Home Blog

ಶಾಲೆಗಳಿಂದ ಕಣ್ಮರೆಯಾಗುತ್ತಿವೆ ನೀತಿ ಪಾಠಗಳು!

0

ವಿಜಯಸಾಕ್ಷಿ ಸುದ್ದಿ, ಗದಗ: ಶಾಲಾ ಪಠ್ಯಕ್ರಮದಿಂದ ನೀತಿ ಪಾಠಗಳು ಹಾಗೂ ನೀತಿ ಕಥೆಗಳು ಕಣ್ಮರೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮಕ್ಕಳಲ್ಲಿ ಕಥೆಗಳನ್ನು ಕೇಳುವ ಆಸಕ್ತಿ ಇಂದಿಗೂ ಜೀವಂತವಾಗಿದ್ದರೂ, ಹೇಳುವವರೇ ಇಲ್ಲದಂತಾಗಿದೆ. ಈ ಕೊರತೆಯಿಂದ ಮಕ್ಕಳು ಮೊಬೈಲ್ ಮತ್ತು ದೂರದರ್ಶನದ ಗೀಳಿಗೆ ಸಿಲುಕಿ ಮೌಲ್ಯಾಧಾರಿತ ಬದುಕಿನಿಂದ ದೂರವಾಗುತ್ತಿದ್ದಾರೆ ಎಂದು ಕಾಶಿ ಜಂಗಮವಾಡಿಮಠದ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಕಳವಳ ವ್ಯಕ್ತಪಡಿಸಿದರು.

ನಗರದ ಮಾಂಗಲ್ಯ ಮಂದಿರದಲ್ಲಿ ಗದಗ-ಬೆಟಗೇರಿ ಪಂಚಾಚಾರ್ಯ ಸೇವಾ ಸಂಘದ ಆಶ್ರಯದಲ್ಲಿ ಆಷಾಢ ಮಾಸದ ಅಂಗವಾಗಿ ಆಯೋಜಿಸಿರುವ ಶ್ರೀ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ ಮಾಲಿಕೆಯಲ್ಲಿ ಆಶೀರ್ವಚನ ನೀಡಿ ಅವರು ಮಾತನಾಡಿದರು.

ಹಿಂದೆ ಅಜ್ಜ-ಅಜ್ಜಿಯರು ಚಂದಮಾಮ, ವಿಕ್ರಮ-ಬೇತಾಳದಂತಹ ಕಥೆಗಳ ಮೂಲಕ ಮಕ್ಕಳಿಗೆ ನೀತಿ ಬೋಧಿಸುತ್ತಿದ್ದರು. ಆದರೆ ಇಂದು ತಂದೆ-ತಾಯಿಯರು ಉದ್ಯೋಗದಲ್ಲಿ ನಿರತರಾಗಿದ್ದು, ಶಾಲೆಗಳಲ್ಲೂ ನೀತಿ ಕಥೆಗಳಿಗೆ ಸ್ಥಾನ ಕಡಿಮೆಯಾಗಿದೆ. ಪರಿಣಾಮ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ದೊರೆಯುತ್ತಿಲ್ಲ. ಪಾಲಕರು ಮಕ್ಕಳೊಂದಿಗೆ ಸಮಯ ಕಳೆಯಬೇಕು, ಅವರ ಭಾವನೆಗಳನ್ನು ಅರಿತುಕೊಳ್ಳಬೇಕು. ಇಲ್ಲವಾದರೆ ಅದರ ದುಷ್ಪರಿಣಾಮವನ್ನು ಮುಂದಿನ ದಿನಗಳಲ್ಲಿ ಸಮಾಜವೇ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಶ್ರೀ ಸಿದ್ಧಾಂತ ಶಿಖಾಮಣಿ ಸಾಮಾನ್ಯ ಗ್ರಂಥವಲ್ಲ. ಜಗದ್ಗುರು ರೇಣುಕ ಭಗವತ್ಪಾದರು ಅಗಸ್ತ್ಯ ಮಹರ್ಷಿಗಳ ಮೂಲಕ ಸಮಸ್ತ ಮನುಕುಲದ ಶ್ರೇಯೋಭಿವೃದ್ಧಿಗಾಗಿ ನೀಡಿದ ದಿವ್ಯೋಪದೇಶವಾಗಿದೆ. ಶ್ರೀಕೃಷ್ಣನು ಅರ್ಜುನನಿಗೆ ಭಗವದ್ಗೀತೆ ಉಪದೇಶಿಸಿದಂತೆ, ರೇಣುಕ ಭಗವತ್ಪಾದರು ನೀಡಿದ ಈ ಗ್ರಂಥವನ್ನು ‘ರೇಣುಕ ಗೀತೆ’ ಎಂದೂ ಕರೆಯಲಾಗುತ್ತದೆ ಎಂದು ಹೇಳಿದರು.

