Home Blog

“ಅಂಬೇಡ್ಕರ್ ಸರ್ಕಲ್‌ಗೆ 50 ಲಕ್ಷ ಅನುದಾನ ಎಲ್ಲಿದೆ?”: ದಲಿತ ಸಂಘಟನೆಗಳ ಆಕ್ರೋಶ

ಹಗರಿಬೊಮ್ಮನಹಳ್ಳಿ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಲ್ ನಿರ್ಮಾಣ ವಿಚಾರ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ದಲಿತ ಸಂಘಟನೆಗಳು ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. ಹಲವು ವರ್ಷಗಳಿಂದ ಅಂಬೇಡ್ಕರ್ ಸರ್ಕಲ್ ನಿರ್ಮಾಣಕ್ಕೆ ಆಗ್ರಹಿಸುತ್ತಿದ್ದ ಸಂಘಟನೆಗಳು, ಅಂಬೇಡ್ಕರ್ ಜಯಂತಿಗೆ ಎರಡು ವಾರಗಳ ಮುಂಚಿತವಾಗಿ ನಡೆದ ಭೂಮಿ ಪೂಜೆಯನ್ನು “ರಾಜಕೀಯ ಗಿಮಿಕ್” ಎಂದು ಆರೋಪಿಸಿವೆ.

ಪಟ್ಟಣದ ರಾಮನಗರ ಪೊಲೀಸ್ ಠಾಣೆ ಸಮೀಪದಲ್ಲಿ ನಿರ್ಮಾಣವಾಗಲಿರುವ ಅಂಬೇಡ್ಕರ್ ಸರ್ಕಲ್‌ಗೆ 50 ಲಕ್ಷ ರೂ. ಅನುದಾನ ಮಂಜೂರಾಗಿದೆ ಎಂದು ಹೇಳಿ ಹಾಲಿ ಶಾಸಕ ಕೆ. ನೇಮಿರಾಜ್ ನಾಯ್ಕ್ ಭೂಮಿ ಪೂಜೆ ನೆರವೇರಿಸಿದ್ದರು. ಆದರೆ, “ನಿಜವಾಗಿಯೂ 50 ಲಕ್ಷ ರೂ. ಅನುದಾನ ಮಂಜೂರಾಗಿದೆಯೇ?, ಯಾವ ಇಲಾಖೆಯಡಿ ಕಾಮಗಾರಿ ನಡೆಯುತ್ತಿದೆ?, ಟೆಂಡರ್ ಪ್ರಕ್ರಿಯೆ ನಡೆದಿದೆಯೇ?, ಟೆಂಡರ್ ಪ್ರತಿಯನ್ನು ಕೇಳಿದಾಗ ಯಾಕೆ ನೀಡಲಾಗುತ್ತಿಲ್ಲ?, ಕಾಮಗಾರಿ ಸ್ಥಳದಲ್ಲಿ ಇಲಾಖೆಯ ನಾಮಫಲಕ ಯಾಕಿಲ್ಲ?” ಎಂದು ದಲಿತ ಸಂಘಟನೆಗಳು ಪ್ರಶ್ನೆಗಳ ಸುರಿಮಳೆಗೈದಿವೆ.

ಇದೇ ವೇಳೆ, “20 ವರ್ಷಗಳ ಕಾಲ ಎಸ್‌ಸಿ ಮೀಸಲು ಕ್ಷೇತ್ರದಿಂದ ರಾಜಕೀಯ ಲಾಭ ಪಡೆದು ಅಧಿಕಾರ ಅನುಭವಿಸಿದವರು, ಅಂಬೇಡ್ಕರ್ ಅವರ ಹೆಸರಿನ ಸರ್ಕಲ್ ನಿರ್ಮಾಣಕ್ಕೆ ಇಷ್ಟು ವರ್ಷ ಯಾಕೆ ಕಾಯಬೇಕಾಯಿತು?” ಎಂದು ಸಾರ್ವಜನಿಕ ವಲಯದಲ್ಲೂ ಚರ್ಚೆ ಜೋರಾಗಿದೆ.

ಪ್ರತಿಭಟನಾಕಾರರು ಮಾತನಾಡಿ, “ಅಂಬೇಡ್ಕರ್ ಅವರ ಹೆಸರನ್ನು ರಾಜಕೀಯ ಲಾಭಕ್ಕಾಗಿ ಬಳಸಬಾರದು. ಅದು ದಲಿತ ಸಮುದಾಯದ ಆತ್ಮಗೌರವದ ಸಂಕೇತ. ಅಂಬೇಡ್ಕರ್ ಸಂವಿಧಾನದ ಆಶಯಗಳನ್ನು ಮಾತಿನಲ್ಲಿ ಮಾತ್ರ ಹೊಗಳದೇ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಕಾರ್ಯರೂಪಕ್ಕೆ ತರುವುದೇ ಅವರಿಗೆ ಸಲ್ಲುವ ನಿಜವಾದ ಗೌರವ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಪ್ರತಿಭಟನೆಯಲ್ಲಿ ವಿವಿಧ ದಲಿತ ಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ತಾಲೂಕು ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಎಸ್‌ಸಿ ಘಟಕದ ಪದಾಧಿಕಾರಿಗಳು ಹಾಗೂ ಡಿಎಸ್‌ಎಸ್ ತಾಲೂಕು ಅಧ್ಯಕ್ಷ ಪರಶುರಾಮ್ ಹೆಗ್ಡಳ್ ಸೇರಿದಂತೆ ಮರಿಯಪ್ಪ ದಸಮಾಪುರ, ರಾಮೇಶ್ ಚಿಂತ್ರಪಳ್ಳಿ, ಬಾಸವರಾಜ್ ಕಾಳಿ, ಪಕ್ಕೀರಪ್ಪ ಕಡ್ಲಬಾಳು, ಕೊಟೆಪ್ಪ ದೂಪದಹಳ್ಳಿ, ನಾಗರಾಜ್ ಕಲ್ಲಹಳ್ಳಿ, ಮೈಲಪ್ಪ ಕೋಗಳಿ, ರಾಮೇಶ್ ಪೂಜಾರ್, ಬಸವರಾಜ್ ಕೆಚ್ಚಿನಬಂಡಿ, ಗೋಣೆಪ್ಪ ಕೆಚ್ಚಿನಬಂಡಿ ಮತ್ತಿತರರು ಉಪಸ್ಥಿತರಿದ್ದರು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: RCC ಕೋಚಿಂಗ್ ಸೆಂಟರ್ ಮಾಲೀಕ ಅರೆಸ್ಟ್!

