ಬೆಂಗಳೂರು: ಕಾರ್ಮಿಕ ಕಾಯ್ದೆ ಉಲ್ಲಂಘನೆ ಆರೋಪದಡಿ ಯಾವುದೇ ಕಂಪನಿ ಅಥವಾ ಸಂಸ್ಥೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಅನುಮತಿ ನೀಡುವ ಮೊದಲು ಸರ್ಕಾರವು ಸ್ವತಂತ್ರವಾಗಿ ವಿಚಾರಣೆ ನಡೆಸಿ, ಸೂಕ್ತ ಕಾರಣಗಳನ್ನು ದಾಖಲಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.
ಇದೇ ವೇಳೆ, ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಕಾರ್ಮಿಕರನ್ನು ಕೆಲಸದಿಂದ ತಾತ್ಕಾಲಿಕವಾಗಿ ವಜಾಗೊಳಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಕಂಪನಿಯೊಂದರ ವಿರುದ್ಧ ಕ್ರಿಮಿನಲ್ ಕ್ರಮ ಜರುಗಿಸಲು ರಾಜ್ಯ ಸರ್ಕಾರ ನೀಡಿದ್ದ ಅನುಮತಿ ಆದೇಶವನ್ನು ರದ್ದುಗೊಳಿಸಿದೆ.
ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ‘ಇಂಟರ್ನ್ಯಾಷನಲ್ ಟ್ರಿಮ್ಮಿಂಗ್ಸ್ ಆಂಡ್ ಲೇಬಲ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್’ ಸಂಸ್ಥೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗಡೆ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ವಿಚಾರಣೆ ವೇಳೆ ನ್ಯಾಯಾಲಯ, ಕೇವಲ ಕಾರ್ಮಿಕ ಇಲಾಖೆಯ ವರದಿ ಅಥವಾ ದೂರು ಆಧರಿಸಿ ಯಾಂತ್ರಿಕವಾಗಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದೆ. ಸರ್ಕಾರವು ತನ್ನ ಸ್ವತಂತ್ರ ವಿವೇಚನೆಯನ್ನು ಬಳಸಿಕೊಂಡು ನಿರ್ಧಾರ ಕೈಗೊಳ್ಳಬೇಕು. ಯಾವುದೇ ಸಂಸ್ಥೆಯ ವಿರುದ್ಧ ಕ್ರಿಮಿನಲ್ ಕ್ರಮಕ್ಕೆ ಅನುಮತಿ ನೀಡುವಾಗ ಅಥವಾ ನಿರಾಕರಿಸುವಾಗ ಅದರ ಹಿಂದಿನ ಕಾರಣಗಳನ್ನು ಆದೇಶದಲ್ಲಿ ದಾಖಲಿಸುವುದು ಕಡ್ಡಾಯ ಎಂದು ಪೀಠ ಹೇಳಿದೆ.
ಪ್ರಸ್ತುತ ಪ್ರಕರಣದಲ್ಲಿ ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿಯನ್ನು ‘ನೈಸರ್ಗಿಕ ವಿಕೋಪ’ ಎಂದು ಪರಿಗಣಿಸಿ ಸಿಬ್ಬಂದಿಯನ್ನು ವಜಾಗೊಳಿಸಲಾಗಿತ್ತೇ ಎಂಬುದು ಪ್ರಮುಖ ಪ್ರಶ್ನೆಯಾಗಿದೆ. ಈ ವಿವಾದ ಈಗಾಗಲೇ ಕಾರ್ಮಿಕ ನ್ಯಾಯಾಲಯದ ಪರಿಶೀಲನೆಯಲ್ಲಿರುವುದರಿಂದ, ಸರ್ಕಾರವು ಯಾವುದೇ ಸಮರ್ಪಕ ಕಾರಣ ನೀಡದೇ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದು ಕಾನೂನುಬಾಹಿರ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳಿಸಿರುವ ನ್ಯಾಯಾಲಯ, ಪ್ರಕರಣವನ್ನು ಮರುಪರಿಶೀಲಿಸಿ ನಿಯಮಾನುಸಾರ ಹೊಸ ಆದೇಶ ಹೊರಡಿಸಲು ಅವಕಾಶವಿದ್ದು, ಮೂರು ತಿಂಗಳೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿದೆ ಎಂದು ಸೂಚಿಸಿದೆ.
ಪ್ರಕರಣದ ಹಿನ್ನೆಲೆ
ಕೊರೊನಾ ಲಾಕ್ಡೌನ್ ಜಾರಿಯಲ್ಲಿದ್ದ 2020ರ ಮೇ ತಿಂಗಳಲ್ಲಿ ಅರ್ಜಿದಾರ ಕಂಪನಿಯು ತನ್ನ 112 ಕಾರ್ಮಿಕರ ಪೈಕಿ 61 ಮಂದಿಯನ್ನು ಕೆಲಸದಿಂದ ವಜಾಗೊಳಿಸಿತ್ತು. ಈ ಕ್ರಮವನ್ನು ಪ್ರಶ್ನಿಸಿ ಕಾರ್ಮಿಕ ಸಂಘಟನೆ ಕಾರ್ಮಿಕ ಆಯುಕ್ತರಿಗೆ ದೂರು ನೀಡಿತ್ತು.
ಕಾರ್ಮಿಕ ಇಲಾಖೆಯ ವರದಿ ಆಧರಿಸಿ, ಕೈಗಾರಿಕಾ ವಿವಾದಗಳ ಕಾಯ್ದೆ-1947ರ ಸೆಕ್ಷನ್ 34 ಅಡಿಯಲ್ಲಿ ಕಂಪನಿಯ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರ 2020ರ ಡಿಸೆಂಬರ್ 7ರಂದು ಅನುಮತಿ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಕಂಪನಿಯು ಹೈಕೋರ್ಟ್ ಮೊರೆ ಹೋಗಿತ್ತು.

