Home Blog

ಚುನಾವಣೋತ್ತರ ಸಮೀಕ್ಷೆ ನಂಬಲ್ಲ, ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ: ಡಿಕೆ. ಶಿವಕುಮಾರ್

ಗುವಾಹಟಿ: ಚುನಾವಣೋತ್ತರ ಸಮೀಕ್ಷೆಗಳು ನಮ್ಮ ಪರವಾಗಿರಲಿ, ಇಲ್ಲದಿರಲಿ ಅದರ ಮೇಲೆ ನನಗೆ ನಂಬಿಕೆ ಇಲ್ಲ. ನನ್ನ ತಂತ್ರಗಾರಿಕೆಯೇ ಬೇರೆ, ಈ ಬಾರಿ ಎಲ್ಲಾ ರಾಜ್ಯಗಳಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಗುವಾಹಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಸಭೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಚುನಾವಣೋತ್ತರ ಸಮೀಕ್ಷೆ ವರದಿಗಳ ಬಗ್ಗೆ ಕೇಳಿದಾಗ, “ಈ ಸಮೀಕ್ಷೆಗಳಲ್ಲಿ ಬಳಸುವ ಮಾದರಿ ಪ್ರಮಾಣ ಬಹಳ ಸಣ್ಣದಾಗಿರುತ್ತವೆ. ಹೀಗಾಗಿ ನಮ್ಮ ಲೆಕ್ಕಾಚಾರ ಬೇರೆ ಇದೆ. ನಾನು ಯಾವುದೇ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ನಂಬುವುದಿಲ್ಲ. ನಾನು ಇಲ್ಲಿಗೆ ಬಂದಿರುವುದೇ ನಮ್ಮ ಶಾಸಕರನ್ನು ರಕ್ಷಿಸಿ, ಮಾರ್ಗದರ್ಶನ ನೀಡಿ, ಶಕ್ತಿ ತುಂಬಲು” ಎಂದು ತಿಳಿಸಿದರು.

ಅಸ್ಸಾಂ ಚುನಾವಣೆ ಬಗ್ಗೆ ಕೇಳಿದಾಗ, “ನಮ್ಮ ಕಾರ್ಯಕರ್ತರು ಬಹಳ ವಿಭಿನ್ನ. ಹೀಗಾಗಿ ಅಸ್ಸಾಂನಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ನಮ್ಮ ನಾಯಕರ ಮೇಲೆ ನಮಗೆ ನಂಬಿಕೆ ಇದೆ. ಅವರು ಸಾಕಷ್ಟು ಪರಿಶ್ರಮ ಹಾಕಿದ್ದಾರೆ. ಮತದಾರರ ಮೇಲೆ ವಿಶ್ವಾಸವಿದೆ. ಅವರಿಗೆ ಬದಲಾವಣೆ ಬೇಕಾಗಿದೆ. ಆ ಬದಲಾವಣೆ ಸಿಗಲಿದೆ ಎಂಬ ಆತ್ಮವಿಶ್ವಾಸವಿದೆ” ಎಂದು ತಿಳಿಸಿದರು.

ತಮಿಳುನಾಡು ಚುನಾವಣೆ ಬಗ್ಗೆ ಕೇಳಿದಾಗ, “ದೇಶದಾದ್ಯಂತ  ಇಂಡಿಯಾ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರಲಿದೆ” ಎಂದರು. ಪಶ್ಚಿಮ ಬಂಗಾಳದಲ್ಲಿ ಇಂಡಿಯಾ ಮೈತ್ರಿಕೋಟ ಅಧಿಕಾರಕ್ಕೆ ಬರುವುದೇ ಎಂದು ಕೇಳಿದಾಗ, “ಪ್ರತಿ ರಾಜ್ಯದಲ್ಲೂ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ” ಎಂದರು.

