Home Blog

ತಾಯಿಯನ್ನು ನೋಡಿಕೊಳ್ಳುವುದು ಮಗಳ ಜವಾಬ್ದಾರಿ: ಆಸ್ತಿ ಹಿಂದಿರುಗಿಸುವ ಆದೇಶ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ಮಗಳು ತನ್ನ ತಾಯಿಯನ್ನು ನೋಡಿಕೊಳ್ಳುವ ಕಾನೂನು, ನೈತಿಕ ಹಾಗೂ ಸಾಮಾಜಿಕ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, ಮಗಳ ಹೆಸರಿಗೆ ವರ್ಗಾಯಿಸಲಾಗಿದ್ದ ತಾಯಿಯ ಆಸ್ತಿಯನ್ನು ಮರುಹಿಂತಿರುಗಿಸಲು ನೀಡಿದ್ದ ಆದೇಶವನ್ನು ಎತ್ತಿಹಿಡಿದಿದೆ.

ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಹಾಗೂ ಕಲ್ಯಾಣ ಕಾಯ್ದೆಯಡಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ.

ದಾನಪತ್ರದಲ್ಲಿ ತಾಯಿಯನ್ನು ನೋಡಿಕೊಳ್ಳಬೇಕೆಂಬ ಷರತ್ತು ಸ್ಪಷ್ಟವಾಗಿ ಉಲ್ಲೇಖಿಸದಿದ್ದರೂ, ಆಸ್ತಿ ವರ್ಗಾವಣೆಯ ಹಿಂದೆ ಅಂತಹ ನಂಬಿಕೆ ಅಡಕವಾಗಿರುತ್ತದೆ ಎಂಬುದು ಕಾನೂನಿನ ಆಶಯ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಮಗಳು ಆರ್. ಪವಿತ್ರಾ ಅವರಿಗೆ ಸ್ವಂತ ಮನೆ ಇದ್ದರೂ, ವೃದ್ಧ ತಾಯಿ ಬಾಡಿಗೆ ಮನೆಯಲ್ಲಿ ವಾಸಿಸುವಂತಾಗಿರುವುದು ಬೇಜವಾಬ್ದಾರಿತನವನ್ನು ತೋರಿಸುತ್ತದೆ ಎಂದು ಪೀಠ ಹೇಳಿದೆ. ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯ ಉದ್ದೇಶವೇ ಅಸಹಾಯಕ ಪೋಷಕರನ್ನು ರಕ್ಷಿಸುವುದಾಗಿದ್ದು, ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು ಕಾಯ್ದೆಯ ಆಶಯವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಹಾಗೂ ಕಲ್ಯಾಣ ಕಾಯ್ದೆ ಹಿರಿಯ ನಾಗರಿಕರನ್ನು ಬಡತನ ಮತ್ತು ನಿರ್ಲಕ್ಷ್ಯದಿಂದ ರಕ್ಷಿಸಲು ರೂಪುಗೊಂಡ ಪ್ರಯೋಜನಕಾರಿ ಕಾನೂನು ಎಂದು ಪೀಠ ಉಲ್ಲೇಖಿಸಿದೆ. ಪ್ರತಿಯೊಂದು ಪ್ರಕರಣದಲ್ಲೂ ಕಾಯ್ದೆಯ ಆಶಯವನ್ನು ಕಡೆಗಣಿಸಿದರೆ ಶಾಸನಬದ್ಧ ರಕ್ಷಣೆಯ ಉದ್ದೇಶವೇ ವಿಫಲವಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಪ್ರಕರಣದಲ್ಲಿ ಹಿರಿಯ ನಾಗರಿಕರಾದ ನಿವೃತ್ತ ಸರ್ಕಾರಿ ಶಾಲಾ ಶಿಕ್ಷಕಿ ಜಿ. ಹೇಮಾ ಅವರು ತಮ್ಮ ಸ್ವಂತ ಸಂಪಾದನೆಯ ಆಸ್ತಿಗಳನ್ನು ಮಗ ಆರ್. ವೇಣುಗೋಪಾಲ್ ಮತ್ತು ಮಗಳು ಆರ್. ಪವಿತ್ರಾ ಹೆಸರಿಗೆ ದಾನಪತ್ರದ ಮೂಲಕ ವರ್ಗಾಯಿಸಿದ್ದರು. ವೃದ್ಧಾಪ್ಯದಲ್ಲಿ ಮಕ್ಕಳು ಆಸರೆಯಾಗುತ್ತಾರೆ ಹಾಗೂ ಆಸ್ತಿಯ ಬಾಡಿಗೆಯಿಂದ ಜೀವನ ಸಾಗಿಸಲು ನೆರವಾಗುತ್ತಾರೆ ಎಂಬ ನಂಬಿಕೆಯಿಂದ ಈ ನಿರ್ಧಾರ ಕೈಗೊಂಡಿದ್ದರು.

