Home Blog

ಸರ್ವ ರೋಗಕ್ಕೂ ರಾಮಬಾಣ ಮುಟ್ಟಿದರೆ ಮುನಿಯುವ ಗಿಡ: ಆರೋಗ್ಯಕ್ಕೆ ನೀಡುವ ಪ್ರಯೋಜನಗಳ ಮಾಹಿತಿ ಇಲ್ಲಿದೆ

0

ನಿಸರ್ಗದಲ್ಲಿ ಕಂಡುಬರುವ ಅತ್ಯಂತ ಕುತೂಹಲಕಾರಿ ಸಸ್ಯಗಳಲ್ಲಿ ‘ಮುಟ್ಟಿದರೆ ಮುನಿಯುವ ಗಿಡ’ ಅಥವಾ ಮೈಮೋಸಾ ಪುಡಿಕಾ (Mimosa pudica) ಪ್ರಮುಖವಾಗಿದೆ.

ಮುಟ್ಟಿದ ತಕ್ಷಣ ತನ್ನ ಎಲೆಗಳನ್ನು ಮುಚ್ಚಿಕೊಳ್ಳುವ ಈ ಸಸ್ಯವು ಕೇವಲ ಮಕ್ಕಳ ಆಟದ ವಸ್ತುವಲ್ಲ. ಆಯುರ್ವೇದದಲ್ಲಿ ‘ಲಜ್ಜಾಳು’ ಅಥವಾ ‘ನಮಸ್ಕಾರಿ’ ಎಂದು ಕರೆಯಲಾಗುವ ಈ ಗಿಡವು ಹಲವು ಔಷಧೀಯ ಗುಣಗಳನ್ನು ಹೊಂದಿದ್ದು, ಅನೇಕ ಆರೋಗ್ಯ ಸಮಸ್ಯೆಗಳ ನಿವಾರಣೆಯಲ್ಲಿ ಸಹಕಾರಿಯಾಗುತ್ತದೆ ಎಂದು ಆಯುರ್ವೇದ ಗ್ರಂಥಗಳು ಹಾಗೂ ಕೆಲವು ವೈಜ್ಞಾನಿಕ ಅಧ್ಯಯನಗಳು ತಿಳಿಸಿವೆ.

ಆಯುರ್ವೇದದ ಪ್ರಕಾರ, ಲಜ್ಜಾಳು ಗಿಡವು ಕಷಾಯ ಮತ್ತು ತಿಕ್ತ ರಸವನ್ನು ಹೊಂದಿದ್ದು, ಶೀತಲ ಸ್ವಭಾವದ ಸಸ್ಯವಾಗಿದೆ. ದೇಹದಲ್ಲಿನ ಕಫ ಮತ್ತು ಪಿತ್ತ ದೋಷಗಳನ್ನು ಸಮತೋಲನಗೊಳಿಸುವುದರ ಜೊತೆಗೆ ಉರಿಯೂತ ಹಾಗೂ ರಕ್ತಸ್ರಾವದ ಸಮಸ್ಯೆಗಳನ್ನು ನಿಯಂತ್ರಿಸಲು ಸಹಕಾರಿಯಾಗುತ್ತದೆ ಎಂದು ಹೇಳಲಾಗಿದೆ.

ಗಾಯಗಳು ಮತ್ತು ಅಲ್ಸರ್‌ಗಳಿಗೆ ನೆರವು

ಲಜ್ಜಾಳು ಗಿಡದ ಎಲೆಗಳಲ್ಲಿ ಬ್ಯಾಕ್ಟೀರಿಯಾ ವಿರೋಧಿ ಹಾಗೂ ರಕ್ತಸ್ರಾವ ನಿಯಂತ್ರಿಸುವ ಗುಣಗಳಿವೆ ಎಂದು ಆಯುರ್ವೇದದಲ್ಲಿ ಉಲ್ಲೇಖಿಸಲಾಗಿದೆ. ಇದರ ಎಲೆಗಳ ಪೇಸ್ಟ್ ಅನ್ನು ಗಾಯದ ಮೇಲೆ ಹಚ್ಚುವುದರಿಂದ ರಕ್ತಸ್ರಾವ ಕಡಿಮೆಯಾಗಲು ಹಾಗೂ ಗಾಯ ಶೀಘ್ರವಾಗಿ ಒಣಗಲು ನೆರವಾಗಬಹುದು.

ಮೂಲವ್ಯಾಧಿ ಸಮಸ್ಯೆಗೆ ಸಹಕಾರಿ

ಮೂಲವ್ಯಾಧಿಯಿಂದ ಬಳಲುವವರಿಗೆ ಈ ಗಿಡದ ಎಲೆ ಮತ್ತು ಬೇರುಗಳನ್ನು ಬಳಸಲಾಗುತ್ತದೆ. ಇದರಲ್ಲಿರುವ ‘ಮಿಮೋಸಿನ್’ (Mimosine) ಎಂಬ ಅಂಶವು ಉರಿಯೂತ ಮತ್ತು ನೋವನ್ನು ತಗ್ಗಿಸಲು ನೆರವಾಗುತ್ತದೆ ಎಂದು ಹೇಳಲಾಗುತ್ತದೆ. ಆದರೆ ಇದನ್ನು ವೈದ್ಯರ ಸಲಹೆಯ ಮೇರೆಗೆ ಮಾತ್ರ ಬಳಸುವುದು ಸೂಕ್ತ.