 

ಧೋನಿಯಂತೆ 5 ಐಪಿಎಲ್ ಟ್ರೋಫಿ ಗೆಲ್ಲುವುದೇ ಗುರಿ: ಕೆಎಲ್ ರಾಹುಲ್

ನವದೆಹಲಿ: ಭಾರತದ ಸ್ಟಾರ್ ಕ್ರಿಕೆಟಿಗ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರ ಕೆಎಲ್ ರಾಹುಲ್, ಮಹೇಂದ್ರ ಸಿಂಗ್ ಧೋನಿಯವರಂತೆ ಐಪಿಎಲ್‌ನಲ್ಲಿ ಐದು ಟ್ರೋಫಿಗಳನ್ನು ಗೆಲ್ಲುವುದೇ ತಮ್ಮ ಪ್ರಮುಖ ಗುರಿ ಎಂದು ಹೇಳಿದ್ದಾರೆ.

ಇತ್ತೀಚೆಗೆ ಐಪಿಎಲ್‌ನಲ್ಲಿ ಧೋನಿ ದಾಖಲಿಸಿದ್ದ ಒಟ್ಟು 5,439 ರನ್‌ಗಳ ಸಾಧನೆಯನ್ನು ರಾಹುಲ್ ಮೀರಿದ್ದರು. ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಧೋನಿ ಅವರ ದಾಖಲೆಯನ್ನು ಮುರಿದಿರುವುದರ ಬಗ್ಗೆ ಮೊದಲಿಗೆ ತಮಗೆ ತಿಳಿದಿರಲಿಲ್ಲ ಎಂದು ಹೇಳಿದರು.

ಮಹೀ ಭಾಯ್ ಅವರ ದಾಖಲೆಯನ್ನು ಮುರಿದಿದ್ದೇನೆ ಎಂಬ ಅರಿವು ನನಗೆ ಇರಲಿಲ್ಲ. ವೈಯಕ್ತಿಕ ದಾಖಲೆಗಳು ಆತ್ಮವಿಶ್ವಾಸ ಹೆಚ್ಚಿಸಲು ಸಹಕಾರಿಯಾಗುತ್ತವೆ. ಆದರೆ ಧೋನಿಯವರಂತೆ ಐದು ಐಪಿಎಲ್ ಟ್ರೋಫಿಗಳನ್ನು ಗೆಲ್ಲುವುದು ನನಗೆ ಇನ್ನಷ್ಟು ಸಂತೋಷ ನೀಡುತ್ತದೆ ಎಂದು ರಾಹುಲ್ ತಿಳಿಸಿದ್ದಾರೆ.

ಕ್ರಿಕೆಟ್ ತಂಡದ ಆಟವಾಗಿದ್ದು, ವೈಯಕ್ತಿಕ ಸಾಧನೆಗಿಂತ ತಂಡದ ಯಶಸ್ಸಿಗೆ ಹೆಚ್ಚಿನ ಮಹತ್ವವಿದೆ ಎಂದು ಅವರು ಅಭಿಪ್ರಾಯಪಟ್ಟರು.

ಪ್ರತಿ ತಂಡದ ಗುರಿಯೂ ಟ್ರೋಫಿ ಗೆಲ್ಲುವುದೇ ಆಗಿರುತ್ತದೆ. ಅಂತಹ ತಂಡದ ಭಾಗವಾಗಿದ್ದು ಪ್ರಶಸ್ತಿ ಗೆಲ್ಲುವುದು ಆಟಗಾರನಿಗೆ ಅಪಾರ ತೃಪ್ತಿ ನೀಡುತ್ತದೆ. ಅದಕ್ಕಾಗಿ ಟ್ರೋಫಿ ಗೆಲ್ಲುವುದೇ ನನ್ನ ಪ್ರಮುಖ ಗುರಿ ಎಂದು ಹೇಳಿದರು.

ಚಿನ್ನಸ್ವಾಮಿ ಕ್ರೀಡಾಂಗಣದೊಂದಿಗೆ ತಮ್ಮ ಭಾವನಾತ್ಮಕ ನಂಟನ್ನು ಹಂಚಿಕೊಂಡ ರಾಹುಲ್, ಅದು ನನ್ನ ತವರಿನ ಮೈದಾನ. ಅಲ್ಲಿನ ವಾತಾವರಣ ನನಗೆ ಸದಾ ವಿಶೇಷ. ಜೊತೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಆಡುವುದು ಸಹ ಒಂದು ವಿಭಿನ್ನ ಅನುಭವ ಎಂದು ಹೇಳಿದ್ದಾರೆ.

