Home Blog

ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಬಗ್ಗೆ ಇನ್ನೂ ನಿರ್ಧಾರ ಇಲ್ಲ; ಪಕ್ಷದ ನಾಯಕರ ಜೊತೆ ಚರ್ಚಿಸಿ ತೀರ್ಮಾನ – ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ. ಈ ವಿಚಾರವಾಗಿ ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಹೊರಟ್ಟಿ, “ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ನಾನು ಇನ್ನೂ ನಿರ್ಧಾರ ಮಾಡಿಲ್ಲ. ಈ ರೀತಿಯ ಬೆಳವಣಿಗೆ ಈ ಹಿಂದೆ ನಡೆದಿರುವ ಉದಾಹರಣೆ ಇಲ್ಲ. ನಮ್ಮ ಪಕ್ಷದ ನಾಯಕರೊಂದಿಗೆ ಚರ್ಚಿಸಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ” ಎಂದು ಹೇಳಿದರು.

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರೆ ಮಾಡಿ ರಾಜೀನಾಮೆ ನೀಡುವಂತೆ ತಿಳಿಸಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನಮ್ಮ ವರಿಷ್ಠರು ಸಭಾಪತಿ ಮತ್ತು ಉಪಸಭಾಪತಿ ಸ್ಥಾನಗಳಿಗೆ ಹೊಸ ಹೆಸರುಗಳನ್ನು ಆಯ್ಕೆ ಮಾಡಿದ್ದಾರೆ. ಹೀಗಾಗಿ ನೀವು ರಾಜೀನಾಮೆ ನೀಡಬೇಕು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ” ಎಂದರು.

“ಮೊದಲು ಅಧಿಕೃತ ನೋಟಿಸ್ ನೀಡಲಿ. ಅದರ ನಂತರ ಪರಿಸ್ಥಿತಿಯನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇನೆ. ಸದನ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಸಂಪೂರ್ಣ ಗೌರವ ನೀಡುತ್ತೇನೆ. ಆದರೆ ಈ ಬೆಳವಣಿಗೆ ನನಗೆ ವೈಯಕ್ತಿಕವಾಗಿ ನೋವು ತಂದಿದೆ” ಎಂದು ಹೊರಟ್ಟಿ ಹೇಳಿದರು.

‘ನೀವೇ ನಿರ್ಮಾಪಕರಾಗಿ’… ಜಯಣ್ಣ-ಭೋಗೇಂದ್ರ ಬದುಕು ಬದಲಿಸಿದ ವಿಜಯಲಕ್ಷ್ಮಿ ದರ್ಶನ್ ಸಲಹೆ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಯಶಸ್ವಿ ನಿರ್ಮಾಪಕರಾಗಿ ಗುರುತಿಸಿಕೊಂಡಿರುವ ಜಯಣ್ಣ-ಭೋಗೇಂದ್ರ ಅವರ ಸಿನಿ ಪಯಣದ ಹಿಂದೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರ ಪ್ರೇರಣೆ ಅಡಗಿದೆ. ಈ ಅಚ್ಚರಿಯ ಸಂಗತಿಯನ್ನು ಅವರು ಇತ್ತೀಚಿನ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ.

ದರ್ಶನ್ ನಟನೆಯ ‘ಸ್ನೇಹನಾ ಪ್ರೀತಿನಾ’ ಹಾಗೂ ‘ಭೂಪತಿ’ ಸಿನಿಮಾಗಳ ವಿದೇಶಿ ಚಿತ್ರೀಕರಣದ ವೇಳೆ ಆಸ್ಟ್ರೇಲಿಯಾದಲ್ಲಿ ವಿಜಯಲಕ್ಷ್ಮಿ ದರ್ಶನ್ ಅವರು, ‘ಇತರರ ಸಿನಿಮಾಗಳನ್ನು ವಿತರಣೆ ಮಾಡುವ ಬದಲು ನೀವೇ ನಿರ್ಮಾಪಕರಾಗಿ. ಹಣ ಹೂಡಿ ಸಿನಿಮಾ ಮಾಡಿ. ಕಾಲ್‌ಶೀಟ್ ನಮ್ಮದು’ ಎಂದು ಸಲಹೆ ನೀಡಿದ್ದರು ಎಂದು ಜಯಣ್ಣ ಹೇಳಿದ್ದಾರೆ.