ಜೀರ್ಣಕ್ರಿಯೆ ಸುಧಾರಣೆಗೆ

ಭೇದಿ, ರಕ್ತಭೇದಿ ಹಾಗೂ ಅಲ್ಸರೇಟಿವ್ ಕೊಲೈಟಿಸ್‌ನಂತಹ ಕರುಳಿನ ಸಮಸ್ಯೆಗಳಲ್ಲಿ ಲಜ್ಜಾಳು ಗಿಡದಿಂದ ತಯಾರಿಸಿದ ಕಷಾಯವನ್ನು ಆಯುರ್ವೇದದಲ್ಲಿ ಬಳಸಲಾಗುತ್ತದೆ. ಇದು ಜೀರ್ಣಾಂಗವನ್ನು ತಂಪಾಗಿಸಿ, ಕರುಳಿನ ಆರೋಗ್ಯ ಕಾಪಾಡಲು ನೆರವಾಗುತ್ತದೆ ಎಂದು ನಂಬಲಾಗಿದೆ.

ಮಹಿಳೆಯರ ಆರೋಗ್ಯಕ್ಕೂ ಉಪಯುಕ್ತ

ಅತಿಯಾದ ಮುಟ್ಟಿನ ರಕ್ತಸ್ರಾವ ಹಾಗೂ ಬಿಳಿ ಸೆರಗಿನಂತಹ ಸಮಸ್ಯೆಗಳಿಗೆ ಈ ಗಿಡದ ತಾಜಾ ರಸ ಅಥವಾ ಬೇರಿನಿಂದ ತಯಾರಿಸಿದ ಕಷಾಯವನ್ನು ಆಯುರ್ವೇದ ಚಿಕಿತ್ಸೆಯಲ್ಲಿ ಬಳಸಲಾಗುತ್ತದೆ. ಇದು ಗರ್ಭಾಶಯದ ಆರೋಗ್ಯವನ್ನು ಸುಧಾರಿಸಲು ಸಹಕಾರಿಯಾಗುತ್ತದೆ ಎಂದು ಹೇಳಲಾಗಿದೆ.

ಚರ್ಮದ ಸಮಸ್ಯೆಗಳ ನಿವಾರಣೆ

ದದ್ದು, ತುರಿಕೆ, ಸೋರಿಯಾಸಿಸ್, ಹರಕು ಗಾಯಗಳು ಸೇರಿದಂತೆ ವಿವಿಧ ಚರ್ಮದ ಸಮಸ್ಯೆಗಳಿಗೆ ಲಜ್ಜಾಳು ಗಿಡದ ಎಲೆಗಳ ರಸವನ್ನು ಲೇಪನವಾಗಿ ಬಳಸಲಾಗುತ್ತದೆ. ಇದು ಸೋಂಕು ತಗ್ಗಿಸಿ ಚರ್ಮಕ್ಕೆ ಶಮನ ನೀಡುತ್ತದೆ ಎಂದು ಆಯುರ್ವೇದದಲ್ಲಿ ಉಲ್ಲೇಖಿಸಲಾಗಿದೆ.

ಮೈಗ್ರೇನ್ ಮತ್ತು ಒತ್ತಡ ಕಡಿಮೆ ಮಾಡಲು

ಮೈಗ್ರೇನ್ ಅಥವಾ ತಲೆನೋವಿನ ಸಂದರ್ಭದಲ್ಲಿ ಎಲೆಗಳ ಪೇಸ್ಟ್ ಅನ್ನು ಹಣೆಯ ಮೇಲೆ ಹಚ್ಚುವುದರಿಂದ ತಂಪಿನ ಅನುಭವ ದೊರೆಯಬಹುದು. ಜೊತೆಗೆ ನರಮಂಡಲವನ್ನು ಶಾಂತಗೊಳಿಸಿ ಮಾನಸಿಕ ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡಲು ಸಹಕಾರಿಯಾಗುತ್ತದೆ ಎಂದು ಹೇಳಲಾಗಿದೆ.

ಬಳಸುವಾಗ ಇರಲಿ ಎಚ್ಚರ

ಲಜ್ಜಾಳು ಗಿಡದ ಎಲೆ, ಬೇರು ಮತ್ತು ಬೀಜಗಳನ್ನು ಔಷಧೀಯ ಉದ್ದೇಶಗಳಿಗೆ ಬಳಸಲಾಗುತ್ತದೆ. ಆದರೆ ಈ ಸಸ್ಯವು ಗರ್ಭನಿರೋಧಕ ಗುಣಗಳನ್ನು ಹೊಂದಿರಬಹುದು ಎಂಬ ಉಲ್ಲೇಖಗಳಿರುವುದರಿಂದ, ಗರ್ಭಿಣಿಯರು ಹಾಗೂ ಮಗುವಿಗಾಗಿ ಪ್ರಯತ್ನಿಸುತ್ತಿರುವ ದಂಪತಿಗಳು ಇದನ್ನು ಸೇವಿಸಬಾರದು. ಯಾವುದೇ ಆಯುರ್ವೇದ ಔಷಧೀಯ ಸಸ್ಯವನ್ನು ಸ್ವಯಂ ಸೇವಿಸುವ ಬದಲು, ಅರ್ಹ ಆಯುರ್ವೇದ ವೈದ್ಯರ ಸಲಹೆ ಪಡೆದು ಬಳಸುವುದು ಸುರಕ್ಷಿತ.

ಪೊಲೀಸ್ ಎಂದರೂ ಬಿಡಲಿಲ್ಲ: ಗಂಗಮ್ಮನ ಗುಡಿ ಸರ್ಕಲ್ ಬಳಿ ಹೆಡ್ ಕಾನ್ಸ್‌ಟೇಬಲ್‌ಗೆ ಥಳಿತ

ಬೆಂಗಳೂರು: ಮಹಿಳೆಯೊಬ್ಬರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಹೆಡ್ ಕಾನ್ಸ್‌ಟೇಬಲ್‌ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ನಗರದ ಗಂಗಮ್ಮನ ಗುಡಿ ಸರ್ಕಲ್ ಬಳಿ ನಡೆದಿದೆ.

ಸಂಜಯನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್‌ ಮಂಜುನಾಥ್ ಹಲ್ಲೆಗೊಳಗಾದವರು. ಅವರು ಜಾಲಹಳ್ಳಿ ಕಡೆಗೆ ತೆರಳಲು ಬಸ್ ಹತ್ತಿದ್ದ ವೇಳೆ ಬಸ್‌ನಲ್ಲಿ ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ವಿಚಾರವಾಗಿ ಬಸ್‌ನಲ್ಲಿ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಬಳಿಕ ಮಹಿಳೆ ತನ್ನ ಸಂಬಂಧಿಕರಿಗೆ ಕರೆ ಮಾಡಿ ಗಂಗಮ್ಮನ ಗುಡಿ ಸರ್ಕಲ್ ಬಳಿ ಬರುವಂತೆ ತಿಳಿಸಿದ್ದಾಳೆ ಎನ್ನಲಾಗಿದೆ.

ಬಸ್ ಗಂಗಮ್ಮನ ಗುಡಿ ಸರ್ಕಲ್ ಬಳಿ ಬರುತ್ತಿದ್ದಂತೆ ಸ್ಥಳಕ್ಕೆ ಬಂದ ಯುವಕರ ಗುಂಪು ಹೆಡ್ ಕಾನ್ಸ್‌ಟೇಬಲ್‌ ಮೇಲೆ ಹಲ್ಲೆ ನಡೆಸಿದೆ ಎಂದು ತಿಳಿದುಬಂದಿದೆ. ತಾನು ಪೊಲೀಸ್ ಸಿಬ್ಬಂದಿ ಎಂದು ಹೇಳಿಕೊಂಡರೂ ಬಿಡದೆ ಹಲ್ಲೆ ನಡೆಸಿದ್ದು, ಬಟ್ಟೆ ಹರಿದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಹಲ್ಲೆಯಿಂದ ಮಂಜುನಾಥ್ ಅವರ ಮುಖ ಹಾಗೂ ದೇಹದ ವಿವಿಧ ಭಾಗಗಳಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸಂಬಂಧ ಮಹಿಳೆ ಹಾಗೂ ಪೊಲೀಸ್ ಹೆಡ್ ಕಾನ್ಸ್‌ಟೇಬಲ್‌ ಇಬ್ಬರೂ ಪರಸ್ಪರ ದೂರು-ಪ್ರತಿದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆ ಕುರಿತು ತನಿಖೆ ಮುಂದುವರಿಸಿದ್ದಾರೆ.

ಲೋಕಾಯುಕ್ತ ತನಿಖೆಯಲ್ಲಿ ಸಾಬೀತಾದ ಅಕ್ರಮ: ಪಂಚಾಯಿತಿ ಮಾಜಿ ಅಧ್ಯಕ್ಷ ಸೇರಿ ಮೂವರಿಗೆ ಜೈಲು, ತಲಾ ₹90 ಸಾವಿರ ದಂಡ

ವಿಜಯನಗರ/ ಹಗರಿಬೊಮ್ಮನಹಳ್ಳಿ: ಇಂದಿರಾ ಆವಾಸ್ ಯೋಜನೆಯ ಅನುದಾನವನ್ನು ದುರ್ಬಳಕೆ ಮಾಡಿಕೊಂಡ ಪ್ರಕರಣದಲ್ಲಿ ಮಾರಿಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿಯ ಮೂವರು ಆರೋಪಿಗಳಿಗೆ ವಿಜಯನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಮೂರು ವರ್ಷಗಳ ಜೈಲು ಶಿಕ್ಷೆ ಹಾಗೂ ತಲಾ ₹90 ಸಾವಿರ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ವಿಜಯನಗರ ಲೋಕಾಯುಕ್ತ ಠಾಣೆಯಲ್ಲಿ 2016ರಲ್ಲಿ ದಾಖಲಾಗಿದ್ದ ಕ್ರೈಂ ಸಂಖ್ಯೆ 01/2016 ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ಜುಲೈ 28ರಂದು ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದೆ. ಪ್ರಕರಣದಲ್ಲಿ ಇಂದಿರಾ ಆವಾಸ್ ಯೋಜನೆಯ ಅನುದಾನವನ್ನು ಅಕ್ರಮವಾಗಿ ದುರ್ಬಳಕೆ ಮಾಡಿಕೊಂಡಿರುವ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಶಿಕ್ಷೆಗೆ ಗುರಿಯಾದವರು ಆರೋಪಿ ಸಂಖ್ಯೆ-02 ಶಾಂತಾರಾಮ್ (ಆಗಿನ ಗ್ರಾಮ ಪಂಚಾಯಿತಿ ಕಾರ್ಯದರ್ಶಿ), ಆರೋಪಿ ಸಂಖ್ಯೆ-03 ಕನಕಪ್ಪ (ಗ್ರಾಮ ಪಂಚಾಯಿತಿ ಸದಸ್ಯ) ಹಾಗೂ ಆರೋಪಿ ಸಂಖ್ಯೆ-05 ರಾಮಚಂದ್ರ ನಾಯ್ಕ (ಆಗಿನ ಗ್ರಾಮ ಪಂಚಾಯಿತಿ ಅಧ್ಯಕ್ಷ). ಮೂವರಿಗೂ ತಲಾ ಮೂರು ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ₹90,000 ದಂಡ ವಿಧಿಸಲಾಗಿದೆ.

