Home Blog

ಅಂಕೋಲಾ ಮೂಲದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಡೆ: 7 ಜನರ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ತಾರೇಬಾಗಿಲು ಸಮೀಪದ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾದ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಬೋಟ್‌ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಿಸಿ ಸುರಕ್ಷಿತವಾಗಿ ಕರೆಯತ್ತ ಕರೆತಂದಿದ್ದಾರೆ.

ಅಂಕೋಲಾ ತಾಲೂಕಿನ ಬೆಳಂಬಾರ ಕಡಲತೀರದಿಂದ ಮೀನುಗಾರಿಕೆಗೆ ತೆರಳಿದ್ದ ಮಂಜುನಾಥ್ ಖಾರ್ವಿ ಅವರಿಗೆ ಸೇರಿದ ‘ಶ್ರೀ ನವರತ್ನ’ ಹೆಸರಿನ ಮೀನುಗಾರಿಕಾ ಬೋಟ್ ಹೊನ್ನಾವರ ಸಮುದ್ರ ವ್ಯಾಪ್ತಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಅವಘಡಕ್ಕೀಡಾಗಿದೆ. ಬೋಟ್‌ನ ಹೊರಭಾಗಕ್ಕೆ ಹಾನಿಯಾಗಿದ್ದರಿಂದ ಸಮುದ್ರದ ನೀರು ಒಳಗೆ ನುಗ್ಗಿ, ಕೆಲವೇ ಕ್ಷಣಗಳಲ್ಲಿ ಬೋಟ್ ಮುಳುಗಲು ಆರಂಭಿಸಿದೆ.

ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಮೀನುಗಾರರು ಸಹಾಯಕ್ಕಾಗಿ ಕೂಗಿಕೊಂಡಿದ್ದು, ಸಮೀಪದಲ್ಲೇ ಮೀನುಗಾರಿಕೆ ನಡೆಸುತ್ತಿದ್ದ ಇಕ್ಬಾಲ್ ಅಬ್ದುಲ್ ಗಫೂರ್ ಅವರು ತಮ್ಮ ಬೋಟ್‌ನೊಂದಿಗೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಬೋಟ್‌ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿ ಕರೆಯತ್ತ ಕರೆತಂದಿದ್ದಾರೆ.

ರಕ್ಷಿಸಲ್ಪಟ್ಟ ಮೀನುಗಾರರನ್ನು ವೆಂಕಟೇಶ್ ಖಾರ್ವಿ, ನಾಗಪ್ಪ ಖಾರ್ವಿ, ಸಂದೀಪ್ ಖಾರ್ವಿ, ವಿಕಾಸ್ ಖಾರ್ವಿ, ವಿಘ್ನೇಶ್ ಖಾರ್ವಿ, ರಜತ್ ಬಾಣಾವಳಿಕರ್ ಹಾಗೂ ಲತೇಶ್ ಖಾರ್ವಿ ಎಂದು ಗುರುತಿಸಲಾಗಿದೆ. ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಆದರೆ ಬೋಟ್ ಸಂಪೂರ್ಣವಾಗಿ ಮುಳುಗಡೆಯಾಗಿರುವ ಪರಿಣಾಮ ಮಾಲೀಕರಿಗೆ ಅಂದಾಜು 50 ಲಕ್ಷ ರೂಪಾಯಿಗೂ ಅಧಿಕ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಹೊನ್ನಾವರ ಕರಾವಳಿ ಭದ್ರತಾ ಪೊಲೀಸ್ ಠಾಣೆ (ಸಿಎಸ್ಪಿ) ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

IPL 2026 winner prize money: ಐಪಿಎಲ್ IPL ಚಾಂಪಿಯನ್ ತಂಡಕ್ಕೆ ಸಿಗುವ ಬಹುಮಾನ ಮೊತ್ತವೆಷ್ಟು ಗೊತ್ತಾ.?

ಬೆಂಗಳೂರು: ಐಪಿಎಲ್ 2026ರ ಮಹಾಸಮರಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಂದು ಸಂಜೆ 7:30ಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಪ್ರಶಸ್ತಿಗಾಗಿ ಮುಖಾಮುಖಿಯಾಗಲಿವೆ.

ಈ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ವಿಜೇತ ಹಾಗೂ ರನ್ನರ್‌ಅಪ್ ತಂಡಗಳಿಗೆ ದೊರೆಯುವ ಬಹುಮಾನ ಮೊತ್ತದ ಕುರಿತು ಕುತೂಹಲ ಹೆಚ್ಚಿದೆ. ಈವರೆಗೆ ಉಭಯ ತಂಡಗಳು ತಲಾ ಒಂದೊಂದು ಬಾರಿ ಐಪಿಎಲ್ ಟ್ರೋಫಿ ಗೆದ್ದಿದ್ದು, ಈ ಬಾರಿಯ ಫೈನಲ್‌ನಲ್ಲಿ ಜಯ ಸಾಧಿಸುವ ತಂಡ ತನ್ನ ಎರಡನೇ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳಲಿದೆ.

ಚಾಂಪಿಯನ್ ತಂಡಕ್ಕೆ ₹20 ಕೋಟಿ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಐಪಿಎಲ್ 2026ರ ಬಹುಮಾನ ಮೊತ್ತಕ್ಕಾಗಿ ₹46.5 ಕೋಟಿಗೂ ಅಧಿಕ ಹಣವನ್ನು ಮೀಸಲಿಟ್ಟಿದೆ. ಟೂರ್ನಿಯಲ್ಲಿ ಚಾಂಪಿಯನ್ ಆಗುವ ತಂಡಕ್ಕೆ ₹20 ಕೋಟಿ ಬಹುಮಾನ ನೀಡಲಾಗುತ್ತದೆ.

