Home Blog

ಪತಿಗೆ ಕಿರುಕುಳ, ಪ್ರತ್ಯೇಕ ವಾಸ: ದಂಪತಿಗೆ ವಿಚ್ಛೇದನ ಮಂಜೂರು ಮಾಡಿದ ಹೈಕೋರ್ಟ್; 17 ಲಕ್ಷ ಜೀವನಾಂಶಕ್ಕೆ ಆದೇಶ

0

ಬೆಂಗಳೂರು: ಪದೇ ಪದೇ ಪತಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದು ಮತ್ತು ಸುದೀರ್ಘ ಅವಧಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ ಪತ್ನಿಯ ವರ್ತನೆಯನ್ನು ಪರಿಗಣಿಸಿದ ಹೈಕೋರ್ಟ್, ದಂಪತಿಗೆ ವಿಚ್ಛೇದನ ಮಂಜೂರು ಮಾಡಿ ಆದೇಶಿಸಿದೆ.

ಇದರೊಂದಿಗೆ ಪತ್ನಿಗೆ 17 ಲಕ್ಷ ರೂಪಾಯಿ ಶಾಶ್ವತ ಜೀವನಾಂಶ ಪಾವತಿಸುವಂತೆಯೂ ಪತಿಗೆ ನ್ಯಾಯಾಲಯ ಸೂಚಿಸಿದೆ. ವಿಚ್ಛೇದನ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಮೈಸೂರಿನ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮೈಸೂರು ನಿವಾಸಿ ಪತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಎಚ್. ಶಾಂತಿ ಭೂಷಣ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಸಾಕ್ಷ್ಯಾಧಾರ ಹಾಗೂ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಪೀಠ, ಅರ್ಜಿದಾರ ಪತಿ ಪತ್ನಿಯಿಂದ ಕ್ರೌರ್ಯಕ್ಕೆ ಒಳಗಾಗಿರುವುದು ಮತ್ತು 2017ರಿಂದ ಪತ್ನಿ ಸೂಕ್ತ ಕಾರಣವಿಲ್ಲದೆ ಪತಿಯನ್ನು ತ್ಯಜಿಸಿ ಪ್ರತ್ಯೇಕವಾಗಿ ವಾಸಿಸುತ್ತಿರುವುದು ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಪತ್ನಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಇರುವುದನ್ನು ಮಕ್ಕಳೇ ಕಂಡಿದ್ದು, ಈ ವಿಚಾರವನ್ನು ಪತಿಗೆ ತಿಳಿಸದಂತೆ ಪತ್ನಿ ಮಕ್ಕಳಿಗೆ ಎಚ್ಚರಿಕೆ ನೀಡಿದ್ದ ಅಂಶವನ್ನೂ ಪೀಠ ಪ್ರಸ್ತಾಪಿಸಿದೆ. ವಿಚಾರಣಾ ನ್ಯಾಯಾಲಯ ಈ ಎಲ್ಲ ದಾಖಲೆಗಳನ್ನು ಪರಿಗಣಿಸುವಲ್ಲಿ ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್, ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿದೆ.

ವಿಚ್ಛೇದನ ಅರ್ಜಿಯನ್ನು ಪುರಸ್ಕರಿಸಿದ ಪೀಠ, ಸುದೀರ್ಘ ಕಾನೂನು ಹೋರಾಟಕ್ಕೆ ಶಾಶ್ವತವಾಗಿ ತೆರೆ ಎಳೆಯುವ ನಿಟ್ಟಿನಲ್ಲಿ ಪತ್ನಿಯ ನಿರ್ವಹಣೆಗಾಗಿ ಸೆಕ್ಷನ್ 25ರ ಅಡಿ 17,00,000 ರೂಪಾಯಿ ಖಾಯಂ ಜೀವನಾಂಶ ನೀಡುವಂತೆ ಆದೇಶಿಸಿದೆ. ಈ ಮೊತ್ತವನ್ನು ತೀರ್ಪು ಹೊರಬಿದ್ದ 8 ವಾರಗಳ ಒಳಗೆ ಪತ್ನಿಯ ಖಾತೆಗೆ ಪಾವತಿಸಬೇಕೆಂದು ಪೀಠ ತಿಳಿಸಿದೆ.

ಪ್ರಕರಣದ ಹಿನ್ನೆಲೆ: ಅರ್ಜಿದಾರ ಪತಿ ಮತ್ತು ಪ್ರತಿವಾದಿ ಪತ್ನಿಗೆ 2004ರ ಡಿಸೆಂಬರ್ 20ರಂದು ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಗೌಡ ಸಮಾಜದ ಸಂಪ್ರದಾಯದಂತೆ ವಿವಾಹ ನೆರವೇರಿತ್ತು. ವಿವಾಹದ ಬಳಿಕ ದಂಪತಿಗೆ ಇಬ್ಬರು ಹೆಣ್ಣುಮಕ್ಕಳು ಜನಿಸಿದ್ದರು. ಮದುವೆಯಾದ ಒಂದು ವರ್ಷದವರೆಗೆ ಸಂಸಾರ ಸುಖಕರವಾಗಿತ್ತಾದರೂ, ಬಳಿಕ ಪ್ರತಿವಾದಿ ಪತ್ನಿ ಮನೆಯಲ್ಲಿ ಅನಗತ್ಯ ಗಲಾಟೆ ಆರಂಭಿಸಿದ್ದರು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಹಲವು ಬಾರಿ ಉದ್ಯೋಗ ಬದಲಿಸಿದ್ದ ಪತ್ನಿ, ಮಕ್ಕಳಿದ್ದರೂ ಅವರನ್ನು ಬಿಟ್ಟು ಮನೆ ತೊರೆದು ಹೋಗುತ್ತಿದ್ದರು ಎಂದೂ, ಇದನ್ನು ಪ್ರಶ್ನಿಸಿದಾಗ ಸಬೂಬು ನೀಡುತ್ತಿದ್ದರು ಎಂದೂ ದೂರಲಾಗಿದೆ.

ಪತ್ನಿಯ ಒತ್ತಾಯದ ಮೇರೆಗೆ ಪತಿ ಕಾರು ಮತ್ತು ದ್ವಿಚಕ್ರವಾಹನ ಖರೀದಿಸಿದ್ದರು. ಬಳಿಕ ಪತ್ನಿ ಕಾರು ತೆಗೆದುಕೊಂಡು ಇಚ್ಛಿಸಿದಲ್ಲಿಗೆ ತೆರಳುತ್ತಿದ್ದರು ಎಂದೂ, ಪ್ರಶ್ನಿಸಿದಾಗ ಬೆದರಿಕೆ ಒಡ್ಡುತ್ತಿದ್ದರು ಎಂದೂ ಆರೋಪಿಸಲಾಗಿತ್ತು. ಸುಳ್ಳು ದೂರುಗಳ ಮೂಲಕ ನಿರಂತರ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಲಾಗುತ್ತಿತ್ತು ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.

