Home Blog

ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಸ್ಫೋಟಕ ವಸ್ತು ಪತ್ತೆ! ಬೆಂಗಳೂರು ಪೊಲೀಸರಿಂದ ಚುರುಕುಗೊಂಡ ತನಿಖೆ!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನಗರದಲ್ಲಿ ಸಂಚರಿಸಬೇಕಿದ್ದ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಘಟನೆ ಭದ್ರತಾ ವಲಯದಲ್ಲಿ ಆತಂಕ ಮೂಡಿಸಿದೆ.

ಕಗ್ಗಲಿಪುರ ಬಳಿಯ ತಾತಗುಣಿ ಸಮೀಪದ ಬ್ರಿಡ್ಜ್ ಪಕ್ಕದ ಕಾಂಪೌಂಡ್ ಪ್ರದೇಶದಲ್ಲಿ ಕಲ್ಲು ಕ್ವಾರಿಗಳಿಗೆ ಬಳಸುವ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶವು ಆರ್ಟ್ ಆಫ್ ಲಿವಿಂಗ್ ಆಶ್ರಮದಿಂದ ಸುಮಾರು 3 ಕಿ.ಮೀ ದೂರದಲ್ಲಿದೆ.

ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾದ ಜಿಲೆಟಿನ್ ಕಡ್ಡಿಗಳು ಸಕ್ರಿಯ ಸ್ಥಿತಿಯಲ್ಲಿ ಇರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ಇದರಿಂದ ತಾತ್ಕಾಲಿಕ ನಿರಾಳತೆ ಕಂಡುಬಂದಿದೆ. ಆದರೂ ಘಟನೆಯನ್ನು ಭದ್ರತಾ ಲೋಪವಾಗಿ ಪರಿಗಣಿಸಿ ಪೊಲೀಸರು ಗಂಭೀರ ತನಿಖೆ ಆರಂಭಿಸಿದ್ದಾರೆ.

ಘಟನೆಯ ಮಾಹಿತಿ ದೊರೆತ ತಕ್ಷಣ ಕೇಂದ್ರ ವಿಭಾಗದ ಡಿಐಜಿ ಗಿರೀಶ್ ಅವರು ಕಗ್ಗಲಿಪುರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಸ್ಪಿ ಶ್ರೀನಿವಾಸ್ ಗೌಡ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.

ಈ ಸ್ಫೋಟಕ ವಸ್ತುಗಳನ್ನು ಯಾರಾದರೂ ಉದ್ದೇಶಪೂರ್ವಕವಾಗಿ ಬಿಟ್ಟುಹೋಗಿದ್ದಾರೆಯೇ ಅಥವಾ ಹಿಂದಿನ ದಿನಗಳಲ್ಲಿ ಎಸೆದಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಶಂಕಿತರ ಪತ್ತೆಗೆ ಹುಡುಕಾಟ ಮುಂದುವರಿದಿದೆ.

ಪ್ರಧಾನಿ ಮೋದಿ ಅವರು ಇಂದು ಬೆಂಗಳೂರಿನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಹಿನ್ನೆಲೆಯಲ್ಲಿ ಈ ಘಟನೆ ಹೆಚ್ಚಿನ ಭದ್ರತಾ ಮಹತ್ವ ಪಡೆದಿದ್ದು, ಪೊಲೀಸರು ಹೆಚ್ಚಿನ ಎಚ್ಚರಿಕೆ ವಹಿಸಿದ್ದಾರೆ.

ರೈಲಿನಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಪರಾರಿಯಾಗಿದ್ದ ಆರೋಪಿ ಅರೆಸ್ಟ್!

ಕೇರಳ: ಕೇರಳದಿಂದ ತಮಿಳುನಾಡಿಗೆ ತೆರಳುತ್ತಿದ್ದ ಪಲರುವಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಗಂಭೀರ ಘಟನೆ ಬೆಳಕಿಗೆ ಬಂದಿದೆ.

ಈ ಸಂಬಂಧ ಕೊಲ್ಲಂ ಮೂಲದ 40 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ತನ್ನ ಅಜ್ಜನೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ನಿದ್ದೆಯಲ್ಲಿದ್ದ ಬಾಲಕಿ ಮೇಲೆ ಆರೋಪಿಯು ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯನ್ನು ರೈಲಿನಲ್ಲಿ ಇದ್ದ ಮಹಿಳೆಯೊಬ್ಬರು ಗಮನಿಸಿ ವಿಡಿಯೋ ಮಾಡಿ ತಕ್ಷಣ ಎಚ್ಚರಿಕೆ ನೀಡಿದ್ದಾರೆ.

ರೈಲು ತಮಿಳುನಾಡು ಗಡಿ ಪ್ರವೇಶಿಸುವ ವೇಳೆಗೆ ಆರೋಪಿ ಸೆಂಗೊಟ್ಟೈ ನಿಲ್ದಾಣದಲ್ಲಿ ಇಳಿದು ಪರಾರಿಯಾಗಿದ್ದ. ಬಳಿಕ ಪುನಲೂರು ರೈಲ್ವೆ ಪೊಲೀಸರು ವಿಡಿಯೋ ಸಾಕ್ಷ್ಯ ಹಾಗೂ ದೂರು ಆಧರಿಸಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಮುಂದುವರಿಸಿದ್ದಾರೆ.