ಮದುವೆ ನೆಪದಲ್ಲಿ ಮೋಸ: ಬೈಕ್ ದರೋಡೆ ಮಾಡುತ್ತಿದ್ದ ಆರೋಪಿಗೆ ಬಂಧನ – 14 ಬೈಕ್‌ಗಳ ಜಪ್ತಿ

0

ರಾಯಚೂರು: ಮದುವೆ ಬ್ರೋಕರ್ ಎಂಬ ನೆಪದಲ್ಲಿ ಜನರನ್ನು ಕರೆಸಿ ಬೈಕ್ ಹಾಗೂ ಹಣ ಕಸಿದುಕೊಳ್ಳುತ್ತಿದ್ದ ಆರೋಪಿಯನ್ನು ಕವಿತಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ದೊಡ್ಡಬಸವ ಎಂದು ಗುರುತಿಸಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಆರೋಪಿ “ಹೆಣ್ಣು ತೋರಿಸುವುದಾಗಿ” ಹೇಳಿ ಯುವಕರನ್ನು ಕರೆಸಿ, ಬಳಿಕ ಚಾಕು ತೋರಿಸಿ ಬೆದರಿಸಿ ಬೈಕ್ ಹಾಗೂ ಹಣ ಕಸಿದುಕೊಂಡು ಪರಾರಿಯಾಗುತ್ತಿದ್ದನು. ಈ ಸಂಬಂಧ ಕೊಪ್ಪಳ ಜಿಲ್ಲೆಯ ಶರಣಪ್ಪ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿತ್ತು. ಶರಣಪ್ಪ ತನ್ನ ಸ್ನೇಹಿತ ಈಶಪ್ಪ ಜೊತೆ ಕನ್ಯಾ ನೋಡಲು ಬಂದಿದ್ದ ವೇಳೆ ಈ ಘಟನೆ ನಡೆದಿದೆ.

ತನಿಖೆ ವೇಳೆ ಆರೋಪಿಯ ವಿರುದ್ಧ ಬಳ್ಳಾರಿ, ಸಿರಗುಪ್ಪ, ಗಂಗಾವತಿ, ಮಾನ್ವಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಇದೇ ರೀತಿಯ ಪ್ರಕರಣಗಳು ಬೆಳಕಿಗೆ ಬಂದಿವೆ. ಪೊಲೀಸರು ಆರೋಪಿಯ ಮನೆಯಲ್ಲಿ ದಾಳಿ ನಡೆಸಿ 8.40 ಲಕ್ಷ ರೂ. ಮೌಲ್ಯದ 14 ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ. ಅವುಗಳನ್ನು ಗಿರವಿ ಇಡುವ ಉದ್ದೇಶದಿಂದ ಸಂಗ್ರಹಿಸಿಟ್ಟಿದ್ದಾನೆ ಎಂಬುದು ತಿಳಿದುಬಂದಿದೆ.

ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪ್ರಕರಣದ ಮುಂದಿನ ತನಿಖೆ ಮುಂದುವರಿದಿದೆ.

ನೆಲಮಂಗಲ: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಹಿಟ್ ಅಂಡ್ ರನ್ʼಗೆ ಬಲಿ..!

ಬೆಂಗಳೂರು: ಕೆಲಸ ಮುಗಿಸಿ ರಾತ್ರಿ ಮನೆಗೆ ಮರಳುತ್ತಿದ್ದ ಬೈಕ್ ಸವಾರನಿಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪದ ಹುಸ್ಕೂರು ಎಪಿಎಂಸಿ ಬಳಿ ನಡೆದಿದೆ.

