ರಾಯಚೂರು: ಕಾಲೇಜು ಶಿಕ್ಷಣದ ಹೆಸರಿನಲ್ಲಿ ಹಾಸ್ಟೆಲ್ನಲ್ಲಿ ವಾಸವಿದ್ದ ಇಬ್ಬರು ವಿದ್ಯಾರ್ಥಿಗಳು ಬೈಕ್ ಕಳ್ಳತನವನ್ನೇ ‘ವ್ಯವಹಾರ’ವನ್ನಾಗಿ ಮಾಡಿಕೊಂಡಿದ್ದ ಆಘಾತಕಾರಿ ಪ್ರಕರಣ ರಾಯಚೂರಿನಲ್ಲಿ ಪತ್ತೆಯಾಗಿದೆ. ನೇತಾಜಿನಗರ ಪೊಲೀಸ್ ಠಾಣೆ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಿ 15 ಕಳ್ಳತನದ ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಸರ್ಕಾರಿ ಹಾಸ್ಟೆಲ್ನಲ್ಲಿ ವಾಸವಿದ್ದ ಬಿಎ ವಿದ್ಯಾರ್ಥಿ ಆಕಾಶ್, ಬಿಕಾಂ ವಿದ್ಯಾರ್ಥಿ ಕಾರ್ತಿಕ್ ಹಾಗೂ ಅವರ ಸಹಚರ ಆಂಜನೇಯ ಎಂದು ಗುರುತಿಸಲಾಗಿದೆ. ಆರೋಪಿಗಳು ಕಳುವು ಮಾಡಿದ ಬೈಕ್ಗಳ ನಂಬರ್ ಪ್ಲೇಟ್, ಬಣ್ಣ ಹಾಗೂ ಬಿಡಿಭಾಗಗಳನ್ನು ಬದಲಾಯಿಸಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಮೇ 25ರಂದು ವಿದ್ಯಾರ್ಥಿ ನಾರಾಯಣನ ಪಲ್ಸರ್ ಬೈಕ್ ಕಳ್ಳತನವಾಗಿತ್ತು. ನಂತರ ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾಗಿದ್ದ ಮಾರಾಟದ ಜಾಹೀರಾತಿನಲ್ಲಿ ತನ್ನ ಬೈಕ್ನನ್ನೇ ಗುರುತಿಸಿದ ನಾರಾಯಣ ಪೊಲೀಸರಿಗೆ ಮಾಹಿತಿ ನೀಡಿದ್ದನು. ಈ ಸುಳಿವಿನ ಆಧಾರದ ಮೇಲೆ ಪೊಲೀಸರು ಖರೀದಿದಾರರಂತೆ ನಟಿಸಿ ಆರೋಪಿಗಳಿಗೆ ಬಲೆ ಬೀಸಿದರು.
ಬಂಧಿತರಿಂದ ತೀವ್ರ ವಿಚಾರಣೆ ನಡೆಸಿದಾಗ ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳು ಹಾಗೂ ತೆಲಂಗಾಣ ರಾಜ್ಯದಲ್ಲಿ ಸರಣಿ ಬೈಕ್ ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ. ಕಾರ್ಯಾಚರಣೆಯಲ್ಲಿ 15 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಶಿಕ್ಷಣ ಪಡೆಯಬೇಕಾದ ವಯಸ್ಸಿನಲ್ಲೇ ಅಪರಾಧ ಜಾಲದಲ್ಲಿ ತೊಡಗಿದ್ದ ವಿದ್ಯಾರ್ಥಿಗಳ ಬಂಧನ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಪ್ರಕರಣದ ಹಿಂದೆ ಇನ್ನೂ ದೊಡ್ಡ ಜಾಲ ಇರುವ ಶಂಕೆ ವ್ಯಕ್ತವಾಗಿದೆ. ಸದ್ಯ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