IPL 2026: ಗಿಲ್ ಹೊಸ ಮೈಲುಗಲ್ಲು: ರೈನಾ–ಧವನ್ ಬಳಿಕ ಐತಿಹಾಸಿಕ ಸಾಧನೆ!

ಐಪಿಎಲ್ 2026ರ 52ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ನಾಯಕ ಶುಭ್‌ಮನ್ ಗಿಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದಿದ್ದಾರೆ.

ಸವಾಯಿ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಗಿಲ್ ಕೇವಲ 44 ಎಸೆತಗಳಲ್ಲಿ 84 ರನ್ ಸಿಡಿಸಿ ಗಮನ ಸೆಳೆದಿದ್ದಾರೆ. ಗಿಲ್ ಅವರ ಸ್ಫೋಟಕ ಇನ್ನಿಂಗ್ಸ್ ನೆರವಿನಿಂದ ಗುಜರಾತ್ ಟೈಟಾನ್ಸ್ 77 ರನ್‌ಗಳ ಭರ್ಜರಿ ಅಂತರದಲ್ಲಿ ಗೆಲುವು ಸಾಧಿಸಿತು. ಈ ಸೀಸನ್‌ನಲ್ಲಿ ಗಿಲ್ ಅವರ ಫಾರ್ಮ್ ನಿರಂತರವಾಗಿ ಮುಂದುವರಿದಿದ್ದು, 10 ಪಂದ್ಯಗಳಲ್ಲಿ ಒಟ್ಟು 462 ರನ್ ಗಳಿಸಿದ್ದಾರೆ.

ಈ ಸಾಧನೆಯೊಂದಿಗೆ ಶುಭ್‌ಮನ್ ಗಿಲ್ ಐಪಿಎಲ್ ಇತಿಹಾಸದಲ್ಲಿ ವಿಶೇಷ ಕ್ಲಬ್‌ಗೆ ಸೇರ್ಪಡೆಯಾಗಿದ್ದಾರೆ. ಸತತ 7 ಸೀಸನ್‌ಗಳಲ್ಲಿ 400ಕ್ಕೂ ಹೆಚ್ಚು ರನ್ ಗಳಿಸಿದ ಮೂರನೇ ಆಟಗಾರರಾಗಿ ಅವರು ಹೊರಹೊಮ್ಮಿದ್ದಾರೆ. ಈ ಸಾಧನೆ ಈವರೆಗೆ ಸುರೇಶ್ ರೈನಾ ಮತ್ತು ಶಿಖರ್ ಧವನ್ ಮಾತ್ರ ಮಾಡಿದ್ದಾರೆ.

ಸುರೇಶ್ ರೈನಾ 2008ರಿಂದ 2014ರವರೆಗೆ ಸತತ 7 ಸೀಸನ್‌ಗಳಲ್ಲಿ 400+ ರನ್ ಗಳಿಸಿದ್ದರೆ, ಶಿಖರ್ ಧವನ್ 2016ರಿಂದ 2022ರವರೆಗೆ ಈ ಸಾಧನೆ ಮಾಡಿದ್ದಾರೆ. ಇದೀಗ ಗಿಲ್ ಕೂಡ ಈ ಎಲೈಟ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಗಿಲ್ 2022ರಿಂದ ಗುಜರಾತ್ ಟೈಟಾನ್ಸ್ ತಂಡದ ಭಾಗವಾಗಿದ್ದು, ಅದಕ್ಕೂ ಮೊದಲು ಕೋಲ್ಕತ್ತಾ ನೈಟ್ ರೈಡರ್ಸ್ ಪರವೂ ಉತ್ತಮ ಪ್ರದರ್ಶನ ನೀಡಿದ್ದರು.

ಒಂದೇ ಐಪಿಎಲ್ ಸೀಸನ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಇನ್ನೂ ವಿರಾಟ್ ಕೊಹ್ಲಿ ಹೆಸರಲ್ಲೇ ಉಳಿದಿದೆ. 2016ರಲ್ಲಿ ಅವರು 973 ರನ್ ಗಳಿಸಿದ್ದರು. ಜೊತೆಗೆ ಕೊಹ್ಲಿ 11 ಬಾರಿ 400+ ರನ್ ಗಳಿಸಿರುವುದು ಇನ್ನೂ ಅಪ್ರತಿಮ ದಾಖಲೆಯಾಗಿದೆ.