ಮೃತರನ್ನು ಬೆಂಗಳೂರು ಉತ್ತರ ತಾಲೂಕಿನ ವಡೇರಹಳ್ಳಿ ಗ್ರಾಮದ ನಿವಾಸಿ ಗಿರೀಶ್ (30) ಎಂದು ಗುರುತಿಸಲಾಗಿದೆ. ಅವರು ವೃತ್ತಿಯಿಂದ ಡ್ರೈವರ್ ಆಗಿದ್ದು, ಕುಟುಂಬದ ಜವಾಬ್ದಾರಿಯನ್ನು ಹೊತ್ತು ಬದುಕು ಸಾಗಿಸುತ್ತಿದ್ದರು.

ತಂದೆ ಪಾಪಣ್ಣ ನಿಧನದ ಬಳಿಕ ತಾಯಿ ಜಯಮ್ಮ ಅವರೊಂದಿಗೆ ಕುಟುಂಬದ ಆಧಾರವಾಗಿದ್ದ ಗಿರೀಶ್, ಡ್ರೈವಿಂಗ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಶುಕ್ರವಾರ ತಡರಾತ್ರಿ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಶುಕ್ರವಾರ ರಾತ್ರಿ ಸುಮಾರು 12:41ರ ಸುಮಾರಿಗೆ ಟಾಟಾ ಏಸ್ ವಾಹನವು ಗಿರೀಶ್ ಚಲಾಯಿಸುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಗಿರೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಸಂಪೂರ್ಣ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಪಘಾತದ ಬಳಿಕ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಮಾಹಿತಿ ತಿಳಿದ ತಕ್ಷಣ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಪರಾರಿಯಾದ ಚಾಲಕನ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ವಾಣಿಜ್ಯ ಸಿಲಿಂಡರ್ ದರ ಏರಿಕೆ ಬಡವರ ವಿರೋಧಿ ನೀತಿ: ಕೇಂದ್ರ ಸರ್ಕಾರ ವಿರುದ್ಧ ಸಚಿವ ಈಶ್ವರ್ ಖಂಡ್ರೆ ವಾಗ್ದಾಳಿ

ಬೆಂಗಳೂರು: ಪಂಚರಾಜ್ಯಗಳ ಚುನಾವಣಾ ಮತದಾನ ಮುಗಿದ ತಕ್ಷಣವೇ ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಹಾಗೂ ಆಟೋ ಗ್ಯಾಸ್ ದರ ಏರಿಕೆ ಮಾಡಿರುವುದು ಬಡವರ ವಿರೋಧಿ ನೀತಿಯ ಮತ್ತೊಂದು ಉದಾಹರಣೆ ಎಂದು ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ್ ಖಂಡ್ರೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 1ರಿಂದ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಸುಮಾರು 1,300 ರೂಪಾಯಿ ಏರಿಕೆಯಾಗಿದೆ ಎಂದು ಆರೋಪಿಸಿದರು.