ಮುಂಬೈ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಲಾತೂರ್‌ನ ಖಾಸಗಿ ಕೋಚಿಂಗ್ ಸಂಸ್ಥೆಯ ಸಂಸ್ಥಾಪಕ ಶಿವರಾಜ್ ರಘುನಾಥ್ ಮೋಟೆಗಾಂವ್ಕರ್‌ನನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ.

ಲಾತೂರ್‌ನಲ್ಲಿರುವ ರೇಣುಕೈ ರಸಾಯನಶಾಸ್ತ್ರ ತರಗತಿಗಳ ಸಂಸ್ಥಾಪಕರಾದ ಶಿವರಾಜ್ ಮೋಟೆಗಾಂವ್ಕರ್ ನಿವಾಸ ಮತ್ತು ಕಚೇರಿಗಳ ಮೇಲೆ ಸಿಬಿಐ ಭಾನುವಾರ ದಾಳಿ ನಡೆಸಿತ್ತು. ಶೋಧ ಕಾರ್ಯಾಚರಣೆ ವೇಳೆ ಅವರ ಮೊಬೈಲ್‌ನಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದ ಮಹತ್ವದ ಮಾಹಿತಿ ಪತ್ತೆಯಾದ ಹಿನ್ನೆಲೆ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಬಿಐ ಪ್ರಕಾರ, ಮೋಟೆಗಾಂವ್ಕರ್ ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪ್ರಸರಣದಲ್ಲಿ ತೊಡಗಿದ್ದ ಸಂಘಟಿತ ಜಾಲದ ಸಕ್ರಿಯ ಸದಸ್ಯನಾಗಿದ್ದಾನೆ. ಇತರ ಆರೋಪಿಗಳೊಂದಿಗೆ ಸೇರಿ 2026ರ ನೀಟ್-ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಮತ್ತು ಉತ್ತರಗಳನ್ನು ಏಪ್ರಿಲ್ 23ರಂದು ಪರೀಕ್ಷೆಗೆ ಮುನ್ನವೇ ಪಡೆದು ಹಲವು ಮಂದಿಗೆ ಹಂಚಿಕೆ ಮಾಡಿರುವ ಆರೋಪ ಕೇಳಿಬಂದಿದೆ.

ಶಿವರಾಜ್ ರಘುನಾಥ್ ನಡೆಸುತ್ತಿದ್ದ ತರಬೇತಿ ಕೇಂದ್ರವು ಲಾತೂರ್‌ನ ಮುಖ್ಯ ಶಾಖೆಯೊಂದಿಗೆ ಒಟ್ಟು ಒಂಬತ್ತು ಶಾಖೆಗಳನ್ನು ಹೊಂದಿದೆ ಎಂದು ತಿಳಿದುಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಈಗಾಗಲೇ ಎಫ್‌ಐಆರ್ ದಾಖಲಿಸಿಕೊಂಡಿದ್ದು, ತನಿಖೆಗಾಗಿ ವಿಶೇಷ ತಂಡಗಳನ್ನು ರಚಿಸಿದೆ. ಪ್ರಕರಣದಲ್ಲಿ ಇದುವರೆಗೆ ದೆಹಲಿ, ಜೈಪುರ, ಗುರುಗ್ರಾಮ್, ನಾಸಿಕ್, ಪುಣೆ, ಲಾತೂರ್ ಹಾಗೂ ಅಹಲ್ಯಾನಗರ ಸೇರಿದಂತೆ ವಿವಿಧ ನಗರಗಳಿಂದ ಒಟ್ಟು 10 ಮಂದಿಯನ್ನು ಬಂಧಿಸಲಾಗಿದೆ.

ಶಿವರಾಜ್ ಬಂಧನಕ್ಕೂ ಮುನ್ನ ರಸಾಯನಶಾಸ್ತ್ರ ಉಪನ್ಯಾಸಕ ಪಿ.ವಿ. ಕುಲಕರ್ಣಿ ಹಾಗೂ ಜೀವಶಾಸ್ತ್ರ ಉಪನ್ಯಾಸಕಿ ಮನೀಶಾ ಮಾಂಧರೆ ಅವರನ್ನು ಕೂಡ ಸಿಬಿಐ ಬಂಧಿಸಿತ್ತು. ಈ ಇಬ್ಬರೂ ಮನೀಶಾ ವಾಘ್ಮಾರೆ ಎಂಬ ಮಹಿಳೆಯ ಮೂಲಕ ಪರಸ್ಪರ ಸಂಪರ್ಕದಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮನೀಶಾ ವಾಘ್ಮಾರೆ ಕೂಡ ಸಿಬಿಐ ವಶದಲ್ಲಿದ್ದಾರೆ.

“‘ಖುಷಿಯಾಗಿ ಬದುಕಿದ್ರೆ ದೇವರ ಕಣ್ಣು ಬೀಳುತ್ತೆ’ – ದಿಲೀಪ್ ರಾಜ್ ಪತ್ನಿ ಶ್ರೀವಿದ್ಯಾ ಭಾವುಕ

ಬೆಂಗಳೂರು: ದಿವಂಗತ ನಟ ದಿಲೀಪ್ ರಾಜ್ ಅಗಲಿಕೆಯ ನೋವು ಅವರ ಕುಟುಂಬವನ್ನು ಇನ್ನೂ ಕಾಡುತ್ತಿದೆ. ಪತಿಯ ನೆನಪಿನಲ್ಲಿ ದಿನ ಕಳೆಯುತ್ತಿರುವ ಪತ್ನಿ ಶ್ರೀವಿದ್ಯಾ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮತ್ತೊಂದು ಭಾವನಾತ್ಮಕ ಪೋಸ್ಟ್ ವೈರಲ್ ಆಗಿದೆ.