ರನ್ನರ್‌ಅಪ್ ತಂಡಕ್ಕೆ ₹13 ಕೋಟಿ

ಫೈನಲ್‌ನಲ್ಲಿ ಸೋಲು ಅನುಭವಿಸುವ ತಂಡಕ್ಕೂ ಭರ್ಜರಿ ಮೊತ್ತದ ಬಹುಮಾನ ದೊರೆಯಲಿದೆ. ರನ್ನರ್‌ಅಪ್ ತಂಡಕ್ಕೆ ₹13 ಕೋಟಿ ನೀಡಲಾಗುತ್ತದೆ.

ಇನ್ನು ಮೂರನೇ ಸ್ಥಾನ ಪಡೆಯುವ ತಂಡಕ್ಕೆ ₹7 ಕೋಟಿ ಹಾಗೂ ನಾಲ್ಕನೇ ಸ್ಥಾನದಲ್ಲಿರುವ ತಂಡಕ್ಕೆ ₹6.5 ಕೋಟಿ ಬಹುಮಾನ ನೀಡಲಾಗುತ್ತದೆ.

ಟಾಪ್-4 ತಂಡಗಳ ಬಹುಮಾನ ಮೊತ್ತ

  • ಚಾಂಪಿಯನ್ ತಂಡ – ₹20 ಕೋಟಿ
  • ರನ್ನರ್‌ಅಪ್ ತಂಡ – ₹13 ಕೋಟಿ
  • ಮೂರನೇ ಸ್ಥಾನ – ₹7 ಕೋಟಿ
  • ನಾಲ್ಕನೇ ಸ್ಥಾನ – ₹6.5 ಕೋಟಿ

ಬಹುಮಾನ ಮೊತ್ತದ ಇತಿಹಾಸ

ಐಪಿಎಲ್ ಆರಂಭಿಕ ಆವೃತ್ತಿಗಳಾದ 2008 ಮತ್ತು 2009ರಲ್ಲಿ ಚಾಂಪಿಯನ್ ತಂಡಕ್ಕೆ ₹4.8 ಕೋಟಿ ಬಹುಮಾನ ನೀಡಲಾಗುತ್ತಿತ್ತು. ನಂತರ ವರ್ಷದಿಂದ ವರ್ಷಕ್ಕೆ ಬಹುಮಾನ ಮೊತ್ತ ಹೆಚ್ಚಾಗುತ್ತಾ ಬಂದಿದ್ದು, ಈಗ ₹20 ಕೋಟಿಗೆ ಏರಿಕೆಯಾಗಿದೆ. ಕೊರೊನಾ ಸಾಂಕ್ರಾಮಿಕದ ಪರಿಣಾಮ 2020ರಲ್ಲಿ ಮಾತ್ರ ಬಹುಮಾನ ಮೊತ್ತವನ್ನು ₹10 ಕೋಟಿಗೆ ಇಳಿಸಲಾಗಿತ್ತು.

ಟಾಪ್-4 ಹೊರಗಿನ ತಂಡಗಳಿಗೆ ಬಹುಮಾನವಿಲ್ಲ

ಐದನೇ ಸ್ಥಾನದಿಂದ ಹತ್ತನೇ ಸ್ಥಾನದವರೆಗೆ ಮುಗಿಸುವ ತಂಡಗಳಿಗೆ ಯಾವುದೇ ಅಧಿಕೃತ ಬಹುಮಾನ ಮೊತ್ತ ನೀಡುವುದಿಲ್ಲ. ಆದಾಗ್ಯೂ ಪ್ರಾಯೋಜಕತ್ವ, ಪ್ರಸಾರ ಹಕ್ಕುಗಳು ಹಾಗೂ ಟಿಕೆಟ್ ಮಾರಾಟದ ಮೂಲಕ ಫ್ರಾಂಚೈಸಿಗಳು ಆದಾಯ ಗಳಿಸುತ್ತವೆ.

ಆಟಗಾರರಿಗೆ ಹೇಗೆ ಹಂಚಿಕೆ?

ಐಪಿಎಲ್ ನಿಯಮಗಳ ಪ್ರಕಾರ, ತಂಡಕ್ಕೆ ದೊರೆಯುವ ಬಹುಮಾನ ಮೊತ್ತದ ಶೇ.50ರಷ್ಟು ಹಣವನ್ನು ಆಟಗಾರರ ನಡುವೆ ಹಂಚಲಾಗುತ್ತದೆ. ಉಳಿದ ಶೇ.50ರಷ್ಟು ಮೊತ್ತ ಫ್ರಾಂಚೈಸಿ ಮಾಲೀಕರ ಪಾಲಾಗುತ್ತದೆ.

ವೈಯಕ್ತಿಕ ಪ್ರಶಸ್ತಿಗಳಿಗೂ ಭರ್ಜರಿ ಮೊತ್ತ

ಆರೆಂಜ್ ಕ್ಯಾಪ್, ಪರ್ಪಲ್ ಕ್ಯಾಪ್, ಮೋಸ್ಟ್ ವ್ಯಾಲ್ಯುಯಬಲ್ ಪ್ಲೇಯರ್ ಸೇರಿದಂತೆ ವಿವಿಧ ವೈಯಕ್ತಿಕ ಪ್ರಶಸ್ತಿಗಳನ್ನು ಗೆಲ್ಲುವ ಆಟಗಾರರು ಹೆಚ್ಚುವರಿ ನಗದು ಬಹುಮಾನ ಪಡೆಯಲಿದ್ದಾರೆ. ಈ ಪ್ರಶಸ್ತಿಗಳ ಮೂಲಕ ಒಬ್ಬ ಆಟಗಾರ ಸುಮಾರು ₹1 ಕೋಟಿವರೆಗೆ ಹೆಚ್ಚುವರಿ ಮೊತ್ತ ಗಳಿಸುವ ಅವಕಾಶವೂ ಇದೆ.

