Home Blog

ಶೃಂಗೇರಿ ಅಂಚೆ ಮತ ಮರು ಎಣಿಕೆ ವಿವಾದ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ!

0

ಚಿಕ್ಕಮಗಳೂರು: 2023ರ ವಿಧಾನಸಭಾ ಚುನಾವಣೆಯಿಂದ ಆರಂಭವಾಗಿ, ಮೂರು ವರ್ಷಗಳ ಕಾನೂನು ಹೋರಾಟದ ಬಳಿಕ ಭಾರೀ ರಾಜಕೀಯ ಸಂಚಲನಕ್ಕೆ ಕಾರಣವಾಗಿರುವ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ವಿವಾದದ ಕುರಿತು ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ.

ಈ ಪ್ರಕರಣದಲ್ಲಿ ಕೆಲವೇ ದಿನಗಳ ಅವಧಿಯಲ್ಲಿ ಶಾಸಕರ ಬದಲಾವಣೆಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರು ಶಾಸಕ ಸ್ಥಾನ ಉಳಿಸಿಕೊಳ್ಳಲು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇಂದು ನಡೆಯಲಿರುವ ವಿಚಾರಣೆ ಮಹತ್ವ ಪಡೆದುಕೊಂಡಿದೆ.

201 ಮತಗಳ ಅಂತರದಲ್ಲಿ ರಾಜೇಗೌಡ ಗೆಲುವು:

2023ರ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಅಂಚೆ ಮತಗಳ ಮರು ಎಣಿಕೆಗೆ ಒತ್ತಾಯಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.

ಪ್ರಕರಣದ ವಿಚಾರಣೆ ಸುಮಾರು ಮೂರು ವರ್ಷಗಳ ಕಾಲ ನಡೆದ ಬಳಿಕ ಹೈಕೋರ್ಟ್ ಅಂಚೆ ಮತಗಳ ಮರು ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸುವಂತೆ ಆದೇಶಿಸಿತ್ತು.

ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು:

ಹೈಕೋರ್ಟ್ ಆದೇಶದಂತೆ ಮೇ 2ರಂದು ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು 52 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇದರಿಂದ ಮೂರು ವರ್ಷಗಳ ಕಾಲ ಶಾಸಕರಾಗಿದ್ದ ರಾಜೇಗೌಡ ಅವರು ಶಾಸಕ ಸ್ಥಾನ ಕಳೆದುಕೊಂಡಿದ್ದರು.

ಮರು ಎಣಿಕೆಯ ಬಳಿಕ ಜೀವರಾಜ್ ಅವರು ಶಾಸಕರಾಗಿ ಪ್ರಮಾಣವಚನವನ್ನೂ ಸ್ವೀಕರಿಸಿದ್ದರು.

ಮೂರೇ ದಿನಕ್ಕೆ ಮತ್ತೆ ಬದಲಾದ ಶಾಸಕ ಸ್ಥಾನ:

ಆದರೆ ಅಂಚೆ ಮತ ಮರು ಎಣಿಕೆ ಫಲಿತಾಂಶವನ್ನು ಪ್ರಶ್ನಿಸಿ ಟಿ.ಡಿ. ರಾಜೇಗೌಡ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡುವ ಮೂಲಕ ರಾಜೇಗೌಡ ಅವರು ಶಾಸಕ ಸ್ಥಾನದಲ್ಲಿ ಮುಂದುವರಿಯಲು ಅವಕಾಶ ನೀಡಿತ್ತು.

ಇದರ ಪರಿಣಾಮವಾಗಿ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಡಿ.ಎನ್. ಜೀವರಾಜ್ ಅವರು ಮೂರೇ ದಿನಗಳಲ್ಲಿ ಮತ್ತೆ ಶಾಸಕ ಸ್ಥಾನ ಕಳೆದುಕೊಂಡರು.

ಇಂದು ದಾಖಲೆಗಳ ಪರಿಶೀಲನೆ ಸಾಧ್ಯತೆ:

ಮೇ 2ರಂದು ಅಂಚೆ ಮತ ಮರು ಎಣಿಕೆ ನಡೆದ ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜು ಆವರಣದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಸೇರಿದ್ದರು. ಮರು ಎಣಿಕೆಯ ವೇಳೆ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ತೀವ್ರ ಕುತೂಹಲ ಮನೆ ಮಾಡಿತ್ತು.

ಇದೀಗ ಪ್ರಕರಣ ಮತ್ತೆ ಸುಪ್ರೀಂ ಕೋರ್ಟ್‌ನ ಅಂಗಳದಲ್ಲಿದ್ದು, ಇಂದು ನಡೆಯುವ ವಿಚಾರಣೆಯಲ್ಲಿ 2023ರ ಮೂಲ ಮತ ಎಣಿಕೆ ಹಾಗೂ 2026ರ ಮರು ಎಣಿಕೆಯ ದಾಖಲೆಗಳನ್ನು ಚುನಾವಣಾ ಆಯೋಗ ನ್ಯಾಯಾಲಯದ ಮುಂದೆ ಹಾಜರುಪಡಿಸಿದೆ. ಈ ದಾಖಲೆಗಳನ್ನು ನ್ಯಾಯಾಲಯ ಪರಿಶೀಲಿಸುವ ಸಾಧ್ಯತೆಯಿದೆ.

ಹೀಗಾಗಿ ಶೃಂಗೇರಿ ಕ್ಷೇತ್ರದ ಶಾಸಕ ಸ್ಥಾನ ಯಾರ ಪಾಲಾಗಲಿದೆ ಎಂಬುದು ಮತ್ತೆ ಕುತೂಹಲ ಮೂಡಿಸಿದ್ದು, ಇಂದಿನ ಸುಪ್ರೀಂ ಕೋರ್ಟ್ ವಿಚಾರಣೆಯತ್ತ ರಾಜ್ಯ ರಾಜಕೀಯದ ಚಿತ್ತ ನೆಟ್ಟಿದೆ.

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಇನ್ನಿಲ್ಲ; ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!

0

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ, ರಾಜ್ಯದ ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ (67) ಅವರು ದೀರ್ಘಕಾಲದ ಅನಾರೋಗ್ಯದಿಂದ ಮಂಗಳವಾರ ರಾತ್ರಿ ನಿಧನರಾದರು.

ಕಳೆದ ಕೆಲಕಾಲದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಬಿ.ಸಿ. ನಾಗೇಶ್ ಅವರು ಬೆಂಗಳೂರಿನ ಜಯನಗರದಲ್ಲಿರುವ ಪುತ್ರಿಯ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ರಾತ್ರಿ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಬಿ.ಸಿ. ನಾಗೇಶ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯ ರಾಜಕೀಯ ವಲಯದಲ್ಲಿ ಸಂತಾಪ ವ್ಯಕ್ತವಾಗಿದೆ. ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಬೊಮ್ಮಾಯಿ ಸರ್ಕಾರದಲ್ಲಿ ಸಚಿವರಾಗಿದ್ದ ನಾಗೇಶ್:

ಬಿ.ಸಿ. ನಾಗೇಶ್ ಅವರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ 2021ರಿಂದ 2023ರವರೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಹಲವು ಪ್ರಮುಖ ನಿರ್ಧಾರಗಳ ಮೂಲಕ ಗಮನ ಸೆಳೆದಿದ್ದರು. ಪಕ್ಷದ ಸಂಘಟನೆಯಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು ಬಿಜೆಪಿಯ ಹಿರಿಯ ನಾಯಕರಾಗಿ ಗುರುತಿಸಿಕೊಂಡಿದ್ದರು.