ಹಲವು ಬಾರಿ ದೂರು ದಾಖಲಾಗಿ ರಾಜಿ ಸಂಧಾನದ ಮೂಲಕ ಪತ್ನಿ ಮತ್ತೆ ಮನೆಗೆ ಮರಳುತ್ತಿದ್ದರೂ, ಪ್ರತ್ಯೇಕ ಆಹಾರ ಸಿದ್ಧಪಡಿಸಿಕೊಂಡು ಪತಿ ಹಾಗೂ ಮಕ್ಕಳಿಂದ ದೂರವೇ ಇರುತ್ತಿದ್ದರು. ಈ ಎಲ್ಲ ಕಾರಣಗಳಿಂದ ಅರ್ಜಿದಾರರು ವಿಚ್ಛೇದನ ಕೋರಿ ಮೈಸೂರಿನ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 13(1)(1ಎ) (ಕ್ರೌರ್ಯ) ಮತ್ತು 13(1)(1ಬಿ) (ಪರಿತ್ಯಾಗ) ಅಡಿ ಸಲ್ಲಿಸಲಾಗಿದ್ದ ವಿಚ್ಛೇದನ ಅರ್ಜಿಯನ್ನು ಮೈಸೂರಿನ ಪ್ರಥಮ ಹೆಚ್ಚುವರಿ ಪ್ರಧಾನ ಕೌಟುಂಬಿಕ ನ್ಯಾಯಾಲಯ 2019ರ ಫೆಬ್ರುವರಿ 11ರಂದು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಪತಿ 2019ರಲ್ಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರಸ್ತುತ 20 ಮತ್ತು 18 ವರ್ಷದ ಇಬ್ಬರು ಹೆಣ್ಣುಮಕ್ಕಳ ಶಿಕ್ಷಣ ಹಾಗೂ ಇತರೆ ನಿರ್ವಹಣೆಯನ್ನು ಪತಿಯೇ ಸಂಪೂರ್ಣ ನೋಡಿಕೊಳ್ಳುತ್ತಿದ್ದಾರೆ ಎಂದೂ, ಹಿರಿಯ ಮಗಳು ಎಂಜಿನಿಯರಿಂಗ್ ಹಾಗೂ ಕಿರಿಯ ಮಗಳು ಪಿಯುಸಿ ಪೂರ್ಣಗೊಳಿಸಿದ್ದು ಆರ್ಥಿಕ ನೆರವಿನ ಅಗತ್ಯವಿದೆ ಎಂದೂ ನ್ಯಾಯಪೀಠದ ಗಮನಕ್ಕೆ ತಂದರು.

ಪತಿಯೊಂದಿಗೆ ಸೇರಿ ಬಾಳಲು ಸಿದ್ಧವಿರುವುದಾಗಿ ಪತ್ನಿ ತಿಳಿಸಿದ್ದರೂ, ತಿಂಗಳಿಗೆ 40,000 ರೂಪಾಯಿ ಮಧ್ಯಂತರ ಜೀವನಾಂಶ ಕೋರಿದ್ದರು. ಪ್ರತಿವಾದಿ ಪತ್ನಿಯ ಪರ ವಕೀಲರು ಮೇಲ್ಮನವಿಯಲ್ಲಿನ ಎಲ್ಲ ಆರೋಪಗಳನ್ನು ನಿರಾಕರಿಸಿದ್ದರು.

ಈ ದಾಖಲೆ ಇಲ್ಲದಿದ್ದರೆ ಗೃಹಲಕ್ಷ್ಮಿ ಯೋಜನೆಯಿಂದ ಹೆಸರು ಡಿಲೀಟ್? ಇದೇ ವಾರದಿಂದ ಮನೆ ಮನೆ ಸಮೀಕ್ಷೆ ಆರಂಭ

0

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಲ್ಲಿ ಅರ್ಹರನ್ನು ಗುರುತಿಸಲು ಬಯೋಮೆಟ್ರಿಕ್ ಹಾಗೂ ಫೇಶಿಯಲ್ ಅಥೆಂಟಿಕೇಷನ್ ಮೂಲಕ ಮರುಪರಿಶೀಲನೆ ನಡೆಸಲು ಸರ್ಕಾರ ಮುಂದಾಗಿದೆ. ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುವ ಮೂಲಕ ಆರ್ಥಿಕ ಬಲ ತುಂಬುವ ಈ ಯೋಜನೆಗೆ ಮೂರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

2023ರ ಆಗಸ್ಟ್‌ನಿಂದ ಈವರೆಗೆ 1.24 ಕೋಟಿ ಫಲಾನುಭವಿಗಳಿಗೆ 32 ಕಂತುಗಳಲ್ಲಿ 7,69,751.13 ಕೋಟಿ ರೂಪಾಯಿ ಸಹಾಯಧನ ಪಾವತಿಸಲಾಗಿದೆ. ಆದರೆ ಈ ಅವಧಿಯಲ್ಲಿ ಮರಣ ಹೊಂದಿದವರು ಹಾಗೂ ವಲಸೆ ಹೋದವರು ಸೇರಿದಂತೆ ಅನರ್ಹರಿಗೂ ಗೃಹಲಕ್ಷ್ಮಿ ಹಣ ಸಂದಾಯವಾಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಅನರ್ಹರನ್ನು ಕೈಬಿಟ್ಟು ಯೋಜನೆ ಮುಂದುವರಿಸಲು ಸರ್ಕಾರ ತೀರ್ಮಾನಿಸಿದೆ.

ಇದೇ ವಾರದಿಂದ ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮನೆ ಮನೆಗೆ ತೆರಳಿ ಫಲಾನುಭವಿಗಳ ಪರಿಶೀಲನೆ ನಡೆಯಲಿದ್ದು, ವೋಟರ್ ಐಡಿ ಇಲ್ಲದಿದ್ದಲ್ಲಿ ಯೋಜನೆಯಿಂದ ಹೆಸರು ಕೈಬಿಡಲಾಗುವುದು ಎಂದು ಅವರು ಹೇಳಿದ್ದಾರೆ.