ನರೇಗಲ್ಲ ಮಠದ ಸ್ವಾಮೀಜಿಗಳ ಸೇವೆಯನ್ನು ಶ್ಲಾಘಿಸಿದ ಅವರು, ಅವರ ಪ್ರವಚನ ಸೇವೆ ಕರ್ನಾಟಕ ಮಾತ್ರವಲ್ಲದೆ ಮಹಾರಾಷ್ಟ್ರಕ್ಕೂ ವಿಸ್ತರಿಸಿದ್ದು, ಶುದ್ಧ ಕನ್ನಡದ ಮೂಲಕ ಸಿದ್ಧಾಂತ ಶಿಖಾಮಣಿಯ ಸಂದೇಶವನ್ನು ಜನರಿಗೆ ತಲುಪಿಸುತ್ತಿರುವುದು ಶ್ಲಾಘನೀಯ ಎಂದರು.

ಗೋಸಂರಕ್ಷಣೆ, ಭಾರತೀಯ ಸಂಸ್ಕೃತಿ ಹಾಗೂ ಕುಟುಂಬ ಮೌಲ್ಯಗಳ ಉಳಿವಿಗೆ ಪ್ರತಿಯೊಬ್ಬರೂ ಬದ್ಧರಾಗಬೇಕು. ಸಾಕು ಪ್ರಾಣಿಗಳನ್ನು ಪ್ರೀತಿಯಿಂದ ಸಾಕಬೇಕು, ಆದರೆ ನಮ್ಮ ಸಂಸ್ಕೃತಿಯ ಮೂಲ ಮೌಲ್ಯಗಳನ್ನು ಮರೆಯಬಾರದು ಎಂದು ಜಗದ್ಗುರುಗಳು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ಗಣ್ಯರು, ಪಂಚಾಚಾರ್ಯ ವೇದ ಆಗಮ ಸಂಸ್ಕೃತ ಪಾಠಶಾಲೆಯ ವಟುಗಳು, ಸಂಗೀತ ಕಲಾ ಬಳಗದ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಭಕ್ತರು ಉಪಸ್ಥಿತರಿದ್ದರು.

“ಮಕ್ಕಳಲ್ಲಿ ನೀತಿ ಕಥೆಗಳನ್ನು ಕೇಳುವ ಹಂಬಲ ಇಂದಿಗೂ ಇದೆ. ಆದರೆ ಹೇಳುವವರೇ ಇಲ್ಲದಂತಾಗಿದೆ. ಪಾಲಕರು ಮಕ್ಕಳೊಂದಿಗೆ ಸಮಯ ಕಳೆಯದಿದ್ದರೆ, ಮೊಬೈಲ್‌ವೇ ಅವರ ಗುರುವಾಗುವ ಅಪಾಯವಿದೆ.”

– ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು

ಜು.16ರಿಂದ ನಡೆಯುತ್ತಿರುವ ಇಷ್ಟಲಿಂಗ ಮಹಾಪೂಜೆ ಹಾಗೂ ಶ್ರೀ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ ಮಾಲಿಕೆಗೆ ಜು.21ರಂದು ಸಂಜೆ 7 ಗಂಟೆಗೆ ಮಾಂಗಲ್ಯ ಮಂದಿರದಲ್ಲಿ ಮಂಗಲೋತ್ಸವ ನಡೆಯಲಿದೆ. ಬಾಳೆಹೊನ್ನೂರಿನ ರಂಭಾಪುರಿ ಪೀಠದ ಜಗದ್ಗುರು ಡಾ. ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಕಾಶಿ ಪೀಠದ ನೂತನ ಜಗದ್ಗುರುಗಳು ಸಾನಿಧ್ಯ ವಹಿಸಲಿದ್ದು, ವಿವಿಧ ಮಠಾಧೀಶರು, ಗಣ್ಯರು ಹಾಗೂ ಭಕ್ತರು ಭಾಗವಹಿಸಲಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆ ಆರೋಪ: ಇಬ್ಬರು ಮುಖಂಡರ ಉಚ್ಚಾಟನೆ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಹಿನ್ನೆಲೆಯಲ್ಲಿ ಮಂಜುನಾಥ ಮಾಗಡಿ ಹಾಗೂ ಹೊನ್ನಪ್ಪ ವಡ್ಡರ ಅವರನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಿರಹಟ್ಟಿ ಮಂಡಳ ಘಟಕದಿಂದ ವಜಾಗೊಳಿಸಲಾಗಿದೆ ಎಂದು ಮಂಡಳ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಪಕ್ಷಕ್ಕೆ ಮುಜುಗರ ಉಂಟುಮಾಡುವ ರೀತಿಯಲ್ಲಿ ಹೇಳಿಕೆ ನೀಡುವುದು, ಪಕ್ಷದ ಶಾಸಕರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸುವುದು ಹಾಗೂ ನಿರಂತರವಾಗಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪ ಇವರ ಮೇಲಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಇದಲ್ಲದೆ, ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕ ಜಿ.ಎಂ. ಮಹಾಂತಶೆಟ್ಟರ ವಿರುದ್ಧವೂ ಹಗುರವಾಗಿ ಮಾತನಾಡಿ ಕ್ಷೇತ್ರದಲ್ಲಿ ಗೊಂದಲದ ವಾತಾವರಣ ಸೃಷ್ಟಿಸುವುದರ ಜೊತೆಗೆ ಕಾರ್ಯಕರ್ತರಲ್ಲಿ ಭಿನ್ನಾಭಿಪ್ರಾಯ ಮೂಡಿಸಿ ಪಕ್ಷ ಸಂಘಟನೆಗೆ ಹಿನ್ನಡೆಯುಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯ ಪರವಾಗಿ ಬಹಿರಂಗವಾಗಿ ಕೆಲಸ ಮಾಡಿದ್ದು, ಬಳಿಕ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯ ಸೋಲಿನ ಸೇಡು ತೀರಿಸಿಕೊಳ್ಳುವ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂಬ ಆರೋಪವೂ ಪ್ರಕಟಣೆಯಲ್ಲಿ ಮಾಡಲಾಗಿದೆ.

ಈ ಎಲ್ಲ ಬೆಳವಣಿಗೆಗಳನ್ನು ಪರಿಗಣಿಸಿ ಶಿರಹಟ್ಟಿ ಮಂಡಳ ಬಿಜೆಪಿ ಕೋರ್ ಕಮಿಟಿಯ ಎಲ್ಲ ಸದಸ್ಯರ ಒಮ್ಮತದ ನಿರ್ಧಾರದಂತೆ ಇಬ್ಬರನ್ನು ಪಕ್ಷದಿಂದ ವಜಾಗೊಳಿಸಲಾಗಿದೆ ಎಂದು ಸುನೀಲ ಮಹಾಂತಶೆಟ್ಟರ ತಿಳಿಸಿದ್ದಾರೆ.

ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ ರಾಜಕೀಯಗೊಳಿಸಬೇಡಿ: ಸುಪ್ರೀಂ ಕೋರ್ಟ್ ಎಚ್ಚರಿಕೆ

0

ನವದೆಹಲಿ: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಕಳ್ಳತನ ಆರೋಪ ಪ್ರಕರಣವನ್ನು ರಾಜಕೀಯಗೊಳಿಸದಂತೆ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ.

ದೇಣಿಗೆ ಕಳ್ಳತನ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಹಾಗೂ ವಿ. ಮೋಹನ್ ಅವರಿದ್ದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರಿಗೆ ಈ ವಿಷಯವನ್ನು ರಾಜಕೀಯಗೊಳಿಸದಂತೆ ಪೀಠ ಸೂಚನೆ ನೀಡಿತು. ಉತ್ತರ ಪ್ರದೇಶ ಸರ್ಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಿತಿಗತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದು, ಇದುವರೆಗೆ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದರು. ವರದಿ ಪರಿಶೀಲಿಸಿದ ಪೀಠವು ಪ್ರಕರಣದ ತನಿಖೆ ಎಸ್‌ಐಟಿ ನಡೆಸುತ್ತಿದೆಯೇ ಎಂದು ಪ್ರಶ್ನಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ತುಷಾರ್ ಮೆಹ್ತಾ, ಆರೋಪಗಳ ಸತ್ಯಾಸತ್ಯತೆ ಪತ್ತೆಹಚ್ಚಲು ಮೊದಲು ಎಸ್‌ಐಟಿ ತನಿಖೆ ನಡೆಸಿದ್ದು, ಇದೀಗ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸುತ್ತಿದ್ದಾರೆ ಎಂದು ತಿಳಿಸಿದರು.