ಇದೀಗ ಎಲ್ಲರ ಕಣ್ಣು ಫೈನಲ್ ಪಂದ್ಯತ್ತ ನೆಟ್ಟಿದ್ದು, ಟ್ರೋಫಿಯ ಜೊತೆಗೆ ಕೋಟ್ಯಂತರ ರೂಪಾಯಿಗಳ ಬಹುಮಾನ ಯಾರ ಪಾಲಾಗಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.

ಡಿಸಿಎಂ ಪ್ರಸ್ತಾವ ಇನ್ನೂ ಬಂದಿಲ್ಲ; ಜೂನ್ 3ರ ಸಭೆಯಲ್ಲಿ ಅಂತಿಮ ನಿರ್ಧಾರ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ರಾಜ್ಯದ ನೂತನ ಸರ್ಕಾರದ ರಚನೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಹುದ್ದೆಗಳು ಹಾಗೂ ಸಚಿವ ಸಂಪುಟದ ಕುರಿತು ಇನ್ನೂ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಡಿಸಿಎಂ ಹುದ್ದೆಗಳ ಬಗ್ಗೆ ಇನ್ನೂ ಯಾವುದೇ ಪ್ರಸ್ತಾಪ ಬಂದಿಲ್ಲ. ಪ್ರಸ್ತಾಪ ಬಂದ ಬಳಿಕ ಎಷ್ಟು ಉಪ ಮುಖ್ಯಮಂತ್ರಿಗಳು ಇರಬೇಕು ಹಾಗೂ ಎಷ್ಟು ಮಂದಿಯನ್ನು ಸಚಿವರನ್ನಾಗಿ ಮಾಡಬೇಕು ಎಂಬುದರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಸಚಿವ ಸಂಪುಟ ರಚನೆ ಹಂತ ಹಂತವಾಗಿ ನಡೆಯಲಿದೆ ಎಂದು ತಿಳಿಸಿದ ಖರ್ಗೆ, ಮೊದಲ ಹಂತದಲ್ಲಿ ಕೆಲವರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗುತ್ತದೆ. ಬಳಿಕ ಸುಮಾರು 15 ದಿನಗಳ ನಂತರ ಎರಡನೇ ಹಂತದಲ್ಲಿ ಸಚಿವ ಸಂಪುಟ ವಿಸ್ತರಣೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಿದರು.

ಮೊದಲ ಹಂತದಲ್ಲಿ 8ರಿಂದ 10 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಅವರಿಂದ ಸಚಿವರ ಪಟ್ಟಿಯು ಬಂದ ನಂತರ ಎಷ್ಟು ಮಂದಿಯನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬುದರ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಜೂನ್ 3ರಂದು ನಡೆಯಲಿರುವ ಸಭೆಯಲ್ಲಿ ಸಚಿವ ಸಂಪುಟ ರಚನೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಪ್ರಕಟಿಸಲಾಗುತ್ತದೆ ಎಂದು ಖರ್ಗೆ ಹೇಳಿದರು.

ನಾನು ಸಚಿವ ಸ್ಥಾನದ ಪ್ರಭಲ ಆಕಾಂಕ್ಷಿ: ಹೈಕಮಾಂಡ್ ನನ್ನನ್ನು ಪರಿಗಣಿಸಲೇಬೇಕು – ಶಾಸಕ ಜಿ.ಎಸ್. ಪಾಟೀಲ್ ಒತ್ತಾಯ

ಗದಗ: ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಚರ್ಚೆಗಳು ಜೋರಾಗಿರುವ ನಡುವೆಯೇ ಗದಗ ಜಿಲ್ಲೆಯ ರೋಣ ಶಾಸಕ ಜಿ.ಎಸ್. ಪಾಟೀಲ್ ಅವರು ಸಚಿವ ಸ್ಥಾನಕ್ಕಾಗಿ ಬಹಿರಂಗವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪಕ್ಷಕ್ಕೆ ದೀರ್ಘಕಾಲ ಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಈ ಬಾರಿ ಸಚಿವ ಸ್ಥಾನಕ್ಕೆ ತಮ್ಮನ್ನು ಪರಿಗಣಿಸಬೇಕೆಂದು ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.

ನಾನು 1989ರಿಂದ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ನಾಲ್ಕು ಬಾರಿ ಜನರಿಂದ ಅಧಿಕ ಮತಗಳ ಅಂತರದಲ್ಲಿ ಆಯ್ಕೆಯಾಗಿದ್ದೇನೆ. ಪಕ್ಷದ ಸಂಘಟನೆಗಾಗಿ ನಿರಂತರವಾಗಿ ದುಡಿದಿದ್ದೇನೆ. ಹೀಗಾಗಿ ಈ ಬಾರಿ ಸಚಿವ ಸಂಪುಟದಲ್ಲಿ ನನಗೆ ಅವಕಾಶ ನೀಡಬೇಕು,” ಎಂದು ಅವರು ಒತ್ತಾಯಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಶಿಸ್ತು ಮತ್ತು ತ್ಯಾಗ ಮನೋಭಾವವನ್ನು ಉದಾಹರಿಸಿದ ಜಿ.ಎಸ್. ಪಾಟೀಲ್, “ಸಿದ್ದರಾಮಯ್ಯ ಅವರು ಎಂಟು ವರ್ಷಗಳ ಕಾಲ ಕಳಂಕ ರಹಿತವಾಗಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಅವರು ರಾಜೀನಾಮೆ ನೀಡಿ ಮಾದರಿಯಾಗಿದ್ದರು. ಅದೇ ರೀತಿಯಲ್ಲಿ ಈಗಿರುವ ಹಿರಿಯ ಸಚಿವರೂ ಕೂಡ ಬದಲಾವಣೆಗೆ ಅವಕಾಶ ಮಾಡಿಕೊಡಬೇಕು,” ಎಂದು ಅವರು ಹೇಳಿದ್ದಾರೆ.

