Home Blog

ಎಸಿ ಹಾಕಿಕೊಂಡು ಮಲಗಿದ್ದ ಕ್ಯಾಬ್ ಚಾಲಕ ಸಾವು! ಹೃದಯಾಘಾತ ಶಂಕೆ?

ಬೆಂಗಳೂರು: ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಗೆದರಹಳ್ಳಿ ಬಳಿ ಕ್ಯಾಬ್ ಚಾಲಕನೊಬ್ಬ ಕಾರಿನೊಳಗೆ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.

ಚಾಲಕ ಎಸಿ ಹಾಕಿಕೊಂಡು ಕಾರಿನ ಗ್ಲಾಸ್ ಏರಿಸಿ ನಿದ್ರಿಸುತ್ತಿದ್ದಾಗಲೇ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಬೆಳಗ್ಗೆ ಸುಮಾರು 10 ಗಂಟೆಗೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕ್ಯಾಬ್ ದೀರ್ಘ ಸಮಯದಿಂದ ಚಲನೆಯಿಲ್ಲದೆ ನಿಂತಿದ್ದನ್ನು ಗಮನಿಸಿದ ಸ್ಥಳೀಯರು ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಕಾರಿನ ಬಳಿ ಹೋದಾಗ ಚಾಲಕ ಒಳಗೆ ಮಲಗಿರುವ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.

ಡೋರ್ ತೆರೆಯಲು ಪ್ರಯತ್ನಿಸಿದರೂ ಸಾಧ್ಯವಾಗದ ಹಿನ್ನೆಲೆಯಲ್ಲಿ ಕಲ್ಲಿನಿಂದ ಗಾಜು ಒಡೆದು ಕಾರನ್ನು ತೆರೆಯಲಾಗಿದೆ. ಈ ವೇಳೆ ಚಾಲಕ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದು, ತಕ್ಷಣವೇ ಸ್ಥಳೀಯರು ಮತ್ತು ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಲ್ಲಿ ಅವರು ಮೃತಪಟ್ಟಿರುವುದು ದೃಢಪಟ್ಟಿದೆ.

ಹೃದಯಾಘಾತದಿಂದ ಸಾವು ಸಂಭವಿಸಿರುವ ಸಾಧ್ಯತೆ ಇದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಮೃತರು ಖಾಸಗಿ ಕಂಪನಿಯ ಕ್ಯಾಬ್ ಚಾಲಕರಾಗಿದ್ದು, ಅವರ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಘಟನೆ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು (UDR) ಪ್ರಕರಣ ದಾಖಲಾಗಿದೆ.

ಆಧಾರ್ ಬಳಕೆದಾರರಿಗೆ ಸಿಹಿ ಸುದ್ದಿ: ಉಚಿತ ಡಾಕ್ಯುಮೆಂಟ್ ಅಪ್‌ಡೇಟ್ ಗಡುವು ಮತ್ತೊಮ್ಮೆ ವಿಸ್ತರಣೆ!

ನವದೆಹಲಿ: ಕೋಟಿಗಟ್ಟಲೆ ಆಧಾರ್ ಕಾರ್ಡ್ ಬಳಕೆದಾರರಿಗೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಸಿಹಿ ಸುದ್ದಿ ನೀಡಿದೆ.

ಮೈಆಧಾರ್ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಉಚಿತವಾಗಿ ಆಧಾರ್ ದಾಖಲೆಗಳನ್ನು ನವೀಕರಿಸಲು ನೀಡಲಾಗಿದ್ದ ಗಡುವನ್ನು ಮತ್ತೊಮ್ಮೆ ಒಂದು ವರ್ಷದ ಅವಧಿಗೆ ವಿಸ್ತರಿಸಲಾಗಿದೆ.