ಈ ನಡುವೆ, ಸತತ ಸೀಸನ್‌ಗಳಲ್ಲಿ 400+ ರನ್ ಗಳಿಸುವ ಸಾಧನೆಯಲ್ಲಿ ಗಿಲ್ ಇದೀಗ ಎಬಿ ಡಿವಿಲಿಯರ್ಸ್ ಅವರ ಸಾಧನೆಯನ್ನು ಹಿಂದಿಕ್ಕಿರುವುದು ಕ್ರಿಕೆಟ್ ವಲಯದಲ್ಲಿ ಗಮನ ಸೆಳೆದಿದೆ.

ಪದೇಪದೇ ಶೀತ–ಕೆಮ್ಮು ಹೆಚ್ಚಾಗುತ್ತಿದೆಯಾ? ಇಮ್ಯುನಿಟಿ ಕುಸಿತ ಇರಬಹುದು ಎಚ್ಚರ!

ದೇಶದ ಹಲವು ರಾಜ್ಯಗಳಲ್ಲಿ ಕಳೆದ ಕೆಲವು ದಿನಗಳಿಂದ ಹವಾಮಾನದಲ್ಲಿ ನಿರಂತರ ಬದಲಾವಣೆ ಕಂಡುಬರುತ್ತಿದ್ದು, ಜನರ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತಿದೆ.

ಕೆಲವೆಡೆ ತೀವ್ರ ಬಿಸಿಲು, ಮತ್ತೆ ಕೆಲವೆಡೆ ಮಳೆ ಹಾಗೂ ತಣ್ಣನೆಯ ಗಾಳಿ ಬೀಸುತ್ತಿರುವುದರಿಂದ ಶೀತ, ಕೆಮ್ಮು ಮತ್ತು ಜ್ವರದಂತಹ ಸೋಂಕುಗಳು ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ.

ಆರೋಗ್ಯ ತಜ್ಞರ ಪ್ರಕಾರ, ಹವಾಮಾನ ಪದೇಪದೇ ಬದಲಾಗುವಾಗ ದೇಹವು ಹೊಸ ಪರಿಸ್ಥಿತಿಗೆ ಹೊಂದಿಕೊಳ್ಳಲು ಹೆಚ್ಚು ಶ್ರಮಪಡಬೇಕಾಗುತ್ತದೆ. ಇದರಿಂದ ರೋಗನಿರೋಧಕ ಶಕ್ತಿ ಕುಂದುದು ಸಾಧ್ಯತೆ ಹೆಚ್ಚುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಸಾಕಷ್ಟು ನಿದ್ರೆ ಇಲ್ಲದಿರುವುದು, ಕಡಿಮೆ ನೀರು ಕುಡಿಯುವುದು ಹಾಗೂ ಪೌಷ್ಟಿಕ ಆಹಾರ ಸೇವನೆಯ ಕೊರತೆ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ಇಮ್ಯುನಿಟಿ ಕಡಿಮೆಯಾದಾಗ ಪದೇಪದೇ ಶೀತ, ಕೆಮ್ಮು, ಗಂಟಲು ನೋವು, ದೇಹದ ನೋವು ಮತ್ತು ಸುಸ್ತು ಕಾಣಿಸಿಕೊಳ್ಳಬಹುದು ಎಂದು ತಜ್ಞರು ಹೇಳಿದ್ದಾರೆ. ಜೊತೆಗೆ ಗಾಯಗಳು ನಿಧಾನವಾಗಿ ಗುಣಮುಖವಾಗುವುದು ಹಾಗೂ ಜೀರ್ಣಕ್ರಿಯೆ ಸಂಬಂಧಿತ ಸಮಸ್ಯೆಗಳೂ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಹವಾಮಾನ ಬದಲಾವಣೆ ನಡುವೆ ಆರೋಗ್ಯ ಕಾಪಾಡಿಕೊಳ್ಳಲು ಸಮತೋಲನ ಆಹಾರ ಅತ್ಯಂತ ಮುಖ್ಯವಾಗಿದೆ. ತಾಜಾ ಹಣ್ಣುಗಳು, ತರಕಾರಿಗಳು ಮತ್ತು ವಿಟಮಿನ್‌ ಸಮೃದ್ಧ ಆಹಾರ ಸೇವನೆ ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ ಎಂದು ತಜ್ಞರು ಸಲಹೆ ನೀಡಿದ್ದಾರೆ.

ದಿನಪೂರ್ತಿ ಸಾಕಷ್ಟು ನೀರು ಕುಡಿಯುವುದು, ಸರಿಯಾದ ನಿದ್ರೆ ಪಡೆಯುವುದು ಮತ್ತು ನಿಯಮಿತ ವ್ಯಾಯಾಮ ಮಾಡುವುದು ಅಗತ್ಯವಾಗಿದೆ. ಜೊತೆಗೆ ಸ್ವಚ್ಛತೆ ಕಾಪಾಡುವುದು ಹಾಗೂ ಹವಾಮಾನಕ್ಕೆ ತಕ್ಕ ಬಟ್ಟೆ ಧರಿಸುವುದೂ ಮುಖ್ಯ ಎಂದು ಅವರು ತಿಳಿಸಿದ್ದಾರೆ.