ಹಿರಿಯರನ್ನು ಬದಲಾಯಿಸಿ ಹೊಸ ಮುಖಗಳಿಗೆ ಅವಕಾಶ ನೀಡುವ ಕಾಲ ಬಂದಿದೆ ಎಂದು ಅವರು ಅಭಿಪ್ರಾಯಪಟ್ಟರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕುರಿತು ಮಾತನಾಡಿದ ಅವರು,

“ಡಿ.ಕೆ. ಶಿವಕುಮಾರ್ ಹುಟ್ಟು ಹೋರಾಟಗಾರ. ಅವರ ಹೋರಾಟ ಮತ್ತು ಸಂಘಟನೆ ಸಾಮರ್ಥ್ಯವನ್ನು ಗುರುತಿಸಿ ಹೈಕಮಾಂಡ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ತಂದುಕೊಂಡಿದೆ,” ಎಂದು ಶ್ಲಾಘಿಸಿದರು.

ಈಗಾಗಲೇ ಸುಮಾರು 35ಕ್ಕೂ ಹೆಚ್ಚು ಹಿರಿಯ ಹಾಗೂ ಕಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಬೆಂಗಳೂರು ಮತ್ತು ದೆಹಲಿ ನಾಯಕರ ಮೇಲೆ ಒತ್ತಡ ಹೇರುತ್ತಿದ್ದೇವೆ ಎಂದು ತಿಳಿಸಿರುವ ಜಿ.ಎಸ್. ಪಾಟೀಲ್, “ಈ ಬಾರಿ ನನ್ನನ್ನು ಸಚಿವ ಸ್ಥಾನಕ್ಕೆ ಪರಿಗಣಿಸುವ ವಿಶ್ವಾಸ ಇದೆ,” ಎಂದು ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ದುರಂತ: ಐವರು ಸ್ಥಳದಲ್ಲೇ ಸಾವು, ಹಲವರಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ: ಜಿಲ್ಲೆಯ ಭಾಗ್ಯನಗರ ಪಟ್ಟಣದಲ್ಲಿ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ದುರ್ಮರಣ ಹೊಂದಿದ ಹೃದಯವಿದ್ರಾವಕ ಘಟನೆ ನಡೆದಿದೆ. ಕೂಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಆಟೋಗೆ ವೇಗವಾಗಿ ಬಂದ ಥಾರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಮೃತದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ದೃಶ್ಯ ಸ್ಥಳದಲ್ಲಿದ್ದವರ ಮನಕಲಕುವಂತಿತ್ತು. ಅಪಘಾತದ ತೀವ್ರತೆಗೆ ಆಟೋದಲ್ಲಿದ್ದ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ತಕ್ಷಣವೇ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಆತಂಕಕಾರಿ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಬಾಗೇಪಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ಕಾರಣವಾದ ಥಾರ್ ವಾಹನದ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಯೇ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಅಭಿಷೇಕ್ ಬ್ಯಾನರ್ಜಿ ಆರೋಗ್ಯ ಸ್ಥಿತಿ ಚಿಂತಾಜನಕ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಗಂಭೀರ ಆರೋಪ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಅಭಿಷೇಕ್ ಬ್ಯಾನರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡುವಂತೆ ಬಿಜೆಪಿ ನಾಯಕರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಒತ್ತಡ ಹೇರಿದ್ದಾರೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಈ ಬೆಳವಣಿಗೆ ಅಭಿಷೇಕ್ ಅವರ ವಿರುದ್ಧ ಸಂಚು ರೂಪಿಸಿರುವ ಅನುಮಾನವನ್ನು ಮತ್ತಷ್ಟು ಬಲಪಡಿಸಿದೆ ಎಂದು ಅವರು ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಟಿಎಂಸಿ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಅಭಿಷೇಕ್ ಬ್ಯಾನರ್ಜಿ ಮೇಲೆ ಹಲ್ಲೆ ನಡೆದಿತ್ತು.

ಹಲ್ಲೆಯ ಬಳಿಕ ಅವರ ಆರೋಗ್ಯದಲ್ಲಿ ಗಂಭೀರ ಸಮಸ್ಯೆಗಳು ಕಾಣಿಸಿಕೊಂಡಿದ್ದು, ಪ್ರಸ್ತುತ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಅಭಿಷೇಕ್ ಅವರ ದೇಹದಲ್ಲಿ ರಕ್ತ ಹೆಪ್ಪುಗಟ್ಟಿರುವ ಲಕ್ಷಣಗಳು ಕಂಡುಬಂದಿದ್ದು, 3ಡಿ ಸ್ಕ್ಯಾನ್, ಅಲ್ಟ್ರಾಸೊನೋಗ್ರಫಿ ಸೇರಿದಂತೆ ಹಲವು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗಿದೆ. ವೈದ್ಯರು ನಿರಂತರವಾಗಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ ಎಂದು ಹೇಳಿದರು.

