Home Blog

ಹೈಕೋರ್ಟ್ ಮಾರ್ಗಸೂಚಿ ಪಾಲಿಸದ ಪೊಲೀಸರಿಗೆ ಮುಖಭಂಗ! ಸೈಲೆಂಟ್ ಸುನಿಲ್ ಸೇರಿ 66 ಮಂದಿ ರೌಡಿಪಟ್ಟಿಯಿಂದ ಔಟ್

ಬೆಂಗಳೂರು: ಪೊಲೀಸ್ ಇಲಾಖೆಯ ದಾಖಲೆ ನಿರ್ವಹಣೆಯಲ್ಲಿನ ಲೋಪ ಮತ್ತು ನ್ಯಾಯಾಲಯದ ಮಾರ್ಗಸೂಚಿ ಪಾಲನೆಯ ಕೊರತೆಯಿಂದ ರಾಜ್ಯದ ಹಲವು ಕುಖ್ಯಾತ ರೌಡಿಶೀಟರ್‌ಗಳು ರೌಡಿಪಟ್ಟಿಯಿಂದ ಹೊರಬಂದಿರುವ ಪ್ರಕರಣ ಬೆಳಕಿಗೆ ಬಂದಿದೆ.

ಮಾಹಿತಿಯ ಪ್ರಕಾರ, 2022ರಲ್ಲಿ ಕರ್ನಾಟಕ ಹೈಕೋರ್ಟ್ ರೌಡಿಪಟ್ಟಿ ತೆರೆಯುವ ಹಾಗೂ ಮುಕ್ತಾಯಗೊಳಿಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸ್ಪಷ್ಟ ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಆದರೆ, ಈ ಮಾರ್ಗಸೂಚಿಗಳನ್ನು ಸಮರ್ಪಕವಾಗಿ ಪಾಲಿಸದ ಹಿನ್ನೆಲೆಯಲ್ಲಿ ಪೊಲೀಸ್ ದೂರು ಪ್ರಾಧಿಕಾರವು 66 ರೌಡಿಶೀಟರ್‌ಗಳನ್ನು ರೌಡಿಪಟ್ಟಿಯಿಂದ ಕೈಬಿಡುವಂತೆ ಆದೇಶ ನೀಡಿದೆ ಎನ್ನಲಾಗಿದೆ.

ಇದರಲ್ಲಿ ಕುಖ್ಯಾತ ರೌಡಿಶೀಟರ್‌ಗಳಾದ ಸುನಿಲ್ ಕುಮಾರ್ ಅಲಿಯಾಸ್ ಸೈಲೆಂಟ್ ಸುನಿಲ್ ಹಾಗೂ ರೋಹಿತ್ ಅಲಿಯಾಸ್ ಒಂಟೆ ರೋಹಿತ್ ಸೇರಿದಂತೆ ಒಟ್ಟು 66 ಮಂದಿ ಹೆಸರುಗಳು ಸೇರಿವೆ.

ರೌಡಿಪಟ್ಟಿಯಿಂದ ಹೆಸರು ತೆಗೆಯುವಂತೆ ಸೈಲೆಂಟ್ ಸುನಿಲ್ ಹಲವು ಬಾರಿ ಪೊಲೀಸ್ ದೂರು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದರು. ಅದರಂತೆ ಮೇ 19ರಂದು ನಡೆದ ಸಭೆಯಲ್ಲಿ ಅಮೃತಹಳ್ಳಿ ಪೊಲೀಸ್ ಠಾಣೆಯ ರೌಡಿಪಟ್ಟಿಯಿಂದ ಅವರ ಹೆಸರನ್ನು ಕೈಬಿಡುವಂತೆ ಆದೇಶಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಬೆಳವಣಿಗೆ ಪೊಲೀಸ್ ಇಲಾಖೆಗೆ ಮುಜುಗರ ಉಂಟುಮಾಡಿದ್ದು, ನ್ಯಾಯಾಲಯದ ಸೂಚನೆಗಳನ್ನು ಪಾಲಿಸುವಲ್ಲಿ ಇಲಾಖೆ ಎಡವಿದೆಯೇ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.