ಪ್ರಕರಣದ ತನಿಖೆಯನ್ನು ಕರ್ನಾಟಕ ಲೋಕಾಯುಕ್ತ ಹೊಸಪೇಟೆ ವಿಭಾಗದ ಆಗಿನ ಡಿವೈಎಸ್ಪಿ ಎನ್.ಆರ್. ಮಹಾಲಿಂಗಾರೆಡ್ಡಿ ನಡೆಸಿದ್ದರು. ತನಿಖೆ ವೇಳೆ ಆರೋಪಿಗಳ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988ರ ಕಲಂ 13(1)(ಡಿ) ಸಹಿತ 13(2) ಹಾಗೂ ಭಾರತೀಯ ದಂಡ ಸಂಹಿತೆಯ (ಐಪಿಸಿ) ಕಲಂ 420, 468 ಮತ್ತು 471 ಅಡಿಯಲ್ಲಿ ಆರೋಪಗಳು ಸಾಬೀತಾಗುವಂತೆ ಸಾಕ್ಷ್ಯ ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಲಾಗಿತ್ತು.

ನ್ಯಾಯಾಲಯದಲ್ಲಿ ಕರ್ನಾಟಕ ಲೋಕಾಯುಕ್ತದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಜಿ. ನಾಗರಾಜ ವಾದ ಮಂಡಿಸಿದ್ದರು. ವಿಚಾರಣೆ ನಡೆಸಿದ ವಿಜಯನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ ಶಿಕ್ಷೆ ವಿಧಿಸಿದೆ.

ಈ ಕುರಿತು ಕರ್ನಾಟಕ ಲೋಕಾಯುಕ್ತ, ಬಳ್ಳಾರಿ ಪೊಲೀಸ್ ಅಧೀಕ್ಷಕ ವಾಸುದೇವ ರಾಮ್ ಎನ್. ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಸರ್ಕಾರಿ ಯೋಜನೆಗಳ ಅನುದಾನ ದುರ್ಬಳಕೆ ಮಾಡುವವರ ವಿರುದ್ಧ ಕಾನೂನು ಕಠಿಣ ಕ್ರಮ ಕೈಗೊಳ್ಳಲಿದೆ ಎಂಬ ಸಂದೇಶವನ್ನು ಈ ತೀರ್ಪು ನೀಡಿದೆ.

ಕರ್ನಾಟಕದಲ್ಲಿ ಇಂದಿನಿಂದ ಮೂರು ದಿನ ಭಾರಿ ಮಳೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ!

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಇಂದಿನಿಂದ ಜುಲೈ 31ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಈ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಅತಿ ಭಾರಿ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ತಗ್ಗು ಪ್ರದೇಶದ ನಿವಾಸಿಗಳು ಹಾಗೂ ಮೀನುಗಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಇನ್ನೊಂದೆಡೆ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ 28 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಮಳೆಯಾಗುವ ನಿರೀಕ್ಷೆಯಿದೆ. ಒಳನಾಡಿನ ಹಲವು ಜಿಲ್ಲೆಗಳಲ್ಲೂ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದ್ದರೆ, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲೂ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹವಾಮಾನ ವೈಪರೀತ್ಯ ಹಾಗೂ ಬಲವಾದ ಗಾಳಿಯ ಹಿನ್ನೆಲೆ ಸಾರ್ವಜನಿಕರು ಅನಗತ್ಯ ಪ್ರಯಾಣ ತಪ್ಪಿಸಿ, ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಶವವಾಹನ ಬಾಡಿಗೆ ಇಳಿಕೆಗೆ ಸಾರ್ವಜನಿಕರ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಪುರಸಭೆ ಹೊಸದಾಗಿ ಖರೀದಿಸಿರುವ ಶವವಾಹನ (ಮುಕ್ತಿವಾಹಿನಿ) ಸೇವೆಗೆ ನಿಗದಿಪಡಿಸಿರುವ ₹2,000 ಬಾಡಿಗೆ ಶುಲ್ಕವನ್ನು ಕಡಿಮೆ ಮಾಡಿ ₹500ಕ್ಕೆ ನಿಗದಿಪಡಿಸಬೇಕು ಎಂದು ಸಾರ್ವಜನಿಕರು ಮಂಗಳವಾರ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ನಾಗರಾಜ ಚಿಂಚಲಿ, ಈ ಹಿಂದೆ ಬಳಕೆಯಲ್ಲಿದ್ದ ಶವವಾಹನ ಸಂಪೂರ್ಣ ಶಿಥಿಲಗೊಂಡಿದ್ದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿತ್ತು. ಹೊಸ ವಾಹನ ಖರೀದಿಸಿರುವುದು ಸ್ವಾಗತಾರ್ಹ ಕ್ರಮವಾದರೂ, ಏಕಾಏಕಿ ₹2,000 ಸೇವಾ ಶುಲ್ಕ ನಿಗದಿಪಡಿಸಿರುವುದು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಭಾರವಾಗಲಿದೆ ಎಂದು ಹೇಳಿದರು.

ಜನಸಾಮಾನ್ಯರ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಶವವಾಹನದ ಬಾಡಿಗೆ ದರವನ್ನು ₹500ಕ್ಕೆ ನಿಗದಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಪುರಸಭೆ ವ್ಯವಸ್ಥಾಪಕಿ ಮಂಜುಳಾ ಹೂಗಾರ, ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಯಲ್ಲಪ್ಪ ಜಾಲಗಾರ, ಬಸವರಾಜ ದೊಡ್ಡಮನಿ, ಶಿವಣ್ಣ ಕಟಗಿ, ಸದಾನಂದ ನಂದೆಣ್ಣವರ, ಪ್ರಕಾಶ ಕೊಂಚಿಗೇರಿಮಠ, ಟಾಕಪ್ಪ ಸಾತಪೂತೆ, ಎಂ.ಆರ್. ಪಾಟೀಲ, ಅಪ್ಪಣ್ಣ ಮುಳಗುಂದ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಎಸ್‌ಐಆರ್ ಯಶಸ್ಸಿಗೆ ಸಾರ್ವಜನಿಕರ ಸಹಕಾರ ಅಗತ್ಯ: ಸಿ.ಆರ್. ಮುಂಡರಗಿ

