Home Blog

ಪೌರಕಾರ್ಮಿಕರ ಆರೋಗ್ಯ ರಕ್ಷಣೆಗೆ ವಿಶೇಷ ಹೆಜ್ಜೆ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರಸಭೆಯ ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಕೆಲಸಗಾರರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಗರಸಭೆ ಆವರಣದಲ್ಲಿ ಆಯೋಜಿಸಲಾಯಿತು.

ಗದಗ-ಬೆಟಗೇರಿ ನಗರಸಭೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರಸಭೆಯ ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಕೆಲಸಗಾರರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಗರಸಭೆ ಆವರಣದಲ್ಲಿ ಆಯೋಜಿಸಲಾಯಿತು.

ಶಿಬಿರದಲ್ಲಿ ಸಕ್ಕರೆ ಕಾಯಿಲೆ, ರಕ್ತದೊತ್ತಡ, ಬಾಯಿ ಕ್ಯಾನ್ಸರ್, ಮೆದುಳು ಆರೋಗ್ಯ ಹಾಗೂ ಹೃದಯ ಸಂಬಂಧಿತ ಕಾಯಿಲೆಗಳ ತಪಾಸಣೆಯನ್ನು ನುರಿತ ವೈದ್ಯರು ನಡೆಸಿ ಅಗತ್ಯ ಆರೋಗ್ಯ ಸಲಹೆಗಳನ್ನು ನೀಡಿದರು. ಸ್ವಚ್ಛತಾ ಕಾರ್ಯದಲ್ಲಿ ನಿರಂತರ ತೊಡಗಿರುವ ಪೌರಕಾರ್ಮಿಕರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಗೋಪಾಲ್, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ಆನಂದ ಬದಿ, ಕಂದಾಯ ಅಧಿಕಾರಿ ಮಹೇಶ್ ಹಡಪದ, ಜಿಲ್ಲಾ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಹೇಮೇಶ್ ಯಟ್ಟಿ, ಆರೋಗ್ಯ ಇಲಾಖೆಯ ಸಿಬ್ಬಂದಿ, ಕಮ್ಯುನಿಟಿ ಮೊಬೈಲೈಜರ್‌ಗಳು, ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಕೆಲಸಗಾರರು ಉಪಸ್ಥಿತರಿದ್ದರು.

“ನಗರದ ಸ್ವಚ್ಛತೆಯ ಹೊಣೆ ಹೊತ್ತಿರುವ ಪೌರಕಾರ್ಮಿಕರ ಆರೋಗ್ಯ ರಕ್ಷಣೆಗೂ ನಗರಸಭೆ ಸಮಾನ ಆದ್ಯತೆ ನೀಡುತ್ತಿದೆ. ಇಂತಹ ಆರೋಗ್ಯ ತಪಾಸಣಾ ಶಿಬಿರಗಳು ಅವರ ಆರೋಗ್ಯ ಕಾಪಾಡಲು ಸಹಕಾರಿಯಾಗಲಿವೆ.”

ರಾಜಾರಾಮ ಪವಾರ್, ಪೌರಾಯುಕ್ತರು, ಗದಗ-ಬೆಟಗೇರಿ ನಗರಸಭೆ

ಮಳೆರಾಯನಿಗಾಗಿ ಮಹಿಳೆಯರ ಗುರ್ಜಿ ಪೂಜೆ

0

ವಿಜಯಸಾಕ್ಷಿ ಸುದ್ದಿ, ಗದಗ: ಮಳೆ ಕೊರತೆಯಿಂದ ಆತಂಕಗೊಂಡಿರುವ ಹಿನ್ನೆಲೆಯಲ್ಲಿ ಗದಗ-ಬೆಟಗೇರಿ ನಗರಸಭೆಯ ವಾರ್ಡ್‌ ಸಂಖ್ಯೆ 13ರ ಮಹಿಳೆಯರು ನಾಡಿನ ಸುಭಿಕ್ಷ ಹಾಗೂ ರೈತರ ಒಳಿತಿಗಾಗಿ ಸಂಪ್ರದಾಯಬದ್ಧ ಗುರ್ಜಿ ಪೂoje ನೆರವೇರಿಸಿ ಮಳೆರಾಯನ ಮೊರೆ ಹೋದರು.

ಮಳೆ ಕೊರತೆಯಿಂದ ಆತಂಕಗೊಂಡಿರುವ ಹಿನ್ನೆಲೆಯಲ್ಲಿ ಗದಗ-ಬೆಟಗೇರಿ ನಗರಸಭೆಯ ವಾರ್ಡ್‌ ಸಂಖ್ಯೆ 13ರ ಮಹಿಳೆಯರು ನಾಡಿನ ಸುಭಿಕ್ಷ ಹಾಗೂ ರೈತರ ಒಳಿತಿಗಾಗಿ ಸಂಪ್ರದಾಯಬದ್ಧ ಗುರ್ಜಿ ಪೂಜೆ ನೆರವೇರಿಸಿ ಮಳೆರಾಯನ ಮೊರೆ ಹೋದರು.