ಇತ್ತೀಚೆಗೆ ರಾಜ್ಯದಲ್ಲಿ ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರ ಸೂಚಿಸಿದ್ದರೂ, ಮತ್ತೊಂದೆಡೆ 66 ರೌಡಿಶೀಟರ್‌ಗಳು ರೌಡಿಪಟ್ಟಿಯಿಂದ ಹೊರಬಂದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಈ ಕುರಿತು ಪೊಲೀಸ್ ಇಲಾಖೆ ಹಾಗೂ ಸರ್ಕಾರದಿಂದ ಅಧಿಕೃತ ಸ್ಪಷ್ಟನೆ ನಿರೀಕ್ಷಿಸಲಾಗಿದೆ.

ನಡುರಾತ್ರಿ ಕಾಂಡಿಮೆಂಟ್ಸ್‌ನಲ್ಲಿ ಕಳ್ಳರ ಅಟ್ಟಹಾಸ: ಹಣ ದೋಚಿ ಮೂತ್ರ ವಿಸರ್ಜನೆ ಮಾಡಿದ ಖದೀಮರು!

ಬೆಂಗಳೂರು: ಸರ್ಜಾಪುರದಲ್ಲಿ ನಡುರಾತ್ರಿ ಕಾಂಡಿಮೆಂಟ್ಸ್‌ಗೆ ನುಗ್ಗಿದ ಇಬ್ಬರು ಕಳ್ಳರು ನಗದು ಹಣ ಹಾಗೂ ಗುಟ್ಕಾ ಪಾಕೆಟ್‌ಗಳನ್ನು ಕಳವು ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.

ಕಳ್ಳರ ಕೃತ್ಯ ಸಂಪೂರ್ಣವಾಗಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

ಮದ್ಯದ ಅಮಲಿನಲ್ಲಿದ್ದ ಇಬ್ಬರು ಕಳ್ಳರು, ಕಾಂಡಿಮೆಂಟ್ಸ್‌ನ ಬಾಗಿಲಿನ ಬೀಗ ಒಡೆದು ಒಳನುಗ್ಗಿದ್ದಾರೆ. ಬಳಿಕ ಕ್ಯಾಶ್ ಕೌಂಟರ್‌ನಲ್ಲಿದ್ದ ಹಣವನ್ನು ಕದ್ದಿರುವುದಲ್ಲದೆ, ಅಂಗಡಿಯಲ್ಲಿದ್ದ ಗುಟ್ಕಾ ಪಾಕೆಟ್‌ಗಳನ್ನೂ ಕಳವು ಮಾಡಿದ್ದಾರೆ ಎನ್ನಲಾಗಿದೆ.

ಇಷ್ಟೇ ಅಲ್ಲದೆ, ಅಂಗಡಿಯೊಳಗೆ ನುಗ್ಗಿದ ಕಳ್ಳರು ಕ್ಯಾಶ್ ಕೌಂಟರ್ ಸಮೀಪ ಮೂತ್ರ ವಿಸರ್ಜನೆ ಮಾಡಿ ದುರ್ವರ್ತನೆ ತೋರಿದ್ದಾರೆ. ಸುಮಾರು 20 ನಿಮಿಷಗಳ ಕಾಲ ಅಂಗಡಿಯೊಳಗೆ ಕಾಲಹರಣ ಮಾಡಿದ ಬಳಿಕ ಇಬ್ಬರೂ ಸ್ಥಳದಿಂದ ಪರಾರಿಯಾಗಿದ್ದಾರೆ.

ಬೆಳಗ್ಗೆ ಅಂಗಡಿ ಮಾಲೀಕರು ಬಂದಾಗ ಕಳವು ನಡೆದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಸರ್ಜಾಪುರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ.

