Home Blog

ಸಾವಯವ ಕೃಷಿಯತ್ತ ತಿರುಗದಿದ್ದರೆ ಭೂಮಿ ಬರಡಾಗುತ್ತದೆ: ಸದಾನಂದಗೌಡ ಎಚ್ಚರಿಕೆ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಅತಿಯಾದ ರಾಸಾಯನಿಕ ಗೊಬ್ಬರ ಹಾಗೂ ಕೀಟನಾಶಕಗಳ ಬಳಕೆಯಿಂದ ಕೃಷಿ ಭೂಮಿ ತನ್ನ ಫಲವತ್ತತೆಯನ್ನು ಕಳೆದುಕೊಂಡು ಬರಡಾಗುತ್ತಿದೆ. ರೈತರು ಸಾವಯವ ಕೃಷಿಯತ್ತ ಹೆಚ್ಚು ಒಲವು ತೋರಿಸಿ, ಮಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಕರೆ ನೀಡಿದರು.

ತಾಲೂಕಿನ ಕಡಕೋಳ ಗ್ರಾಮದ ದೇವರಡ್ಡಿ ಅಗಸನಕೊಪ್ಪ ಕೃಷಿ ಆಶ್ರಮದಲ್ಲಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ರೈತ ಮೋರ್ಚಾ ವತಿಯಿಂದ ಆಯೋಜಿಸಿದ್ದ ನೈಸರ್ಗಿಕ ಕೃಷಿ ಕಾರ್ಯಾಗಾರವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಸಾವಯವ ಕೃಷಿ ಪದ್ಧತಿಯು ಮಣ್ಣಿನ ಆರೋಗ್ಯ ಸುಧಾರಿಸುವುದರ ಜೊತೆಗೆ ಪರಿಸರ ಸಂರಕ್ಷಣೆ ಮತ್ತು ದೀರ್ಘಕಾಲಿಕ ಕೃಷಿ ಉತ್ಪಾದನೆಗೆ ಸಹಕಾರಿಯಾಗುತ್ತದೆ. ಗೋಮಯ, ಕಾಂಪೋಸ್ಟ್, ಹಸಿರು ಗೊಬ್ಬರ ಸೇರಿದಂತೆ ವಿವಿಧ ಸಾವಯವ ಗೊಬ್ಬರಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಹೆಚ್ಚುತ್ತದೆ. ರಾಸಾಯನಿಕ ಗೊಬ್ಬರ ಹಾಗೂ ಕೀಟನಾಶಕಗಳ ಬಳಕೆಯನ್ನು ಕಡಿಮೆ ಮಾಡುವ ಮೂಲಕ ಪರಿಸರ ಮಾಲಿನ್ಯ ತಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಸಾವಯವ ಕೃಷಿಯಿಂದ ಮಣ್ಣಿನಲ್ಲಿರುವ ಸೂಕ್ಷ್ಮಜೀವಿಗಳ ಚಟುವಟಿಕೆ ಹೆಚ್ಚುವುದರೊಂದಿಗೆ ಸಾವಯವ ಕಾರ್ಬನ್ ಪ್ರಮಾಣವೂ ವೃದ್ಧಿಯಾಗುತ್ತದೆ. ಇದರಿಂದ ಉತ್ತಮ ಗುಣಮಟ್ಟದ ಉತ್ಪಾದನೆ, ಆರೋಗ್ಯಕರ ಆಹಾರ ಹಾಗೂ ದೀರ್ಘಾವಧಿಯಲ್ಲಿ ಕೃಷಿ ವೆಚ್ಚದ ಇಳಿಕೆಗೆ ಸಹ ನೆರವಾಗುತ್ತದೆ ಎಂದು ವಿವರಿಸಿದರು.

ಶಾಸಕ ಸಿ.ಸಿ. ಪಾಟೀಲ ಮಾತನಾಡಿ, ಮಣ್ಣಿನಲ್ಲಿ ಶೇ.45ರಷ್ಟು ಖನಿಜಾಂಶ, ಶೇ.25ರಷ್ಟು ಗಾಳಿ, ಶೇ.25ರಷ್ಟು ನೀರು ಹಾಗೂ ಶೇ.5ರಷ್ಟು ಸಾವಯವ ಅಂಶಗಳಿದ್ದು, ಈ ಸಾವಯವ ಅಂಶಗಳೇ ಕೃಷಿಗೆ ಜೀವಾಳವಾಗಿವೆ ಎಂದರು.

ಭೂಮಿಯ ಮೇಲ್ಭಾಗದ ಒಂದು ಅಡಿ ಮಣ್ಣು ಮಾತ್ರ ಕೃಷಿಗೆ ಯೋಗ್ಯವಾಗಿದ್ದು, ಅದನ್ನು ಸಂರಕ್ಷಿಸುವುದು ರೈತರ ಜವಾಬ್ದಾರಿಯಾಗಿದೆ. ಹೆಚ್ಚಿನ ಇಳುವರಿ ಪಡೆಯುವ ಉದ್ದೇಶದಿಂದ ನಿರಂತರವಾಗಿ ರಾಸಾಯನಿಕ ಗೊಬ್ಬರ ಬಳಕೆ ಮಾಡಿದರೆ ಮಣ್ಣಿನ ಆರೋಗ್ಯ ಹದಗೆಡುತ್ತದೆ. ಮಣ್ಣು ಪರೀಕ್ಷೆಯ ವರದಿಯನ್ನು ಆಧರಿಸಿ ಶಿಫಾರಸು ಮಾಡಿದ ಪ್ರಮಾಣದಲ್ಲಿಯೇ ಗೊಬ್ಬರ ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು.

ಕೃಷಿ ತ್ಯಾಜ್ಯ, ಎರೆಹುಳು ಗೊಬ್ಬರ, ಹಸಿರೆಲೆ ಗೊಬ್ಬರ, ಪಂಚಗವ್ಯ, ಜೀವಾಮೃತ, ಜೈವಿಕ ಗೊಬ್ಬರ ಹಾಗೂ ಬೆಳೆ ಹೊದಿಕೆಗಳ ಬಳಕೆಯೊಂದಿಗೆ ಸಮಗ್ರ ಪೋಷಕಾಂಶ ನಿರ್ವಹಣೆ ಅಳವಡಿಸಿಕೊಂಡರೆ ಮಾತ್ರ ಮಣ್ಣಿನ ಫಲವತ್ತತೆಯನ್ನು ಉಳಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.

ಶಾಸಕ ಡಾ. ಚಂದ್ರು ಕೆ. ಲಮಾಣಿ ಮಾತನಾಡಿ, ರಾಸಾಯನಿಕ ಗೊಬ್ಬರಗಳ ಅತಿಯಾದ ಅಥವಾ ತಪ್ಪಾದ ಬಳಕೆಯಿಂದ ಮಣ್ಣಿನಲ್ಲಿರುವ ಸೂಕ್ಷ್ಮ ಪೋಷಕಾಂಶಗಳ ಸಮತೋಲನ ಹಾಳಾಗುತ್ತದೆ. ಜೊತೆಗೆ ಉಪಯುಕ್ತ ಬ್ಯಾಕ್ಟೀರಿಯಾ ಹಾಗೂ ಇತರ ಸೂಕ್ಷ್ಮಜೀವಿಗಳ ಸಂಖ್ಯೆಯೂ ಕಡಿಮೆಯಾಗುತ್ತದೆ. ಇದರಿಂದ ಭೂಮಿಯ ಗುಣಮಟ್ಟದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಸ್.ವಿ. ಸಂಕನೂರ, ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಜು ಕುರಡಗಿ, ಫಕ್ಕೀರೇಶ ರಟ್ಟಿಹಳ್ಳಿ, ಬಸವರಾಜ ನಾವಿ, ಸುನೀಲ ಮಹಾಂತಶೆಟ್ಟರ, ಡಿ.ವೈ. ಹುನಗುಂದ, ಶಿವಪ್ರಕಾಶ ಮಹಾಜನಶೆಟ್ಟರ, ದೇವರಡ್ಡಿ ಅಗಸನಕೊಪ್ಪ, ಸರೋಜಮ್ಮ ಅಗಸನಕೊಪ್ಪ, ಸುರೇಶ ಕುಂಬಾರ, ತಿಪ್ಪಣ್ಣ ಕೊಂಚಿಗೇರಿ, ಜಾನು ಲಮಾಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

“ರಾಸಾಯನಿಕ ಗೊಬ್ಬರದ ಅತಿಬಳಕೆಯಿಂದ ಮಣ್ಣಿನ ಆರೋಗ್ಯ ಹದಗೆಡುತ್ತಿದೆ. ರೈತರು ಸಾವಯವ ಕೃಷಿಯತ್ತ ಮುಖ ಮಾಡಿದರೆ ಮಾತ್ರ ಭೂಮಿಯ ಫಲವತ್ತತೆ ಉಳಿಯಲಿದೆ.”

ಡಿ.ವಿ. ಸದಾನಂದಗೌಡ

ಮಾಜಿ ಮುಖ್ಯಮಂತ್ರಿ

ಪ್ರೊ. ಬಿ. ಕೃಷ್ಣಪ್ಪ ಜನ್ಮದಿನ: ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್-ಪೆನ್ ವಿತರಣೆ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಮುಖ ಅಸ್ತ್ರ ಎಂಬ ಸಂದೇಶದೊಂದಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ವತಿಯಿಂದ ತಾಲೂಕಿನ ಚಿಂತರಪಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದರಿಂದ ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ಹಾಗೂ ಪೆನ್ನುಗಳನ್ನು ವಿತರಿಸಲಾಯಿತು.