ಜಂಕ್ ಫುಡ್ ಸೇವನೆ ಮತ್ತು ಅಸಮತೋಲಿತ ಜೀವನಶೈಲಿಯನ್ನು ತಪ್ಪಿಸುವಂತೆ ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ. ಪದೇಪದೇ ಅನಾರೋಗ್ಯ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ ಎಂದು ಅವರು ತಿಳಿಸಿದ್ದಾರೆ.

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗಂಡನ ಹತ್ಯೆ! ಪತ್ನಿ, ಪ್ರಿಯಕನಿಗೆ ಗಲ್ಲು ಶಿಕ್ಷೆ

ಶಿವಮೊಗ್ಗ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಕೊಲೆ ಮಾಡಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನಿಗೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ.

ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು ಫ್ಲೋರಾ ನ್ಯಾನ್ಸಿ ಮತ್ತು ರಾಜಶೇಖರಯ್ಯ ಇಬ್ಬರಿಗೂ ಗಲ್ಲು ಶಿಕ್ಷೆ ವಿಧಿಸಿದ್ದು, ಜೊತೆಗೆ 14 ಲಕ್ಷ ರೂಪಾಯಿ ದಂಡ ಹಾಗೂ ದೂರುದಾರರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.

ಪ್ರಕರಣದ ಹಿನ್ನೆಲೆ ನೋಡಿದರೆ, ಫ್ಲೋರಾ ನ್ಯಾನ್ಸಿ ಭದ್ರಾವತಿಯ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. 2014ರಲ್ಲಿ ಹತ್ತಿರದ ಸಂಬಂಧಿ ಪ್ರಕಾಶ್ ಬಾಬು ಜೊತೆ ಅವರ ವಿವಾಹವಾಗಿತ್ತು. ಟ್ಯಾಕ್ಸಿ ಚಾಲಕರಾಗಿದ್ದ ಪ್ರಕಾಶ್ ಬಾಬು ದಂಪತಿಗೆ ಮಕ್ಕಳಿರಲಿಲ್ಲ.

ವಿವಾಹದ ಕೆಲ ವರ್ಷಗಳ ನಂತರ ಫ್ಲೋರಾ ನ್ಯಾನ್ಸಿಗೆ ರಾಜಶೇಖರಯ್ಯ ಎಂಬ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಬೆಳೆದಿತ್ತು. ಇದಕ್ಕೆ ಪತಿ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ದಾಂಪತ್ಯದಲ್ಲಿ ಕಲಹ ಉಂಟಾಗಿತ್ತು ಎಂದು ತಿಳಿದುಬಂದಿದೆ.

2020ರ ಜನವರಿ 15ರಂದು ರಾತ್ರಿ, ಸುರಗಿತೋಪಿನ ಮನೆಯಲ್ಲಿದ್ದಾಗ ಫ್ಲೋರಾ ನ್ಯಾನ್ಸಿ ಪತಿಗೆ ತಂಪು ಪಾನೀಯದಲ್ಲಿ ನಿದ್ರೆಮಾತ್ರೆ ಬೆರೆಸಿ ಕುಡಿಸಿದ್ದಳು ಎಂದು ಆರೋಪಿಸಲಾಗಿದೆ. ಪತಿ ನಿದ್ರೆಗೆ ಜಾರಿದ ಬಳಿಕ ಪ್ರಿಯಕರ ರಾಜಶೇಖರಯ್ಯನನ್ನು ಮನೆಗೆ ಕರೆಸಿ, ಇಬ್ಬರೂ ಸೇರಿ ಪತಿಯ ಕತ್ತು ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದರು.

ನಂತರ ಶವವನ್ನು ಕಾರಿನಲ್ಲಿ ತೆಗೆದುಕೊಂಡು ಹೋಗಿ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಸಮೀಪದ ಭದ್ರಾ ನಾಲೆಗೆ ಎಸೆದಿದ್ದರು. ಮೂರು ದಿನಗಳ ಬಳಿಕ ಶವ ಪತ್ತೆಯಾಗಿತ್ತು. ಆರಂಭದಲ್ಲಿ ಇದನ್ನು ಆತ್ಮಹತ್ಯೆ ಎಂದು ಭಾವಿಸಲಾಗಿತ್ತು.

ಆದರೆ ಮೃತನ ಸಹೋದರ ಫ್ರಾನ್ಸಿಸ್ ನೀಡಿದ ದೂರಿನ ಆಧಾರದ ಮೇಲೆ ಪೇಪರ್ ಟೌನ್ ಠಾಣೆ ಪೊಲೀಸರು ತನಿಖೆ ನಡೆಸಿದಾಗ ಸತ್ಯ ಬಯಲಾಯಿತು. ವಿಚಾರಣೆಯಲ್ಲಿ ಆರೋಪ ಸಾಬೀತಾಗಿ ಇದೀಗ ಇಬ್ಬರಿಗೂ ಗಲ್ಲು ಶಿಕ್ಷೆ ವಿಧಿಸಲಾಗಿದೆ.