ಕಳ್ಳತನ ನಡೆಸಿದ ಇಬ್ಬರನ್ನು ಶೀಘ್ರ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಹಾಗೂ ಅಂಗಡಿ ಮಾಲೀಕರು ಪೊಲೀಸರಿಗೆ ಮನವಿ ಮಾಡಿದ್ದಾರೆ.

ವಿಜಯ್–ಸಂಗೀತಾ ವಿಚ್ಛೇದನ ಪ್ರಕರಣಕ್ಕೆ ಟ್ವಿಸ್ಟ್: ಚೆಂಗಲ್ಪಟ್ಟು ಕೋರ್ಟ್‌ನಲ್ಲಿ ಇಂದು ಹೈ-ಪ್ರೊಫೈಲ್ ವಿಚಾರಣೆ

ಚೆನ್ನೈ: ತಮಿಳುನಾಡು ಸಿಎಂ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ನಡುವಿನ ವಿಚ್ಛೇದನ ಪ್ರಕರಣ ಇಂದು (ಜೂನ್ 15) ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ವಿಚಾರಣೆಗೆ ಬರುತ್ತಿದೆ. ಈ ಪ್ರಕರಣ ಈಗ ರಾಜ್ಯಾದ್ಯಂತ ಗಮನ ಸೆಳೆದಿದೆ.

ಸಂಗೀತಾ ಫೆಬ್ರವರಿ 24ರಂದು ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ನಂತರ ಏಪ್ರಿಲ್ 20ರಂದು ವಿಚಾರಣೆ ನಿಗದಿಯಾಗಿದ್ದರೂ ಇಬ್ಬರೂ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಆ ಸಂದರ್ಭದಲ್ಲಿ ವಕೀಲರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲು ಮನವಿ ಮಾಡಿದ್ದರು. ನ್ಯಾಯಾಲಯ ಅದನ್ನು ಅಂಗೀಕರಿಸಿ ಇಂದು ಹೊಸ ದಿನಾಂಕ ನೀಡಿತ್ತು.

ಇಂದು ವಿಚಾರಣೆಯಲ್ಲಿ ದಂಪತಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗುವ ಸಾಧ್ಯತೆ ಇದೆ. ಆದರೆ ನೇರವಾಗಿ ಕೋರ್ಟ್‌ಗೆ ಹಾಜರಾಗುತ್ತಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಇದೇ ನಡುವೆ, ಇಬ್ಬರ ನಡುವೆ ರಾಜಿ ಸಾಧ್ಯತೆಗಳ ಕುರಿತು ಊಹಾಪೋಹಗಳು ಹೆಚ್ಚುತ್ತಿವೆ. ವಿಜಯ್ ಅವರ ತಾಯಿ ಶೋಭಾ ಚಂದ್ರಶೇಖರ್ ಮಧ್ಯಸ್ಥಿಕೆ ನಡೆಸುತ್ತಿರುವ ಬಗ್ಗೆ ಚರ್ಚೆ ನಡೆಯುತ್ತಿದ್ದು, ಪ್ರಕರಣದಲ್ಲಿ ಹೊಸ ತಿರುವು ಬರಬಹುದೇ ಎಂಬ ನಿರೀಕ್ಷೆ ಇದೆ. ನ್ಯಾಯಾಲಯದ ಇಂದು ನಡೆಯುವ ವಿಚಾರಣೆ ಪ್ರಕರಣದ ಮುಂದಿನ ಹಾದಿಗೆ ನಿರ್ಣಾಯಕವಾಗಲಿದೆ.

ಮತ್ತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಊರ್ಮಿಳಾ ಮಾತೋಂಡ್ಕರ್ ಮಾಜಿ ಪತಿ

ಮುಂಬೈ: ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಅವರ ಮಾಜಿ ಪತಿ ಮೊಹ್ಸಿನ್ ಅಖ್ತರ್ ಎರಡನೇ ಮದುವೆಯಾಗಿದ್ದಾರೆ.

