Home Blog

ಲಿವ್-ಇನ್ ಸಂಬಂಧಕ್ಕೆ ವಿರೋಧ; ಪ್ರಿಯಕರನ ಜೊತೆ ಸೇರಿ ಹೆತ್ತ ತಂದೆ-ತಾಯಿ, ತಂಗಿಯನ್ನೇ ಕೊಂದ ಮಗಳು!

0

ಬೆಂಗಳೂರು: ಲಿವ್-ಇನ್ ರಿಲೇಷನ್‌ಶಿಪ್‌ಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರಿಂದ ಆಕ್ರೋಶಗೊಂಡ ಯುವತಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಹೆತ್ತ ತಂದೆ, ತಾಯಿ ಹಾಗೂ ಸ್ವಂತ ತಂಗಿಯನ್ನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಭೀಕರ ಘಟನೆ ಬೆಂಗಳೂರು ನಗರದ ಕೆ.ಆರ್. ಪುರಂ ವ್ಯಾಪ್ತಿಯ ಸಿಗೇಹಳ್ಳಿಯಲ್ಲಿ ನಡೆದಿದೆ.

ಸೋಮಸುಂದರ್ (55), ಪತ್ನಿ ಮುತ್ತುಲಕ್ಷ್ಮಿ (48) ಹಾಗೂ ಕಿರಿಯ ಪುತ್ರಿ ಸುಪ್ರಿಯಾ (20) ಕೊಲೆಯಾದವರು. ಪ್ರಕರಣದ ಪ್ರಮುಖ ಆರೋಪಿಗಳಾದ ಹಿರಿಯ ಮಗಳು ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಘಟನೆ ಬಳಿಕ ಪರಾರಿಯಾಗಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಶ್ವೇತಾ ಮದುವೆಯಾಗದೆ ಕೆನತ್ ಜೊತೆ ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದಳು. ಮಗಳ ಈ ಸಂಬಂಧಕ್ಕೆ ಕುಟುಂಬ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದೇ ವಿಚಾರವಾಗಿ ಮಾತುಕತೆ ನಡೆಸಲು ಸೋಮಸುಂದರ್, ಪತ್ನಿ ಮತ್ತು ಕಿರಿಯ ಪುತ್ರಿಯೊಂದಿಗೆ ಸಿಗೇಹಳ್ಳಿಯ ಡಾಮ್ನಿಕ್ ಲೇಔಟ್‌ನಲ್ಲಿರುವ ಅಪಾರ್ಟ್‌ಮೆಂಟ್‌ಗೆ ತೆರಳಿದ್ದರು.

ಈ ವೇಳೆ ಕುಟುಂಬ ಸದಸ್ಯರು ಹಾಗೂ ಶ್ವೇತಾ-ಕೆನತ್ ನಡುವೆ ತೀವ್ರ ವಾಗ್ವಾದ ನಡೆದಿದೆ. ಮಾತಿನ ಚಕಮಕಿ ವಿಕೋಪಕ್ಕೆ ತಿರುಗುತ್ತಿದ್ದಂತೆ, ಇಬ್ಬರು ಆರೋಪಿಗಳು ಸೇರಿ ಮೂವರ ಮೇಲೂ ಚಾಕುವಿನಿಂದ ಮನಬಂದಂತೆ ದಾಳಿ ನಡೆಸಿದ್ದಾರೆ.

ದಾಳಿಯಲ್ಲಿ ಮುತ್ತುಲಕ್ಷ್ಮಿ ಮತ್ತು ಸುಪ್ರಿಯಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸೋಮಸುಂದರ್ ಮನೆ ಹೊರಗೆ ಬಂದು ಸಹಾಯಕ್ಕಾಗಿ ಕೂಗಿದ್ದಾರೆ. ಅಪಾರ್ಟ್‌ಮೆಂಟ್ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆದರೂ ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ.