ಬೆಂಗಳೂರಿನಲ್ಲಿ ಮತ್ತೆ ಆತಂಕ: ಕುಸಿಯುವ ಹಂತದಲ್ಲಿರುವ ಗೋಡೆಗಳು, ಅಧಿಕಾರಿಗಳ ನಿರ್ಲಕ್ಷ್ಯ!

ಬೆಂಗಳೂರು: ಇತ್ತೀಚೆಗೆ ನಗರದ ಬೋರಿಂಗ್ ಆಸ್ಪತ್ರೆ ಗೋಡೆ ಕುಸಿದು 8 ಮಂದಿ ಸಾವನ್ನಪ್ಪಿದ ಘಟನೆ ಬಳಿಕವೂ ಅಪಾಯಕಾರಿ ಕಟ್ಟಡಗಳ ಬಗ್ಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

ಘಟನೆಯ ನಂತರ ಜಿಬಿಎ ಅಧಿಕಾರಿಗಳು ಕಾಟಾಚಾರಕ್ಕೆ ಕೆಲ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ್ದರೂ, ಹಲವೆಡೆ ಕುಸಿಯುವ ಹಂತದಲ್ಲಿರುವ ಗೋಡೆಗಳು ಮತ್ತು ಕಾಂಪೌಂಡ್‌ಗಳು ಇನ್ನೂ ಅಪಾಯಕರ ಸ್ಥಿತಿಯಲ್ಲೇ ಇವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ನಗರದ ಆಸ್ಪತ್ರೆಗಳು, ಶಾಲೆಗಳು ಹಾಗೂ ಕಾಲೇಜುಗಳ ಸುತ್ತಮುತ್ತಲಿನ ಗೋಡೆಗಳಲ್ಲಿ ಗಂಭೀರ ಬಿರುಕುಗಳು ಕಾಣಿಸಿಕೊಂಡಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ. ವಿಶೇಷವಾಗಿ ಕಿಮ್ಸ್ ಆಸ್ಪತ್ರೆ ಸಮೀಪದ ಒಂದು ಕಾಲೇಜಿನ ಕಾಂಪೌಂಡ್ ಗೋಡೆ ಹಲವು ವರ್ಷಗಳಿಂದ ದುರ್ಬಲ ಸ್ಥಿತಿಯಲ್ಲಿದ್ದು, ಯಾವ ಕ್ಷಣದಲ್ಲಾದರೂ ಕುಸಿಯುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಗೋಡೆಗಳ ಬಳಿ ವ್ಯಾಪಾರಿಗಳು ವ್ಯಾಪಾರ ನಡೆಸುತ್ತಿದ್ದು, ಪಾದಚಾರಿಗಳು ಕೂಡ ನಿರಂತರವಾಗಿ ಸಂಚರಿಸುತ್ತಿದ್ದಾರೆ. ಮಳೆ ಬಂದರೆ ಗೋಡೆ ಕುಸಿಯುವ ಅಪಾಯ ಹೆಚ್ಚಾಗಿದ್ದು, ಮತ್ತೊಂದು ದುರ್ಘಟನೆ ಸಂಭವಿಸುವ ಮುನ್ನವೇ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಅಪಾಯಕಾರಿ ಕಟ್ಟಡಗಳು ಹಾಗೂ ಗೋಡೆಗಳನ್ನು ತಕ್ಷಣ ಪರಿಶೀಲಿಸಿ ತೆರವುಗೊಳಿಸುವಂತೆ ಸ್ಥಳೀಯರು ಒತ್ತಾಯಿಸಿದ್ದು, ಜಿಬಿಎ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕೆಂದು ಮನವಿ ಮಾಡಿದ್ದಾರೆ.

ತಮಿಳುನಾಡಿನಲ್ಲಿ 10 ಲಕ್ಷ ಕೋಟಿ ಸಾಲದ ಹೊರೆ? ಡಿಎಂಕೆ ಸರ್ಕಾರದ ವಿರುದ್ಧ ಗುಡುಗಿದ ಸಿಎಂ ವಿಜಯ್!

ಚೆನ್ನೈ: ತಮಿಳುನಾಡಿನ ಪ್ರಸ್ತುತ ಆರ್ಥಿಕ ಸ್ಥಿತಿಗತಿಯ ಬಗ್ಗೆ ಸಾರ್ವಜನಿಕರಿಗೆ ಪಾರದರ್ಶಕ ಮಾಹಿತಿ ನೀಡಲು ಶ್ವೇತಪತ್ರ  ಬಿಡುಗಡೆ ಮಾಡುವುದಾಗಿ ನೂತನ ಮುಖ್ಯಮಂತ್ರಿ ಹಾಗೂ TVK ಮುಖ್ಯಸ್ಥ ವಿಜಯ್ ಅವರು ಘೋಷಿಸಿದ್ದಾರೆ.