ಊರ್ಮಿಳಾ ಜೊತೆ ವಿಚ್ಛೇದನ ಪಡೆದು ಎರಡು ವರ್ಷಗಳ ಬಳಿಕ ಮೊಹ್ಸಿನ್ ಇದೀಗ ನಿಧಾ ಭಟ್ ಅವರೊಂದಿಗೆ ವೈವಾಹಿಕ ಜೀವನ ಆರಂಭಿಸಿದ್ದಾರೆ. ತಮ್ಮ ವಿವಾಹದ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಭಾವನಾತ್ಮಕ ಸಂದೇಶವನ್ನೂ ಪ್ರಕಟಿಸಿದ್ದಾರೆ.

ಪೋಸ್ಟ್‌ನಲ್ಲಿ ಮೊಹ್ಸಿನ್ ಅವರು ಪ್ರೀತಿ, ತಾಳ್ಮೆ, ಕೃತಜ್ಞತೆ ಮತ್ತು ಧಾರ್ಮಿಕ ನಂಬಿಕೆಯ ಕುರಿತು ಮಾತನಾಡಿದ್ದು, ನಿಧಾ ಭಟ್ ತಮ್ಮ ಜೀವನದಲ್ಲಿ ಹೊಸ ಬೆಳಕು ತಂದಿದ್ದಾರೆ ಎಂದು ತಿಳಿಸಿದ್ದಾರೆ. ಜೊತೆಗೆ ತಮ್ಮ ತಾಯಿಗೆ ಧನ್ಯವಾದ ತಿಳಿಸಿ ಕುಟುಂಬದ ಬೆಂಬಲವನ್ನು ಸ್ಮರಿಸಿದ್ದಾರೆ.

ಮೊಹ್ಸಿನ್ ಅಖ್ತರ್ ಮತ್ತು ಊರ್ಮಿಳಾ ಮಾತೋಂಡ್ಕರ್ 2016ರಲ್ಲಿ ವಿವಾಹವಾಗಿದ್ದರು. ವಯಸ್ಸಿನ ಅಂತರ ಮತ್ತು ವಿಭಿನ್ನ ಧರ್ಮ ಹಿನ್ನೆಲೆಯಿಂದಾಗಿ ಇವರ ಮದುವೆ ಆಗಲೇ ಚರ್ಚೆಗೆ ಗ್ರಾಸವಾಗಿತ್ತು. 2024ರಲ್ಲಿ ಇವರ ದಾಂಪತ್ಯದಲ್ಲಿ ಬಿರುಕು ಮೂಡಿ, ನಂತರ ಅಧಿಕೃತವಾಗಿ ವಿಚ್ಛೇದನ ಪ್ರಕ್ರಿಯೆ ಆರಂಭವಾಗಿತ್ತು.

ಇದೀಗ ಮೊಹ್ಸಿನ್ ಅಖ್ತರ್ ಅವರ ಎರಡನೇ ಮದುವೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ.

ಕೇರಳದಲ್ಲಿ ಮಹಿಳೆಯರು–ತೃತೀಯಲಿಂಗಿಗಳಿಗೆ ಉಚಿತ ಬಸ್ ಪ್ರಯಾಣ: ‘ಪ್ರಿಯದರ್ಶಿನಿ’ ಯೋಜನೆಗೆ ಸರ್ಕಾರದಿಂದ ಅಧಿಕೃತ ಚಾಲನೆ

0

ತಿರುವನಂತಪುರಂ: ಕೇರಳ ಸರ್ಕಾರ ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವ ಮಹತ್ವಾಕಾಂಕ್ಷಿ ‘ಪ್ರಿಯದರ್ಶಿನಿ’ ಯೋಜನೆಯನ್ನು ಇಂದು ಅಧಿಕೃತವಾಗಿ ಆರಂಭಿಸಿದೆ.