ಎರಡು ಬಾರಿ ತಿಪಟೂರು ಶಾಸಕರಾಗಿದ್ದರು:

ತುಮಕೂರು ಜಿಲ್ಲೆಯ ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎರಡು ಬಾರಿ ಬಿ.ಸಿ. ನಾಗೇಶ್ ಅವರು ವಿಧಾನಸಭೆಗೆ ಆಯ್ಕೆಯಾಗಿದ್ದರು. ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಹಾಗೂ ಸಾರ್ವಜನಿಕ ಕೆಲಸಗಳ ಮೂಲಕ ತಮ್ಮದೇ ಆದ ರಾಜಕೀಯ ಛಾಪು ಮೂಡಿಸಿದ್ದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಅವರು ಸೋಲು ಅನುಭವಿಸಿದ್ದರು.

ಇಂದು ತಿಪಟೂರಿಗೆ ಪಾರ್ಥಿವ ಶರೀರ ರವಾನೆ:

ಬಿ.ಸಿ. ನಾಗೇಶ್ ಅವರ ಪಾರ್ಥಿವ ಶರೀರವನ್ನು ಮಂಗಳವಾರ ರಾತ್ರಿ ಬೆಂಗಳೂರಿನಿಂದ ಅವರ ಸ್ವಕ್ಷೇತ್ರ ತಿಪಟೂರಿಗೆ ರವಾನಿಸಲಾಗುತ್ತಿದೆ. ಬುಧವಾರ, ಆಗಸ್ಟ್ 19ರಂದು ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

ಮಾಜಿ ಸಚಿವರ ನಿಧನದಿಂದ ತಿಪಟೂರು ಸೇರಿದಂತೆ ರಾಜ್ಯದಾದ್ಯಂತ ಅವರ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಹಾಗೂ ರಾಜಕೀಯ ಸಹೋದ್ಯೋಗಿಗಳು ದುಃಖತಪ್ತರಾಗಿದ್ದಾರೆ.

ಗದಗದ ಗ್ರಾಮದೇವತೆಗಳ ಹರಿಜಾತ್ರೆಗೆ ಸಡಗರ: ಆ.19ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಗ್ರಾಮದೇವತೆಗಳಾದ ಶ್ರೀ ದ್ಯಾಮವ್ವ ಹಾಗೂ ಶ್ರೀ ದುರ್ಗಮ್ಮ ದೇವಿಯರ 12 ವರ್ಷಕ್ಕೊಮ್ಮೆ ನಡೆಯುವ ಹರಿಜಾತ್ರಾ ಮಹೋತ್ಸವದ ಅಂಗವಾಗಿ ಆಗಸ್ಟ್ 19ರಂದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಸಂಜೆ 7 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಅಂತೂರ-ಬೆಂತೂರಿನ ಬೂದೀಶ್ವರ ಸಂಸ್ಥಾನಮಠದ ಪೂಜ್ಯ ಶ್ರೀ ಡಾ. ರಾಚೋಟೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸುವರು. ಟ್ರಸ್ಟ್ ಕಮಿಟಿ ಅಧ್ಯಕ್ಷ ಕೊಟ್ರಪ್ಪ ಕಮತರ ಅಧ್ಯಕ್ಷತೆ ವಹಿಸುವರು. ಜಾತ್ರಾ ಕಮಿಟಿ ಕಾರ್ಯಾಧ್ಯಕ್ಷ ಫಕ್ಕೀರಪ್ಪ ಹೆಬಸೂರ ಉಪಸ್ಥಿತರಿರುವರು.

ಮುಖ್ಯ ಅತಿಥಿಗಳಾಗಿ ಬಣಜಿಗ ಸಮಾಜದ ಅಧ್ಯಕ್ಷ ಈಶಣ್ಣ ಮುನವಳ್ಳಿ, ಮರಾಠಾ ಸಮಾಜದ ಜಿಲ್ಲಾಧ್ಯಕ್ಷ ಅರುಣಕುಮಾರ ಚವ್ಹಾಣ, ವಿಶ್ವಕರ್ಮ ಸಮಾಜದ ಆರ್.ಡಿ. ಕಡ್ಲಿಕೊಪ್ಪ, ವಾಲ್ಮೀಕಿ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಬೆಳದಡಿ ಹಾಗೂ ಉದ್ಯಮಿ ಪ್ರಕಾಶ ಕರಿ ಭಾಗವಹಿಸುವರು.

ಅತಿಥಿಗಳಾಗಿ ನಗರಸಭೆ ಸದಸ್ಯರಾದ ಲಕ್ಷ್ಮವ್ವ ಭಜಂತ್ರಿ, ರಾಘವೇಂದ್ರ ಯಳವತ್ತಿ, ಪೂರ್ಣಿಮಾ ಭರದ್ವಾಡ, ಚಂದ್ರಶೇಖರ ಗೌಡ ಕರಿಸೋಮನಗೌಡ್ರ ಹಾಗೂ ಇಮ್ತಿಯಾಜ್ ಶಿರಹಟ್ಟಿ ಉಪಸ್ಥಿತರಿರುವರು.

ನಂತರ ರಾತ್ರಿ 8.30ಕ್ಕೆ ಕಾಮಿಡಿ ಕಿಲಾಡಿ ಖ್ಯಾತಿಯ ಸಂಜು ಬಸಯ್ಯ ಹಾಗೂ ಗದುಗಿನ ನಟರಂಗ ಕಲಾ ಸಂಸ್ಥೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ದ್ಯಾಮವ್ವ ಹಾಗೂ ದುರ್ಗಮ್ಮ ದೇವಿಯರ ಹರಿಜಾತ್ರೋತ್ಸವ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.

ಬಾಳೆಹಣ್ಣಿನ ಸಿಪ್ಪೆ ಎಸೆಯುವ ಮುನ್ನ ಯೋಚಿಸಿ; ಹೀಗೆ ಮರುಬಳಕೆ ಮಾಡಬಹುದು!

0

ಭಾರತದಲ್ಲಿ ಬಾಳೆಹಣ್ಣು ಬಹುತೇಕ ಎಲ್ಲರಿಗೂ ಇಷ್ಟವಾಗುವ ಹಣ್ಣು.

ವರ್ಷಪೂರ್ತಿ ಸುಲಭವಾಗಿ ಸಿಗುವ ಹಾಗೂ ಕೈಗೆಟುಕುವ ದರದಲ್ಲಿ ದೊರೆಯುವ ಕಾರಣ ಮನೆಗಳಲ್ಲಿ ಬಾಳೆಹಣ್ಣಿನ ಬಳಕೆ ಹೆಚ್ಚಾಗಿದೆ. ಆದರೆ ಬಾಳೆಹಣ್ಣು ತಿಂದ ಬಳಿಕ ಅದರ ಸಿಪ್ಪೆಯನ್ನು ಬಹುತೇಕರು ಕಸದ ಬುಟ್ಟಿಗೆ ಎಸೆಯುತ್ತಾರೆ. ಆದರೆ ಈ ಸಿಪ್ಪೆಯನ್ನು ಹಲವು ರೀತಿಯಲ್ಲಿ ಮರುಬಳಕೆ ಮಾಡಬಹುದು.

ಬಾಳೆಹಣ್ಣಿನ ಸಿಪ್ಪೆಯಲ್ಲಿ ವಿವಿಧ ಪೋಷಕಾಂಶಗಳು ಮತ್ತು ಉತ್ಕರ್ಷಣ ನಿರೋಧಕ ಸಂಯುಕ್ತಗಳಿದ್ದು, ಮನೆ ಬಳಕೆ ಹಾಗೂ ತೋಟಗಾರಿಕೆಯಲ್ಲಿ ಇದನ್ನು ಬಳಸಬಹುದು. ಆದರೆ ಚರ್ಮ ಅಥವಾ ಹಲ್ಲುಗಳ ಮೇಲೆ ಬಳಸುವ ಮೊದಲು ಅಲರ್ಜಿ ಅಥವಾ ಕಿರಿಕಿರಿ ಉಂಟಾಗುವುದೇ ಎಂಬುದನ್ನು ಗಮನಿಸುವುದು ಉತ್ತಮ.