25 ವರ್ಷಗಳ ಕಾಲ ಜೊತೆಯಾಗಿ ಬದುಕಿದ್ದ ದಿಲೀಪ್ ರಾಜ್ ಮತ್ತು ಶ್ರೀವಿದ್ಯಾ ದಂಪತಿ ಕಿರುತೆರೆ ಲೋಕದ ಆದರ್ಶ ಜೋಡಿಯಾಗಿದ್ದರು. ಪತಿಯ ಅಗಲಿಕೆಯ ಬಳಿಕ ಒಂದರ ಹಿಂದೆ ಒಂದರಂತೆ ಭಾವನಾತ್ಮಕ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿರುವ ಶ್ರೀವಿದ್ಯಾ, ಈ ಬಾರಿ ತಮ್ಮ ಮನದಾಳದ ನೋವನ್ನು ದೇವರನ್ನೇ ಪ್ರಶ್ನಿಸುವ ರೀತಿಯಲ್ಲಿ ಹೊರಹಾಕಿದ್ದಾರೆ.

“ಒಂದು ಮನೆಯಲ್ಲಿ ಶಾಂತಿ, ನೆಮ್ಮದಿ, ಪ್ರೀತಿ ಇರಬಾರದು. ಒಬ್ಬರು ಒಬ್ಬರು ಕಿತ್ತಾಡ್ಕೊಂಡೇ ಇರಬೇಕು. ಯಾಕೆಂದರೆ ದೇವರಿದ್ದಾನೆ. ಯಾರ ಮನೆಯಲ್ಲಿ ಯಾವಾಗಲೂ ನಗು ಇರುತ್ತದೋ, ಯಾರು ಖುಷಿಯಾಗಿ ಬದುಕುತ್ತಿರ್ತಾರೋ ಅಂಥವರ ಮನೆಯ ಮೇಲೆ ಅವನಿಗೆ ಕಣ್ಣು ಇರುತ್ತದೆ” ಎಂದು ಅವರು ಬರೆದಿದ್ದಾರೆ.

ಈ ಪೋಸ್ಟ್ ನೋಡಿದ ಅಭಿಮಾನಿಗಳು ಭಾವುಕರಾಗಿದ್ದು, ಶ್ರೀವಿದ್ಯಾಗೆ ಸಾಂತ್ವನ ಹೇಳುತ್ತಿದ್ದಾರೆ. ಕೆಲವರು “ದಿಲೀಪ್ ರಾಜ್ ಅವರನ್ನು ಯಾರೂ ಮರೆತೇ ಮರೆತಾರೆ” ಎಂದು ಕಾಮೆಂಟ್ ಮಾಡುತ್ತಿದ್ದಾರೆ.

ಇದೇ ವೇಳೆ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯ ದಿಲೀಪ್ ರಾಜ್ ಅಭಿನಯದ ವಿಡಿಯೋ ಹಂಚಿಕೊಂಡಿರುವ ಶ್ರೀವಿದ್ಯಾ, ಪತಿಯ ಮೇಲಿನ ಪ್ರೀತಿಯನ್ನು ಮತ್ತೊಮ್ಮೆ ವ್ಯಕ್ತಪಡಿಸಿದ್ದಾರೆ. ದಿಲೀಪ್ ರಾಜ್ ಅವರ ನಗು ಮತ್ತು ಸ್ಕ್ರೀನ್ ಪ್ರೆಸೆನ್ಸ್ ನೋಡಿ ಅಭಿಮಾನಿಗಳು ಮತ್ತೆ ಕಣ್ಣೀರಾಗಿದ್ದಾರೆ.

ರಷ್ಯಾ ತೈಲ ಖರೀದಿ ನಿರ್ಬಂಧಕ್ಕೆ ತಾತ್ಕಾಲಿಕ ರಿಲೀಫ್: ಮತ್ತೊಂದು ತಿಂಗಳು ಅವಕಾಶ

ಅಮೆರಿಕ: ರಷ್ಯಾದ ತೈಲ ಖರೀದಿಗೆ ವಿಧಿಸಲಾಗಿದ್ದ ನಿರ್ಬಂಧಗಳ ಮೇಲಿನ ವಿನಾಯಿತಿಯನ್ನು ಅಮೆರಿಕ ಮತ್ತೊಂದು ತಿಂಗಳ ಕಾಲ ವಿಸ್ತರಿಸಿದೆ. ಸಮುದ್ರದಲ್ಲಿ ಈಗಾಗಲೇ ಸಾಗಣೆಯಲ್ಲಿರುವ ರಷ್ಯಾ ತೈಲಕ್ಕೆ ಈ ವಿನಾಯಿತಿ ಅನ್ವಯವಾಗಲಿದೆ ಎಂದು ಅಮೆರಿಕದ ಖಜಾನೆ ಇಲಾಖೆ ತಿಳಿಸಿದೆ.

ಅಮೆರಿಕ ಖಜಾನೆ ಇಲಾಖೆಯ ವಿದೇಶಿ ಆಸ್ತಿ ನಿಯಂತ್ರಣ ಕಚೇರಿ (OFAC) ಹೊರಡಿಸಿರುವ ಆದೇಶದ ಪ್ರಕಾರ, ಏಪ್ರಿಲ್ 17 ಅಥವಾ ಅದಕ್ಕೂ ಮೊದಲು ಸಮುದ್ರ ಮಾರ್ಗದಲ್ಲಿ ಸಾಗಣೆಯಲ್ಲಿರುವ ರಷ್ಯಾ ತೈಲದ ಮೇಲಿನ ನಿರ್ಬಂಧ ವಿನಾಯಿತಿಯನ್ನು ಜೂನ್ 17ರವರೆಗೆ ವಿಸ್ತರಿಸಲಾಗಿದೆ.