ಸಾವಿಗೂ ಮುನ್ನ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ, “ಮಗಳು ಮತ್ತು ಆಕೆಯ ಪ್ರಿಯಕರ ನಮ್ಮ ಮೇಲೆ ದಾಳಿ ಮಾಡಿದ್ದಾರೆ” ಎಂದು ಸೋಮಸುಂದರ್ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಕೆ.ಆರ್. ಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಶ್ವೇತಾ ಮತ್ತು ಕೆನತ್ ಬಂಧನಕ್ಕಾಗಿ ವಿಶೇಷ ತಂಡ ರಚಿಸಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಬಿಳಿಗಿರಿ ರಂಗನಾಥ ದೇವಾಲಯದಲ್ಲಿ ಒಂಟಿ ಸಲಗ ದಾಂಧಲೆ; ಕಾರು, ಅಂಗಡಿಗೆ ಹಾನಿ!

ಚಾಮರಾಜನಗರ: ಯಳಂದೂರು ತಾಲೂಕಿನ ಬಿಳಿಗಿರಿ ರಂಗನಾಥಸ್ವಾಮಿ ಟೈಗರ್ ರಿಸರ್ವ್ ಅರಣ್ಯ ಪ್ರದೇಶದಲ್ಲಿರುವ ಪ್ರಸಿದ್ಧ ಬಿಳಿಗಿರಿರಂಗನಾಥ ದೇವಾಲಯ ಆವರಣದಲ್ಲಿ ಒಂಟಿ ಸಲಗವೊಂದು ದಾಂಧಲೆ ನಡೆಸಿದ ಘಟನೆ ನಡೆದಿದೆ.

ಇದುವರೆಗೆ ಅರಣ್ಯದ ಒಳಭಾಗದಲ್ಲಷ್ಟೇ ಕಾಣಿಸಿಕೊಳ್ಳುತ್ತಿದ್ದ ಕಾಡಾನೆಗಳು, ಇದೀಗ ದೇವಾಲಯದ ಗೋಪುರದ ಬಳಿ ನುಗ್ಗಿ ಹಾನಿ ಮಾಡಿರುವುದು ಭಕ್ತರು ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ರಾತ್ರಿ ಕರ್ತವ್ಯ ಮುಗಿಸಿ ಹೋಮ್ ಗಾರ್ಡ್ ರಂಗನಾಥ್ ತಮ್ಮ ಕಾರನ್ನು ದೇವಾಲಯದ ಆವರಣದಲ್ಲೇ ಪಾರ್ಕ್ ಮಾಡಿದ್ದರು. ಮುಂಜಾನೆ ನೋಡಿದಾಗ ಕಾಡಾನೆ ಕಾರಿನ ವೈಪರ್ ಕಿತ್ತುಹಾಕಿ, ದಂತದಿಂದ ತಿವಿದು ವಾಹನವನ್ನು ಜಖಂ ಮಾಡಿರುವುದು ಬೆಳಕಿಗೆ ಬಂದಿದೆ.

ಇದೇ ವೇಳೆ ಸಮೀಪದಲ್ಲಿದ್ದ ಒಂದು ಪೆಟ್ಟಿ ಅಂಗಡಿಯ ಶಟರ್‌ಗೂ ಆನೆ ಹಾನಿ ಮಾಡಿರುವುದು ವರದಿಯಾಗಿದೆ.

ಇತಿಹಾಸ ಪ್ರಸಿದ್ಧ ಬಿಳಿಗಿರಿರಂಗನಾಥ ಸ್ವಾಮಿ ದೇವಸ್ಥಾನದ ಆವರಣಕ್ಕೆ ಕಾಡಾನೆ ನುಗ್ಗಿರುವುದು ಭಕ್ತರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದು, ಅರಣ್ಯ ಇಲಾಖೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

 

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ ಪ್ರಕರಣ: ಮೂವರ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಅಶ್ಲೀಲ ಹಾಗೂ ಅವಹೇಳನಕಾರಿ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ ಆರೋಪ ಎದುರಿಸುತ್ತಿರುವ ಮೂವರು ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ.

ಪ್ರಶಾಂತ್ ತಲ್ವಾರ್, ಚಂದ್ರಶೇಖರ್ ಹಾಗೂ ನಿಂಗರಾಜ್ ಗುಲಾಪ್ಪ ತಲ್ವಾರ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಮಹಿಳೆಯರ ಘನತೆಗೆ ಧಕ್ಕೆ ತರುವಂತಹ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಕಠಿಣ ಅಭಿಪ್ರಾಯ ವ್ಯಕ್ತಪಡಿಸಿದೆ.

