ಧಾರವಾಡ: ನಗರದ ಕರ್ನಾಟಕ ವಿಶ್ವವಿದ್ಯಾಲಯ ರಸ್ತೆಯ ರನ್ಕಾಸ್ಟೆಲ್ಲೋ ಅಪಾರ್ಟ್ಮೆಂಟ್ನಲ್ಲಿ ವೈದ್ಯರೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.
ಚಿರಾಯು ಆಸ್ಪತ್ರೆಯಲ್ಲಿ ಅನಸ್ತೇಶಿಯಾ ತಜ್ಞರಾಗಿದ್ದ ಡಾ. ಕಿರಣ್ ಹೊನ್ನಣ್ಣನವರ್ ಮೃತಪಟ್ಟವರು. ಘಟನೆಯಲ್ಲಿ ಅವರ 10 ವರ್ಷದ ಮಗನ ಮೇಲೂ ಹಲ್ಲೆ ನಡೆದಿದ್ದು, ಗಾಯಗೊಂಡ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾಹಿತಿ ತಿಳಿದ ಕೂಡಲೇ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ. ಕಿರಣ್ ಅವರ ಪತ್ನಿ ಡಾ. ಪ್ರಿಯಾರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಡಾ. ಕಿರಣ್ ಅವರನ್ನು ಪತ್ನಿ ಪ್ರಿಯಾರೇ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ರಾತ್ರಿ ಘಟನೆ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಪತಿಯ ಮೇಲೆ ಹಲ್ಲೆ ನಡೆಸಿದ ಬಳಿಕ ಮಗನ ಮೇಲೂ ದಾಳಿ ನಡೆದಿರುವ ಅನುಮಾನವಿದೆ.
ಬಳಿಕ ಡಾ. ಪ್ರಿಯಾ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಈ ಕುರಿತು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿ, “ಸಂಬಂಧಿಕರು ಫೋನ್ ಮಾಡಿದಾಗ ಪ್ರಿಯಾ ಅವರು ಪತಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ. ಆದರೆ ಸಂಜೆವರೆಗೂ ಡಾ. ಕಿರಣ್ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಅನುಮಾನಗೊಂಡ ಸಂಬಂಧಿಕರು ಮನೆಗೆ ಬಂದು ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ” ಎಂದು ತಿಳಿಸಿದ್ದಾರೆ.
“ಬಾಲಕನಿಗೆ ಜೀವ ಇರುವುದನ್ನು ಗಮನಿಸಿ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಾರ್ಟ್ಮೆಂಟ್ನಲ್ಲಿ ಭದ್ರತಾ ವ್ಯವಸ್ಥೆ ಇರುವುದರಿಂದ ಹೊರಗಿನಿಂದ ಯಾರಾದರೂ ಬಂದು ಕೃತ್ಯ ಎಸಗಿರುವ ಸಾಧ್ಯತೆ ಕಡಿಮೆ. ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಿಯಾ ಅವರು ಆಘಾತದ ಸ್ಥಿತಿಯಲ್ಲಿದ್ದು, ಹಲವು ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ” ಎಂದು ಹೇಳಿದರು.
ಡಾ. ಕಿರಣ್ ಅವರು ಅನಸ್ತೇಶಿಯಾ ತಜ್ಞರಾಗಿದ್ದರೆ, ಅವರ ಪತ್ನಿ ಡಾ. ಪ್ರಿಯಾ ನೇತ್ರ ವೈದ್ಯೆಯಾಗಿದ್ದರು ಎನ್ನಲಾಗಿದೆ.