ಆದರೆ ನಂತರ ಮಕ್ಕಳು ಮನೆಯ ಬಾಡಿಗೆ ಹಣ ವಸೂಲಿ ಮಾಡುತ್ತಿದ್ದರೂ, ತಾಯಿಯ ಆರೈಕೆ ಮತ್ತು ಅಗತ್ಯ ಸೌಲಭ್ಯಗಳ ಕಡೆ ಗಮನಹರಿಸಿರಲಿಲ್ಲ ಎಂದು ಆರೋಪಿಸಲಾಗಿದೆ. ಇದರಿಂದ ಬೇಸತ್ತ ಜಿ. ಹೇಮಾ ಅವರು ಹಿರಿಯ ನಾಗರಿಕರ ನಿರ್ವಹಣಾ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿ, ಮಕ್ಕಳ ಹೆಸರಿಗೆ ಮಾಡಿದ್ದ ದಾನಪತ್ರವನ್ನು ರದ್ದುಪಡಿಸುವಂತೆ ಮನವಿ ಮಾಡಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮಂಡಳಿ ಆಸ್ತಿ ವರ್ಗಾವಣೆಯನ್ನು ರದ್ದುಪಡಿಸಿ, ಆಸ್ತಿಯನ್ನು ಮರುಕಳಿಸಿ ತಾಯಿ ಹೆಸರಿಗೆ ನೋಂದಣಿ ಮಾಡಿಸಿತ್ತು. ಬಳಿಕ ಮಗಳು ಸಲ್ಲಿಸಿದ್ದ ಮೇಲ್ಮನವಿಯನ್ನೂ ಉಪವಿಭಾಗಾಧಿಕಾರಿಗಳು ವಜಾಗೊಳಿಸಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಮಗಳಿಗೆ ಇದೀಗ ಹಿನ್ನಡೆಯಾಗಿದೆ.

ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ: ಚುನಾವಣಾ ಆಯೋಗದಿಂದ ಮಹತ್ವದ ಆದೇಶ

ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸಲು ಮಹತ್ವದ ಆದೇಶ ಹೊರಡಿಸಿದೆ.

ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ ಪ್ರದೇಶಗಳನ್ನು ಈ ಹಂತದಿಂದ ಹೊರಗಿಡಲಾಗಿದ್ದು, ಉಳಿದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರಿಷ್ಕರಣೆ ಪ್ರಕ್ರಿಯೆ ಜಾರಿಯಾಗಲಿದೆ.

ಈ ಮೂರು ಪ್ರದೇಶಗಳಲ್ಲಿ ಕಠಿಣ ಭೌಗೋಳಿಕ ಪರಿಸ್ಥಿತಿ, ಹವಾಮಾನ ಅಡಚಣೆಗಳು ಹಾಗೂ ಕಾರ್ಯಾಚರಣೆಯ ಸವಾಲುಗಳ ಹಿನ್ನೆಲೆ ಎಸ್‌ಐಆರ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ವಿಶೇಷವಾಗಿ ಹಿಮಪಾತ ಪೀಡಿತ ಹಾಗೂ ಎತ್ತರ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುವುದು ಸವಾಲಿನ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ.

ಜನಗಣತಿಯ ಎರಡನೇ ಹಂತದ ಪ್ರಗತಿ ಮತ್ತು ಸ್ಥಳೀಯ ಲಾಜಿಸ್ಟಿಕ್ ವ್ಯವಸ್ಥೆಗಳನ್ನು ಪರಿಗಣಿಸಿ ಈ ಪ್ರದೇಶಗಳಿಗೆ ಪ್ರತ್ಯೇಕ ವೇಳಾಪಟ್ಟಿಯನ್ನು ನಂತರ ಪ್ರಕಟಿಸಲಾಗುವುದು ಎಂದು ಆಯೋಗ ತಿಳಿಸಿದೆ.

ಈ ಕುರಿತು ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಮತದಾರರು ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ. ಅರ್ಹ ನಾಗರಿಕರ ಹೆಸರುಗಳು ಮಾತ್ರ ಮತದಾರರ ಪಟ್ಟಿಯಲ್ಲಿ ಉಳಿಯುವಂತೆ ನೋಡಿಕೊಳ್ಳುವುದು ಹಾಗೂ ಅನರ್ಹ ನಮೂದುಗಳನ್ನು ತಡೆಯುವುದು ಈ ಪರಿಷ್ಕರಣೆಯ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

ಈ ಹಂತದಲ್ಲಿ ಸುಮಾರು 36.73 ಕೋಟಿ ಮತದಾರರನ್ನು ತಲುಪುವ ಗುರಿ ಹೊಂದಲಾಗಿದೆ. ಪರಿಶೀಲನೆ ವೇಳೆ ಮೃತಪಟ್ಟವರು, ಶಾಶ್ವತವಾಗಿ ಸ್ಥಳಾಂತರಗೊಂಡವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಹೆಸರು ನೋಂದಾಯಿಸಿಕೊಂಡಿರುವ ನಕಲಿ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ.