‘ಡೆವಿಲ್’ ಚಿತ್ರದ ಪ್ರಚಾರದ ಸಂದರ್ಭ ವಿಜಯಲಕ್ಷ್ಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ನಿಂದನಾತ್ಮಕ ಕಾಮೆಂಟ್‌ಗಳು ಹರಿದಾಡಿದ್ದವು. ಈ ಕುರಿತು ವಿಜಯಲಕ್ಷ್ಮಿ ನೀಡಿದ ದೂರಿನ ಆಧಾರದ ಮೇಲೆ ಸೈಬರ್ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು.

ವಿಚಾರಣೆ ವೇಳೆ ನ್ಯಾಯಾಲಯ, ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬ ಹೆಸರಿನಲ್ಲಿ ಯಾರೊಬ್ಬರ ಮಾನಹಾನಿ ಮಾಡುವ ಹಕ್ಕು ಯಾರಿಗೂ ಇಲ್ಲ ಎಂದು ಸ್ಪಷ್ಟಪಡಿಸಿದೆ. ಸಂವಿಧಾನ ನೀಡಿರುವ ಹಕ್ಕುಗಳಿಗೆ ಕಾನೂನುಬದ್ಧ ಮಿತಿಗಳಿದ್ದು, ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಮತ್ತು ಪೋಸ್ಟ್‌ಗಳು ಗಂಭೀರ ಅಪರಾಧವೆಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಈ ತೀರ್ಪು ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರ ವಿರುದ್ಧ ನಡೆಯುವ ಆನ್‌ಲೈನ್ ದೌರ್ಜನ್ಯಗಳ ವಿರುದ್ಧ ಕಠಿಣ ಸಂದೇಶವಾಗಿ ಪರಿಗಣಿಸಲಾಗುತ್ತಿದೆ.

ಜೂನ್ 24ರಂದು ಮುಂಡರಗಿ, ಡಂಬಳ, ಶಿಂಗಟಾಲೂರಲ್ಲಿ ವಿದ್ಯುತ್ ವ್ಯತ್ಯಯ

0

ವಿಜಯಸಾಕ್ಷಿ ಸುದ್ದಿ, ಗದಗ: 110 ಕೆ.ವಿ. ಮುಂಡರಗಿ, ಡಂಬಳ ಹಾಗೂ ಶಿಂಗಟಾಲೂರು ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 24ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

110 ಕೆ.ವಿ. ಡಂಬಳ ಉಪಕೇಂದ್ರದಿಂದ ಹೊರಹೋಗುವ ಎಲ್ಲ 11 ಕೆ.ವಿ. ಮಾರ್ಗಗಳು, ಸುಜಲಾನ್, ಎನರ್ಕಾನ್, ಅಕಿಲಾಗ್ಯಾ ಸೋಲಾರ್ ಹಾಗೂ ಚುರ್ಚಿಹಾಳ ನೀರಾವರಿ ಮಾರ್ಗಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.

ಅದೇ ರೀತಿ 110 ಕೆ.ವಿ. ಮುಂಡರಗಿ ಉಪಕೇಂದ್ರದಿಂದ ಹೊರಹೋಗುವ ಎಲ್ಲ 11 ಕೆ.ವಿ. ಮಾರ್ಗಗಳು, ವಿಜಯನಗರ ಶುಗರ್ಸ್ ಹಾಗೂ ಬೀಡನಾಳ ನೀರಾವರಿ ಮಾರ್ಗಗಳಲ್ಲಿಯೂ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

110 ಕೆ.ವಿ. ಶಿಂಗಟಾಲೂರು ಉಪಕೇಂದ್ರದಿಂದ ಹೊರಹೋಗುವ ಎಲ್ಲ 11 ಕೆ.ವಿ. ಮಾರ್ಗಗಳಲ್ಲಿಯೂ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.

ಹೀಗಾಗಿ ಮುಂಡರಗಿ, ಡಂಬಳ, ಶಿಂಗಟಾಲೂರು ವ್ಯಾಪ್ತಿಯ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಎಲ್ಲಾ 11 ಕೆ.ವಿ. ವಿತರಣಾ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿ ಹೆಸ್ಕಾಂ ಇಲಾಖೆಯೊಂದಿಗೆ ಸಹಕರಿಸುವಂತೆ ಕಾರ್ಯನಿರ್ವಾಹಕ ಎಂಜಿನಿಯರ್ (ವಿ), ಕಾರ್ಯ ಮತ್ತು ಪಾಲನೆ ವಿಭಾಗ, ಹೆಸ್ಕಾಂ ಗದಗ ಮನವಿ ಮಾಡಿದ್ದಾರೆ.