ತಿರುವನಂತಪುರಂನ ತಂಪನೂರು ಕೇಂದ್ರ ಬಸ್ ನಿಲ್ದಾಣದಲ್ಲಿ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಯೋಜನೆಗೆ ಚಾಲನೆ ನೀಡಿದರು. ಉದ್ಘಾಟನಾ ಪ್ರಯಾಣದಲ್ಲಿ ಮುಖ್ಯಮಂತ್ರಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದರು. ವಿಶೇಷವಾಗಿ ಈ ಪ್ರಯಾಣವನ್ನು ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯೇ ನಿರ್ವಹಿಸಿದರು.

ಈ ಯೋಜನೆಯಡಿ ಮಹಿಳೆಯರು ಮತ್ತು ತೃತೀಯಲಿಂಗಿಗಳು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ನಡೆಸುವ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ರಾಜ್ಯಾದ್ಯಂತ ಸುಮಾರು 3,125 ಸಾಮಾನ್ಯ ಬಸ್‌ಗಳು ಈ ಯೋಜನೆಯ ವ್ಯಾಪ್ತಿಗೆ ಒಳಪಡಲಿವೆ.

ಸಾಮಾನ್ಯ, ಸಿಟಿ ಆರ್ಡಿನರಿ, ಲಿಮಿಟೆಡ್ ಸ್ಟಾಪ್, ಟೌನ್ ಟು ಟೌನ್, ಪಾಯಿಂಟ್ ಟು ಪಾಯಿಂಟ್ ಹಾಗೂ ಗ್ರಾಮವಂಡಿ ಸೇರಿದಂತೆ ಏಳು ವಿಭಾಗದ ಬಸ್‌ಗಳಲ್ಲಿ ಈ ಸೌಲಭ್ಯ ಲಭ್ಯವಾಗಲಿದೆ. ಅರ್ಹ ಬಸ್‌ಗಳನ್ನು ಗುರುತಿಸಲು ವಿಶೇಷ ಸ್ಟಿಕ್ಕರ್‌ಗಳನ್ನು ಅಳವಡಿಸಲಾಗಿದೆ.

ಮಹಿಳಾ ಸಬಲೀಕರಣದತ್ತ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಯೋಜನೆ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸಾಹಿತಿ ಪಿ. ಲಂಕೇಶ್ ಅವರ ಜೀವನ ಸಂಗಾತಿ ಇಂದಿರಾ ಲಂಕೇಶ್ ಇನ್ನಿಲ್ಲ!

ಬೆಂಗಳೂರು:  ಕನ್ನಡದ ಪ್ರಸಿದ್ಧ ಸಾಹಿತಿ ಹಾಗೂ ಪತ್ರಕರ್ತ ಪಿ. ಲಂಕೇಶ್ ಅವರ ಧರ್ಮಪತ್ನಿ ಇಂದಿರಾ ಲಂಕೇಶ್ ಅವರು ಇಂದು ನಿಧನರಾಗಿದ್ದಾರೆ.

ಅವರ ನಿಧನದಿಂದ ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಇಂದಿರಾ ಲಂಕೇಶ್ ಅವರು ಸ್ವತಃ ಲೇಖಕಿ ಹಾಗೂ ಉದ್ಯಮಿಯಾಗಿ ಗುರುತಿಸಿಕೊಂಡಿದ್ದರು. ಪತಿ ಪಿ. ಲಂಕೇಶ್ ಅವರ ಸಾಹಿತ್ಯಕ ಬದುಕಿಗೆ ಸದಾ ಬೆಂಬಲವಾಗಿ ನಿಂತಿದ್ದ ಅವರು, ಆರ್ಥಿಕ ಸಂಕಷ್ಟದ ಸಮಯದಲ್ಲೂ ಕುಟುಂಬವನ್ನು ಮುನ್ನಡೆಸಿದ ದಿಟ್ಟ ಮಹಿಳೆಯಾಗಿದ್ದರು. ಯಾವುದೇ ಅನುಭವವಿಲ್ಲದಿದ್ದರೂ ಸೀರೆ ಅಂಗಡಿ ಆರಂಭಿಸಿ ಕುಟುಂಬದ ಹೊಣೆ ಹೊತ್ತಿದ್ದರು.