“ಈ ದರ ಏರಿಕೆಯಿಂದ ಹೋಟೆಲ್ ಮಾಲೀಕರು ಅನಿವಾರ್ಯವಾಗಿ ಊಟ, ತಿಂಡಿ, ಕಾಫಿ ಮತ್ತು ಟೀ ದರವನ್ನು ಹೆಚ್ಚಿಸಬೇಕಾಗುತ್ತದೆ. ಇದರ ನೇರ ಹೊರೆ ಸಾಮಾನ್ಯ ಜನರ ಮೇಲೇ ಬೀಳಲಿದೆ. ಮತದಾನ ಮುಗಿದ ಕೂಡಲೇ ಬಡ ಹಾಗೂ ಮಧ್ಯಮ ವರ್ಗದ ಬದುಕನ್ನು ಇನ್ನಷ್ಟು ದುರ್ಬರಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ,” ಎಂದು ಖಂಡ್ರೆ ಟೀಕಿಸಿದರು.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮ ಸಮರ್ಪಕವಾಗಿ ಅಡುಗೆ ಅನಿಲ ಪೂರೈಕೆ ಆಗದೆ ಹಲವು ಹೋಟೆಲ್‌ಗಳು ಈಗಾಗಲೇ ಬಂದ್ ಆಗಿದ್ದು, ಅನೇಕ ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದರು. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲೇ ಪ್ರತಿ ಸಿಲಿಂಡರ್‌ಗೆ 993 ರೂಪಾಯಿ ಹೆಚ್ಚಳ ಮಾಡಿರುವುದು ಕಾರ್ಮಿಕ ದಿನಾಚರಣೆಯಂದೇ ಕಾರ್ಮಿಕ ವಿರೋಧಿ ನಿಲುವು ಪ್ರದರ್ಶಿಸಿದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಟೋ ಚಾಲಕರಿಗೂ ಸಿಎನ್‌ಜಿ ಕೊರತೆಯಿಂದ ತೀವ್ರ ತೊಂದರೆ ಎದುರಾಗಿದ್ದು, ಗಂಟೆಗಟ್ಟಲೆ ಸರತಿಯಲ್ಲಿ ನಿಂತರೂ ಅನಿಲ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲೂ ಕೇಂದ್ರ ಸರ್ಕಾರ ಮತ್ತಷ್ಟು ಹೊರೆ ಹಾಕಿದೆ ಎಂದು ಖಂಡ್ರೆ ಆರೋಪಿಸಿದರು.

ಯುಪಿಎ ಆಡಳಿತಾವಧಿಯಲ್ಲಿ ಅಡುಗೆ ಅನಿಲ ದರ 10ರಿಂದ 15 ರೂಪಾಯಿ ಹೆಚ್ಚಾದರೂ ದೊಡ್ಡ ಮಟ್ಟದಲ್ಲಿ ಟೀಕೆ ಮಾಡುತ್ತಿದ್ದ ಬಿಜೆಪಿ ನಾಯಕರು, ಈಗ ಮೌನ ವಹಿಸಿರುವುದು ಏಕೆ ಎಂದು ಪ್ರಶ್ನಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ತಮ್ಮ ನಿಲುವು ಸ್ಪಷ್ಟಪಡಿಸಲಿ ಎಂದು ಸವಾಲು ಹಾಕಿದರು.

KRSನಲ್ಲಿ ಬೋಟ್ ದುರಂತ: ಮೀನು ಹಿಡಿಯಲು ಹೋದ ಯುವಕ ನಾಪತ್ತೆ!

ಮಂಡ್ಯ: ಮೀನುಗಾರಿಕೆಗೆ ದೋಣಿಯಲ್ಲಿ ತೆರಳಿದ್ದ ವೇಳೆ ಬಿರುಗಾಳಿಯ ಅಬ್ಬರಕ್ಕೆ ದೋಣಿ ಮಗುಚಿ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಹಿನ್ನೀರು ಪ್ರದೇಶದಲ್ಲಿ ನಡೆದಿದೆ.

ನಾಪತ್ತೆಯಾಗಿರುವ ಯುವಕನನ್ನು ಪಾಂಡವಪುರ ತಾಲೂಕಿನ ಗಿರಿಯಾರಹಳ್ಳಿ ಗ್ರಾಮದ ಮಧು (26) ಎಂದು ಗುರುತಿಸಲಾಗಿದೆ.

ಶುಕ್ರವಾರ ಸಂಜೆ ಮಧು ಮೀನು ಹಿಡಿಯಲು ಕೆಆರ್‌ಎಸ್ ಡ್ಯಾಂ ಹಿನ್ನೀರು ಪ್ರದೇಶಕ್ಕೆ ದೋಣಿಯಲ್ಲಿ ತೆರಳಿದ್ದಾನೆ. ಈ ವೇಳೆ ಏಕಾಏಕಿ ಬಿರುಗಾಳಿ ಬೀಸಿದ್ದು, ಅದರ ರಭಸಕ್ಕೆ ದೋಣಿ ನಿಯಂತ್ರಣ ತಪ್ಪಿ ಮಗುಚಿದೆ ಎಂದು ತಿಳಿದುಬಂದಿದೆ.