ಯುಐಡಿಎಐ ಬಿಡುಗಡೆ ಮಾಡಿದ ಅಧಿಕೃತ ಪ್ರಕಟಣೆಯ ಪ್ರಕಾರ, ಮೈಆಧಾರ್ ಪೋರ್ಟಲ್ ಮೂಲಕ ಲಕ್ಷಾಂತರ ನಾಗರಿಕರು ತಮ್ಮ ವಿವರಗಳನ್ನು ಯಶಸ್ವಿಯಾಗಿ ಅಪ್‌ಡೇಟ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವುದರಿಂದ ಇನ್ನಷ್ಟು ಜನರಿಗೆ ಅವಕಾಶ ನೀಡಲು ಗಡುವು ವಿಸ್ತರಿಸಲಾಗಿದೆ ಎಂದು ತಿಳಿಸಲಾಗಿದೆ.

ವಿಶೇಷವಾಗಿ 10 ವರ್ಷಗಳ ಹಿಂದೆ ಆಧಾರ್ ಪಡೆದು ಇದುವರೆಗೆ ದಾಖಲೆಗಳನ್ನು ನವೀಕರಿಸದವರು ತಮ್ಮ ಗುರುತಿನ ಪುರಾವೆ ಹಾಗೂ ವಿಳಾಸದ ಪುರಾವೆ ಅನ್ನು ಅಪ್‌ಡೇಟ್ ಮಾಡುವುದು ಅಗತ್ಯವಾಗಿದೆ ಎಂದು ಯುಐಡಿಎಐ ಸೂಚಿಸಿದೆ.

ಆನ್‌ಲೈನ್ ಮೂಲಕ myAadhaar ಪೋರ್ಟಲ್‌ನಲ್ಲಿ (myaadhaar.uidai.gov.in/) ಈ ಸೇವೆಯನ್ನು ಉಚಿತವಾಗಿ ಬಳಸಬಹುದು. ಆದರೆ ಆಧಾರ್ ಸೇವಾ ಕೇಂದ್ರಗಳು ಅಥವಾ ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ದಾಖಲೆಗಳನ್ನು ನವೀಕರಿಸಿದರೆ ₹75 ಸೇವಾ ಶುಲ್ಕ ಪಾವತಿಸಬೇಕಾಗುತ್ತದೆ.

ಆಧಾರ್ ಡೇಟಾಬೇಸ್‌ನ ನಿಖರತೆ ಹಾಗೂ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಸಾರ್ವಜನಿಕರು ತಮ್ಮ ವಿವರಗಳನ್ನು ನವೀಕರಿಸಿಕೊಳ್ಳಬೇಕು ಎಂದು ಯುಐಡಿಎಐ ಮನವಿ ಮಾಡಿದೆ.

ರಾಜ್ಯದಲ್ಲಿ ನಾಳೆ ಭಾರೀ ಮಳೆ ಎಚ್ಚರಿಕೆ: ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಮೇ 19ರಂದು ಬೀದರ್ ಮತ್ತು ಕಲಬುರಗಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೊಪ್ಪಳ, ಧಾರವಾಡ, ಗದಗ, ವಿಜಯನಗರ, ಹಾವೇರಿ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳು ಆರೆಂಜ್ ಅಲರ್ಟ್ ವ್ಯಾಪ್ತಿಯಲ್ಲಿ ಸೇರಿವೆ.

ಉಳಿದಂತೆ ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಹಾಗೂ ಇತರ ಜಿಲ್ಲೆಗಳಲ್ಲಿ ಕೂಡ ಮಳೆಯ ಮುನ್ಸೂಚನೆ ಇದೆ.

ಉತ್ತರ ಒಳನಾಡಿನಲ್ಲಿ ಮೇ 21ರವರೆಗೆ ಮಳೆಯ ಚಟುವಟಿಕೆ ಮುಂದುವರಿಯುವ ನಿರೀಕ್ಷೆ ಇದ್ದು, ನಂತರ ಹವಾಮಾನದಲ್ಲಿ ಸ್ವಲ್ಪ ಸುಧಾರಣೆ ಕಾಣಬಹುದು ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಕೆಲವೆಡೆ ಗುಡುಗು-ಮಿಂಚು ಸಹಿತ ಭಾರೀ ಮಳೆಯ ಸಾಧ್ಯತೆ ಇದೆ.

ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಧ್ಯಾಹ್ನದ ಬಳಿಕ ಮೋಡಗಟ್ಟುವಿಕೆ ಹಾಗೂ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸ್ನೇಹಿತರಿಗೆ ನಷ್ಟ ತಪ್ಪಿಸಲು ಜನರ ಮೇಲೆ ಪ್ರಧಾನಿ ಹೊರೆ: ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್

ಬೆಂಗಳೂರು: ಸಮೃದ್ಧವಾಗಿದ್ದ, ಶಕ್ತಿಯುತವಾಗಿದ್ದ ಇಡೀ ವಿಶ್ವದಲ್ಲೇ ಬಲಿಷ್ಠವಾದ ಆರ್ಥಿಕ ವ್ಯವಸ್ಥೆ ಹಾಳಾಗಿದೆ ಅಂದರೆ ಅದಕ್ಕೆ ಪ್ರಧಾನ ಮಂತ್ರಿಗಳೇ ಕಾರಣ. ಅವರು ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಎಂದು ಸ್ಪಷ್ಟನೆ ನೀಡಬೇಕು ಹಾಗೂ ಈ ದೇಶದ ಜನರ ಕ್ಷಮೆ ಯಾಚನೆ ಮಾಡಬೇಕು” ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ.ಸುರೇಶ್ ಅವರು ಆಗ್ರಹಿಸಿದರು. ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಸೋಮವಾರ ಮಾತನಾಡಿದರು.

ನಿರಂತರ ಯುದ್ಧಗಳು ಮತ್ತು ಜಾಗತಿಕ ಅಸ್ಥಿರತೆಯು ದಶಕಗಳ ಅಭಿವೃದ್ಧಿಯನ್ನು ಹಿಮ್ಮೆಟ್ಟಿಸಬಹುದು ಮತ್ತು ದೊಡ್ಡ ಜನಸಂಖ್ಯೆಯನ್ನು ಮತ್ತೆ ಬಡತನಕ್ಕೆ ತಳ್ಳಬಹುದು ಎನ್ನುವ ಬಗ್ಗೆ ಪ್ರಧಾನಿ ನರೇಂದ್ರ ಅವರು ಸ್ಪಷ್ಟನೆ ನೀಡಬೇಕು. ಪ್ರಧಾನ ಮಂತ್ರಿಗಳು ಯಾವ ಅರ್ಥದಲ್ಲಿಬಡತನದ ಬಗ್ಗೆ ಹೇಳಿದ್ದಾರೆ. ಹಾಗೂ ಈ ಎಲ್ಲಾ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಮಾಹಿತಿ ಕೊಡಬೇಕು ಎಂದು ಒತ್ತಾಯಿಸುತ್ತೇನೆ” ಎಂದರು.

“ದೇಶದ ಚುಕ್ಕಾಣಿಯನ್ನು ಪ್ರಧಾನಿ ಮೋದಿಯವರು ಹಿಡಿದು ಹನ್ನೆರಡು ವರ್ಷವಾಗಿದೆ. ಈ ಹಿಂದಿನ ಆಡಳಿತಕ್ಕೆ ಹೋಲಿಸಿದಾಗ ಇಲ್ಲಿಯವರೆಗೆ ಹೆಚ್ಚುವರಿಯಾಗಿ ಸುಮಾರು 45 ಲಕ್ಷ ಕೋಟಿ ಹಣವನ್ನು ಪೆಟ್ರೋಲ್ ಮತ್ತು ಡೀಸೆಲ್, ಗ್ಯಾಸ್ ಬೆಲೆ ಏರಿಕೆಯಿಂದ ಪಡೆದಿದ್ದಾರೆ” ಎಂದರು.