ಹಿಜಬ್ ಬಗ್ಗೆ ಮಾತಾಡುವವರು ಮೊದಲು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಉತ್ತರ ಕೊಡಲಿ: ಮಧು ಬಂಗಾರಪ್ಪ ಕಿಡಿ

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಹಿಜಬ್‌ಗೆ ಅವಕಾಶ ನೀಡಿದ ಸರ್ಕಾರದ ನಿರ್ಧಾರವನ್ನು ಟೀಕಿಸಿರುವ ಬಿಜೆಪಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ತೀವ್ರವಾಗಿ ತಿರುಗೇಟು ನೀಡಿದ್ದಾರೆ. ಹಿಜಬ್ ವಿಚಾರದ ಬಗ್ಗೆ ಪ್ರಶ್ನಿಸುವ ಮುನ್ನ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಸಂಕಷ್ಟಕ್ಕೀಡಾದ ಲಕ್ಷಾಂತರ ವಿದ್ಯಾರ್ಥಿಗಳ ಬಗ್ಗೆ ಮಾತನಾಡಲಿ ಎಂದು ಅವರು ಆಗ್ರಹಿಸಿದರು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಹಿಜಬ್ ಮಾತ್ರವಲ್ಲ, ಇದಕ್ಕೂ ಮೊದಲು ಶಿವದಾರ ಹಾಗೂ ಜನಿವಾರ ಕುರಿತು ಕೂಡ ನಿರ್ಧಾರ ತೆಗೆದುಕೊಂಡಿದ್ದೆ. ಆಗ ಅದಕ್ಕೆ ವಿರೋಧ ವ್ಯಕ್ತಪಡಿಸಲಿಲ್ಲ. ಈಗ ಕೇವಲ ಹಿಜಬ್ ವಿಷಯ ಮಾತ್ರ ಕೆಲವರಿಗೆ ಕಾಣಿಸುತ್ತಿದೆ ಎಂದು ಹೇಳಿದರು.

ಬಿಜೆಪಿ ಅಲ್ಪಸಂಖ್ಯಾತರ ಓಲೈಕೆ ರಾಜಕೀಯ ಎಂದು ಆರೋಪಿಸಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, “ನಾವು ಪ್ರಣಾಳಿಕೆಯಲ್ಲಿ ಸಮಾನತೆಯ ಭರವಸೆ ನೀಡಿದ್ದೇವೆ. ಜಾತಿ ಅಥವಾ ಧರ್ಮದ ಆಧಾರದಲ್ಲಿ ಯಾರನ್ನೂ ಓಲೈಸುವ ಕೆಲಸ ಮಾಡುತ್ತಿಲ್ಲ. ಮಕ್ಕಳ ಹಿತದೃಷ್ಟಿಯಿಂದ ತೆಗೆದುಕೊಂಡ ನಿರ್ಧಾರವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರದ ನಿಯಮಗಳನ್ನೇ ರಾಜ್ಯದಲ್ಲೂ ಜಾರಿಗೆ ತಂದಿದ್ದೇವೆ ಎಂದು ಹೇಳಿದ ಸಚಿವರು, “ಇದು ಹೊಸ ಆದೇಶವಲ್ಲ. ವಿರೋಧಿಸುವವರು ಕೇಂದ್ರೀಯ ವಿದ್ಯಾಲಯಗಳ ಮುಂದೆ ಅಥವಾ ಮಹಾರಾಷ್ಟ್ರದಲ್ಲಿ ಹೋಗಿ ಪ್ರತಿಭಟನೆ ಮಾಡಲಿ” ಎಂದು ಸವಾಲು ಹಾಕಿದರು.

ಇದೇ ವೇಳೆ ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರದಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಧು ಬಂಗಾರಪ್ಪ, 25 ಲಕ್ಷ ಮಕ್ಕಳ ಭವಿಷ್ಯ ಹಾಳಾಗಿದೆ. ಒಂದು ವರ್ಷ ಓದಿ ಪರೀಕ್ಷೆಗೆ ಸಿದ್ಧರಾದ ವಿದ್ಯಾರ್ಥಿಗಳ ಭಾವನೆ, ಒತ್ತಡ ಮತ್ತು ಪರಿಶ್ರಮಕ್ಕೆ ಯಾರು ಉತ್ತರ ಕೊಡುತ್ತಾರೆ? ಎಂದು ಪ್ರಶ್ನಿಸಿದರು.