ಪ್ರೊ. ಬಿ. ಕೃಷ್ಣಪ್ಪ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಿ, ಶಿಕ್ಷಣದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಅಧ್ಯಕ್ಷ ಹೆಗ್ಡಳ್ ಪರಶುರಾಮ್, ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕ ಪ್ರೊ. ಬಿ. ಕೃಷ್ಣಪ್ಪ ಅವರ ಜೀವನ ಸಾಧನೆ ಹಾಗೂ ಸಾಮಾಜಿಕ ಹೋರಾಟಗಳನ್ನು ಸ್ಮರಿಸಿದರು. ವರ್ಣಭೇದ, ಜಾತಿ ವ್ಯವಸ್ಥೆ ಹಾಗೂ ಮೂಢನಂಬಿಕೆಗಳ ವಿರುದ್ಧ ಅವರು ನಡೆಸಿದ ಹೋರಾಟಗಳು ಸಮಾಜಕ್ಕೆ ದಿಕ್ಕು ತೋರಿವೆ ಎಂದು ಹೇಳಿದರು.

ತಾಲೂಕು ಸಂಘಟನಾ ಸಂಚಾಲಕ ದಶಮಾಪುರ ಮರಿಯಪ್ಪ ಮಾತನಾಡಿ, ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಮತ್ತು ಅಭಿವೃದ್ಧಿ ಸಾಧ್ಯ. ಸರ್ಕಾರ ಹಾಗೂ ವಿವಿಧ ಸಂಘ-ಸಂಸ್ಥೆಗಳು ವಿದ್ಯಾರ್ಥಿಗಳಿಗಾಗಿ ಒದಗಿಸುತ್ತಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಚಿಂತರಪಳ್ಳಿ ದೇವೇಂದ್ರಪ್ಪ ಮಾತನಾಡಿ, ಶಿಕ್ಷಣಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ಮಕ್ಕಳಿಗೆ ಪುಸ್ತಕ-ಪೆನ್ನು ವಿತರಿಸುತ್ತಿರುವ ದಲಿತ ಸಂಘರ್ಷ ಸಮಿತಿಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗ್ಯಾರಂಟಿ ಅಧ್ಯಕ್ಷ ಸೊನ್ನದ ಗುರುಬಸವರಾಜ್ ಮಾತನಾಡಿ, ಮಕ್ಕಳ ಮನಸ್ಸು ಖಾಲಿ ಪುಸ್ತಕದಂತೆ ಇರುತ್ತದೆ. ಉತ್ತಮ ಶಿಕ್ಷಣ ಮತ್ತು ಸಂಸ್ಕಾರಗಳಿಂದ ತಮ್ಮ ಜೀವನವನ್ನು ಯಶಸ್ವಿಯಾಗಿ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಸಂಘಟನಾ ಸಂಚಾಲಕ ಪ್ರಭಾಕರ ಆನಂದಳ್ಳಿ ಮಾತನಾಡಿ, “ಶಿಕ್ಷಣ ಎನ್ನುವುದು ಹುಲಿಯ ಹಾಲಿದ್ದಂತೆ, ಅದನ್ನು ಕುಡಿದವರು ಘರ್ಜಿಸಲೇಬೇಕು” ಎಂಬ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರವನ್ನು ಉಲ್ಲೇಖಿಸಿ, ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಶ್ರೀನಿವಾಸ್, ಮುಖ್ಯಗುರು ಬಸವರಾಜ್, ಗ್ರಾಮಸ್ಥರಾದ ಹುಲುಗಪ್ಪ, ಸುರೇಶ ಬಣಕಾರ, ಅಂಜಿನಪ್ಪ, ಪ್ರಕಾಶ, ಮಂಜು, ಕೊಟ್ರೇಶ ತಳವಾರ, ಶಿಕ್ಷಕರಾದ ವಾಮದೇವಪ್ಪ, ಭಾರತಿ, ವಿರುಪಾಕ್ಷಿ, ರಾಘವೇಂದ್ರ ಹಾಗೂ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಉಪಸ್ಥಿತರಿದ್ದರು.

“ಶಿಕ್ಷಣವೇ ಸಮಾಜದ ಏಳಿಗೆಗೆ ಮೂಲಭೂತ ಅಸ್ತ್ರ. ವಿದ್ಯಾರ್ಥಿಗಳು ದೊರೆಯುತ್ತಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು.”

ದಶಮಾಪುರ ಮರಿಯಪ್ಪ

ತಾಲೂಕು ಸಂಘಟನಾ ಸಂಚಾಲಕ, ದಲಿತ ಸಂಘರ್ಷ ಸಮಿತಿ

ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನಕ್ಕಾಗಿ ಎಚ್.ಕೆ. ಪಾಟೀಲರು ತ್ಯಾಗ ಮಾಡಲಿ: ಕಾಂಗ್ರೆಸ್ ಮುಖಂಡ ಈರಣ್ಣ ಶೆಟ್ಟರ್

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನದ ಹಂಚಿಕೆ ವಿಚಾರ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ರೋಣ ಶಾಸಕ ಜಿ.ಎಸ್. ಪಾಟೀಲರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸುವ ನಿಟ್ಟಿನಲ್ಲಿ ಸಚಿವ ಎಚ್.ಕೆ. ಪಾಟೀಲರು ತ್ಯಾಗದ ಮನೋಭಾವ ಪ್ರದರ್ಶಿಸಿ ಅವಕಾಶ ಮಾಡಿಕೊಡಬೇಕು ಎಂದು ಕಾಂಗ್ರೆಸ್ ಮುಖಂಡ ಈರಣ್ಣ ಶೆಟ್ಟರ್ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗದಗ ಜಿಲ್ಲೆ ರಾಜ್ಯದಲ್ಲಿಯೇ ಶಿಸ್ತಿನ ಕಾಂಗ್ರೆಸ್ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಜಿಲ್ಲೆಯ ಕಾಂಗ್ರೆಸ್ ನಾಯಕರು ಸೌಹಾರ್ದಯುತವಾಗಿ ಕಾರ್ಯನಿರ್ವಹಿಸುತ್ತಿದ್ದು, ಪಕ್ಷದ ಆದೇಶಗಳನ್ನು ಚಾಚೂ ತಪ್ಪದೆ ಪಾಲಿಸಿಕೊಂಡು ಬಂದಿದ್ದಾರೆ. ಆದರೆ, ಇತ್ತೀಚಿನ ಸಚಿವ ಸಂಪುಟ ವಿಸ್ತರಣೆ ಹಾಗೂ ಪುನಾರಚನೆಗೆ ಸಂಬಂಧಿಸಿದ ಬೆಳವಣಿಗೆಗಳು ಜಿಲ್ಲೆಯ ಕಾರ್ಯಕರ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿವೆ ಎಂದು ಹೇಳಿದರು.

ಎಚ್.ಕೆ. ಪಾಟೀಲರು ಈಗಾಗಲೇ ಸಚಿವರಾಗಿ ಕಾರ್ಯನಿರ್ವಹಿಸಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಆದರೆ, ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ನಿರಂತರವಾಗಿ ದುಡಿಯುತ್ತಿರುವ ಜಿ.ಎಸ್. ಪಾಟೀಲರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಪಕ್ಷದ ಬಲವರ್ಧನೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು ಸತತ ಎಂಟು ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿರಿಯ ನಾಯಕರಾಗಿದ್ದಾರೆ ಎಂದು ವಿವರಿಸಿದರು.

ಇಂತಹ ಅನುಭವೀ ನಾಯಕನಿಗೆ ಸಚಿವ ಸ್ಥಾನ ನೀಡುವುದರಿಂದ ಪಕ್ಷದ ಸಂಘಟನೆಗೆ ಹೊಸ ಶಕ್ತಿ ದೊರೆಯಲಿದೆ. ಅಲ್ಲದೆ, ಪಕ್ಷಕ್ಕಾಗಿ ದೀರ್ಘಕಾಲ ಸೇವೆ ಸಲ್ಲಿಸಿದ ನಾಯಕರಿಗೆ ನ್ಯಾಯ ದೊರೆತಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಜಿಲ್ಲೆಯಲ್ಲಿ ಸಚಿವ ಸ್ಥಾನಕ್ಕಾಗಿ ನಡೆಯುತ್ತಿರುವ ಪ್ರತಿಭಟನೆಗಳು ಹಾಗೂ ಅಸಮಾಧಾನದ ವಾತಾವರಣ ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಆದ್ದರಿಂದ ಎಚ್.ಕೆ. ಪಾಟೀಲರು ದೊಡ್ಡ ಮನಸ್ಸು ಮಾಡಿ, ತಮ್ಮ ಸಹೋದ್ಯೋಗಿ ಜಿ.ಎಸ್. ಪಾಟೀಲರಿಗೆ ಅವಕಾಶ ಕಲ್ಪಿಸಬೇಕು. ಇದರಿಂದ ಹಿರಿಯ ನಾಯಕರಿಗೆ ಗೌರವ ದೊರೆಯುವುದರ ಜೊತೆಗೆ ಜಿಲ್ಲಾ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಮತ್ತಷ್ಟು ಬಲಗೊಳ್ಳಲಿದೆ ಎಂದು ಶೆಟ್ಟರ್ ಹೇಳಿದರು.