ಗಿಡಗಳಿಗೆ ಗೊಬ್ಬರವಾಗಿ ಬಳಸಿ:

ಬಾಳೆಹಣ್ಣಿನ ಸಿಪ್ಪೆಯಲ್ಲಿ ಪೊಟ್ಯಾಸಿಯಮ್ ಸೇರಿದಂತೆ ಕೆಲವು ಖನಿಜಾಂಶಗಳಿವೆ. ಸಿಪ್ಪೆಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಕಾಂಪೋಸ್ಟ್‌ಗೆ ಸೇರಿಸಬಹುದು. ಅಥವಾ ಸಿಪ್ಪೆಯನ್ನು ನೀರಿನಲ್ಲಿ ನೆನೆಸಿ, ಆ ನೀರನ್ನು ಗಿಡಗಳಿಗೆ ಹಾಕಬಹುದು. ಇದರಿಂದ ಸಸ್ಯಗಳಿಗೆ ಕೆಲವು ಪೋಷಕಾಂಶಗಳು ದೊರೆಯುತ್ತವೆ.

ಶೂ ಮತ್ತು ಲೆದರ್ ಬ್ಯಾಗ್‌ಗಳಿಗೆ ಪಾಲಿಶ್:

ಬಾಳೆಹಣ್ಣಿನ ಸಿಪ್ಪೆಯ ಒಳಭಾಗವನ್ನು ಚರ್ಮದ ಶೂ ಅಥವಾ ಲೆದರ್ ಬ್ಯಾಗ್‌ ಮೇಲೆ ನಿಧಾನವಾಗಿ ಉಜ್ಜಿ, ಬಳಿಕ ಸ್ವಚ್ಛವಾದ ಒಣ ಬಟ್ಟೆಯಿಂದ ಒರೆಸಬಹುದು. ಕೆಲವು ಲೆದರ್ ವಸ್ತುಗಳಿಗೆ ಇದು ತಾತ್ಕಾಲಿಕ ಹೊಳಪು ನೀಡಬಹುದು. ಮೊದಲು ಕಾಣದ ಜಾಗದಲ್ಲಿ ಪರೀಕ್ಷಿಸುವುದು ಉತ್ತಮ.

ಬೆಳ್ಳಿ ವಸ್ತುಗಳ ಸ್ವಚ್ಛತೆಗೆ:

ಬಾಳೆಹಣ್ಣಿನ ಸಿಪ್ಪೆಯನ್ನು ಪೇಸ್ಟ್ ಮಾಡಿ ಬೆಳ್ಳಿ ವಸ್ತುಗಳನ್ನು ಸ್ವಚ್ಛಗೊಳಿಸಲು ಬಳಸುವ ಮನೆಮದ್ದುಗಳಿವೆ. ಬಳಿಕ ಸ್ವಚ್ಛವಾದ ಬಟ್ಟೆಯಿಂದ ಒರೆಸಬಹುದು. ಆದರೆ ಸೂಕ್ಷ್ಮವಾದ ಅಥವಾ ದುಬಾರಿ ಆಭರಣಗಳ ಮೇಲೆ ಯಾವುದೇ ಮನೆಮದ್ದನ್ನು ಬಳಸುವ ಮೊದಲು ಎಚ್ಚರಿಕೆ ವಹಿಸುವುದು ಸೂಕ್ತ.

ಚರ್ಮದ ಆರೈಕೆಯಲ್ಲಿ ಬಳಕೆ?

ಬಾಳೆಹಣ್ಣಿನ ಸಿಪ್ಪೆಯಲ್ಲಿ ಕೆಲವು ಉತ್ಕರ್ಷಣ ನಿರೋಧಕ ಸಂಯುಕ್ತಗಳಿದ್ದರೂ, ಮೊಡವೆ, ಕಲೆ ಅಥವಾ ಚರ್ಮದ ಸಮಸ್ಯೆಗಳಿಗೆ ಬಾಳೆಹಣ್ಣಿನ ಸಿಪ್ಪೆ ಪರಿಣಾಮಕಾರಿ ಚಿಕಿತ್ಸೆ ಎಂಬುದಕ್ಕೆ ಸಾಕಷ್ಟು ದೃಢವಾದ ವೈದ್ಯಕೀಯ ಸಾಕ್ಷ್ಯವಿಲ್ಲ. ಮುಖಕ್ಕೆ ನೇರವಾಗಿ ಉಜ್ಜುವುದು ಅಥವಾ ಜೇನುತುಪ್ಪದೊಂದಿಗೆ ಮಿಶ್ರಣ ಮಾಡಿ ಹಚ್ಚುವುದು ಕೆಲವರಿಗೆ ಕಿರಿಕಿರಿ ಅಥವಾ ಅಲರ್ಜಿ ಉಂಟುಮಾಡಬಹುದು.

ಆದ್ದರಿಂದ ಚರ್ಮದ ಸಮಸ್ಯೆಗಳಿಗೆ ಇದನ್ನು ಚಿಕಿತ್ಸೆಯ ಪರ್ಯಾಯವಾಗಿ ಬಳಸದೆ, ಅಗತ್ಯವಿದ್ದರೆ ಚರ್ಮರೋಗ ತಜ್ಞರ ಸಲಹೆ ಪಡೆಯುವುದು ಉತ್ತಮ.

ಬಾಳೆಹಣ್ಣಿನ ಸಿಪ್ಪೆಯನ್ನು ಮರುಬಳಕೆ ಮಾಡುವುದಾದರೆ ಅದನ್ನು ಚೆನ್ನಾಗಿ ತೊಳೆದು ಬಳಸಬೇಕು. ವಿಶೇಷವಾಗಿ ಹಲ್ಲು ಬಿಳುಪುಗೊಳಿಸಲು ಸಿಪ್ಪೆಯನ್ನು ಉಜ್ಜುವುದು ಅಥವಾ ಚರ್ಮದ ಸಮಸ್ಯೆಗಳಿಗೆ ಬಳಸುವುದು ಸಾಬೀತಾದ ವೈದ್ಯಕೀಯ ಚಿಕಿತ್ಸೆಯಲ್ಲ. ಮನೆಮದ್ದುಗಳನ್ನು ಬಳಸುವಾಗ ಎಚ್ಚರಿಕೆ ವಹಿಸುವುದು ಮುಖ್ಯ.

ಗದಗದ ಭವಿಷ್ಯಕ್ಕಾಗಿ ರಕ್ತದ ಸಹಿ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಸಮಗ್ರ ಅಭಿವೃದ್ಧಿ, ಶಾಶ್ವತ ಕುಡಿಯುವ ನೀರಿನ ಪರಿಹಾರ, ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವುದು ಹಾಗೂ ರೈತರ ಹಿತದೃಷ್ಟಿಯಿಂದ ಗದಗ ಜಿಲ್ಲೆಯನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕೆಂಬ ಬೇಡಿಕೆಗಳನ್ನು ಮುಂದಿಟ್ಟುಕೊಂಡು 20ನೇ ವಾರ್ಡ್‌ನಲ್ಲಿ ರಕ್ತ ಸಹಿ ಅಭಿಯಾನ ನಡೆಯಿತು.

ಬಿಜೆಪಿ ಮುಖಂಡ ಮೋಹನ್ ವರವಿ ಅವರ ನೇತೃತ್ವದಲ್ಲಿ ನಡೆದ ಅಭಿಯಾನದಲ್ಲಿ ವಾರ್ಡ್‌ನ ನೂರಾರು ಯುವಕರು ಸ್ವಯಂಪ್ರೇರಿತರಾಗಿ ಪಾಲ್ಗೊಂಡು ರಕ್ತದಿಂದ ಸಹಿ ಮಾಡುವ ಮೂಲಕ ತಮ್ಮ ಬೇಡಿಕೆಗಳಿಗೆ ಬೆಂಬಲ ವ್ಯಕ್ತಪಡಿಸಿದರು.

