ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಪ್ರವಾಸಿ ತಾಣದಲ್ಲಿ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾದ ಘಟನೆ ಆತಂಕ ಮೂಡಿಸಿದೆ. ಮೃತಪಟ್ಟವರು ಮೈಸೂರಿನ ಕೈಗಾರಿಕಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕರು ಎಂಬುದು ತಿಳಿದುಬಂದಿದೆ.
ಚಾಮರಾಜನಗರ ಜಿಲ್ಲೆಯ ತಮರವಾಡಿ ಗ್ರಾಮದ ಮೊಹನ್ ಕುಮಾರ್ (21) ಮತ್ತು ಮೈಸೂರಿನ ಕೆಳಹಳ್ಳಿ ಗ್ರಾಮದ ರವಿಚಂದ್ರ (21) ಮೃತ ಯುವಕರು. ಇಬ್ಬರೂ ಐಟಿಐ ಮುಗಿಸಿ ಬೆಳಗೊಳ ಕೈಗಾರಿಕಾ ಪ್ರದೇಶದ ಕೇನ್ಸ್ ಟೆಕ್ನಾಲಜಿಯಲ್ಲಿ ಉದ್ಯೋಗದಲ್ಲಿದ್ದರು.
ಸ್ನೇಹಿತ ವಿಕಾಸ್ ಜೊತೆ ಮೂವರು ಬಲಮುರಿಗೆ ಬಂದಿದ್ದ ವೇಳೆ ಕಾವೇರಿ ನದಿಗೆ ಇಳಿದ ಇಬ್ಬರು ಆಳವಾದ ನೀರಿನಲ್ಲಿ ಸಿಲುಕಿ ಮುಳುಗಿದ್ದಾರೆ ಎನ್ನಲಾಗಿದೆ.
ಘಟನೆ ಗಮನಿಸಿದ ವಿಕಾಸ್ ತಕ್ಷಣ ಸ್ಥಳೀಯ ರೈತರ ನೆರವಿನಿಂದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೆಆರ್ಎಸ್ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.
ಸ್ಥಳೀಯ ಈಜುಗಾರರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರ ಶವಗಳನ್ನು ಹೊರತೆಗೆಯಲಾಗಿದೆ. ಬಳಿಕ ಮೃತದೇಹಗಳನ್ನು ಮೈಸೂರಿನ ಕೆಆರ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ.
ಘಟನೆ ಸಂಬಂಧ ಕೆಆರ್ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

