Home Blog

ಅಫ್ಘಾನಿಸ್ತಾನ ಸರಣಿಗೆ ಭಾರತ ಸಜ್ಜು; ರೋಹಿತ್-ಹಾರ್ದಿಕ್ ಫಿಟ್ನೆಸ್ ಮೇಲೆ ಕಣ್ಣಿಟ್ಟ ಬಿಸಿಸಿಐ

ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ ಸಜ್ಜಾಗುತ್ತಿದೆ. ಈಗಾಗಲೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಎರಡೂ ಸರಣಿಗಳಿಗಾಗಿ ತಂಡಗಳನ್ನು ಪ್ರಕಟಿಸಿದ್ದು,

ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಇಬ್ಬರೂ ಸಂಪೂರ್ಣ ಫಿಟ್ ಆಗಿರುವುದು ಖಚಿತವಾದ ಬಳಿಕವೇ ಅಂತಿಮವಾಗಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದುಬಂದಿದೆ.

ಆಟಗಾರರ ದೈಹಿಕ ಸಾಮರ್ಥ್ಯ ಪರಿಶೀಲನೆಗಾಗಿ ಬಿಸಿಸಿಐ, ಹಾರ್ದಿಕ್ ಪಾಂಡ್ಯ ಮತ್ತು ರೋಹಿತ್ ಶರ್ಮಾ ಅವರಿಗೆ ಆರೋಗ್ಯ ತಪಾಸಣೆಗೆ ಹಾಜರಾಗುವಂತೆ ಸೂಚಿಸಿದೆ. ಇದರಂತೆ ಹಾರ್ದಿಕ್ ಪಾಂಡ್ಯ ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಒಂದು ವಾರ ಕಾಲ ತರಬೇತಿ ಮತ್ತು ಫಿಟ್ನೆಸ್ ಮೌಲ್ಯಮಾಪನಕ್ಕೆ ಒಳಗಾಗಲಿದ್ದಾರೆ.

ತಪಾಸಣೆ ಪೂರ್ಣಗೊಂಡ ಬಳಿಕ ಅವರು ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ರೋಹಿತ್ ಶರ್ಮಾ ಅವರ ಫಿಟ್ನೆಸ್ ಕುರಿತಾಗಿ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಜಮ್ಮು ಮತ್ತು ಕಾಶ್ಮೀರದ ಪ್ರತಿಭಾವಂತ ವೇಗಿ ಔಕಿಬ್ ನಬಿ ದಾರ್ ಅವರಿಗೆ ಭಾರತ ತಂಡದಲ್ಲಿ ಸ್ಥಾನ ನೀಡದಿರುವುದು ಕ್ರಿಕೆಟ್ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಜೂನ್ 6ರಿಂದ ಆರಂಭವಾಗಲಿರುವ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯಕ್ಕೂ ಮುನ್ನ ನಡೆಯುವ ಅಭ್ಯಾಸ ಪಂದ್ಯದಲ್ಲಿ ಭಾಗವಹಿಸಲು ಬಿಸಿಸಿಐ ಔಕಿಬ್ ಅವರಿಗೆ ಅವಕಾಶ ನೀಡಿದೆ.

ಅಫ್ಘಾನಿಸ್ತಾನ ತಂಡದಲ್ಲಿ ಗುಣಮಟ್ಟದ ಸ್ಪಿನ್ನರ್‌ಗಳಿರುವುದರಿಂದ, ನೆಟ್‌ಗಳಲ್ಲಿ ಬ್ಯಾಟರ್‌ಗಳಿಗೆ ಸವಾಲೊಡ್ಡಲು ಸನ್‌ರೈಸರ್ಸ್ ಹೈದರಾಬಾದ್ ತಂಡದ ಲೆಗ್ ಸ್ಪಿನ್ನರ್ ಜೀಶನ್ ಅನ್ಸಾರಿ ಅವರನ್ನೂ ಅಭ್ಯಾಸ ಶಿಬಿರಕ್ಕೆ ಕರೆಸಲಾಗಿದೆ.

ಕೇವಲ ಏಳು ದಿನಗಳ ಅವಧಿಯಲ್ಲಿ ಮೂರು ಏಕದಿನ ಪಂದ್ಯಗಳನ್ನು ಆಡಬೇಕಿರುವ ಕಾರಣ ವೇಗದ ಬೌಲರ್‌ಗಳ ಮೇಲೆ ಹೆಚ್ಚಿನ ಹೊರೆ ಬೀಳುವ ಸಾಧ್ಯತೆ ಇದೆ. ಇದರ ಜೊತೆಗೆ ಹವಾಮಾನ ವೈಪರಿತ್ಯವೂ ತಲೆನೋವಾಗಿ ಪರಿಣಮಿಸಿದೆ.

ಈ ಹಿನ್ನೆಲೆಯಲ್ಲಿ ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ಸೇರಿದಂತೆ ಪ್ರಮುಖ ವೇಗಿಗಳು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಸಿದ್ಧತೆ ನಡೆಸಲು ವಿಶೇಷ ತರಬೇತಿ ನೀಡಲಾಗುತ್ತಿದೆ. ಬ್ಯಾಟರ್‌ಗಳಿಗೂ ಹೆಚ್ಚಿನ ಅಭ್ಯಾಸದ ಅಗತ್ಯವಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ರಣಜಿ ಟ್ರೋಫಿಯ ಹಾಲಿ ಚಾಂಪಿಯನ್ ಜಮ್ಮು ಮತ್ತು ಕಾಶ್ಮೀರ ತಂಡದ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದ ಔಕಿಬ್ ನಬಿ ದಾರ್, ಕಳೆದ ಋತುವಿನಲ್ಲಿ 60 ವಿಕೆಟ್‌ಗಳನ್ನು ಕಬಳಿಸಿ ಗಮನ ಸೆಳೆದಿದ್ದರು. ಆದಾಗ್ಯೂ, ಬಿಸಿಸಿಐ ಪ್ರಕಟಿಸಿರುವ 15 ಸದಸ್ಯರ ತಂಡದಲ್ಲಿ ಅವರಿಗೆ ಸ್ಥಾನ ಸಿಕ್ಕಿಲ್ಲ.