ಚುನಾವಣಾ ಆಯೋಗ ನಡೆಸಿದ ಎಸ್ಐಆರ್ ಪ್ರಕ್ರಿಯೆಯಲ್ಲಿ ಹೆಸರು ಕೈಬಿಟ್ಟಿದ್ದರೆ, ಅಂತಹವರ ಹೆಸರು ಗೃಹಲಕ್ಷ್ಮಿ ಯೋಜನೆಯಿಂದಲೂ ತೆಗೆದುಹಾಕಲಾಗುವುದು. ಮನೆ ಮನೆಗೆ ತೆರಳುವ ಸಿಬ್ಬಂದಿ ಮರುಪರಿಶೀಲನೆ ವೇಳೆ ಅಗತ್ಯ ದಾಖಲೆಗಳನ್ನು ಸಂಗ್ರಹಿಸಲಿದ್ದಾರೆ. ಮನೆಯಲ್ಲೇ ಫೇಸ್ ರೆಕಗ್ನಿಷನ್ ನಡೆಸಲಾಗುವುದು; ಅದು ಸಾಧ್ಯವಾಗದಿದ್ದಲ್ಲಿ ಬಯೋಮೆಟ್ರಿಕ್ ಕಡ್ಡಾಯಗೊಳಿಸಲಾಗಿದೆ. ಇದಲ್ಲದೆ ಬೆಂಗಳೂರು ಒನ್, ಕರ್ನಾಟಕ ಒನ್, ಸೇವಾ ಕೇಂದ್ರ ಹಾಗೂ ಪಡಿತರ ಕೇಂದ್ರಗಳಲ್ಲೂ ಬಯೋಮೆಟ್ರಿಕ್ ಪರಿಶೀಲನೆಗೆ ಅವಕಾಶ ಕಲ್ಪಿಸಲಾಗಿದೆ.

ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ಸ್ ಸರ್ವೀಸಸ್ ನಿರ್ದೇಶನಾಲಯ ಅಭಿವೃದ್ಧಿಪಡಿಸಿರುವ ತಂತ್ರಾಂಶ ಹಾಗೂ ಮೊಬೈಲ್ ಅಪ್ಲಿಕೇಷನ್ ಮೂಲಕ ಮನೆ ಮನೆ ಸಮೀಕ್ಷೆ ನಡೆಯಲಿದೆ. ಇದಕ್ಕಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮರುಪರಿಶೀಲನಾ ಸಮೀಕ್ಷೆಯ ಮಾದರಿ ನಮೂನೆಗಳನ್ನು ಸಿದ್ಧಪಡಿಸಲಿದೆ. ಆಗಸ್ಟ್ 30ರಿಂದ ಒಂದು ತಿಂಗಳೊಳಗೆ ಕ್ಷೇತ್ರ ಪರಿಶೀಲನೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.

ಗ್ಯಾರಂಟಿ ಸಮಿತಿ ಸದಸ್ಯರು ಹಾಗೂ ಸಿಬ್ಬಂದಿ ಮನೆ ಮನೆಗೆ ತೆರಳಿ ಗಣತಿ ನಮೂನೆ ವಿತರಿಸಲಿದ್ದು, ಫಲಾನುಭವಿಗಳು ಅದನ್ನು ಭರ್ತಿ ಮಾಡಿ ಅಲ್ಲಿಯೇ ಹಿಂತಿರುಗಿಸಬೇಕಿದೆ. ಈ ವೇಳೆ ಗಣತಿದಾರರು ಮೊಬೈಲ್ ಆ್ಯಪ್ ಬಳಸಿ ಫಲಾನುಭವಿಯ ಫೋಟೋ, ಮನೆಯ ಫೋಟೋ ಹಾಗೂ ಸ್ವಯಂಚಾಲಿತ ಜಿಪಿಎಸ್ ನಿರ್ದೇಶಾಂಕಗಳನ್ನು ದಾಖಲಿಸಲಿದ್ದಾರೆ.

ಈ ಹಿಂದೆ ಈ ಬಗ್ಗೆ ಮಾತನಾಡಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹಲಕ್ಷ್ಮಿ ಯೋಜನೆಗೆ ಮತದಾರರ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗುವುದು ಎಂದಿದ್ದರು. ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಿ ವೋಟರ್ ಐಡಿ ಕೈಬಿಡದಂತೆ ಎಚ್ಚರಿಕೆ ವಹಿಸುವಂತೆಯೂ ಅವರು ಸಾರ್ವಜನಿಕರಿಗೆ ಕರೆ ನೀಡಿದ್ದರು.

ಚಿಕನ್ ಪೀಸ್‌ಗಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಸ್ನೇಹಿತನ ಎದೆಗೆ ಚಾಕು ಇರಿದು ಹತ್ಯೆ!

0

ಬೆಳಗಾವಿ: ಪಾರ್ಟಿಯಲ್ಲಿ ಹೆಚ್ಚುವರಿ ಚಿಕನ್ ಪೀಸ್ ಬೇಕೆಂಬ ವಿಚಾರಕ್ಕೆ ಇಬ್ಬರು ಕಾರ್ಮಿಕರ ನಡುವೆ ನಡೆದ ಜಗಳ ಕೊನೆಗೆ ಒಬ್ಬನ ಪ್ರಾಣವನ್ನೇ ಬಲಿ ಪಡೆದಿದೆ. ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಸೀತಾರಾಮ್ ಎಂಬಾತ ಚಾಕು ಇರಿತಕ್ಕೆ ಬಲಿಯಾಗಿದ್ದು, ಆತನ ಸಹೋದ್ಯೋಗಿ ಅರುಣ್‌ಕುಮಾರ್ ಕೊಲೆ ಆರೋಪದಲ್ಲಿ ಪೊಲೀಸರ ವಶದಲ್ಲಿದ್ದಾನೆ.

ಸೀತಾರಾಮ್ ಹಾಗೂ ಅರುಣ್‌ಕುಮಾರ್ ಮೂಲತಃ ಉತ್ತರ ಪ್ರದೇಶದ ಪಿಲಿಪತ್ ಜಿಲ್ಲೆಯ ಕಬೀರಗಂಜ್ ಗ್ರಾಮದವರು. ಇಬ್ಬರೂ ಮೂಡಲಗಿ ಪಟ್ಟಣದ ಸ್ಟೀಲ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸಹೋದ್ಯೋಗಿಗಳಾಗಿದ್ದರು.

ಆಗಸ್ಟ್ 30ರ ರಾತ್ರಿ ಇಬ್ಬರೂ ಸೇರಿದಂತೆ ಕೆಲವರು ಚಿಕನ್ ಪಾರ್ಟಿ ಮಾಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಸೀತಾರಾಮ್ ತನಗೆ ಹೆಚ್ಚಿನ ಚಿಕನ್ ಪೀಸ್ ಬೇಕು ಎಂದು ಕೇಳಿದ್ದಾನೆ. ಇದೇ ಸಣ್ಣ ವಿಚಾರಕ್ಕೆ ಇಬ್ಬರ ನಡುವೆ ಜಗಳ ಶುರುವಾಗಿ, ಪರಿಸ್ಥಿತಿ ಕೈಮೀರಿ ಹೋಗಿದೆ.