ಗದಗದ ಅಭಿವೃದ್ಧಿ ಹಾಗೂ ಜನರ ಮೂಲಭೂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂಬ ಒತ್ತಾಯದೊಂದಿಗೆ ನಡೆಯುತ್ತಿರುವ ರಕ್ತ ಸಹಿ ಅಭಿಯಾನಕ್ಕೆ ದಿನದಿಂದ ದಿನಕ್ಕೆ ಯುವಕರ ಬೆಂಬಲ ಹೆಚ್ಚುತ್ತಿದೆ. ಇದು ಕೇವಲ ರಕ್ತದ ಸಹಿಯಲ್ಲ, ಗದಗದ ಅಭಿವೃದ್ಧಿಗಾಗಿ ಯುವಜನರ ಆಶಯ, ಸಂಕಲ್ಪ ಹಾಗೂ ಒಗ್ಗಟ್ಟಿನ ಪ್ರತೀಕವಾಗಿದೆ ಎಂದು ಅಭಿಯಾನಕಾರರು ತಿಳಿಸಿದರು.

ನಗರದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ, ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಹಾಗೂ ರೈತರ ಸಂಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು. ಜನರ ದೀರ್ಘಕಾಲದ ಬೇಡಿಕೆಗಳಿಗೆ ಕೇವಲ ಭರವಸೆ ನೀಡದೆ, ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಈ ಜನಪರ ಹೋರಾಟದ ಧ್ವನಿ ಸರ್ಕಾರ ಹಾಗೂ ಆಡಳಿತಗಾರರ ಗಮನಕ್ಕೆ ತಲುಪಿ, ಗದಗದ ಜನರ ನ್ಯಾಯಯುತ ಬೇಡಿಕೆಗಳಿಗೆ ಶೀಘ್ರ ಸ್ಪಂದನೆ ದೊರೆಯಲಿ ಎಂಬ ಆಶಯವನ್ನು ಅಭಿಯಾನಕಾರರು ವ್ಯಕ್ತಪಡಿಸಿದರು.

ಅಭಿಯಾನದಲ್ಲಿ ಪ್ರವೀಣ್ ಕರಬಿಷ್ಟಿ, ಮಂಜು ವರವಿ, ಮಲ್ಲು ಜಂತ್ಲಿ, ಮಂಜುನಾಥ ಜುಟ್ಲರ, ಪರಶುರಾಮ ಗೊಂದಿ, ಅಮಸಿದ್ದ ಗೌಡರ, ಅನಿಲ ಬಳ್ಳಾರಿ, ಮನೋಜ ಕಿರಟಗೇರಿ, ಲಕ್ಷ್ಮಣ ಮುರುಗೋಡ, ಪ್ರಶಾಂತ ವರವಿ, ಬಸವರಾಜ ಕಮತರ, ನಿಖಿಲ ಅಣ್ಣಿಗೇರಿ, ಪ್ರಕಾಶ ಬರಾಡ, ಸಮೀರ್ ಪಿತ್ತೂರು, ಕಿರಣ ಹುನಗುಂಡಿ, ಕುನಲ ಪವಾರ, ಸಚಿನ ಕಾಂಬಳೆ, ಲೋಕೇಶ ಹೂವಿನಹಡಗಲಿ, ಪ್ರಜ್ವಲ ಕರಿ, ಸಂತೋಷ ಕುರಿ, ನೂತನ ಮುರುಗೋಡ, ಶಿವು ಮುಳುಗುಂದ, ಸೋಹಿಲ ಮುಳುಗುಂದ, ಆರ್ಯನ ಬಾದಾಮಿ, ಉಮೇಶ್ ರೆಡ್ಡಿ ಹಳ್ಯಳ, ತನ್ಮಯ ದೊಡ್ಡಮನಿ, ಮದನ ಸಿಂಗ್ ರಜಪೂತ ಸೇರಿದಂತೆ ನೂರಾರು ಯುವಕರು ಪಾಲ್ಗೊಂಡಿದ್ದರು.

“ನಮಗೆ ಯಾರ ವಿರುದ್ಧವೂ ಹೋರಾಟವಿಲ್ಲ, ಗದಗದ ಅಭಿವೃದ್ಧಿಗಾಗಿ ನಮ್ಮ ಹೋರಾಟ. ನಮಗೆ ಬೇಕಿರುವುದು ಭರವಸೆ ಮಾತ್ರವಲ್ಲ—ನ್ಯಾಯ ಮತ್ತು ಶಾಶ್ವತ ಪರಿಹಾರ.”

– ಮೋಹನ್ ವರವಿ, ಬಿಜೆಪಿ ಮುಖಂಡ

ನಮ್ಮ ಬದುಕಿಗೂ ಬೆಲೆ ಕೊಡಿ

0

ವಿಜಯಸಾಕ್ಷಿ ಸುದ್ದಿ, ಗದಗ: ಗ್ರಾಮೀಣ ಜನರ ಮೂಲಭೂತ ಸೇವೆಗಳನ್ನು ನಿರಂತರವಾಗಿ ಒದಗಿಸುತ್ತಿರುವ ಗ್ರಾಮ ಪಂಚಾಯಿತಿ ನೌಕರರ ಬದುಕು ಮಾತ್ರ ಸಂಕಷ್ಟದಲ್ಲಿದೆ. ದಿನದಿಂದ ದಿನಕ್ಕೆ ಬೆಲೆ ಏರಿಕೆಯಾಗುತ್ತಿದ್ದರೂ ಕಳೆದ 7–8 ವರ್ಷಗಳಿಂದ ವೇತನ ಪರಿಷ್ಕರಣೆಯಾಗಿಲ್ಲ. ಹೀಗಾಗಿ ಬೆಲೆ ಏರಿಕೆಗೆ ತಕ್ಕಂತೆ ವೇತನ ಹೆಚ್ಚಿಸಿ, ನಮ್ಮ ಬದುಕಿಗೂ ಬೆಲೆ ನೀಡಿ ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ ನೌಕರರು, ಗ್ರಾಮ ಪಂಚಾಯಿತಿಗಳಲ್ಲಿ ಕರವಸೂಲಿಗಾರರು, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್‌ಗಳು, ನೀರುಗಂಟಿಗಳು, ಜವಾನರು ಹಾಗೂ ಸ್ವಚ್ಛತಾಗಾರರು ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ಸಮರ್ಪಕ ವೇತನ ದೊರೆಯುತ್ತಿಲ್ಲ. ಪ್ರಸ್ತುತ ವೇತನದಲ್ಲಿ ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಕುಟುಂಬ ನಿರ್ವಹಣೆ ಕಷ್ಟವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೇ 22, 2026ರಂದು ಹೊರಡಿಸಿರುವ ಆದೇಶದಂತೆ ಪರಿಷ್ಕೃತ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಗ್ರಾಮ ಪಂಚಾಯಿತಿ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಿ, ಸೇವಾ ಹಿರಿತನ ಆಧರಿಸಿ ಇನ್‌ಕ್ರಿಮೆಂಟ್ ನೀಡಬೇಕು ಎಂದು ಆಗ್ರಹಿಸಿದರು.

ನೌಕರರು ನಿವೃತ್ತಿ ಹೊಂದಿದಾಗ ಅಥವಾ ಮೃತಪಟ್ಟಾಗ ₹6 ಲಕ್ಷ ಇಡಗಂಟು ನೀಡಬೇಕು. ಗ್ರಾಮ ಪಂಚಾಯಿತಿ ಠರಾವಿನ ಮೂಲಕ ನೇಮಕಗೊಂಡು ಜಿಲ್ಲಾ ಪಂಚಾಯಿತಿಯಿಂದ ಅನುಮೋದನೆ ಪಡೆಯದ ಸಿಬ್ಬಂದಿಗೂ ಈ ಸೌಲಭ್ಯ ಕಲ್ಪಿಸಬೇಕು. ತರಬೇತಿ ಪಡೆದ ಸ್ವಚ್ಛವಾಹಿನಿ ನೌಕರರಿಗೆ ವೇತನ ನೀಡುವುದರ ಜತೆಗೆ ಒಡಂಬಡಿಕೆ ಹಾಗೂ ಪ್ರತಿವರ್ಷ ನವೀಕರಣ ಪದ್ಧತಿ ರದ್ದುಪಡಿಸಿ, 15ನೇ ಹಣಕಾಸಿನಡಿ ವೇತನ ಪಾವತಿಸಬೇಕು ಎಂದು ಒತ್ತಾಯಿಸಿದರು.

ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬ ಚಾಲಕನನ್ನು ಪರಿಗಣಿಸಿ ₹15 ಸಾವಿರ ವೇತನ ನಿಗದಿಪಡಿಸಬೇಕು. ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಮುಂದುವರಿಸಬೇಕು. ಕಂಪ್ಯೂಟರ್ ಜ್ಞಾನ ಮತ್ತು ವಿದ್ಯಾರ್ಹತೆ ಹೊಂದಿರುವ ಪಂಚಾಯಿತಿ ನೌಕರರಿಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಪಂಚಾಯಿತಿಯ ಆದಾಯಕ್ಕೆ ಅನುಗುಣವಾಗಿ ಕರವಸೂಲಿಗಾರರ ಹುದ್ದೆ ನಿಗದಿಪಡಿಸಿ, 2017ರೊಳಗೆ ನೇಮಕಗೊಂಡ ಹೆಚ್ಚುವರಿ ಕರವಸೂಲಿಗಾರರಿಗೆ ಅನುಮೋದನೆ ನೀಡಬೇಕು. ಖಾಲಿ ಇರುವ ಕರವಸೂಲಿಗಾರ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್, ನೀರುಗಂಟಿ, ಜವಾನ ಹಾಗೂ ಸ್ವಚ್ಛತಾಗಾರರ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.

ಗ್ರೇಡ್-1 ಕಾರ್ಯದರ್ಶಿಗಳಿಂದ ಪಿಡಿಒ ಹುದ್ದೆಗೆ ಜಿಲ್ಲಾ ಮಟ್ಟದಲ್ಲಿ ಮುಂಬಡ್ತಿಗೆ ಅವಕಾಶ ನೀಡಬೇಕು. ಪ್ರತಿ ಗ್ರಾಮ ಪಂಚಾಯಿತಿಗೆ ಲೆಕ್ಕ ಸಹಾಯಕ ಹುದ್ದೆ ಸೃಷ್ಟಿಸಬೇಕು. ಕೆಸಿಎಸ್‌ಆರ್ ನಿಯಮ 325ರನ್ವಯ ಹಿಂದಿನ ಸೇವೆಯನ್ನು ಪರಿಗಣಿಸಿ ಹಳೆ ಪಿಂಚಣಿ ಜಾರಿಗೊಳಿಸಬೇಕು. ಜನಸಂಖ್ಯೆ ಆಧರಿಸಿ ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸಿ, ಪಿಡಿಒ ಹುದ್ದೆಗಳಲ್ಲಿ ಶೇ.60ರಷ್ಟು ಸ್ಥಾನಗಳನ್ನು ಗ್ರೇಡ್-1 ಕಾರ್ಯದರ್ಶಿಗಳಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಶೀಘ್ರ ಈಡೇರಿಸಬೇಕು. ಇಲ್ಲವಾದಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಸಂಘದ ಪದಾಧಿಕಾರಿಗಳು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಜಿ.ಎಂ. ಜೈನಖಾನ್, ಪ್ರಧಾನ ಕಾರ್ಯದರ್ಶಿ, ರುದ್ರಪ್ಪ ಕಂದಗಲ್ಲ ಹಾಗೂ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಮತ್ತು ಸಿಐಟಿಯು ಪದಾಧಿಕಾರಿಗಳು ಉಪಸ್ಥಿತರಿದ್ದರು.

“ಕಳೆದ 7–8 ವರ್ಷಗಳಿಂದ ವೇತನ ಪರಿಷ್ಕರಣೆಯಾಗಿಲ್ಲ. ಇಂದಿನ ಬೆಲೆ ಏರಿಕೆಯ ಪರಿಸ್ಥಿತಿಯಲ್ಲಿ ಈಗಿರುವ ವೇತನದಲ್ಲಿ ಮಕ್ಕಳ ಶಿಕ್ಷಣ, ಆರೋಗ್ಯ ಸೇರಿದಂತೆ ಕುಟುಂಬ ನಿರ್ವಹಣೆ ಸಾಧ್ಯವಾಗುತ್ತಿಲ್ಲ. ಬೆಲೆ ಏರಿಕೆಗೆ ಅನುಗುಣವಾಗಿ ಪರಿಷ್ಕೃತ ವೇತನವನ್ನು ಕೂಡಲೇ ಬಿಡುಗಡೆ ಮಾಡಿ, ದುಡಿಯುವ ಗ್ರಾಮ ಪಂಚಾಯಿತಿ ನೌಕರರ ಬದುಕಿಗೆ ಸರ್ಕಾರ ನ್ಯಾಯ ಒದಗಿಸಬೇಕು.”

— ಎಂ.ಬಿ. ನಾಡಗೌಡ, ಸಂಘದ ಮುಖಂಡ

ಪಿಓಪಿ ಗಣೇಶನಿಗೆ ನೋ ಎಂಟ್ರಿ

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ಗಣೇಶ ಹಬ್ಬದ ಸಂಭ್ರಮದ ಹೆಸರಿನಲ್ಲಿ ಪರಿಸರಕ್ಕೆ ಹಾನಿ ಮಾಡುವ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಗಣೇಶ ಮೂರ್ತಿಗಳಿಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಜಿಲ್ಲೆಯಲ್ಲಿ ಪಿಓಪಿ ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟ, ಸಂಗ್ರಹಣೆ ಹಾಗೂ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಂಗಣದಲ್ಲಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪಿಓಪಿ ಹಾಗೂ ರಾಸಾಯನಿಕ ಅಂಶಗಳಿರುವ ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟ ಮತ್ತು ವಿಸರ್ಜನೆ ನಿಷೇಧ, ಡಿಜೆ ಸೌಂಡ್ ಸಿಸ್ಟಮ್ ಹಾಗೂ ಹಸಿರು ಪಟಾಕಿಗಳ ಬಳಕೆ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಗಣೇಶ ಹಬ್ಬದ ಸಂದರ್ಭದಲ್ಲಿ ಮಿತಿ ಮೀರಿದ ಡಿಜೆ ಸೌಂಡ್ ಸಿಸ್ಟಮ್ ಬಳಕೆ ಕಂಡುಬಂದರೆ ಉಪಕರಣ ಜಪ್ತಿ ಮಾಡಿ ₹1 ಲಕ್ಷದವರೆಗೆ ದಂಡ ವಿಧಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಡಿಜೆ ಸದ್ದಿನಿಂದ ವೃದ್ಧರು, ಚಿಕ್ಕ ಮಕ್ಕಳು ಹಾಗೂ ಗರ್ಭಿಣಿಯರಿಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ಡಿಜೆ ಬದಲಿಗೆ ಡೊಳ್ಳು ಕುಣಿತ, ಹೆಜ್ಜೆ ಮೇಳ, ಕರಡಿ ಮಜಲು ಸೇರಿದಂತೆ ಸಾಂಪ್ರದಾಯಿಕ ಜನಪದ ಕಲೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದರು.

ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಪಿಓಪಿ ಗಣೇಶ ಮೂರ್ತಿಗಳ ಮಾರಾಟಕ್ಕೆ ಅವಕಾಶ ನೀಡಬಾರದು. ಅಧಿಕಾರಿಗಳು ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ದಿಢೀರ್ ದಾಳಿ ನಡೆಸಿ ಪಿಓಪಿ ಮೂರ್ತಿಗಳು ಕಂಡುಬಂದರೆ ತಕ್ಷಣ ವಶಪಡಿಸಿಕೊಳ್ಳಬೇಕು. ನಿಯಮ ಉಲ್ಲಂಘಿಸುವ ಮಾರಾಟಗಾರರ ವಿರುದ್ಧ ದಂಡ ವಿಧಿಸಬೇಕು ಎಂದು ಸೂಚಿಸಿದರು.