ಅಪೋಲೋ ಆಸ್ಪತ್ರೆಯ ವೈದ್ಯರು ಪರೀಕ್ಷೆ ನಡೆಸಿದ ಬಳಿಕ ಮನೆಯಲ್ಲಿ ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದರು. ಅದರಂತೆ ಅವರನ್ನು ಮನೆಗೆ ಕರೆತರಲಾಗಿತ್ತು. ಆದರೆ ಆರೋಗ್ಯದಲ್ಲಿ ನಿರೀಕ್ಷಿತ ಸುಧಾರಣೆ ಕಾಣದ ಕಾರಣ ಬಳಿಕ ಬೆಲ್ಲವ್ಯೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಮತಾ ವಿವರಿಸಿದರು.

ಈ ವೇಳೆ ಬಿಜೆಪಿ ನಾಯಕರು ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ವೈದ್ಯರಿಗೆ ಕರೆ ಮಾಡಿ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ ಅವರು, ಅಭಿಷೇಕ್ ಅವರಿಗೆ ಏನಾದರೂ ಅನಾಹುತ ಸಂಭವಿಸಿದರೆ ಅದರ ಹೊಣೆಯನ್ನು ಸಂಬಂಧಪಟ್ಟವರು ಹೊತ್ತುಕೊಳ್ಳಬೇಕು ಎಂದು ಎಚ್ಚರಿಸಿದರು.

ಅಭಿಷೇಕ್ ಬ್ಯಾನರ್ಜಿ ಅವರ ಚಿಕಿತ್ಸೆ ವೈದ್ಯರ ಕಟ್ಟುನಿಟ್ಟಿನ ಮೇಲ್ವಿಚಾರಣೆಯಲ್ಲಿ ಮುಂದುವರಿದಿದೆ. ಮನೆಯಲ್ಲಿಯೂ ಆಮ್ಲಜನಕ ಸಿಲಿಂಡರ್ ಸೇರಿದಂತೆ ಅಗತ್ಯ ವೈದ್ಯಕೀಯ ಉಪಕರಣಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಮಮತಾ ತಿಳಿಸಿದರು.

ಹಲ್ಲೆ ನಡೆದ ಸಂದರ್ಭದಲ್ಲಿ ಅಭಿಷೇಕ್ ಹೆಲ್ಮೆಟ್ ಧರಿಸಿರದಿದ್ದರೆ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಬಹುದಿತ್ತು ಎಂದು ಹೇಳಿದ ಅವರು, ಇದು ಭದ್ರತಾ ವ್ಯವಸ್ಥೆಯ ದೊಡ್ಡ ವೈಫಲ್ಯ ಎಂದು ಕಿಡಿಕಾರಿದರು.

ಗದಗ: ಅನ್ನಭಾಗ್ಯ ಅಕ್ಕಿ ಮಾರಾಟದ ಅಕ್ರಮ ಜಾಲ ಬಯಲು

ಗದಗ: ಬಡವರಿಗಾಗಿ ಸರ್ಕಾರ ವಿತರಿಸುವ ಅನ್ನಭಾಗ್ಯ ಹಾಗೂ ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಜಾಲದ ವಿರುದ್ಧ ಗದಗ ಜಿಲ್ಲೆಯ ರೋಣ ಹಾಗೂ ಮುಂಡರಗಿ ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಭಾರೀ ಪ್ರಮಾಣದ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

ಪ್ರತ್ಯೇಕ ದಾಳಿಗಳಲ್ಲಿ ಸಾವಿರಾರು ರೂಪಾಯಿ ಮೌಲ್ಯದ ಪಿಡಿಎಸ್ ಅಕ್ಕಿ, ಸಾಗಾಟಕ್ಕೆ ಬಳಸಲಾಗಿದ್ದ ವಾಹನಗಳನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ಹಾಗೂ ಪಿಡಿಎಸ್ ನಿಯಂತ್ರಣ ಆದೇಶಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ರೋಣ ಪೊಲೀಸ್ ಠಾಣೆ ವ್ಯಾಪ್ತಿಯ ಕುರುಹಟ್ಟಿ ಗ್ರಾಮದ ಹೊಳೆಆಲೂರು ರಸ್ತೆಯಲ್ಲಿರುವ ಶೆಡ್ ಮೇಲೆ ಮೇ 21ರಂದು ಮಧ್ಯಾಹ್ನ ದಾಳಿ ನಡೆಸಿದ ಅಧಿಕಾರಿಗಳು, ಇಮ್ತಿಯಾಜ್ ಜಲಾವರ್ ಎಂಬಾತ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿರುವುದನ್ನು ಪತ್ತೆ ಹಚ್ಚಿದರು. ದಾಳಿಯ ವೇಳೆ ಸುಮಾರು ₹22,500 ಮೌಲ್ಯದ 25 ಚೀಲ ಪಿಡಿಎಸ್ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಆಹಾರ ನಿರೀಕ್ಷಕಿ ಸುವರ್ಣ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ರೋಣ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ.87/2026 ದಾಖಲಿಸಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಮುಂಡರಗಿ ಪಟ್ಟಣದಲ್ಲಿ ಸಾರ್ವಜನಿಕರು ನೀಡಿದ ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಪಡಿತರ ಅಕ್ಕಿ ಸಂಗ್ರಹ ಜಾಲವನ್ನು ಬಯಲಿಗೆಳೆದಿದ್ದಾರೆ. ಬಸವರಾಜ ಭಜಂತ್ರಿ ಎಂಬಾತ ಪಿಡಿಎಸ್ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು ₹30,800 ಮೌಲ್ಯದ 28 ಚೀಲ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಅಕ್ಕಿ ಸಾಗಾಟಕ್ಕೆ ಬಳಸಲಾಗಿದ್ದ ವಾಹನಗಳನ್ನೂ ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ.98/2026 ದಾಖಲಾಗಿದೆ.