ರೈಲ್ವೆ ಪೊಲೀಸ್ ಕ್ವಾರ್ಟರ್ಸ್ ಸಮೀಪದ ಶ್ರೀ ಗಣಪತಿ ಹಾಗೂ ಶ್ರೀ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಹಿಳೆಯರು ಗುರ್ಜಿ ಹೊತ್ತು ವಾರ್ಡ್‌ನ ಮನೆ ಮನೆಗೆ ತೆರಳಿ, “ಗುರ್ಜಿ ಗುರ್ಜಿ ಯಲ್ಲಾಡಿ ಬಂದೆ, ಹಳ್ಳ-ಕೊಳ್ಳ ಸುಳಿದಾಡಿ ಬಂದೆ, ಕಾರಮಳೆಯೇ ಕಪಟ್ ಮಳೆಯೇ, ಸುರಿ ಮಳೆಯೋ… ಸುರಿ ಮಳೆಯೋ…” ಎಂದು ಜಾನಪದ ಗೀತೆಗಳನ್ನು ಹಾಡುತ್ತ ಮಳೆಗಾಗಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ವಾರ್ಡ್ ಸದಸ್ಯ ಮುತ್ತು ಮುಶಿಗೇರಿ ಮಾತನಾಡಿ, ನಾಡಿನ ಒಳಿತಿಗಾಗಿ ಮಹಿಳೆಯರು ಒಗ್ಗೂಡಿ ಇಂತಹ ಸಂಪ್ರದಾಯಬದ್ಧ ಪೂಜೆ ನಡೆಸಿರುವುದು ಶ್ಲಾಘನೀಯ. ಈ ಪೂಜೆಯ ಫಲವಾಗಿ ಸಕಾಲಕ್ಕೆ ಉತ್ತಮ ಮಳೆಯಾಗಿ ರೈತರು ಹಾಗೂ ನಾಡು ಸಮೃದ್ಧಿಯಾಗಲಿ ಎಂದು ಆಶಿಸಿದರು.

“ಗುರ್ಜಿ ಪೂಜೆ ನಮ್ಮ ಗ್ರಾಮೀಣ ಸಂಸ್ಕೃತಿ ಮತ್ತು ನಂಬಿಕೆಯ ಪ್ರತೀಕ. ಸಕಾಲಕ್ಕೆ ಮಳೆಯಾಗಿ ರೈತರ ಬದುಕು ಹಸನಾಗಲಿ, ನಾಡು ಸುಭಿಕ್ಷವಾಗಲಿ ಎಂಬುದು ಎಲ್ಲರ ಪ್ರಾರ್ಥನೆ.”

ಮುತ್ತು ಮುಶಿಗೇರಿ, ವಾರ್ಡ್ ಸದಸ್ಯರು

ಶಿಕ್ಷಣದಲ್ಲಿ ಸಾಧಿಸಿ ಸಮಾಜಕ್ಕೆ ಮಾದರಿಯಾಗಿ: ಡಾ. ಸಾಹಿರಾಬಾನು

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಸಾಧನೆ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಅಮ್ಮನಗರ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷೆ ಡಾ. ಸಾಹಿರಾಬಾನು ಕರೆ ನೀಡಿದರು.

ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಸಾಧನೆ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಅಮ್ಮನಗರ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷೆ ಡಾ. ಸಾಹಿರಾಬಾನು ಕರೆ ನೀಡಿದರು.

ಪಟ್ಟಣದ ಕನ್ಯಕಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಹಗರಿಬೊಮ್ಮನಹಳ್ಳಿ ತಾಲೂಕು ಖಿದ್ಮತ್ ಕಮಿಟಿ ವತಿಯಿಂದ ಆಯೋಜಿಸಿದ್ದ ಪ್ರಥಮ ವರ್ಷದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

“ಬಹುತೇಕ ಮುಸ್ಲಿಮರು ಕಾಯಕನಿಷ್ಠರು. ದುಡಿಮೆಯೊಂದಿಗೆ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ನಾವು ಮಾಡುವ ಕಾಯಕ ಮತ್ತು ಸೇವೆಯಲ್ಲಿಯೇ ದೇವರು ಅಡಗಿದ್ದಾನೆ.” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಖಿದ್ಮತ್ ಕಮಿಟಿ ಅಧ್ಯಕ್ಷ ಎಚ್. ಜಂದಿಸಾಹೇಬ್ ಮಾತನಾಡಿ, ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸುವ ಮೂಲಕ ಇತರ ವಿದ್ಯಾರ್ಥಿಗಳಿಗೂ ಪ್ರೇರಣೆ ನೀಡುವುದು ಪುರಸ್ಕಾರದ ಉದ್ದೇಶವಾಗಿದೆ. ತಾಲೂಕಿನ ವಿವಿಧ ಗ್ರಾಮಗಳಿಗೆ ತೆರಳಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಗುತ್ತಿದೆ. ಪರಸ್ಪರ ಸಹಕಾರದಿಂದ ಮಾತ್ರ ಇಂತಹ ಉತ್ತಮ ಕಾರ್ಯಗಳು ಸಾಧ್ಯ ಎಂದರು.

ಪುರಸಭೆಯ ಮಾಜಿ ಅಧ್ಯಕ್ಷ ಎಂ. ಮರಿರಾಮಪ್ಪ ಮಾತನಾಡಿ, ವಿದ್ಯಾರ್ಥಿಗಳು ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಆದರ್ಶಗಳನ್ನು ಅಳವಡಿಸಿಕೊಂಡು ಪರಿಶ್ರಮದ ಮೂಲಕ ಉನ್ನತ ಗುರಿ ಸಾಧಿಸಿ ದೇಶಕ್ಕೆ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿವಿಧ ಗ್ರಾಮಗಳ 100 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಉಪ ತಹಸೀಲ್ದಾರ್ ಆಸೀಫ್, ನಿವೃತ್ತ ಯೋಧರಾದ ನೂರ್ ಮಹಮ್ಮದ್ ಹಾಗೂ ರಾಮರೆಡ್ಡಿ ಅವರನ್ನು ಸನ್ಮಾನಿಸಲಾಯಿತು.

ಪುರಸಭೆ ಅಧ್ಯಕ್ಷೆ ರೇಷ್ಮಾ ಸಿಕಂದರ್ ಕಾರ್ಯಕ್ರಮ ಉದ್ಘಾಟಿಸಿದರು.