ಆರೋಪಿಯು ಚಾಕು ತೆಗೆದುಕೊಂಡು ಸೀತಾರಾಮ್‌ನ ಎದೆಗೆ ಇರಿದಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಸೀತಾರಾಮ್‌ನನ್ನು ಬಳಿಕ ಅರುಣ್‌ಕುಮಾರ್ ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾನೆ.

ಆದರೆ ತನ್ನ ಕೃತ್ಯವನ್ನು ಮುಚ್ಚಿಹಾಕಲು ಸೀತಾರಾಮ್ ಕಟ್ಟಡದ ಮೇಲಿಂದ ಬಿದ್ದು ಗಾಯಗೊಂಡಿದ್ದಾನೆ ಎಂಬ ರೀತಿಯಲ್ಲಿ ಘಟನೆಯನ್ನು ಬಿಂಬಿಸಲು ಆರೋಪಿ ಪ್ರಯತ್ನಿಸಿದ್ದಾನೆ ಎನ್ನಲಾಗಿದೆ.

ಆಸ್ಪತ್ರೆಗೆ ಭೇಟಿ ನೀಡಿದ ಘಟಪ್ರಭಾ ಠಾಣೆ ಪೊಲೀಸರು ಪ್ರಕರಣದ ಬಗ್ಗೆ ಮಾಹಿತಿ ಕಲೆಹಾಕಿ ಅರುಣ್‌ಕುಮಾರ್‌ನನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಚಾಕುವಿನಿಂದ ಇರಿದಿರುವುದನ್ನು ಆತ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಚಿಕಿತ್ಸೆ ಪಡೆಯುತ್ತಿದ್ದ ಸೀತಾರಾಮ್ ಬಳಿಕ ಮೃತಪಟ್ಟಿದ್ದು, ಘಟನೆಯಿಂದ ಸ್ಥಳೀಯವಾಗಿ ಆತಂಕ ಮೂಡಿದೆ. ಈ ಕುರಿತು ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ತನಿಖೆ ಮೂಲಕ ಪತ್ತೆಹಚ್ಚುತ್ತಿದ್ದಾರೆ.

ಮಂಡ್ಯ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ: ಜೈಲು ಅಧೀಕ್ಷಕಿ ಶಾಂತಮ್ಮ ವರ್ಗಾವಣೆ!

0

ಮಂಡ್ಯ: ಮಂಡ್ಯ ಜಿಲ್ಲಾ ಕಾರಾಗೃಹದ ವಿಚಾರಣಾಧೀನ ಕೈದಿಗೆ ರಾಜಾತಿಥ್ಯ ನೀಡಿದ ಆರೋಪದ ಬೆನ್ನಲ್ಲೇ ಜೈಲು ಅಧೀಕ್ಷಕಿ ಶಾಂತಮ್ಮ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಮಂಡ್ಯ ಜಿಲ್ಲಾ ಕಾರಾಗೃಹದ ಅಧೀಕ್ಷಕಿಯಾಗಿದ್ದ ಶಾಂತಮ್ಮ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಿ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಭೂ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿದ್ದ ADLR ಅಧಿಕಾರಿ ಮಹಮದ್ ಹುಸೇನ್ ಗೆ ಅನಾರೋಗ್ಯದ ನೆಪದಲ್ಲಿ ವಿಶೇಷ ಸೌಲಭ್ಯ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಬೆನ್ನು ನೋವಿನ ಕಾರಣ ನೀಡಲಾಗಿದ್ದು, ಹುಸೇನ್ ಅವರನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ, ಹುಸೇನ್ ಅವರಿಗೆ ಯಾವುದೇ ಗಂಭೀರ ಅನಾರೋಗ್ಯವಿಲ್ಲದಿದ್ದರೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಅಷ್ಟೇ ಅಲ್ಲದೆ, ಆಸ್ಪತ್ರೆಯಲ್ಲಿ ಅವರು ತಮ್ಮ ಗೆಳತಿಯೊಂದಿಗೆ ಇದ್ದದ್ದು ಕೂಡ ವಿವಾದಕ್ಕೆ ಕಾರಣವಾಗಿತ್ತು.

ಮಂಡ್ಯ ಜಿಲ್ಲಾ ಸತ್ರ ನ್ಯಾಯಾಧೀಶರು ಜೈಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿತ್ತು. ನ್ಯಾಯಾಲಯಕ್ಕೆ ಮಾಹಿತಿ ನೀಡದೇ ವಿಚಾರಣಾಧೀನ ಕೈದಿಯನ್ನು ಆಸ್ಪತ್ರೆಗೆ ದಾಖಲಿಸಿರುವ ಬಗ್ಗೆ ನ್ಯಾಯಮೂರ್ತಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ವೇಳೆ ನ್ಯಾಯಮೂರ್ತಿ ಸಿ. ಚಂದ್ರಶೇಖರ್  ಜೈಲು ಅಧೀಕ್ಷಕಿ ಶಾಂತಮ್ಮರಿಗೆ ತರಾಟೆಗೆ ತೆಗೆದುಕೊಂಡಿದ್ದರು.

ಇದರ ಬೆನ್ನಲ್ಲೇ ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳಿಗೆ ಸೆಲ್‌ ಒದಗಿಸಲು ‘ರೇಟ್‌ ಫಿಕ್ಸ್‌’ ಮಾಡಲಾಗಿದೆ ಎಂಬ ಆರೋಪವೂ ಕೇಳಿಬಂದಿತ್ತು. ಜೈಲಿನ ಸೆಲ್‌ಗಳಿಗೆ ದರ ನಿಗದಿ ಮಾಡಿರುವ ಕುರಿತು ಮಾಧ್ಯಮಗಳಲ್ಲಿ ವರದಿಗಳು ಪ್ರಸಾರವಾಗಿದ್ದವು.

ಮಾಧ್ಯಮಗಳಲ್ಲಿ ವರದಿಗಳು ಪ್ರಸಾರವಾದ ಬಳಿಕ ಇದೀಗ ಜೈಲು ಅಧೀಕ್ಷಕಿ ಶಾಂತಮ್ಮ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಮಾಧ್ಯಮ ವರದಿಗಳನ್ನು ಆಧರಿಸಿ ಶಾಂತಮ್ಮರನ್ನು ಮಂಡ್ಯದಿಂದ ಎತ್ತಂಗಡಿ ಮಾಡಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಇಲಾಖೆಯಲ್ಲಿನ ಕೈದಿಗಳ ನಿರ್ವಹಣೆ ಹಾಗೂ ಅಧಿಕಾರಿಗಳ ಕರ್ತವ್ಯ ನಿರ್ವಹಣೆ ಕುರಿತು ಹಲವು ಪ್ರಶ್ನೆಗಳು ಎದ್ದಿದ್ದು, ಮುಂದಿನ ದಿನಗಳಲ್ಲಿ ಇಲಾಖೆಯಿಂದ ಮತ್ತಷ್ಟು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ನಿಮ್ಮ ರಾಜ್ಯದಲ್ಲಿ ಏನು ಬೇಕಾದ್ರೂ ನೀವೇ ನೋಡಿಕೊಳ್ಳಿ: ಕೇರಳ ಪಕ್ಷಗಳಿಗೆ ಸೋಮಣ್ಣ ತಿರುಗೇಟು

