ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದ 100 ಎಕರೆ ಭೂಮಿಯನ್ನು ಒಲಿಂಪಿಕ್ಸ್ ತರಬೇತಿ ಕೇಂದ್ರ ಸ್ಥಾಪನೆಗಾಗಿ ನೀಡುವಂತೆ ಕೇಂದ್ರ ಸರ್ಕಾರ ಮನವಿ ಮಾಡಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಈ ಪ್ರಸ್ತಾವನೆಗೆ ವಿಶ್ವವಿದ್ಯಾಲಯ ಆಡಳಿತ ಹಾಗೂ ವಿದ್ಯಾರ್ಥಿ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಸುಮಾರು 1,200 ಎಕರೆ ಪ್ರದೇಶದಲ್ಲಿ ಸ್ಥಾಪನೆಯಾಗಿದ್ದ ಬೆಂಗಳೂರು ವಿಶ್ವವಿದ್ಯಾಲಯವು ಕಳೆದ ಹಲವು ದಶಕಗಳಲ್ಲಿ ವಿವಿಧ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸಂಸ್ಥೆಗಳಿಗೆ ಭೂಮಿ ಹಸ್ತಾಂತರಿಸಿರುವ ಪರಿಣಾಮ ತನ್ನ ವ್ಯಾಪ್ತಿಯನ್ನು ಕಳೆದುಕೊಂಡಿದೆ. ಈಗಾಗಲೇ 300ಕ್ಕೂ ಹೆಚ್ಚು ಎಕರೆ ಜಾಗವನ್ನು ವಿವಿಧ ಸಂಸ್ಥೆಗಳಿಗೆ ನೀಡಲಾಗಿದ್ದು, ಕ್ಯಾಂಪಸ್ ವಿಸ್ತೀರ್ಣ ಗಣನೀಯವಾಗಿ ಕಡಿಮೆಯಾಗಿದೆ.
ಇದೀಗ ಜ್ಞಾನಭಾರತಿ ಆವರಣದಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಕೇಂದ್ರಕ್ಕೆ ಹೊಂದಿಕೊಂಡಿರುವ 100 ಎಕರೆ ಭೂಮಿಯನ್ನು ಒಲಿಂಪಿಕ್ಸ್ ತರಬೇತಿ ಕೇಂದ್ರ ನಿರ್ಮಾಣಕ್ಕಾಗಿ ನೀಡುವಂತೆ ಕೇಂದ್ರ ಸರ್ಕಾರ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಮೂಲಕ ಬೇಡಿಕೆ ಸಲ್ಲಿಸಿದೆ ಎಂದು ತಿಳಿದುಬಂದಿದೆ.
ಆದರೆ, ಈ ಪ್ರಸ್ತಾವನೆಗೆ ವಿಶ್ವವಿದ್ಯಾಲಯ ಆಡಳಿತ ವಿರೋಧ ವ್ಯಕ್ತಪಡಿಸಿದ್ದು, ಈಗಾಗಲೇ ಕ್ಯಾಂಪಸ್ ವಿಸ್ತೀರ್ಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಭೂಮಿ ಹಸ್ತಾಂತರಿಸುವುದು ಶೈಕ್ಷಣಿಕ ಚಟುವಟಿಕೆಗಳಿಗೆ ಹಾನಿಕಾರಕವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ವಿದ್ಯಾರ್ಥಿ ಸಮುದಾಯವೂ ಈ ನಿಲುವಿಗೆ ಬೆಂಬಲ ಸೂಚಿಸಿದ್ದು, ಜ್ಞಾನಭಾರತಿ ಆವರಣದಲ್ಲಿರುವ ಭೂಮಿಯನ್ನು ವಿಶ್ವವಿದ್ಯಾಲಯದ ಶೈಕ್ಷಣಿಕ, ಸಂಶೋಧನಾ ಮತ್ತು ವಿದ್ಯಾರ್ಥಿ ಕಲ್ಯಾಣ ಚಟುವಟಿಕೆಗಳಿಗೆ ಮಾತ್ರ ಬಳಸಬೇಕು ಎಂದು ಆಗ್ರಹಿಸಿದೆ.
ಕ್ಯಾಂಪಸ್ನಲ್ಲಿನ ಹಸಿರು ವಾತಾವರಣ, ಸಂಶೋಧನಾ ಮೂಲಸೌಕರ್ಯ ಹಾಗೂ ಭವಿಷ್ಯದ ವಿಸ್ತರಣಾ ಯೋಜನೆಗಳ ದೃಷ್ಟಿಯಿಂದ ಜಾಗವನ್ನು ಉಳಿಸಿಕೊಳ್ಳುವುದು ಅಗತ್ಯ ಎಂದು ವಿದ್ಯಾರ್ಥಿಗಳು ಮತ್ತು ಕೆಲ ಶಿಕ್ಷಣ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