“ನಾಲ್ಕು ದಶಕಗಳಿಂದ ಪಕ್ಷ ಕಟ್ಟಿದ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲಾ ಕಾಂಗ್ರೆಸ್ ಇನ್ನಷ್ಟು ಬಲಿಷ್ಠವಾಗಲಿದೆ. ಪಕ್ಷದ ಹಿತದೃಷ್ಟಿಯಿಂದ ಎಚ್.ಕೆ. ಪಾಟೀಲರು ದೊಡ್ಡ ಮನಸ್ಸು ಮಾಡಬೇಕು.”

ಈರಣ್ಣ ಶೆಟ್ಟರ್, ಕಾಂಗ್ರೆಸ್ ಮುಖಂಡ

‘ಮಿಸ್ಟರ್ ಕ್ಲೀನ್’ ಎಚ್.ಕೆ. ಪಾಟೀಲರಿಗೆ ಸಚಿವ ಸ್ಥಾನಕ್ಕಾಗಿ ಗದಗದಲ್ಲಿ ಒಕ್ಕೊರಲ ಬೇಡಿಕೆ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸಚಿವ ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹಾಗೂ ಗದಗ ಶಾಸಕ ಡಾ. ಎಚ್.ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು ಹಾಗೂ ಉಪಮುಖ್ಯಮಂತ್ರಿ ಹುದ್ದೆಗೂ ಪರಿಗಣಿಸಬೇಕು ಎಂಬ ಒತ್ತಾಯ ಗದಗ ಜಿಲ್ಲೆಯಲ್ಲಿ ಮತ್ತಷ್ಟು ತೀವ್ರಗೊಂಡಿದೆ. ವಿವಿಧ ಸಮಾಜಗಳ ಮುಖಂಡರು, ಅಭಿಮಾನಿ ಬಳಗಗಳು ಹಾಗೂ ಸಂಘಟನೆಗಳ ಪ್ರತಿನಿಧಿಗಳು ಸೋಮವಾರ ಜಿಲ್ಲಾ ಪತ್ರಿಕಾ ಭವನದಲ್ಲಿ ಪ್ರತ್ಯೇಕ ಸುದ್ದಿಗೋಷ್ಠಿಗಳನ್ನು ನಡೆಸಿ ಕಾಂಗ್ರೆಸ್ ವರಿಷ್ಠರಿಗೆ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಲ್.ಡಿ. ಚಂದಾವರಿ, ಎಚ್.ಕೆ. ಪಾಟೀಲರು ದೂರದೃಷ್ಟಿಯ ನಾಯಕರು. ಜನರ ಒಳಿತಿಗಾಗಿ 24/7 ದುಡಿಯುವ ಅಪರೂಪದ ರಾಜಕಾರಣಿ. ತಮ್ಮ ಅಧಿಕಾರಾವಧಿಯಲ್ಲಿ ಸಮಾಜದ ವಿವಿಧ ಸಮುದಾಯಗಳಿಗೆ ಭವನಗಳು, ಆರೋಗ್ಯ ಸೇವೆಗಳಿಗಾಗಿ ಆಸ್ಪತ್ರೆಗಳು, ಕ್ರೀಡಾ ಚಟುವಟಿಕೆಗಳಿಗೆ ಮೈದಾನಗಳು, ಶುದ್ಧ ಕುಡಿಯುವ ನೀರಿನ ಘಟಕಗಳು, ಕೆರೆ-ಕಟ್ಟೆಗಳ ಅಭಿವೃದ್ಧಿ, ಉದ್ಯಾನವನಗಳ ನಿರ್ಮಾಣ ಹಾಗೂ ಆಶ್ರಯ ಮನೆಗಳ ನಿರ್ಮಾಣದಂತಹ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಇಂತಹ ಕಳಂಕರಹಿತ ಹಾಗೂ ಅನುಭವಿ ರಾಜಕಾರಣಿಗೆ ಸಚಿವ ಸ್ಥಾನ ನೀಡುವುದು ಅನಿವಾರ್ಯ ಎಂದು ಒತ್ತಾಯಿಸಿದರು.

ಪಂಚಮಸಾಲಿ ಸಮಾಜದ ಪರವಾಗಿ ಮಾತನಾಡಿದ ಅನಿಲ್‌ಕುಮಾರ ಪಾಟೀಲ, “ಉತ್ತರ ಕರ್ನಾಟಕದ ಹುಲಿ” ಎಂದೇ ಖ್ಯಾತರಾಗಿರುವ ಎಚ್.ಕೆ. ಪಾಟೀಲರು ಯಾವುದೇ ಖಾತೆ ನೀಡಿದರೂ ಅಭಿವೃದ್ಧಿಯ ಛಾಪು ಮೂಡಿಸಿದವರು. ರಾಜ್ಯದ ಅಭಿವೃದ್ಧಿ ಹಾಗೂ ಉತ್ತರ ಕರ್ನಾಟಕದ ಹಿತದೃಷ್ಟಿಯಿಂದ ಅವರಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಆಗ್ರಹಿಸಿದರು.

ಗದಗ ಜಿಲ್ಲೆಯ ಸವಿತಾ ಸಮಾಜದ ಹಿರಿಯರು ಹಾಗೂ ಎಚ್.ಕೆ. ಪಾಟೀಲ ಅಭಿಮಾನಿ ಬಳಗದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಸವಿತಾ ಸಮಾಜದ ಮುಖಂಡ ದೀಪಕ್ ರಾಯಚೂರು, ಕಳೆದ ನಾಲ್ಕು ದಶಕಗಳಿಂದ ಕಳಂಕರಹಿತ ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಎಚ್.ಕೆ. ಪಾಟೀಲರು ಅಧಿಕಾರ ಸಿಕ್ಕಾಗಲೆಲ್ಲ ಪಾರದರ್ಶಕ ಆಡಳಿತ ಹಾಗೂ ಜನಸೇವೆಯ ಮೂಲಕ ಜನಮನ ಗೆದ್ದಿದ್ದಾರೆ. ಇಂತಹ “ಮಿಸ್ಟರ್ ಕ್ಲೀನ್” ನಾಯಕರಿಗೆ ನೂತನ ಸಚಿವ ಸಂಪುಟದಲ್ಲಿ ಸ್ಥಾನ ಸಿಗದಿರುವುದು ಗದಗ ಜಿಲ್ಲೆ ಮಾತ್ರವಲ್ಲದೆ ಇಡೀ ಉತ್ತರ ಕರ್ನಾಟಕದ ಜನತೆಗೆ ನೋವುಂಟು ಮಾಡಿದೆ ಎಂದು ಹೇಳಿದರು.

ಗದಗ ನಗರದಲ್ಲಿ ಎರಡು ರೂಪಾಯಿಗೆ 20 ಲೀಟರ್ ಶುದ್ಧ ಕುಡಿಯುವ ನೀರು ದೊರೆಯುವಂತೆ ಯೋಜನೆ ರೂಪಿಸಿ ಜಾರಿಗೊಳಿಸಿದ ಭಗೀರಥ ಎಚ್.ಕೆ. ಪಾಟೀಲರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ವೇಳೆ ದೇಶದಲ್ಲೇ ಮಾದರಿಯಾಗುವ ಗ್ರಾಮೀಣ ಅಭಿವೃದ್ಧಿ ವಿಶ್ವವಿದ್ಯಾಲಯ ಸ್ಥಾಪನೆಗೆ ಕಾರಣಕರ್ತರಾಗಿದ್ದಾರೆ. ಮಳೆ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದಾಗ ಮೋಡ ಬಿತ್ತನೆ ಮೂಲಕ ಕೃತಕ ಮಳೆಯ ಪ್ರಯತ್ನ, ಉತ್ತರ ಕರ್ನಾಟಕದ ಜನರಿಗೆ ನ್ಯಾಯ ದೊರಕುವ ನಿಟ್ಟಿನಲ್ಲಿ ಸಂಚಾರಿ ಪೀಠಗಳ ಸ್ಥಾಪನೆ ಸೇರಿದಂತೆ ಅನೇಕ ದೂರದೃಷ್ಟಿಯ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ ಎಂದು ಶ್ಲಾಘಿಸಿದರು.

ವಯೋವೃದ್ಧರ ಕಣ್ಣಿನ ತಪಾಸಣೆ, ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ, ಕನ್ನಡಕ ವಿತರಣೆ, ಅಂಗವಿಕಲರಿಗೆ ಕೃತಕ ಕಾಲುಗಳ ವಿತರಣೆ, ಹೃದಯ ಹಾಗೂ ಕಿಡ್ನಿ ಸಂಬಂಧಿತ ಗಂಭೀರ ಕಾಯಿಲೆಗಳಿಗೆ ಉಚಿತ ಚಿಕಿತ್ಸೆಯಂತಹ ಮಾನವೀಯ ಕಾರ್ಯಗಳ ಮೂಲಕ ಜನಸೇವೆಯನ್ನು ಜೀವನ ಧ್ಯೇಯವನ್ನಾಗಿಸಿಕೊಂಡಿರುವ ಎಚ್.ಕೆ. ಪಾಟೀಲರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಮೂಲಕ ರಾಜ್ಯಕ್ಕೆ ಅವರ ಅನುಭವದ ಲಾಭ ದೊರಕುವಂತೆ ಮಾಡಬೇಕು ಎಂದು ಅವರು ಆಗ್ರಹಿಸಿದರು.