ವೇದಿಕೆಯಲ್ಲಿ ಪುರಸಭೆ ಸದಸ್ಯ ಪವಾಡಿ ಹನುಮಂತಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಕ್ಕಿ ತೋಟೇಶ್, ಗ್ಯಾರಂಟಿ ಸಮಿತಿಯ ಗುರುಬಸವರಾಜ ಸೊನ್ನದ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹಾಲ್ದಾಳ್ ವಿಜಯಕುಮಾರ್ ಮಾತನಾಡಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಚಿಂತ್ರಪಳ್ಳಿ ದೇವೇಂದ್ರಪ್ಪ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಕೋರಿ ಗೋಣಿಬಸಪ್ಪ, ರಫೀ, ಆಟೊ ರಾಜ, ಮೆಕಾನಿಕ್ ರಾಜು, ಬುಡೇನ್ ಸಾಬ್, ಚಾಂದ್ ಬಾಷಾ, ಬಿ. ಬಾಷಾಸಾಬ್, ಹಸನ್ ಷರೀಫ್, ಟೈಲರ್ ಶಬೀರ್, ಎನ್.ಎಂ. ಗೌಸ್, ನಜೀರ್ ಬಾಷಾ, ಎಚ್.ಎಸ್. ದಾದಾಪೀರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಎಚ್. ಅನೀಸ್ ಕಾರ್ಯಕ್ರಮ ನಿರ್ವಹಿಸಿದರು.

“ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿ ಸಾಧಿಸಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು.”

ಡಾ. ಸಾಹಿರಾಬಾನು, ಅಧ್ಯಕ್ಷೆ, ಅಮ್ಮನಗರ ಗ್ರಾಮೀಣ ಅಭಿವೃದ್ಧಿ ಸಂಸ್ಥೆ

ಜುಲೈ 1ರಿಂದ ‘ವಿಬಿ-ಜಿ ರಾಮ್ (ಜಿ)’ ಯೋಜನೆ ಜಾರಿ

0

ವಿಜಯಸಾಕ್ಷಿ ಸುದ್ದಿ, ಗದಗ: ಗ್ರಾಮೀಣ ಉದ್ಯೋಗ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ರೂಪಿಸಿರುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಆ್ಯಂಡ್ ಅಜೀವಿಕ ಮಿಷನ್ (ಗ್ರಾಮೀಣ) – ವಿಬಿ-ಜಿ ರಾಮ್ (ಜಿ) ಯೋಜನೆ ಜುಲೈ 1ರಿಂದ ದೇಶಾದ್ಯಂತ ಜಾರಿಗೆ ಬರಲಿದ್ದು, ಗದಗ ಜಿಲ್ಲೆಯಲ್ಲಿಯೂ ಯೋಜನೆ ಅನುಷ್ಠಾನಕ್ಕೆ ಸಿದ್ಧತೆಗಳು ಆರಂಭಗೊಂಡಿವೆ.

ಗ್ರಾಮೀಣ ಉದ್ಯೋಗ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ರೂಪಿಸಿರುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಆ್ಯಂಡ್ ಅಜೀವಿಕ ಮಿಷನ್ (ಗ್ರಾಮೀಣ) – ವಿಬಿ-ಜಿ ರಾಮ್ (ಜಿ) ಯೋಜನೆ ಜುಲೈ 1ರಿಂದ ದೇಶಾದ್ಯಂತ ಜಾರಿಗೆ ಬರಲಿದ್ದು, ಗದಗ ಜಿಲ್ಲೆಯಲ್ಲಿಯೂ ಯೋಜನೆ ಅನುಷ್ಠಾನಕ್ಕೆ ಸಿದ್ಧತೆಗಳು ಆರಂಭಗೊಂಡಿವೆ.

ಈ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಹಂತದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ ನಡೆಯಿತು. ರಾಜ್ಯ ಆಯುಕ್ತಾಲಯದಿಂದ ತರಬೇತಿ ಪಡೆದ ಮಾಸ್ಟರ್ ಟ್ರೈನರ್‌ಗಳಾದ ಸಂತೋಷ ಪಾಟೀಲ ಹಾಗೂ ಚಂದ್ರು ಲಮಾಣಿ ಅವರು ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ ಅವರ ನೇತೃತ್ವದಲ್ಲಿ ತರಬೇತಿ ನೀಡಿದರು.

ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಸಿ.ಆರ್. ಮುಂಡರಗಿ, ಯೋಜನೆಯನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಗ್ರಾಮೀಣ ಅಕುಶಲ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವುದರ ಜೊತೆಗೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಈ ಯೋಜನೆ ನೆರವಾಗಲಿದೆ ಎಂದು ತಿಳಿಸಿದರು.

ಮಾಸ್ಟರ್ ಟ್ರೈನರ್ ಚಂದ್ರು ಲಮಾಣಿ ಮಾತನಾಡಿ, ಯೋಜನೆಯಡಿ ಅಕುಶಲ ಕೆಲಸಕ್ಕಾಗಿ ಬೇಡಿಕೆ ಸಲ್ಲಿಸುವ ಗ್ರಾಮೀಣ ಕುಟುಂಬಗಳ ವಯಸ್ಕ ಸದಸ್ಯರಿಗೆ ಒಂದು ಆರ್ಥಿಕ ವರ್ಷದಲ್ಲಿ 125 ದಿನಗಳ ಕಡ್ಡಾಯ ಉದ್ಯೋಗ ಖಾತ್ರಿ ನೀಡಲಾಗುತ್ತದೆ. ವಿಕಸಿತ ಗ್ರಾಮ ಪಂಚಾಯಿತಿ ಯೋಜನೆ (VGPP) ಮೂಲಕ ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ಕಾಮಗಾರಿಗಳನ್ನು ಆಯ್ಕೆ ಮಾಡಿ ಅನುಷ್ಠಾನಗೊಳಿಸಲಾಗುವುದು. ಕುಟುಂಬಗಳ ನೋಂದಣಿ, ಉದ್ಯೋಗ ಅರ್ಜಿ ಸ್ವೀಕಾರ, ಕಾಮಗಾರಿ ನಿರ್ವಹಣೆ ಹಾಗೂ ದಾಖಲೆಗಳ ಸಂರಕ್ಷಣೆ ಸೇರಿದಂತೆ ಪ್ರಮುಖ ಜವಾಬ್ದಾರಿಗಳನ್ನು ಗ್ರಾಮ ಪಂಚಾಯಿತಿಗಳಿಗೆ ವಹಿಸಲಾಗಿದೆ ಎಂದು ವಿವರಿಸಿದರು.