0

ವಿಜಯಸಾಕ್ಷಿ ಸುದ್ದಿ, ಗದಗ: ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 (ಎಸ್‌ಐಆರ್) ಕುರಿತು ಯಾವುದೇ ಊಹಾಪೋಹಗಳಿಗೆ ಕಿವಿಗೊಡದೆ, ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಬಿಎಲ್‌ಒಗಳಿಗೆ ಸಮರ್ಪಕ ಮಾಹಿತಿ ನೀಡಿ ಪ್ರಕ್ರಿಯೆಗೆ ಸಹಕರಿಸಬೇಕು. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಪಾರದರ್ಶಕ ಹಾಗೂ ನಿಖರ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದೇ ಈ ವಿಶೇಷ ಪರಿಷ್ಕರಣೆಯ ಉದ್ದೇಶವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ನರಸಾಪುರ ಕೈಗಾರಿಕಾ ವಸಾಹತು ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 (ಎಸ್‌ಐಆರ್) ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದ ಸದೃಢತೆಗೆ ನಿಖರ ಮತದಾರರ ಪಟ್ಟಿ ಅತ್ಯಂತ ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ಹೊಸದಾಗಿ ಸಿದ್ಧಪಡಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಈ ಹಿಂದೆ ಪಟ್ಟಿಯಲ್ಲಿದ್ದ ಮತದಾರರು ಈಗಲೂ ಅದೇ ಸ್ಥಳದಲ್ಲಿದ್ದಾರೆಯೇ, ಹೊಸದಾಗಿ ಸೇರ್ಪಡೆಯಾಗಬೇಕಾದವರು ಯಾರು ಎಂಬುದನ್ನು ಗುರುತಿಸಿ ದೃಢೀಕರಿಸುವ ಉದ್ದೇಶದಿಂದ ಎಸ್‌ಐಆರ್-2026 ಕಾರ್ಯ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯಕ ಕಾನೂನು ಅಭಿರಕ್ಷಕ ಗುರುರಾಜ ಬಿ. ಗೌರಿ ತಿಳಿಸಿದರು.

ಬಿಎಲ್‌ಒಗಳು ಮನೆ-ಮನೆಗೆ ಭೇಟಿ ನೀಡಿದಾಗ ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ನೀಡಿ ಸೂಕ್ತ ನಮೂನೆಗಳನ್ನು ಭರ್ತಿ ಮಾಡಿಕೊಡಬೇಕು. ಇದರಿಂದ ನಿಖರ ಮತದಾರರ ಪಟ್ಟಿ ಸಿದ್ಧಪಡಿಸಲು ಅನುಕೂಲವಾಗುತ್ತದೆ. ಪ್ರತಿಯೊಬ್ಬ ಅರ್ಹ ನಾಗರಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಡಾ. ಶಿವಪ್ಪ ಮರಿಬಸಪ್ಪ ಕುರಿ ಮಾತನಾಡಿ, ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026ರ ಮಹತ್ವವನ್ನು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಅರಿತುಕೊಂಡು ಚುನಾವಣಾ ಆಯೋಗದ ಕಾರ್ಯಕ್ಕೆ ಸಹಕರಿಸಬೇಕು ಎಂದು ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ಪಿ.ಎಚ್. ಕ್ಯಾರಕೊಪ್ಪ ಸ್ವಾಗತಿಸಿದರು. ಐಕ್ಯೂಎಸಿ ಸಂಚಾಲಕ ಖಲೀಲ್ ಅಹ್ಮದ್ ಚಿಕ್ಕೇರೂರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಹಾಯಕ ಪ್ರಾಧ್ಯಾಪಕ ಮಲಪ್ಪ ಹೊಸೂರು ಕಾರ್ಯಕ್ರಮ ನಿರೂಪಿಸಿ, ಡಾ. ಮಹಾದೇವ ವಡೇಕಾರ ವಂದಿಸಿದರು.

ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಲು ರೈತ ಸಂಘ ಒತ್ತಾಯ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಭೀಕರ ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆ ನಷ್ಟಕ್ಕೊಳಗಾದ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು. ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಎಂದು ಘೋಷಿಸಬೇಕು. ಇಲ್ಲವಾದರೆ ಜಿಲ್ಲೆಯಾದ್ಯಂತ ಹೋರಾಟ ನಡೆಸಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಶಂಕರಗೌಡ ಜಾಯನಗೌಡ್ರ ಎಚ್ಚರಿಕೆ ನೀಡಿದರು.

ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೂ ಮನವಿ ಸಲ್ಲಿಸಲಾಗಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯ ಹಲವು ಕಡೆ ಮಳೆಮಾಪನ ಯಂತ್ರಗಳು ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದ ಮಳೆಯ ನಿಖರ ಅಂಕಿಅಂಶಗಳು ಲಭ್ಯವಾಗದೇ ವಾಸ್ತವ ಪರಿಸ್ಥಿತಿ ಸರ್ಕಾರದ ಗಮನಕ್ಕೆ ಬರುತ್ತಿಲ್ಲ ಎಂದು ಆರೋಪಿಸಿದರು.

ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಪ್ರದೇಶ ಎಂದು ಘೋಷಿಸಬೇಕು. ರೈತರ ಜಾನುವಾರುಗಳ ರಕ್ಷಣೆಗೆ ಮೇವು ಬ್ಯಾಂಕ್‌ಗಳನ್ನು ಆರಂಭಿಸಬೇಕು. ಕೆರೆ ತುಂಬಿಸುವ ಯೋಜನೆಯನ್ನು ತಕ್ಷಣ ಸಕ್ರಿಯಗೊಳಿಸಬೇಕು. ಕಳೆದ ವರ್ಷ ತಂತ್ರಾಂಶದ ದೋಷದಿಂದ ಬೆಳೆ ವಿಮೆ ಹಾಗೂ ಬೆಳೆ ಪರಿಹಾರ ವಿತರಣೆಯಲ್ಲಿ ಅನೇಕ ರೈತರು ವಂಚಿತರಾಗಿದ್ದಾರೆ. ಈ ಬಾರಿ ಅಂತಹ ಸಮಸ್ಯೆ ಮರುಕಳಿಸದಂತೆ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ರವಿ ವಗ್ಗನವರ, ಉಪಾಧ್ಯಕ್ಷ ಗಿರೀಶ ಹೊಸಮನಿ, ಕಾರ್ಯದರ್ಶಿ ಈಶ್ವರ ಬಿ. ಗದಗಿನ, ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಸಂಚಾಲಕ ಶರಣಪ್ಪ ಕಮ್ಮಾರ, ಕಾರ್ಯದರ್ಶಿ ರೇವಣಸಿದ್ದಪ್ಪ ಬಿಡನಾಳ ಉಪಸ್ಥಿತರಿದ್ದರು.

ಅದ್ದೂರಿ ಸ್ವಾತಂತ್ರ್ಯೋತ್ಸವಕ್ಕೆ ಜಿಲ್ಲಾಡಳಿತ ಸಜ್ಜು

0

ವಿಜಯಸಾಕ್ಷಿ ಸುದ್ದಿ, ಗದಗ: ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯನ್ನು ರಾಷ್ಟ್ರಹಬ್ಬದ ಘನತೆಗೆ ತಕ್ಕಂತೆ ಶಿಷ್ಠಾಚಾರ ಪಾಲನೆಯೊಂದಿಗೆ ಅರ್ಥಪೂರ್ಣವಾಗಿ, ಶಿಸ್ತುಬದ್ಧವಾಗಿ ಹಾಗೂ ಅದ್ದೂರಿಯಾಗಿ ಆಚರಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರದ ಗೌರವ ಮತ್ತು ಹೆಮ್ಮೆಯ ಸಂಕೇತವಾಗಿದ್ದು, ಕಾರ್ಯಕ್ರಮದ ಪ್ರತಿಯೊಂದು ಹಂತದಲ್ಲೂ ಸರ್ಕಾರದ ಶಿಷ್ಟಾಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆಹ್ವಾನ ಪತ್ರಿಕೆಗಳ ಮುದ್ರಣ, ಅತಿಥಿಗಳ ಆಸನ ವ್ಯವಸ್ಥೆ, ವೇದಿಕೆ ಸಿದ್ಧತೆ ಸೇರಿದಂತೆ ಎಲ್ಲ ವ್ಯವಸ್ಥೆಗಳು ಯಾವುದೇ ಲೋಪವಾಗದಂತೆ ನಿರ್ವಹಿಸಬೇಕು ಎಂದು ಸೂಚಿಸಿದರು.

ರಾಜ್ಯ ಸರ್ಕಾರದ ಶಿಷ್ಟಾಚಾರ ನಿಯಮಾವಳಿಯಂತೆ ಜನಪ್ರತಿನಿಧಿಗಳು, ಮಾಜಿ ಜನಪ್ರತಿನಿಧಿಗಳು, ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಸ್ಥರು, ಹಿರಿಯ ನಾಗರಿಕರು, ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಸಾರ್ವಜನಿಕರಿಗೆ ಸಕಾಲದಲ್ಲಿ ಆಹ್ವಾನ ನೀಡಬೇಕು. ಯಾವುದೇ ಅರ್ಹ ವ್ಯಕ್ತಿ ಆಹ್ವಾನದಿಂದ ವಂಚಿತರಾಗದಂತೆ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಧ್ವಜಾರೋಹಣ, ಗೌರವ ವಂದನೆ, ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮ, ಕುಡಿಯುವ ನೀರು, ಶೌಚಾಲಯ, ವೈದ್ಯಕೀಯ ನೆರವು, ಅಗ್ನಿಶಾಮಕ ವ್ಯವಸ್ಥೆ, ತುರ್ತು ನಿರ್ಗಮನ ಹಾಗೂ ವಾಹನ ನಿಲುಗಡೆ ವ್ಯವಸ್ಥೆ ಸೇರಿದಂತೆ ಎಲ್ಲ ಮೂಲಸೌಲಭ್ಯಗಳನ್ನು ಮುಂಚಿತವಾಗಿಯೇ ಸಿದ್ಧಪಡಿಸುವಂತೆ ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡಿದರು.

ನಗರದ ಪ್ರಮುಖ ವೃತ್ತಗಳು, ಸರ್ಕಾರಿ ಕಚೇರಿಗಳು ಹಾಗೂ ರಾಷ್ಟ್ರ ನಾಯಕರ ಪ್ರತಿಮೆಗಳಿರುವ ಸ್ಥಳಗಳ ಸ್ವಚ್ಛತೆಗೆ ಆದ್ಯತೆ ನೀಡಿ, ರಸ್ತೆಗಳನ್ನು ಅಲಂಕರಿಸುವ ಮೂಲಕ ರಾಷ್ಟ್ರಹಬ್ಬಕ್ಕೆ ತಕ್ಕ ವಾತಾವರಣ ನಿರ್ಮಿಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ಶಾಲಾ-ಕಾಲೇಜು ವಿದ್ಯಾರ್ಥಿಗಳು, ಎನ್‌ಸಿಸಿ, ಎನ್‌ಎಸ್‌ಎಸ್, ಸ್ಕೌಟ್ಸ್ ಮತ್ತು ಗೈಡ್ಸ್, ಪೊಲೀಸ್ ಹಾಗೂ ಇತರೆ ತಂಡಗಳ ಪಥಸಂಚಲನದ ಪೂರ್ವಾಭ್ಯಾಸವನ್ನು ನಿಗದಿತ ವೇಳಾಪಟ್ಟಿಯಂತೆ ನಡೆಸಬೇಕು. ಸಂಜೆ ವೇಳೆ ದೇಶಭಕ್ತಿ, ರಾಷ್ಟ್ರೀಯ ಏಕತೆ ಹಾಗೂ ಕನ್ನಡದ ಸಾಂಸ್ಕೃತಿಕ ವೈಭವ ಬಿಂಬಿಸುವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದರು.