“ಪರೀಕ್ಷಾ ಪೇ ಚರ್ಚಾ ಮಾಡುವವರು ಈಗ ವಿದ್ಯಾರ್ಥಿಗಳ ಸಮಸ್ಯೆ ಬಗ್ಗೆ ಏಕೆ ಮೌನವಾಗಿದ್ದಾರೆ? ಇದರ ಬಗ್ಗೆ ಉತ್ತರ ಕೊಡಬೇಕಿದ್ದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೇ ದೂರ ಉಳಿದಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಲಾಯರ್ ಕೋಟ್‌ನಲ್ಲಿ ಹೈಕೋರ್ಟ್‌ಗೆ ಹಾಜರಾದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಬಳಿಕ ನಡೆದ ಹಿಂಸಾಚಾರ ಪ್ರಕರಣದ ವಿಚಾರಣೆಗೆ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಲಾಯರ್ ಕೋಟ್ ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಹಾಜರಾಗಿದ್ದು, ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಈ ಕುರಿತು ತೃಣಮೂಲ ಕಾಂಗ್ರೆಸ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, “ಮಮತಾ ಬ್ಯಾನರ್ಜಿ ನ್ಯಾಯ, ಸತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳಿಗಾಗಿ ಸದಾ ಹೋರಾಟ ನಡೆಸುತ್ತಿದ್ದಾರೆ. ಬಂಗಾಳದ ಜನರನ್ನು ಅವರು ಎಂದಿಗೂ ಕೈಬಿಡುವುದಿಲ್ಲ” ಎಂದು ಬರೆದುಕೊಂಡಿದೆ.

ಮೇ 4ರಂದು ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಸಾಚಾರ, ಬಾಂಬ್ ದಾಳಿ ಹಾಗೂ ಘರ್ಷಣೆಗಳು ನಡೆದಿದ್ದವು. ಈ ಘಟನೆಗಳಿಗೆ ಬಿಜೆಪಿ ಮತ್ತು ಟಿಎಂಸಿ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಿವೆ.

ಇದರ ನಡುವೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ ಅವರನ್ನು ಮೇ 6ರಂದು ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿರುವುದು ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿತ್ತು.

ಈ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಾಯಕ ಹಾಗೂ ವಕೀಲ ಕಲ್ಯಾಣ್ ಬಂಡೋಪಾಧ್ಯಾಯ ಅವರ ಪುತ್ರ ಶಿರ್ಷಣ್ಯ ಬಂಡೋಪಾಧ್ಯಾಯ ಅವರು ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಹೆಚ್.ಸಿ. ಸುಜಯ್ ಪಾಲ್ ನೇತೃತ್ವದ ಪೀಠ ನಡೆಸುತ್ತಿದೆ.

ಮೈದಾನದಲ್ಲೇ ಕಳಚಿ ಬಿದ್ದ ಬೆಥೆಲ್ ಚಿನ್ನದ ಸರ! ಅಂಪೈರಿಗೆ ನೀಡಿದ ದೇವದತ್ ಪಡಿಕಲ್

ರಾಯ್ಪುರ: ವಿರಾಟ್ ಕೊಹ್ಲಿಯವರ ಅಜೇಯ ಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್‌ಸಿಬಿ 16 ಅಂಕಗಳನ್ನು ಪಡೆದು ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಪಂದ್ಯದ ವೇಳೆ ಆರ್‌ಸಿಬಿ ಇನ್ನಿಂಗ್ಸ್‌ನಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ಆರಂಭಿಕ ಆಟಗಾರ ಜಾಕೋಬ್ ಬೆಥೆಲ್ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ತಮ್ಮ ಚಿನ್ನದ ಸರವನ್ನು ಮೈದಾನದಲ್ಲೇ ಕಳೆದುಕೊಂಡಿದ್ದಾರೆ.

ಕಾರ್ತಿಕ್ ತ್ಯಾಗಿ ಎಸೆದ ಬೌನ್ಸರ್‌ಗೆ ಬಲವಾಗಿ ಹೊಡೆಯಲು ಯತ್ನಿಸಿದ ಬೆಥೆಲ್, ಚೆಂಡು ಹೆಲ್ಮೆಟ್‌ಗೆ ಬಡಿದ ಪರಿಣಾಮ ವಿಕೆಟ್ ಕಳೆದುಕೊಂಡರು. ಈ ಸಂದರ್ಭ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ನೆಲಕ್ಕೆ ಬಿದ್ದಿತ್ತು. 15 ರನ್‌ಗಳಿಗೆ ಔಟಾದ ಬೆಥೆಲ್ ಸರ ಬಿದ್ದಿರುವುದನ್ನು ಗಮನಿಸದೆ ಪೆವಿಲಿಯನ್ ಕಡೆ ನಡೆದುಕೊಂಡು ಹೋಗಿದ್ದರು.

