಡಲಿದೆ. ಮುಂದಿನ ದಿನಗಳಲ್ಲಿ ಈ ಸೇವೆಯನ್ನು ಇನ್ನಷ್ಟು ಬಿಎಂಟಿಸಿ ಬಸ್‌ಗಳಿಗೆ ವಿಸ್ತರಿಸುವ ಉದ್ದೇಶವನ್ನೂ ಸಂಸ್ಥೆ ಹೊಂದಿದೆ ಎನ್ನಲಾಗಿದೆ.

ಪ್ರಯಾಣಿಕರಿಗೆ ತೊಂದರೆಯಾಗದಂತೆ ನಿಯಂತ್ರಣ?

ಆಡಿಯೋ ಜಾಹೀರಾತುಗಳಿಂದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಧ್ವನಿಯ ಪ್ರಮಾಣ, ಜಾಹೀರಾತುಗಳ ಗುಣಮಟ್ಟ ಹಾಗೂ ಭಾಷಾ ನಿಯಮಗಳನ್ನು ನಿಯಂತ್ರಿಸುವುದಾಗಿ ಬಿಎಂಟಿಸಿ ಭರವಸೆ ನೀಡಿದೆ.

ಆದರೆ, ಬಸ್ ಪ್ರಯಾಣದ ವೇಳೆ ನಿರಂತರವಾಗಿ ಜಾಹೀರಾತುಗಳು ಪ್ರಸಾರವಾಗುವುದರಿಂದ ಪ್ರಯಾಣಿಕರಿಗೆ ಕಿರಿಕಿರಿಯಾಗಬಹುದು ಎಂಬ ಆತಂಕವೂ ವ್ಯಕ್ತವಾಗಿದೆ. ವಿಶೇಷವಾಗಿ ಪೀಕ್ ಅವರ್‌ಗಳಲ್ಲಿ ಜಾಹೀರಾತುಗಳು ಜೋರಾಗಿ ಪ್ರಸಾರವಾದರೆ, ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಸಂಘರ್ಷಕ್ಕೂ ಕಾರಣವಾಗಬಹುದು ಎಂಬ ಅಭಿಪ್ರಾಯ ಕೇಳಿಬಂದಿದೆ.

ಅದರಲ್ಲೂ ಬಸ್ ನಿಲ್ದಾಣಗಳ ಘೋಷಣೆಗಳು ಪ್ರಯಾಣಿಕರಿಗೆ ಸ್ಪಷ್ಟವಾಗಿ ಕೇಳಿಸುವಂತಿರಬೇಕು. ಯಾವುದೇ ಕಾರಣಕ್ಕೂ ಜಾಹೀರಾತುಗಳಿಂದ ನಿಲ್ದಾಣದ ಮಾಹಿತಿ ಅಥವಾ ಸಾರ್ವಜನಿಕ ಸುರಕ್ಷತೆಗೆ ಸಂಬಂಧಿಸಿದ ಘೋಷಣೆಗಳಿಗೆ ಅಡ್ಡಿಯಾಗಬಾರದು ಎಂಬುದು ಪ್ರಯಾಣಿಕರ ಪ್ರಮುಖ ಬೇಡಿಕೆಯಾಗಿದೆ ಎಂದು ವರದಿಯಾಗಿದೆ.

ಬಿಜೆಪಿ ಮಾತು ಕೇಳಿ ಶಿಸ್ತುಕ್ರಮ ಕೈಗೊಳ್ಳಲು ಸಾಧ್ಯವಿಲ್ಲ: ತೀರ್ಮಾನ ಮಾಡೋದು SP ಅಲ್ಲ, ನಾನು ಎಂದ ಪ್ರಿಯಾಂಕ್ ಖರ್ಗೆ