ಸ್ವಾತಂತ್ರ್ಯ ದಿನಾಚರಣೆಯ ವೇಳೆ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಹೆಸ್ಕಾಂ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಪರ್ಯಾಯ ವಿದ್ಯುತ್ ವ್ಯವಸ್ಥೆ, ಜನರೇಟರ್, ಧ್ವನಿವರ್ಧಕ ಹಾಗೂ ಬೆಳಕಿನ ವ್ಯವಸ್ಥೆಯನ್ನು ಮುಂಚಿತವಾಗಿ ಪರಿಶೀಲಿಸಿ ಸಿದ್ಧವಾಗಿರಿಸಬೇಕು ಎಂದು ಸೂಚಿಸಿದರು.

ಪೊಲೀಸ್ ಇಲಾಖೆ ಭದ್ರತೆ ಹಾಗೂ ಸಂಚಾರ ನಿಯಂತ್ರಣ, ಆರೋಗ್ಯ ಇಲಾಖೆ ವೈದ್ಯಕೀಯ ತಂಡ ಮತ್ತು ಆಂಬ್ಯುಲೆನ್ಸ್, ಅಗ್ನಿಶಾಮಕ ಇಲಾಖೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ರಾಷ್ಟ್ರೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕರೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಡಿವೈಎಸ್‌ಪಿ ವಿದ್ಯಾನಂದ ನಾಯಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು.

“ರಾಷ್ಟ್ರಹಬ್ಬದ ಗೌರವಕ್ಕೆ ಧಕ್ಕೆಯಾಗದಂತೆ ಪ್ರತಿಯೊಂದು ವ್ಯವಸ್ಥೆಯನ್ನು ಶಿಷ್ಟಾಚಾರ ಹಾಗೂ ಶಿಸ್ತುಬದ್ಧವಾಗಿ ಪೂರ್ಣಗೊಳಿಸಿ, ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು.”
ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ, ಗದಗ

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ಗುರುರಾಜ ಬಳಗಾನೂರ

0

ವಿಜಯಸಾಕ್ಷಿ ಸುದ್ದಿ, ಗದಗ: ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಸ್ವಯಂ ಉದ್ಯೋಗ ಆರಂಭಿಸಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ 2026-27ನೇ ಸಾಲಿನ ‘ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ’ ಜಾರಿಗೊಳಿಸಲಾಗಿದ್ದು, ಆಗಸ್ಟ್ 31ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮಂಡಳಿಯ ನಿರ್ದೇಶಕ ಗುರುರಾಜ ಬಳಗಾನೂರ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಡಿಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ (ಕ್ಯಾಟರಿಂಗ್), ಅಂಗಡಿ, ಟೈಲರಿಂಗ್, ಟ್ಯಾಕ್ಸಿ ಹಾಗೂ ಹಸು ಸಾಕಾಣಿಕೆಯಂತಹ ಸ್ವಯಂ ಉದ್ಯೋಗ ಕೈಗೊಳ್ಳಲು ಯೋಜನೆಯಡಿ ಆರ್ಥಿಕ ನೆರವು ನೀಡಲಾಗುವುದು. ಅರ್ಹ ಫಲಾನುಭವಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