ಶಕ್ತಿ ಯೋಜನೆ ನಡುವೆಯೇ ಪುರುಷ ಪ್ರಯಾಣಿಕರಿಗೆ ಮತ್ತೊಂದು ಹೊರೆ: ಬಿಎಂಟಿಸಿ ಪಾಸ್ ದರ ಹೆಚ್ಚಳ ಜಾರಿ

ಬೆಂಗಳೂರು: ಬಿಎಂಟಿಸಿ ಬಸ್ ಸೇವೆಗಳ ವಿಸ್ತರಣೆಯ ನೆಪದಲ್ಲಿ ಪ್ರಯಾಣಿಕರ ಮೇಲೆ ಮತ್ತೊಂದು ದರ ಏರಿಕೆಯ ಬರೆ ಎಳೆಯಲಾಗಿದೆ. ಬೆಂಗಳೂರು ಹೊರವಲಯದ ಮಾರ್ಗಗಳಲ್ಲಿ ಸಂಚರಿಸುವ ಪ್ರಯಾಣಿಕರಿಗಾಗಿ ಪರಿಚಯಿಸಿರುವ ‘ವಿಸ್ತಾರ ಮಾಸಿಕ ಪಾಸ್’ ದರವನ್ನು ₹1200ರಿಂದ ₹1500ಕ್ಕೆ ಏರಿಸಲಾಗಿದ್ದು, ಇಂದಿನಿಂದಲೇ ಹೊಸ ದರ ಜಾರಿಗೆ ಬಂದಿದೆ.

ಕನಕಪುರ, ರಾಮನಗರ, ಚನ್ನಪಟ್ಟಣ, ಮಾಗಡಿ, ಚಿಕ್ಕಬಳ್ಳಾಪುರ, ಮಾಲೂರು ಸೇರಿದಂತೆ ದೂರದ ಪ್ರದೇಶಗಳಿಗೆ ಈಗ ಬಿಎಂಟಿಸಿ ಸೇವೆ ವಿಸ್ತರಿಸಿರುವುದರಿಂದ ಹೊಸ ಪಾಸ್ ವ್ಯವಸ್ಥೆ ಜಾರಿಗೆ ತರಲಾಗಿದೆ. ವಿಸ್ತರಿತ ಕಾರ್ಯಾಚರಣೆ ವೆಚ್ಚವನ್ನು ಸಮರ್ಥಿಸಿಕೊಳ್ಳಲು ದರ ಹೆಚ್ಚಳ ಅನಿವಾರ್ಯವಾಗಿದೆ ಎಂದು ನಿಗಮ ಸಮರ್ಥನೆ ನೀಡಿದೆ.

ಇದೇ ವೇಳೆ ಬಿಎಂಟಿಸಿಯ ವಜ್ರ ಎಸಿ ಬಸ್ ಮಾಸಿಕ ಪಾಸ್ ದರ ಹೆಚ್ಚಳಕ್ಕೂ ಸಿದ್ಧತೆ ನಡೆದಿರುವ ಮಾಹಿತಿ ಲಭ್ಯವಾಗಿದೆ. ಸದ್ಯ ₹2000 ಇರುವ ಎಸಿ ಪಾಸ್ ದರವನ್ನು ₹2500ಕ್ಕೆ ಹೆಚ್ಚಿಸುವ ಪ್ರಸ್ತಾವನೆ ನಿಗಮದ ಮಟ್ಟದಲ್ಲಿ ಚರ್ಚೆಯಲ್ಲಿದೆ ಎನ್ನಲಾಗಿದೆ.

ಒಂದು ಕಡೆ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ಸೌಲಭ್ಯ ನೀಡಲಾಗುತ್ತಿದ್ದರೆ, ಮತ್ತೊಂದೆಡೆ ನಿಗಮದ ಆರ್ಥಿಕ ನಷ್ಟವನ್ನು ಸರಿದೂಗಿಸಲು ಪುರುಷ ಪ್ರಯಾಣಿಕರ ಮೇಲೆ ಪರೋಕ್ಷವಾಗಿ ಹೆಚ್ಚುವರಿ ಹೊರೆ ಹಾಕಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

ದರ ಏರಿಕೆ ಘೋಷಣೆಯ ಬೆನ್ನಲ್ಲೇ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಿ ಬಿಎಂಟಿಸಿ ಮತ್ತಷ್ಟು ದರ ಪರಿಷ್ಕರಣೆಗೆ ಮುಂದಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ.