ನರಗುಂದ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ (ಗ್ರಾ.ಉ.) ಹಾಗೂ ಮಾಸ್ಟರ್ ಟ್ರೈನರ್ ಸಂತೋಷ ಪಾಟೀಲ ಮಾತನಾಡಿ, ಜಲ ಭದ್ರತೆ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಜೀವನೋಪಾಯ ವೃದ್ಧಿ ಹಾಗೂ ಹವಾಮಾನ ವೈಪರೀತ್ಯ ಶಮನ ಕಾಮಗಾರಿಗಳಿಗೆ ಯೋಜನೆಯಲ್ಲಿ ಆದ್ಯತೆ ನೀಡಲಾಗಿದೆ. ಸಮಗ್ರ ಡಿಜಿಟಲ್ ವ್ಯವಸ್ಥೆಯ ಮೂಲಕ ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ನಾಗರಿಕರ ಪಾಲ್ಗೊಳ್ಳುವಿಕೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶವನ್ನು ಯೋಜನೆ ಹೊಂದಿದೆ ಎಂದು ಹೇಳಿದರು.

2047ರೊಳಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ‘ವಿಕಸಿತ ಭಾರತ @2047’ ಗುರಿ ಸಾಧನೆಗೆ ಈ ಯೋಜನೆ ಮಹತ್ವದ ಹೆಜ್ಜೆಯಾಗಲಿದ್ದು, ಗ್ರಾಮೀಣ ಉದ್ಯೋಗ ಭದ್ರತೆ ಹಾಗೂ ಜೀವನೋಪಾಯ ವೃದ್ಧಿಗೆ ಹೊಸ ದಿಕ್ಕು ನೀಡಲಿದೆ ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಮುಂಡರಗಿ, ರೋಣ, ಗಜೇಂದ್ರಗಡ ಹಾಗೂ ನರಗುಂದ ತಾಲೂಕಿನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗಣಕಯಂತ್ರ ನಿರ್ವಾಹಕರು, ಬಿಎಫ್‌ಟಿ, ಜಿಕೆಎಂ, ತಾಲೂಕು ಪಂಚಾಯಿತಿ ನರೇಗಾ ಸಿಬ್ಬಂದಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

“ವಿಬಿ-ಜಿ ರಾಮ್ (ಜಿ) ಯೋಜನೆಯು ಗ್ರಾಮೀಣ ಉದ್ಯೋಗ ಭದ್ರತೆಯನ್ನು ಬಲಪಡಿಸುವುದರೊಂದಿಗೆ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಹೊಸ ಅವಕಾಶಗಳನ್ನು ಕಲ್ಪಿಸಲಿದೆ.”

 ಸಿ.ಆರ್. ಮುಂಡರಗಿ, ಉಪ ಕಾರ್ಯದರ್ಶಿ, ಜಿಲ್ಲಾ ಪಂಚಾಯಿತಿ

ಉಪ್ಪಾರ ಕುಟುಂಬಗಳ ಮೇಲಿನ ಅನ್ಯಾಯ ಖಂಡನೆ: ಕಠಿಣ ಕ್ರಮಕ್ಕೆ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಗದಗ: ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಉಪ್ಪಾರ ಸಮಾಜದ ಕುಟುಂಬಗಳಿಗೆ ಆಗಿರುವ ಅನ್ಯಾಯದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಜಿಲ್ಲಾ ಮಹರ್ಷಿ ಭಗೀರಥ ಉಪ್ಪಾರ ಸಂಘದ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಉಪ್ಪಾರ ಸಮಾಜದ ಕುಟುಂಬಗಳಿಗೆ ಆಗಿರುವ ಅನ್ಯಾಯದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಜಿಲ್ಲಾ ಮಹರ್ಷಿ ಭಗೀರಥ ಉಪ್ಪಾರ ಸಂಘದ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ, ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಉಪ್ಪಾರ ಸಮಾಜದ ಒಂದೇ ಕುಟುಂಬದ ಶಿವಣ್ಣ, ನಾಗರತ್ನ ಹಾಗೂ ರಕ್ಷಿತಾ ಮೃತಪಟ್ಟಿರುವ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಲಾಗಿದೆ.

ಕುಟುಂಬದವರು ಡೆತ್‌ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದು, ಉಲ್ಲಾಸಗೌಡ ಎಂಬಾತನ ಕಿರುಕುಳ ಮತ್ತು ಕಿರುಕುಳದಿಂದ ಉಂಟಾದ ಮಾನಸಿಕ ವೇದನೆಯೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಈ ಪ್ರಕರಣದ ಸತ್ಯಾಸತ್ಯತೆ ಪರಿಶೀಲಿಸಿ, ತಪ್ಪಿತಸ್ಥನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

ಇದೇ ವೇಳೆ, ಚಾಮರಾಜನಗರ ಜಿಲ್ಲೆಯ ಮಸಣಾಪುರ ಗ್ರಾಮದಲ್ಲಿ ಉಪ್ಪಾರಶೆಟ್ಟರ್ ಚಂದ್ರು ಎಂಬ ಯುವಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣವನ್ನು ಖಂಡಿಸಿರುವ ಸಂಘದ ಮುಖಂಡರು, ಈ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಎರಡೂ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು. ಆರೋಪಿಗಳಿಗೆ ನೀಡುವ ಶಿಕ್ಷೆ ಇಂತಹ ಘಟನೆಗಳು ಮರುಕಳಿಸದಂತೆ ಮಾದರಿಯಾಗಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಭೀಮನಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ರಾಜು ಗದ್ದಿ, ಉಪಾಧ್ಯಕ್ಷ ಹನಮಂತ ಗೊಟಗೊಂಡ, ಶಿವಪುತ್ರಪ್ಪ ಕುಂದ್ರಳ್ಳಿ, ಮಹಾದೇವಪ್ಪ ಪ್ಯಾಟಿ, ಸದಸ್ಯರಾದ ಪಾಂಡುರಂಗ ಕನಕಾಪೂರ, ಚನ್ನಪ್ಪ ಹಸರಂಬಿ, ಶಿವರಾಜ ಉಪ್ಪಾರ, ಹನುಮಂತ ತೆಂಗುಂಟಿ, ಸಂತೋಷ ಉಪ್ಪಾರ ಹಾಗೂ ಬಸವಣ್ಣೆಪ್ಪ ಉಪ್ಪಾರ ಉಪಸ್ಥಿತರಿದ್ದರು.