0

ತುಮಕೂರು: ಮಂಗಳೂರು ರೈಲ್ವೆ ಘಟಕವನ್ನು ಮೈಸೂರು ವಲಯಕ್ಕೆ ಸೇರ್ಪಡೆಗೊಳಿಸಿರುವ ವಿಚಾರ ಕೇರಳದಲ್ಲಿ ರಾಜಕೀಯ ಚರ್ಚೆ ಹಾಗೂ ಪ್ರತಿಭಟನೆಗೆ ಕಾರಣವಾಗಿರುವ ಬೆನ್ನಲ್ಲೇ, ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಕೇರಳದ ರಾಜಕೀಯ ಪಕ್ಷಗಳಿಗೆ ತೀಕ್ಷ್ಣ ತಿರುಗೇಟು ನೀಡಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಯಾವುದೇ ತಪ್ಪು ಮಾಡಿಲ್ಲ. ಕೇರಳಕ್ಕೆ ಸಂಬಂಧಿಸಿದಂತೆ ಯಾವುದೇ ಅಪಚಾರ ಎಸಗಿಲ್ಲ. ನಿಮ್ಮ ರಾಜ್ಯದಲ್ಲಿ ಏನು ಬೇಕಾದರೂ ನೀವು ನೋಡಿಕೊಳ್ಳಿ’ ಎಂದು ಹೇಳಿದ್ದಾರೆ. ದಕ್ಷಿಣದ ರಾಜ್ಯಗಳೆಲ್ಲ ಒಗ್ಗೂಡಬೇಕು ಎಂಬ ಅಭಿಪ್ರಾಯ ಕರ್ನಾಟಕ ಸರ್ಕಾರದ ಕಡೆಯಿಂದಲೂ ವ್ಯಕ್ತವಾಗಿರುವ ಸಂದರ್ಭದಲ್ಲೇ ಸೋಮಣ್ಣ ಈ ಹೇಳಿಕೆ ನೀಡಿರುವುದು ಗಮನಾರ್ಹವಾಗಿದೆ.

ಮಂಗಳೂರು ರೈಲ್ವೆ ಘಟಕವನ್ನು ಮೈಸೂರು ವಿಭಾಗಕ್ಕೆ ಸೇರಿಸುವ ನಿರ್ಧಾರದ ಹಿಂದೆ ಯಾವುದೇ ರಾಜಕೀಯ ಅಥವಾ ವೈಯಕ್ತಿಕ ಹಿತಾಸಕ್ತಿ ಇಲ್ಲ ಎಂದು ಸೋಮಣ್ಣ ಸ್ಪಷ್ಟಪಡಿಸಿದರು. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ವಿಚಾರಕ್ಕೆ ತಾಂತ್ರಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ಪರಿಹಾರ ಕಂಡುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಮಂಗಳೂರು ಭಾಗವನ್ನು ಪ್ರತ್ಯೇಕ ರೈಲ್ವೆ ವಿಭಾಗವನ್ನಾಗಿ ಮಾಡಬೇಕು ಎಂಬ ಬೇಡಿಕೆ ಸುಮಾರು 25 ವರ್ಷಗಳಿಂದ ಇತ್ತು ಎಂದು ಸೋಮಣ್ಣ ಹೇಳಿದರು. ಈ ಹಿಂದೆ ಹಲವು ರೈಲ್ವೆ ಸಚಿವರು ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಿದ್ದರು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಕೂಡ ಇದಕ್ಕಾಗಿ ಪ್ರಯತ್ನಿಸಿದ್ದರು ಎಂದೂ, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತಮ್ಮನ್ನು ಭೇಟಿಯಾಗಿ ಈ ವಿಚಾರಕ್ಕೆ ಒಂದು ರೂಪ ನೀಡುವಂತೆ ಮನವಿ ಮಾಡಿದ್ದರು ಎಂದೂ ಸೋಮಣ್ಣ ತಿಳಿಸಿದರು.

‘ನಾನು ಸಚಿವನಾಗಿರುವುದರಿಂದ ಈ ವಿಚಾರದ ಸಂಪೂರ್ಣ ಮಾಹಿತಿ ನನಗಿತ್ತು. ಮೂರು ಜನರಲ್ ಮ್ಯಾನೇಜರ್‌ಗಳನ್ನು ಸ್ಥಳಕ್ಕೆ ಕರೆದೊಯ್ದು ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಸಿದ ಏಕೈಕ ಸಚಿವ ನಾನಾಗಿದ್ದೇನೆ. ಅಧಿಕಾರಿಗಳು ತಾಂತ್ರಿಕವಾಗಿ ಪರಿಶೀಲಿಸಿಯೇ ಕೆಲಸ ಮಾಡಿದ್ದಾರೆ. ಇದರಲ್ಲಿ ಯಾವುದೇ ಪಕ್ಷಪಾತ ಇಲ್ಲ’ ಎಂದು ಅವರು ಹೇಳಿದರು.

ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು; ರೈಲಿನಲ್ಲಿ ಪಶ್ಚಿಮ ಬಂಗಾಳಕ್ಕೆ ರವಾನೆ

0

ಬೆಂಗಳೂರು: ರಾಜಧಾನಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಗಡಿಪಾರು ಮಾಡುವ ಪ್ರಕ್ರಿಯೆ ಆರಂಭಿಸಿದ್ದಾರೆ.

ಬೆಂಗಳೂರಿನ ವಿವಿಧ 10 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬಂಧಿಸಲಾಗಿದ್ದ ಈ ಆರೋಪಿಗಳನ್ನು ಬಿಗಿ ಪೊಲೀಸ್ ಭದ್ರತೆಯೊಂದಿಗೆ ಪಶ್ಚಿಮ ಬಂಗಾಳದ ಗಡಿ ಭಾಗಕ್ಕೆ ಕರೆದೊಯ್ಯಲಾಗುತ್ತಿದೆ.