ಸಚಿವ ಸ್ಥಾನ ನೀಡುವ ಬದಲು ಸಭಾಧ್ಯಕ್ಷ ಸ್ಥಾನ ನೀಡಿ ಅವರ ರಾಜಕೀಯ ಸಾಮರ್ಥ್ಯವನ್ನು ಸೀಮಿತಗೊಳಿಸುವ ಪ್ರಯತ್ನ ಮಾಡಬಾರದು. ಅಭಿವೃದ್ಧಿ ಮತ್ತು ಪಾರದರ್ಶಕ ಆಡಳಿತದ ಪ್ರತೀಕವಾಗಿರುವ ಎಚ್.ಕೆ. ಪಾಟೀಲರಿಗೆ ಸರ್ಕಾರದಲ್ಲಿ ಪ್ರಮುಖ ಜವಾಬ್ದಾರಿ ನೀಡಬೇಕು ಎಂದು ವಿವಿಧ ಸಂಘಟನೆಗಳ ಮುಖಂಡರು ಒಕ್ಕೊರಲಿನಿಂದ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರಾಜು ಗೌಡರ, ವೆಂಕಟೇಶ್ ರಾಂಪುರ, ಗಂಗಣ್ಣ ಗೌಡರ್, ಪಾಂಡಪ್ಪ ರಾಂಪುರ, ಪರಶುರಾಮ್ ಕೋಟೆಕಲ್, ಪಂಪಣ್ಣ ರಾಯಚೂರು, ಮಂಜುನಾಥ್ ಬಯಲಗುಡ್ಡ, ವೆಂಕಟೇಶ್ ಬಯಲಗುಡ್ಡ, ಮುರಳಿ ವಲ್ಲೂರ್, ರವಿಕುಮಾರ ಹಡಪದ್, ರಾಘವೇಂದ್ರ ರಾಂಪುರ, ರಾಘವೇಂದ್ರ ಬಯಲಗುಡ್ಡ, ಶ್ರೀನಿವಾಸ್ ರಾಂಪುರ, ಜಗದೀಶ್ ರಾಂಪುರ, ಪರಶುರಾಮ್ ಆದೋನಿ, ಮಂಜುನಾಥ್ ಕಡಬುರ್ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

“ಜನಸೇವೆ, ಪಾರದರ್ಶಕ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳ ಮೂಲಕ ನಾಲ್ಕು ದಶಕಗಳಿಂದ ಜನರ ವಿಶ್ವಾಸ ಗಳಿಸಿರುವ ಎಚ್.ಕೆ. ಪಾಟೀಲರಿಗೆ ಸಚಿವ ಸ್ಥಾನ ಮಾತ್ರವಲ್ಲ, ಉಪಮುಖ್ಯಮಂತ್ರಿ ಹುದ್ದೆಯನ್ನೂ ನೀಡಬೇಕು.”

 ದೀಪಕ್ ರಾಯಚೂರು

ಜಿಲ್ಲಾ ಸವಿತಾ ಸಮಾಜದ ಮುಖಂಡ

“ಯಾವ ಖಾತೆ ಕೊಟ್ಟರೂ ಅಭಿವೃದ್ಧಿಯ ಛಾಪು ಮೂಡಿಸುವ ಸಾಮರ್ಥ್ಯ ಎಚ್.ಕೆ. ಪಾಟೀಲರದ್ದು. ಉತ್ತರ ಕರ್ನಾಟಕದ ಧ್ವನಿಯಾಗಿರುವ ಅವರಿಗೆ ಸಚಿವ ಸಂಪುಟದಲ್ಲಿ ಪ್ರಮುಖ ಸ್ಥಾನ ಸಿಗಲೇಬೇಕು.”

ಅನಿಲ್‌ಕುಮಾರ ಪಾಟೀಲ

ಪಂಚಮಸಾಲಿ ಸಮಾಜ ಮುಖಂಡ

ಅಸಮಾನತೆಯ ವಿರುದ್ಧ ಕನ್ನಡಿಗರು ಒಂದಾಗಬೇಕು: ಅಹಿಂಸಾ ಚೇತನ್

0

ವಿಜಯಸಾಕ್ಷಿ ಸುದ್ದಿ, ಗದಗ: ಸಮಾಜದಲ್ಲಿ ಜಾತಿ, ಧರ್ಮ, ಭಾಷೆ ಅಥವಾ ಯಾವುದೇ ಜನಾಂಗ ನಮ್ಮ ಶತ್ರುಗಳಲ್ಲ. ಅಸಮಾನತೆ ಮತ್ತು ಅನ್ಯಾಯದ ವ್ಯವಸ್ಥೆಯೇ ನಮ್ಮ ನಿಜವಾದ ಶತ್ರು ಎಂದು ಸಾಮಾಜಿಕ ಹೋರಾಟಗಾರ ಅಹಿಂಸಾ ಚೇತನ್ ಹೇಳಿದರು.

ನಗರದ ಬಾಬು ಜಗಜೀವನರಾಂ ಸಭಾಭವನದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು ಸಾಧಕರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದಲಿತ ಸಂಘರ್ಷ ಸಮಿತಿ ಶಿಕ್ಷಣ, ಸಾಮಾಜಿಕ ಜಾಗೃತಿ ಹಾಗೂ ಪ್ರತಿಭಾವಂತರ ಪ್ರೋತ್ಸಾಹದ ಮೂಲಕ ಮಹತ್ವದ ಕಾರ್ಯ ಮಾಡುತ್ತಿದೆ. ಸಮಾಜಕ್ಕಾಗಿ ನಿಸ್ವಾರ್ಥವಾಗಿ ದುಡಿಯುವವರನ್ನು ಯುವಕರು ಆದರ್ಶವಾಗಿ ಸ್ವೀಕರಿಸಬೇಕು ಎಂದು ಹೇಳಿದರು.

ಇಂದಿನ ಯುವ ಪೀಳಿಗೆಯಲ್ಲಿ ಹೋರಾಟದ ಮನೋಭಾವ ಹೆಚ್ಚಾಗುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಅನ್ಯಾಯ ಮತ್ತು ಶೋಷಣೆಯ ವಿರುದ್ಧ ಜಾಗೃತ ಹೋರಾಟ ನಡೆಸುವ ಮೂಲಕ ಅಂಬೇಡ್ಕರ್, ಪುಲೆ ಹಾಗೂ ಪೆರಿಯಾರ್ ಅವರ ಕನಸಿನ ಸಮಾನತೆಯ ಸಮಾಜವನ್ನು ನಿರ್ಮಿಸಬೇಕಾಗಿದೆ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರು ಹಾಗೂ ಪೌರ ಕಾರ್ಮಿಕರಿಗೂ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ತಮ್ಮಣ್ಣವರ ವಹಿಸಿದ್ದರು. ರಾಜ್ಯಾಧ್ಯಕ್ಷ ಮಾರುತಿ ಮಡ್ಡಮನಿ ಅಂಬೇಡ್ಕರ್ ಹಾಗೂ ಪುಲೆ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ರೋಣ ತಾಲೂಕು ಅಧ್ಯಕ್ಷ ಮಿಥುನ್ ಪಾಟೀಲ, ಕಾಂಗ್ರೆಸ್ ವಕ್ತಾರ ಸಂಗಮೇಶ ಕೊಳ್ಳಿ ಹಾಗೂ ಡಿಎಸ್‌ಎಸ್ ರಾಜ್ಯ ಸಂಘಟನಾ ಸಂಚಾಲಕ ಎಸ್.ಎನ್. ಬಳ್ಳಾರಿ ಮಾತನಾಡಿದರು.

ವೇದಿಕೆಯಲ್ಲಿ ವಿರೂಪಾಕ್ಷಪ್ಪ ರಾಮಗೀರಿ, ಆನಂದ ಶಿಂಗಾಡಿ, ಸಿದ್ದಪ್ಪ ಲಿಂಗದಾಳ, ಶರೀಫ್ ಬಿಳಿಯಲಿ, ಬಾಲರಾಜ್ ಅರಬರ, ರಮೇಶ್ ಚಲವಾದಿ, ಶಂಭು ಕಾಳೆ, ಶಿವಪುತ್ರಪ್ಪ ಚಲವಾದಿ, ಬಸವರಾಜ ಬಿಳಿಯಲಿ, ಅನಿಲ್ ಕಾಳೆ, ರಾಘವೇಂದ್ರ ಬಿನ್ನಾಳ, ಪರಶು ಕಾಳೆ, ನಿತೀಶ ಘಟ್ಟೆಣ್ಣವರ, ಶರಣು ಕಾಳೆ, ಹನುಮಂತ ಘಟ್ಟೆಣ್ಣವರ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು. ರಾಮಚಂದ್ರ ಹಂಸನೂರು ಕಾರ್ಯಕ್ರಮ ನಿರೂಪಿಸಿದರು.

“ಶಿಕ್ಷಿಸು, ಸಂಘಟಿಸು, ಹೋರಾಟ ಮಾಡು ಎಂಬುದು ಡಾ. ಅಂಬೇಡ್ಕರ್ ಸಮಾಜಕ್ಕೆ ನೀಡಿದ ಕ್ರಾಂತಿಕಾರಿ ಸಂದೇಶ. ಅಂಬೇಡ್ಕರ್, ಮಹಾತ್ಮ ಜ್ಯೋತಿಬಾ ಪುಲೆ ಹಾಗೂ ಪೆರಿಯಾರ್ ಅವರ ಸಿದ್ಧಾಂತಗಳ ಆಧಾರದ ಮೇಲೆ ಸಮ ಸಮಾಜ ಕಟ್ಟಿದಾಗ ಮಾತ್ರ ನ್ಯಾಯಯುತ ಮತ್ತು ಪ್ರಗತಿಪರ ಸಮಾಜ ನಿರ್ಮಾಣ ಸಾಧ್ಯ.” 