ಆ ವೇಳೆ ನಿರ್ಮಾಪಕರಾಗುವ ಉದ್ದೇಶವೇ ಇರಲಿಲ್ಲ. ಸಿನಿಮಾ ನಿರ್ಮಾಣದಲ್ಲಿ ದೊಡ್ಡ ರಿಸ್ಕ್ ಇರುವುದರಿಂದ ವಿತರಣೆ ವ್ಯವಹಾರದಲ್ಲೇ ಮುಂದುವರಿಯಲು ನಿರ್ಧರಿಸಿದ್ದೆವು. ಆದರೆ ವಿಜಯಲಕ್ಷ್ಮಿ ಅವರ ವಿಶ್ವಾಸ ಮತ್ತು ಪ್ರೋತ್ಸಾಹವೇ ನಮ್ಮ ನಿರ್ಧಾರವನ್ನು ಬದಲಿಸಿತು. ಅದರ ಫಲವಾಗಿ ‘ಅರ್ಜುನ್’ ಚಿತ್ರದ ಮೂಲಕ ನಿರ್ಮಾಪಕರಾಗಿ ಹೊಸ ಅಧ್ಯಾಯ ಆರಂಭವಾಯಿತು ಎಂದು ಅವರು ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಆ ಸಹಾಯವನ್ನು ಎಂದಿಗೂ ಮರೆಯದ ಜಯಣ್ಣ-ಭೋಗೇಂದ್ರ, ‘ಅರ್ಜುನ್’ ಚಿತ್ರದ ಟೈಟಲ್‌ನಲ್ಲಿ ‘ವಿಜಯಲಕ್ಷ್ಮಿ ದರ್ಶನ್ ಪ್ರೆಸೆಂಟ್ಸ್’ ಎಂದು ವಿಶೇಷ ಕ್ರೆಡಿಟ್ ನೀಡಿ ಕೃತಜ್ಞತೆ ಸಲ್ಲಿಸಿದ್ದರು. ಆ ದಿನದಿಂದ ಇಂದಿನವರೆಗೆ ನಿರ್ಮಾಣ ಕ್ಷೇತ್ರದಲ್ಲಿ ಯಶಸ್ವಿಯಾಗಿ ಸಾಗುತ್ತಿರುವುದಾಗಿ ಭೋಗೇಂದ್ರ ಹೇಳಿದ್ದಾರೆ.

ಸುಬ್ಬಾರೆಡ್ಡಿಗೆ ಸಚಿವ ಸ್ಥಾನ ಸಿಗದ ಕೋಪ: ನಾಳೆ ಬಾಗೇಪಲ್ಲಿ ಬಂದ್‌, ಕಾಂಗ್ರೆಸ್ ಪದಾಧಿಕಾರಿಗಳ ರಾಜೀನಾಮೆ ಎಚ್ಚರಿಕೆ

ಚಿಕ್ಕಬಳ್ಳಾಪುರ: ಸಚಿವ ಸಂಪುಟ ವಿಸ್ತರಣೆಯಲ್ಲಿ ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ಸಿಗದ ಬೆನ್ನಲ್ಲೇ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ಬಂಡಾಯದ ಕಹಳೆ ಮೊಳಗಿದೆ. ಬೆಂಬಲಿಗರು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಬಂದ್‌ಗೆ ಕರೆ ನೀಡಿದ್ದು, ಕಾಂಗ್ರೆಸ್‌ನ ವಿವಿಧ ಘಟಕಗಳ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ಸಲ್ಲಿಸುವ ಎಚ್ಚರಿಕೆ ನೀಡಿದ್ದಾರೆ.

ಶಾಸಕರ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಾಗೇಪಲ್ಲಿ, ಗುಡಿಬಂಡೆ ಮತ್ತು ಚೇಳೂರು ತಾಲೂಕುಗಳಲ್ಲಿ ಬುಧವಾರ ಸಂಪೂರ್ಣ ಬಂದ್ ನಡೆಸುವ ನಿರ್ಧಾರ ಕೈಗೊಳ್ಳಲಾಯಿತು.

ಈ ವೇಳೆ ಮಾತನಾಡಿದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನರೇಂದ್ರ, “ಬಿಜೆಪಿಯ ಆಪರೇಷನ್ ಕಮಲದ ಆಮಿಷವನ್ನೂ ತಿರಸ್ಕರಿಸಿ ಕಾಂಗ್ರೆಸ್‌ಗೆ ನಿಷ್ಠೆಯಿಂದ ಉಳಿದ ಸುಬ್ಬಾರೆಡ್ಡಿಗೆ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ. ಸಚಿವ ಸ್ಥಾನ ನೀಡದೇ ಪಕ್ಷ ಅವಮಾನ ಮಾಡಿದೆ” ಎಂದು ಕಿಡಿಕಾರಿದರು.

“ಈ ನಿರ್ಧಾರದಿಂದ ಕಾರ್ಯಕರ್ತರ ಭಾವನೆಗೆ ಧಕ್ಕೆಯಾಗಿದೆ. ಅದರ ವಿರುದ್ಧ ಪ್ರತಿಭಟನೆಯ ಭಾಗವಾಗಿ ಕಾಂಗ್ರೆಸ್‌ನ ವಿವಿಧ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸುತ್ತೇವೆ. ಕ್ಷೇತ್ರ ಬಂದ್ ಮೂಲಕ ನಮ್ಮ ಆಕ್ರೋಶ ವ್ಯಕ್ತಪಡಿಸುತ್ತೇವೆ” ಎಂದು ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ.