ಒಂದೆರಡು ಮೂರು ಕಂಪನಿಗಳಿಗೆ ರಕ್ಷಣೆ ಕೊಡಬೇಕು ಎಂದು ಬೆಲೆ ಏರಿಕೆ ಮಾಡಿದ್ದಾರೆ. ಜನರು ಎಚ್ಚೆತ್ತುಕೊಂಡಿಲ್ಲ. ನೀವು ಬಡತನದ ದವಡೆಗೆ ಸಿಲುಕುವಿರಿ ಎನ್ನುವ ಸಂದೇಶ ನೀಡಿರುವುದು ನೋಡಿದರೆ ನಾವೆಲ್ಲರೂ ಕೂಡ ತಲೆ ತಗ್ಗಿಸುವಂತಹ ವಿಚಾರ ಎಂದು ಹೇಳಿದರು.

ರಾಹುಲ್ ಗಾಂಧಿ ವಿದೇಶದಲ್ಲಿ ಮಾತನಾಡಿದಾಗ ದೇಶದ್ರೋಹಿ ಎನ್ನುತ್ತಾರೆ. ಸ್ವತಃ ಪ್ರಧಾನಮಂತ್ರಿಗಳೇ ವಿದೇಶಿ ನೆಲದಲ್ಲಿ ನಿಂತು ಬಡತನ ಎದುರಾಗಿದೆ ಅಂತ ಮಾತನಾಡಿದ್ದಾರೆ ಎಂದಾಗ, ಯಾವ ದೃಷ್ಟಿಕೋನದಲ್ಲಿ ಅವರು ಹೇಳಿದ್ದಾರೆ ಅನ್ನೋದನ್ನ ಸ್ಪಷ್ಟೀಕರಣ ಕೊಡಬೇಕು. ಅವರು ನೆದರ್ಲ್ಯಾಂಡ್ಸ್ ಅವರನ್ನ ಉದ್ದೇಶಿಸಿ ಮಾತಾಡಿದ್ರಾ? ಅಥವಾ ಭಾರತೀಯರಿಗೆ ಅಲ್ಲಿಂದ ಒಂದು ಸಂದೇಶ ಕೊಟ್ಟರೇ? ಅದನ್ನೂ ಹೇಳಬೇಕು ಎಂದು ತಿರುಗೇಟು ನೀಡಿದರು.

ರಾಹುಲ್ ಗಾಂಧಿಯವರು ಏನೇ ಮಾತಾಡಿದ್ರು ಕೂಡ ಆರೋಪಗಳನ್ನ ಮಾಡ್ತಾರೆ. ಭಾರತೀಯರ ಪರಿಸ್ಥಿತಿ ಇಂತಹ ಶೋಚನೀಯ ಸ್ಥಿತಿಗೆ ಹೋಗಿದೆಯೇ ಅನ್ನೋದನ್ನು ಕೂಡ ನಾವು ಚಿಂತನೆ ಮಾಡಬೇಕಾಗಿದೆ. ನನ್ನ ಪ್ರಕಾರ ಶೋಚನೀಯ ಪರಿಸ್ಥಿತಿಗೆ ನಾವ್ಯಾರು ಕೂಡ ಹೋಗಿಲ್ಲ. ಅವರು ಕೊರೋನಾ ಸಂದರ್ಭದಲ್ಲಿ ಪ್ರಧಾನಿ ಕೊಟ್ಟ ಕರೆಗೆ ಈ ರಾಷ್ಟ್ರದ ಜನ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದರು.

ಈಗ ಏಕಾಏಕಿ ಒಂದಷ್ಟು ಕಠಿಣ ಕ್ರಮಗಳನ್ನ, ಒಂದಷ್ಟು ಶಿಸ್ತು ಪಾಲನೆಯನ್ನ ಮಾಡಿ ಎಂದು ಮನವಿ ಮಾಡಿದ್ದಾರೆ. ಅವರು ಯುದ್ಧ ಪ್ರಾರಂಭ ಆದ ದಿನವೇ ಎಚ್ಚರಿಕೆ ವಹಿಸಬೇಕಾಗಿತ್ತು. ಅವತ್ತಿಂದ ಎಚ್ಚರಿಕೆಯನ್ನ ವಹಿಸದೆ ಈಗ ಹೇಳುತ್ತಿರುವುದು ಅನುಮಾನಗಳನ್ನ ಹುಟ್ಟು ಹಾಕಿದೆ. ಅವರ ಸ್ನೇಹಿತರಿಗೆ, ಹಿತೈಷಿ ಕಂಪೆನಿಗಳಿಗೆ ನಷ್ಟವಾಗುತ್ತೆ ಅಂತ ಹೇಳಿ ಭಾರತೀಯರ ಮೇಲೆ ಹೊರೆ ಹಾಕ್ತಾ ಇದ್ದಾರೆ ಎಂದು ತಿವಿದರು.