ಆದರೆ ಅಭ್ಯಾಸ ಪಂದ್ಯಗಳ ಮೂಲಕ ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಅವರಿಗೆ ಅವಕಾಶ ದೊರೆತಿದ್ದು, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಹಾಗೂ ಗುರ್ನೂರ್ ಬ್ರಾರ್‌ರೊಂದಿಗೆ ತರಬೇತಿ ಪಡೆಯಲಿದ್ದಾರೆ ಎನ್ನಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಮತ್ತೊಬ್ಬ ವೇಗಿ ಶಶಿಕಾಂತ್ ಅವರನ್ನು ತಂಡದಿಂದ ಕೈಬಿಟ್ಟಿರುವುದು ಕೂಡ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಭಾರತದ ಮಾಜಿ ನಾಯಕ ಹಾಗೂ ಮಾಜಿ ಆಯ್ಕೆ ಸಮಿತಿ ಅಧ್ಯಕ್ಷ ದಿಲೀಪ್ ವೆಂಗ್ಸರ್ಕರ್, ದೇಶಿ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಆಟಗಾರರಿಗೆ ಅವಕಾಶ ನೀಡದಿದ್ದರೆ ರಣಜಿ ಟ್ರೋಫಿಯ ಮಹತ್ವವೇನು ಎಂದು ಪ್ರಶ್ನಿಸಿದ್ದಾರೆ.

ಭಾರತ ತಂಡದ ಮೊದಲ ಅಭ್ಯಾಸ ಪಂದ್ಯ ಮಂಗಳವಾರ ಮಧ್ಯಾಹ್ನ ಆರಂಭವಾಗಲಿದೆ. ಆದರೆ ಇತ್ತೀಚೆಗೆ ಐಪಿಎಲ್ ಫೈನಲ್‌ನಲ್ಲಿ ಆಡಿದ್ದ ಆಟಗಾರರು ಮೊದಲ ದಿನದ ಅಭ್ಯಾಸ ಪಂದ್ಯದಲ್ಲಿ ಭಾಗವಹಿಸುವ ಸಾಧ್ಯತೆ ಕಡಿಮೆಯಿದೆ.

ಗುಜರಾತ್ ಟೈಟಾನ್ಸ್ ತಂಡದ ಆಟಗಾರರಾದ ಶುಭಮನ್ ಗಿಲ್, ಸಾಯಿ ಸುದರ್ಶನ್, ಗುರ್ನೂರ್ ಬ್ರಾರ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಮಾನವ್ ಸುತಾರ್ ಹಾಗೂ ವಾಷಿಂಗ್ಟನ್ ಸುಂದರ್ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ತಂಡದ ಭಾಗವಾಗಿದ್ದಾರೆ.

ಅಫ್ಘಾನಿಸ್ತಾನ ಸರಣಿಗೆ ಮುನ್ನ ಭಾರತ ತಂಡದ ಸಿದ್ಧತೆಗಳು ಚುರುಕುಗೊಂಡಿದ್ದು, ಫಿಟ್ನೆಸ್, ತಂಡದ ಸಮತೋಲನ ಮತ್ತು ಯುವ ಆಟಗಾರರ ಪ್ರದರ್ಶನದ ಮೇಲೆ ಬಿಸಿಸಿಐ ವಿಶೇಷ ಗಮನ ಹರಿಸಿದೆ.

‘ಜನಸೇವೆಯಲ್ಲಿ ಯಶಸ್ಸು ಸಿಗಲಿ’: ಸಿಎಂ ಆಗುತ್ತಿರುವ ಡಿಕೆಶಿಗೆ ಸ್ವಾಮೀಜಿಯ ಆಶೀರ್ವಾದ 

ಚಿತ್ರದುರ್ಗ: ಮುಖ್ಯಮಂತ್ರಿ ಪದಗ್ರಹಣದ ಮುನ್ನ ಡಿ.ಕೆ. ಶಿವಕುಮಾರ್ ಅವರಿಗೆ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಶುಭಾಶಯ ಮತ್ತು ಆಶೀರ್ವಾದ ಕೋರಿದ್ದಾರೆ.

ಮಾದನಾಯಕನಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸ್ವಾಮೀಜಿ, ಡಿಕೆ ಶಿವಕುಮಾರ್ ಅವರು ಮಠದ ಭಕ್ತರಾಗಿದ್ದು, ಹಲವು ವರ್ಷಗಳಿಂದ ಶ್ರದ್ಧಾ-ಭಕ್ತಿಯಿಂದ ಸೇವೆ ಸಲ್ಲಿಸಿದ್ದಾರೆ. ಗುರುಗಳ ಕೃಪೆ ಮತ್ತು ಭಕ್ತರ ಆಶೀರ್ವಾದದಿಂದ ಅವರು ಮುಖ್ಯಮಂತ್ರಿ ಸ್ಥಾನಕ್ಕೇರಿದ್ದಾರೆ ಎಂದು ಹೇಳಿದರು.