ಬೆಳಗಿನ ಜಾವವೇ ಪೊಲೀಸರು 31 ಮಂದಿಯನ್ನು ಬೆಂಗಳೂರಿನ ಎಸ್‌ಎಂವಿಟಿ ರೈಲ್ವೆ ಟರ್ಮಿನಲ್‌ನಿಂದ ರೈಲಿನ ಮೂಲಕ ಕರೆದೊಯ್ದಿದ್ದಾರೆ. ಸುಮಾರು 20 ಪೊಲೀಸ್ ಸಿಬ್ಬಂದಿಯ ಬಿಗಿ ಭದ್ರತೆಯಲ್ಲಿ ಈ ಗಡಿಪಾರು ಕಾರ್ಯಾಚರಣೆ ನಡೆಯುತ್ತಿದೆ.

ನಾಳೆ ಸಂಜೆ ಸುಮಾರು 5 ಗಂಟೆ ವೇಳೆಗೆ ಪೊಲೀಸ್ ತಂಡ ಬಾಂಗ್ಲಾದೇಶ ಗಡಿ ಸಮೀಪದ ಪಶ್ಚಿಮ ಬಂಗಾಳದ ಮಾಲ್ದಾ ತಲುಪುವ ನಿರೀಕ್ಷೆಯಿದೆ. ಅಲ್ಲಿಂದ ನಿಯಮಾನುಸಾರ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗುವುದು.

ಕೊಹ್ಲಿ, ಧೋನಿ, ಬುಮ್ರಾ, ಕಪಿಲ್ ದೇವ್ʼರನ್ನು ಹಿಂದಿಕ್ಕಿದ ಸಚಿನ್: ಸಾರ್ವಕಾಲಿಕ ಶ್ರೇಷ್ಠ ಆಟಗಾರನನ್ನು ಆಯ್ಕೆ ಮಾಡಿದ ಅಶ್ವಿನ್

0

ಚೆನ್ನೈ: ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸಾರ್ವಕಾಲಿಕ ಶ್ರೇಷ್ಠ ಆಟಗಾರ ಯಾರು ಎಂಬ ಪ್ರಶ್ನೆಗೆ ಟೀಂ ಇಂಡಿಯಾದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಮ್ಮದೇ ಆದ ಉತ್ತರ ನೀಡಿದ್ದಾರೆ. ದಿಗ್ಗಜ ಆಟಗಾರರ ನಡುವೆ ನಡೆದ ಕುತೂಹಲಕಾರಿ ಹೋಲಿಕೆಯಲ್ಲಿ ಕೊನೆಗೂ ಬ್ಯಾಟಿಂಗ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರನ್ನು ಅಶ್ವಿನ್ ಸಾರ್ವಕಾಲಿಕ ಶ್ರೇಷ್ಠ ಆಟಗಾರ ಎಂದು ಆಯ್ಕೆ ಮಾಡಿದ್ದಾರೆ.

ಇಎಸ್‌ಪಿಎನ್ ಕ್ರಿಕ್‌ಇನ್ಫೋ ಟಾಕ್ ಶೋನಲ್ಲಿ ಮಾತನಾಡಿದ ಅಶ್ವಿನ್, ಭಾರತದ ಹಲವು ತಲೆಮಾರುಗಳ ಸ್ಟಾರ್ ಕ್ರಿಕೆಟಿಗರನ್ನು ಪರಸ್ಪರ ಹೋಲಿಕೆ ಮಾಡಿ ತಮ್ಮ ಆಯ್ಕೆಯನ್ನು ಅಂತಿಮಗೊಳಿಸಿದರು. ಈ ವೇಳೆ ವಿರಾಟ್ ಕೊಹ್ಲಿ, ಎಂ.ಎಸ್. ಧೋನಿ, ಸುನಿಲ್ ಗವಾಸ್ಕರ್, ಜಸ್ಪ್ರೀತ್ ಬುಮ್ರಾ, ವಿರೇಂದ್ರ ಸೆಹ್ವಾಗ್, ರವೀಂದ್ರ ಜಡೇಜಾ ಸೇರಿದಂತೆ ಹಲವು ದಿಗ್ಗಜರ ಹೆಸರುಗಳು ಚರ್ಚೆಗೆ ಬಂದವು.

ಕೊಹ್ಲಿ ವಿರುದ್ಧ ಬುಮ್ರಾ:

ವಿರಾಟ್ ಕೊಹ್ಲಿ ಹಾಗೂ ಜಸ್ಪ್ರೀತ್ ಬುಮ್ರಾ ನಡುವೆ ಒಬ್ಬರನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಅಶ್ವಿನ್, ಕೊಹ್ಲಿ ಬದಲಿಗೆ ಬುಮ್ರಾ ಅವರನ್ನು ಆಯ್ಕೆ ಮಾಡಿದರು. ತಮ್ಮ ಆಯ್ಕೆಯ ಬಗ್ಗೆ ತಮಾಷೆಯಾಗಿ ಪ್ರತಿಕ್ರಿಯಿಸಿದ ಅಶ್ವಿನ್, ತಾವೊಬ್ಬ ಬೌಲರ್ ಆಗಿರುವ ಕಾರಣ ಬುಮ್ರಾ ಅವರನ್ನು ಆಯ್ಕೆ ಮಾಡಿರಬಹುದು ಎಂದು ಹೇಳಿದರು.

ಧೋನಿಗೆ ಮಣೆ ಹಾಕಿದ ಅಶ್ವಿನ್:

ರವೀಂದ್ರ ಜಡೇಜಾ ಮತ್ತು ಮಾಜಿ ನಾಯಕ ಎಂ.ಎಸ್. ಧೋನಿ ನಡುವಿನ ಹೋಲಿಕೆಯಲ್ಲಿ ಅಶ್ವಿನ್, ಧೋನಿ ಅವರನ್ನು ಶ್ರೇಷ್ಠರೆಂದು ಆಯ್ಕೆ ಮಾಡಿದರು. ಆದರೆ ಧೋನಿ ಹಾಗೂ ವಿರೇಂದ್ರ ಸೆಹ್ವಾಗ್ ನಡುವೆ ಆಯ್ಕೆ ಮಾಡುವ ಸಂದರ್ಭ ಬಂದಾಗ ಅಚ್ಚರಿಯ ನಿರ್ಧಾರ ಕೈಗೊಂಡ ಅಶ್ವಿನ್, ಧೋನಿ ಬದಲಿಗೆ ಸೆಹ್ವಾಗ್ ಅವರನ್ನು ಆಯ್ಕೆ ಮಾಡಿದರು.

ಇದಕ್ಕೂ ಮುನ್ನ ಸುನಿಲ್ ಗವಾಸ್ಕರ್ ಮತ್ತು ವಿರೇಂದ್ರ ಸೆಹ್ವಾಗ್ ನಡುವೆ ನಡೆದ ಹೋಲಿಕೆಯಲ್ಲೂ ಅಶ್ವಿನ್, ಗವಾಸ್ಕರ್ ಅವರನ್ನು ಬದಿಗಿಟ್ಟು ಸೆಹ್ವಾಗ್ ಅವರಿಗೆ ಮಣೆ ಹಾಕಿದ್ದರು.