ಜು. 3ರಂದು ದಲಿತ ಜನಾಗ್ರಹ ಸಮಾವೇಶ

0

ವಿಜಯಸಾಕ್ಷಿ ಸುದ್ದಿ, ಗದಗ: ಭೂಮಿ, ವಸತಿ, ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿ ಹಾಗೂ ವಿಶೇಷ ಘಟಕ ಯೋಜನೆಗೆ ಏಕಗವಾಕ್ಷಿ ನೀತಿ ಜಾರಿಗೊಳಿಸುವಂತೆ ಒತ್ತಾಯಿಸಿ ಜುಲೈ 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ದಲಿತ ಜನಾಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಮುಂಡರಗಿ ತಾಲೂಕು ಸಂಚಾಲಕ ಎಚ್.ಡಿ. ಪೂಜಾರ ತಿಳಿಸಿದರು.

ಭೂಮಿ, ವಸತಿ, ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿ ಹಾಗೂ ವಿಶೇಷ ಘಟಕ ಯೋಜನೆಗೆ ಏಕಗವಾಕ್ಷಿ ನೀತಿ ಜಾರಿಗೊಳಿಸುವಂತೆ ಒತ್ತಾಯಿಸಿ ಜುಲೈ 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ದಲಿತ ಜನಾಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಮುಂಡರಗಿ ತಾಲೂಕು ಸಂಚಾಲಕ ಎಚ್.ಡಿ. ಪೂಜಾರ ತಿಳಿಸಿದರು.

ಸೋಮವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಸಂಸ (ಅಂಬೇಡ್ಕರ್‌ವಾದ) ರಾಜ್ಯಾಧ್ಯಕ್ಷ ಮಾವಳ್ಳಿ ಶಂಕರ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಜನರು ಭಾಗವಹಿಸಲಿದ್ದಾರೆ ಎಂದರು.

ಈ ಹಿಂದೆಯೂ ದಲಿತ ಸಂಘರ್ಷ ಸಮಿತಿ ಐದು ಲಕ್ಷಕ್ಕೂ ಹೆಚ್ಚು ದಲಿತರನ್ನು ಒಗ್ಗೂಡಿಸಿ ಬೃಹತ್ ಸಮಾವೇಶ ನಡೆಸಿದ್ದು, ಅದರ ಫಲವಾಗಿ ರಾಜ್ಯದಲ್ಲಿ ವಸತಿ ಶಾಲೆಗಳು ಆರಂಭಗೊಂಡವು. ಈಗ ಆ ಶಾಲೆಗಳ ಸಂಖ್ಯೆಯನ್ನು ಹೆಚ್ಚಿಸುವುದರ ಜೊತೆಗೆ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು ಎಂದು ಸಮಾವೇಶದ ಮೂಲಕ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಹೇಳಿದರು.

ವಿಶೇಷ ಘಟಕ ಯೋಜನೆಯಡಿ ಮೀಸಲಿರುವ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವುದರಿಂದ ದಲಿತ ಸಮುದಾಯಕ್ಕೆ ದೊರೆಯಬೇಕಾದ ಸೌಲಭ್ಯಗಳು ವಂಚಿತವಾಗುತ್ತಿವೆ. ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿಯಲ್ಲಿ ಆಗುತ್ತಿರುವ ವಿಳಂಬದಿಂದ ದಲಿತ ಯುವಕರಿಗೆ ಸರ್ಕಾರಿ ಉದ್ಯೋಗದ ಅವಕಾಶಗಳು ಸಿಗುತ್ತಿಲ್ಲ. ಜೊತೆಗೆ ಭೂಒಡೆತನ ಯೋಜನೆಯನ್ನು ಪುನರಾರಂಭಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸಮಾವೇಶದ ಮೂಲಕ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಾಲರಾಜ ಅರಬರ, ಪ್ರೊ. ಸತೀಶ ಪಾಸಿ, ನಾಗರಾಜ ಹೂಗಾರ, ಮಲ್ಲಿಕಾರ್ಜುನ ಗೌಡಣ್ಣವರ, ನಾಗರಾಜ ಗೋಕಾವಿ, ಪೂಜಾ ಬೇವೂರ, ಹನುಮಂತ ಚಲವಾದಿ, ಚೇತನಾ ಸೀತಾಲಹರಿ, ಮುತ್ತಪ್ಪ ಭಜಂತ್ರಿ, ಮಂಜುನಾಥ ಮಾತಿನ ಹಾಗೂ ರಸೂಲಸಾಬ ತಹಸೀಲ್ದಾರ್ ಉಪಸ್ಥಿತರಿದ್ದರು.

ಕುಮಾರಸ್ವಾಮಿ ವಿರುದ್ಧ ವೈಯಕ್ತಿಕ ಟೀಕೆ ನಿಲ್ಲಿಸಲಿ: ವಿ.ಆರ್. ಗೋವಿಂದಗೌಡ್ರ

0

ವಿಜಯಸಾಕ್ಷಿ ಸುದ್ದಿ, ಗದಗ: ಶಾಸಕ ಪ್ರದೀಪ್ ಈಶ್ವರ್ ಅವರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹಾಗೂ ವೈಯಕ್ತಿಕ ಹೇಳಿಕೆ ನೀಡುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಜೆಡಿಎಸ್ ರಾಜ್ಯ ವಕ್ತಾರ ವಿ.ಆರ್. ಗೋವಿಂದಗೌಡ್ರ ಆಗ್ರಹಿಸಿದರು.