ರೈತರು, ವ್ಯಾಪಾರಿಗಳು, ಮಹಿಳೆಯರು, ಯುವಕರು ಹಾಗೂ ಸಮಾಜದ ಎಲ್ಲ ವರ್ಗಗಳ ಹಿತಕ್ಕಾಗಿ ಕೆಲಸ ಮಾಡುವ ಶಕ್ತಿ ಅವರಿಗೆ ದೊರೆಯಲಿ. ರಾಜ್ಯದ ಅಭಿವೃದ್ಧಿಗೆ ಸಮರ್ಪಿತ ಆಡಳಿತ ನೀಡುವಂತಾಗಲಿ ಎಂದು ಆಶಿಸಿದರು.

ಸಿಎಂ ಪ್ರಮಾಣವಚನದ ಮುಹೂರ್ತವೂ ಅತ್ಯಂತ ಶುಭಕರವಾಗಿದ್ದು, ಅವರ ರಾಜಕೀಯ ಪಯಣ ಮತ್ತಷ್ಟು ಯಶಸ್ಸಿನತ್ತ ಸಾಗಲಿದೆ ಎಂದು ಸ್ವಾಮೀಜಿ ವಿಶ್ವಾಸ ವ್ಯಕ್ತಪಡಿಸಿದರು.

ತೀರ್ಥಹಳ್ಳಿ ಮಾರ್ಗದಲ್ಲಿ ಐರಾವತ ಬಸ್ ಅಪಘಾತ: ಅಡಿಕೆ ತೋಟಕ್ಕೆ ನುಗ್ಗಿದ ವಾಹನ

ಶಿವಮೊಗ್ಗ: ಬೆಂಗಳೂರಿನಿಂದ ತೀರ್ಥಹಳ್ಳಿಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಐರಾವತ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಅಡಿಕೆ ತೋಟಕ್ಕೆ ನುಗ್ಗಿದ ಘಟನೆ ಮುಡುಬಾ ಸಮೀಪ ನಡೆದಿದೆ.

ಅಪಘಾತದ ಪರಿಣಾಮ ತೋಟದ ಬೇಲಿ ಮತ್ತು ಕೆಲವು ಅಡಿಕೆ ಮರಗಳಿಗೆ ಹಾನಿಯಾಗಿದ್ದು, ಬಸ್‌ಗೆ ಸಣ್ಣ ಪ್ರಮಾಣದ ಹಾನಿಯಾಗಿದೆ. ಆದರೆ ಬಸ್‌ನಲ್ಲಿದ್ದ ಪ್ರಯಾಣಿಕರು ಹಾಗೂ ಸಿಬ್ಬಂದಿ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಅಪಘಾತದ ಸುದ್ದಿ ತಿಳಿದ ಕೂಡಲೇ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಭಾಯಿಸಲು ಸಹಕರಿಸಿದ್ದಾರೆ. ಘಟನೆಯಿಂದ ಕೆಲಕಾಲ ಸಂಚಾರದಲ್ಲೂ ವ್ಯತ್ಯಯ ಉಂಟಾಯಿತು.

ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಪಘಾತದ ನಿಖರ ಕಾರಣದ ಬಗ್ಗೆ ತನಿಖೆ ಮುಂದುವರಿದಿದೆ.

ಸಿಎಂ ಪ್ರಮಾಣವಚನಕ್ಕೂ ಮುನ್ನ ಯಡಿಯೂರಪ್ಪ ಮನೆಗೆ ಡಿಕೆಶಿ ಭೇಟಿ: ಖುದ್ದಾಗಿ ಆಹ್ವಾನ

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಜ್ಜಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಹತ್ವದ ರಾಜಕೀಯ ನಡೆ ಕೈಗೊಂಡಿದ್ದು, ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನ ನೀಡಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಅವರ ನಿವಾಸ ‘ಧವಳಗಿರಿ’ಗೆ ಭೇಟಿ ನೀಡಿದ ಡಿಕೆಶಿ, ಸ್ವತಃ ಆಹ್ವಾನ ಪತ್ರಿಕೆಯನ್ನು ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಭೇಟಿ ವೇಳೆ ರಾಜ್ಯದ ಅಭಿವೃದ್ಧಿ ವಿಚಾರದಲ್ಲೂ ಚರ್ಚೆ ನಡೆದಿದ್ದು, ಹೊಸ ಸರ್ಕಾರದ ಕಾರ್ಯಚಟುವಟಿಕೆಗಳಿಗೆ ವಿರೋಧ ಪಕ್ಷದಿಂದ ರಚನಾತ್ಮಕ ಸಹಕಾರ ನೀಡುವಂತೆ ಡಿಕೆಶಿ ಕೋರಿದ್ದಾರೆ ಎನ್ನಲಾಗಿದೆ.

ಇಂದು ಸಂಜೆ ರಾಜಭವನ ಆವರಣದ ಗಾಜಿನ ಮನೆಯಲ್ಲಿ ನಡೆಯಲಿರುವ ಪ್ರಮಾಣವಚನ ಸಮಾರಂಭದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದು, ಯಡಿಯೂರಪ್ಪ ಕೂಡ ಆಹ್ವಾನಿತರ ಪಟ್ಟಿಯಲ್ಲಿ ಪ್ರಮುಖರಾಗಿದ್ದಾರೆ.

ಸ್ಪೀಕರ್ ಹುದ್ದೆಗೆ ಯು.ಟಿ. ಖಾದರ್ ರಾಜೀನಾಮೆ: ಡಿಕೆಶಿ ಸಂಪುಟ ಸೇರ್ಪಡೆ ಖಚಿತ

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವುದು ಖಚಿತವಾದ ಬೆನ್ನಲ್ಲೇ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಲೋಕಭವನದಲ್ಲಿ ಡೆಪ್ಯುಟಿ ಸ್ಪೀಕರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸುವ ಮೂಲಕ ಅವರು ಸ್ಪೀಕರ್ ಹುದ್ದೆಯಿಂದ ನಿರ್ಗಮಿಸಿದ್ದಾರೆ.

ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಸಿದ್ಧರಾಗಿರುವ ಖಾದರ್ ಅವರಿಗೆ ಮುಖ್ಯಮಂತ್ರಿ ನಿಯೋಜಿತ ಡಿ.ಕೆ. ಶಿವಕುಮಾರ್ ಅವರಿಂದ ಕರೆ ಬಂದ ಬಳಿಕ ರಾಜೀನಾಮೆ ಪ್ರಕ್ರಿಯೆ ಪೂರ್ಣಗೊಂಡಿದೆ ಎನ್ನಲಾಗಿದೆ.

ಸ್ಪೀಕರ್ ಆಗಿ ಮೂರು ವರ್ಷಗಳ ಅವಧಿಯಲ್ಲಿ ಸಹಕಾರ ನೀಡಿದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಖಾದರ್ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ನಿರ್ಧಾರದ ಬಗ್ಗೆ ಮಾಹಿತಿ ನೀಡಿದ್ದಾರೆ.

ಸಚಿವ ಸ್ಥಾನ ಕುರಿತು ಪ್ರತಿಕ್ರಿಯಿಸಿರುವ ಖಾದರ್, ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ. ಆದರೆ ಆರೋಗ್ಯ ಅಥವಾ ವಸತಿ ಖಾತೆ ಸಿಕ್ಕರೆ ಉತ್ತಮ. ಪಕ್ಷ ಯಾವ ಜವಾಬ್ದಾರಿ ನೀಡಿದರೂ ನಿಭಾಯಿಸಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

ಖಾದರ್ ಸಚಿವರಾಗುವುದು ಬಹುತೇಕ ಖಚಿತವಾಗಿರುವ ಕಾರಣ ಅವರ ಬೆಂಬಲಿಗರು ಈಗಾಗಲೇ ಸಂಭ್ರಮಾಚರಣೆ ಆರಂಭಿಸಿದ್ದು, ಬೆಂಗಳೂರಿನ ನಿವಾಸಕ್ಕೆ ಭೇಟಿ ನೀಡಿ ಶುಭಾಶಯ ಕೋರುತ್ತಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆ ಬಿ.ಕೆ. ಹರಿಪ್ರಸಾದ್ ಹೆಸರು ಫೈನಲ್?: ಸತೀಶ್ ಜಾರಕಿಹೊಳಿಗೆ ಹೈಕಮಾಂಡ್ ಶಾಕ್!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನಗಳ ಹಂಚಿಕೆ ಕುರಿತ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿರುವ ನಡುವೆಯೇ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಬಗ್ಗೆ ಹೈಕಮಾಂಡ್ ಒಲವು ತೋರಿದೆ ಎನ್ನುವ ಮಾಹಿತಿ ಪಕ್ಷದ ವಲಯಗಳಿಂದ ಲಭ್ಯವಾಗಿದೆ.

ಮೂಲಗಳ ಪ್ರಕಾರ, ಕೆಪಿಸಿಸಿ ಅಧ್ಯಕ್ಷರ ಜವಾಬ್ದಾರಿ ವಹಿಸಿಕೊಳ್ಳುವಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರಿಂದಲೇ ಬಿ.ಕೆ. ಹರಿಪ್ರಸಾದ್ ಅವರಿಗೆ ದೂರವಾಣಿ ಕರೆ ಬಂದಿದ್ದು, ಎಂಎಲ್‌ಸಿ ಸ್ಥಾನ ಜತೆಗೆ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ ನೀಡುವ ಕುರಿತು ಚರ್ಚೆ ನಡೆದಿರುವುದಾಗಿ ತಿಳಿದುಬಂದಿದೆ.

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲಿರುವುದು ಬಹುತೇಕ ಖಚಿತವಾದ ಬಳಿಕ, ಅವರು ನಿರ್ವಹಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಹಲವು ನಾಯಕರು ಆಕಾಂಕ್ಷಿಗಳಾಗಿ ಹೊರಹೊಮ್ಮಿದ್ದರು. ಈ ಪೈಕಿ ಸಚಿವ ಸತೀಶ್ ಜಾರಕಿಹೊಳಿ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿತ್ತು.

ಆದರೆ, ಸಚಿವ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಎರಡನ್ನೂ ಬಯಸಿರುವುದು ಹೈಕಮಾಂಡ್‌ಗೆ ಮುಜುಗರ ಉಂಟುಮಾಡಿದೆ ಎನ್ನಲಾಗಿದೆ. ಇದೇ ವೇಳೆ, ಅಚ್ಚರಿಯ ಬೆಳವಣಿಗೆಯಾಗಿ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಮುನ್ನೆಲೆಗೆ ಬಂದಿದ್ದು, ಇದೀಗ ಅವರೇ ಕೆಪಿಸಿಸಿ ಅಧ್ಯಕ್ಷರಾಗುವ ಸಾಧ್ಯತೆ ಹೆಚ್ಚಾಗಿದೆ.

ಬಿ.ಕೆ. ಹರಿಪ್ರಸಾದ್ ಅವರು ಕೂಡ ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಯಾಗಿದ್ದರು. ಆದರೆ ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಹೈಕಮಾಂಡ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ನಿರ್ಧಾರಕ್ಕೆ ಬಂದಿರುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಇದರ ನಡುವೆ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಸತೀಶ್ ಜಾರಕಿಹೊಳಿ, ಪಕ್ಷ ಯಾವ ಜವಾಬ್ದಾರಿ ನೀಡಲಿದೆ ಎಂಬ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ತಿಳಿಸಿದ್ದಾರೆ.