ಅಹಿಂಸಾ ಚೇತನ್

ಅಧಿಕಾರಿಗಳ ಗೈರುಹಾಜರಿಗೆ ಎಐ ಬ್ರೇಕ್..! ‘ಕರ್ತವ್ಯ’ ಆ್ಯಪ್ ಜಾರಿ

0

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳ ಗೈರುಹಾಜರಿ, ಬಯೋಮೆಟ್ರಿಕ್ ದುರ್ಬಳಕೆ ಹಾಗೂ ಸಾರ್ವಜನಿಕರಿಗೆ ಅಧಿಕಾರಿಗಳು ಸಿಗದಿರುವ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಕರ್ತವ್ಯ’ (ಕರ್ನಾಟಕ ಅಡ್ವಾನ್ಸ್ಡ್ ಅಟೆಂಡೆನ್ಸ್ ಮ್ಯಾನೇಜ್‌ಮೆಂಟ್ ಸಿಸ್ಟಮ್-ಕೆಎಎಎಂಎಸ್) ಎಂಬ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಅತ್ಯಾಧುನಿಕ ಹಾಜರಾತಿ ವ್ಯವಸ್ಥೆಯನ್ನು ಜಾರಿಗೆ ತಂದಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಇಲಾಖಾ ಕಾರ್ಯದರ್ಶಿಗಳೊಂದಿಗೆ ನಡೆಸಿದ ಮೊದಲ ಸಭೆಯಲ್ಲಿಯೇ ಸರ್ಕಾರಿ ನೌಕರರು ಕಚೇರಿ ವೇಳೆಯಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ‘ಕರ್ತವ್ಯ’ ವ್ಯವಸ್ಥೆ ಅನುಷ್ಠಾನಗೊಳ್ಳುತ್ತಿದೆ.

ಈ ಹಿಂದೆ ಜಾರಿಯಲ್ಲಿದ್ದ ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಹಾಜರಾತಿ ದಾಖಲಿಸಿ ಕಚೇರಿಯಿಂದ ಹೊರ ಹೋಗುವ ಸಾಧ್ಯತೆ ಇತ್ತು. ಆದರೆ ಹೊಸ ವ್ಯವಸ್ಥೆಯಲ್ಲಿ ಎಐ ಆಧಾರಿತ ಮುಖ ಗುರುತಿಸುವಿಕೆ ಹಾಗೂ ಜಿಯೋಫೆನ್ಸಿಂಗ್ ತಂತ್ರಜ್ಞಾನದ ಮೂಲಕ ಉದ್ಯೋಗಿ ಕಚೇರಿ ವ್ಯಾಪ್ತಿಯಲ್ಲೇ ಇದ್ದಾರೆಯೇ ಎಂಬುದನ್ನು ಪರಿಶೀಲಿಸಲಾಗುತ್ತದೆ.

‘ಕರ್ತವ್ಯ’ ಸಾಫ್ಟ್‌ವೇರ್‌ನ್ನು ಯಾವುದೇ ಖಾಸಗಿ ಸಂಸ್ಥೆಯ ನೆರವಿಲ್ಲದೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಸೆಂಟರ್ ಫಾರ್ ಇ-ಗವರ್ನೆನನ್ಸ್ (ಸಿಇಜಿ) ಹಾಗೂ ಕರ್ನಾಟಕ ಎಐ ಸೆಲ್ ಜಂಟಿಯಾಗಿ ಅಭಿವೃದ್ಧಿಪಡಿಸಿವೆ. ಇದರಿಂದ ಸರ್ಕಾರದ ಕೋಟ್ಯಂತರ ರೂಪಾಯಿ ವೆಚ್ಚ ಉಳಿತಾಯವಾಗಿದ್ದು, ದತ್ತಾಂಶ ಸುರಕ್ಷತೆ ಹಾಗೂ ಸ್ವಾಯತ್ತತೆ ಹೆಚ್ಚಿದೆ.

ಅದೇ ರೀತಿ ಪ್ರತಿದಿನ ಆ್ಯಪ್ ಮೂಲಕ ಹಾಜರಾತಿ ದಾಖಲಿಸುವವರ ಸಂಖ್ಯೆ 1.85 ಲಕ್ಷದಿಂದ 2.32 ಲಕ್ಷಕ್ಕೆ ಏರಿಕೆಯಾಗಿದ್ದು, ಸಕ್ರಿಯ ಬಳಕೆಯಲ್ಲಿ ಶೇ.25ರಷ್ಟು ಹೆಚ್ಚಳ ದಾಖಲಾಗಿದೆ.

ಪ್ರಸ್ತುತ 42 ಇಲಾಖೆಗಳ 4.78 ಲಕ್ಷಕ್ಕೂ ಹೆಚ್ಚು ನೌಕರರನ್ನು ಈ ವ್ಯವಸ್ಥೆಗೆ ಒಳಪಡಿಸಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ 1.68 ಲಕ್ಷಕ್ಕೂ ಹೆಚ್ಚು ನೌಕರರು ಈಗಾಗಲೇ ನೋಂದಾಯಿಸಿಕೊಂಡಿದ್ದು, ದೈನಂದಿನ ಹಾಜರಾತಿಯಲ್ಲಿ ಮೊದಲ ಸ್ಥಾನದಲ್ಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ 66 ಸಾವಿರಕ್ಕೂ ಅಧಿಕ ನೋಂದಣಿಯೊಂದಿಗೆ ಎರಡನೇ ಸ್ಥಾನದಲ್ಲಿದೆ.

ಮೊಬೈಲ್ ಆ್ಯಪ್ ಮೂಲಕವೇ ಹಾಜರಾತಿ ದಾಖಲಿಸುವ ವ್ಯವಸ್ಥೆ ಇರುವುದರಿಂದ ಬಯೋಮೆಟ್ರಿಕ್ ಯಂತ್ರಗಳ ಮುಂದೆ ಸಾಲಿನಲ್ಲಿ ನಿಲ್ಲುವ ಅಗತ್ಯ ತಪ್ಪಿದೆ. ಜೊತೆಗೆ ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿಗಳು ದಿನನಿತ್ಯ ಈ ವ್ಯವಸ್ಥೆಯ ಡ್ಯಾಶ್‌ಬೋರ್ಡ್‌ನ್ನು ಪರಿಶೀಲಿಸಲಿದ್ದಾರೆ.

ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರ ಪ್ರಕಾರ, ಅಧಿಕಾರಿಗಳ ಲಭ್ಯತೆ ಖಚಿತವಾಗುವುದರಿಂದ ಸಾರ್ವಜನಿಕರಿಗೆ ಸೇವೆಗಳು ವೇಗವಾಗಿ ಹಾಗೂ ಸುಲಭವಾಗಿ ದೊರೆಯಲಿದ್ದು, ಡಿಜಿಟಲ್ ಆಡಳಿತದಲ್ಲಿ ಕರ್ನಾಟಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ.

ಒಂದೇ ವಾರದಲ್ಲಿ 25% ಏರಿಕೆ

ಯೋಜನೆಗೆ ಸರ್ಕಾರಿ ನೌಕರರಿಂದ ಉತ್ತಮ ಸ್ಪಂದನೆ ದೊರೆತಿದ್ದು, ಕಳೆದ ವಾರ 2.46 ಲಕ್ಷ ಇದ್ದ ನೋಂದಣಿ ಸಂಖ್ಯೆ ಈಗ 3.01 ಲಕ್ಷಕ್ಕೆ ಏರಿಕೆಯಾಗಿದೆ. ಕೇವಲ ಒಂದೇ ವಾರದಲ್ಲಿ 55 ಸಾವಿರಕ್ಕೂ ಅಧಿಕ ನೌಕರರು ಹೊಸದಾಗಿ ನೋಂದಾಯಿಸಿಕೊಂಡಿದ್ದಾರೆ.

ಅಮೃತ್ 2.0 ಅನುದಾನದಿಂದ ಗದಗದ ನೀರಿನ ಕನಸು ನನಸು: ಅನಿಲ್ ಮೆಣಸಿನಕಾಯಿ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಅವಳಿ ನಗರದ ಬಹುದಿನಗಳ ಕನಸಾಗಿದ್ದ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಹಾಗೂ ರೈತರ ಬದುಕಿಗೆ ಹೊಸ ಆಶಾಕಿರಣ ಮೂಡಿಸುವ ನೀರಾವರಿ ಯೋಜನೆಗಳಿಗೆ ಬೃಹತ್ ಅನುದಾನ ದೊರೆತು ಕಾಮಗಾರಿಗಳಿಗೆ ಚಾಲನೆ ಸಿಕ್ಕಿರುವುದು ಸಂತಸ ತಂದಿದೆ ಎಂದು ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೇಂದ್ರ ಸರ್ಕಾರದ ‘ಅಮೃತ್ 2.0’ ಯೋಜನೆಯಡಿ ಗದಗ-ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ₹42 ಕೋಟಿ ಅನುದಾನ ಬಿಡುಗಡೆಯಾಗಿರುವುದನ್ನು ಸ್ವಾಗತಿಸಿದ್ದಾರೆ. ಡಂಬಳದಿಂದ ಗದಗ ‘ಎ’ ಪಾಯಿಂಟ್‌ವರೆಗೆ ಹೊಸ ಪೈಪ್‌ಲೈನ್ ಸಂಪರ್ಕ ಕಲ್ಪಿಸುವುದು ಹಾಗೂ ನಗರದ ವಿವಿಧ ಭಾಗಗಳಲ್ಲಿ ಐದು ಬೃಹತ್ ಓವರ್‌ಹೆಡ್ ಟ್ಯಾಂಕ್‌ಗಳ ನಿರ್ಮಾಣಕ್ಕಾಗಿ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವುದು ಅಭಿವೃದ್ಧಿಗೆ ಹೊಸ ವೇಗ ನೀಡಲಿದೆ ಎಂದು ಹೇಳಿದ್ದಾರೆ.