ಈ ಹಿಂದೆ ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಏಪ್ರಿಲ್ 17ರಿಂದ ಮೇ 16ರವರೆಗೆ ಒಂದು ತಿಂಗಳ ಕಾಲ ಭಾರತ ಸೇರಿದಂತೆ ಹಲವು ದೇಶಗಳಿಗೆ ರಷ್ಯಾ ತೈಲ ಖರೀದಿಗೆ ಅಮೆರಿಕ ವಿನಾಯಿತಿ ನೀಡಿತ್ತು. ಇದೀಗ ತೈಲ ಬಿಕ್ಕಟ್ಟು ಮುಂದುವರಿದಿರುವ ಹಿನ್ನೆಲೆ ಮತ್ತೆ ಅವಧಿ ವಿಸ್ತರಣೆ ಮಾಡಲಾಗಿದೆ.

ಇದಕ್ಕೂ ಮೊದಲು ಮಾರ್ಚ್ 5ರಿಂದ ಆರಂಭವಾಗುವಂತೆ ಒಂದು ತಿಂಗಳ ಕಾಲ ಭಾರತಕ್ಕೆ ರಷ್ಯಾ ತೈಲ ಖರೀದಿಯಲ್ಲಿ ನಿರ್ಬಂಧ ಸಡಿಲಿಕೆ ನೀಡಲಾಗಿತ್ತು. ಬಳಿಕ ಇದೇ ಮಾದರಿಯ ವಿನಾಯಿತಿಯನ್ನು ಹಲವು ಇತರ ರಾಷ್ಟ್ರಗಳಿಗೂ ವಿಸ್ತರಿಸಲಾಗಿತ್ತು.

ಪಶ್ಚಿಮ ಏಷ್ಯಾದಲ್ಲಿ ಇಸ್ರೇಲ್, ಇರಾನ್ ಹಾಗೂ ಅಮೆರಿಕ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ನಿರ್ಮಾಣವಾಗಿದೆ. ವಿಶೇಷವಾಗಿ ಹಾರ್ಮುಜ್ ಜಲಮಾರ್ಗದ ಮೇಲೆ ಇರಾನ್ ಪ್ರಭಾವ ಹೆಚ್ಚಿರುವುದರಿಂದ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ವರದಿಯಾಗಿದೆ.

ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಸ್ಥಿರತೆ ಕಾಪಾಡುವ ಉದ್ದೇಶದಿಂದ ಈ ತಾತ್ಕಾಲಿಕ ಕ್ರಮ ಕೈಗೊಳ್ಳಲಾಗಿದೆ ಎಂದು ಅಮೆರಿಕ ಸ್ಪಷ್ಟಪಡಿಸಿದೆ. ಸಾಗಣೆಯಲ್ಲಿರುವ ರಷ್ಯಾ ತೈಲವನ್ನು ಇತರ ರಾಷ್ಟ್ರಗಳು ಖರೀದಿಸಲು ಅವಕಾಶ ನೀಡುವುದರಿಂದ ಜಾಗತಿಕ ಪೂರೈಕೆ ಸ್ಥಿರವಾಗಲಿದೆ ಎಂದು ತಿಳಿಸಿದೆ.

ಇದು ಕೇವಲ ಅಲ್ಪಾವಧಿಯ ಕ್ರಮವಾಗಿದ್ದು, ಸಮುದ್ರದಲ್ಲಿ ಸಾಗಣೆಯಲ್ಲಿರುವ ತೈಲಕ್ಕೆ ಮಾತ್ರ ಅನ್ವಯಿಸುತ್ತದೆ. ಇದರಿಂದ ರಷ್ಯಾ ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಲಾಭವಾಗುವುದಿಲ್ಲ ಎಂದು ಅಮೆರಿಕ ಹೇಳಿದೆ.

ಜೈಲಿನಲ್ಲೇ ದರ್ಶನ್, ಹೊರಗೆ ವಿಜಯಲಕ್ಷ್ಮೀ ಭಾವನಾತ್ಮಕ ಪೋಸ್ಟ್! ವೈರಲ್ ಆಯ್ತು ಮದುವೆ ಕಾರ್ಡ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ವಿಜಯಲಕ್ಷ್ಮೀ ದಂಪತಿ ಇಂದು ತಮ್ಮ 23ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದು, ಈ ಬಾರಿ ಸಂಭ್ರಮದ ಬದಲು ಭಾವುಕ ಕ್ಷಣಗಳು ಹೆಚ್ಚಾಗಿ ಕಾಣಿಸಿಕೊಂಡಿವೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿರುವ ಹಿನ್ನೆಲೆ, ಈ ವರ್ಷದ ವೆಡ್ಡಿಂಗ್ ಆ್ಯನಿವರ್ಸರಿ ದಂಪತಿಗೆ ದೂರದಲ್ಲೇ ಕಳೆಯುವಂತಾಗಿದೆ.

ಈ ವಿಶೇಷ ದಿನದಂದು ವಿಜಯಲಕ್ಷ್ಮೀ ಅವರು ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಫೋಟೋ ಹಂಚಿಕೊಂಡಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಇದೇ ವೇಳೆ ದರ್ಶನ್-ವಿಜಯಲಕ್ಷ್ಮೀ ಮದುವೆಯ ಹಳೆಯ ಆಮಂತ್ರಣ ಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

2003ರ ಮೇ 19ರಂದು ಧರ್ಮಸ್ಥಳದ ವಸಂತ ಮಹಲ್‌ನಲ್ಲಿ ಬೆಳಿಗ್ಗೆ 9:10 ರಿಂದ 9:50ರ ಮಿಥುನ ಲಗ್ನದಲ್ಲಿ ದರ್ಶನ್ ಮತ್ತು ವಿಜಯಲಕ್ಷ್ಮೀ ಸರಳವಾಗಿ ವಿವಾಹವಾಗಿದ್ದರು. ಯಾವುದೇ ಆಡಂಬರವಿಲ್ಲದೆ ನಡೆದಿದ್ದ ಈ ಮದುವೆಯಲ್ಲಿ ಕುಟುಂಬಸ್ಥರು ಹಾಗೂ ಆಪ್ತರು ಮಾತ್ರ ಭಾಗಿಯಾಗಿದ್ದರು. ಕೆಮಿಕಲ್ ಇಂಜಿನಿಯರಿಂಗ್ ಪದವೀಧರೆಯಾಗಿರುವ ವಿಜಯಲಕ್ಷ್ಮೀ ಹಾಗೂ ನಟ ದರ್ಶನ್ ನಡುವೆ ಪ್ರೀತಿ ಬೆಳೆದು ನಂತರ ಹಿರಿಯರ ಸಮ್ಮುಖದಲ್ಲಿ ಮದುವೆ ನಡೆದಿತ್ತು.