“ಹೈಕಮಾಂಡ್‌ನಿಂದ ಅಧಿಕೃತ ಮಾಹಿತಿ ಬರುವವರೆಗೆ ಕಾಯಬೇಕು. ಪಕ್ಷದ ನಾಯಕತ್ವ ಯಾವ ತೀರ್ಮಾನ ಕೈಗೊಂಡರೂ ಅದನ್ನು ನಾನು ಸೇರಿದಂತೆ ಎಲ್ಲರೂ ಗೌರವಿಸಬೇಕು” ಎಂದು ಅವರು ಹೇಳಿದ್ದಾರೆ.

ಇದೇ ವೇಳೆ ತಮ್ಮ ವಿರುದ್ಧ ನಡೆದಿರುವ ಅಪಪ್ರಚಾರದ ಕುರಿತು ಮಾತನಾಡಿದ ಅವರು, “ಈ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದೆ. ಸತ್ಯಾಂಶ ಶೀಘ್ರದಲ್ಲೇ ಹೊರಬರಲಿದೆ” ಎಂದು ತಿಳಿಸಿದ್ದಾರೆ.

ಉಪ ಮುಖ್ಯಮಂತ್ರಿ ಹುದ್ದೆ ಕುರಿತು ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, “ಡಾ. ಜಿ. ಪರಮೇಶ್ವರ್ ಅವರಿಗೆ ಡಿಸಿಎಂ ಸ್ಥಾನ ದೊರೆತರೆ ಉತ್ತಮ. ಅವರು ರಾಜ್ಯದ ಹಿರಿಯ ದಲಿತ ನಾಯಕರಾಗಿದ್ದು, ಆ ಹುದ್ದೆಗೆ ಅರ್ಹರು” ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ ಹುದ್ದೆಗಳ ಹಂಚಿಕೆ ಕುರಿತ ಅಂತಿಮ ತೀರ್ಮಾನಕ್ಕೆ ಹೈಕಮಾಂಡ್ ಸಿದ್ಧತೆ ನಡೆಸಿರುವ ಹಿನ್ನೆಲೆ, ಮುಂದಿನ ಕೆಲ ದಿನಗಳಲ್ಲಿ ಸಚಿವ ಸಂಪುಟ ರಚನೆ ಹಾಗೂ ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ಕುರಿತು ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.

20 ವರ್ಷದ ಬಳಿಕ ಸರ್ಕಾರಿ ಕೆಲಸದ ಪತ್ರ: 60ರ ವಯಸ್ಸಿನಲ್ಲಿ ನೇಮಕಾತಿ ನೋಡಿ ಬೆಚ್ಚಿಬಿದ್ದ ವ್ಯಕ್ತಿ!

ಮಲಪ್ಪುರಂ: ಸರ್ಕಾರಿ ಉದ್ಯೋಗಕ್ಕಾಗಿ 20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಯ ಫಲವಾಗಿ ಇದೀಗ ನೇಮಕಾತಿ ಪತ್ರ ಕೈ ಸೇರಿದ ಅಪರೂಪದ ಘಟನೆ ಕೇರಳದಲ್ಲಿ ಬೆಳಕಿಗೆ ಬಂದಿದೆ. ಆದರೆ ನೇಮಕಾತಿ ಪತ್ರ ಬರುವಷ್ಟರಲ್ಲಿ ಅಭ್ಯರ್ಥಿ ಸರ್ಕಾರಿ ಸೇವೆಗೆ ಪ್ರವೇಶಿಸುವ ವಯೋಮಿತಿಯನ್ನೇ ದಾಟಿರುವುದು ವಿಪರ್ಯಾಸವಾಗಿದೆ.

ಮಲಪ್ಪುರಂ ಮೂಲದ 60 ವರ್ಷದ ಅಬ್ದುಲ್ ಮಜೀದ್ ಅವರು 2005ರಲ್ಲಿ ಕೇರಳ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ್ದ ಅರೆಕಾಲಿಕ ಜೂನಿಯರ್ ಅರೇಬಿಕ್ ಶಿಕ್ಷಕರ ಹುದ್ದೆಯ ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷೆಯಲ್ಲಿ ತೇರ್ಗಡೆಯಾಗಿ ರ್ಯಾಂಕ್ ಪಟ್ಟಿಯಲ್ಲೂ ಸ್ಥಾನ ಪಡೆದಿದ್ದರು. ಆದರೆ ಆ ಪಟ್ಟಿ 2008ರಲ್ಲೇ ಅವಧಿ ಮುಗಿಸಿಕೊಂಡಿತ್ತು.

ಆದರೆ ರ್ಯಾಂಕ್ ಪಟ್ಟಿ ರದ್ದಾದ ಸುಮಾರು 18 ವರ್ಷಗಳ ಬಳಿಕ, 2026ರ ಏಪ್ರಿಲ್ 24ರಂದು ಕೇರಳ ಪಿಎಸ್‌ಸಿ ಮಜೀದ್ ಅವರಿಗೆ ನೇಮಕಾತಿ ಸಲಹಾ ಪತ್ರ ಕಳುಹಿಸಿದೆ. ಎರಡು ದಶಕಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಉದ್ಯೋಗ ಅವಕಾಶ ಬಂದಿರುವುದು ಅಚ್ಚರಿ ಮೂಡಿಸಿದೆ.