ಪಿಓಪಿ ಮೂರ್ತಿಗಳು ಬೇರೆ ಜಿಲ್ಲೆಗಳಿಂದ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಜಿಲ್ಲೆಯ ಗಡಿ ಹಾಗೂ ಮಹಾನಗರದ ಗಡಿಭಾಗಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ಕಟ್ಟುನಿಟ್ಟಿನ ತಪಾಸಣೆ ನಡೆಸುವಂತೆ ಸೂಚಿಸಲಾಗಿದೆ. ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದು, ನಿಯಮ ಉಲ್ಲಂಘಿಸಿ ಸಾಗಾಟ ಮಾಡುವ ವಾಹನಗಳು ಹಾಗೂ ಪಿಓಪಿ ಮೂರ್ತಿಗಳನ್ನು ವಶಪಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು.

ಪೊಲೀಸ್ ಇಲಾಖೆ, ಪರಿಸರ ಇಲಾಖೆ, ಕಂದಾಯ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿರಂತರ ತಪಾಸಣೆ ನಡೆಸಬೇಕು. ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳ ಬಳಕೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ವೇಳೆ ಮೆರವಣಿಗೆಯ ಮಾರ್ಗವನ್ನು ಮುಂಚಿತವಾಗಿ ಪೊಲೀಸ್ ಠಾಣೆಗೆ ತಿಳಿಸಬೇಕು. ಮಾರ್ಗ ಬದಲಾವಣೆ ಇದ್ದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು. ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಇನ್ನು ಗಣೇಶ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ನಿಯಮಾನುಸಾರ ಬಳಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಪಟಾಕಿ ಸಿಡಿಸಬೇಕು. ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಹಬ್ಬ ಆಚರಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಎಸ್. ಘಾಳಿ ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಚಲನಚಿತ್ರ ಹಾಡುಗಳನ್ನು ಹಾಕದೆ ದೇವರ ನಾಮಾವಳಿಗಳನ್ನು ಬಳಸಬೇಕು. ಲೇಸರ್ ಲೈಟ್‌ಗಳನ್ನು ಬಳಸಬಾರದು ಎಂದು ಸೂಚಿಸಿದರು.

ಪಾಲಿಕೆ ನಿಯೋಜಿಸಿರುವ ಸಾರ್ವಜನಿಕ ನೀರಿನ ತೊಟ್ಟಿಗಳಲ್ಲಿಯೇ ಗಣೇಶ ಮೂರ್ತಿಗಳನ್ನು ಕಡ್ಡಾಯವಾಗಿ ವಿಸರ್ಜಿಸಬೇಕು. ಮಣ್ಣಿನ ಗಣೇಶ ಮೂರ್ತಿ ತಯಾರಕರಿಗೆ ಪಾಲಿಕೆಯಿಂದ ₹25 ಸಾವಿರ ಪ್ರೋತ್ಸಾಹ ಧನ ಹಾಗೂ ಸನ್ಮಾನ ನೀಡಲಾಗುವುದು. ಮನೆಗಳಲ್ಲಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಸಾರ್ವಜನಿಕರು ಗಣೇಶನ ಛಾಯಾಚಿತ್ರವನ್ನು ಪಾಲಿಕೆಗೆ ಸಲ್ಲಿಸಿದರೆ ಪ್ರಮಾಣಪತ್ರ ನೀಡಲಾಗುವುದು ಎಂದು ತಿಳಿಸಿದರು.

ಮಣ್ಣಿನ ಗಣೇಶ ಮೂರ್ತಿಗಳನ್ನು ಮನೆಯಲ್ಲಿ ಒಂದು ಬಕೆಟ್ ನೀರಿನಲ್ಲಿ ವಿಸರ್ಜಿಸಿ, ಅದೇ ಮಣ್ಣಿನಿಂದ ಗಿಡ-ಸಸಿಗಳನ್ನು ಬೆಳೆಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಸಭೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಶೋಭಾ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣೇಶ ಮೂರ್ತಿ ತಯಾರಕರು, ಮಾರಾಟಗಾರರು ಹಾಗೂ ಪಟಾಕಿ ಮಾರಾಟಗಾರರು ಭಾಗವಹಿಸಿದ್ದರು.

“ಹಬ್ಬ ಆಚರಿಸುವುದು ನಮ್ಮ ಸಂಸ್ಕೃತಿಯ ಹೆಮ್ಮೆ. ಆದರೆ ಅದು ಪರಿಸರ ಸ್ನೇಹಿಯಾಗಿರಬೇಕು. ನೈಸರ್ಗಿಕ ಮಣ್ಣಿನಿಂದ ತಯಾರಿಸಿದ, ಸುಲಭವಾಗಿ ನೀರಿನಲ್ಲಿ ಕರಗುವ ಗಣೇಶ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ. ನಮ್ಮ ಹಬ್ಬ, ನಮ್ಮ ಪರಿಸರ, ನಮ್ಮ ಜವಾಬ್ದಾರಿ. ಸಾರ್ವಜನಿಕರ ಸಹಕಾರವಿಲ್ಲದೆ ಜಿಲ್ಲಾಡಳಿತದ ಈ ಕಾರ್ಯ ಸಂಪೂರ್ಣ ಯಶಸ್ವಿಯಾಗಲು ಸಾಧ್ಯವಿಲ್ಲ.”

— ಸ್ನೇಹಲ್ ಆರ್., ಜಿಲ್ಲಾಧಿಕಾರಿ

ಕನಿಷ್ಠ ವೇತನ ತಡೆಗೆ ಗ್ರಾಪಂ ನೌಕರರ ಆಕ್ರೋಶ

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ಪರಿಷ್ಕರಿಸಿ ಪ್ರಕಟಿಸಿದ್ದ ಕನಿಷ್ಠ ವೇತನದ ಅಧಿಸೂಚನೆಯನ್ನು ತಡೆಹಿಡಿದಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮ ಪಂಚಾಯಿತಿ ಹಾಗೂ ಸ್ವಚ್ಛವಾಹಿನಿ ನೌಕರರು, ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವಂತೆ ಆಗ್ರಹಿಸಿ ಮಂಗಳವಾರ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ (ಸಿಐಟಿಯು) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಸಿಐಟಿಯು ರಾಜ್ಯ ಕಾರ್ಯದರ್ಶಿ ಮಹೇಶ ಪತ್ತಾರ, ಕನಿಷ್ಠ ವೇತನ ವ್ಯಾಪ್ತಿಗೆ ಬರುವ ಕೋಟ್ಯಂತರ ಕಾರ್ಮಿಕರ ವೇತನ ಪರಿಷ್ಕರಣೆ 2016ರಿಂದ ಬಾಕಿ ಉಳಿದಿತ್ತು. ಕಾರ್ಮಿಕರು ಹಾಗೂ ಸಂಘಟನೆಗಳ ನಿರಂತರ ಹೋರಾಟದ ಬಳಿಕ ಕನಿಷ್ಠ ವೇತನ ನಿಗದಿಪಡಿಸಿ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಜಾರಿಗೆ ಬರುವ ಹಂತದಲ್ಲಿ ಅದನ್ನು ತಡೆಹಿಡಿದಿರುವುದು ಕಾರ್ಮಿಕರಿಗೆ ಮಾಡಿದ ಅನ್ಯಾಯ ಎಂದು ಕಿಡಿಕಾರಿದರು.