ಮಮತಾಗೆ ಪಕ್ಷದೊಳಗೇ ಶಾಕ್: ಅಧ್ಯಕ್ಷ ಸ್ಥಾನ ಕಿತ್ತುಕೊಂಡ ಬಂಡಾಯ ನಾಯಕರು

0

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸುವ ಬೆಳವಣಿಗೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದೊಳಗಿನ ಬಂಡಾಯ ಬಹಿರಂಗ ಸ್ಫೋಟಗೊಂಡಿದೆ. ಬಂಡಾಯ ಬಣವು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆಯಾಗಿದ್ದ ಮಮತಾ ಬ್ಯಾನರ್ಜಿ ಅವರನ್ನು ಹುದ್ದೆಯಿಂದ ವಜಾಗೊಳಿಸಿರುವುದಾಗಿ ಘೋಷಿಸಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದ ಅಭಿಷೇಕ್ ಬ್ಯಾನರ್ಜಿ ಅವರನ್ನು ಅಮಾನತುಗೊಳಿಸಿರುವುದಾಗಿ ಪ್ರಕಟಿಸಿದೆ.

ಕೋಲ್ಕತ್ತಾದ ನ್ಯೂಟೌನ್‌ನ ಪಂಚತಾರಾ ಹೋಟೆಲ್‌ನಲ್ಲಿ ನಡೆದ ವಿಶೇಷ ಸಭೆಯಲ್ಲಿ ಬಂಡಾಯ ನಾಯಕರು ಮಹತ್ವದ ನಿರ್ಣಯಗಳನ್ನು ಕೈಗೊಂಡಿದ್ದಾರೆ. ಬಂಡಾಯ ಬಣದ ನಾಯಕ ರುತಬ್ರತಾ ಬ್ಯಾನರ್ಜಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಿರಿಯ ಶಾಸಕ ಅರೂಪ್ ರಾಯ್ ಅವರನ್ನು ಟಿಎಂಸಿಯ ಹೊಸ ಅಖಿಲ ಭಾರತ ಅಧ್ಯಕ್ಷರನ್ನಾಗಿ ಘೋಷಿಸಲಾಗಿದೆ.

ಅಭಿಷೇಕ್ ಬ್ಯಾನರ್ಜಿ ಅವರ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬಂಡಾಯ ನಾಯಕರು, ಅವರನ್ನು ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಅಮಾನತುಗೊಳಿಸುವ ನಿರ್ಣಯಕ್ಕೆ ಸರ್ವಾನುಮತದ ಮುದ್ರೆ ಒತ್ತಿದ್ದಾರೆ. ಜೊತೆಗೆ ಪಕ್ಷದ ಸಂಘಟನೆಗೆ ಹೊಸ ರೂಪ ನೀಡಲು 20 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನೂ ರಚಿಸಲಾಗಿದೆ.

ಬಂಡಾಯ ಬಣವು ತಾವುಗಳೇ “ನಿಜವಾದ ತೃಣಮೂಲ ಕಾಂಗ್ರೆಸ್” ಎಂದು ಘೋಷಿಸಿಕೊಂಡಿದ್ದು, ಪಕ್ಷದ ಮೇಲೆ ಹಕ್ಕು ಸ್ಥಾಪಿಸಲು ಚುನಾವಣಾ ಆಯೋಗದ ಮೆಟ್ಟಿಲೇರಲು ಸಿದ್ಧತೆ ನಡೆಸಿದೆ. ಈ ಬೆಳವಣಿಗೆ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಅತಿದೊಡ್ಡ ಬಿಕ್ಕಟ್ಟಿಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಕಾನೂನು ಮತ್ತು ರಾಜಕೀಯ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

ಪೋಕ್ಸೋ ಕೇಸ್‌: ವಚನಾನಂದ ಸ್ವಾಮೀಜಿ ಜಾಮೀನು ಭವಿಷ್ಯ ಇಂದು ನಿರ್ಧಾರ!

ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ಇದೀಗ ಹೈಕೋರ್ಟ್‌ನಲ್ಲಿ ಮಹತ್ವದ ಘಟ್ಟ ತಲುಪಿದ್ದು, ಸ್ವಾಮೀಜಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನಿನ ಭವಿಷ್ಯ ಇಂದು ನಿರ್ಧಾರವಾಗುವ ಸಾಧ್ಯತೆ ಇದೆ.

ಸ್ವಾಮೀಜಿಗೆ ಕೆಳ ನ್ಯಾಯಾಲಯ ನೀಡಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಸಂತ್ರಸ್ತ ಬಾಲಕನ ತಾಯಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಇಂದು ಅರ್ಜಿಯ ವಿಚಾರಣೆ ನಡೆಸಲಿದೆ.

ಪ್ರಕರಣದಲ್ಲಿ ಈಗಾಗಲೇ ಸ್ವಾಮೀಜಿ ಜಾಮೀನು ಪಡೆದ ರೀತಿಗೆ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ. ಮೇ 7ರಂದು ಪೋಕ್ಸೋ ಪ್ರಕರಣ ದಾಖಲಾಗಿದ್ದರೆ, ಅದರ ಹಿಂದಿನ ದಿನವೇ ಅಂದರೆ ಮೇ 6ರಂದು ನಿರೀಕ್ಷಣಾ ಜಾಮೀನು ಪಡೆದಿರುವುದು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

ದೂರು ದಾಖಲಾಗುವ ಮುನ್ನವೇ ನಿರೀಕ್ಷಣಾ ಜಾಮೀನು ನೀಡಿರುವ ಕ್ರಮ ಮೇಲ್ನೋಟಕ್ಕೆ ಸರಿಯಾದ ರೀತಿಯಲ್ಲಿ ನಡೆದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿ, ಈ ಸಂಬಂಧ ವಚನಾನಂದ ಸ್ವಾಮೀಜಿಗೆ ನೋಟಿಸ್ ಜಾರಿ ಮಾಡಿತ್ತು.

ಇಂದು ನಡೆಯಲಿರುವ ವಿಚಾರಣೆಗೆ ಸ್ವಾಮೀಜಿ ಹಾಜರಾಗುವ ಸಾಧ್ಯತೆಯಿದ್ದು, ಪ್ರಕರಣದ ಬೆಳವಣಿಗೆಗಳತ್ತ ಭಕ್ತರು ಹಾಗೂ ಸಾರ್ವಜನಿಕರು ತೀವ್ರ ಕುತೂಹಲದಿಂದ ಗಮನ ಹರಿಸಿದ್ದಾರೆ.

ಇದೇ ವೇಳೆ, ಹರಿಹರ ಪಂಚಮಸಾಲಿ ಪೀಠದ ಭಕ್ತರ ವಲಯದಲ್ಲೂ ಚರ್ಚೆಗಳು ಜೋರಾಗಿದ್ದು, ಸ್ವಾಮೀಜಿ ಪರ ಹಾಗೂ ವಿರೋಧಿ ಗುಂಪುಗಳ ನಡುವೆ ವಾಕ್ಸಮರ ಮುಂದುವರಿದಿದೆ.

ಪೊಲೀಸರು ಈಗಾಗಲೇ 410 ಪುಟಗಳ ಚಾರ್ಜ್‌ಶೀಟ್ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಹೈಕೋರ್ಟ್‌ನಲ್ಲಿ ನಡೆಯಲಿರುವ ಇಂದಿನ ವಿಚಾರಣೆ ಪ್ರಕರಣದ ಮುಂದಿನ ಹಂತಕ್ಕೆ ದಿಕ್ಕು ತೋರಿಸಲಿದೆ.

ವೈದ್ಯರ ಚೀಟಿ ಇದೆ, ಔಷಧಿ ಮಾತ್ರ ಇಲ್ಲ; ಕೆಸಿ ಜನರಲ್ ಆಸ್ಪತ್ರೆ ವಿರುದ್ಧ ರೋಗಿಗಳ ಆಕ್ರೋಶ!

ಬೆಂಗಳೂರು: ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಆಸರೆಯಾಗಬೇಕಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಸಮಸ್ಯೆ ತಲೆದೋರಿದ್ದು, ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ರೋಗಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ.