ಈ ಮಹತ್ವಾಕಾಂಕ್ಷಿ ಯೋಜನೆಗೆ ಅಗತ್ಯ ಅನುದಾನ ದೊರಕಿಸುವಲ್ಲಿ ಯಶಸ್ವಿಯಾದ ಗದಗ-ಹಾವೇರಿ ಸಂಸದ ಬಸವರಾಜ್ ಬೊಮ್ಮಾಯಿ ಅವರಿಗೆ ಗದಗ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿರುವ ಅವರು, ಹಮ್ಮಿಗಿಯಿಂದ ಡಂಬಳವರೆಗೆ ಬಾಕಿ ಉಳಿದಿರುವ ಕುಡಿಯುವ ನೀರಿನ ಕಾಮಗಾರಿಯನ್ನು ಶೀಘ್ರ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಇದೇ ವೇಳೆ ₹187 ಕೋಟಿ ವೆಚ್ಚದ ಜಾಲವಾಡಗಿ ಏತ ನೀರಾವರಿ ಯೋಜನೆ ಈ ಭಾಗದ ರೈತರಿಗೆ ವರದಾನವಾಗಲಿದ್ದು, ಯೋಜನೆ ಅನುಷ್ಠಾನಕ್ಕೆ ಅಂದಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಚಿವರಾಗಿದ್ದ ಸಿ.ಸಿ. ಪಾಟೀಲ್, ಶಾಸಕರಾಗಿದ್ದ ಕಳಕಪ್ಪ ಬಂಡಿ ಹಾಗೂ ಮಾಜಿ ಸಂಸದ ಶಿವಕುಮಾರ ಉದಾಸಿ ಅವರು ಸಾಕಷ್ಟು ಶ್ರಮಿಸಿದ್ದರು ಎಂದು ಸ್ಮರಿಸಿದ್ದಾರೆ. ಯೋಜನೆಗೆ ಅನುದಾನ ಬಿಡುಗಡೆಯಾಗಿದ್ದರೂ ಕಾಮಗಾರಿಗೆ ಚಾಲನೆ ದೊರೆತಿರಲಿಲ್ಲ. ಇದೀಗ ಕಾಮಗಾರಿ ಆರಂಭವಾಗಿರುವುದು ರೈತಾಪಿ ವಲಯದಲ್ಲಿ ಹೊಸ ಆಶಾಭಾವನೆ ಮೂಡಿಸಿದೆ ಎಂದು ತಿಳಿಸಿದ್ದಾರೆ.

ಜಾಲವಾಡಗಿ ಏತ ನೀರಾವರಿ ಯೋಜನೆಯಡಿ ಗದಗ ವಿಧಾನಸಭಾ ಕ್ಷೇತ್ರದ 17 ಪ್ರಮುಖ ಕೆರೆಗಳ ಜೊತೆಗೆ ರೋಣ ಮತ್ತು ಶಿರಹಟ್ಟಿ ಕ್ಷೇತ್ರಗಳ ಕೆರೆಗಳನ್ನು ತುಂಬಿಸುವ ಯೋಜನೆ ರೂಪಿಸಲಾಗಿದ್ದು, ಇದರಿಂದ ಅಂತರ್ಜಲ ಮಟ್ಟ ಹೆಚ್ಚಳವಾಗಿ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಗದಗ-ಬೆಟಗೇರಿ ಅವಳಿ ನಗರದ ಬಾಕಿ ಉಳಿದಿರುವ ವರ್ತುಲ ರಸ್ತೆ ನಿರ್ಮಾಣಕ್ಕೂ ತಕ್ಷಣ ಮರುಚಾಲನೆ ನೀಡುವಂತೆ ಸರ್ಕಾರವನ್ನು ಅವರು ಒತ್ತಾಯಿಸಿದ್ದಾರೆ. ಸಂಸದ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ₹473 ಕೋಟಿ ವೆಚ್ಚದ ವರ್ತುಲ ರಸ್ತೆ ಯೋಜನೆಗೆ ಸಚಿವ ಸಂಪುಟ ಹಾಗೂ ಹಣಕಾಸು ಇಲಾಖೆಯ ಅನುಮೋದನೆ ದೊರೆತಿದ್ದರೂ, ನಂತರದ ದಿನಗಳಲ್ಲಿ ಯೋಜನೆ ನೆನೆಗುದಿಗೆ ಬಿದ್ದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದಲ್ಲದೆ, ಹಳೆ ಕೋರ್ಟ್ ಹಾಗೂ ಜೆ.ಟಿ. ಕಾಲೇಜು ಸಮೀಪದ ರೈಲ್ವೆ ಅಂಡರ್‌ಪಾಸ್‌ಗಳನ್ನು ಓವರ್‌ಬ್ರಿಡ್ಜ್‌ಗಳಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಈಗಾಗಲೇ ಆಯ್ಕೆಯಾಗಿದ್ದು, ಅಗತ್ಯ ಅನುದಾನ ಬಿಡುಗಡೆಗೊಳಿಸಿ ಕಾಮಗಾರಿಗಳನ್ನು ಶೀಘ್ರ ಆರಂಭಿಸಲು ಸಂಸದ ಬಸವರಾಜ್ ಬೊಮ್ಮಾಯಿ ಮುಂದಾಗಬೇಕು ಎಂದು ಅನಿಲ ಮೆಣಸಿನಕಾಯಿ ಮನವಿ ಮಾಡಿದ್ದಾರೆ. ಈ ಕಾಮಗಾರಿಗಳು ಪೂರ್ಣಗೊಂಡರೆ ವಾಹನ ಸಂಚಾರ ದಟ್ಟಣೆ ಕಡಿಮೆಯಾಗುವುದರ ಜೊತೆಗೆ ಮಳೆಗಾಲದಲ್ಲಿ ಅಂಡರ್‌ಪಾಸ್‌ಗಳಲ್ಲಿ ನೀರು ನಿಲ್ಲುವ ಸಮಸ್ಯೆಗೂ ಶಾಶ್ವತ ಪರಿಹಾರ ದೊರೆಯಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕುಡಿಯುವ ನೀರು, ನೀರಾವರಿ ಹಾಗೂ ರಸ್ತೆ ಅಭಿವೃದ್ಧಿ ಯೋಜನೆಗಳು ಗದಗ-ಬೆಟಗೇರಿ ಭಾಗದ ಭವಿಷ್ಯ ರೂಪಿಸಲಿವೆ. ಈಗಾಗಲೇ ಅನುಮೋದನೆಗೊಂಡಿರುವ ವರ್ತುಲ ರಸ್ತೆ ಸೇರಿದಂತೆ ಬಾಕಿ ಉಳಿದಿರುವ ಎಲ್ಲ ಕಾಮಗಾರಿಗಳಿಗೆ ಸರ್ಕಾರ ತಕ್ಷಣ ಮರುಚಾಲನೆ ನೀಡಬೇಕು”

ಅನಿಲ್ ಮೆಣಸಿನಕಾಯಿ, ಬಿಜೆಪಿ ಮುಖಂಡ

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕು: ಎಚ್.ಪಿ. ಸಂದೇಶ

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಾಮಾಜಿಕ ನ್ಯಾಯ ದೊರಕಿಸುವಲ್ಲಿ ಕಾನೂನು ಸೇವೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ನ್ಯಾಯಾಂಗ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಉಳಿಸುವ ಜವಾಬ್ದಾರಿ ವಕೀಲರ ಮೇಲಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಆಡಳಿತ ನ್ಯಾಯಾಧೀಶ ಎಚ್.ಪಿ. ಸಂದೇಶ ಹೇಳಿದರು.

ಕೃಷಿ ನಗರದ ಕೃಷಿ ವಿಶ್ವವಿದ್ಯಾಲಯದ ರೈತ ಜ್ಞಾನ ಕೇಂದ್ರ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಹುಬ್ಬಳ್ಳಿಯ ಕಾನೂನು ಕಾಲೇಜು ಹಾಗೂ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ‘ಧಾರವಾಡ ತರಗತಿಯಿಂದ ನ್ಯಾಯಾಲಯದ ಕೋಣೆಗೆ-4ನೇ ವಲಯ ಕಾರ್ಯಾಗಾರ’ ಉದ್ಘಾಟಿಸಿ ಅವರು ಮಾತನಾಡಿದರು.

ನ್ಯಾಯದ ಮೇಲೆ ವಿಶ್ವಾಸವಿಟ್ಟು ನ್ಯಾಯಾಲಯದ ಮೆಟ್ಟಿಲೇರಿದ ಕಕ್ಷಿದಾರರಿಗೆ ನ್ಯಾಯ ದೊರಕಿಸುವುದು ವಕೀಲರ ಕರ್ತವ್ಯವಾಗಿದೆ. ಭವಿಷ್ಯದಲ್ಲಿ ವಕೀಲರಾಗಲಿರುವ ಕಾನೂನು ವಿದ್ಯಾರ್ಥಿಗಳು ಅನ್ಯಾಯಕ್ಕೊಳಗಾದವರ ಧ್ವನಿಯಾಗಿ ಕಾರ್ಯನಿರ್ವಹಿಸಬೇಕು. ಇಲ್ಲವಾದರೆ ಕಪ್ಪು ಕೋಟ್ ಧರಿಸುವುದಕ್ಕೆ ಅರ್ಥವಿಲ್ಲ ಎಂದು ಅವರು ಹೇಳಿದರು.

