ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಯೋಗಾಭ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕೊಲೆ ಪ್ರಕರಣದ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಹಾಗೂ ಸಹ-ಆರೋಪಿಗಳು ಯೋಗಾಭ್ಯಾಸದಲ್ಲಿ ಭಾಗವಹಿಸಿ ಗಮನ ಸೆಳೆದಿದ್ದಾರೆ.
ಕಾರಾಗೃಹದಲ್ಲಿರುವ ಎಲ್ಲಾ ಕೈದಿಗಳಿಗಾಗಿ ಸಾಮೂಹಿಕ ಯೋಗಾಭ್ಯಾಸವನ್ನು ಹಮ್ಮಿಕೊಳ್ಳಲಾಗಿತ್ತು. ಆರಂಭದಲ್ಲಿ ತಮಗೆ ತೀವ್ರ ಬೆನ್ನುನೋವಿನ ಸಮಸ್ಯೆ ಇರುವುದಾಗಿ ತಿಳಿಸಿದ ನಟ ದರ್ಶನ್, ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಿಂದೇಟು ಹಾಕಿದ್ದರು.
ಈ ವಿಷಯ ತಿಳಿದ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಮಹಾನಿರ್ದೇಶಕ (ಡಿಜಿ) ಅಲೋಕ್ ಕುಮಾರ್ ಅವರು ದರ್ಶನ್ ಅವರನ್ನು ಕರೆಸಿ ಮಾತುಕತೆ ನಡೆಸಿದರು. “ಬೆನ್ನುನೋವಿನ ಸಮಸ್ಯೆಗೆ ಯೋಗ ಸಹಕಾರಿ. ಆರೋಗ್ಯ ಸುಧಾರಣೆಗೆ ಯೋಗಾಭ್ಯಾಸ ಅತ್ಯಂತ ಉಪಯುಕ್ತ” ಎಂದು ಮನವರಿಕೆ ಮಾಡಿ ಯೋಗದಲ್ಲಿ ಭಾಗವಹಿಸುವಂತೆ ಸಲಹೆ ನೀಡಿದರು.
ಡಿಜಿ ಅವರ ಸಲಹೆಯ ಬಳಿಕ ದರ್ಶನ್ ಯೋಗಾಭ್ಯಾಸಕ್ಕೆ ಒಪ್ಪಿಗೆ ಸೂಚಿಸಿದರು. ಆದರೆ ಜೈಲಿನ ಮುಖ್ಯ ಮೈದಾನದಲ್ಲಿ ನಡೆದ ಸಾಮೂಹಿಕ ಯೋಗದಲ್ಲಿ ಪಾಲ್ಗೊಳ್ಳದೆ, ತಮ್ಮ ಬ್ಯಾರಕ್ನ ಕಾರಿಡಾರ್ನಲ್ಲೇ ಸಹ-ಆರೋಪಿಗಳೊಂದಿಗೆ ಸುಮಾರು ಒಂದು ಗಂಟೆ ಯೋಗಾಭ್ಯಾಸ ನಡೆಸಿದರು.
ಈ ವೇಳೆ ದರ್ಶನ್ ಪ್ರಾಣಾಯಾಮ, ದೀರ್ಘದಂಡ ನಮಸ್ಕಾರ ಹಾಗೂ ಶವಾಸನ ಸೇರಿದಂತೆ ವಿವಿಧ ಯೋಗಾಸನಗಳನ್ನು ಅಭ್ಯಾಸ ಮಾಡಿದರು. ಯೋಗಾಭ್ಯಾಸ ಪೂರ್ಣಗೊಂಡ ಬಳಿಕ ದರ್ಶನ್ ಹಾಗೂ ಸಹ-ಆರೋಪಿಗಳು ತಮ್ಮ ಬ್ಯಾರಕ್ಗಳಿಗೆ ಮರಳಿದರು.
ಇದೇ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಪವಿತ್ರಾ ಗೌಡ ಅವರು ಮಹಿಳಾ ಕೈದಿಗಳ ವಿಭಾಗದಲ್ಲಿ ಆಯೋಜಿಸಿದ್ದ ಸಾಮೂಹಿಕ ಯೋಗಾಭ್ಯಾಸದಲ್ಲಿ ಭಾಗವಹಿಸಿದರು. ಇತರ ಮಹಿಳಾ ಕೈದಿಗಳೊಂದಿಗೆ ಸಾಲಿನಲ್ಲಿ ಕುಳಿತು ಯೋಗ ಮತ್ತು ಧ್ಯಾನ ನಡೆಸಿದರು.