ಆದರೆ ಅಧಿಕೃತ ದಾಖಲೆಗಳ ಪ್ರಕಾರ ಮಜೀದ್ ಅವರಿಗೆ ಮೇ 27, 2026ರಂದು 60 ವರ್ಷ ಪೂರ್ಣಗೊಂಡಿದೆ. ಹೀಗಾಗಿ ಹೊಸದಾಗಿ ಸರ್ಕಾರಿ ಸೇವೆಗೆ ಸೇರಲು ಅವರು ಅರ್ಹರಾಗಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಬೆಳವಣಿಗೆಯಿಂದ ಸಂತೋಷ ಮತ್ತು ನಿರಾಶೆ ಎರಡನ್ನೂ ಅನುಭವಿಸಿರುವ ಮಜೀದ್, ತಮ್ಮ ಪ್ರಕರಣವನ್ನು ಸರ್ಕಾರ ಮಾನವೀಯ ದೃಷ್ಟಿಯಿಂದ ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.

ಡಿಕೆಶಿ ಸಿಎಂ ಖುಷಿಗೆ ಭರ್ಜರಿ ಸಿಹಿ: ನೆಲಮಂಗಲದಲ್ಲಿ 10 ಲಕ್ಷ ಲಾಡು ತಯಾರಿ

ನೆಲಮಂಗಲ: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ಅಲಂಕರಿಸುತ್ತಿರುವ ಹಿನ್ನೆಲೆ ನೆಲಮಂಗಲ ಕ್ಷೇತ್ರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಈ ಸಂಭ್ರಮದ ಅಂಗವಾಗಿ ಕ್ಷೇತ್ರದ ಸಾವಿರಾರು ಕುಟುಂಬಗಳಿಗೆ ಉಚಿತ ಸಿಹಿ ವಿತರಿಸುವ ಮಹತ್ವದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.

ಸುಮಾರು 90 ಸಾವಿರ ಮನೆಗಳಿಗೆ ತಲಾ 750 ಗ್ರಾಂ ತೂಕದ ಲಾಡು ಬಾಕ್ಸ್ ವಿತರಿಸುವ ಗುರಿಯನ್ನು ಆಯೋಜಕರು ಹೊಂದಿದ್ದಾರೆ. ಇದಕ್ಕಾಗಿ ಭಾರಿ ಪ್ರಮಾಣದಲ್ಲಿ ಸಿದ್ಧತೆ ನಡೆಸಲಾಗಿದ್ದು, ಈಗಾಗಲೇ ಲಾಡು ತಯಾರಿಕೆ ಅಂತಿಮ ಹಂತ ತಲುಪಿದೆ.

ಸುಮಾರು 250 ರಿಂದ 300 ಬಾಣಸಿಗರು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ಒಟ್ಟು 9 ರಿಂದ 10 ಲಕ್ಷ ಲಾಡುಗಳನ್ನು ಸಿದ್ಧಪಡಿಸಲಾಗುತ್ತಿದೆ. ವಿತರಣಾ ಕಾರ್ಯದಲ್ಲಿ ನೂರಾರು ಕಾರ್ಯಕರ್ತರು ಮತ್ತು ಸ್ಥಳೀಯ ಮುಖಂಡರು ಭಾಗಿಯಾಗಲಿದ್ದಾರೆ.

ಕ್ಷೇತ್ರದ ಪ್ರತಿಯೊಂದು ಗ್ರಾಮ ಹಾಗೂ ಪ್ರತಿಯೊಂದು ಮನೆಗೂ ಸಿಹಿ ತಲುಪಿಸುವ ಉದ್ದೇಶದಿಂದ ವಿಶೇಷ ತಂಡಗಳನ್ನು ರಚಿಸಲಾಗಿದೆ. ಕೊನೆಯ ಮನೆಗೂ ಲಾಡು ತಲುಪುವವರೆಗೆ ಅಭಿಯಾನ ಮುಂದುವರಿಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಪಟ್ಟಕ್ಕೇರಿರುವ ಡಿಕೆ ಶಿವಕುಮಾರ್ ಅವರ ಸಾಧನೆಯನ್ನು ಸಂಭ್ರಮಿಸುವ ಜೊತೆಗೆ ಜನರೊಂದಿಗೆ ಸಂತಸ ಹಂಚಿಕೊಳ್ಳುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಐಪಿಎಲ್ ಹೀರೋ ವೈಭವ್ ಸೂರ್ಯವಂಶಿಗೆ ಜಾಹೀರಾತು ಕಂಪನಿಗಳಿಂದ ಭಾರೀ ಬೇಡಿಕೆ

ಮುಂಬೈ: ಐಪಿಎಲ್‌ನಲ್ಲಿ ತನ್ನ ಸ್ಫೋಟಕ ಬ್ಯಾಟಿಂಗ್ ಮೂಲಕ ಕ್ರಿಕೆಟ್ ಅಭಿಮಾನಿಗಳ ಮನಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡದ ಯುವ ಆರಂಭಿಕ ಬ್ಯಾಟರ್ ವೈಭವ್ ಸೂರ್ಯವಂಶಿ ಇದೀಗ ಜಾಹೀರಾತು ಲೋಕದ ಹಾಟ್ ಫೇವರಿಟ್ ಆಗಿ ಹೊರಹೊಮ್ಮಿದ್ದಾರೆ. ಮೈದಾನದಲ್ಲಿ ರನ್‌ಗಳ ಸುರಿಮಳೆಗೈದಿರುವ ಈ ಯುವ ಆಟಗಾರನ ಹಿಂದೆ ದೇಶದ ಪ್ರಮುಖ ಕಂಪನಿಗಳು ಬ್ರಾಂಡ್ ಅಂಬಾಸಿಡರ್ ಆಗಿ ಸೇರ್ಪಡೆಗೊಳಿಸಲು ಪೈಪೋಟಿ ನಡೆಸುತ್ತಿವೆ.