ಅವರು ಬರೆದಿರುವ ‘ಹುಳಿಮಾವು ಮತ್ತು ನಾನು’ ಎಂಬ ಆತ್ಮಕಥನಾತ್ಮಕ ಕಾದಂಬರಿಯಲ್ಲಿ ತಮ್ಮ ಜೀವನದ ಅನುಭವಗಳು ಹಾಗೂ ಪಿ. ಲಂಕೇಶ್ ಅವರೊಂದಿಗಿನ ಒಡನಾಟವನ್ನು ಹಂಚಿಕೊಂಡಿದ್ದರು.

ಈ ದಂಪತಿಗೆ ಮೂವರು ಮಕ್ಕಳು ಇದ್ದು, ಹಿರಿಯ ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್, ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್ ಮತ್ತು ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ತಮ್ಮ ಕ್ಷೇತ್ರಗಳಲ್ಲಿ ಹೆಸರು ಮಾಡಿದ್ದಾರೆ.

ಇಂದಿರಾ ಲಂಕೇಶ್ ಅವರ ನಿಧನಕ್ಕೆ ಸಾಹಿತ್ಯ, ರಾಜಕೀಯ ಹಾಗೂ ಚಲನಚಿತ್ರ ಕ್ಷೇತ್ರದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಅಮೆರಿಕದಲ್ಲಿ ವಿಮಾನ ಪತನ: ಪೈಲಟ್ ಸೇರಿ 12 ಮಂದಿ ದುರ್ಮರಣ!

0

ವಾಷಿಂಗ್ಟನ್: ಅಮೆರಿಕದ ಮಿಸೌರಿ ರಾಜ್ಯದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ 11 ಸ್ಕೈಡೈವರ್‌ಗಳು ಮತ್ತು 1 ಪೈಲಟ್ ಸೇರಿ ಒಟ್ಟು 12 ಮಂದಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಸ್ಕೈಡೈವಿಂಗ್ ಚಟುವಟಿಕೆಗಾಗಿ ಗುತ್ತಿಗೆ ಪಡೆದಿದ್ದ ವಿಮಾನವು ಭಾನುವಾರ ಸ್ಥಳೀಯ ಸಮಯ 11:20ರ ಸುಮಾರಿಗೆ ಟೇಕ್‌ಆಫ್ ಆಗಿತ್ತು.

ಹಾರಾಟ ಆರಂಭವಾದ ಕೆಲವೇ ಕ್ಷಣಗಳಲ್ಲಿ ವಿಮಾನವು ತೀಕ್ಷ್ಣ ಎಡ ತಿರುವು ಪಡೆದು ಬಟ್ಲರ್ ಸ್ಮಾರಕ ವಿಮಾನ ನಿಲ್ದಾಣದಿಂದ ಸುಮಾರು 200 ಗಜ ದೂರದಲ್ಲಿ ಅಪ್ಪಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೇಟ್ಸ್ ಕೌಂಟಿ ತುರ್ತು ನಿರ್ವಹಣಾ ವಕ್ತಾರರ ಪ್ರಕಾರ, ವಿಮಾನದಲ್ಲಿದ್ದ ಎಲ್ಲಾ 12 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಕುರಿತು ತೀವ್ರ ಪರಿಶೀಲನೆ ನಡೆಯುತ್ತಿದೆ.

ಅಮೆರಿಕದ ಫೆಡರಲ್ ಏವಿಯೇಷನ್ ಆಡಳಿತ (FAA) ಮಾಹಿತಿ ಪ್ರಕಾರ, ಅಪಘಾತಕ್ಕೀಡಾದ ವಿಮಾನವು ಪೆಸಿಫಿಕ್ ಏರೋಸ್ಪೇಸ್ P-750 ಆಗಿದ್ದು, ವಾಣಿಜ್ಯ ಪ್ರಯಾಣಿಕ ವಿಮಾನವಲ್ಲ, ಸ್ಥಳೀಯ ಸ್ಕೈಡೈವಿಂಗ್ ಕಾರ್ಯಾಚರಣೆಗೆ ಬಳಸಲಾಗುತ್ತಿತ್ತು.