ಎಸ್‌ಐಟಿ ತನಿಖೆ ಮುಂದುವರಿಸಬಹುದಾಗಿದ್ದು, ಹಿರಿಯ ಅಧಿಕಾರಿಗಳನ್ನು ಒಳಗೊಂಡಂತೆ ಎಸ್‌ಐಟಿಯನ್ನು ಪುನರ್ ರಚಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಸ್ಥಿತಿಗತಿ ವರದಿಯನ್ನು ಸಂಪೂರ್ಣವಾಗಿ ಪರಿಶೀಲಿಸಲು ಮೂರರಿಂದ ನಾಲ್ಕು ದಿನಗಳ ಕಾಲಾವಕಾಶ ಬೇಕಿದ್ದು, ಮುಂದಿನ ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಲಾಗಿದೆ. ಬಳಿಕ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದು ಎಂದು ಪೀಠ ತಿಳಿಸಿದೆ.

 

ಬೆಂಗಳೂರಿಗರಿಗೆ ತಂಪೆರೆದ ಮಳೆ! ಈ ಜಿಲ್ಲೆಗಳಿಗೆ ನಾಳೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ನಗರದಲ್ಲಿ ಮುಂದುವರಿದಿರುವ ಮಳೆಯ ಅಬ್ಬರ ಇಂದು ಕೂಡ ಮುಂದುವರಿದಿದೆ.

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಗಾಳಿ ಸಹಿತ ಉತ್ತಮ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಬಸವನಗುಡಿ, ಶಾಂತಿನಗರ, ಟೌನ್‌ಹಾಲ್, ಮೆಜೆಸ್ಟಿಕ್, ಜಯನಗರ, ಮಲ್ಲೇಶ್ವರಂ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಏಕಾಏಕಿ ಸುರಿದ ಮಳೆಯಿಂದ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ತೊಂದರೆ ಅನುಭವಿಸಿದ್ದು, ಬಸ್ ನಿಲ್ದಾಣಗಳು, ಅಂಗಡಿ ಮುಂಗಟ್ಟುಗಳ ಬಳಿ ನಿಂತು ಮಳೆಯಿಂದ ರಕ್ಷಣೆ ಪಡೆದರು.

ಈ ನಡುವೆ ಹವಾಮಾನ ಇಲಾಖೆ ನಾಳೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.

ಉಡುಪಿ, ಶಿವಮೊಗ್ಗದಲ್ಲಿ ಭಾರಿ ಮಳೆ:

ರಾಜ್ಯದಲ್ಲಿ ನಿನ್ನೆ ಅತಿ ಹೆಚ್ಚು ಮಳೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೆರ್ಗಾಳುವಿನಲ್ಲಿ ದಾಖಲಾಗಿದ್ದು, 160.5 ಮಿ.ಮೀ. ಮಳೆಯಾಗಿದೆ. ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ 155 ಮಿ.ಮೀ., ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ 98.5 ಮಿ.ಮೀ. ಮಳೆಯಾಗಿದೆ.

ಇದಲ್ಲದೆ ಮಡಿಕೇರಿಯ ಪೆರಾಜೆ, ಯಾದಗಿರಿಯ ಸುರಪುರದ ಮಾಲಗತ್ತಿಯಲ್ಲಿ ತಲಾ 64.5 ಮಿ.ಮೀ., ರಾಯಚೂರಿನ ಪೂರ್ತಿಪ್ಲಿಯಲ್ಲಿ 59 ಮಿ.ಮೀ., ಉತ್ತರ ಕನ್ನಡದ ಸಿದ್ದಾಪುರದ ದೊಡ್ಮನೆಯಲ್ಲಿ 57.5 ಮಿ.ಮೀ. ಹಾಗೂ ಬೆಳಗಾವಿಯ ಬೆಳವಟ್ಟಿಯಲ್ಲಿ 56 ಮಿ.ಮೀ. ಮಳೆ ದಾಖಲಾಗಿದೆ.

 

ತುಮಕೂರು: ಕ್ವಾರಿ ಗುಂಡಿಗೆ ಲಾರಿ ಬಿದ್ದು ಚಾಲಕ, ಕ್ಲೀನರ್ ದುರ್ಮರಣ!