ಪ್ರಮಾಣವಚನ ಸ್ವೀಕರಿಸಿದ ನಂತರ ನಡೆದ ತಮ್ಮ ಮೊದಲ ಭಾಷಣದಲ್ಲಿ ಅವರು ಹಿಂದಿನ ಡಿಎಂಕೆ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಾಜ್ಯವನ್ನು ಸುಮಾರು 10 ಲಕ್ಷ ಕೋಟಿ ರೂಪಾಯಿಗೂ ಅಧಿಕ ಸಾಲದ ಹೊರೆ ಜೊತೆಗೆ ಸ್ವೀಕರಿಸಿದ್ದೇನೆ ಎಂದು ಹೇಳಿದ ವಿಜಯ್, ಸಾರ್ವಜನಿಕರಿಗೆ ನೈಜ ಸ್ಥಿತಿಯನ್ನು ತಿಳಿಸುವುದು ತಮ್ಮ ಕರ್ತವ್ಯವಾಗಿದೆ ಎಂದು ಸ್ಪಷ್ಟಪಡಿಸಿದರು. ಈ ಹಿನ್ನೆಲೆಯಲ್ಲಿ ಶ್ವೇತಪತ್ರ ಬಿಡುಗಡೆ ಮಾಡಲಾಗುವುದು ಎಂದು ಅವರು ಘೋಷಿಸಿದರು.

“ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ಮೋಸಗೊಳಿಸುವ ರಾಜಕಾರಣವನ್ನು ನಾನು ಮಾಡುವುದಿಲ್ಲ. ನನ್ನ ಸರ್ಕಾರ ಸಂಪೂರ್ಣ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಿದೆ” ಎಂದು ಅವರು ಹೇಳಿದರು. ಸರ್ಕಾರದ ಪ್ರತಿಯೊಂದು ನಿರ್ಧಾರವೂ ಜನರಿಗೆ ತಿಳಿಯುವಂತೆ ಮಾಡಲಾಗುವುದು ಎಂದೂ ಅವರು ಭರವಸೆ ನೀಡಿದರು.

“ಇದು ಕೇವಲ ನನ್ನ ಸರ್ಕಾರವಲ್ಲ, ಇದು ಜನರ ಸರ್ಕಾರ”. ಅಧಿಕಾರವನ್ನು ಜನಸೇವೆಯ ಜವಾಬ್ದಾರಿಯಾಗಿ ನೋಡಬೇಕು ಎಂದು ಒತ್ತಿ ಹೇಳಿದರು. ರಾಜ್ಯದ ಆಡಳಿತ ವ್ಯವಸ್ಥೆಯನ್ನು ಸರಿಪಡಿಸಲು ಸ್ವಲ್ಪ ಸಮಯ ನೀಡಬೇಕೆಂದು ಅವರು ಮನವಿ ಮಾಡಿದರು.

ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ಮಾದಕ ದ್ರವ್ಯಗಳ ಹಾವಳಿಯನ್ನು ಸಂಪೂರ್ಣವಾಗಿ ಅಂತ್ಯಗೊಳಿಸುವುದು ತಮ್ಮ ಸರ್ಕಾರದ ಮೊದಲ ಆದ್ಯತೆ ಎಂದು ವಿಜಯ್ ಘೋಷಿಸಿದರು.

 

ಪ್ರಧಾನಿ ಮೋದಿಗೆ 13 ಕೆಜಿ ಬೆಳ್ಳಿ ಪ್ರತಿಮೆ ನೀಡಿ ಸನ್ಮಾನ: ಕರ್ನಾಟಕದ ಸಿಎಂ ಬಗ್ಗೆ ವ್ಯಂಗ್ಯವಾಡಿದ ‘ನಮೋ’!

ಬೆಂಗಳೂರು: ಮೂರು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕಕ್ಕೆ ಆಗಮಿಸಿದರು.

ಬೆಂಗಳೂರಿನ ಎಚ್‌ಎಎಲ್ ಆವರಣದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ನಾಯಕರಿಂದ ಪ್ರಧಾನಿಗೆ ಅದ್ಧೂರಿ ಸನ್ಮಾನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪ್ರಧಾನಿ ಮೋದಿಗೆ 13 ಕೆಜಿ ತೂಕದ ಬೆಳ್ಳಿಯ ಪ್ರತಿಮೆ ನೀಡಿ ಗೌರವಿಸಲಾಯಿತು. ಈ ವೇಳೆ ಬಿಜೆಪಿ ನಾಯಕರಿಂದ ಜಯಭೇರಿ ಸಂಭ್ರಮವೂ ವ್ಯಕ್ತವಾಯಿತು.