0

ಬೆಂಗಳೂರು: ಮೈಸೂರು ಜಿಲ್ಲೆಯ ಟಿ. ನರಸೀಪುರ ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ಅವರ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಹೂಡಿರುವ ‘ಅಮಾನತು’ ಅಸ್ತ್ರಕ್ಕೆ ರಾಜ್ಯ ಸರ್ಕಾರ ಮಣಿಯುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಬಿಜೆಪಿಯವರು ಆಗ್ರಹಿಸಿದ್ದಾರೆ ಎಂಬ ಕಾರಣಕ್ಕೆ ತಕ್ಷಣವೇ ಅಧಿಕಾರಿಯನ್ನು ಅಮಾನತು ಮಾಡಲು ಸಾಧ್ಯವಿಲ್ಲ ಎಂದು ಅವರು ಖಡಕ್ ತಿರುಗೇಟು ನೀಡಿದ್ದಾರೆ.

ಗಣೇಶ ಮೆರವಣಿಗೆ ಭದ್ರತೆ ಹಾಗೂ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ್ ಅವರ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, “ಬಿಜೆಪಿಯವರು ಹೇಳಿದಂತೆ ನಾವು ಕೇಳಲು ಅಥವಾ ಆಡಳಿತ ನಡೆಸಲು ಸಾಧ್ಯವಿಲ್ಲ. ಅವರ ಮಾತಿಗೆ ಮಣಿದು ಅಧಿಕಾರಿಯನ್ನು ಅಮಾನತು ಮಾಡುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದ್ದಾರೆ.

ಇನ್‌ಸ್ಪೆಕ್ಟರ್ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ವಿಚಾರದಲ್ಲಿ ಎಸ್‌ಪಿ ವರದಿಯ ಬಳಿಕ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ಸಚಿವರು ತಿಳಿಸಿದ್ದಾರೆ. ಎಸ್‌ಪಿ ವರದಿ ನೀಡಿದ ನಂತರ ಅದನ್ನು ಪರಿಶೀಲಿಸಿ ಮುಂದಿನ ಕ್ರಮದ ಬಗ್ಗೆ ತೀರ್ಮಾನಿಸಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಗಣೇಶೋತ್ಸವ, ಈದ್ ಸೇರಿದಂತೆ ಎಲ್ಲ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಲು ಸರ್ಕಾರ ಮತ್ತು ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವರು ಹೇಳಿದ್ದಾರೆ. ಹಬ್ಬಗಳ ವಿಚಾರದಲ್ಲಿ ವಿರೋಧ ಪಕ್ಷಗಳು ಅನಗತ್ಯವಾಗಿ ವಿವಾದ ಸೃಷ್ಟಿಸುವುದನ್ನು ಬಿಟ್ಟು, ಜನರು ಶಾಂತಿಯುತವಾಗಿ ಹಬ್ಬ ಆಚರಿಸಲು ಅವಕಾಶ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಇದೇ ವೇಳೆ ಮಾಜಿ ಗೃಹ ಸಚಿವ ಆರ್. ಅಶೋಕ್ ಅವರನ್ನೂ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. “ಆರ್. ಅಶೋಕ್ ಗೃಹ ಸಚಿವರಾಗಿದ್ದಾಗ ಇಂತಹ ಶಾಂತಿ ಸಭೆಗಳನ್ನು ನಡೆಸಿ ನಿಯಮಾವಳಿಗಳನ್ನು ರೂಪಿಸಿರಲಿಲ್ಲವೇ? ಅಂದು ಇದ್ದ ನಿಯಮಗಳೇ ಇಂದೂ ಇವೆ” ಎಂದು ಹೇಳಿದ್ದಾರೆ.