ಶಾಸಕ ಪ್ರದೀಪ್ ಈಶ್ವರ್ ಅವರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹಾಗೂ ವೈಯಕ್ತಿಕ ಹೇಳಿಕೆ ನೀಡುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಜೆಡಿಎಸ್ ರಾಜ್ಯ ವಕ್ತಾರ ವಿ.ಆರ್. ಗೋವಿಂದಗೌಡ್ರ ಆಗ್ರಹಿಸಿದರು.

ಸೋಮವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶ್ರಮ ಅಕಾಡೆಮಿಗೆ ಮೂರು ಸಿಎ ಸೈಟ್ ಮಂಜೂರಾತಿ ಕುರಿತು ನ್ಯಾಯಾಲಯ ಪ್ರಶ್ನಿಸಿರುವ ಸಂದರ್ಭದಲ್ಲಿ ಅದಕ್ಕೆ ಉತ್ತರಿಸುವ ಬದಲು ಕುಮಾರಸ್ವಾಮಿ ವಿರುದ್ಧ ವೈಯಕ್ತಿಕ ಟೀಕೆ ಮಾಡುವುದು ಸರಿಯಲ್ಲ ಎಂದು ಹೇಳಿದರು.

ರಾಜಕಾರಣದಲ್ಲಿ ಮಾತು ಮತ್ತು ನಡವಳಿಕೆಗೆ ಮಿತಿ ಇರಬೇಕು. ಟೀಕೆ-ಟಿಪ್ಪಣಿ ಸಹಜವಾದರೂ ವೈಯಕ್ತಿಕ ನಿಂದನೆ ಸಲ್ಲದು. ಕುಮಾರಸ್ವಾಮಿ ಅವರಿಗೆ ರಾಜ್ಯಾದ್ಯಂತ ಅಪಾರ ಅಭಿಮಾನಿಗಳಿದ್ದು, ಇದೇ ರೀತಿಯ ಭಾಷೆಯನ್ನು ಪ್ರದೀಪ್ ಈಶ್ವರ್ ಮುಂದುವರಿಸಿದರೆ ಅದಕ್ಕೆ ತಕ್ಕ ಪ್ರತಿಕ್ರಿಯೆ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರದೀಪ್ ಈಶ್ವರ್ ತಾವು ಹಿಂದುಳಿದ ಸಮುದಾಯದ ಶಾಸಕ ಎಂದು ಹೇಳಿಕೊಳ್ಳುತ್ತಾರೆ. ಕಾಂಗ್ರೆಸ್ ಪಕ್ಷದಲ್ಲಿಯೇ ಹಿಂದುಳಿದ ವರ್ಗದ ಅನೇಕ ಹಿರಿಯ ನಾಯಕರು ಮತ್ತು ಶಾಸಕರಿದ್ದು, ಅವರಿಂದ ರಾಜಕೀಯ ಸಂಸ್ಕಾರ ಕಲಿಯಬೇಕು. ಮೀಸೆ ತಿರುವುವುದು, ಸೆಡ್ಡು ಹೊಡೆಯುವುದರಿಂದ ಯಾರೂ ಹೆದರುವುದಿಲ್ಲ. ಜೆಡಿಎಸ್ ಬಾಡಿಗೆ ಪಕ್ಷವಲ್ಲ ಎಂಬುದನ್ನು ಅರಿತುಕೊಳ್ಳಬೇಕು ಎಂದು ತಿರುಗೇಟು ನೀಡಿದರು.

ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದ ಅವರು, ಗ್ಯಾರಂಟಿ ಸಮಿತಿ ಸದಸ್ಯರು ಸಚಿವರಂತೆ ಅಧಿಕಾರಿಗಳ ಸಭೆ ನಡೆಸುವುದಕ್ಕಿಂತ ಯೋಜನೆಗಳ ಸಮರ್ಪಕ ಅನುಷ್ಠಾನದತ್ತ ಗಮನ ಹರಿಸಬೇಕು. ಸತ್ತವರ ಹೆಸರಿನಲ್ಲಿ ಹಾಗೂ ಖಾತೆಯೇ ಇಲ್ಲದವರ ಹೆಸರಿನಲ್ಲಿ ಹಣ ಜಮೆಯಾಗಿರುವುದಾಗಿ ಸರ್ಕಾರವೇ ಹೇಳುತ್ತಿದೆ. ಹೀಗಿದ್ದರೂ ಗ್ಯಾರಂಟಿ ಸಮಿತಿ ವಿಫಲವಾಗಿದ್ದು, ಅದನ್ನು ವಿಸರ್ಜಿಸಬೇಕು ಎಂದು ಒತ್ತಾಯಿಸಿದರು.

ಗೃಹಲಕ್ಷ್ಮಿ ಯೋಜನೆಯ ಹಣವನ್ನು ತೆರಿಗೆ ಪಾವತಿಸುವ ಮಹಿಳೆಯರಿಗೆ ನೀಡದಿರುವ ನಿರ್ಧಾರ ಸರಿಯಲ್ಲ. ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಸರ್ಕಾರ ನಡೆದುಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಅಮರೇಶ ಅಂಗಡಿ, ಬಸವರಾಜ ಅಪ್ಪಣ್ಣವರ, ಪ್ರಫುಲ್ ಪುಣೇಕರ್ ಹಾಗೂ ಜಿ.ಕೆ. ಕೊಳ್ಳಿಮಠ ಉಪಸ್ಥಿತರಿದ್ದರು.

