ಬೆಂಗಳೂರು: ನಗರದಲ್ಲಿ ಹುಸಿ ಬಾಂಬ್ ಬೆದರಿಕೆ ಪ್ರಕರಣಗಳ ಸರಣಿ ಮುಂದುವರಿದಿರುವ ನಡುವೆಯೇ, ಕೋರಮಂಗಲದಲ್ಲಿರುವ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಘಟನೆ ಆತಂಕಕ್ಕೆ ಕಾರಣವಾಯಿತು.
ಇಂದು ಬೆಳಗ್ಗೆ ಕಚೇರಿಯ ಅಧಿಕೃತ ಇ-ಮೇಲ್ ವಿಳಾಸಕ್ಕೆ ತಮಿಳು ಭಾಷೆಯಲ್ಲಿ ಸಂದೇಶ ರವಾನಿಸಲಾಗಿದ್ದು, “ಅಜ್ಮಲ್ ಕಸಬ್ಗೆ ಮರಣದಂಡನೆ ವಿಧಿಸಿರುವ ನಿಮ್ಮನ್ನು ಬಿಡುವುದಿಲ್ಲ. ಕೆಲವೇ ಹೊತ್ತಿನಲ್ಲಿ ಕಚೇರಿಯಲ್ಲಿ ಇರಿಸಿರುವ ಸ್ಫೋಟಕಗಳು ಸ್ಫೋಟಗೊಳ್ಳಲಿವೆ” ಎಂದು ಬೆದರಿಕೆ ಹಾಕಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇಲ್ಲಿ ಉಲ್ಲೇಖಿಸಿರುವ ಅಜ್ಮಲ್ ಕಸಬ್ 26/11 ಮುಂಬೈ ದಾಳಿಯ ದೋಷಿಯಾಗಿದ್ದರು.
ವಿಷಯ ತಿಳಿಯುತ್ತಿದ್ದಂತೆಯೇ ಕರ್ನಾಟಕ ಪೊಲೀಸ್ ಸಿಬ್ಬಂದಿ, ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳ ಮತ್ತು ಶ್ವಾನ ದಳ ಸ್ಥಳಕ್ಕೆ ದೌಡಾಯಿಸಿತು. ಕಚೇರಿಯಲ್ಲಿದ್ದ ಸಿಬ್ಬಂದಿ ಮತ್ತು ಸಾರ್ವಜನಿಕರನ್ನು ತಕ್ಷಣವೇ ಹೊರಗೆ ಕಳುಹಿಸಿ ಕಟ್ಟಡದ ಸಂಪೂರ್ಣ ತಪಾಸಣೆ ನಡೆಸಲಾಯಿತು.
ಭದ್ರತಾ ಕಾರಣದಿಂದ ದೈನಂದಿನ ಪಾಸ್ಪೋರ್ಟ್ ವಿತರಣಾ ಪ್ರಕ್ರಿಯೆಯನ್ನು ಕೆಲಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.
ಸುದೀರ್ಘ ಪರಿಶೀಲನೆಯ ಬಳಿಕ ಕಟ್ಟಡದಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಇದೊಂದು ಹುಸಿ ಸಂದೇಶ ಎಂಬುದು ಖಚಿತವಾದ ನಂತರ ಎಲ್ಲರೂ ನಿಟ್ಟುಸಿರು ಬಿಟ್ಟಿದ್ದಾರೆ.
ಸದ್ಯ ಭದ್ರತೆ ಖಚಿತಪಡಿಸಿಕೊಂಡು ಒಬ್ಬೊಬ್ಬರನ್ನೇ ಕಚೇರಿಯೊಳಗೆ ಬಿಡಲಾಗುತ್ತಿದ್ದು, ಸ್ಥಗಿತಗೊಂಡಿದ್ದ ಪಾಸ್ಪೋರ್ಟ್ ಸೇವೆಗಳು ಪುನಃ ಆರಂಭಗೊಂಡಿವೆ. ಇ-ಮೇಲ್ ಎಲ್ಲಿಂದ ಬಂದಿದೆ ಹಾಗೂ ಇದರ ಹಿಂದಿನ ಉದ್ದೇಶವೇನು ಎಂಬುದರ ಕುರಿತು ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದಾರೆ.