ತುಮಕೂರು: ಗಣಿಗಾರಿಕೆ ಪ್ರದೇಶದಲ್ಲಿ ರಸ್ತೆ ಕುಸಿದ ಪರಿಣಾಮ ಕ್ವಾರಿಯ ಆಳವಾದ ಗುಂಡಿಗೆ ಲಾರಿ ಉರುಳಿ ಚಾಲಕ ಹಾಗೂ ಕ್ಲೀನರ್ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಖಾಲಿ ಲಾರಿಯನ್ನು ಯೂಟರ್ನ್ ತೆಗೆದುಕೊಳ್ಳುವ ವೇಳೆ ಏಕಾಏಕಿ ರಸ್ತೆ ಕುಸಿದಿದೆ. ಪರಿಣಾಮ ನಿಯಂತ್ರಣ ತಪ್ಪಿದ ಲಾರಿ ಸುಮಾರು 50 ಮೀಟರ್ ಆಳದ ಕ್ವಾರಿ ಗುಂಡಿಗೆ ಬಿದ್ದಿದೆ. ಅಪಘಾತದ ತೀವ್ರತೆಗೆ ಲಾರಿ ಸಂಪೂರ್ಣವಾಗಿ ಜಖಂಗೊಂಡಿದ್ದು, ಲಾರಿಯಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಜಾರ್ಖಂಡ್ ಮೂಲದ ಅಕ್ಷಯ್ (30) ಹಾಗೂ ಮಧ್ಯಪ್ರದೇಶ ಮೂಲದ ಸಹದೇವ್ (25) ಎಂದು ಗುರುತಿಸಲಾಗಿದೆ.

ಘಟನೆ ತಿಳಿದು ಸ್ಥಳಕ್ಕೆ ಹುಲಿಯೂರುದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹಗಳನ್ನು ಬಿಜಿಎಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 

ಜಾತಿ ಪ್ರಮಾಣ ಪತ್ರದಲ್ಲಿ ವಿಳಾಸ ಬದಲಾಯಿಸಬೇಕೇ? ಈ 4 ಹಂತಗಳನ್ನು ಅನುಸರಿಸಿ!

ಬೆಂಗಳೂರು: ಜಾತಿ ಪ್ರಮಾಣ ಪತ್ರವು ವ್ಯಕ್ತಿಯ ಜಾತಿಯನ್ನು ದೃಢೀಕರಿಸುವ ಪ್ರಮುಖ ಸರ್ಕಾರಿ ದಾಖಲೆಯಾಗಿದ್ದು, ಶಿಕ್ಷಣ, ಉದ್ಯೋಗ, ಮೀಸಲಾತಿ ಸೇರಿದಂತೆ ಹಲವು ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿದೆ. ಆದರೆ, ಈ ಪ್ರಮಾಣ ಪತ್ರದಲ್ಲಿರುವ ವಿಳಾಸವನ್ನು ನೇರವಾಗಿ ತಿದ್ದುಪಡಿ ಮಾಡಲು ಅವಕಾಶವಿಲ್ಲ.

ವಿಳಾಸ ಬದಲಾದಲ್ಲಿ ಹೊಸ ವಿಳಾಸದೊಂದಿಗೆ ಹೊಸ ಜಾತಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸುವುದು ಅಥವಾ ಹಳೆಯ ಪ್ರಮಾಣ ಪತ್ರದೊಂದಿಗೆ ವಿಳಾಸ ಬದಲಾವಣೆಯನ್ನು ದೃಢೀಕರಿಸುವ ಅಫಿಡವಿಟ್ ಸಲ್ಲಿಸುವುದು ಅಗತ್ಯವಾಗಿದೆ.

ವಿಳಾಸ ಬದಲಾವಣೆಗಾಗಿ ಅನುಸರಿಸಬೇಕಾದ ಕ್ರಮಗಳು:

  • ನಾಡಕಚೇರಿ, ಗ್ರಾಮ ಒನ್ ಅಥವಾ ಸೇವಾ ಸಿಂಧು ಪೋರ್ಟಲ್ ಮೂಲಕ ಹೊಸ ಜಾತಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಬೇಕು.
  • ಹಳೆಯ ಜಾತಿ ಪ್ರಮಾಣ ಪತ್ರ, ಹೊಸ ವಿಳಾಸ ಹೊಂದಿರುವ ಆಧಾರ್ ಕಾರ್ಡ್ ಅಥವಾ ಇತರೆ ವಿಳಾಸದ ಪುರಾವೆ, ಸ್ವಯಂ ಘೋಷಣಾ ಪತ್ರವನ್ನು ಸಲ್ಲಿಸಬೇಕು.
  • ಸ್ಥಳಾಂತರವನ್ನು ದೃಢೀಕರಿಸುವ ಅಫಿಡವಿಟ್ ಅನ್ನು ನೋಟರಿ ಅಥವಾ ಮ್ಯಾಜಿಸ್ಟ್ರೇಟ್ ಮೂಲಕ ಮಾಡಿಸಬೇಕು.
  • ಅಫಿಡವಿಟ್ ಅನ್ನು ಹಳೆಯ ಜಾತಿ ಪ್ರಮಾಣ ಪತ್ರದೊಂದಿಗೆ ಲಗತ್ತಿಸಿ ಸಂಬಂಧಿತ ಅಧಿಕಾರಿಗಳಿಗೆ ಸಲ್ಲಿಸಬೇಕು.