‘ಮಂತ್ರಿಗಿರಿ ಹಣದ ಆಟ’: ಕಾಂಗ್ರೆಸ್-ಬಿಜೆಪಿ ಎರಡರ ಮೇಲೂ ಯತ್ನಾಳ್ ವಾಗ್ದಾಳಿ

0

ವಿಜಯಪುರ: ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳ ವಿರುದ್ಧ ಸ್ಫೋಟಕ ಆರೋಪಗಳ ಸುರಿಮಳೆಗೈದಿದ್ದಾರೆ. “ರಾಜ್ಯದ ಸಚಿವ ಸಂಪುಟ ಗುಂಡಾಗಳ ಗೂಡಾಗಿದೆ. ಕ್ರಿಮಿನಲ್ ಹಿನ್ನೆಲೆಯವರಿಗೆ ಮಂತ್ರಿಗಿರಿ ನೀಡಿ ಕಾಂಗ್ರೆಸ್ ಸರ್ಕಾರ ತಪ್ಪು ಸಂದೇಶ ನೀಡಿದೆ” ಎಂದು ವಾಗ್ದಾಳಿ ನಡೆಸಿದರು.

“ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ರೂಪಿಸಿರುವ ಇದು ಅತ್ಯಂತ ಕೆಟ್ಟ ಸಚಿವ ಸಂಪುಟ. ಪ್ರಮುಖ ನಾಯಕರನ್ನು ಬದಿಗಿಟ್ಟು, ಕ್ರಿಮಿನಲ್ ಹಿನ್ನೆಲೆಯವರಿಗೆ ಅವಕಾಶ ನೀಡಿದ್ದಾರೆ. ಭ್ರಷ್ಟಾಚಾರ ಮತ್ತು ಗುಂಡಾಗಿರಿ ಆರೋಪ ಎದುರಿಸುತ್ತಿರುವವರೇ ಸರ್ಕಾರದಲ್ಲಿದ್ದಾರೆ” ಎಂದು ಟೀಕಿಸಿದರು.

ಕಾಂಗ್ರೆಸ್ ಶಾಸಕರ ರಾಜೀನಾಮೆ ಬೆದರಿಕೆಯನ್ನು ಲೇವಡಿ ಮಾಡಿದ ಯತ್ನಾಳ್, “ಇದು ಕೇವಲ ಒತ್ತಡ ತಂತ್ರ. ಯಾರೂ ರಾಜೀನಾಮೆ ಕೊಡುವುದಿಲ್ಲ. ಹೈಕಮಾಂಡ್ ಒಂದು ಕರೆ ಮಾಡಿದರೆ ಎಲ್ಲರೂ ಶಿಸ್ತಿನ ಸಿಪಾಯಿಗಳಾಗಿಬಿಡುತ್ತಾರೆ” ಎಂದು ಹೇಳಿದರು.

ವಿಜಯಪುರ ಜಿಲ್ಲೆಯ ಸಚಿವ ಸ್ಥಾನ ಹಂಚಿಕೆ ಕುರಿತು ಮಾತನಾಡಿದ ಅವರು, “ಎಂ.ಬಿ. ಪಾಟೀಲ್ ಕಾಂಗ್ರೆಸ್‌ನಲ್ಲಿ ಅತ್ಯಂತ ಪ್ರಭಾವಿ ನಾಯಕ. ಹೈಕಮಾಂಡ್ ಜೊತೆಗಿನ ಅವರ ಪ್ರಭಾವವೇ ಅವರನ್ನು ಸಚಿವರನ್ನಾಗಿಸಿದೆ” ಎಂದು ಹೇಳಿದರು.

ಇದೇ ವೇಳೆ ಬಿಜೆಪಿ ಅವಧಿಯನ್ನೂ ಉಲ್ಲೇಖಿಸಿದ ಯತ್ನಾಳ್, “ಹಣದ ರಾಜಕಾರಣ ಕಾಂಗ್ರೆಸ್‌ಗೆ ಮಾತ್ರ ಸೀಮಿತವಲ್ಲ. ಬಿಜೆಪಿ ಅವಧಿಯಲ್ಲೂ ಹೈಕಮಾಂಡ್ ಪಟ್ಟಿ ಬದಲಾಗುತ್ತಿತ್ತು. ಹಣದ ವ್ಯವಹಾರಗಳ ಮೂಲಕ ಸಚಿವ ಸ್ಥಾನ ಸಿಕ್ಕ ಉದಾಹರಣೆಗಳಿವೆ” ಎಂದು ಆರೋಪಿಸಿದರು.

ಸಿದ್ದರಾಮಯ್ಯ ಕುರಿತು ಪ್ರತಿಕ್ರಿಯಿಸಿದ ಅವರು, “ಕಾಂಗ್ರೆಸ್ ಹೈಕಮಾಂಡ್ ಈಗಲೂ ಸಿದ್ದರಾಮಯ್ಯ ಅವರನ್ನು ಕಡೆಗಣಿಸುತ್ತಿದೆ. ಅವರಿಗೆ ಸ್ವಾಭಿಮಾನ ಇದ್ದರೆ ಮುಂದಿನ ರಾಜಕೀಯ ನಿರ್ಧಾರದಲ್ಲಿ ಅದಕ್ಕೆ ಉತ್ತರ ನೀಡಬೇಕು” ಎಂದು ಹೇಳಿದರು.