ಈ ದಂಪತಿಗೆ ವಿನೀಶ್ ಹೆಸರಿನ ಮಗನಿದ್ದಾನೆ. ದಾಂಪತ್ಯ ಜೀವನದಲ್ಲಿ ಸಾಕಷ್ಟು ಏರುಪೇರುಗಳನ್ನು ಎದುರಿಸಿದ್ದರೂ, ವಿಜಯಲಕ್ಷ್ಮೀ ಯಾವಾಗಲೂ ದರ್ಶನ್ ಪರ ನಿಂತಿದ್ದಾರೆ. ದರ್ಶನ್ ಕಾನೂನು ಹೋರಾಟದಲ್ಲೂ ಅವರು ಪ್ರಮುಖ ಬೆಂಬಲವಾಗಿದ್ದರು.

ಇತ್ತೀಚೆಗಷ್ಟೇ ಸುಪ್ರೀಂಕೋರ್ಟ್ ದರ್ಶನ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ಇನ್ನೂ ಒಂದು ವರ್ಷಗಳ ಕಾಲ ಜೈಲು ವಾಸ ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ ಈ ಬಾರಿ ದಂಪತಿ ಒಟ್ಟಿಗೆ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವ ಅವಕಾಶ ಕೈ ತಪ್ಪಿದೆ.

ನಾಳೆಯ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್​​: ಮುಷ್ಕರ ನಡೆಸದಂತೆ ಆದೇಶ

ಬೆಂಗಳೂರು: ಮೇ 20ರಂದು ರಾಜ್ಯವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದ ಸಾರಿಗೆ ನೌಕರರ ಸಂಘಟನೆಗಳಿಗೆ ಕರ್ನಾಟಕ ಹೈಕೋರ್ಟ್ ತೀವ್ರ ಹಿನ್ನಡೆ ಉಂಟುಮಾಡಿದೆ. ಸಾರಿಗೆ ನೌಕರರು ಮುಷ್ಕರ ನಡೆಸದಂತೆ ಹೈಕೋರ್ಟ್ ತಾತ್ಕಾಲಿಕ ನಿರ್ಬಂಧ ವಿಧಿಸಿ ಮಹತ್ವದ ಆದೇಶ ಹೊರಡಿಸಿದೆ.

ನ್ಯಾ. ಸೂರಜ್ ಗೋವಿಂದರಾಜ್ ಹಾಗೂ ನ್ಯಾ. ಕೆ. ಮನ್ಮಥರಾವ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದ್ದು, ಸರ್ಕಾರ ಹಾಗೂ ಸಾರಿಗೆ ಸಂಘಟನೆಗಳು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಸೂಚಿಸಿದೆ.

ಇದೇ ವೇಳೆ ಸರ್ಕಾರ ಮತ್ತು ಸಾರಿಗೆ ಸಂಘಟನೆಗಳಿಗೆ ನೋಟಿಸ್ ಜಾರಿ ಮಾಡಿರುವ ನ್ಯಾಯಾಲಯ, ಸಾರಿಗೆ ಸಚಿವರೊಂದಿಗೆ ತುರ್ತು ಸಭೆ ನಡೆಸಿ ಸಮಸ್ಯೆ ಪರಿಹರಿಸುವಂತೆ ನಿರ್ದೇಶನ ನೀಡಿದೆ.

ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಕೆಲಸದ ಮಹಿಳೆ ಹಾಗೂ ಕಟ್ಟಡ ಕಾರ್ಮಿಕರೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಅರ್ಜಿದಾರರ ಕುರಿತು ಅಚ್ಚರಿ ವ್ಯಕ್ತಪಡಿಸಿದರೂ, ಸಾರ್ವಜನಿಕ ಹಿತದೃಷ್ಟಿಯಿಂದ ವಿಚಾರಣೆ ಕೈಗೆತ್ತಿಕೊಂಡಿತು.

ನ್ಯಾಯಾಲಯದ ಮುಂದೆ ಮಂಡನೆಯಾದ ಮಾಹಿತಿಯ ಪ್ರಕಾರ, ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (KESMA) ಅಡಿ ಜನವರಿ 1ರಿಂದ ಜೂನ್ 30ರವರೆಗೆ ಮುಷ್ಕರಕ್ಕೆ ನಿರ್ಬಂಧವಿದೆ. ಜೊತೆಗೆ 2025ರ ಜುಲೈ 18ರಂದು ಆರಂಭವಾದ ಕಾರ್ಮಿಕ ಆಯುಕ್ತರ ರಾಜಿ ಸಂಧಾನ ಪ್ರಕ್ರಿಯೆ ಇನ್ನೂ ಮುಂದುವರಿದಿದ್ದು, ಮುಂದಿನ ವಿಚಾರಣೆಯನ್ನು ಮೇ 25ಕ್ಕೆ ನಿಗದಿಪಡಿಸಲಾಗಿದೆ.

ಈ ಸಂದರ್ಭದಲ್ಲಿ ಮುಷ್ಕರ ನಡೆಸುವುದು ಕಾನೂನುಬಾಹಿರವಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಅಲ್ಲದೆ, ನಿಯಮಾನುಸಾರ 14 ದಿನಗಳ ನೋಟಿಸ್ ನೀಡಬೇಕಾದರೆ, ಕೇವಲ 7 ದಿನಗಳ ನೋಟಿಸ್ ನೀಡಲಾಗಿದೆ ಎಂಬುದನ್ನೂ ಗಮನಿಸಿದೆ.