ಈ ಸಮಾರಂಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವಾರು ಪ್ರಮುಖ ನಾಯಕರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಚುನಾವಣಾ ಯಶಸ್ಸಿನ ಸಂಭ್ರಮ ಹಂಚಿಕೊಳ್ಳಲಾಗಿದ್ದು, ನಾಯಕರು ಒಟ್ಟಾಗಿ ಕೇಂದ್ರ ನಾಯಕತ್ವಕ್ಕೆ ಅಭಿನಂದನೆ ಸಲ್ಲಿಸಿದರು.  ಇದೇ ವೇಳೆ, ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ಬಗ್ಗೆ ಪ್ರಸ್ತಾಪಿಸಿದ ಮೋದಿ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ’ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್​​ ಎಲ್ಲೆಲ್ಲಿ ಅಧಿಕಾರಕ್ಕೆ ಬರುತ್ತದೆಯೋ ಅಲ್ಲೆಲ್ಲ ಒಂದೊಂದು ಸಮಸ್ಯೆ ಇದ್ದೇ ಇರುತ್ತದೆ. ಹಿಮಾಚಲ ಪ್ರದೇಶದಲ್ಲಿ ಸಫಾಯಿ ಕರ್ಮಚಾರಿಗಳಿಗೆ ವೇತನ ದೊರೆಯುತ್ತಿಲ್ಲ. ತೆಲಂಗಾಣದಲ್ಲಿ ರೈತರ ಆತ್ಮಹತ್ಯೆಗಳಾಗುತ್ತಿವೆ. ಕೇರಳದಲ್ಲಿ ಬಹುಮತದೊಂದಿಗೆ ಚುನಾವಣೆ ಗೆದ್ದರೂ ಇನ್ನೂ ಸಿಎಂ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಇಲ್ಲಿ ಕರ್ನಾಟಕದಲ್ಲೂ ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ ಎಂದು ಹೇಳುವ ಮೂಲಕ ರಾಜ್ಯ ಸರ್ಕಾರದ ಆಂತರಿಕ ಕಚ್ಚಾಟವನ್ನು ಮೋದಿ ಲೇವಡಿ ಮಾಡಿದರು.

ಕಾಂಗ್ರೆಸ್​ ಸರ್ಕಾರ ಎಲ್ಲೆಲ್ಲಿ ಇದೆಯೋ ಅಲ್ಲೆಲ್ಲ ಖಜಾನೆ ಲೂಟಿ ಹೊಡೆಯುತ್ತಿದ್ದಾರೆ. ಜನರು ಸಮಸ್ಯೆಗಳಿಂದ ಬಳಲುತ್ತಿದ್ದರೆ, ಸರ್ಕಾರದ ನಾಯಕರು ಮಾತ್ರ ಲೂಟಿ ಹೊಡೆದ ಹಣಕ್ಕಾಗಿ ಆಂತರಿಕ ಜಗಳ ಮತ್ತು ಕುರ್ಚಿ ಕಿತ್ತಾಟದಲ್ಲಿ ಮುಳುಗಿದ್ದಾರೆ. ರಾಜಸ್ಥಾನದಲ್ಲಿ ಏನಾಯಿತು ಎಂಬುದು ನಿಮಗೆ ಗೊತ್ತಿದೆ, ಕರ್ನಾಟಕದಲ್ಲೂ ಅದೇ ಹಾದಿ ಮುಂದುವರಿಯುತ್ತಿದೆ ಎಂದು ಮೋದಿ ಹೇಳಿದರು.

ಮಳೆ ನೀರಿಗೆ ಸರ್ಕಾರಿ ಫೈಲ್‌ಗಳು ನಾಶ: ಬಿಸಿಲಿನಲ್ಲಿ ಫೈಲ್‌ಗಳನ್ನು ಒಣಗಿಸುತ್ತಿರುವ ಸಿಬ್ಬಂದಿ!

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಕಡತಗಳ ಸುರಕ್ಷತೆ ಅಧಿಕಾರಿಗಳ ಮೂಲಭೂತ ಜವಾಬ್ದಾರಿಯಾಗಿದ್ದರೂ, ನಗರದ ಕೆ.ಆರ್. ಸರ್ಕಲ್‌ನಲ್ಲಿರುವ ಲೋಕೋಪಯೋಗಿ ಇಲಾಖೆ (PWD) ಕಚೇರಿಯಲ್ಲಿ ಗಂಭೀರ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ.

ಮಳೆಯ ನೀರು ನುಗ್ಗಿದ ಪರಿಣಾಮ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಯಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ವ್ಯವಹಾರಗಳಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳು ಹಾನಿಗೊಂಡಿರುವ ಘಟನೆ ನಡೆದಿದೆ.

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಕಚೇರಿಯ ನೆಲಮಹಡಿಗೆ ನೀರು ನುಗ್ಗಿದ್ದು, ಭೂಸ್ವಾಧೀನ ಹಾಗೂ ಪರಿಹಾರ ಕಾರ್ಯಗಳಿಗೆ ಸಂಬಂಧಿಸಿದ ಪ್ರಮುಖ ಕಡತಗಳು ಸಂಪೂರ್ಣವಾಗಿ ಒದ್ದೆಯಾಗಿವೆ. ದಾಖಲೆಗಳ ಮಹತ್ವ ಅರಿತಿದ್ದರೂ ಅವುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸದ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಸ್ಥಿತಿಗೆ ಕಾರಣ ಎಂಬ ಆರೋಪ ಕೇಳಿಬಂದಿದೆ.