ಜೆನ್-ಝೀ ವಿವಾದಕ್ಕೆ ಹೊಸ ಟ್ವಿಸ್ಟ್: ಕಂಗನಾ ವಿರುದ್ಧ ರಮ್ಯಾ ಕಿಡಿ

ನವದೆಹಲಿ: ಬಾಲಿವುಡ್‌ನಲ್ಲಿ ಕಂಗನಾ ರಣಾವತ್ ವಿರುದ್ಧ ಮತ್ತೊಂದು ವಾಗ್ವಾದ ಭುಗಿಲೆದ್ದಿದೆ. ಜೆನ್-ಝೀ ಪ್ರತಿಭಟನಾಕಾರರ ಬಗ್ಗೆ ಕಂಗನಾ ನೀಡಿದ್ದ ಹೇಳಿಕೆಯನ್ನು ಖಂಡಿಸಿರುವ ಮಾಜಿ ಸಂಸದೆ ಹಾಗೂ ನಟಿ ರಮ್ಯಾ, ಸಾಮಾಜಿಕ ಜಾಲತಾಣದಲ್ಲಿ ಕಂಗನಾ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ.

“ಗೌರವದ ಬಗ್ಗೆ ಇತರರಿಗೆ ಪಾಠ ಮಾಡುವ ಮೊದಲು ನಿಮ್ಮ ಹಳೆಯ ಹೇಳಿಕೆಗಳನ್ನು ಒಮ್ಮೆ ನೆನಪಿಸಿಕೊಳ್ಳಿ. 2026ರ ಅತಿ ದೊಡ್ಡ ವ್ಯಂಗ್ಯವೆಂದರೆ ಕಂಗನಾ ರಣಾವತ್ ಜೆನ್-ಝೀಗೆ ಗೌರವದ ಉಪದೇಶ ನೀಡುತ್ತಿರುವುದು” ಎಂದು ರಮ್ಯಾ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.

ಅಲ್ಲದೆ, “ರಾಮ ನನ್ನ ಪಾಲಿಗೆ ದೇವರು. ರಾಮಮಂದಿರದ ವಿಚಾರದಲ್ಲಿ ನನ್ನ ಧಾರ್ಮಿಕ ಭಾವನೆಗಳಿಗೆ ನೋವಾಗಿದೆ. ಆಗ ನಿಮ್ಮ ಆಕ್ರೋಶ ಎಲ್ಲಿತ್ತು?” ಎಂದು ಪ್ರಶ್ನಿಸುವ ಮೂಲಕ ಕಂಗನಾ ಅವರ ನಿಲುವಿನಲ್ಲಿರುವ ದ್ವಂದ್ವವನ್ನು ರಮ್ಯಾ ಪ್ರಶ್ನಿಸಿದ್ದಾರೆ.

ಈ ಬೆಳವಣಿಗೆಯ ನಡುವೆ ಕಂಗನಾ ರಣಾವತ್ ಎಕ್ಸ್‌ನಲ್ಲಿ “ನಾನು ಜಾಗೃತ ಹಿಂದೂ ಆಗಲು ಬಯಸುತ್ತೇನೆ. ಮುಸ್ಲಿಮರನ್ನು ಭೇಟಿಯಾಗುವ ಹಿಂದೂಗಳು ಎಡಪಂಥೀಯರಾಗುತ್ತಿದ್ದಾರೆ” ಎಂದು ಪೋಸ್ಟ್ ಮಾಡಿದ್ದಾರೆ. ಈ ಹೇಳಿಕೆ ಜೆನ್-ಝೀ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದ ನಟಿ ಸೋನಾಕ್ಷಿ ಸಿನ್ಹಾ ಅವರನ್ನು ಪರೋಕ್ಷವಾಗಿ ಗುರಿಯಾಗಿಸಿಕೊಂಡದ್ದೇ ಎಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.

ತ್ರಿಷಾ ಹೇಳಿಕೆ ವಿವಾದ; ಉದಯನಿಧಿ ಸ್ಟಾಲಿನ್ʼಗೆ ಮದ್ರಾಸ್ ಹೈಕೋರ್ಟ್ʼನಿಂದ ಸ್ಟೇಷನ್ ಬೇಲ್ ಆದೇಶ

0

ಚೆನ್ನೈ: ತಮಿಳುನಾಡು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರಿಗೆ ಮದ್ರಾಸ್ ಹೈಕೋರ್ಟ್‌ ಪರಿಹಾರ ನೀಡಿದ್ದು, ಮಂಗಳವಾರವೇ ಅವರನ್ನು ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡುವಂತೆ ತಮಿಳುನಾಡು ಪೊಲೀಸರಿಗೆ ನಿರ್ದೇಶನ ನೀಡಿದೆ.

ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿಜಯ್ ವಿರುದ್ಧ ವಾಗ್ದಾಳಿ ನಡೆಸುವ ವೇಳೆ ಉದಯನಿಧಿ ಸ್ಟಾಲಿನ್ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆಯನ್ನು ನಟಿ ತ್ರಿಷಾ ಕೃಷ್ಣನ್ ಅವರನ್ನು ಉದ್ದೇಶಿಸಿ ಮಾಡಿದ ಪರೋಕ್ಷ ದ್ವಂದ್ವಾರ್ಥದ ಹೇಳಿಕೆ ಎಂದು ಹಲವು ರಾಜಕೀಯ ಪಕ್ಷಗಳು ಆರೋಪಿಸಿದ್ದವು.

ಈ ಹಿನ್ನೆಲೆಯಲ್ಲಿ ತಮಿಳುನಾಡಿನಾದ್ಯಂತ ಉದಯನಿಧಿ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಾಗ ವೆಟ್ರಿ ಕಳಗಂ (TVK) ಸೇರಿದಂತೆ ಹಲವು ಸಂಘಟನೆಗಳು ದೂರು ದಾಖಲಿಸಿದ್ದವು.

ಮದ್ರಾಸ್ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ವೇಳೆ ತಮಿಳುನಾಡು ಅಡ್ವೊಕೇಟ್ ಜನರಲ್ ವಿಜಯ್ ನಾರಾಯಣ್ ಅವರು, ತಂಜಾವೂರು ಪೊಲೀಸರು ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಿ ತಂಜಾವೂರಿಗೆ ಕರೆದೊಯ್ದಿದ್ದಾರೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಆದರೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸುವ ಉದ್ದೇಶ ಪೊಲೀಸರಿಗೆ ಇಲ್ಲ. ವಿಚಾರಣೆ ಪೂರ್ಣಗೊಳಿಸಿದ ಬಳಿಕ ಮಂಗಳವಾರವೇ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರವೂ ನ್ಯಾಯಾಲಯಕ್ಕೆ ಇದೇ ವಿಚಾರವನ್ನು ಸ್ಪಷ್ಟಪಡಿಸಿದ್ದು, ಕೇವಲ ವಿಚಾರಣೆ ನಡೆಸಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿತ್ತು.

ಏನಿದು ವಿವಾದ?

ತಂಜಾವೂರಿನಲ್ಲಿ ಕಾವೇರಿ ನೀರಿನ ಬಿಕ್ಕಟ್ಟಿನ ಕುರಿತು ಡಿಎಂಕೆ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಉದಯನಿಧಿ ಸ್ಟಾಲಿನ್ ಮಾತನಾಡುತ್ತಿದ್ದರು.

ಈ ವೇಳೆ ಅವರು ಮುಖ್ಯಮಂತ್ರಿ ವಿಜಯ್ ವಿರುದ್ಧ ವಾಗ್ದಾಳಿ ನಡೆಸುತ್ತಾ, ಕಾವೇರಿ ನೀರಿನ ವಿಚಾರದಲ್ಲಿ ಸರ್ಕಾರ ಮೌನವಾಗಿದೆ ಎಂದು ಆರೋಪಿಸಿದ್ದರು. ಇದೇ ಸಂದರ್ಭದಲ್ಲಿ ಸಭೆಯಲ್ಲಿದ್ದ ಕೆಲವರು ನಟಿ ತ್ರಿಷಾ ಅವರ ಹೆಸರನ್ನು ಕೂಗಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಉದಯನಿಧಿ, ನಗುಮುಖದೊಂದಿಗೆ “ಯಾವ ನೀರು ಬರುತ್ತದೋ ಇಲ್ಲವೋ, ಆ ನೀರು ಬರಲೇಬೇಕು” ಎಂಬ ಅರ್ಥ ಬರುವ ರೀತಿಯಲ್ಲಿ ಹೇಳಿಕೆ ನೀಡಿದ್ದರು.

ಈ ಹೇಳಿಕೆಯು ದ್ವಂದ್ವಾರ್ಥ ಹೊಂದಿದ್ದು, ನಟಿ ತ್ರಿಷಾ ಅವರನ್ನು ಗುರಿಯಾಗಿಸಿ ಮಹಿಳೆಯನ್ನು ಅವಮಾನಿಸುವ ರೀತಿಯಲ್ಲಿದೆ ಎಂದು ಟಿವಿಕೆ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಆರೋಪಿಸಿದ್ದವು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಹೇಳಿಕೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ಮುಂದುವರಿದಿದೆ.