ಅಪಘಾತದ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಸ್ತೆ ಅಪಘಾತದಲ್ಲಿ ಗಾಯಾಗೊಂಡಿದ್ದ ಯುವಕ ಸಾವು

0

ಉಪ್ಪಿನಂಗಡಿ: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ತಿಂಗಳುಗಳ ಕಾಲ ಕೋಮಾ ಸ್ಥಿತಿಯಲ್ಲಿದ್ದ ಬದ್ರುದ್ದೀನ್ ಮಠ ಅವರು ಚಿಕಿತ್ಸೆ ಫಲಿಸದೆ ಜೂನ್ 14ರಂದು ನಿಧನರಾಗಿದ್ದಾರೆ.

ಮೂಲತಃ ಮಠ ನಿವಾಸಿಯಾಗಿದ್ದ ಬದ್ರುದ್ದೀನ್, ಪ್ರಸ್ತುತ ನೆಕ್ಕಿಲಾಡಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಕೂಟೇಲ್ ಹೋಟೆಲ್‌ನಲ್ಲಿ ಉದ್ಯೋಗದಲ್ಲಿದ್ದ ಅವರು 2025ರ ಡಿಸೆಂಬರ್ 11ರ ರಾತ್ರಿ ಉಪ್ಪಿನಂಗಡಿಯಿಂದ ನೆಕ್ಕಿಲಾಡಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಕಾರು ಅವರ ವಾಹನಕ್ಕೆ ಮುಖಾಮುಖಿ ಢಿಕ್ಕಿ ಹೊಡೆದಿತ್ತು.

ಘಟನೆಯ ನಂತರ ಗಂಭೀರವಾಗಿ ಗಾಯಗೊಂಡ ಅವರನ್ನು ಪುತ್ತೂರಿನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಮಂಗಳೂರಿಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ವೇಳೆ ಅವರು ಕೋಮಾ ಸ್ಥಿತಿಗೆ ಜಾರಿದ್ದರು.

ದೀರ್ಘಕಾಲ ಆಸ್ಪತ್ರೆ ಮತ್ತು ನಂತರ ಮನೆಯಲ್ಲಿನ ಆರೈಕೆಯಲ್ಲಿದ್ದ ಅವರು ಅಂತಿಮವಾಗಿ ಜೂನ್ 14ರಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ನಂತರ ಅವರ ಅಂತ್ಯಸಂಸ್ಕಾರವನ್ನು ಮಠದ ಬದ್ರಿಯ ಜುಮಾ ಮಸೀದಿಯಲ್ಲಿ ನಡೆಸಲಾಗಿದೆ.

ತಾಯಿಯಿಂದ ಬೇರ್ಪಟ್ಟ ಮರಿಯಾನೆ ಗ್ರಾಮಕ್ಕೆ ಎಂಟ್ರಿ: ಜನರಲ್ಲಿ ಆತಂಕ!

ಆನೇಕಲ್: ತಾಯಿಯಿಂದ ಬೇರ್ಪಟ್ಟ ಮರಿಯಾನೆ ಆಹಾರ ಹುಡುಕುತ್ತಾ ಗ್ರಾಮಕ್ಕೆ ಬಂದ ಘಟನೆ ತಮಿಳುನಾಡಿನ ಡೆಂಕಣಿಕೋಟೆ ಗಡಿಭಾಗದಲ್ಲಿ ನಡೆದಿದೆ.

ತಾಯಿ ಆನೆಯ ಗುಂಪಿನಿಂದ ದೂರವಾದ ಮರಿಯಾನೆ, ಜಮೀನಿನ ಮನೆಯೊಂದರ ಬಳಿ ಕಾಣಿಸಿಕೊಂಡಿದ್ದು ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.