ಐಪಿಎಲ್‌ನಲ್ಲಿ ತೋರಿದ ಅದ್ಭುತ ಪ್ರದರ್ಶನದ ಬಳಿಕ ವೈಭವ್ ಸೂರ್ಯವಂಶಿ ಅವರ ಬ್ರಾಂಡ್ ಮೌಲ್ಯದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಕ್ರೀಡಾ ಪಾನೀಯಗಳು, ಪೌಷ್ಠಿಕಾಂಶ ಉತ್ಪನ್ನಗಳು ಹಾಗೂ ಫೂಟ್ವೇರ್ ಕ್ಷೇತ್ರದ ಹಲವು ಪ್ರಮುಖ ಕಂಪನಿಗಳು ಅವರೊಂದಿಗೆ ಒಪ್ಪಂದಕ್ಕೆ ಮುಂದಾಗಿದ್ದು, ಈಗಾಗಲೇ ಹಲವು ಸುತ್ತಿನ ಮಾತುಕತೆಗಳು ನಡೆದಿವೆ ಎನ್ನಲಾಗಿದೆ.

ಕೇವಲ 15 ವರ್ಷದವರಾಗಿರುವ ವೈಭವ್ ಮುಂದೆ ದೀರ್ಘ ಕ್ರಿಕೆಟ್ ವೃತ್ತಿಜೀವನವಿರುವ ಕಾರಣ ಕಂಪನಿಗಳು ಅವರನ್ನು ಭವಿಷ್ಯದ ಹೂಡಿಕೆ ಎಂದು ಪರಿಗಣಿಸುತ್ತಿವೆ. ಇದೇ ಕಾರಣಕ್ಕೆ ದೀರ್ಘಾವಧಿಯ ಬದಲು ಆರಂಭಿಕವಾಗಿ 2 ರಿಂದ 3 ವರ್ಷಗಳ ಅವಧಿಯ ಒಪ್ಪಂದಗಳಿಗೆ ಹೆಚ್ಚಿನ ಆಸಕ್ತಿ ತೋರಲಾಗುತ್ತಿದೆ.

ವೈಭವ್ ಸೂರ್ಯವಂಶಿ ಅಪ್ರಾಪ್ತ ವಯಸ್ಸಿನವರಾಗಿರುವುದರಿಂದ ಜಾಹೀರಾತು ಹಾಗೂ ವಾಣಿಜ್ಯ ಒಪ್ಪಂದಗಳ ಜವಾಬ್ದಾರಿಯನ್ನು ಅವರ ಕುಟುಂಬಸ್ಥರು ನಿರ್ವಹಿಸುತ್ತಿದ್ದಾರೆ. ಈ ಎಲ್ಲಾ ಪ್ರಕ್ರಿಯೆಗಳಲ್ಲಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಕಾನೂನು ಸಲಹೆ ಹಾಗೂ ಅಗತ್ಯ ಮಾರ್ಗದರ್ಶನ ನೀಡುತ್ತಿದೆ ಎಂದು ವರದಿಯಾಗಿದೆ.

ವೈಭವ್ ಈಗಾಗಲೇ ಕಾಂಪ್ಲಾನ್, ರೆಡ್ ಬುಲ್ ಸೇರಿದಂತೆ ಹಲವು ಪ್ರಮುಖ ಬ್ರಾಂಡ್‌ಗಳ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆರಂಭದಲ್ಲಿ ಒಂದು ಜಾಹೀರಾತಿಗೆ ಸುಮಾರು ₹1 ಕೋಟಿ ಸಂಭಾವನೆ ಪಡೆಯುತ್ತಿದ್ದ ಅವರು, ನಂತರ ₹1.5 ಕೋಟಿಗೆ ಏರಿಸಿದ್ದರು. ಇದೀಗ ಐಪಿಎಲ್‌ನ ಅದ್ಭುತ ಪ್ರದರ್ಶನದ ಬಳಿಕ ಅವರ ಪ್ರತಿ ಜಾಹೀರಾತಿನ ಮೌಲ್ಯ ಬರೋಬ್ಬರಿ ₹2 ಕೋಟಿಗೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಈ ಬಾರಿಯ ಐಪಿಎಲ್‌ನಲ್ಲಿ ವೈಭವ್ ಸೂರ್ಯವಂಶಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಟೂರ್ನಿಯ ಅತ್ಯಂತ ಯಶಸ್ವಿ ಬ್ಯಾಟರ್‌ಗಳಲ್ಲಿ ಒಬ್ಬರಾಗಿ ಹೊರಹೊಮ್ಮಿದರು. 16 ಪಂದ್ಯಗಳಲ್ಲಿ 237.37ರ ಸ್ಟ್ರೈಕ್‌ರೇಟ್‌ನೊಂದಿಗೆ ಒಟ್ಟು 776 ರನ್ ಕಲೆಹಾಕಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಇದರೊಂದಿಗೆ ಕೇವಲ 15ನೇ ವಯಸ್ಸಿನಲ್ಲಿ ಐಪಿಎಲ್ ಇತಿಹಾಸದಲ್ಲೇ ಅತಿ ಕಿರಿಯ ವಯಸ್ಸಿನಲ್ಲಿ ಆರೆಂಜ್ ಕ್ಯಾಪ್ ಗೆದ್ದ ಆಟಗಾರ ಎಂಬ ದಾಖಲೆ ನಿರ್ಮಿಸಿದರು. ಜೊತೆಗೆ ಪವರ್‌ಪ್ಲೇ ಅವಧಿಯಲ್ಲೇ 500ಕ್ಕೂ ಹೆಚ್ಚು ರನ್ ಗಳಿಸಿದ ವಿಶ್ವದ ಮೊದಲ ಕ್ರಿಕೆಟಿಗ ಎಂಬ ವಿಶೇಷ ಸಾಧನೆಯನ್ನೂ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಮೈದಾನದೊಳಗೆ ಬ್ಯಾಟ್ ಮೂಲಕ ದಾಖಲೆಗಳನ್ನು ನಿರ್ಮಿಸುತ್ತಿರುವ ವೈಭವ್ ಸೂರ್ಯವಂಶಿ, ಮೈದಾನದ ಹೊರಗೆ ಬ್ರಾಂಡ್ ಡೀಲ್‌ಗಳ ಮೂಲಕ ಭಾರತೀಯ ಕ್ರೀಡಾ ಕ್ಷೇತ್ರದ ಅತ್ಯಂತ ಬೇಡಿಕೆಯ ಯುವ ಮುಖವಾಗಿ ಹೊರಹೊಮ್ಮಿದ್ದಾರೆ.