ದೋಣಿ ಮಗುಚಿದ ಪರಿಣಾಮ ಮಧು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ಘಟನೆ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ.

ಪ್ರಸ್ತುತ ನಾಪತ್ತೆಯಾದ ಯುವಕನಿಗಾಗಿ ತೀವ್ರ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಸ್ಥಳೀಯರು ಕೂಡ ಸಹಕಾರ ನೀಡುತ್ತಿದ್ದಾರೆ. ಈ ಘಟನೆ ಕೆಆರ್‌ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಜೋಗ್ ಫಾಲ್ಸ್ ನಲ್ಲಿ ಬಂಡೆ ಕುಸಿತ; ಭಾರೀ ಶಬ್ದಕ್ಕೆ ಬೆಚ್ಚಿಬಿದ್ದ ಪ್ರವಾಸಿಗರು, ಸ್ಥಳೀಯರು

ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ್ ಫಾಲ್ಸ್‌ನಲ್ಲಿ ಬಂಡೆಯೊಂದು ಕುಸಿದು ಬಿದ್ದ ಪರಿಣಾಮ ಭಾರೀ ಶಬ್ದ ಉಂಟಾಗಿ ಪ್ರವಾಸಿಗರು ಹಾಗೂ ಸ್ಥಳೀಯರು ಬೆಚ್ಚಿಬಿದ್ದ ಘಟನೆ ನಡೆದಿದೆ.

ಜೋಗ್ ಜಲಪಾತದ ರಾಕೆಟ್ ಫಾಲ್ಸ್ ಭಾಗದಲ್ಲಿ ಬಂಡೆಯ ಒಂದು ಪದರ ಕಳಚಿ ಬಿದ್ದಿದ್ದು, ಸುಮಾರು 100 ಅಡಿ ಎತ್ತರದಿಂದ ಈ ಕುಸಿತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಬಂಡೆ ಕುಸಿದ ರಭಸಕ್ಕೆ ಭಾರೀ ಶಬ್ದ ಕೇಳಿಬಂದಿದ್ದು, ಸ್ಥಳದಲ್ಲಿದ್ದ ಪ್ರವಾಸಿಗರು ಕೆಲಕಾಲ ಆತಂಕಕ್ಕೊಳಗಾದರು. ಬಂಡೆ ಕೆಳಗೆ ಬೀಳುತ್ತಿದ್ದಂತೆ ಜಲಪಾತದ ಅಡಿಭಾಗದಲ್ಲಿದ್ದ ನೀರು ತೀವ್ರವಾಗಿ ಕಲಕಿದ ದೃಶ್ಯ ಕಂಡುಬಂದಿದೆ.

ಬೇಸಿಗೆ ಹಿನ್ನೆಲೆ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿರುವುದರಿಂದ ಬಂಡೆಗಳು ಬಿಸಿಲಿನ ತಾಪಕ್ಕೆ ಬಿಸಿಯಾಗಿ ಪದರ ಕಳಚಿರಬಹುದೆಂದು ಸ್ಥಳೀಯರು ಶಂಕಿಸಿದ್ದಾರೆ. ಈ ರೀತಿಯ ಘಟನೆಗಳು ಈ ಹಿಂದೆಯೂ ನಡೆದಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.

ಜಲಪಾತದ ಸುತ್ತಮುತ್ತಲಿನ ಪ್ರದೇಶದಲ್ಲಿ ಮತ್ತಷ್ಟು ಬಂಡೆ ಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

 

ಪಶ್ಚಿಮ ಬಂಗಾಳ ಮತ ಎಣಿಕೆ ಸಿಬ್ಬಂದಿ ನೇಮಕ ವಿವಾದ: ಟಿಎಂಸಿ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ (ಪಿಎಸ್ಯು) ನೌಕರರನ್ನು ನೇಮಿಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಈ ಸಂಬಂಧ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಟಿಎಂಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜಾಯ್ಮಲ್ಯ ಬಾಗ್ಚಿ ಅವರಿದ್ದ ಪೀಠ ನಡೆಸಿತು.