ಮೈಸೂರಿನ ಬಿಜೆಪಿ ನಾಯಕರ ವಿರುದ್ಧವೂ ವಾಗ್ದಾಳಿ ನಡೆಸಿದ ಸಚಿವರು, ಠಾಣೆಗೆ ನುಗ್ಗುತ್ತೇವೆ ಎಂದು ಬೆದರಿಕೆ ಹಾಕುವ ಬದಲು ಕಾನೂನು ಪಾಲಿಸಬೇಕು ಎಂದು ಹೇಳಿದ್ದಾರೆ. “ಅವರದೇ ಸರ್ಕಾರ ಇದ್ದಾಗ ಯಾರಾದರೂ ಠಾಣೆಗೆ ನುಗ್ಗುತ್ತೇವೆ ಎಂದಿದ್ದರೆ ಸುಮ್ಮನಿರುತ್ತಿದ್ದರಾ?” ಎಂದು ಪ್ರಶ್ನಿಸಿದ್ದಾರೆ.

ಹಬ್ಬದ ದಿನಗಳಲ್ಲಿ ಪೊಲೀಸರು ತಮ್ಮ ಕುಟುಂಬ ಹಾಗೂ ಹಬ್ಬ-ಹರಿದಿನಗಳನ್ನು ಬದಿಗಿಟ್ಟು ಸಾರ್ವಜನಿಕರ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸುತ್ತಾರೆ. ಹೀಗಾಗಿ ಸಾರ್ವಜನಿಕರು ಹಾಗೂ ಮೆರವಣಿಗೆ ಆಯೋಜಕರು ಪೊಲೀಸರ ಸೂಚನೆಗಳನ್ನು ಗೌರವಿಸಿ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಯಾವುದೇ ಆಚರಣೆಯಿಂದ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಬಾರದು ಎಂದು ಅವರು ತಿಳಿಸಿದ್ದಾರೆ.

ಇನ್‌ಸ್ಪೆಕ್ಟರ್ ಹೇಳಿಕೆ ಬಗ್ಗೆ ಸಚಿವರ ಸಮರ್ಥನೆ

ಟಿ. ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಇನ್‌ಸ್ಪೆಕ್ಟರ್ ಸ್ವಲ್ಪ ಖಾರವಾಗಿ ಮಾತನಾಡಿರಬಹುದು. ಆದರೆ ಮೆರವಣಿಗೆಗೆ ಹಲವು ಮಾರ್ಗಗಳಿದ್ದು, ನಿಯಮಗಳನ್ನು ಪಾಲಿಸುವುದು ಮುಖ್ಯ ಎಂದು ಹೇಳಿದ್ದಾರೆ.

“ನಿರ್ದಿಷ್ಟ ಸೂಕ್ಷ್ಮ ಸ್ಥಳದಲ್ಲೇ ಪಟಾಕಿ ಹಚ್ಚುವುದು ಏಕೆ ಎಂಬ ಪ್ರಶ್ನೆ ಬರುತ್ತದೆ” ಎಂದು ಸಚಿವರು ಹೇಳಿದ್ದಾರೆ. ಕಳೆದ ಮೂರು ವರ್ಷಗಳಿಂದ ಧನಂಜಯ್ ಅವರು ಅದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಸ್ಥಳೀಯ ಸೂಕ್ಷ್ಮತೆ ಹಾಗೂ ಹಿಂದಿನ ವರ್ಷ ಉಂಟಾಗಿದ್ದ ಗೊಂದಲಗಳ ಬಗ್ಗೆ ಅವರಿಗೆ ಸ್ಪಷ್ಟ ಅರಿವಿದೆ ಎಂದು ತಿಳಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸರು ನೀಡಿದ ಸೂಚನೆಗಳನ್ನೇ ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿದ ಅವರು, ಶಾಂತಿ ಕದಡಲು ಯತ್ನಿಸುತ್ತಿರುವವರು ಯಾರು ಎಂಬುದನ್ನು ತಿಳಿಯಲು ಬಿಜೆಪಿಯವರು ಮೊದಲು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಮಾತುಗಳನ್ನು ಕೇಳಲಿ ಎಂದು ಲೇವಡಿ ಮಾಡಿದ್ದಾರೆ.