ಬಳಿಕ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ದೇವದತ್ ಪಡಿಕಲ್ ಪಿಚ್‌ನಲ್ಲಿ ಬಿದ್ದಿದ್ದ ಚಿನ್ನದ ಸರವನ್ನು ಗಮನಿಸಿದರು. ತಕ್ಷಣ ಅದನ್ನು ಎತ್ತಿ ಅಂಪೈರ್‌ಗಳಿಗೆ ಒಪ್ಪಿಸಿ ಕ್ರೀಡಾಸ್ಫೂರ್ತಿ ಮೆರೆದರು. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪಂದ್ಯದ ವಿಚಾರಕ್ಕೆ ಬಂದರೆ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 192 ರನ್ ಕಲೆಹಾಕಿತು. ಸವಾಲಿನ ಗುರಿ ಬೆನ್ನಟ್ಟಿದ ಆರ್‌ಸಿಬಿಗೆ ಆರಂಭದಲ್ಲೇ ಬೆಥೆಲ್ ವಿಕೆಟ್ ಕಳೆದು ಹಿನ್ನಡೆಯಾದರೂ, ಬಳಿಕ ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕಲ್ ಜೋಡಿ ತಂಡವನ್ನು ಸುಭದ್ರ ಸ್ಥಿತಿಗೆ ಕೊಂಡೊಯ್ದಿತು.

ಇಬ್ಬರೂ ಎರಡನೇ ವಿಕೆಟ್‌ಗೆ 59 ಎಸೆತಗಳಲ್ಲಿ 92 ರನ್‌ಗಳ ಅಮೂಲ್ಯ ಜೊತೆಯಾಟ ನೀಡಿದರು. ನಂತರ ದೇವದತ್ ಪಡಿಕಲ್ ಕಾರ್ತಿಕ್ ತ್ಯಾಗಿ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿದರು. ಆದರೆ ವಿರಾಟ್ ಕೊಹ್ಲಿ ಅಜೇಯ ಶತಕ ಸಿಡಿಸಿ ತಂಡವನ್ನು ಸುಲಭವಾಗಿ ಗೆಲುವಿನ ದಡ ಸೇರಿಸಿದರು.

ಕೇಸರಿ ಪೇಟಕ್ಕೆ ಅವಕಾಶ ಇಲ್ಲ; ‘ಹಳೆಯ ಪರಂಪರೆ ಮಾತ್ರ ಮಾನ್ಯ’ ಎಂದ ಸಿಎಂ ಸಿದ್ದರಾಮಯ್ಯ

0

ಮೈಸೂರು: ಶಾಲೆಗಳಿಗೆ ಕೇಸರಿ ಶಾಲು ಹಾಕಿಕೊಂಡು ಬರುವಂತಿಲ್ಲ ಹಾಗೂ ಹೊಸ ರೀತಿಯ ಕೇಸರಿ ಪೇಟಕ್ಕೂ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, “ಪರಂಪರೆಯಿಂದ ಇದ್ದ ಪೇಟಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಈಗ ಹೊಸ ಬಣ್ಣದ ಪೇಟ ಹಾಕಿಕೊಂಡು ಬಂದರೆ ಅವಕಾಶ ಇರುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ಹಿಜಾಬ್ ವಿಚಾರ ಮಾತ್ರವಲ್ಲ, ಜನಿವಾರ, ಶಿವಧಾರ, ಪೇಟ ಇವುಗಳಿಗೂ ಅವಕಾಶ ನೀಡಿದ್ದೇವೆ. ಆದರೆ ಹೊಸ ರೂಪದಲ್ಲಿ ಯಾವುದೇ ಧಾರ್ಮಿಕ ಅಥವಾ ರಾಜಕೀಯ ಗುರುತು ತರುವುದಕ್ಕೆ ಅವಕಾಶ ಇಲ್ಲ” ಎಂದು ಹೇಳಿದರು.

ಹೈಕಮಾಂಡ್ ಭೇಟಿಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, “ನನ್ನನ್ನು ಇನ್ನೂ ಕರೆದಿಲ್ಲ. ಹೈಕಮಾಂಡ್ ಕರೆದಾಗ ದೆಹಲಿಗೆ ಹೋಗುತ್ತೇನೆ” ಎಂದರು. ಸಂಪುಟ ಪುನಾರಚನೆ ಬಗ್ಗೆ ಕೇಳಿದಾಗ, “ಚರ್ಚೆ ನಡೆದರೆ ಕ್ರಮ ಕೈಗೊಳ್ಳುತ್ತೇನೆ” ಎಂದು ಉತ್ತರಿಸಿದರು.

ಮೈಸೂರು ಪ್ರವಾಸದ ವೇಳೆ ಸಿಎಂ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು. ರಸ್ತೆ, ವಿದ್ಯುತ್ ಹಾಗೂ ಬಸ್ ನಿಲ್ದಾಣ ಕಾಮಗಾರಿಗಳ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಪೋಕ್ಸೋ ಕೇಸ್​​: ಹರಿಹರ ಠಾಣೆಗೆ ವಚನಾನಂದ ಸ್ವಾಮೀಜಿ ಆಗಮನ, ಮೆಡಿಕಲ್ ಟೆಸ್ಟ್ ಸಾಧ್ಯತೆ

ದಾವಣಗೆರೆ: ವಚನಾನಂದ ಸ್ವಾಮೀಜಿ ವಿರುದ್ಧ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣವನ್ನು ಹರಿಹರ ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ದಾವಣಗೆರೆ ಎಸ್‌ಪಿ ಹೆಚ್.ಟಿ. ಶೇಖರ್ ತಿಳಿಸಿದ್ದಾರೆ.