2025-26ನೇ ಸಾಲಿನಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ರಾಜ್ಯ ಸರ್ಕಾರ ₹25 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಅದರಲ್ಲಿ ₹20 ಕೋಟಿ ವೆಚ್ಚ ಮಾಡಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ‘ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ’ ಯೋಜನೆಯಡಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ₹15 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದು ಹೇಳಿದರು.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನೋಂದಾಯಿತ ಸಂಸ್ಥೆಗಳಲ್ಲಿ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ವಾರ್ಷಿಕ ₹1 ಲಕ್ಷ ಸಹಾಯಧನ ನೀಡುವ ಯೋಜನೆಯೂ ಜಾರಿಯಲ್ಲಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ಕನಿಷ್ಠ ₹100 ಕೋಟಿ ಅನುದಾನ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಲಾಗಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಬ್ರಾಹ್ಮಣ ಸಮುದಾಯದವರು ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಹೆಚ್ಚಿನ ಪ್ರಮಾಣದಲ್ಲಿ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಯೋಜನೆಗೆ ಅರ್ಜಿ ಸಲ್ಲಿಸಲು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು. ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ ಹೊಂದಿರಬೇಕು. ವಯಸ್ಸು 18ರಿಂದ 65 ವರ್ಷದೊಳಗಿರಬೇಕು. ಒಂದು ಕುಟುಂಬದಿಂದ ಒಬ್ಬರಿಗೆ ಮಾತ್ರ ಅವಕಾಶವಿದ್ದು, ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಸಾಲದ ಉದ್ದೇಶವನ್ನು ಆನ್‌ಲೈನ್ ಅರ್ಜಿಯಲ್ಲಿ ಸ್ಪಷ್ಟವಾಗಿ ನಮೂದಿಸಬೇಕು. ಅರ್ಜಿದಾರರ ಆಧಾರ್‌ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿದ್ದು, ಬ್ಯಾಂಕ್ ಖಾತೆ ಎನ್‌ಪಿಸಿಐ ಸೀಡ್ ಆಗಿರಬೇಕು ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಬ್ರಾಹ್ಮಣ ಸಂಘದ ಜಿಲ್ಲಾಧ್ಯಕ್ಷ ವೆಂಕಟೇಶ್ ಕುಲಕರ್ಣಿ, ಅನಿಲ ತೆಂಬದಮನಿ, ಕೃಷ್ಣಜಿ ನಾಡಗೇರ, ನಾಗರಾಜ ಕುಲಕರ್ಣಿ, ಕಿರಣ್ ಪೂಜಾರ, ಮೇಘಾ ಮುದಗಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹಂಪಾಪಟ್ಟಣಕ್ಕೆ ಸರ್ಕಾರಿ ಪಿಯು ಕಾಲೇಜಿಗೆ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಾಪಟ್ಟಣ ಗ್ರಾಮಕ್ಕೆ ಸರ್ಕಾರಿ ಪದವಿ ಪೂರ್ವ (ಪಿಯು) ಕಾಲೇಜು ಮಂಜೂರು ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು, ರೈತ ಸಂಘದ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಕ್ಷಾತೀತವಾಗಿ ಹೋರಾಟ ಆರಂಭಿಸಿ ಸೋಮವಾರ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಸಾಂಕೇತಿಕ ಮನವಿ ಸಲ್ಲಿಸಿದರು.

ಹೋರಾಟ ಸಮಿತಿಯ ಸಂಚಾಲಕ ಬುಡ್ಡಿ ಬಸವರಾಜ್ ಮಾತನಾಡಿ, “ಹಂಪಾಪಟ್ಟಣ ಸೇರಿದಂತೆ ಸುತ್ತಮುತ್ತಲಿನ 12 ಗ್ರಾಮಗಳ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ದೂರದ ಊರುಗಳಿಗೆ ತೆರಳಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಇದರಿಂದ ಬಡ ಹಾಗೂ ರೈತ ಕುಟುಂಬಗಳ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ. ಸರ್ಕಾರ ತಕ್ಷಣವೇ ಹಂಪಾಪಟ್ಟಣದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರು ಮಾಡಿ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬೇಕು” ಎಂದು ಒತ್ತಾಯಿಸಿದರು.

ರೈತ ಸಂಘದ ಮುಖಂಡ ಬಿ. ಕುಬೇರ ಮಾತನಾಡಿ, ರೈತ ಕುಟುಂಬಗಳ ಮಕ್ಕಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ದೊರೆಯುವ ನಿಟ್ಟಿನಲ್ಲಿ ಸರ್ಕಾರ ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲೇ ಸರ್ಕಾರಿ ಪಿಯು ಕಾಲೇಜು ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.

ಯುವ ಮುಖಂಡ ಟಿ. ಕೊಟ್ರೇಶ್ ಮಾತನಾಡಿ, ಹಂಪಾಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪಕ್ಷಾತೀತವಾಗಿ ಈ ಹೋರಾಟ ಆರಂಭಿಸಲಾಗಿದೆ. ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಕೂಡಲೇ ಕಾಲೇಜು ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ಎನ್. ನಾಗರಾಜ್ ಮಾತನಾಡಿ, ಹಂಪಾಪಟ್ಟಣದಲ್ಲಿ ಪದವಿ ಪೂರ್ವ ಕಾಲೇಜು ಆರಂಭಿಸಲು ಅಗತ್ಯ ಮೂಲಸೌಕರ್ಯಗಳಿದ್ದು, ಕಾಲೇಜು ಮಂಜೂರಾದರೆ ಸಾವಿರಾರು ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಬಳಿಕ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಸಿ.ಎಲ್. ಕುಮಾರ್, ಸಿದ್ದರ ಗಾಳಪ್ಪ, ಬಿ. ನಾಗರಾಜ್, ಪತ್ರಿ ಯಲ್ಲಪ್ಪ, ಗಾಳಮ್ಮನವರ ಹುಲುಗಪ್ಪ, ಭಜಂತ್ರಿ ಸೋಮನಾಥ್, ಜಿ. ಅಂಜಿನಪ್ಪ, ಶಿಗೇನಹಳ್ಳಿ ಬಸವರಾಜ್, ಬೆಸ್ತರು ಮಂಜುನಾಥ್, ಎಚ್.ಕೆ. ರಮೇಶ್, ತೀರ್ಥ ಪ್ರಸಾದ್, ಹಂಪಿನಕಟ್ಟಿ ಪ್ರವೀಣ್, ಉಪ್ಪಾರ್ ಹನುಮಂತಪ್ಪ, ಗೊಂದಲಿ ಪಕೀರಪ್ಪ, ಸಿದ್ದರ ಎಲ್ಲಪ್ಪ, ಎಚ್. ಅಶೋಕ್, ಕೆ. ನಜೀರ್ ಸಾಬ್, ವಡ್ಡರ ಹಾಲಪ್ಪ, ವಜೀರ್, ಬಿ.ಕೆ. ಬಸವರಾಜ್, ಕುಮಾರ್ ಮೊದಲಿಯಾರ್, ನಾಗೇಶ್, ಬಸವರಾಜ್, ನಿಂಗರಾಜ್ ಅಂಜಿನಿ ಸೇರಿದಂತೆ ಗ್ರಾಮಸ್ಥರು, ರೈತ ಸಂಘದ ಪದಾಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.