ಅಧಿಕಾರಿಗಳ ಪರಿಶೀಲನೆಯ ಬಳಿಕ ಹೊಸ ವಿಳಾಸದೊಂದಿಗೆ ಜಾತಿ ಪ್ರಮಾಣ ಪತ್ರ ನೀಡಲಾಗುತ್ತದೆ.

 

POP ಗಣೇಶ ಮೂರ್ತಿಗಳಿಗೆ ಬ್ರೇಕ್? ಸಚಿವರಿಗೆ ಸುರೇಶ್ ಕುಮಾರ್ ತುರ್ತು ಪತ್ರ!

ಬೆಂಗಳೂರು: ಗಣೇಶೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (POP) ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟ ಹಾಗೂ ಬಳಕೆಯನ್ನು ತಡೆಗಟ್ಟಲು ತುರ್ತು ಕ್ರಮ ಕೈಗೊಳ್ಳುವಂತೆ ರಾಜಾಜಿನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಮಾರುಕಟ್ಟೆಯಲ್ಲಿ POP ಗಣೇಶ ಮೂರ್ತಿಗಳ ಹಾವಳಿ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ಜಲಮೂಲಗಳು ಮತ್ತು ಪರಿಸರಕ್ಕೆ ಹಾನಿಯಾಗುವುದಲ್ಲದೆ, ಗಣೇಶನ ಮೇಲಿನ ಸಾಂಪ್ರದಾಯಿಕ ಶ್ರದ್ಧೆ ಹಾಗೂ ಪಾವಿತ್ರ್ಯಕ್ಕೂ ಧಕ್ಕೆಯಾಗುತ್ತದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಜೂನ್ 28ರಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಬಳಸುವಂತೆ ಹಾಗೂ POP ಮೂರ್ತಿಗಳನ್ನು ತ್ಯಜಿಸುವಂತೆ ದೇಶದ ಜನತೆಗೆ ಕರೆ ನೀಡಿದ್ದನ್ನು ಸುರೇಶ್ ಕುಮಾರ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಕುರಿತು ಈಗಾಗಲೇ ಜೂನ್ 29 ಹಾಗೂ ಜುಲೈ 12ರಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರಿಗೆ ಪತ್ರ ಬರೆದು ಗಮನ ಸೆಳೆಯಲಾಗಿತ್ತು. ಜುಲೈ 13ರಂದು ಉತ್ತರ ನೀಡುವುದಾಗಿ ಭರವಸೆ ನೀಡಿದ್ದರೂ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪರಿಸರ ಸಂರಕ್ಷಣೆ ಎಲ್ಲರ ಆದ್ಯ ಕರ್ತವ್ಯವಾಗಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ POP ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ತುರ್ತು ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಮನವಿ ಮಾಡಿದ್ದಾರೆ.

‘ನಿಮ್ಮ ಆರೋಗ್ಯ ಹೇಗಿದೆ?’; ಆರೋಗ್ಯದ ಊಹಾಪೋಹಗಳಿಗೆ ಸಲ್ಮಾನ್ ಖಾನ್ ಸ್ಟೈಲಿಷ್ ಟಾಂಗ್!

ಮುಂಬೈ: ಆರೋಗ್ಯ ಹದಗೆಟ್ಟಿದೆಯೇ ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗುತ್ತಿದ್ದಂತೆಯೇ ಬಾಲಿವುಡ್ ನಟ ಸಲ್ಮಾನ್ ಖಾನ್ ತಮ್ಮದೇ ಸ್ಟೈಲ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಹೊಸ ಫೋಟೋಗಳನ್ನು ಹಂಚಿಕೊಂಡು “ನಿಮ್ಮೆಲ್ಲರ ಆರೋಗ್ಯ ಹೇಗಿದೆ?” ಎಂದು ಪ್ರಶ್ನಿಸಿರುವ ನಟ, ತಮ್ಮ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ಪರೋಕ್ಷ ಉತ್ತರ ನೀಡಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡ ಸಲ್ಮಾನ್ ಖಾನ್ ಅವರ ಇತ್ತೀಚಿನ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ವಿಡಿಯೊದಲ್ಲಿ ಅವರು ತುಂಬಾ ಸಣ್ಣಗಾಗಿರುವಂತೆ ಹಾಗೂ ಮುಖದಲ್ಲಿ ಆಯಾಸದ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಅಭಿಮಾನಿಗಳು ಆರೋಗ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು.