ಗಂಗೂಲಿ ವಿರುದ್ಧ ಅಶ್ವಿನ್:

ಸೌರವ್ ಗಂಗೂಲಿ ಮತ್ತು ತಮ್ಮ ನಡುವಿನ ಹೋಲಿಕೆಯಲ್ಲಿ ಅಶ್ವಿನ್, ಯಾವುದೇ ಹಿಂಜರಿಕೆಯಿಲ್ಲದೆ ಮಾಜಿ ನಾಯಕ ಸೌರವ್ ಗಂಗೂಲಿ ಅವರನ್ನು ಆಯ್ಕೆ ಮಾಡಿದರು.

ಕೊನೆಗೂ ಸಚಿನ್‌ಗೆ ಅಗ್ರಸ್ಥಾನ:

ಅಂತಿಮ ನಾಲ್ವರ ಪಟ್ಟಿಯಿಂದ ಇಬ್ಬರನ್ನು ಆಯ್ಕೆ ಮಾಡುವ ಹಂತದಲ್ಲಿ ಅಶ್ವಿನ್, ವಿರೇಂದ್ರ ಸೆಹ್ವಾಗ್ ಅವರನ್ನು ಕೈಬಿಟ್ಟು ಸಚಿನ್ ತೆಂಡೂಲ್ಕರ್ ಅವರನ್ನು ಉಳಿಸಿಕೊಂಡರು. ಮತ್ತೊಂದೆಡೆ ಜಸ್ಪ್ರೀತ್ ಬುಮ್ರಾ ಬದಲಿಗೆ 1983ರ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಅವರನ್ನು ಆಯ್ಕೆ ಮಾಡಿದರು.

ಕೊನೆಯ ಹಂತದಲ್ಲಿ ಕಪಿಲ್ ದೇವ್ ಮತ್ತು ಸಚಿನ್ ತೆಂಡೂಲ್ಕರ್ ನಡುವೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅಶ್ವಿನ್, ತಮ್ಮ ವೈಯಕ್ತಿಕ ಇಷ್ಟವನ್ನು ಪರಿಗಣಿಸಿ ಸಚಿನ್ ತೆಂಡೂಲ್ಕರ್ ಅವರನ್ನೇ ಭಾರತದ ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟಿಗ ಎಂದು ಘೋಷಿಸಿದರು.

ಸಚಿನ್ ತೆಂಡೂಲ್ಕರ್ ಅವರ ಬ್ಯಾಟಿಂಗ್ ದಾಖಲೆ, ಭಾರತೀಯ ಕ್ರಿಕೆಟ್‌ಗೆ ನೀಡಿದ ಕೊಡುಗೆ ಹಾಗೂ ಹಲವು ತಲೆಮಾರುಗಳ ಅಭಿಮಾನಿಗಳ ಮೇಲೆ ಬೀರಿದ ಪ್ರಭಾವವನ್ನು ಪರಿಗಣಿಸಿದರೆ ಅಶ್ವಿನ್ ಅವರ ಆಯ್ಕೆ ವಿಶೇಷ ಗಮನ ಸೆಳೆದಿದೆ. ಇದೇ ವೇಳೆ ಇತ್ತೀಚೆಗೆ ದಕ್ಷಿಣ ಆಫ್ರಿಕಾದ ಮಾಜಿ ದಿಗ್ಗಜ ಎಬಿ ಡಿವಿಲಿಯರ್ಸ್ ಅವರು ಸಚಿನ್ ತೆಂಡೂಲ್ಕರ್‌ಗಿಂತ ವಿರಾಟ್ ಕೊಹ್ಲಿಯೇ ಶ್ರೇಷ್ಠ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ, ಈ ವಿಚಾರ ಮತ್ತೊಮ್ಮೆ ಕ್ರಿಕೆಟ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮ!

0

ರಾಮನಗರ: ಕನಕಪುರ ತಾಲೂಕಿನ ಬಂಡೆಬಸಪ್ಪನದೊಡ್ಡಿ ಗ್ರಾಮದಲ್ಲಿ ತಡರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ಗ್ರಾಮದ ನಿವಾಸಿ ಪರಮಶಿವಯ್ಯ ಅವರಿಗೆ ಸೇರಿದ ಮನೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ತಡರಾತ್ರಿ ದಿಢೀರನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಮನೆಯಾದ್ಯಂತ ಬೆಂಕಿ ವ್ಯಾಪಿಸಿದೆ.

ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು, ದಿನಬಳಕೆಯ ಸಾಮಗ್ರಿಗಳು ಸೇರಿದಂತೆ ಹಲವು ವಸ್ತುಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಘಟನೆಯಿಂದ ಕುಟುಂಬಕ್ಕೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಅದೃಷ್ಟವಶಾತ್ ಮನೆಯಲ್ಲಿದ್ದ ಎಲ್ಲರೂ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಬೀದಿ ನಾಯಿಗಳ ಅಟ್ಟಹಾಸಕ್ಕೆ 5 ಕುರಿಗಳು ಬಲಿ; 3 ಗಂಭೀರ, ರೈತ ಕಂಗಾಲು!

0

ಮಂಡ್ಯ: ಬೀದಿ ನಾಯಿಗಳ ಹಾವಳಿಗೆ ಐದು ಕುರಿಗಳು ಬಲಿಯಾಗಿದ್ದು, ಮೂರು ಕುರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕುದುರಗುಂಡಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಕುದುರಗುಂಡಿ ಗ್ರಾಮದ ಪಾಪಣ್ಣ ಎಂಬುವವರಿಗೆ ಸೇರಿದ ಕೊಟ್ಟಿಗೆಗೆ ರಾತ್ರಿ ವೇಳೆ ಬೀದಿ ನಾಯಿಗಳು ನುಗ್ಗಿವೆ. ಬಳಿಕ ಕೊಟ್ಟಿಗೆಯಲ್ಲಿದ್ದ ಕುರಿಗಳ ಮೇಲೆ ದಾಳಿ ನಡೆಸಿವೆ. ಏಕಾಏಕಿ ನಡೆದ ದಾಳಿಯಿಂದ ಕುರಿಗಳು ತಪ್ಪಿಸಿಕೊಳ್ಳಲು ಸಾಧ್ಯವಾಗದೆ, ಐದು ಕುರಿಗಳು ಮೃತಪಟ್ಟಿವೆ. ಇನ್ನೂ ಮೂರು ಕುರಿಗಳು ಗಂಭೀರವಾಗಿ ಗಾಯಗೊಂಡಿವೆ.