ಹಾನಿಗೊಂಡ ಕಡತಗಳನ್ನು ಪ್ರಸ್ತುತ ಕಚೇರಿಯ ಮುಂಭಾಗದಲ್ಲಿ ಬಿಸಿಲಿಗೆ ಒಣಗಿಸಲು ಇಡಲಾಗಿದ್ದು, ಕೆಲವು ದಾಖಲೆಗಳಲ್ಲಿನ ಬರಹಗಳು ಮತ್ತು ಅಧಿಕೃತ ಟಿಪ್ಪಣಿಗಳು ಅಳಿದುಹೋಗಿರುವ ಆತಂಕ ವ್ಯಕ್ತವಾಗಿದೆ. ಇದರಿಂದ ಆಡಳಿತಾತ್ಮಕ ವ್ಯವಹಾರಗಳ ಪಾರದರ್ಶಕತೆ ಮೇಲೆ ಪ್ರಶ್ನೆಗಳು ಉದ್ಭವಿಸಿವೆ.

ಕೋಟ್ಯಂತರ ರೂಪಾಯಿ ಮೌಲ್ಯದ ವ್ಯವಹಾರಗಳಿಗೆ ಸಂಬಂಧಿಸಿದ ಈ ದಾಖಲೆಗಳ ನಾಶದ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸಚಿವ ಡಿ. ಸುಧಾಕರ್ ನಿಧನ: ಸಿಎಂ ಸಂತಾಪ, ಅಂತ್ಯ ಸಂಸ್ಕಾರಕ್ಕೆ ಚಳ್ಳಕೆರೆಯಲ್ಲಿ ಸಿದ್ಧತೆ!

ಚಿತ್ರದುರ್ಗ: ರಾಜ್ಯ ರಾಜಕೀಯದ ಹಿರಿಯ ನಾಯಕ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (65) ಅವರು ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 3:15ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕಿಮ್ಸ್ ಆಸ್ಪತ್ರೆಯ ಮೂಲಗಳು ಅಧಿಕೃತವಾಗಿ ತಿಳಿಸಿವೆ.

ಮೊದಲು ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಚಿವ ಡಿ. ಸುಧಾಕರ್ ಅವರಿಗೆ ಬಳಿಕ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದ ಕಾರಣ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಚಿಕಿತ್ಸೆ ಮುಂದುವರಿದಿದ್ದರೂ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.

ಸಚಿವ ಡಿ. ಸುಧಾಕರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ ಸೂಚಿಸಿದ್ದು, ತಮ್ಮ ಎಕ್ಸ್ ಖಾತೆಯಲ್ಲಿ ಭಾವನಾತ್ಮಕ ಸಂದೇಶವನ್ನು ಹಂಚಿಕೊಂಡಿದ್ದಾರೆ. “ನಮ್ಮ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಹಿರಿಯ ನಾಯಕರು ಆಗಿದ್ದ ಡಿ. ಸುಧಾಕರ್ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ತಮ್ಮ ಸಂದೇಶದಲ್ಲಿ, ಇತ್ತೀಚೆಗೆ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದೆ, ಅವರು ಗುಣಮುಖರಾಗುವ ಭರವಸೆ ನನಗಿತ್ತು. ಆದರೆ ವೈದ್ಯರ ನಿರಂತರ ಪ್ರಯತ್ನಗಳ ನಡುವೆಯೂ ಅವರು ನಮ್ಮನ್ನಗಲಿದ್ದಾರೆ ಎಂದು ದುಃಖ ವ್ಯಕ್ತಪಡಿಸಿದ್ದಾರೆ.

ಜನಸೇವೆಯಲ್ಲಿ ಅಪಾರ ಕಾಳಜಿ ಮತ್ತು ಬದ್ಧತೆ ಹೊಂದಿದ್ದ ಸುಧಾಕರ್ ಅವರು ಇನ್ನಷ್ಟು ಕಾಲ ಜನರ ನಡುವೆ ಇರಬೇಕಿತ್ತು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿ ಸಿಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಡಿ. ಸುಧಾಕರ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ ಡಿ. ಸುಧಾಕರ್ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಸಾರ್ವಜನಿಕರು ಮತ್ತು ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಂತಿಮ ದರ್ಶನದ ಬಳಿಕ, ಡಿ. ಸುಧಾಕರ್ ಅವರ ಅಂತ್ಯ ಸಂಸ್ಕಾರದ ವಿಧಿವಿಧಾನಗಳನ್ನು ನೆರವೇರಿಸಲು ವ್ಯವಸ್ಥೆ ಮಾಡಲಾಗಿದೆ. ಚಳ್ಳಕೆರೆಯಲ್ಲಿರುವ ಸುಧಾಕರ್ ಶಟಲ್ ಕಾಕ್ ಕೋರ್ಟ್‌ನಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆಗಳು ನಡೆಯುತ್ತಿವೆ.

ಈ ಘಟನೆಯಿಂದ ರಾಜ್ಯ ರಾಜಕೀಯ ವಲಯದಲ್ಲಿ ಶೋಕದ ವಾತಾವರಣ ಆವರಿಸಿದೆ.

error: Content is protected !!