ರಾಂಚಿ: ಜಾರ್ಖಂಡ್ನ ರಾಂಚಿಯಲ್ಲಿ JPSC ಮತ್ತು JSSC ಪರೀಕ್ಷಾರ್ಥಿಗಳು ನಡೆಸಿದ ವಿಧಾನಸಭೆ ಮುತ್ತಿಗೆ ಚಳವಳಿ ಇಂದು ತೀವ್ರ ಸ್ವರೂಪ ಪಡೆದುಕೊಂಡಿದೆ. ವಿಧಾನಸಭೆಯತ್ತ ಮುನ್ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿ, ಜಲಫಿರಂಗಿ ಪ್ರಯೋಗಿಸಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳಿಂದ ವಿದ್ಯಾರ್ಥಿಗಳ ಭವಿಷ್ಯ ಅನಿಶ್ಚಿತತೆಗೆ ಸಿಲುಕಿದೆ ಎಂದು ಆರೋಪಿಸಿರುವ ಪರೀಕ್ಷಾರ್ಥಿಗಳು, ನೇಮಕಾತಿ ಪ್ರಕ್ರಿಯೆಯಲ್ಲಿ ತಕ್ಷಣವೇ ಪಾರದರ್ಶಕ ಸುಧಾರಣೆಗಳನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ, ಅಕ್ರಮಗಳ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಸಾವಿರಾರು ಅಭ್ಯರ್ಥಿಗಳು ವಿಧಾನಸಭೆ ಮುತ್ತಿಗೆಗೆ ಕರೆ ನೀಡಿದ್ದರು.
ಪ್ರತಿಭಟನಾಕಾರರು ಬ್ಯಾರಿಕೇಡ್ಗಳನ್ನು ಮುರಿದು ಮುಂದೆ ಸಾಗಲು ಯತ್ನಿಸಿದಾಗ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಪೊಲೀಸರತ್ತ ಚಪ್ಪಲಿ ಹಾಗೂ ಖಾಲಿ ನೀರಿನ ಬಾಟಲಿಗಳನ್ನು ಎಸೆದಿದ್ದಾರೆ.
ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಜಲಫಿರಂಗಿ ಬಳಸಿ ಪ್ರತಿಭಟನಾಕಾರರತ್ತ ನೀರು ಹಾಯಿಸಿದ್ದಾರೆ. ಆದರೆ, ಕೆಲ ವಿದ್ಯಾರ್ಥಿಗಳು ಸ್ಥಳದಿಂದ ತೆರಳದೆ ಜಲಫಿರಂಗಿಗೆ ಎದುರಾಗಿ ನಿಂತು ಪ್ರತಿಭಟನೆ ಮುಂದುವರಿಸಿದ್ದಾರೆ. ಕೆಲವರು ನೀರಿನ ಸಿಂಚನದ ನಡುವೆಯೇ ಕುಣಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಿದ್ಯಾರ್ಥಿ ನಾಯಕ ದೇವೇಂದ್ರ ಮಹತೋ ಪ್ರತಿಭಟನಾಕಾರರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಪೊಲೀಸರು ತಡೆದರೆ ಅವರೊಂದಿಗೆ ಜಗಳವಾಡಬೇಡಿ. ಶಿಸ್ತುಬದ್ಧವಾಗಿ ಬೇರೆ ಮಾರ್ಗಗಳ ಮೂಲಕ ವಿಧಾನಸಭೆ ತಲುಪಲು ಪ್ರಯತ್ನಿಸಿ ಎಂದು ಅವರು ಕರೆ ನೀಡಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ವಿದ್ಯಾರ್ಥಿಗಳು ಬೆಳಗ್ಗೆಯೇ ರೈಲು, ಬಸ್ ಹಾಗೂ ಖಾಸಗಿ ವಾಹನಗಳ ಮೂಲಕ ರಾಂಚಿಗೆ ಆಗಮಿಸಿದ್ದರು. ಪ್ರತಿಭಟನಾಕಾರರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ನಗರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.
ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ತಡೆಯಲು ಆಡಳಿತವು ನಗರದ ಪ್ರಮುಖ ರಸ್ತೆಗಳು ಹಾಗೂ ಜಂಕ್ಷನ್ಗಳಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ರಾಂಚಿಯ ಹಲವು ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿತ್ತು.
ಇದೇ ವೇಳೆ, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ರಾಂಚಿಗೆ ಆಗಮಿಸುವುದನ್ನು ತಡೆಯಲು ಜಿಲ್ಲೆಯ ಗಡಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪೊಲೀಸರು ತೀವ್ರ ವಾಹನ ತಪಾಸಣೆ ನಡೆಸಿದ್ದರು.
JPSC ಮತ್ತು JSSC ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಗಳ ಹಿನ್ನೆಲೆಯಲ್ಲಿ ನಡೆದಿರುವ ಈ ಪ್ರತಿಭಟನೆ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಂಚಿಯಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ.