ಆಸ್ಪತ್ರೆಗೆ ಬರುವ ನೂರಾರು ರೋಗಿಗಳಿಗೆ ವೈದ್ಯರು ಚಿಕಿತ್ಸೆ ನೀಡಿ ಔಷಧಿ ಚೀಟಿ ಬರೆದುಕೊಡುತ್ತಿದ್ದರೂ, ಆಸ್ಪತ್ರೆಯ ಫಾರ್ಮಸಿಯಲ್ಲಿ ಅಗತ್ಯ ಔಷಧಿಗಳು ಲಭ್ಯವಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಸಿಬ್ಬಂದಿ ‘ಸ್ಟಾಕ್ ಇಲ್ಲ, ಹೊರಗಡೆ ಖರೀದಿಸಿ’ ಎಂದು ಹೇಳುತ್ತಿರುವುದರಿಂದ ರೋಗಿಗಳು ಹಾಗೂ ಅವರ ಕುಟುಂಬಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಶೇಷವಾಗಿ ಮಕ್ಕಳಿಗೆ ಅಗತ್ಯವಿರುವ ವಿಟಮಿನ್-ಡಿ ಸಿರಪ್ ಸೇರಿದಂತೆ ಹಲವು ಅಗತ್ಯ ಔಷಧಿಗಳ ಕೊರತೆ ಕಂಡುಬಂದಿದೆ. ಕೆಲ ಪ್ರಾಣರಕ್ಷಕ ಔಷಧಿಗಳೂ ಲಭ್ಯವಿಲ್ಲ ಎನ್ನುವ ದೂರುಗಳು ಕೇಳಿಬಂದಿವೆ.

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆಯಾಗದಂತೆ ಸಾಕಷ್ಟು ಸಂಗ್ರಹವಿದೆ ಎಂದು ಆರೋಗ್ಯ ಇಲಾಖೆ ಹೇಳಿಕೆ ನೀಡುತ್ತಿದ್ದರೂ, ಕೆಸಿ ಜನರಲ್ ಆಸ್ಪತ್ರೆಯಲ್ಲಿನ ಪರಿಸ್ಥಿತಿ ಅದಕ್ಕೆ ವಿರುದ್ಧವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ಬಡ ರೋಗಿಗಳು ಹೊರಗಿನ ಮೆಡಿಕಲ್ ಅಂಗಡಿಗಳಲ್ಲಿ ದುಬಾರಿ ಬೆಲೆ ನೀಡಿ ಔಷಧಿ ಖರೀದಿಸಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ತಕ್ಷಣ ಸಮಸ್ಯೆ ಪರಿಹರಿಸಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಸಮರ್ಪಕ ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

84ನೇ ವಯಸ್ಸಿನಲ್ಲಿ ಲಿಂಗೈಕ್ಯರಾದ ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿ!

ರಾಮನಗರ: ಕನಕಪುರ ದೇಗುಲ ಮಠದ ಹಿರಿಯ ಶ್ರೀಗಳಾದ ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿಗಳು 84ನೇ ವಯಸ್ಸಿನಲ್ಲಿ ಲಿಂಗೈಕ್ಯರಾಗಿದ್ದಾರೆ.

ಹಲವು ದಶಕಗಳ ಕಾಲ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದ ಶ್ರೀಗಳು ಅಪಾರ ಭಕ್ತವೃಂದವನ್ನು ಹೊಂದಿದ್ದರು. ಅವರ ಲಿಂಗೈಕ್ಯ ಸುದ್ದಿಯಿಂದ ಭಕ್ತರು ಹಾಗೂ ಸಾರ್ವಜನಿಕರು ದುಃಖ ವ್ಯಕ್ತಪಡಿಸಿದ್ದಾರೆ.

ಶ್ರೀಗಳ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇಗುಲ ಮಠಕ್ಕೆ ಆಗಮಿಸುತ್ತಿದ್ದಾರೆ. ವಿವಿಧ ಗಣ್ಯರು, ರಾಜಕೀಯ ನಾಯಕರು ಹಾಗೂ ಮಠಾಧೀಶರು ಶ್ರೀಗಳಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

ಇದೇ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗ್ಗೆ 10 ಗಂಟೆಗೆ ಕನಕಪುರ ದೇಗುಲ ಮಠಕ್ಕೆ ಭೇಟಿ ನೀಡಿ ಶ್ರೀಗಳ ಅಂತಿಮ ದರ್ಶನ ಪಡೆಯಲಿದ್ದಾರೆ. ಅಲ್ಲದೆ, ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಸಿ ಕುಟುಂಬಸ್ಥರು ಹಾಗೂ ಭಕ್ತರಿಗೆ ಸಾಂತ್ವನ ಹೇಳಲಿದ್ದಾರೆ.