ವಿಚಾರಣೆ ವೇಳೆ ಟಿಎಂಸಿ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಚುನಾವಣಾ ಆಯೋಗ ಹೊರಡಿಸಿದ ಸುತ್ತೋಲೆ ರಾಜ್ಯ ಸರ್ಕಾರಿ ನೌಕರರನ್ನು ಉದ್ದೇಶಪೂರ್ವಕವಾಗಿ ಮತ ಎಣಿಕೆ ಪ್ರಕ್ರಿಯೆಯಿಂದ ಹೊರಗಿಡುವ ಉದ್ದೇಶ ಹೊಂದಿದೆ ಎಂದು ವಾದಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ, ಚುನಾವಣಾ ಆಯೋಗದ ನಿಯಮಗಳು ಸ್ಪಷ್ಟವಾಗಿವೆ ಎಂದು ತಿಳಿಸಿದರು. ಮತ ಎಣಿಕೆ ಮೇಲ್ವಿಚಾರಕರು ಹಾಗೂ ಸಹಾಯಕ ಸಿಬ್ಬಂದಿಯನ್ನು ಕೇಂದ್ರ ಅಥವಾ ರಾಜ್ಯ ಸರ್ಕಾರಿ ನೌಕರರಿಂದ ನೇಮಿಸಬಹುದು ಎಂದು ನಿಯಮದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಹೀಗಾಗಿ ಕೇಂದ್ರ ನೌಕರರನ್ನು ನೇಮಿಸುವುದು ಯಾವುದೇ ರೀತಿಯ ನಿಯಮ ಉಲ್ಲಂಘನೆ ಅಲ್ಲ ಎಂದು ಪೀಠ ಅಭಿಪ್ರಾಯಪಟ್ಟಿತು.

ಮತ ಎಣಿಕೆ ಸಂದರ್ಭದಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಏಜೆಂಟರು ಸ್ಥಳದಲ್ಲೇ ಹಾಜರಿರಲಿರುವುದರಿಂದ, ಮೇಲ್ವಿಚಾರಕರು ಕೇಂದ್ರದವರೇ ಅಥವಾ ರಾಜ್ಯದವರೇ ಎಂಬುದರಿಂದ ವಿಶೇಷ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಚುನಾವಣಾ ಆಯೋಗಕ್ಕೆ ನೇಮಕಾತಿ ಸಂಬಂಧ ಸಂಪೂರ್ಣ ಅಧಿಕಾರವಿದ್ದು, ಈ ಹಂತದಲ್ಲಿ ಹೊಸ ಆದೇಶ ನೀಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ ಸುಪ್ರೀಂಕೋರ್ಟ್, ಟಿಎಂಸಿ ಅರ್ಜಿಯನ್ನು ವಜಾಗೊಳಿಸಿತು.

ಇದೇ ವೇಳೆ, ಏಪ್ರಿಲ್ 13ರಂದು ಹೊರಡಿಸಿದ್ದ ಸುತ್ತೋಲೆಯನ್ನು ಸಂಪೂರ್ಣವಾಗಿ ಅನುಸರಿಸುವುದಾಗಿ ಚುನಾವಣಾ ಆಯೋಗ ನ್ಯಾಯಾಲಯಕ್ಕೆ ಭರವಸೆ ನೀಡಿದೆ. ಜೊತೆಗೆ ಮತ ಎಣಿಕೆ ಪ್ರಕ್ರಿಯೆಯ ವಿಡಿಯೊ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು 45 ದಿನಗಳವರೆಗೆ ಸಂರಕ್ಷಿಸುವುದಾಗಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಹೆಚ್ಚುವರಿ ನಿರ್ದೇಶನ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ರಸ್ತೆ ದಾಟುವಾಗಲೇ ದುರಂತ: ತಲೆ ಸುತ್ತಿ ಬಿದ್ದ ವಿದ್ಯಾರ್ಥಿ ಮೇಲೆ ಬಸ್ ಹರಿದು ಸಾವು!