“ರಾಜಕಾರಣದಲ್ಲಿ ಟೀಕೆ ಸಹಜ, ಆದರೆ ವೈಯಕ್ತಿಕ ನಿಂದನೆ ಸರಿಯಲ್ಲ. ಕುಮಾರಸ್ವಾಮಿ ವಿರುದ್ಧದ ಅವಹೇಳನಕಾರಿ ಹೇಳಿಕೆಗಳನ್ನು ಪ್ರದೀಪ್ ಈಶ್ವರ್ ತಕ್ಷಣ ನಿಲ್ಲಿಸಬೇಕು.”

ವಿ.ಆರ್. ಗೋವಿಂದಗೌಡ್ರ, ಜೆಡಿಎಸ್ ರಾಜ್ಯ ವಕ್ತಾರ

ಕುಟುಂಬ ಕಲಹದ ಬೆನ್ನಲ್ಲೇ ಮೊಬೈಲ್ ಟವರ್ ಏರಿದ ವ್ಯಕ್ತಿ..!

0

ಗದಗ: ಕುಟುಂಬ ಕಲಹದ ಹಿನ್ನೆಲೆಯಲ್ಲಿ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಆತಂಕ ಸೃಷ್ಟಿಸಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಗ್ರಾಮದ ನಜೀರ್ ಸಾಬ್ ಎಂಬಾತ ಈ ಕೃತ್ಯ ಎಸಗಿದ ವ್ಯಕ್ತಿ.

ಸೋಮವಾರ ಮಧ್ಯಾಹ್ನ ಮದ್ಯದ ಅಮಲಿನಲ್ಲಿ
ಮನನೊಂದ ನಜೀರ್ ಸಾಬ್ ನೇರವಾಗಿ ಗ್ರಾಮದ ಮೊಬೈಲ್ ಟವರ್ ಏರಿ ಹೈಡ್ರಾಮಾ ನಡೆಸಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮುಂಡರಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಕಾರ್ಯಾಚರಣೆ ಆರಂಭಿಸಿದರು. ಸುಮಾರು ಸಮಯ ಮನವೊಲಿಕೆ ನಡೆಸಿದ ಬಳಿಕ ನಜೀರ್ ಸಾಬ್‌ನನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು.

ಕಾರ್ಯಾಚರಣೆ ವೇಳೆ ಕೆಲಕಾಲ ಹುಚ್ಚಾಟ ಮೆರೆದ ನಜೀರ್ ಸಾಬ್‌ನ್ನು ಕೊನೆಗೆ ಪೊಲೀಸರು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ಹೋಂ ಸ್ಟೇನಲ್ಲಿ ಬೆಂಗಳೂರಿನ ಯುವತಿ ಸಾವು: ಲವ್ ಜಿಹಾದ್ ಕೊಲೆ ಎಂದು ತಾಯಿ ಆರೋಪ

ಚಿಕ್ಕಬಳ್ಳಾಪುರ: ಮುದ್ದೇನಹಳ್ಳಿ ಸಮೀಪದ ಹೋಂಸ್ಟೇಯೊಂದರಲ್ಲಿ ಬೆಂಗಳೂರು ಮೂಲದ ಯುವತಿ ಸಾಯಿ ಸುರಭಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಯುವತಿಯ ತಾಯಿ ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದ್ದಾರೆ. ಪ್ರಕರಣದಲ್ಲಿ ಯುವತಿಯೊಂದಿಗೆ ಹೋಂಸ್ಟೇಗೆ ಬಂದಿದ್ದ ಕೇರಳ ಮೂಲದ ಸಂಜೀತ್ ಅಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಶನಿವಾರ ಹೋಂಸ್ಟೇಗೆ ಬಂದಿದ್ದ ಇಬ್ಬರೂ ಸೋಮವಾರ ಚೆಕ್‌ಔಟ್ ಮಾಡದ ಹಿನ್ನೆಲೆಯಲ್ಲಿ ಸಿಬ್ಬಂದಿ ಕೊಠಡಿ ಪರಿಶೀಲಿಸಿದಾಗ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಸ್ಥಳದಲ್ಲಿ ಹಗ್ಗ ಕತ್ತರಿಸಿದ ಸ್ಥಿತಿ, ಕೆಲವು ಮಾತ್ರೆಗಳು ಹಾಗೂ ಡೈರಿಯೊಂದು ಪತ್ತೆಯಾಗಿರುವುದರಿಂದ ಪ್ರಕರಣದ ಸುತ್ತ ಹಲವು ಅನುಮಾನಗಳು ಮೂಡಿವೆ.

ಘಟನಾ ಸ್ಥಳಕ್ಕೆ ಜಿಲ್ಲಾ ಎಸ್‌ಪಿ ಕುಶಾಲ್ ಚೌಕ್ಸಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತಳ ಮರಣಕ್ಕೆ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ಹಾಗೂ ವಿಧಿವಿಜ್ಞಾನ ವರದಿಗಾಗಿ ಕಾಯಲಾಗುತ್ತಿದೆ. ಸಂಜೀತ್ ಅಲಿಯ ಹೇಳಿಕೆ ದಾಖಲಿಸಿದ ಬಳಿಕವೇ ಆತ್ಮಹತ್ಯೆಯೋ, ಕೊಲೆಯೋ ಅಥವಾ ಬೇರೆ ಯಾವುದೇ ಕಾರಣವಿದೆಯೋ ಎಂಬುದು ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ವೇಳೆ, ಮೃತಳ ತಾಯಿ ಗೀತಾ ಭಾವುಕರಾಗಿ ಪ್ರತಿಕ್ರಿಯಿಸಿ, ಸಂಜೀತ್ ಅಲಿ ಹಲವು ವರ್ಷಗಳಿಂದ ತನ್ನ ಪುತ್ರಿಯನ್ನು ಹಿಂಬಾಲಿಸುತ್ತಿದ್ದ, ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ ಹಾಗೂ ಡ್ರಗ್ಸ್ ವ್ಯಸನಕ್ಕೆ ದೂಡಿದ್ದಾನೆ ಎಂದು ಆರೋಪಿಸಿದ್ದಾರೆ. ಇತ್ತೀಚೆಗೆ ಚಿಕಿತ್ಸೆಯಿಂದ ಗುಣಮುಖಳಾಗಿದ್ದ ಪುತ್ರಿಯನ್ನು ಮತ್ತೊಮ್ಮೆ ತನ್ನೊಂದಿಗೆ ಕರೆದುಕೊಂಡು ಹೋಗಿ ಸಂಚು ರೂಪಿಸಿ ಕೊಲೆ ಮಾಡಿದ್ದಾನೆ ಎಂದು ಅವರು ದೂರಿದ್ದಾರೆ.