ಮೇ 20ರಂದು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳೂ ನಿಗದಿಯಾಗಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಮುಷ್ಕರ ತಡೆಯುವಂತೆ ಮನವಿ ಮಾಡಲಾಗಿತ್ತು.

ಇತ್ತ, ಬೆಂಗಳೂರಿನ ಬನ್ನೇರುಘಟ್ಟ ಕಾರ್ಮಿಕ ಭವನದಲ್ಲಿ ನಿನ್ನೆ ನಡೆದ ಸಂಧಾನ ಸಭೆ ವಿಫಲವಾಗಿತ್ತು. ಅಧಿಕಾರಿಗಳ ಮನವೊಲಿಕೆಗೆ ಸಾರಿಗೆ ನೌಕರರ ಮುಖಂಡರು ಒಪ್ಪದಿದ್ದು, ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಸಬೇಕೆಂದು ಪಟ್ಟು ಹಿಡಿದಿದ್ದರು.

ಇಂದು ಮಧ್ಯಾಹ್ನದೊಳಗೆ ಸಭೆ ನಡೆಸಿ ಬೇಡಿಕೆಗಳ ಕುರಿತು ಸ್ಪಷ್ಟ ಭರವಸೆ ನೀಡದಿದ್ದರೆ ಮುಷ್ಕರ ನಡೆಸುವುದು ಖಚಿತ ಎಂದು ಸಂಘಟನೆಗಳು ಎಚ್ಚರಿಕೆ ನೀಡಿದ್ದವು. ಆದರೆ ಇದೀಗ ಹೈಕೋರ್ಟ್ ಆದೇಶದಿಂದ ಮುಷ್ಕರಕ್ಕೆ ತಾತ್ಕಾಲಿಕ ತಡೆ ಬಿದ್ದಿದೆ.

ದುಬಾರೆ ದುರಂತದ ಬಳಿಕ ಕಠಿಣ ರೂಲ್ಸ್! ಇನ್ಮುಂದೆ ಆನೆಗಳಿಂದ 100 ಅಡಿ ದೂರ ಕಡ್ಡಾಯ

0

ಮಡಿಕೇರಿ: ದುಬಾರೆ ಆನೆ ಶಿಬಿರದಲ್ಲಿ ನಡೆದ ಪ್ರವಾಸಿ ಮಹಿಳೆಯ ದಾರುಣ ಸಾವಿನ ಬಳಿಕ ಕರ್ನಾಟಕ ಅರಣ್ಯ ಇಲಾಖೆ ದೊಡ್ಡ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ರಾಜ್ಯದ ಯಾವುದೇ ಸಾಕಾನೆ ಶಿಬಿರದಲ್ಲಿ ಪ್ರವಾಸಿಗರು ಆನೆಗಳ ಹತ್ತಿರ ಹೋಗಲು ಅವಕಾಶ ಇರುವುದಿಲ್ಲ. ಕನಿಷ್ಠ 100 ಅಡಿ ದೂರದಲ್ಲೇ ನಿಂತು ಆನೆಗಳ ಸ್ನಾನ ಹಾಗೂ ಚಟುವಟಿಕೆ ವೀಕ್ಷಿಸಬೇಕು ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.

ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಈ ಸಂಬಂಧ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರಾಜ್ಯದ ಎಲ್ಲ ಸಾಕಾನೆ ಶಿಬಿರಗಳಿಗೆ ಹೊಸ ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP) ಜಾರಿಗೆ ತರಲು ಆದೇಶಿಸಿದ್ದಾರೆ.

ದುಬಾರೆ ಶಿಬಿರದಲ್ಲಿ ಎರಡು ಆನೆಗಳ ಕಾದಾಟದ ವೇಳೆ ಪ್ರವಾಸಿಗ ಮಹಿಳೆ ಸಿಲುಕಿ ಸಾವನ್ನಪ್ಪಿದ ಘಟನೆ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆ ಆಗಿದೆ. ಇದೇ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ ಹೊಸ ನಿಯಮ ಜಾರಿಗೆ ತರಲಾಗುತ್ತಿದೆ.

ಹೊಸ ಮಾರ್ಗಸೂಚಿ ಪ್ರಕಾರ, ಪ್ರವಾಸಿಗರು ಆನೆಗಳೊಂದಿಗೆ ಫೋಟೋ ಅಥವಾ ಸೆಲ್ಫಿ ತೆಗೆದುಕೊಳ್ಳುವುದು ಸಂಪೂರ್ಣ ನಿಷೇಧ. ಆನೆ ಮೈತೊಳೆಯುವ ಸಂದರ್ಭ ಹತ್ತಿರ ಹೋಗಲು ಅವಕಾಶ ಇರುವುದಿಲ್ಲ. ಪ್ರವಾಸಿಗರ ಕೈಯಿಂದ ಬಾಳೆಹಣ್ಣು, ಬೆಲ್ಲ, ಕಬ್ಬು ಸೇರಿದಂತೆ ಯಾವುದೇ ಆಹಾರವನ್ನು ಆನೆಗಳಿಗೆ ನೀಡುವುದನ್ನೂ ನಿಷೇಧಿಸಲಾಗಿದೆ.

ಈಗಾಗಲೇ ಚಾರಣಪಥಗಳ ಸುರಕ್ಷತೆಗಾಗಿ ಎಸ್‌ಒಪಿ ರೂಪಿಸುವ ಕಾರ್ಯ ಆರಂಭವಾಗಿದ್ದು, ಅದೇ ಮಾದರಿಯಲ್ಲಿ ಸಾಕಾನೆ ಶಿಬಿರಗಳಲ್ಲೂ ಕಟ್ಟುನಿಟ್ಟಿನ ನಿಯಮ ಜಾರಿಗೆ ತರಲಾಗುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ನಾಳೆಯಿಂದಲೇ ಎಲ್ಲಾ ಶಿಬಿರಗಳಲ್ಲಿ ಹೊಸ ನಿಯಮಗಳನ್ನು ಅನುಷ್ಠಾನಗೊಳಿಸಲು ಸಿದ್ಧತೆ ಆರಂಭಿಸಿದ್ದಾರೆ.