ಬಾಲಕನ ತಾಯಿ ನೀಡಿದ ದೂರಿನ ಆಧಾರದಲ್ಲಿ ವಚನಾನಂದ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಾಲಕನ ಮೇಲೆ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ನೊಂದ ಬಾಲಕನ ಹೇಳಿಕೆ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ.

ಈ ಹಿಂದೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಠಾಣೆಯಲ್ಲಿ ಶೂನ್ಯ ಎಫ್‌ಐಆರ್ ದಾಖಲಾಗಿತ್ತು. ಬಳಿಕ ಘಟನೆ ನಡೆದಿದೆ ಎನ್ನಲಾದ ಸ್ಥಳದ ವ್ಯಾಪ್ತಿಗೆ ಅನುಗುಣವಾಗಿ ಪ್ರಕರಣವನ್ನು ಹರಿಹರ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದೆ.

ಇದೇ ವೇಳೆ ಹರ ಮಠದ ವಿಚಾರವಾಗಿ ಲೆಕ್ಕ ಕೇಳುವ ಮತ್ತು ಲೆಕ್ಕ ಕೊಡುವ ಕಾರ್ಯಕ್ರಮದ ಹಿನ್ನೆಲೆ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಎರಡು ಗುಂಪುಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವ ಕಾರಣ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

ಮಠದಲ್ಲಿ ಪೂಜೆ ಹೊರತುಪಡಿಸಿ ಯಾವುದೇ ಸಭೆ, ಸಮಾರಂಭ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ಜಿಲ್ಲಾಧಿಕಾರಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಮೇ 31ರವರೆಗೆ ಈ ಆದೇಶ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ವಿಚಾರಣೆಗೆ ವಚನಾನಂದ ಸ್ವಾಮೀಜಿ ಇಂದು ಹರಿಹರ ಗ್ರಾಮಾಂತರ ಠಾಣೆಗೆ ಹಾಜರಾಗಿದ್ದಾರೆ. ಪೊಲೀಸರು ಅವರಿಂದ ಹೇಳಿಕೆ ಪಡೆದು ಮುಂದಿನ ತನಿಖೆ ಮುಂದುವರಿಸಲಿದ್ದಾರೆ.

ಪ್ರಕರಣ ದಾಖಲಾಗಿರುವ ಹಿನ್ನೆಲೆ ಸ್ವಾಮೀಜಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದ್ದು, ಹರಿಹರ ತಾಲೂಕು ಆಸ್ಪತ್ರೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಮೌನಿ ರಾಯ್ ದಾಂಪತ್ಯದಲ್ಲಿ ಸಂಕಷ್ಟ? ಪತಿಯಿಂದ ಆರ್ಥಿಕ ವಂಚನೆ ಆರೋಪದ ವದಂತಿ

ಮೌನಿ ರಾಯ್ ಮತ್ತು ಸೂರಜ್ ನಂಬಿಯಾರ್ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಇಬ್ಬರೂ ಇನ್‌ಸ್ಟಾಗ್ರಾಂನಲ್ಲಿ ಪರಸ್ಪರ ಅನ್‌ಫಾಲೋ ಮಾಡಿರುವುದು ಹಾಗೂ ಫೋಟೋಗಳನ್ನು ಅಳಿಸಿರುವುದು ಅನುಮಾನಗಳಿಗೆ ಕಾರಣವಾಗಿದೆ.

ಕೆಲವು ಮಾಧ್ಯಮ ವರದಿಗಳ ಪ್ರಕಾರ, ಸೂರಜ್ ನಂಬಿಯಾರ್ ಅವರು ಮೌನಿ ರಾಯ್ ಅವರನ್ನು ಆರ್ಥಿಕವಾಗಿ ವಂಚಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆ ಇಬ್ಬರ ನಡುವೆ ಸಂಬಂಧ ಹದಗೆಟ್ಟಿದೆ ಎಂದು ಹೇಳಲಾಗುತ್ತಿದೆ. ಜೊತೆಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ.

ಆದರೆ ಈ ಎಲ್ಲ ಆರೋಪಗಳು ಅಧಿಕೃತವಾಗಿ ದೃಢಪಟ್ಟಿಲ್ಲ. ಈ ಕುರಿತು ಮೌನಿ ಅಥವಾ ಸೂರಜ್ ಯಾವುದೇ ಸ್ಪಷ್ಟನೆ ನೀಡಿಲ್ಲ. ಆದರೆ ಮೌನಿ ತಮ್ಮ ಇನ್‌ಸ್ಟಾಗ್ರಾಂ ಮೂಲಕ “ಸ್ವಲ್ಪ ಗೌಪ್ಯತೆ ನೀಡಿ” ಎಂದು ಮನವಿ ಮಾಡಿದ್ದಾರೆ ಎಂಬುದು ಗಮನ ಸೆಳೆದಿದೆ.