ಈ ಚರ್ಚೆಗಳು ತೀವ್ರವಾಗುತ್ತಿದ್ದಂತೆ ಸಲ್ಮಾನ್ ಖಾನ್ ಇನ್‌ಸ್ಟಾಗ್ರಾಮ್‌ನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಆರೋಗ್ಯದ ಬಗ್ಗೆ ನೇರ ಸ್ಪಷ್ಟನೆ ನೀಡದೆ, “ನಿಮ್ಮೆಲ್ಲರ ಆರೋಗ್ಯ ಹೇಗಿದೆ?” ಎಂಬ ಒಂದು ಸಾಲಿನ ಸಂದೇಶದ ಮೂಲಕ ವದಂತಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ.

ಹೊಸ ಫೋಟೋಗಳಲ್ಲಿ ಸಲ್ಮಾನ್ ಖಾನ್ ಫಿಟ್, ರಿಲ್ಯಾಕ್ಸ್ ಹಾಗೂ ಆತ್ಮವಿಶ್ವಾಸದಿಂದ ಕಾಣಿಸಿಕೊಂಡಿದ್ದು, ಅಭಿಮಾನಿಗಳಲ್ಲಿ ನೆಮ್ಮದಿ ಮೂಡಿಸಿದೆ. “ನೀವು ಆರೋಗ್ಯವಾಗಿದ್ದರೆ ಸಾಕು” ಎಂದು ಅಭಿಮಾನಿಗಳು ಕಾಮೆಂಟ್‌ಗಳ ಮೂಲಕ ಪ್ರೀತಿ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ವೃತ್ತಿಜೀವನದತ್ತ ಗಮನಹರಿಸಿರುವ ಸಲ್ಮಾನ್ ಖಾನ್, ಅಪೂರ್ವ ಲಾಖಿಯಾ ನಿರ್ದೇಶನದ ‘ಮಾತೃಭೂಮಿ: ಮೇ ವಾರ್ ರೆಸ್ಟ್ ಇನ್ ಪೀಸ್’ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಚಿತ್ರದ ಬಿಡುಗಡೆ ದಿನಾಂಕದ ಕುರಿತು ಮಾತ್ರ ಅವರು ಇನ್ನೂ ಮೌನ ವಹಿಸಿದ್ದಾರೆ.

ಕ್ಷಣಾರ್ಧದಲ್ಲೇ ರಕ್ಷಣಾ ಕಾರ್ಯ: ಚರಂಡಿಗೆ ಉರುಳಿದ ಕಾರಿನಿಂದ ಮಗು ಎತ್ತಿಕೊಂಡು ಬಂದ ಎಸ್ಐ ವಿಡಿಯೊ ವೈರಲ್

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಚರಂಡಿಗೆ ಉರುಳಿದ್ದ ಕಾರಿನೊಳಗೆ ಸಿಲುಕಿದ್ದ ಕುಟುಂಬವನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ರಕ್ಷಿಸಿದ ವಿಟ್ಲ ಪೊಲೀಸರ ಮಾನವೀಯತೆ ಮತ್ತು ಸಮಯಪ್ರಜ್ಞೆ ಎಲ್ಲೆಡೆ ಪ್ರಶಂಸೆಗೆ ಪಾತ್ರವಾಗಿದೆ. ಎಸ್ಐ ರಾಮಕೃಷ್ಣ ಪುಟ್ಟ ಮಗುವನ್ನು ಸುರಕ್ಷಿತವಾಗಿ ಹೊರತೆಗೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಭಾನುವಾರ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಪೆಟ್ರೋಲ್ ಬಂಕ್ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿತ್ತು. ಕಾರಿನೊಳಗೆ ಮಗು, ಮಹಿಳೆ ಮತ್ತು ಚಾಲಕ ಸಿಲುಕಿಕೊಂಡಿದ್ದು, ಅಪಘಾತದ ತೀವ್ರತೆಯಿಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸಮೀಪದಲ್ಲೇ ಕರ್ತವ್ಯದಲ್ಲಿದ್ದ ವಿಟ್ಲ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರಾಮಕೃಷ್ಣ ಹಾಗೂ ಸಿಬ್ಬಂದಿ ಕರುಣಾಕರ ಅಪಘಾತದ ಶಬ್ದ ಕೇಳುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಕಾರಿನೊಳಗೆ ಸಿಲುಕಿದ್ದ ಮೂವರನ್ನೂ ಸುರಕ್ಷಿತವಾಗಿ ಹೊರತೆಗೆದು ತಕ್ಷಣ ನೆರವು ಒದಗಿಸಿದರು.