ಪದೇ ಪದೇ ಹೊಟ್ಟೆ ನೋವು, ಗ್ಯಾಸ್ಟ್ರಿಕ್ ಸಮಸ್ಯೆ ಕಾಣಿಸುತ್ತಿದೆಯೇ? ನಿರ್ಲಕ್ಷ್ಯ ಬೇಡ!

ಇತ್ತೀಚಿನ ದಿನಗಳಲ್ಲಿ ಅನೇಕರು ಪದೇಪದೇ ಹೊಟ್ಟೆ ನೋವು, ಅಜೀರ್ಣ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹಲವರು ಇದನ್ನು ಸಾಮಾನ್ಯ ಸಮಸ್ಯೆ ಎಂದು ಭಾವಿಸಿ ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಆರೋಗ್ಯ ತಜ್ಞರ ಪ್ರಕಾರ, ಈ ರೀತಿಯ ಲಕ್ಷಣಗಳು ದೀರ್ಘಕಾಲ ಮುಂದುವರಿದರೆ ಅದು ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು.

ಲೇಡಿ ಹಾರ್ಡಿಂಗ್ ಮೆಡಿಕಲ್ ಕಾಲೇಜು ಮತ್ತು ಅಸೋಸಿಯೇಟೆಡ್ ಆಸ್ಪತ್ರೆಯ ಮೆಡಿಸಿನ್ ವಿಭಾಗದ ತಜ್ಞ ಡಾ. ಎಲ್.ಎಚ್. ಘೋಟೇಕರ್ ಅವರ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಅಸ್ವಸ್ಥ ಆಹಾರ ಪದ್ಧತಿಯೇ ಹೊಟ್ಟೆ ಸಮಸ್ಯೆಗಳು ಹೆಚ್ಚಾಗಲು ಪ್ರಮುಖ ಕಾರಣವಾಗಿದೆ.

ಯಾವ ಸಮಸ್ಯೆಗಳ ಸೂಚನೆಯಾಗಿರಬಹುದು?

ಮೈದಾ ಪದಾರ್ಥಗಳು, ಫಾಸ್ಟ್ ಫುಡ್ ಹಾಗೂ ಹೆಚ್ಚು ಎಣ್ಣೆಯ ಆಹಾರಗಳನ್ನು ನಿರಂತರವಾಗಿ ಸೇವಿಸುವುದರಿಂದ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀಳುತ್ತದೆ. ಇಂತಹ ಆಹಾರಗಳು ಸರಿಯಾಗಿ ಜೀರ್ಣವಾಗದೆ ಹೊಟ್ಟೆಯಲ್ಲಿ ಗ್ಯಾಸ್ಟ್ರಿಕ್, ಅಜೀರ್ಣ ಮತ್ತು ಉಬ್ಬರ ಸಮಸ್ಯೆ ಉಂಟುಮಾಡಬಹುದು.

ಕೆಲವರಿಗೆ ಹಾಲು, ಗ್ಲೂಟನ್ ಅಥವಾ ಕೆಲವು ಆಹಾರ ಪದಾರ್ಥಗಳು ಸರಿಯಾಗಿ ಜೀರ್ಣವಾಗದೆ ಹೊಟ್ಟೆ ಉಬ್ಬರ ಮತ್ತು ಸಣ್ಣ ಮಟ್ಟದ ನೋವು ಕಾಣಿಸಬಹುದು. ದೀರ್ಘಕಾಲ ಗ್ಯಾಸ್ಟ್ರಿಕ್, ಮಲಬದ್ಧತೆ ಅಥವಾ ಅಜೀರ್ಣ ಸಮಸ್ಯೆ ಮುಂದುವರಿದರೆ ಅದು ಐಬಿಎಸ್ (ಇರಿಟೇಬಲ್ ಬವಲ್ ಸಿಂಡ್ರೋಮ್) ಅಥವಾ ಅಂತರಾಯದ ಉರಿಯೂತದ ಲಕ್ಷಣವಾಗಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ಕೆಲ ಸಂದರ್ಭಗಳಲ್ಲಿ ಹೊಟ್ಟೆ ಸಮಸ್ಯೆಗಳು ಅಲ್ಸರ್ ಅಥವಾ ಕ್ಯಾನ್ಸರ್‌ನ ಆರಂಭಿಕ ಸೂಚನೆಯಾಗಿಯೂ ಕಾಣಿಸಬಹುದು. ಹೀಗಾಗಿ ಈ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡಬಾರದು ಎಂದು ತಜ್ಞರು ಎಚ್ಚರಿಸಿದ್ದಾರೆ.

ಈ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ

  • ಕಾರಣವಿಲ್ಲದೆ ತೂಕ ಇಳಿಕೆಯಾಗುವುದು
  • ಪದೇಪದೇ ವಾಂತಿ ಕಾಣಿಸಿಕೊಳ್ಳುವುದು
  • ಮಲದಲ್ಲಿ ರಕ್ತ ಕಾಣಿಸಿಕೊಳ್ಳುವುದು
  • ದೌರ್ಬಲ್ಯ ಮತ್ತು ಬೇಗ ದಣಿವಾಗುವುದು
  • ನಿರಂತರ ಹೊಟ್ಟೆನೋವು

ಈ ರೀತಿಯ ಲಕ್ಷಣಗಳು ಕಂಡುಬಂದರೆ ತಕ್ಷಣ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಹೊಟ್ಟೆಯ ಆರೋಗ್ಯ ಕಾಪಾಡಲು ಏನು ಮಾಡಬೇಕು?