ರೋಣ ತಾಲೂಕಿನ ಹುಲ್ಲೂರು ಗ್ರಾಮದಲ್ಲಿ ಜಂಬುಲಿಂಗೇಶ್ವರ ದೇವಸ್ಥಾನದ ಸಮೀಪ ಮೇ 28ರಂದು ಸಂಜೆ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ ಉಮೇಶ್ ಭೀಮಪ್ಪ ಗಣಿ (32) ಎಂಬಾತನನ್ನು ಅಧಿಕಾರಿಗಳು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಆರೋಪಿಯ ಬಳಿಯಲ್ಲಿ 30 ಚೀಲಗಳಲ್ಲಿ ತಲಾ 45 ಕೆ.ಜಿ. ತೂಕದ ಒಟ್ಟು 13 ಕ್ವಿಂಟಲ್ 50 ಕೆ.ಜಿ. ಪಿಡಿಎಸ್ ಅಕ್ಕಿ ಪತ್ತೆಯಾಗಿದ್ದು, ವಶಪಡಿಸಿಕೊಂಡ ಅಕ್ಕಿಯ ಮೌಲ್ಯ ₹30,375 ಎಂದು ಅಂದಾಜಿಸಲಾಗಿದೆ.

ಸಾರ್ವಜನಿಕರಿಗೆ ವಿತರಿಸಬೇಕಾದ ಅಗತ್ಯ ಆಹಾರ ಧಾನ್ಯವನ್ನು ಯಾವುದೇ ಪರವಾನಗಿ ಇಲ್ಲದೆ ಖಾಸಗಿ ಲಾಭಕ್ಕಾಗಿ ಸಂಗ್ರಹಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಯತ್ನಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಮಾಹಿತಿ ಆಧರಿಸಿ ಆಹಾರ ನಿರೀಕ್ಷಕಿ ಸುವರ್ಣಾ ಮುಕ್ಕಣ್ಣ ಜಮ್ಮನಕಟ್ಟಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಅನ್ನಭಾಗ್ಯ ಹಾಗೂ ಪಿಡಿಎಸ್ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಗೆ ತಳ್ಳುವವರ ವಿರುದ್ಧ ಮುಂದಿನ ದಿನಗಳಲ್ಲೂ ಕಠಿಣ ಕ್ರಮ ಮುಂದುವರಿಸಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ, ಸಂಗ್ರಹ ಹಾಗೂ ಮಾರಾಟದ ವಿರುದ್ಧ ವಿಶೇಷ ನಿಗಾ ಇಡಲಾಗಿದ್ದು, ದಂಧೆಕೋರರ ವಿರುದ್ಧ ನಿರಂತರ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ತಿಳಿದು ಬಂದಿದೆ.

ರಾಷ್ಟ್ರೀಯ ಪ್ಯಾರಾ ಅಥ್ಲೀಟ್ ಚಿರಾಗ್ ತ್ಯಾಗಿ ಹತ್ಯೆ: ಸ್ನೇಹಿತನೇ ಗುಂಡಿಕ್ಕಿ ಕೊಂದ ಆರೋಪ

ಘಾಜಿಯಾಬಾದ್: ಏಷ್ಯನ್ ಪ್ಯಾರಾ ಗೇಮ್ಸ್‌ಗೆ ಅರ್ಹತೆ ಪಡೆದಿದ್ದ ರಾಷ್ಟ್ರೀಯ ಮಟ್ಟದ ಪ್ಯಾರಾ ಅಥ್ಲೀಟ್ ಚಿರಾಗ್ ತ್ಯಾಗಿ (25) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಅವರ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರಿದಿದೆ.

ದೇಶದ ಭರವಸೆಯ ಪ್ಯಾರಾ ಅಥ್ಲೀಟ್‌ಗಳಲ್ಲಿ ಒಬ್ಬರಾಗಿದ್ದ ಚಿರಾಗ್ ತ್ಯಾಗಿ, ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದರು. ಅಲ್ಲದೆ, ಅಕ್ಟೋಬರ್‌ನಲ್ಲಿ ಜಪಾನ್‌ನಲ್ಲಿ ನಡೆಯಲಿರುವ ಪ್ಯಾರಾ ಏಷ್ಯನ್ ಗೇಮ್ಸ್‌ಗೆ ಅರ್ಹತೆ ಪಡೆದಿದ್ದರು.

ಬುಧವಾರ ಬೆಳಗ್ಗೆ ಚಿರಾಗ್ ತಮ್ಮ ಕುಟುಂಬದವರಿಗೆ ಕರೆ ಮಾಡಿ ಮಧ್ಯಾಹ್ನ 3.30ರೊಳಗೆ ಮನೆಗೆ ಬರುವುದಾಗಿ ತಿಳಿಸಿದ್ದರು. ಆದರೆ ನಂತರ ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಯಾವುದೇ ಸಂಪರ್ಕ ಸಾಧ್ಯವಾಗಿರಲಿಲ್ಲ. ಆತಂಕಗೊಂಡ ಕುಟುಂಬ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದರು.

ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿದ ಪೊಲೀಸರು, ಶನಿವಾರ ಘಾಜಿಯಾಬಾದ್‌ನ ಸಾಯಿ ಕುಂಜ್ ಪ್ರದೇಶದಲ್ಲಿ ಚಿರಾಗ್ ಅವರ ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಅವರಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ.

ತನಿಖೆ ವೇಳೆ ಮಹತ್ವದ ಮಾಹಿತಿ ಬಹಿರಂಗವಾಗಿದ್ದು, ಚಿರಾಗ್ ಅವರ ಸ್ನೇಹಿತ ಯಶ್ ಖಾಟಿಕ್ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಇಬ್ಬರೂ ಹಲವು ವರ್ಷಗಳಿಂದ ದೃಷ್ಟಿಹೀನರ ವಿಭಾಗದ ಕ್ರೀಡಾಪಟುಗಳಾಗಿ ಸ್ಪರ್ಧಿಸುತ್ತಿದ್ದರು. ಜೊತೆಗೆ ಒಟ್ಟಿಗೆ ತರಬೇತಿ ಪಡೆಯುತ್ತಾ ಒಂದೇ ಕೊಠಡಿಯಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಯಶ್ ಖಾಟಿಕ್ ಅವರ ದಾಖಲೆಗಳ ಪರಿಶೀಲನೆ ಕುರಿತು ಚಿರಾಗ್ ಈ ಹಿಂದೆ ದೂರು ನೀಡಿದ್ದರು ಎನ್ನಲಾಗಿದೆ. ಈ ವಿಚಾರದಿಂದ ಯಶ್ ಅನರ್ಹಗೊಂಡಿದ್ದಾನೆ ಎಂದು ತಿಳಿದುಬಂದಿದೆ. ಇದೇ ದ್ವೇಷದ ಹಿನ್ನೆಲೆ ಚಿರಾಗ್ ಅವರನ್ನು ನಿರ್ಜನ ಪ್ರದೇಶಕ್ಕೆ ಕರೆಸಿಕೊಂಡು ಬೆನ್ನಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದ್ದು, ಹತ್ಯೆಗೆ ಬಳಸಿದ ಪಿಸ್ತೂಲ್ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ. ಘಟನೆಯಲ್ಲಿ ಇತರರ ಪಾತ್ರವಿದೆಯೇ ಎಂಬುದರ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇವೆಯಲ್ಲಿರುವ ಶಿಕ್ಷಕರಿಗೂ ಟಿಇಟಿ ಕಡ್ಡಾಯ; 2028ರ ಆಗಸ್ಟ್‌ವರೆಗೆ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸೇವಾ ನಿರತ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯ ಎಂಬ ತನ್ನ ಹಿಂದಿನ ನಿಲುವನ್ನು ಸುಪ್ರೀಂ ಕೋರ್ಟ್ ಮತ್ತೊಮ್ಮೆ ಪುನರುಚ್ಚರಿಸಿದೆ. ಆದರೆ ಶಿಕ್ಷಕರಿಗೆ ಅನುಕೂಲವಾಗುವಂತೆ ಟಿಇಟಿ ಉತ್ತೀರ್ಣರಾಗಲು ನೀಡಿದ್ದ ಗಡುವನ್ನು 2028ರ ಆಗಸ್ಟ್ 31ರವರೆಗೆ ವಿಸ್ತರಿಸಿ ಮಹತ್ವದ ಆದೇಶ ಹೊರಡಿಸಿದೆ.

ಅಂಜುಮನ್ ಇಶಾತ್-ಎ-ತಲೀಮ್ ಟ್ರಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ರಾಜ್ಯ ಸರ್ಕಾರಗಳು, ಶಿಕ್ಷಕರ ಸಂಘಗಳು ಹಾಗೂ ವೈಯಕ್ತಿಕ ಶಿಕ್ಷಕರು ಸಲ್ಲಿಸಿದ್ದ 65ಕ್ಕೂ ಹೆಚ್ಚು ಮರುಪರಿಶೀಲನಾ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಮನಮೋಹನ್ ಅವರಿದ್ದ ಪೀಠ ಈ ತೀರ್ಪು ನೀಡಿದೆ.

ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು (ಆರ್‌ಟಿಇ) ಕಾಯ್ದೆ-2009 ಜಾರಿಯಾಗುವ ಮೊದಲು ನೇಮಕಗೊಂಡಿರುವ ಹಾಗೂ ನಿವೃತ್ತಿಗೆ ಐದು ವರ್ಷಗಳಿಗಿಂತ ಹೆಚ್ಚು ಅವಧಿ ಉಳಿದಿರುವ ಶಿಕ್ಷಕರು ಟಿಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂದು ಸುಪ್ರೀಂ ಕೋರ್ಟ್ 2025ರಲ್ಲಿ ಆದೇಶಿಸಿತ್ತು. ಈ ಆದೇಶವನ್ನು ಮರುಪರಿಶೀಲಿಸುವಂತೆ ಅರ್ಜಿದಾರರು ಮನವಿ ಮಾಡಿದ್ದರು.