ಸೂರಜ್ ನಂಬಿಯಾರ್ ತಮ್ಮ ಖಾತೆಯನ್ನೇ ಅಳಿಸಿದ್ದಾರೆ ಎಂಬ ಮಾತುಗಳೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ಬೆಳವಣಿಗೆಗಳ ನಡುವೆ ಅಭಿಮಾನಿಗಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಮೌನಿ ರಾಯ್ 2022ರಲ್ಲಿ ಸೂರಜ್ ನಂಬಿಯಾರ್ ಅವರನ್ನು ವಿವಾಹವಾಗಿದ್ದರು. ಮದುವೆಗೆ ಮೊದಲು ಇಬ್ಬರೂ ಸುಮಾರು ಮೂರು ವರ್ಷಗಳ ಕಾಲ ಸಂಬಂಧದಲ್ಲಿದ್ದರು.

12 ನೇ ತರಗತಿಯವರೆಗೆ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: CM ಸಿದ್ದರಾಮಯ್ಯ

ಮೈಸೂರು: ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಹೊಸದಾಗಿ ಮಾಡುವಂತಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು.

ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಧಾರ್ಮಿಕ ಸಂಕೇತಗಳ ವಿಚಾರದಲ್ಲಿ ಬಿಜೆಪಿ ಎತ್ತಿರುವ ತಕರಾರಿಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಮುಖ್ಯಮಂತ್ರಿಗಳು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಪ್ರಧಾನಿಗಳ ಹೇಳಿಕೆ ಸರಿಯಿಲ್ಲ

ಪ್ರಧಾನಿ ನರೇಂದ್ರ ಮೋದಿಯವರು ಡೀಸಲ್ ಬಳಕೆ ಕಡಿತಗೊಳಿಸಲು ತಮ್ಮ ಬೆಂಗಾವಲನ್ನು ಕಡಿತಗೊಳಿಸಿದ್ದು ಈ ಬಗ್ಗೆ ಕರ್ನಾಟಕದಲ್ಲಿಯೂ ಮಾಡಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅದು ಕೇವಲ ತಾತ್ಕಾಲಿಕ ಕ್ರಮವಷ್ಟೇ. ಪ್ರಧಾನಿಗಳು ಹೇಳಿರುವುದು ಸರಿಯಾದ ಕ್ರಮವಲ್ಲ. ಅದಕ್ಕೆ ಬದಲು ಬೇರೆ ದೇಶಗಳೊಂದಿಗೆ ಮಾತನಾಡಿ ಒಮ್ಮತಕ್ಕೆ ಬರುವುದು ಸೂಕ್ತ ಎಂದರು.

ಸಂಪುಟ ಪುನರ್ ರಚನೆ ಮಾಡುವ ಉದ್ದೇಶವಿದೆ

ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಪ್ರಯಾಣ ಬೆಳಸುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಸಂಪುಟ ಪುನರ್ ರಚನೆ ಮಾಡುವ ಉದ್ದೇಶವಿದೆ ಎಂದರು.

ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯನ್ನು ಸರಿಯಾಗಿ ನಿರ್ವಹಿಸಿಲ್ಲ

ನೀಟ್ ಪ್ರಶ್ನೆ ಪತ್ರಿಕೆ ಉತ್ತರ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಮಾತನಾಡಿ ನೀಟ್ ಕೇಂದ್ರ ಸರ್ಕಾರ ಪರೀಕ್ಷೆಯನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ.ಇದರಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದರು.

ತಮಿಳುನಾಡಿನಲ್ಲಿ ಮದ್ಯ ಖರೀದಿಗೆ 21 ವರ್ಷ ವಯಸ್ಸು ಕಡ್ಡಾಯ: ವಿಜಯ್ ಸರ್ಕಾರದಿಂದ ಹೊಸ ಆದೇಶ

ಚೆನ್ನೈ: ಜೋಸೆಫ್ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ರಾಜ್ಯದಲ್ಲಿ ಮದ್ಯಪಾನ ನಿಯಂತ್ರಣವನ್ನು ಮತ್ತಷ್ಟು ಕಠಿಣಗೊಳಿಸುವ ಮಹತ್ವದ ಕ್ರಮ ಕೈಗೊಂಡಿದೆ. ಇನ್ನು ಮುಂದೆ ಮದ್ಯ ಖರೀದಿ ಹಾಗೂ ಮಾರಾಟಕ್ಕೆ ಕನಿಷ್ಠ ವಯಸ್ಸನ್ನು 21 ವರ್ಷ ಎಂದು ನಿಗದಿಪಡಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಜೋಸೆಫ್ ವಿಜಯ್ ಸರ್ಕಾರ ಈ ನಿರ್ಧಾರ ಜಾರಿಗೆ ತಂದಿದ್ದು, ಸಾರ್ವಜನಿಕ ಆರೋಗ್ಯ ಮತ್ತು ಮದ್ಯಪಾನ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ.

