ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಅಂಗವಾಗಿ ಶಿರಹಟ್ಟಿ ಪಟ್ಟಣದ ಸಿಸಿಎನ್ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಲಕ್ಷ್ಮೇಶ್ವರ, ತಾಲೂಕು ಆಡಳಿತ ಶಿರಹಟ್ಟಿ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಲಕ್ಷ್ಮೇಶ್ವರ–ಶಿರಹಟ್ಟಿ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ದಿವಾಣಿ ನ್ಯಾಯಾಧೀಶ ಸತೀಶ್ ಎಂ. ಅವರು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, “ಶಿಕ್ಷಣದಿಂದ ಯಾವ ಮಗುವೂ ವಂಚಿತರಾಗಬಾರದು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಮಾಜದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ. ಮಕ್ಕಳಿಗೆ ಶಿಕ್ಷಣದ ಹಕ್ಕು ದೊರಕುವಂತೆ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು” ಎಂದು ಹೇಳಿದರು.
ತಹಸೀಲ್ದಾರ್ ಕೆ. ರಾಘವೇಂದ್ರ ರಾವ್, ಸರ್ಕಾರಿ ಸಹಾಯಕ ಅಭಿಯೋಜಕಿ ಕು. ಹೀನಾಕೌಸರ ಗಂಜಿಹಾಳ ಹಾಗೂ ಪಿಎಸ್ಐ ಈರಪ್ಪ ರಿತ್ತಿ ಅವರು ಬಾಲಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳು ಮತ್ತು ಮಕ್ಕಳ ಹಕ್ಕುಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ಅನಿಲ ಮಾನೆ, ಬಿ.ಎಸ್. ಭಜಂತ್ರಿ, ವೀರನಗೌಡ ಪೊಲೀಸ್ ಪಾಟೀಲ, ಎಚ್.ಎಂ. ದೇವಗಿರಿ, ಅಭಿನಂದನ ಖವಟಕೊಪ್ಪ, ವೆಂಕಟೇಶ ಗುಡಗುಂಡಿ, ಸುಮಯ್ಯ ಸಯ್ಯದ, ಎಸ್.ಎಸ್. ಡೊಳ್ಳಿನ, ಉಮೇಶ ಹುಚ್ಚಯ್ಯನಮಠ, ವಿ.ಎಚ್. ಡಿಯಾಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