₹34 ಸಾವಿರ ಕೋಟಿ ಲಾಭಕ್ಕಾಗಿ ಭೂಸ್ವಾಧೀನವೇ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ, ರೈತರಿಗೆ ಸದ್ಯ ರಿಲೀಫ್

ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿ ಸ್ಮಾರ್ಟ್ ಸಿಟಿ ಯೋಜನೆಗಾಗಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದೆ. ಹೊಸೂರು ಗ್ರಾಮದ 14 ರೈತರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಏಕಸದಸ್ಯ ಪೀಠ, 2013ರ ಭೂಸ್ವಾಧೀನ ಕಾಯ್ದೆಯ ನಿಯಮಗಳನ್ನು ಸರ್ಕಾರ ಸಮರ್ಪಕವಾಗಿ ಪಾಲಿಸಿರುವುದೇ? ಎಂದು ಖಾರವಾಗಿ ಪ್ರಶ್ನೆ ಮಾಡಿದೆ.

ಅರ್ಜಿದಾರ ರೈತರ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ.ಎಚ್. ಪ್ರಕಾಶ್, “ಸೂಕ್ತ ಕಾನೂನು ಪ್ರಕ್ರಿಯೆ ಅನುಸರಿಸದೇ ಸರ್ಕಾರ ಭೂಸ್ವಾಧೀನಕ್ಕೆ ಮುಂದಾಗಿದೆ. ಈ ಯೋಜನೆಯ ಮೂಲಕ ಸರ್ಕಾರವೇ ಸುಮಾರು ₹34,000 ಕೋಟಿ ಲಾಭ ಪಡೆಯುವ ಉದ್ದೇಶ ಹೊಂದಿದೆ” ಎಂದು ವಾದಿಸಿದರು.

ಈ ವೇಳೆ ನ್ಯಾಯಪೀಠ, “ಈ ಯೋಜನೆಗೆ 2013ರ ಭೂಸ್ವಾಧೀನ ಕಾಯ್ದೆಯ ಎಲ್ಲ ನಿಯಮಗಳನ್ನು ಪಾಲಿಸಲಾಗಿದೆಯೇ? ಸೆಕ್ಷನ್ 10ಎ ಅಡಿಯಲ್ಲಿ ವಿನಾಯಿತಿ ಪಡೆಯಲು ಇದು ನಿಜವಾಗಿಯೂ ಗ್ರಾಮೀಣ ವಸತಿ ಯೋಜನೆಯೇ?” ಎಂದು ಸರ್ಕಾರವನ್ನು ಪ್ರಶ್ನಿಸಿತು.

ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, “ಬಹುತೇಕ ರೈತರು ಈಗಾಗಲೇ ಭೂಸ್ವಾಧೀನಕ್ಕೆ ಸಮ್ಮತಿ ನೀಡಿದ್ದಾರೆ. ಸೆಕ್ಷನ್ 10ಎ ಅಡಿಯಲ್ಲಿ ಅಗತ್ಯ ವಿನಾಯಿತಿ ಪಡೆಯಲಾಗಿದೆ. ಪರಿಹಾರದ ಮೊತ್ತ ಇನ್ನೂ ಅಂತಿಮವಾಗಿಲ್ಲ. ಅಂತಿಮ ತೀರ್ಮಾನವಾಗುವವರೆಗೂ ಅರ್ಜಿದಾರ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಿಲ್ಲ” ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದರು.

ಸರ್ಕಾರದ ಈ ಭರವಸೆಯನ್ನು ದಾಖಲಿಸಿಕೊಂಡ ಹೈಕೋರ್ಟ್, ಪ್ರಕರಣದ ಮುಂದಿನ ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿದೆ.