ರಕ್ಷಣಾ ಕಾರ್ಯಾಚರಣೆಯ ವೇಳೆ ಅಳುತ್ತಿದ್ದ ಮಗುವನ್ನು ಎಸ್ಐ ರಾಮಕೃಷ್ಣ ತಮ್ಮ ಕೈಯಲ್ಲಿ ಎತ್ತಿಕೊಂಡು ಸುರಕ್ಷಿತ ಸ್ಥಳಕ್ಕೆ ಕರೆತಂದ ದೃಶ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್ ಆಗುತ್ತಿದ್ದಂತೆ ಪೊಲೀಸರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಗೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ.

ಅಪಘಾತದಲ್ಲಿ ಮೂವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣದ ಪೊಲೀಸ್ ಕಾರ್ಯಾಚರಣೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಮಯೋಚಿತವಾಗಿ ಸ್ಪಂದಿಸಿದ ಪೊಲೀಸರ ಕಾರ್ಯಕ್ಕೆ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ.

ಬೆಂಗಳೂರಿಗರಿಗೆ ತಂಪೆರೆದ ವರುಣ; ಅರ್ಧ ಕರ್ನಾಟಕದಲ್ಲಿ ನಾಳೆ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕಳೆದ ಮೂರು-ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ಸೋಮವಾರವೂ ಬೆಂಗಳೂರಿನಲ್ಲಿ ಮುಂದುವರಿದಿದ್ದು, ನಗರದ ಹಲವು ಭಾಗಗಳಲ್ಲಿ ಉತ್ತಮ ವರ್ಷಧಾರೆ ದಾಖಲಾಗಿದೆ. ಬಸವನಗುಡಿ, ಶಾಂತಿನಗರ, ಟೌನ್‌ಹಾಲ್, ಮೆಜೆಸ್ಟಿಕ್, ಜಯನಗರ, ಮಲ್ಲೇಶ್ವರಂ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಗಾಳಿ ಸಹಿತ ಮಳೆಯಾಗಿದೆ.

ಮಳೆಯ ಪರಿಣಾಮ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಪರದಾಡುವಂತಾಯಿತು. ಹಲವು ಮಂದಿ ಬಸ್ ನಿಲ್ದಾಣಗಳು, ಅಂಗಡಿ ಮುಂಗಟ್ಟುಗಳು ಹಾಗೂ ಮೇಲ್ಛಾವಣಿ ಇರುವ ಸ್ಥಳಗಳಲ್ಲಿ ಆಶ್ರಯ ಪಡೆದು ಮಳೆ ಕಡಿಮೆಯಾಗುವವರೆಗೆ ಕಾಯುವ ಪರಿಸ್ಥಿತಿ ನಿರ್ಮಾಣವಾಯಿತು.

ಇದೇ ವೇಳೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚುವ ಸಾಧ್ಯತೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ನಾಳೆ ಅರ್ಧ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯ ಬೈಂದೂರಿನ ಕೆರ್ಗಾಳು ಪ್ರದೇಶದಲ್ಲಿ 160.5 ಮಿ.ಮೀ. ಮಳೆಯಾಗಿದ್ದು, ರಾಜ್ಯದಲ್ಲೇ ಅತಿ ಹೆಚ್ಚು ಮಳೆ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ-1ನಲ್ಲಿ 155 ಮಿ.ಮೀ., ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ 98.5 ಮಿ.ಮೀ. ಮಳೆಯಾಗಿದೆ.

ಇದಲ್ಲದೆ, ಮಡಿಕೇರಿಯ ಪೆರಾಜೆ ಹಾಗೂ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾಲಗತ್ತಿಯಲ್ಲಿ ತಲಾ 64.5 ಮಿ.ಮೀ., ರಾಯಚೂರಿನ ಪೂರ್ತಿಪ್ಲಿಯಲ್ಲಿ 59 ಮಿ.ಮೀ., ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ದೊಡ್ಮನೆಯಲ್ಲಿ 57.5 ಮಿ.ಮೀ. ಹಾಗೂ ಬೆಳಗಾವಿ ಜಿಲ್ಲೆಯ ಬೆಳವಟ್ಟಿಯಲ್ಲಿ 56 ಮಿ.ಮೀ. ಮಳೆ ದಾಖಲಾಗಿದೆ.

ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಎಚ್ಚರಿಕೆ ವಹಿಸುವಂತೆ ಹಾಗೂ ಮಳೆಯ ಸಮಯದಲ್ಲಿ ಅನಗತ್ಯ ಸಂಚಾರವನ್ನು ಸಾಧ್ಯವಾದಷ್ಟು ತಪ್ಪಿಸುವಂತೆ ಸೂಚಿಸಲಾಗಿದೆ.