ಈಗಾಗಲೇ ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಬಸ್ ನಿಲ್ದಾಣಗಳ ಸಮೀಪದಲ್ಲಿದ್ದ 717 TASMAC ಮದ್ಯದಂಗಡಿಗಳನ್ನು ಮುಚ್ಚಲು ಸರ್ಕಾರ ಆದೇಶ ನೀಡಿದ್ದ ಬೆನ್ನಲ್ಲೇ ಇದೀಗ ಮತ್ತೊಂದು ಕಠಿಣ ಕ್ರಮ ಜಾರಿಗೆ ಬಂದಿದೆ.

ತಮಿಳುನಾಡು ರಾಜ್ಯ ಮಾರುಕಟ್ಟೆ ನಿಗಮದ ಅಂಗಡಿಗಳ ಸಿಬ್ಬಂದಿಗೆ ಗ್ರಾಹಕರ ವಯಸ್ಸನ್ನು ಕಡ್ಡಾಯವಾಗಿ ಪರಿಶೀಲಿಸುವಂತೆ ಸೂಚಿಸಲಾಗಿದೆ. ಅನುಮಾನ ಉಂಟಾದರೆ ಆಧಾರ್ ಕಾರ್ಡ್ ಸೇರಿದಂತೆ ಅಧಿಕೃತ ಗುರುತಿನ ಚೀಟಿಗಳನ್ನು ಪರಿಶೀಲಿಸಿ, 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡಬಾರದು ಎಂದು ಸರ್ಕಾರ ಸ್ಪಷ್ಟ ಸೂಚನೆ ನೀಡಿದೆ.

ಇದರ ಜೊತೆಗೆ ಮದ್ಯದಂಗಡಿಗಳ ಕಾರ್ಯಾಚರಣೆ ಸಮಯವನ್ನು ಕಡಿಮೆ ಮಾಡುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ. ಪ್ರಸ್ತುತ ಮಧ್ಯಾಹ್ನ 12ರಿಂದ ರಾತ್ರಿ 10ರವರೆಗೆ ಕಾರ್ಯನಿರ್ವಹಿಸುತ್ತಿರುವ ಅಂಗಡಿಗಳನ್ನು ರಾತ್ರಿ 8 ಗಂಟೆಗೆ ಮುಚ್ಚುವ ಪ್ರಸ್ತಾಪವೂ ಚರ್ಚೆಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ TASMAC ರಾಜ್ಯದ ಪ್ರಮುಖ ಆದಾಯ ಮೂಲಗಳಲ್ಲಿ ಒಂದಾಗಿದೆ. 2025ರಲ್ಲಿ 48,344 ಕೋಟಿ ರೂ. ಮೌಲ್ಯದ ಮದ್ಯ ಮಾರಾಟ ದಾಖಲಾಗಿದ್ದು, ಇದು ರಾಜ್ಯದ ಅತಿ ಹೆಚ್ಚು ಆದಾಯ ತರುವ ಇಲಾಖೆಗಳಲ್ಲೊಂದು ಎಂದು ಹೇಳಲಾಗಿದೆ.

ಸರ್ಕಾರದ ಆದೇಶದಂತೆ ದೇವಾಲಯಗಳ ಬಳಿ ಇರುವ 276 ಅಂಗಡಿಗಳು, ಶಿಕ್ಷಣ ಸಂಸ್ಥೆಗಳ ಸಮೀಪದ 186 ಅಂಗಡಿಗಳು ಹಾಗೂ ಬಸ್ ನಿಲ್ದಾಣಗಳ ಹತ್ತಿರದ 255 ಅಂಗಡಿಗಳನ್ನು ಮುಂದಿನ ಎರಡು ವಾರಗಳಲ್ಲಿ ಮುಚ್ಚಲಾಗುತ್ತದೆ. ಇದರಿಂದ ರಾಜ್ಯದಲ್ಲಿನ ಒಟ್ಟು TASMAC ಅಂಗಡಿಗಳ ಸಂಖ್ಯೆ 4,048ಕ್ಕೆ ಇಳಿಯಲಿದೆ.

ಯುವಜನರಲ್ಲಿ ಮಾದಕ ವ್ಯಸನ ತಡೆದು ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ. ಇದೇ ವೇಳೆ ಜೋಸೆಫ್ ವಿಜಯ್ ಅವರ ಟಿವಿಕೆ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ‘ಮಾದಕ ವಸ್ತು ಮುಕ್ತ ತಮಿಳುನಾಡು’ ನಿರ್ಮಿಸುವ ಭರವಸೆ ನೀಡಿತ್ತು.

error: Content is protected !!