ತ್ರಿಷಾ ವಿವಾದದ ಬಳಿಕ ಉದಯನಿಧಿ ಬಂಧನ: ‘ಇದು ಸರಿಯಾದ ಕ್ರಮ’ ಎಂದ ಅಮಿತ್ ಮಾಳವೀಯ

0

ನವದೆಹಲಿ: ನಟಿ ತ್ರಿಷಾ ಕುರಿತು ಅವಹೇಳನಕಾರಿ ಹಾಗೂ ದ್ವಂದ್ವಾರ್ಥದ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ತಮಿಳುನಾಡು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಬಂಧನಕ್ಕೊಳಗಾದ ಬೆನ್ನಲ್ಲೇ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ, “ಸನಾತನ ಧರ್ಮವನ್ನು ಅವಮಾನಿಸಿದ್ದ ವ್ಯಕ್ತಿ ಈಗ ಮಹಿಳೆಯ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಕಾನೂನು ಕ್ರಮ ಎದುರಿಸುತ್ತಿದ್ದಾರೆ” ಎಂದು ಕುಟುಕಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅಮಿತ್ ಮಾಳವೀಯ, “ಮಹಿಳೆಯ ಘನತೆಗೆ ಧಕ್ಕೆ ತರುವ ರೀತಿಯ ಸಾರ್ವಜನಿಕ ಹೇಳಿಕೆಗಳಿಗೆ ಕಾನೂನು ಕ್ರಮ ಅಗತ್ಯ. ಉದಯನಿಧಿ ಬಂಧನ ಸರಿಯಾದ ಕ್ರಮ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಾವೇರಿ ಜಲ ವಿವಾದ ಕುರಿತು ತಂಜಾವೂರಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ ಉದಯನಿಧಿ ಸ್ಟಾಲಿನ್ ಮುಖ್ಯಮಂತ್ರಿ ವಿಜಯ್ ಸರ್ಕಾರವನ್ನು ಟೀಕಿಸುತ್ತಿದ್ದರು. ಇದೇ ವೇಳೆ ಸಭೆಯಲ್ಲಿ “ತ್ರಿಷಾ… ತ್ರಿಷಾ…” ಎಂಬ ಘೋಷಣೆಗಳು ಕೇಳಿಬಂದಾಗ, ಉದಯನಿಧಿ ತಮಿಳಿನಲ್ಲಿ ದ್ವಂದ್ವಾರ್ಥ ಮೂಡಿಸುವ ರೀತಿಯಲ್ಲಿ ಪ್ರತಿಕ್ರಿಯಿಸಿದ್ದರು. ಈ ಹೇಳಿಕೆ ನಟಿ ತ್ರಿಷಾ ಅವರನ್ನು ಪರೋಕ್ಷವಾಗಿ ಗುರಿಯಾಗಿಸಿ ಮಹಿಳೆಯನ್ನು ಅವಮಾನಿಸುವ ರೀತಿಯಲ್ಲಿದೆ ಎಂದು ಟಿವಿಕೆ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿ ಕ್ರಮಕ್ಕೆ ಆಗ್ರಹಿಸಿದ್ದವು.

ಪ್ರಕರಣ ದಾಖಲಾಗುತ್ತಿದ್ದಂತೆಯೇ ಪೊಲೀಸರು ಉದಯನಿಧಿಯನ್ನು ಬಂಧಿಸಿದ್ದು, ಈ ಬೆಳವಣಿಗೆ ತಮಿಳುನಾಡು ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಇದೇ ವೇಳೆ, 2023ರಲ್ಲಿ “ಸನಾತನ ಧರ್ಮವು ಡೆಂಗ್ಯೂ ಮತ್ತು ಮಲೇರಿಯಾದಂತೆ, ಅದನ್ನು ನಿರ್ಮೂಲನೆ ಮಾಡಬೇಕು” ಎಂಬ ಉದಯನಿಧಿ ಹೇಳಿಕೆಯನ್ನು ಉಲ್ಲೇಖಿಸಿರುವ ಬಿಜೆಪಿ, ಅವರ ವಿರುದ್ಧ ಮತ್ತೊಮ್ಮೆ ತೀವ್ರ ಟೀಕೆ ನಡೆಸಿದೆ.

ಮಧ್ಯಾಕಾಶದಲ್ಲೇ 300 ಅಡಿ ಕುಸಿದ ಏರ್ ಇಂಡಿಯಾ ವಿಮಾನ: ಟರ್ಬುಲೆನ್ಸ್‌ಗೆ 12 ಮಂದಿಗೆ ಗಾಯ

0

ನವದೆಹಲಿ: ಫುಕೆಟ್‌ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾದ AI2379 ವಿಮಾನ ಮಧ್ಯಾಕಾಶದಲ್ಲಿ ತೀವ್ರ ಟರ್ಬುಲೆನ್ಸ್‌ಗೆ ಸಿಲುಕಿ ಏಕಾಏಕಿ ಸುಮಾರು 300 ಅಡಿ ಕುಸಿದ ಘಟನೆ ನಡೆದಿದೆ. ಈ ವೇಳೆ ಇಬ್ಬರು ಸಿಬ್ಬಂದಿ ಸೇರಿದಂತೆ ಒಟ್ಟು 12 ಮಂದಿ ಗಾಯಗೊಂಡಿದ್ದು, ವಿಮಾನಕ್ಕೂ ಸಣ್ಣ ಪ್ರಮಾಣದ ಹಾನಿಯಾಗಿದೆ.

ಮಂಗಳವಾರ ಬೆಳಿಗ್ಗೆ 8:25ಕ್ಕೆ ಫುಕೆಟ್‌ನಿಂದ ಹೊರಟಿದ್ದ ವಿಮಾನ, ಮಧ್ಯಾಹ್ನ 11:50ಕ್ಕೆ ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿತು. ಹಾರಾಟದ ವೇಳೆ ಏಕಾಏಕಿ ಸಂಭವಿಸಿದ ತೀವ್ರ ಪ್ರಕ್ಷುಬ್ಧತೆಗೆ ಕ್ಲಿಯರ್ ಏರ್ ಟರ್ಬುಲೆನ್ಸ್ (CAT) ಅಥವಾ ಅಪ್‌ಡ್ರಾಫ್ಟ್-ಡೌನ್‌ಡ್ರಾಫ್ಟ್ ಕಾರಣವಾಗಿರಬಹುದು ಎಂದು ಪ್ರಾಥಮಿಕ ಶಂಕೆ ವ್ಯಕ್ತವಾಗಿದೆ.