ಮೃತಳ ಸಂಬಂಧಿಕರು ಕೂಡ ಸಂಜೀತ್ ಅಲಿ ವಿರುದ್ಧ ಈ ಹಿಂದೆಯೇ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಿದ್ದು, ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಗೃಹಜ್ಯೋತಿಗೆ ಸರ್ಕಾರದ ಹೊಸ ರೂಲ್ಸ್! ಹೊರರಾಜ್ಯದವರಿಗೆ ಶಾಕ್, ಮನೆ ಮನೆಗೆ ಪರಿಶೀಲನೆ; ಡಬಲ್ ಸಂಪರ್ಕ ಕಟ್

ಬೆಂಗಳೂರು: ರಾಜ್ಯ ಸರ್ಕಾರದ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಭಾರೀ ಬದಲಾವಣೆ ತರಲು ಸರ್ಕಾರ ಮುಂದಾಗಿದೆ. ಯೋಜನೆಯ ದುರ್ಬಳಕೆಯನ್ನು ತಡೆಯಲು ರಾಜ್ಯಾದ್ಯಂತ ಮನೆ ಮನೆಗೆ ಹೊಸ ಅರ್ಜಿ ವಿತರಣೆ, ಫಲಾನುಭವಿಗಳ ಮರುಪರಿಶೀಲನೆ ಹಾಗೂ ಡಬಲ್ ಸಂಪರ್ಕ ರದ್ದು ಸೇರಿದಂತೆ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 1.64 ಕೋಟಿ ಜನರು ಗೃಹಜ್ಯೋತಿ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ಆದರೆ ಯೋಜನೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರ ಸಂಪೂರ್ಣ ಪರಿಶೀಲನೆ ನಡೆಸಲು ನಿರ್ಧರಿಸಿದೆ ಎಂದರು.

“ಈ ಯೋಜನೆ ಕರ್ನಾಟಕದ ಜನರಿಗಾಗಿ ಮಾತ್ರ. ಹೊರರಾಜ್ಯದವರು ಅಥವಾ ಇಲ್ಲಿನ ಮತದಾರರಲ್ಲದವರು ಗೃಹಜ್ಯೋತಿ ಸೌಲಭ್ಯ ಪಡೆಯಲು ಅವಕಾಶ ಇರುವುದಿಲ್ಲ” ಎಂದು ಸ್ಪಷ್ಟಪಡಿಸಿದ ಡಿಕೆ ಶಿವಕುಮಾರ್, ಒಂದೇ ವ್ಯಕ್ತಿಯ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಉಚಿತ ವಿದ್ಯುತ್ ಸಂಪರ್ಕ ಕಂಡುಬಂದರೆ ಅವುಗಳನ್ನು ತಕ್ಷಣವೇ ರದ್ದುಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಹೊಸ ಅರ್ಜಿಗಳನ್ನು ಸರ್ಕಾರ ಮನೆ ಬಾಗಿಲಿಗೆ ತಲುಪಿಸಲಿದ್ದು, ಫಲಾನುಭವಿಯ ಫೋಟೋ, ವಿಳಾಸ ಹಾಗೂ ಇತರೆ ದಾಖಲೆಗಳನ್ನು ಇಂಧನ ಇಲಾಖೆಯ ಸಿಬ್ಬಂದಿ ಸ್ಥಳದಲ್ಲೇ ಪರಿಶೀಲಿಸಲಿದ್ದಾರೆ. ಅರ್ಹರಿಗೆ ಯಾವುದೇ ತೊಂದರೆ ಆಗದಂತೆ ಸಂಪೂರ್ಣ ಪಾರದರ್ಶಕ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಅವರು ಹೇಳಿದರು.

ಇದೇ ವೇಳೆ, ಐದು ಗ್ಯಾರಂಟಿ ಯೋಜನೆಗಳ ಮೇಲ್ವಿಚಾರಣೆಗೆ ಪಂಚಾಯಿತಿ ಮಟ್ಟದಲ್ಲಿ ವಿಶೇಷ ಸಮಿತಿಗಳನ್ನು ರಚಿಸಿ, ಫಲಾನುಭವಿಗಳ ಅರ್ಹತೆಯನ್ನು ಪರಿಶೀಲಿಸಲು ಪ್ರತ್ಯೇಕ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಇಂಧನ ಸಚಿವ ಕೆ.ಜೆ. ಜಾರ್ಜ್, ಯೋಜನೆಯನ್ನು ಸರಿಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ದುರ್ಬಳಕೆ ತಡೆಯುವ ಕ್ರಮವನ್ನು ರಾಜಕೀಯವಾಗಿ ಟೀಕಿಸುವುದು ಸರಿಯಲ್ಲ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿಯನ್ನು ಅಭಿನಂದಿಸಿದ ಡಿಕೆ ಶಿವಕುಮಾರ್, “ಕರೆಂಟ್ ಒಂದು ನಿಮಿಷ ಹೋದರೂ ಜನ ಮೊದಲು ನನ್ನನ್ನೇ ಬೈಯುತ್ತಾರೆ. ಆದರೆ ನೀವು ಉತ್ತಮ ಸೇವೆ ನೀಡುತ್ತಿದ್ದೀರಿ” ಎಂದು ಹಾಸ್ಯಭರಿತವಾಗಿ ಸಿಬ್ಬಂದಿಯ ಕಾರ್ಯವನ್ನು ಮೆಚ್ಚಿದರು.