ಶಿವಮೊಗ್ಗ: ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯಾಚರಣೆಯ ನಡುವೆ ಮತ್ತೊಂದು ದುರಂತ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಲ್ಲಾಪುರ ಗ್ರಾಮದಲ್ಲಿ ಎಸ್ಐಆರ್ ಸಮೀಕ್ಷೆ ನಡೆಸುತ್ತಿದ್ದ ಬಿಎಲ್ಒ ಹಾಗೂ ಅಂಗನವಾಡಿ ಕಾರ್ಯಕರ್ತೆ ಮಂಜುಳಾ (52) ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದು, ಕರ್ತವ್ಯದ ಒತ್ತಡವೇ ಸಾವಿಗೆ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಮನೆ ಮನೆಗೆ ತೆರಳಿ ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದ ವೇಳೆ ಮಂಜುಳಾ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಭದ್ರಾವತಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ವರದಿ ಬಳಿಕ ಸಾವಿನ ನಿಖರ ಕಾರಣ ಬಹಿರಂಗವಾಗಲಿದೆ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರ ಪತಿ ಸಂಗಯ್ಯ, ಅಧಿಕಾರಿಗಳ ವಿರುದ್ಧ ನೇರ ಆರೋಪ ಮಾಡಿದ್ದು, “ಪತ್ನಿಗೆ ಸಕ್ಕರೆ ಕಾಯಿಲೆ ಇದ್ದರೂ ಎಸ್ಐಆರ್ ಕರ್ತವ್ಯಕ್ಕೆ ಬಲವಂತವಾಗಿ ನಿಯೋಜನೆ ಮಾಡಲಾಯಿತು. ಕರ್ತವ್ಯದಿಂದ ವಿನಾಯಿತಿ ಕೋರೆದರೂ ಕೇಳಲಿಲ್ಲ. ನಿರಂತರ ಒತ್ತಡದಿಂದಲೇ ಈ ದುರಂತ ಸಂಭವಿಸಿದೆ” ಎಂದು ಟೀಕಿಸಿದ್ದಾರೆ.
ಸಹೋದ್ಯೋಗಿಗಳೂ ಮಂಜುಳಾ ಅವರ ಸಾವಿಗೆ ತೀವ್ರ ಸಂತಾಪ ಸೂಚಿಸಿದ್ದು, ಅಂಗನವಾಡಿ ಕೆಲಸದ ಜೊತೆಗೆ ಎಸ್ಐಆರ್ ಜವಾಬ್ದಾರಿಯಿಂದ ಸಿಬ್ಬಂದಿ ಮೇಲೆ ಅಪಾರ ಒತ್ತಡ ನಿರ್ಮಾಣವಾಗಿತ್ತು ಎಂದು ಹೇಳಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಈಗಾಗಲೇ ಎದ್ದಿರುವ ವಿವಾದದ ನಡುವೆ ಈ ಘಟನೆ ಆಡಳಿತ ವ್ಯವಸ್ಥೆಯ ಮೇಲೆಯೇ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿದೆ.