ಹರ್ ಕಿ ಪೌರಿ ಘಾಟ್ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ: ಆರೋಪಿ ಅರೆಸ್ಟ್

ಹರಿದ್ವಾರ: ಉತ್ತರಾಖಂಡದ ಪವಿತ್ರ ನಗರ ಹರಿದ್ವಾರದಲ್ಲಿ ಭಾನುವಾರ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪ್ರಸಿದ್ಧ ಹರ್ ಕಿ ಪೌರಿ ಘಾಟ್ ಸೇರಿದಂತೆ ಹಲವು ಸ್ಥಳಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ದೂರವಾಣಿ ಮೂಲಕ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಮದ್ಯಪಾನದ ಅಮಲಿನಲ್ಲಿ ಇದ್ದ ಯುವಕ 112 ತುರ್ತು ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ, ಹರ್ ಕಿ ಪೌರಿ ಸೇರಿದಂತೆ ಇತರ ಪ್ರದೇಶಗಳಲ್ಲಿ ನಾಲ್ಕು ದಿನಗಳೊಳಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಕರೆ ಬಂದ ತಕ್ಷಣ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಭದ್ರತಾ ಕ್ರಮಗಳನ್ನು ಬಿಗಿಗೊಳಿಸಿತು.

ಘಟನೆಯ ಬಳಿಕ ವಿಶೇಷ ತಂಡಗಳನ್ನು ರಚಿಸಿ ಕರೆ ಮಾಡಿದ ಮೊಬೈಲ್ ಸಂಖ್ಯೆಯ ಸ್ಥಳವನ್ನು ಟ್ರೇಸ್ ಮಾಡಲಾಯಿತು. ತನಿಖೆ ವೇಳೆ ಪೌರಿ ಜಿಲ್ಲೆಯ ಯಮ್ಕೇಶ್ವರ್ ನಿವಾಸಿ 30 ವರ್ಷದ ಸೋಹನ್ ಸಿಂಗ್ ರಾವತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ವಿಚಾರಣೆ ವೇಳೆ ಆತ ಮದ್ಯಪಾನದ ಸ್ಥಿತಿಯಲ್ಲಿ ಬೆದರಿಕೆ ಕರೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಹರಿದ್ವಾರ ನಗರ ಕೋತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಹರ್ ಕಿ ಪೌರಿ ಹರಿದ್ವಾರದ ಅತ್ಯಂತ ಪವಿತ್ರ ಮತ್ತು ಪ್ರಸಿದ್ಧ ಘಾಟ್‌ಗಳಲ್ಲಿ ಒಂದಾಗಿದೆ. ಪ್ರತಿದಿನ ಲಕ್ಷಾಂತರ ಭಕ್ತರು ಇಲ್ಲಿ ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡುತ್ತಾರೆ. ವಿಷ್ಣುವಿನ ಪಾದಚಿಹ್ನೆಗಳೊಂದಿಗೆ ಈ ಸ್ಥಳಕ್ಕೆ ಪೌರಾಣಿಕ ಸಂಬಂಧವಿದೆ ಎಂಬ ನಂಬಿಕೆ ಇದೆ. ಪ್ರತಿದಿನ ಸಂಜೆ ನಡೆಯುವ ಗಂಗಾ ಆರತಿ ದೇಶ-ವಿದೇಶದ ಭಕ್ತರನ್ನು ಆಕರ್ಷಿಸುತ್ತದೆ. ಜೊತೆಗೆ ಪ್ರತಿ 12 ವರ್ಷಕ್ಕೊಮ್ಮೆ ನಡೆಯುವ ಕುಂಭಮೇಳ ಹಾಗೂ 6 ವರ್ಷಕ್ಕೊಮ್ಮೆ ನಡೆಯುವ ಅರ್ಧ ಕುಂಭಮೇಳದಿಂದ ಹರಿದ್ವಾರ ಪ್ರಮುಖ ಆಧ್ಯಾತ್ಮಿಕ ಕೇಂದ್ರವಾಗಿ ಗುರುತಿಸಿಕೊಂಡಿದೆ.

