ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯ ಚಿತ್ರರಂಗದಲ್ಲಿ ಹಾಡುಗಳು ಕೇವಲ ಮನರಂಜನೆಯ ಮಾಧ್ಯಮವಲ್ಲ. ಅವು ಭಾವಾಭಿವ್ಯಕ್ತಿ, ಕಥಾನಿರೂಪಣೆ ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುವ ಪ್ರಮುಖ ಸಾಧನಗಳಾಗಿವೆ. ನಾಲ್ಕು ದಶಕಗಳಿಗೂ ಅಧಿಕ ಚಿತ್ರಗೀತೆಗಳಿಗೆ ದನಿಯಾಗಿ ಎಸ್. ಜಾನಕಿ ಅವರು ಜನಮನದಲ್ಲಿ ಅಚ್ಚಳಿಯದ ಸ್ಥಾನ ಗಳಿಸಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಗಾನಕೋಗಿಲೆ ಎಸ್. ಜಾನಕಿ ಅವರ ಸ್ಮರಣಾರ್ಥ ಆಯೋಜಿಸಿದ್ದ ‘ಸಂಗೀತ ಸಂಜೆ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚಿತ್ರಗೀತೆಗಳು ಸಿನಿಮಾಗಳ ಯಶಸ್ಸಿನಲ್ಲಿ ಮಹತ್ವದ ಪಾತ್ರವಹಿಸುತ್ತವೆ. ಅನೇಕ ಚಿತ್ರಗಳಿಗೆ ಹೆಸರು ಹಾಗೂ ಅಪಾರ ಜನಪ್ರಿಯತೆ ತಂದುಕೊಟ್ಟಿವೆ. ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲೂ ಹಾಡುವ ಮೂಲಕ ಎಸ್. ಜಾನಕಿ ಅವರು ಸಂಗೀತಾಸಕ್ತರ ಭಾವಲೋಕವನ್ನು ಶ್ರೀಮಂತಗೊಳಿಸಿದ್ದಾರೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿದ್ದ ನಿವೃತ್ತ ಉಪನಿರ್ದೇಶಕ ಎಸ್.ಡಿ. ಗಾಂಜಿ ಮಾತನಾಡಿ, ಹಾಡುಗಳು ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದ್ದು, ಜನಪದ ಗೀತೆಗಳು ಗ್ರಾಮೀಣ ಬದುಕಿನ ಮೌಲ್ಯಗಳನ್ನು ಉಳಿಸಿ ಬೆಳೆಸಿವೆ. ಗಾಯನ, ನೃತ್ಯ ಹಾಗೂ ದೃಶ್ಯ ಸಂಯೋಜನೆಯ ಮೂಲಕ ಚಿತ್ರಗೀತೆಗಳು ಪ್ರೇಕ್ಷಕರಿಗೆ ವಿಶಿಷ್ಟ ಅನುಭೂತಿಯನ್ನು ನೀಡುತ್ತವೆ ಎಂದು ಹೇಳಿದರು.
ಅದ್ವೈತ ಶಿವಪೂರ ಕೊಳಲು ವಾದನದ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಕಲಾವಿದರಾದ ಶ್ರೀನಿವಾಸ ಕುಲಕರ್ಣಿ, ಶಿಲ್ಪಾ ಕುರಹಟ್ಟಿ ಹಾಗೂ ರಾಹುಲ ರಾಠೋಡ ಅವರು ಎಸ್. ಜಾನಕಿ ಹಾಡಿದ ಜನಪ್ರಿಯ ಗೀತೆಗಳನ್ನು ಪ್ರಸ್ತುತಪಡಿಸಿ ಸಂಗೀತಾಸಕ್ತರ ಮೆಚ್ಚುಗೆ ಗಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಮೂವರು ಕಲಾವಿದರನ್ನು ಸನ್ಮಾನಿಸಿ ಗೌರವಿಸಲಾಯಿತು.
ದತ್ತಪ್ರಸನ್ನ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ಕಿಶೋರಬಾಬು ನಾಗರಕಟ್ಟಿ ಸ್ವಾಗತಿಸಿದರು. ರಾಹುಲ ಗಿಡ್ನಂದಿ ವಂದಿಸಿದರು.
ಕಾರ್ಯಕ್ರಮದಲ್ಲಿ ಡಾ. ಜಿ.ಬಿ. ಪಾಟೀಲ, ಶಶಿಕಾಂತ ಕೊರ್ಲಹಳ್ಳಿ, ವಿ.ಎಸ್. ದಲಾಲಿ, ಶೈಲಶ್ರೀ ಕಪ್ಪರದ, ಸಿ.ಎಂ. ಮಾರನಬಸರಿ, ರತ್ನಾ ಪುರಂತರ, ಶೈಲಜಾ ಗಿಡ್ನಂದಿ, ರಾಜಶೇಖರ ಕರಡಿ ಸೇರಿದಂತೆ ಸಾಹಿತ್ಯಾಸಕ್ತರು ಹಾಗೂ ಸಂಗೀತ ಪ್ರೇಮಿಗಳು ಉಪಸ್ಥಿತರಿದ್ದರು.
“ಚಿತ್ರಗೀತೆಗಳು ಕೇವಲ ಮನರಂಜನೆಯ ಸಾಧನವಲ್ಲ, ಭಾವನೆಗಳ ಸೇತುವೆಯಾಗಿವೆ. ಎಸ್. ಜಾನಕಿ ತಮ್ಮ ಗಾಯನದ ಮೂಲಕ ಕೋಟ್ಯಂತರ ಜನರ ಹೃದಯ ಗೆದ್ದಿದ್ದಾರೆ.”
– ವಿವೇಕಾನಂದಗೌಡ ಪಾಟೀಲ, ಅಧ್ಯಕ್ಷರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್