ವಚನಾನಂದ ಸ್ವಾಮಿ ಪೋಕ್ಸೋ ಪ್ರಕರಣ: ಇಂದು ಕೋರ್ಟ್ ನಲ್ಲಿ ಮಹತ್ವದ ವಿಚಾರಣೆ, ಮಠದಲ್ಲಿ ನಿಷೇಧಾಜ್ಞೆ ಮುಂದುವರಿಕೆ

ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮಿಗೆ ಮಂಜೂರಾಗಿರುವ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸುವಂತೆ ಕೋರಿ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯದಲ್ಲಿ ನಡೆಯಲಿದೆ. ಈ ವಿಚಾರಣೆಯ ಫಲಿತಾಂಶದ ಮೇಲೆ ಪ್ರಕರಣದ ಮುಂದಿನ ಬೆಳವಣಿಗೆಗಳು ನಿರ್ಧಾರವಾಗುವ ಸಾಧ್ಯತೆ ಇದೆ.

ವಚನಾನಂದ ಸ್ವಾಮಿಗೆ ನೀಡಲಾಗಿರುವ ಜಾಮೀನು ರದ್ದುಪಡಿಸುವಂತೆ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಮೇ 13ರಂದು ನ್ಯಾಯಾಲಯದ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ಮೇ 29ರಂದು ನಡೆಯಬೇಕಾಗಿದ್ದರೂ, ಕೆಲವು ಕಾರಣಗಳಿಂದ ಅದನ್ನು ಜೂನ್ 3ಕ್ಕೆ ಮುಂದೂಡಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಹರ ಗ್ರಾಮಾಂತರ ಠಾಣೆಯ ಸಿಪಿಐ ಸುರೇಶ್ ಸಗರಿ ಅವರು ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ವಚನಾನಂದ ಸ್ವಾಮಿ ಪರ ವಕೀಲ ಎಸ್.ವಿ. ಪಾಟೀಲ್ ತಕರಾರು ಅರ್ಜಿ ಸಲ್ಲಿಸಿ ತಮ್ಮ ವಾದ ಮಂಡಿಸಿದ್ದಾರೆ.

ಇಂದು ನಡೆಯಲಿರುವ ವಿಚಾರಣೆಯಲ್ಲಿ ನ್ಯಾಯಾಲಯ ಜಾಮೀನು ರದ್ದುಪಡಿಸುವ ತೀರ್ಮಾನ ಕೈಗೊಂಡರೆ, ವಚನಾನಂದ ಸ್ವಾಮಿಯ ಬಂಧನದ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸದ್ಯ ಅವರು ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಲು ತೆರಳಿರುವುದಾಗಿ ತಿಳಿದುಬಂದಿದ್ದು, ಜಾಮೀನು ರದ್ದಾದರೆ ಅಲ್ಲಿಯೇ ಬಂಧಿಸುವ ಸಾಧ್ಯತೆಯೂ ಇದೆ ಎಂದು ಮೂಲಗಳು ಹೇಳಿವೆ.

ಪ್ರಕರಣದ ಹಿನ್ನೆಲೆ

ವಚನಾನಂದ ಸ್ವಾಮಿ ವಿರುದ್ಧ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣವನ್ನು ನಂತರ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು. ಬಾಲಕನ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ಬಾಲಕನ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂಬ ಆರೋಪವನ್ನು ಸ್ವಾಮಿಯ ವಿರುದ್ಧ ಮಾಡಲಾಗಿದೆ.

ಮಠದಲ್ಲಿ ನಿಷೇಧಾಜ್ಞೆ ಮುಂದುವರಿಕೆ

ಹರಿಹರದ ಪಂಚಮಸಾಲಿ ಪೀಠದ ಟ್ರಸ್ಟಿಗಳು ಮತ್ತು ವಚನಾನಂದ ಸ್ವಾಮಿ ನಡುವಿನ ವಿವಾದದ ಹಿನ್ನೆಲೆಯಲ್ಲಿ ಮಠದಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ಜಾರಿಗೊಳಿಸಿದ್ದ ನಿಷೇಧಾಜ್ಞೆಯನ್ನು ಜಿಲ್ಲಾಡಳಿತ ಮುಂದುವರಿಸಿದೆ.

ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ (ಬಿಎನ್ಎಸ್) ಕಲಂ 163ರಡಿ ಜೂನ್ 1ರಿಂದ ಜೂನ್ 15ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಆದೇಶಿಸಿದ್ದಾರೆ. ಮಠದ ಆವರಣದಲ್ಲಿ ಧಾರ್ಮಿಕ ಪೂಜೆಗಳನ್ನು ಹೊರತುಪಡಿಸಿ ಸಭೆ, ಸಮಾರಂಭ, ಪತ್ರಿಕಾಗೋಷ್ಠಿ ಸೇರಿದಂತೆ ಯಾವುದೇ ಸಾರ್ವಜನಿಕ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ. ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.

error: Content is protected !!