ಬೆಂಗಳೂರು: ರಸ್ತೆ ದಾಟಲು ಕಾಯುತ್ತಿದ್ದ ವೇಳೆ ತಲೆಸುತ್ತಿ ಬಿದ್ದ ವಿದ್ಯಾರ್ಥಿಯೊಬ್ಬ ಖಾಸಗಿ ಬಸ್‌ಗೆ ಸಿಲುಕಿ ಮೃತಪಟ್ಟಿರುವ ದುರ್ಘಟನೆ ಬಾಗಲೂರು-ಹೆಣ್ಣೂರು ರಸ್ತೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ವರುಣ್ (16) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಸುಮಾರು 11 ಗಂಟೆ ವೇಳೆಗೆ ಈ ಘಟನೆ ಸಂಭವಿಸಿದೆ.

ತಂದೆಯ ಆರೋಗ್ಯ ಸರಿಯಿಲ್ಲದ ಹಿನ್ನೆಲೆ ಔಷಧಿ ತರಲು ವರುಣ್ ಮನೆಯಿಂದ ಹೊರಟಿದ್ದನು. ಬಾಗಲೂರು-ಹೆಣ್ಣೂರು ರಸ್ತೆಯಲ್ಲಿ ರಸ್ತೆ ದಾಟಲು ಕಾಯುತ್ತಿದ್ದ ವೇಳೆ ತಲೆಸುತ್ತಿ ಏಕಾಏಕಿ ಕೆಳಗೆ ಬಿದ್ದಿದ್ದಾನೆ. ಇದೇ ಸಂದರ್ಭದಲ್ಲಿ ಅಲ್ಲಿಂದ ಸಾಗುತ್ತಿದ್ದ ಖಾಸಗಿ ಬಸ್‌ನ ಅಡಿಗೆ ಸಿಲುಕಿದ್ದು, ಬಸ್ ತಲೆಯ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಈ ಭೀಕರ ಅಪಘಾತದ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪರಿಶೀಲನೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆ ಸಂಬಂಧ ಹೆಣ್ಣೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಧರ್ಮಸ್ಥಳ ಕುರಿತು ಅವಹೇಳನ ಆರೋಪ: ಗಿರೀಶ್ ಮಟ್ಟಣ್ಣನವರ್ ವಿರುದ್ಧ ಎಫ್‌ಐಆರ್

ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕಾವೇರಿ ಎಂಬವರು ನೀಡಿದ ದೂರು ಆಧಾರವಾಗಿ ಬೆಂಗಳೂರಿನ ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ದೂರಿನ ಪ್ರಕಾರ, ಗಿರೀಶ್ ಮಟ್ಟಣ್ಣನವರ್ ಅವರು ಯೂಟ್ಯೂಬ್ ಚಾನೆಲ್ ಮೂಲಕ ಧರ್ಮಸ್ಥಳ ಹಾಗೂ ಕ್ಷೇತ್ರದಲ್ಲಿ ಮದುವೆಯಾದ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹೇಳಿಕೆಗಳಿಂದ ಧಾರ್ಮಿಕ ಭಾವನೆಗಳಿಗೆ ಹಾಗೂ ಮಹಿಳೆಯರ ಗೌರವಕ್ಕೆ ಧಕ್ಕೆ ಉಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಾಹಿತಿಯಂತೆ, 2023ರ ಡಿಸೆಂಬರ್ 4ರಂದು ಉಜಿರೆಯಲ್ಲಿ ನಡೆದ ‘ಜನಾಂದೋಲ’ ಕಾರ್ಯಕ್ರಮದಲ್ಲಿ ಗಿರೀಶ್ ನೀಡಿದ ಭಾಷಣದ ವಿಡಿಯೋವನ್ನು ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗಿತ್ತು.

ಈ ಹಿನ್ನೆಲೆಯಲ್ಲಿ ದೂರು ದಾಖಲಿಸಿಕೊಂಡ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.

error: Content is protected !!