ಮರಿಯಾನೆ ಆಹಾರಕ್ಕಾಗಿ ಗ್ರಾಮಕ್ಕೆ ಪ್ರವೇಶಿಸಿದ್ದು, ಖಾಸಗಿ ತೋಟದ ಮನೆಯ ಬಳಿ ಕಾಣಿಸಿಕೊಂಡಿದೆ. ಆನೆ ಕಂಡ ಸ್ಥಳೀಯರು ಕೂಡಲೇ ಜಮಾಯಿಸಿದ್ದು, ಕಬ್ಬು ಹಾಗೂ ಬಾಳೆಹಣ್ಣು ನೀಡಿ ಅದರ ಹಸಿವು ನೀಗಿಸಿದ್ದಾರೆ.

ಘಟನೆ ಕುರಿತು ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಮರಿಯಾನೆಯನ್ನು ಸುರಕ್ಷಿತವಾಗಿ ತಾಯಿ ಆನೆಯ ಗುಂಪಿಗೆ ಸೇರಿಸಲು ಅರಣ್ಯ ಇಲಾಖೆ ಹರಸಾಹಸ ನಡೆಸುತ್ತಿದೆ.

ಪ್ರಸ್ತುತ ಅರಣ್ಯ ಸಿಬ್ಬಂದಿ ತಾಯಿ ಆನೆಯ ಗುಂಪಿನ ಪತ್ತೆಗೆ ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

ತೀರ್ಥಯಾತ್ರೆ ವೇಳೆ ಭೀಕರ ದುರಂತ: ಬಾವಿಗೆ ಉರುಳಿದ ಪಿಕಪ್ ವ್ಯಾನ್, ಮಹಿಳೆಯರು-ಮಕ್ಕಳು ಸೇರಿ 8 ಮಂದಿ ಸಾವು

0

ಮಹಾರಾಷ್ಟ್ರ: ಸೋಲಾಪುರ ಜಿಲ್ಲೆಯಲ್ಲಿ ತೀರ್ಥಯಾತ್ರೆಗೆ ತೆರಳುತ್ತಿದ್ದ ಭಕ್ತರ ವಾಹನ ಭೀಕರ ಅಪಘಾತಕ್ಕೀಡಾಗಿ ಮಹಿಳೆಯರು ಮತ್ತು ಮಕ್ಕಳು ಸೇರಿ 8 ಮಂದಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಮಲ್ಶಿರಾಸ್ ತಾಲ್ಲೂಕಿನ ತಂಡುಲ್ ಗ್ರಾಮದ ಸಮೀಪ ಭಾನುವಾರ ಸಂಜೆ 15 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಾವಿಗೆ ಉರುಳಿ ಬಿದ್ದಿದೆ. ಪರಿಣಾಮ ಸ್ಥಳದಲ್ಲೇ ನಾಲ್ವರು ಮಹಿಳೆಯರು ಸೇರಿದಂತೆ ಒಟ್ಟು ಎಂಟು ಮಂದಿ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಇನ್ನೂ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ರಕ್ಷಿಸಿ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳ ಆರೋಗ್ಯ ಸ್ಥಿತಿಯ ಮೇಲೆ ವೈದ್ಯರು ನಿಗಾ ವಹಿಸಿದ್ದಾರೆ.

ಮೃತರು ಹಾಗೂ ಗಾಯಾಳುಗಳು ಪಂಢರಪುರ ಸಮೀಪದ ರಂಜನಿ ಗ್ರಾಮದ ನಿವಾಸಿಗಳಾಗಿದ್ದು, ಧಾರ್ಮಿಕ ಯಾತ್ರೆಯ ಭಾಗವಾಗಿ ಒಟ್ಟಿಗೆ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು, ಸ್ಥಳೀಯ ಆಡಳಿತ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದರು. ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.

error: Content is protected !!