ಬಿಎಂಟಿಸಿ ಪ್ರಯಾಣಿಕರಿಗೆ ಮತ್ತೊಂದು ಶಾಕ್; ಮಾಸಿಕ ಪಾಸ್ ದುಬಾರಿ!

ಬೆಂಗಳೂರು: ಬಿಎಂಟಿಸಿ ಬಸ್‌ಗಳ ಕಾರ್ಯವ್ಯಾಪ್ತಿ ವಿಸ್ತರಿಸಿರುವ ಹಿನ್ನೆಲೆಯಲ್ಲಿ ದೀರ್ಘ ಪ್ರಯಾಣದ ಮಾಸಿಕ ಬಸ್ ಪಾಸ್ ದರವನ್ನು 1200 ರೂಪಾಯಿಯಿಂದ 1500 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.

ಪರಿಷ್ಕೃತ ದರ ಸೋಮವಾರದಿಂದಲೇ ಜಾರಿಗೆ ಬಂದಿದೆ. ಬೆಂಗಳೂರು ನಗರ ವ್ಯಾಪ್ತಿಯ ಸಾಮಾನ್ಯ ಮಾಸಿಕ ಬಸ್ ಪಾಸ್ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಈ ಪಾಸ್‌ನ ದರ 1200 ರೂಪಾಯಿಯಲ್ಲೇ ಮುಂದುವರಿಯಲಿದೆ.

ಬೆಂಗಳೂರು ಹೊರವಲಯದ ಜಿಲ್ಲೆಗಳು ಹಾಗೂ ತಾಲೂಕುಗಳಿಗೆ ಪ್ರಯಾಣಿಸುವವರ ಅನುಕೂಲಕ್ಕಾಗಿ ‘ವಿಸ್ತಾರ ಮಾಸಿಕ ಪಾಸ್’ ಅನ್ನು ಪರಿಚಯಿಸಲಾಗಿದ್ದು, ಇದರ ದರವನ್ನು 1500 ರೂಪಾಯಿಗೆ ನಿಗದಿಪಡಿಸಲಾಗಿದೆ.

ಟಿಕೆಟ್ ದರ ಏರಿಕೆ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿರುವ ನಡುವೆಯೇ ಬಿಎಂಟಿಸಿ ಪಾಸ್ ದರ ಹೆಚ್ಚಿಸಿರುವುದು ಪ್ರಯಾಣಿಕರಲ್ಲಿ ಗೊಂದಲ ಹಾಗೂ ಅಸಮಾಧಾನಕ್ಕೆ ಕಾರಣವಾಗಿದೆ.

ಇದೇ ವೇಳೆ ವಜ್ರ ಬಸ್‌ಗಳ ಮಾಸಿಕ ಪಾಸ್ ದರವನ್ನೂ ಹೆಚ್ಚಿಸುವ ಚಿಂತನೆ ನಿಗಮದಲ್ಲಿ ನಡೆಯುತ್ತಿದೆ ಎನ್ನಲಾಗಿದೆ. ಪ್ರಸ್ತುತ 2000 ರೂಪಾಯಿ ಇರುವ ಎಸಿ ಬಸ್ ಪಾಸ್ ದರವನ್ನು 2500 ರೂಪಾಯಿಗೆ ಏರಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ.

ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡುತ್ತಿರುವ ಸಂದರ್ಭದಲ್ಲಿ, ನಿಗಮದ ಆರ್ಥಿಕ ಹೊರೆ ಸರಿದೂಗಿಸಲು ಪುರುಷ ಪ್ರಯಾಣಿಕರ ಮೇಲೆ ಪರೋಕ್ಷವಾಗಿ ಹೆಚ್ಚುವರಿ ಹೊರೆ ಹಾಕಲಾಗುತ್ತಿದೆ ಎಂದು ಕೆಲ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

error: Content is protected !!