ಎಲ್‌ಎಲ್‌ಬಿ ವಿದ್ಯಾರ್ಥಿಗಳು ಶಿಸ್ತು, ಶ್ರಮ, ಸಮಯಪ್ರಜ್ಞೆ, ಆತ್ಮವಿಶ್ವಾಸ ಹಾಗೂ ನಿರ್ಭೀತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ನೊಂದವರು, ವಿಧವೆಯರು ಹಾಗೂ ಶೋಷಣೆಗೆ ಒಳಗಾದವರ ಹಕ್ಕುಗಳ ರಕ್ಷಣೆಗೆ ಮುಂದಾಗಬೇಕು ಎಂದು ಕರೆ ನೀಡಿದರು.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಸಿ. ಬಸವರಾಜು ಮಾತನಾಡಿ, ಮುಂದಿನ ದಿನಗಳಲ್ಲಿ ವಕೀಲರು ಮತ್ತು ಕಾನೂನು ತಜ್ಞರಾಗಿ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸುವ ಗುರಿ ಹೊಂದಬೇಕು. ಜಾತಿ, ಧರ್ಮ, ಲಿಂಗ ಭೇದವಿಲ್ಲದೆ ಪ್ರತಿಯೊಬ್ಬರಿಗೂ ಸಮಾನ ನ್ಯಾಯ ದೊರೆಯಬೇಕು. ಕಾನೂನು ಜಾಗೃತಿಯ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸಾಧ್ಯ ಎಂದು ಹೇಳಿದರು.

ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಮಾತನಾಡಿ, ಸಾರ್ವಜನಿಕ ಸೇವಕರು ಕಾನೂನಿನ ಅರಿವು ಹೊಂದಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡಬೇಕು. ಭವಿಷ್ಯದ ವಕೀಲರು ಸಮಾಜದ ಸಮಸ್ಯೆಗಳ ಬಗ್ಗೆ ಜಾಗೃತರಾಗಿದ್ದು, ಕಕ್ಷಿದಾರರಿಗೆ ಹೈಕೋರ್ಟ್‌ನ ನ್ಯಾಯ ದೊರಕಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷೆ ಅನು ಶಿವರಾಮನ್ ಮಾತನಾಡಿ, ಕಾನೂನು ಹಾಗೂ ಸಾರ್ವಜನಿಕ ಸೇವೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಕಾನೂನು ಅರಿವಿನ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ನೇರಳೆ ವೀರಭದ್ರಯ್ಯ ವಿಜಯ್, ಸದಸ್ಯ ಕಾರ್ಯದರ್ಶಿ ಎಚ್. ಶಶಿಧರ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಪಿ.ಯು. ಕೃಷ್ಣರಾಜ್, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಲ್ಲಪ್ಪ ಎಂ. ಬಡಿಗೇರ, ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಪೂರ್ಣಿಮಾ ಪೈ, ವಕೀಲರು, ಕಾನೂನು ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ನೇರಳೆ ವೀರಭದ್ರಯ್ಯ ವಿಜಯ್ ಸ್ವಾಗತಿಸಿದರು. ಪೂರ್ಣಿಮಾ ಪೈ ಕಾರ್ಯಕ್ರಮ ನಿರೂಪಿಸಿದರು. ಅಲ್ಲಪ್ಪ ಎಂ. ಬಡಿಗೇರ ವಂದಿಸಿದರು.

“ಅನ್ಯಾಯಕ್ಕೊಳಗಾದವರ ಪರವಾಗಿ ನಿಲ್ಲದಿದ್ದರೆ ಕಪ್ಪು ಕೋಟ್ ಧರಿಸುವುದಕ್ಕೆ ಅರ್ಥವಿಲ್ಲ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸುವುದು ಕಾನೂನು ವಿದ್ಯಾರ್ಥಿಗಳು ಮತ್ತು ವಕೀಲರ ಮೊದಲ ಕರ್ತವ್ಯವಾಗಬೇಕು”

ಎಚ್.ಪಿ. ಸಂದೇಶ, ನ್ಯಾಯಮೂರ್ತಿಗಳು

ಸಚಿವ ಸ್ಥಾನಕ್ಕಾಗಿ ಜಿ.ಎಸ್. ಪಾಟೀಲ ಪರ ಯುವಕರ ಗುಡುಗು: ಹೈಕಮಾಂಡ್‌ಗೆ ಎಚ್ಚರಿಕೆ

0

ವಿಜಯಸಾಕ್ಷಿ ಸುದ್ದಿ, ಡಂಬಳ: ರೋಣ ವಿಧಾನಸಭಾ ಕ್ಷೇತ್ರದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜಿ.ಎಸ್. ಪಾಟೀಲ ಅವರು ಗದಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದರ ಜೊತೆಗೆ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಇಂತಹ ಜನಪರ ನಾಯಕರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಯುವಕರ ನೇತೃತ್ವದಲ್ಲಿ ದೊಡ್ಡ ಪ್ರಮಾಣದ ಹೋರಾಟ ನಡೆಸಲಾಗುವುದು ಎಂದು ಯುವ ಕಾಂಗ್ರೆಸ್ ಮುಖಂಡ ವೆಂಕಟೇಶ ಗದಗಿನ ಎಚ್ಚರಿಸಿದರು.

ಡಂಬಳದ ಐತಿಹಾಸಿಕ ಪ್ರವಾಸಿ ಮಂದಿರದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಂಗಟಾಲೂರು ಏತ ನೀರಾವರಿ ಯೋಜನೆಯ ಮೂಲಕ ಕೆರೆಗಳನ್ನು ತುಂಬಿಸಿ ರೈತರ ಬದುಕಿಗೆ ಆಶಾಕಿರಣವಾಗಿರುವ ಜಿ.ಎಸ್. ಪಾಟೀಲರು ಕ್ಷೇತ್ರದ ಅಭಿವೃದ್ಧಿಗೆ ನಿರಂತರ ಶ್ರಮಿಸಿದ್ದಾರೆ. ಡಂಬಳದಲ್ಲಿ ತೋಟಗಾರಿಕಾ ಕಾಲೇಜು ಸ್ಥಾಪನೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ಮುಂಚೂಣಿಯಲ್ಲಿದ್ದಾರೆ. ಆದ್ದರಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಯುವ ಕಾಂಗ್ರೆಸ್ ಮುಖಂಡ ಪ್ರಕಾಶ ಮೇಗೂರ ಮಾತನಾಡಿ, ರೋಣಕ್ಕೆ ಭೇಟಿ ನೀಡಿದ್ದ ವೇಳೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ ಅವರು ಜಿ.ಎಸ್. ಪಾಟೀಲರು ಸಚಿವ ಸ್ಥಾನಕ್ಕೆ ಅರ್ಹರು ಎಂದು ಹೇಳಿದ್ದರು. ಆ ಭರವಸೆಯನ್ನು ಇದೀಗ ಈಡೇರಿಸುವ ಸಮಯ ಬಂದಿದೆ. ರೈತರು, ಬಡವರು ಹಾಗೂ ಕಾರ್ಮಿಕರ ಪರವಾಗಿ ನಿರಂತರವಾಗಿ ಕೆಲಸ ಮಾಡಿದ ನಾಯಕನಿಗೆ ಸಚಿವ ಸ್ಥಾನ ನೀಡುವುದರಿಂದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಲಿದೆ ಎಂದು ಹೇಳಿದರು.

ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡದಿದ್ದರೆ ಕಾಂಗ್ರೆಸ್ ಪಕ್ಷದ ಅನೇಕ ಯುವ ಕಾರ್ಯಕರ್ತರು ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಎಚ್ಚರಿಸಿದ ಅವರು, ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳ ದೃಷ್ಟಿಯಿಂದಲೂ ಅವರಿಗೆ ಸಚಿವ ಸ್ಥಾನ ನೀಡುವುದು ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಯುವ ಕಾಂಗ್ರೆಸ್ ಸದಸ್ಯರಾದ ಆದಿತ್ಯ ಗದಗಿನ ಹಾಗೂ ಆಶಿಫ್ ತಾಂಬೋಟಿ ಮಾತನಾಡಿ, ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜಿ.ಎಸ್. ಪಾಟೀಲರು ಯಾವುದೇ ಕಪ್ಪು ಚುಕ್ಕೆ ಇಲ್ಲದ ರಾಜಕೀಯ ಜೀವನ ನಡೆಸಿದ್ದಾರೆ. ಕೋವಿಡ್ ಅವಧಿಯಲ್ಲಿ ಜನರ ಸಂಕಷ್ಟಕ್ಕೆ ಸ್ಪಂದಿಸಿದ ಮಾನವೀಯ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಅವರ ಸೇವೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಯುವ ಮುಖಂಡ ಗೋಪಾಲ ಗದಗಿನ ಮಾತನಾಡಿ, 25 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿರುವುದು ಜಿ.ಎಸ್. ಪಾಟೀಲರ ಜನಪ್ರಿಯತೆಗೆ ಸಾಕ್ಷಿಯಾಗಿದೆ. ಈ ಹಿಂದೆ ನೀಡಿದ್ದ ಭರವಸೆಯಂತೆ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಯುವ ಮುಖಂಡರಾದ ಭರಮಪ್ಪ ಮಂಗೋಜಿ, ಬುಡ್ನೇಸಾಬ ಜಲಾಲನವರ, ಮಂಜುನಾಥ ನರಗುಂದ, ಯಾಸೀನ್ ತಾಂಬೋಟಿ, ಶ್ರೀಕಾಂತ ಸಿರಿಗೇರಿ, ಮನ್ಸೂರಅಲಿ ಸುಂಕದ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ರೈತರು, ಬಡವರು ಮತ್ತು ಸಾಮಾನ್ಯ ಜನರ ಪರವಾಗಿ ನಿರಂತರವಾಗಿ ಹೋರಾಟ ನಡೆಸಿರುವ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡುವುದು ಕಾಂಗ್ರೆಸ್ ಹೈಕಮಾಂಡ್‌ನ ನೈತಿಕ ಹೊಣೆಗಾರಿಕೆಯಾಗಿದೆ. ಸಚಿವ ಸ್ಥಾನ ನೀಡದಿದ್ದರೆ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು.”