ವಿಚಾರಣೆ ವೇಳೆ ನ್ಯಾಯಪೀಠ, ಟಿಇಟಿ ಪರೀಕ್ಷೆಯನ್ನು ಸಂಬಂಧಿತ ಅಧಿಕಾರಿಗಳು ಸಮರ್ಪಕವಾಗಿ ನಡೆಸಲು ಅಗತ್ಯ ಸಮಯ ಮತ್ತು ಸಂಪನ್ಮೂಲಗಳ ಮಿತಿಯನ್ನು ಪರಿಗಣಿಸಿ, ಈ ಹಿಂದೆ ನಿಗದಿಪಡಿಸಿದ್ದ ಎರಡು ವರ್ಷದ ಅವಧಿಯನ್ನು ಮೂರು ವರ್ಷಗಳಿಗೆ ವಿಸ್ತರಿಸುವ ನಿರ್ಧಾರ ಕೈಗೊಂಡಿದೆ. ಅದರಂತೆ ಶಿಕ್ಷಕರು 2027ರ ಆಗಸ್ಟ್ 31ರ ಬದಲಿಗೆ 2028ರ ಆಗಸ್ಟ್ 31ರೊಳಗೆ ಟಿಇಟಿ ಅರ್ಹತೆ ಪಡೆಯಬೇಕು ಎಂದು ಆದೇಶಿಸಿದೆ.

ಕನಿಷ್ಠ ಅರ್ಹತೆ ಕಡ್ಡಾಯ

ಆರ್‌ಟಿಇ ಕಾಯ್ದೆಯ ನಿಯಮಾವಳಿಗಳ ಪ್ರಕಾರ ಸೇವೆಯಲ್ಲಿರುವ ಶಿಕ್ಷಕರೂ ನಿಗದಿತ ಅವಧಿಯೊಳಗೆ ಕನಿಷ್ಠ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಶಿಕ್ಷಕರ ವೃತ್ತಿಯ ಗುಣಮಟ್ಟ ಕಾಪಾಡಲು ಟಿಇಟಿ ಪರೀಕ್ಷೆ ಅಗತ್ಯ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಶಿಕ್ಷಕರಿಂದ ಪ್ರತಿಭಟನೆ

ಇತ್ತೀಚೆಗೆ ಸುಪ್ರೀಂ ಕೋರ್ಟ್ ಆದೇಶದ ವಿರುದ್ಧ ದೇಶದ ವಿವಿಧ ಭಾಗಗಳಿಂದ ಬಂದಿದ್ದ ಶಿಕ್ಷಕರು ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಪ್ರತಿಭಟನೆ ನಡೆಸಿದ್ದರು. ಟೀಚರ್ಸ್ ಫೆಡರೇಶನ್ ಆಫ್ ಇಂಡಿಯಾ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಶಿಕ್ಷಕರು, ಟಿಇಟಿ ಕಡ್ಡಾಯಗೊಳಿಸುವ ನಿರ್ಧಾರದಿಂದ ಲಕ್ಷಾಂತರ ಶಿಕ್ಷಕರ ಉದ್ಯೋಗ ಭದ್ರತೆಗೆ ಧಕ್ಕೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದರು.

ಸುಪ್ರೀಂ ಕೋರ್ಟ್ ಆದೇಶದಿಂದ ಸುಮಾರು 20 ಲಕ್ಷ ಶಿಕ್ಷಕರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೆ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಿದ್ದು, ರಾಜ್ಯ ಸರ್ಕಾರಗಳು ಮಧ್ಯಪ್ರವೇಶಿಸಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಪ್ರತಿಭಟನಾನಿರತ ಶಿಕ್ಷಕರು ಆಗ್ರಹಿಸಿದ್ದರು.

ಆದರೆ, ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ಟಿಇಟಿ ಅರ್ಹತೆಯನ್ನು ಕಡ್ಡಾಯಗೊಳಿಸಿರುವುದಾಗಿ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದ್ದು, ಶಿಕ್ಷಕರು ನಿಗದಿತ ಗಡುವಿನೊಳಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಾಗಿದೆ.

ಧರ್ಮಸ್ಥಳಕ್ಕೆ ಉಪರಾಷ್ಟ್ರಪತಿ ಭೇಟಿ; ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ

ಬೆಳ್ತಂಗಡಿ: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಸಾಂಪ್ರದಾಯಿಕ ಉಡುಪಿನಲ್ಲಿ ದೇವಾಲಯಕ್ಕೆ ಆಗಮಿಸಿದ ಉಪರಾಷ್ಟ್ರಪತಿಗಳು, ದೇವರ ಆಶೀರ್ವಾದ ಪಡೆದು ಕೆಲಕಾಲ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಬಳಿಕ ಅನ್ನಪೂರ್ಣ ಛತ್ರಕ್ಕೆ ಭೇಟಿ ನೀಡಿ, ಭಕ್ತರಿಗೆ ನೀಡಲಾಗುತ್ತಿರುವ ಅನ್ನದಾನ ಸೇವೆ ಹಾಗೂ ಅಲ್ಲಿನ ವ್ಯವಸ್ಥೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಅನಂತರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಕ್ಷೇತ್ರದಲ್ಲಿ ನಡೆಯುತ್ತಿರುವ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಮತ್ತು ಆರೋಗ್ಯ ಸೇವಾ ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದರು.

ಧರ್ಮಸ್ಥಳದ ಮೂಲಕ ಸಮಾಜದ ವಿವಿಧ ವರ್ಗಗಳಿಗೆ ನೀಡಲಾಗುತ್ತಿರುವ ಸೇವೆಗಳು ಮಾದರಿಯಾಗಿವೆ ಎಂದು ಶ್ಲಾಘಿಸಿದ ಉಪರಾಷ್ಟ್ರಪತಿಗಳು, ಕ್ಷೇತ್ರದ ಜನಪರ ಕಾರ್ಯಗಳನ್ನು ಕೊಂಡಾಡಿದರು. ಈ ಸಂದರ್ಭದಲ್ಲಿ ಹೆಗ್ಗಡೆ ಕುಟುಂಬದ ಸದಸ್ಯರು ಹಾಗೂ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.

error: Content is protected !!