ಸುಪ್ರೀಂಕೋರ್ಟ್ ನಿರ್ದೇಶನದಂತೆ ನ್ಯಾಯಬದ್ಧ ಕನಿಷ್ಠ ವೇತನ ನಿಗದಿಪಡಿಸುವಂತೆ ಹೈಕೋರ್ಟ್ ಸೂಚಿಸಿತ್ತು. ಇದರ ಆಧಾರದಲ್ಲಿ ರಾಜ್ಯ ಕನಿಷ್ಠ ವೇತನ ಸಲಹಾ ಸಮಿತಿ ಮೂರು–ನಾಲ್ಕು ವರ್ಷಗಳ ಕಾಲ ಹಲವು ಸಭೆಗಳನ್ನು ನಡೆಸಿ, ಬೆಲೆ ಏರಿಕೆ ಸೂಚ್ಯಂಕಗಳನ್ನು ಆಧರಿಸಿ ರಾಜ್ಯವನ್ನು ಮೂರು ವಲಯಗಳಾಗಿ ವಿಂಗಡಿಸಿ ಕನಿಷ್ಠ ವೇತನ ನಿಗದಿಪಡಿಸಿತ್ತು. ಆದರೆ ಅಧಿಸೂಚನೆ ಜಾರಿ ಹಂತಕ್ಕೆ ಬಂದ ಬಳಿಕ ತಡೆಹಿಡಿದಿರುವುದು ಕಾರ್ಮಿಕರ ಹಿತಕ್ಕೆ ವಿರುದ್ಧವಾಗಿದೆ ಎಂದು ಅವರು ಹೇಳಿದರು.

ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸಬೇಕು. ಮರುಪರಿಷ್ಕರಣೆಗಾಗಿ ರಚಿಸಿರುವ ಸಚಿವ ಸಂಪುಟ ಉಪಸಮಿತಿಯನ್ನು ರದ್ದುಪಡಿಸಬೇಕು. ಸೇವಾ ಹಿರಿತನಕ್ಕೆ ಅನುಗುಣವಾಗಿ ವೇತನ ಹೆಚ್ಚಳ, ವಿವಿಧ ಭತ್ಯೆಗಳ ಹೆಚ್ಚಳ, ಇಡಗಂಟು, ಆರೋಗ್ಯ ವಿಮೆ ಹಾಗೂ ಗ್ರಾಚ್ಯುಟಿ ಸೌಲಭ್ಯಗಳನ್ನು ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇದರೊಂದಿಗೆ ತರಬೇತಿ ಪಡೆದಿರುವ ಎಲ್ಲ ಸ್ವಚ್ಛವಾಹಿನಿ ನೌಕರರಿಗೆ ಕೆಲಸ ಹಾಗೂ ವೇತನ ನೀಡಬೇಕು. ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಸಾಮಾಜಿಕ ಭದ್ರತೆ ಕಲ್ಪಿಸಬೇಕು. ಕನಿಷ್ಠ ವೇತನ ಜಾರಿ ವಿಳಂಬಗೊಳಿಸದೆ ಸರ್ಕಾರ ಕೂಡಲೇ ತನ್ನ ನಿರ್ಧಾರವನ್ನು ಮರುಪರಿಶೀಲಿಸಿ ಕಾರ್ಮಿಕರ ಪರವಾಗಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭುವನೇಶ ಪಾಟೀಲ ಮಾತನಾಡಿ, ಜಿಲ್ಲಾ ಹಂತದಲ್ಲಿ ಪರಿಹರಿಸಬಹುದಾದ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಲು ಪ್ರಯತ್ನಿಸಲಾಗುವುದು. ಉಳಿದ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ಕಳುಹಿಸಲಾಗುವುದು ಎಂದು ಭರವಸೆ ನೀಡಿದರು.

ಪ್ರತಿಭಟನೆಯ ನೇತೃತ್ವವನ್ನು ಸಿಐಟಿಯು ಜಿಲ್ಲಾಧ್ಯಕ್ಷ ಬಿ.ಐ. ಈಳಿಗೇರ, ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ ಹುಜರಾತಿ, ಪ್ರಧಾನ ಕಾರ್ಯದರ್ಶಿ ಮಹೇಶ ಹುಲಗೋಡ, ವಿ.ಸಿ. ತುಪ್ಪದಗೌಡ್ರ, ನೀಲವ್ವ ಕುರುಬರ, ಎನ್.ಎಂ. ಪಾಟೀಲ ಸೇರಿದಂತೆ ಪದಾಧಿಕಾರಿಗಳು ವಹಿಸಿದ್ದರು.

“ಪರಿಷ್ಕೃತ ಕನಿಷ್ಠ ವೇತನ ಜಾರಿಯಾಗುವ ಹಂತದಲ್ಲಿತ್ತು. ಆದರೆ ಸರ್ಕಾರ ಅಧಿಸೂಚನೆ ತಡೆಹಿಡಿದಿರುವುದು ಕಾರ್ಮಿಕರ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಒಂದು ಕೋಟಿಗೂ ಅಧಿಕ ಶ್ರಮಜೀವಿಗಳ ಬದುಕಿನ ಮೇಲೆ ಇದು ಮಹಾದ್ರೋಹವಾಗಿದೆ.”

ಮಹೇಶ ಪತ್ತಾರ, ರಾಜ್ಯ ಕಾರ್ಯದರ್ಶಿ, ಸಿಐಟಿಯು

ಶ್ರದ್ಧಾ–ಭಕ್ತಿಯಿಂದ ನಾಗರ ಪಂಚಮಿ ಆಚರಣೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ನಾಗರ ಪಂಚಮಿ ನಾಡಿಗೆ ದೊಡ್ಡದು ಎಂಬಂತೆ ಶ್ರಾವಣ ಮಾಸದ ನಾಗರ ಪಂಚಮಿ ಹಬ್ಬವನ್ನು ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಭಾನುವಾರ ಶ್ರದ್ಧಾ–ಭಕ್ತಿಯಿಂದ ಆಚರಿಸಲಾಯಿತು. ಮಹಿಳೆಯರು, ಮಕ್ಕಳು ಹೊಸ ಬಟ್ಟೆ ಧರಿಸಿ ನಾಗದೇವರ ಮೂರ್ತಿಗಳಿಗೆ ಹಾಲೆರೆಯುವ ಮೂಲಕ ಪೂಜೆ ಸಲ್ಲಿಸಿ, ಕುಟುಂಬದ ಸುಖ, ಆರೋಗ್ಯ, ಐಶ್ವರ್ಯ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.

ಹಬ್ಬದ ಅಂಗವಾಗಿ ಬೆಳಗ್ಗೆಯಿಂದಲೇ ಮನೆಗಳ ಮುಂದೆ ನಾಗದೇವರ ರಂಗೋಲಿ ಬಿಡಿಸಿ ಪೂಜೆ ಸಲ್ಲಿಸಲಾಯಿತು. ಬಳಿಕ ಮಹಿಳೆಯರು ಹಾಗೂ ಮಕ್ಕಳು ಓಣಿಗಳಲ್ಲಿರುವ ಕಲ್ಲಿನ ನಾಗಮೂರ್ತಿಗಳಿಗೆ ಹಾಲು, ಹೂವು ಅರ್ಪಿಸಿ ಭಕ್ತಿ ಸಮರ್ಪಿಸಿದರು. ಮನೆಗಳಲ್ಲಿ ಉಂಡೆ, ಚಕ್ಕುಲಿ ಸೇರಿದಂತೆ ವಿವಿಧ ಸಾಂಪ್ರದಾಯಿಕ ತಿನಿಸುಗಳನ್ನು ತಯಾರಿಸಿ ನಾಗದೇವರಿಗೆ ನೈವೇದ್ಯ ಅರ್ಪಿಸಲಾಯಿತು.

ಪಟ್ಟಣದ ಬಸ್ತಿಕೇರಿ, ಹಳ್ಳದಕೇರಿ, ಸೊಪ್ಪಿನಕೇರಿ, ಅಂಬೇಡ್ಕರ್ ನಗರ, ವಿನಾಯಕನಗರ, ಈಶ್ವರನಗರ, ಇಂದಿರಾನಗರ ಹಾಗೂ ನೂತನ ಬಡಾವಣೆಗಳಲ್ಲಿ ಮನೆಮನೆಗಳಲ್ಲಿ ಹಬ್ಬದ ಸಂಭ್ರಮ ಕಂಡುಬಂತು.

ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಸವಣೂರು ರಸ್ತೆಯಲ್ಲಿರುವ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ನೂರಾರು ಮಹಿಳೆಯರು ಹಾಗೂ ಮಕ್ಕಳು ನಾಗದೇವರಿಗೆ ಹಾಲೆರೆಯುವ ಮೂಲಕ ವಿಶೇಷ ಪೂಜೆ ಸಲ್ಲಿಸಿದರು. ಬೆಳಗ್ಗೆಯಿಂದಲೇ ದೇವಸ್ಥಾನಕ್ಕೆ ಭಕ್ತರ ದಂಡೇ ಹರಿದುಬಂದಿತ್ತು. ಹಾಲು, ಹೂವು ಹಾಗೂ ವಿವಿಧ ನೈವೇದ್ಯ ಅರ್ಪಿಸಿ ಭಕ್ತರು ಪೂಜೆ ನೆರವೇರಿಸಿದರು.

ಕೆಲವು ಕಡೆ ಮರಗಳಿಗೆ ಜೋಕಾಲಿ ಕಟ್ಟಿ ಮಹಿಳೆಯರು ಹಾಗೂ ಮಕ್ಕಳು ಸಂಭ್ರಮದಿಂದ ಜೋಕಾಲಿ ಆಡಿ ಹಬ್ಬ ಆಚರಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಜಾನಪದ ಆಟಗಳು ಹಾಗೂ ವಿವಿಧ ಸಾಂಪ್ರದಾಯಿಕ ಆಚರಣೆಗಳು ಗಮನ ಸೆಳೆದವು. ಆದರೆ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಓಣಿಗಳಲ್ಲಿ ಜೋಕಾಲಿ ಕಟ್ಟುವ ಸಂಪ್ರದಾಯ ಕಡಿಮೆಯಾಗುತ್ತಿರುವುದು ಕಂಡುಬಂತು.

ಮನೆಮನೆಗಳಲ್ಲಿ ಸಾಂಪ್ರದಾಯಿಕ ನೈವೇದ್ಯ

ನಾಗರ ಪಂಚಮಿ ನಿಮಿತ್ತ ಮಹಿಳೆಯರು ಮನೆಗಳಲ್ಲಿ ವಿವಿಧ ಸಾಂಪ್ರದಾಯಿಕ ಖಾದ್ಯಗಳನ್ನು ತಯಾರಿಸಿ ನೈವೇದ್ಯ ಅರ್ಪಿಸಿದರು. ಕುಟುಂಬದ ಬಂಧು–ಬಳಗದ ಹೆಸರನ್ನು ಸ್ಮರಿಸಿ ನಾಗಮೂರ್ತಿಗೆ ಹಾಲೆರೆಯುವ ಮೂಲಕ ಕುಟುಂಬಕ್ಕೆ ಸುಖ–ಸಂತೋಷ, ಆರೋಗ್ಯ ಹಾಗೂ ಸಮೃದ್ಧಿ ಕರುಣಿಸುವಂತೆ ಪ್ರಾರ್ಥಿಸಿದರು. ಕೆಲವೆಡೆ ಮಹಿಳೆಯರು ಮನೆಮನೆಗೆ ತೆರಳಿ ಪರಸ್ಪರ ರೊಟ್ಟಿ ಹಂಚಿಕೊಂಡು ಹಬ್ಬ ಆಚರಿಸಿದರು.

ಹಬ್ಬದ ಹಿನ್ನೆಲೆಯಲ್ಲಿ ಕಳೆದ ಮೂರು–ನಾಲ್ಕು ದಿನಗಳಿಂದಲೇ ಹೊಸ ಬಟ್ಟೆ, ದಿನಸಿ, ಹೂವು, ಹಣ್ಣು ಸೇರಿದಂತೆ ಅಗತ್ಯ ವಸ್ತುಗಳ ಖರೀದಿ ಭರಾಟೆ ಜೋರಾಗಿತ್ತು. ಇದರಿಂದ ಪಟ್ಟಣದ ಮಾರುಕಟ್ಟೆ ಪ್ರದೇಶಗಳಲ್ಲಿ ಜನಜಂಗುಳಿ ಕಂಡುಬಂತು.

ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಎಚ್ಚರ: ಸುಜಾತ ಮಠಪತಿ

0

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಮಕ್ಕಳಿಗೆ ಮೊಬೈಲ್ ನೀಡುವಾಗ ಪೋಷಕರು ಎಚ್ಚರಿಕೆ ವಹಿಸಿ, ಅವರ ಚಟುವಟಿಕೆಗಳ ಬಗ್ಗೆ ಗಮನ ಹರಿಸಬೇಕು ಎಂದು ಸಖಿ ಒನ್ ಸ್ಟಾಪ್ ಕೇಂದ್ರದ ಆಡಳಿತಾಧಿಕಾರಿ ಸುಜಾತ ಮಠಪತಿ ಹೇಳಿದರು.

ದಾನಚಿಂತಾಮಣಿ ಅತ್ತಿಮಬ್ಬೆ ವಿವಿಧೋದ್ದೇಶಗಳ ಮಹಿಳಾ ಸಂಘದಿಂದ ಸ್ವಾಮಿ ವಿವೇಕಾನಂದ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಕಾನೂನು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಕ್ಕಳಿಗೆ ಮನೆಯಲ್ಲಿ ಪೌಷ್ಟಿಕ ಆಹಾರ ನೀಡಬೇಕು. ದಾಂಪತ್ಯದಲ್ಲಿ ಮನಸ್ತಾಪ ಉಂಟಾದಾಗ ತಾಳ್ಮೆಯಿಂದ ವರ್ತಿಸಬೇಕು. ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಹಾಗೂ ಮಕ್ಕಳಿಗೆ ಸಖಿ ಒನ್ ಸ್ಟಾಪ್ ಕೇಂದ್ರದಿಂದ ವೈದ್ಯಕೀಯ ಚಿಕಿತ್ಸೆ, ಕಾನೂನು ನೆರವು, ಆಪ್ತ ಸಮಾಲೋಚನೆ, ಪೊಲೀಸ್ ನೆರವು ಹಾಗೂ ತಾತ್ಕಾಲಿಕ ವಸತಿ ಸೇರಿದಂತೆ ಐದು ಉಚಿತ ಸೌಲಭ್ಯಗಳು ದೊರೆಯುತ್ತವೆ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯೆ ವಕೀಲೆ ಮಂಜುಳಾ ಸ್ವಾಮಿ ಮಾತನಾಡಿ, ಮಹಿಳೆಯರು ಸಂವಿಧಾನ ಹಾಗೂ ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದಬೇಕು. ದೌರ್ಜನ್ಯಕ್ಕೊಳಗಾದವರು ಯಾವುದೇ ಭಯವಿಲ್ಲದೆ ಉಚಿತ ಕಾನೂನು ನೆರವು ಪಡೆಯಬೇಕು ಎಂದು ಸಲಹೆ ನೀಡಿದರು.

ಸಂಘದ ಅಧ್ಯಕ್ಷೆ ಲಲಿತಾ ಗೌಡರ, ಶಾಂತಮ್ಮ ನಂದಪ್ಪನವರ, ಮಮತಾಜ ಬೇಗಂ ನದಾಫ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಶಿಕ್ಷಕಿ ದ್ರಾಕ್ಷಾಯಿಣಿ ರಾಯಣ್ಣವರ ನಿರೂಪಿಸಿ ವಂದಿಸಿದರು.

“ಮಹಿಳೆಯರು ಮೊಬೈಲ್, ಟಿ.ವಿ.ಯಲ್ಲಿ ಹೆಚ್ಚು ಸಮಯ ಕಳೆಯದೆ ಮಕ್ಕಳಿಗೆ ಸಮಯ ನೀಡಿ, ಅವರ ಚಟುವಟಿಕೆಗಳ ಬಗ್ಗೆ ಗಮನಹರಿಸಬೇಕು.” ಎಂದು ಸುಜಾತ ಮಠಪತಿ ಹೇಳಿದರು.

— ಸುಜಾತ ಮಠಪತಿ