ವೆಂಕಟೇಶ ಗದಗಿನ
ಯುವ ಕಾಂಗ್ರೆಸ್ ಮುಖಂಡರು

30 ವರ್ಷಗಳ ಬಳಿಕ ಗುರು-ಶಿಷ್ಯರ ಅಪೂರ್ವ ಸಂಗಮ: ಪಾದಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ವಿದ್ಯಾರ್ಥಿಗಳು

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಮೂರು ದಶಕಗಳ ಬಳಿಕ ಒಂದೇ ವೇದಿಕೆಯಲ್ಲಿ ಸೇರಿದ್ದ ಹಳೆಯ ವಿದ್ಯಾರ್ಥಿಗಳು ತಮ್ಮ ಗುರುಗಳಿಗೆ ಪಾದಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ಅಪರೂಪದ ದೃಶ್ಯ ನರೇಗಲ್ಲದಲ್ಲಿ ಕಂಡು ಬಂತು. ಗುರುಗಳ ಮೇಲಿನ ಗೌರವ, ಹಳೆಯ ಸ್ನೇಹಿತರ ಮಿಲನ ಹಾಗೂ ಶಾಲಾ ದಿನಗಳ ಸಿಹಿ ನೆನಪುಗಳ ಸಂಭ್ರಮದಿಂದ ‘ಗುರುವಂದನಾ ಮತ್ತು ಸ್ನೇಹ ಸಮ್ಮಿಲನ’ ಕಾರ್ಯಕ್ರಮ ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಯಿತು.

ನರೇಗಲ್ಲದ ಸರ್ಕಾರಿ ಮಾದರಿ ಕೇಂದ್ರ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ 1988-89ರಿಂದ 1995-96ರ ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳು ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು.

ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಶಿಕ್ಷಕ ಎಂ.ಎಸ್. ಧಡೇಸೂರಮಠ, ಗುರುಗಳ ಮಹತ್ವವನ್ನು ಸ್ಮರಿಸಿ ಭಾವಪೂರ್ಣವಾಗಿ ಮಾತನಾಡಿದರು.

“ತಂದೆ-ತಾಯಿಯ ನಂತರ ಜೀವನಕ್ಕೆ ದಾರಿ ತೋರಿಸುವವರು ಗುರುಗಳು. ಗುರುವಿನ ಗುಲಾಮನಾಗುವ ತನಕ ಮುಕ್ತಿ ಸಿಗುವುದಿಲ್ಲ. ಇಂದು ನಾವು ಸಮಾಜದಲ್ಲಿ ಒಂದು ಸ್ಥಾನ ಪಡೆದಿದ್ದರೆ ಅದಕ್ಕೆ ಗುರುಗಳ ಮಾರ್ಗದರ್ಶನ, ಶಿಸ್ತು ಹಾಗೂ ಅವರು ಬಿತ್ತಿದ ಮೌಲ್ಯಗಳೇ ಕಾರಣ.” ಎಂದು ಎಂ.ಎಸ್. ಧಡೇಸೂರಮಠ ಹೇಳಿದರು.

ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪುಸ್ತಕಗಳು ಜ್ಞಾನವನ್ನು ವೃದ್ಧಿಸುವುದರ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗುತ್ತವೆ ಎಂದು ಅವರು ಹೇಳಿದರು.

ಇಂದಿನ ಮೊಬೈಲ್ ಯುಗದಲ್ಲೂ ಓದುವ ಸಂಸ್ಕೃತಿ ಕಡಿಮೆಯಾಗಬಾರದು. ಪ್ರತಿಯೊಂದು ಮನೆಯಲ್ಲಿ ಪತ್ರಿಕೆ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಪತ್ರಿಕೆ ಸಮಾಜದ ಕನ್ನಡಿಯಾಗಿದ್ದು, ದೇಶ-ವಿದೇಶದ ವಿದ್ಯಮಾನಗಳ ಜೊತೆಗೆ ಕೃಷಿ, ಆರೋಗ್ಯ ಹಾಗೂ ವಿಜ್ಞಾನದ ಮಾಹಿತಿಯನ್ನು ಒದಗಿಸುತ್ತದೆ ಎಂದು ತಿಳಿಸಿದರು.

ಅಲ್ಲದೆ, ಯುವಜನತೆ ಗುಟ್ಕಾ, ತಂಬಾಕು ಸೇರಿದಂತೆ ದುಶ್ಚಟಗಳಿಂದ ದೂರವಿದ್ದು ಆರೋಗ್ಯಕರ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಿವೃತ್ತ ಡಿಡಿಪಿಐ ಸಂಜೀವ ಬಿಂಗೇರಿ ಮಾತನಾಡುವ ವೇಳೆ ಭಾವುಕರಾದರು.

ಅವರ ಮಾತುಗಳಿಗೆ ಸಭಾಂಗಣ ಕರತಾಡನದಿಂದ ಮೊಳಗಿತು.

ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಾದ ವೀರಪ್ಪ ಸಂಗನಾಳ, ಕುಸುಮವ್ವ ಭೀಮನಗೌಡ್ರ, ಶರಣಬಸಪ್ಪ ಬೂದಿಹಾಳ, ಅಂದಾನಪ್ಪ ಅಣಗೌಡ್ರ, ಎಂ.ಪಿ. ಬಸರೀಗಿಡದ, ನಿಂಗನಗೌಡ ಚಿಕ್ಕನಗೌಡ್ರ, ಬಸವನಗೌಡ ಗೌಡರ, ಗೀತಾ ಗುಜ್ಜಲ ಹಾಗೂ ಮಲ್ಲವ್ವ ಸಕ್ರೋಜಿ ಅವರನ್ನು ‘ಜ್ಞಾನ ದೀಪಗಳು’ ಎಂದು ಗೌರವಿಸಿ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಕೃಷಿಕರಾಗಿರುವ ಹಳೆಯ ವಿದ್ಯಾರ್ಥಿಗಳು ಸಿಂಗರಿಸಿದ ಜೋಡಿ ಎತ್ತುಗಳನ್ನು ಕರೆತಂದು ಕೃಷಿ ಸಂಸ್ಕೃತಿಯ ಮಹತ್ವವನ್ನು ಬಿಂಬಿಸಿದರು. ಬಳಿಕ ಗುರುಗಳಿಗೆ ಪುಷ್ಪವೃಷ್ಟಿ ಮಾಡಿ, ಪಾದಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಈ ದೃಶ್ಯ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು.

ಹಳೆಯ ವಿದ್ಯಾರ್ಥಿಗಳಾದ ವಿರೂಪಾಕ್ಷಪ್ಪ ಸಂಗನಾಳ, ಹುಚ್ಚಪ್ಪ ನರೇಗಲ್ಲ, ವರುಣ ಸಂಗನಾಳ ಹಾಗೂ ಕಾಳಿದಾಸ ಬಡಿಗೇರ ಅವರು ಶಾಲಾ ದಿನಗಳ ನೆನಪುಗಳನ್ನು ಹಂಚಿಕೊಂಡು ಹಳೆಯ ದಿನಗಳನ್ನು ಮರುಕಳಿಸಿದರು.

ಹರೀಶ ಬೊಮ್ಮನಹಳ್ಳಿ ಹಾಗೂ ಗೀತಾ ಭೋಪಳಾಪೂರ ಅವರ ಸಂಗೀತ ಕಾರ್ಯಕ್ರಮಕ್ಕೆ ಮೆರುಗು ನೀಡಿತು.

ಶಿವಕುಮಾರ ಮುಳಗುಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ವೀರಪ್ಪ ಸಂಗನಾಳ ಸ್ವಾಗತಿಸಿದರು. ಸುರೇಶ ಹಳ್ಳಿಕೇರಿ, ಗವಿಸಿದ್ದಯ್ಯ ಹಳ್ಳಿಕೇರಿ ಸೇರಿದಂತೆ ಅನೇಕ ಗಣ್ಯರು ಹಾಗೂ ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

“ಮೂವತ್ತು ವರ್ಷಗಳ ಹಿಂದೆ ಮಾಡಿದ ಸೇವೆಯನ್ನು ವಿದ್ಯಾರ್ಥಿಗಳು ಇಂದಿಗೂ ನೆನಪಿಟ್ಟುಕೊಂಡು ಗೌರವಿಸುತ್ತಿರುವುದು ಶಿಕ್ಷಕನ ಜೀವನದ ಅತ್ಯಂತ ದೊಡ್ಡ ಸಂಪತ್ತು. ಇದಕ್ಕಿಂತ ದೊಡ್ಡ ಪ್ರಶಸ್ತಿ ಮತ್ತೊಂದಿಲ್ಲ.”

ಸಂಜೀವ ಬಿಂಗೇರಿ, ನಿವೃತ್ತ ಡಿಡಿಪಿಐ

error: Content is protected !!