ಫಾಸ್ಟ್ ಫುಡ್ ಮತ್ತು ಹೆಚ್ಚು ಎಣ್ಣೆಯಲ್ಲಿ ಕರಿದ ಆಹಾರಗಳ ಸೇವನೆಯನ್ನು ಕಡಿಮೆ ಮಾಡಬೇಕು. ದಿನಕ್ಕೆ ಕನಿಷ್ಠ ಏಳು ಗ್ಲಾಸ್ ನೀರು ಕುಡಿಯುವುದು ಉತ್ತಮ. ಹಸಿರು ತರಕಾರಿಗಳು, ಹಣ್ಣುಗಳು ಹಾಗೂ ಫೈಬರ್‌ಯುಕ್ತ ಆಹಾರ ಸೇವಿಸುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ.

ಇದರ ಜೊತೆಗೆ ಪ್ರತಿದಿನ ನಿಯಮಿತ ಸಮಯಕ್ಕೆ ಊಟ ಮಾಡುವುದು, ಒತ್ತಡ ಕಡಿಮೆ ಮಾಡಿಕೊಳ್ಳುವುದು ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಪಾಲಿಸುವುದರಿಂದ ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ತಪ್ಪಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ.

ದೇಶದ ಆರ್ಥಿಕ ಬಿಕ್ಕಟ್ಟು ನಿವಾರಣೆಗಾಗಿ ತಿಮ್ಮಪ್ಪನಿಗೆ ಪ್ರಾರ್ಥನೆ: ಡಿ.ಕೆ. ಶಿವಕುಮಾರ್

ತಿರುಮಲ: ದೇಶವು ಆರ್ಥಿಕ ಬಿಕ್ಕಟ್ಟಿನಿಂದ ಬಳಲಬಾರದು. ಎಲ್ಲರಿಗೂ ಶಕ್ತಿ, ಉತ್ತಮ ಆರೋಗ್ಯ ಲಭಿಸಲಿ. ರಾಜ್ಯದಲ್ಲಿ ಉತ್ತಮ ಮಳೆ ಬರಲಿ ಎಂದು ಭಗವಂತ ವೆಂಕಟೇಶ್ವರನ ಬಳಿ ಪ್ರಾರ್ಥಿಸಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಮಲದಲ್ಲಿ ಮಂಗಳವಾರ ಶ್ರೀ ವೆಂಕಟೇಶ್ವರ ಸ್ವಾಮೀಯ ದರ್ಶನ ಪಡೆದು, ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಇಡೀ ದೇಶ ಶಾಂತಿಯಿಂದ ಕೂಡಿರಲಿ. ಸವಾಲುಗಳನ್ನು ಸಮರ್ಥನೆವಾಗಿ ಎದುರಿಸಲಿ ಎಂದು ಕೋರಿಕೊಂಡಿದ್ದೇನೆ. ಈ ಮಹತ್ವದ ದಿನದಂದು ಇಲ್ಲಿಗೆ ಬಂದಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ಬಹಳ ಸಮಯದ ನಂತರ ಅಂದರೆ ಆರೇಳು ವರ್ಷಗಳ ನಂತರ ನಾನು ಇಲ್ಲಿಗೆ ಭೇಟಿ ನೀಡಿದ್ದೇನೆ.

ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ಬಹಳಷ್ಟು ಬದಲಾವಣೆಗಳನ್ನು, ಬಹಳಷ್ಟು ಅಭಿವೃದ್ಧಿಗಳನ್ನು ಮಾಡಿದೆ. ಶಿಸ್ತು, ಉತ್ತಮ ಶುಚಿತ್ವ ಕಾಪಾಡಿದೆ. ಉತ್ತಮ ಆಡಳಿತ ನಡೆಸುತ್ತಿದೆ. ಸರಕಾರ ಉತ್ತಮ ಕೆಲಸ ಮಾಡಿದೆ. ನಾನು ಎಲ್ಲರಿಗೂ ಧನ್ಯವಾದ ಹೇಳುತ್ತೇನೆ” ಎಂದರು.

“ಶ್ರೀ ವೆಂಕಟೇಶ್ವರನ ದರ್ಶನದಿಂದ ಸಂತಸವಾಗಿದೆ. ಟಿಟಿಡಿಯ ಅಧ್ಯಕ್ಷರು ಕೂಡ ತಮ್ಮ ತಂಡದೊಂದಿಗೆ ಉತ್ತಮ ಕೆಲಸ ಮಾಡುತ್ತಿದ್ದಾರೆ. ಇಲ್ಲಿನ ಕಂದಾಯ ಸಚಿವರನ್ನು ಭೇಟಿ ಮಾಡಿದೆ. ಅವರೂ ಇಲ್ಲಿ ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ನಾನು ಅವರೆಲ್ಲರಿಗೂ ಶುಭ ಹಾರೈಸುತ್ತೇನೆ” ಎಂದರು.

ಭಾರತದಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆ! ಬೆಂಗಳೂರಿನಲ್ಲಿ ಎಷ್ಟು? ಇಲ್ಲಿದೆ ಡೀಟೇಲ್ಸ್!

ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಸತತ ಇಳಿಕೆಯ ಬಳಿಕ ಮಂಗಳವಾರ ಗ್ರಾಮ್‌ಗೆ 75 ರೂ. ಹೆಚ್ಚಳವಾಗಿದ್ದು, ಕಳೆದ ಹತ್ತು ದಿನಗಳಲ್ಲಿ ಒಟ್ಟಾರೆ ಸುಮಾರು 430 ರೂ. ಏರಿಕೆಯಾಗಿದೆ ಎಂದು ಮಾರುಕಟ್ಟೆ ವರದಿಗಳು ತಿಳಿಸಿವೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವದಿಂದ ಭಾರತದಲ್ಲಿಯೂ ಚಿನ್ನದ ಬೆಲೆಯಲ್ಲಿ ಚಲನವಲನ ಮುಂದುವರಿದಿದೆ. ಇತ್ತ ಬೆಳ್ಳಿ ದರದಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದ್ದು, ನಿನ್ನೆ ಏರಿಕೆಯಾದ ಬಳಿಕ ಇವತ್ತು 100 ಗ್ರಾಮ್‌ಗೆ 5 ರೂ. ಕುಸಿತವಾಗಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,57,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,43,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,704 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,395 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,778 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,704 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,395 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ.
error: Content is protected !!