ಪಾಪಣ್ಣ ಅವರು ಒಟ್ಟು ಎಂಟು ಕುರಿಗಳನ್ನು ಸಾಕಿಕೊಂಡು ಜೀವನ ನಡೆಸುತ್ತಿದ್ದರು. ಕುರಿಗಳ ಸಾಕಾಣಿಕೆಯನ್ನೇ ಅವಲಂಬಿಸಿದ್ದ ರೈತನಿಗೆ ಒಂದೇ ರಾತ್ರಿ ಐದು ಕುರಿಗಳನ್ನು ಕಳೆದುಕೊಂಡಿರುವುದು ದೊಡ್ಡ ಆರ್ಥಿಕ ನಷ್ಟವನ್ನುಂಟು ಮಾಡಿದೆ. ಘಟನೆಯಿಂದ ಪಾಪಣ್ಣ ಹಾಗೂ ಅವರ ಕುಟುಂಬ ಕಂಗಾಲಾಗಿದೆ.

ಬೀದಿ ನಾಯಿಗಳ ಹಾವಳಿ ಗ್ರಾಮದಲ್ಲಿ ಹೆಚ್ಚಾಗಿದ್ದು, ಸಾಕುಪ್ರಾಣಿಗಳು ಹಾಗೂ ಜಾನುವಾರುಗಳಿಗೆ ಆತಂಕ ಎದುರಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ರಾತ್ರಿ ವೇಳೆ ಕೊಟ್ಟಿಗೆಗಳಿಗೆ ನುಗ್ಗುವ ನಾಯಿಗಳಿಂದ ಮತ್ತಷ್ಟು ಅನಾಹುತ ಸಂಭವಿಸುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪರಿಹಾರಕ್ಕೆ ಆಗ್ರಹ:

ಕುರಿಗಳನ್ನು ಕಳೆದುಕೊಂಡಿರುವ ರೈತ ಪಾಪಣ್ಣ ಅವರಿಗೆ ಸಂಬಂಧಪಟ್ಟ ಇಲಾಖೆ ವತಿಯಿಂದ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಗಾಯಗೊಂಡಿರುವ ಮೂರು ಕುರಿಗಳಿಗೆ ಅಗತ್ಯ ಚಿಕಿತ್ಸೆ ಕೊಡಿಸುವಂತೆ ಮನವಿ ಮಾಡಿದ್ದಾರೆ.

ಇದೇ ವೇಳೆ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿರುವ ನಾಯಿಗಳನ್ನು ನಿಯಂತ್ರಿಸಿ, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಬಾಗಲಕೋಟೆಯಲ್ಲಿ ಭೀಕರ ಅಗ್ನಿ ಅವಘಡ; ಪ್ರವಾಹ ಸಂತ್ರಸ್ತರ 20ಕ್ಕೂ ಹೆಚ್ಚು ಶೆಡ್‌ಗಳು ಸುಟ್ಟು ಕರಕಲು

0

ಬಾಗಲಕೋಟೆ: ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ನಾರಾಯಣಪುರ ಜಲಾಶಯದ ಪ್ರವಾಹ ಸಂತ್ರಸ್ತರ ತಾತ್ಕಾಲಿಕ ಶೆಡ್‌ಗಳು ಸುಟ್ಟು ಕರಕಲಾದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದಲ್ಲಿ ನಡೆದಿದೆ.

ನಿನ್ನೆ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ 20ಕ್ಕೂ ಹೆಚ್ಚು ಶೆಡ್‌ಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಸಂತ್ರಸ್ತರು ಪುರಾಣ ಕೇಳಲು ತೆರಳಿದ್ದ ವೇಳೆ ಶೆಡ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಂತ್ರಸ್ತರು ಶೆಡ್‌ಗಳಲ್ಲೇ ಇದ್ದಿದ್ದರೆ ಭಾರಿ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಕಿಯ ತೀವ್ರತೆಗೆ ಶೆಡ್‌ಗಳಲ್ಲಿದ್ದ ದವಸ-ಧಾನ್ಯ, ಗೃಹೋಪಯೋಗಿ ವಸ್ತುಗಳು ಸೇರಿದಂತೆ ಹಲವು ಸಾಮಗ್ರಿಗಳು ಸುಟ್ಟುಹೋಗಿವೆ. ಶೆಡ್‌ಗಳ ತಗಡುಗಳು ರಾಶಿ ರಾಶಿಯಾಗಿ ನೆಲಕ್ಕೆ ಬಿದ್ದಿದ್ದು, ಸಂತ್ರಸ್ತರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹುನಗುಂದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

17 ವರ್ಷಗಳಿಂದ ತಾತ್ಕಾಲಿಕ ಶೆಡ್‌ನಲ್ಲೇ ಜೀವನ:

2007-09ರ ಅವಧಿಯಲ್ಲಿ ನಾರಾಯಣಪುರ ಜಲಾಶಯದ ಹಿನ್ನೀರಿನ ಪ್ರವಾಹದಿಂದ ಇದ್ದಲಗಿ ಗ್ರಾಮದ ಹಲವು ಕುಟುಂಬಗಳು ಮನೆ ಕಳೆದುಕೊಂಡಿದ್ದವು. ಬಳಿಕ ಸಂತ್ರಸ್ತರಿಗಾಗಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಶೆಡ್‌ಗಳಲ್ಲೇ ಹಲವು ಕುಟುಂಬಗಳು ಇಂದಿಗೂ ವಾಸಿಸುತ್ತಿವೆ.

ಸಂತ್ರಸ್ತರಿಗೆ ಶಾಶ್ವತವಾಗಿ ವಾಸಿಸಲು ಜಾಗ ಗುರುತಿಸಲಾಗಿದ್ದರೂ, ನೀರು, ವಿದ್ಯುತ್‌, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಇನ್ನೂ ಕಲ್ಪಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.

ಶಾಶ್ವತ ಸೂರು ಕಲ್ಪಿಸುವಂತೆ ಆಗ್ರಹಿಸಿ ಸಂತ್ರಸ್ತರು ಕಳೆದ 117 ದಿನಗಳಿಂದ ನಿರಂತರ ಧರಣಿ ನಡೆಸುತ್ತಿದ್ದಾರೆ. ಇದರ ನಡುವೆಯೇ ಬೆಂಕಿ ಅವಘಡ ಸಂಭವಿಸಿದ್ದು, ಒಂದೊಂದು ಶೆಡ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಷ್ಟವಾಗಿವೆ.

ತಾತ್ಕಾಲಿಕ ಶೆಡ್‌ಗಳಲ್ಲೇ ಹಲವು ವರ್ಷಗಳಿಂದ ಜೀವನ ನಡೆಸುತ್ತಿರುವ ಸಂತ್ರಸ್ತರಿಗೆ ಇದೀಗ ಅಗ್ನಿ ಅವಘಡ ಮತ್ತೊಂದು ಸಂಕಷ್ಟ ತಂದೊಡ್ಡಿದೆ.