ಘಟನೆಯಲ್ಲಿ ಕೆಲ ಪ್ರಯಾಣಿಕರು ಹಾಗೂ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಗಂಭೀರ ಗಾಯಗಳು ಸಂಭವಿಸಿಲ್ಲ ಎಂದು ಏರ್ ಇಂಡಿಯಾ ಸ್ಪಷ್ಟಪಡಿಸಿದೆ. ವಿಮಾನ ಇಳಿದ ತಕ್ಷಣ ಗಾಯಾಳುಗಳನ್ನು ವಿಮಾನ ನಿಲ್ದಾಣದ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಹಾಗೂ ತಪಾಸಣೆ ನಡೆಸಲಾಯಿತು.

ಏರ್ ಇಂಡಿಯಾ ಪ್ರಕಟಣೆಯಲ್ಲಿ, “ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ. ಗಾಯಗೊಂಡವರಿಗೆ ಅಗತ್ಯವಿರುವ ಎಲ್ಲ ವೈದ್ಯಕೀಯ ನೆರವು ಒದಗಿಸಲಾಗಿದೆ. ಘಟನೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ” ಎಂದು ತಿಳಿಸಿದೆ.

ವಿಮಾನದಲ್ಲಿದ್ದ 134 ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿ ವಿಮಾನದಿಂದ ಹೊರಬಂದಿದ್ದು, ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಕಾಂಗ್ರೆಸ್ ನಮ್ಮ ಗರ್ಭಗುಡಿ, ನಾಯಕರ ನಿರ್ಧಾರವೇ ಅಂತಿಮ: ಸಚಿವ ಸ್ಥಾನದ ಕುರಿತು ಪ್ರದೀಪ್ ಈಶ್ವರ್ ಹೇಳಿದ್ದೇನು..?

ಬೆಂಗಳೂರು: ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶಾಸಕರಲ್ಲಿ ಅಸಮಾಧಾನ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ತಾವು ಯಾವುದೇ ಬಂಡಾಯ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್, ತಾವು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಎಂದು ಹೇಳಿಕೊಂಡಿದ್ದಾರೆ. “ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ. ಕಾಂಗ್ರೆಸ್ ನಮ್ಮ ಗರ್ಭಗುಡಿ. ಪಕ್ಷದ ನಾಯಕರು ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ” ಎಂದು ಹೇಳಿದ್ದಾರೆ.

“ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಡಿ.ಕೆ. ಶಿವಕುಮಾರ್ ಹಾಗೂ ಬಿ.ಕೆ. ಹರಿಪ್ರಸಾದ್ ಅವರು ನಮ್ಮ ನಾಯಕರು. ಸಾಮಾನ್ಯ ವ್ಯಕ್ತಿಯಾಗಿದ್ದ ನನಗೆ ಪಕ್ಷ ಟಿಕೆಟ್ ನೀಡಿ ಶಾಸಕನನ್ನಾಗಿ ಮಾಡಿದೆ. ಹೀಗಾಗಿ ಮಧ್ಯಾಹ್ನ ನಡೆಯುವ ಸಭೆಗೆ ನಾನು ಹೋಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಸಚಿವ ಸ್ಥಾನ ಸಿಗದಿರುವ ಕುರಿತು ಪ್ರತಿಕ್ರಿಯಿಸಿದ ಅವರು, “ಮಂತ್ರಿಯಾಗಬೇಕು ಎಂಬ ಆಸೆ ಇರುವುದು ಸಹಜ. ಆದರೆ ಈಗಲೇ ಸಚಿವ ಸ್ಥಾನ ಬೇಕು ಎಂಬ ಹಠ ಇಲ್ಲ. ಹಿರಿಯರಿಗೆ ಅವಕಾಶ ಸಿಕ್ಕಿದೆ. ನನಗೆ ಇನ್ನೂ ವಯಸ್ಸಿದೆ, ಅವಕಾಶಕ್ಕಾಗಿ ಕಾಯುತ್ತೇನೆ” ಎಂದರು.

“ನಾನು ಇನ್ನೂ 30 ವರ್ಷ ಕಾಯಲು ಸಿದ್ಧನಿದ್ದೇನೆ. ಸಭೆ ನಡೆಸುತ್ತಿರುವವರಿಂದ ನನಗೆ ಯಾವುದೇ ಕರೆ ಬಂದಿಲ್ಲ. ನಾನು ಪಕ್ಷಕ್ಕೆ ನಿಷ್ಠನಾಗಿದ್ದೇನೆ. ಆದ್ದರಿಂದ ಆ ಸಭೆಯಲ್ಲಿ ಭಾಗವಹಿಸುವುದಿಲ್ಲ” ಎಂದು ಪ್ರದೀಪ್ ಈಶ್ವರ್ ಹೇಳಿದರು.

ಇದೇ ವೇಳೆ 2028ರ ವಿಧಾನಸಭೆ ಚುನಾವಣೆಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಅವರು, “ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲಲಿದೆ ಎಂಬ ನಂಬಿಕೆ ಇದೆ” ಎಂದು ತಿಳಿಸಿದರು.