ದೇವೇಗೌಡರ ರಾಜ್ಯಸಭೆ ಮರು ಆಯ್ಕೆ ಬಿಜೆಪಿ ತೀರ್ಮಾನಕ್ಕೆ ಬಿಟ್ಟದ್ದು: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಮರು ಆಯ್ಕೆ ಮಾಡುವ ವಿಚಾರ ಬಿಜೆಪಿ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟದ್ದು ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ದೇವೇಗೌಡರ ಜನ್ಮದಿನದ ಅಂಗವಾಗಿ ಕುಟುಂಬ ಸಮೇತವಾಗಿ ಶುಭಾಶಯ ಕೋರಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇವೇಗೌಡರ ರಾಜ್ಯಸಭೆ ಅವಧಿ ಈಗಾಗಲೇ ಮುಕ್ತಾಯಗೊಂಡಿದೆ ಎಂದು ಹೇಳಿದರು.

ಲೋಕಸಭೆ ಚುನಾವಣೆಯ ವೇಳೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಾಗ ಯಾವುದೇ ಷರತ್ತುಗಳನ್ನು ನಾವು ವಿಧಿಸಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ದೇವೇಗೌಡರಿಗೆ ವಿಶೇಷ ಗೌರವ ನೀಡುತ್ತಾರೆ. ಹೀಗಾಗಿ ರಾಜ್ಯಸಭೆ ಮರು ಆಯ್ಕೆ ಕುರಿತ ಅಂತಿಮ ತೀರ್ಮಾನ ಬಿಜೆಪಿ ಹೈಕಮಾಂಡ್ ಕೈಯಲ್ಲಿದೆ ಎಂದು ಅವರು ತಿಳಿಸಿದರು.

ಈ ವಿಷಯದಲ್ಲಿ ನಮ್ಮಿಂದ ಯಾವುದೇ ಒತ್ತಾಯ ಇಲ್ಲ. ಬಿಜೆಪಿ ಹೈಕಮಾಂಡ್ ಸೂಕ್ತ ತೀರ್ಮಾನ ಕೈಗೊಳ್ಳಲಿ” ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಇನ್ನೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಡೆದ ಸಮಾವೇಶದ ಕುರಿತು ಪ್ರತಿಕ್ರಿಯಿಸಿದ ಅವರು, ಚಾಮುಂಡೇಶ್ವರಿ ಕ್ಷೇತ್ರ ಜೆಡಿಎಸ್‌ನ ಪ್ರಮುಖ ಕ್ಷೇತ್ರವಾಗಿದ್ದು, ಇದೇ ಕಾರಣಕ್ಕೆ ಸಮಾವೇಶ ಆಯೋಜಿಸಲಾಗಿತ್ತು ಎಂದರು.

ಸಮಾವೇಶದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭಾಗವಹಿಸಿದ್ದರು. ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಮತ್ತು ಜನರು ಭಾಗವಹಿಸಿದ್ದರು. ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.

ಜಿಟಿ ದೇವೇಗೌಡರ ವಿಚಾರವಾಗಿ ಮಾತನಾಡಲು ನಿರಾಕರಿಸಿದ ನಿಖಿಲ್, ಆ ಕುರಿತು ಪಕ್ಷದ ವರಿಷ್ಠರಾದ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಹೆಚ್.ಡಿ. ದೇವೇಗೌಡರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

ಜೂನ್ 15ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಮೊದಲ ಸಂಪುಟ ಸಭೆಯಲ್ಲೇ ಕೇರಳ CM ಘೋಷಣೆ

ತಿರುವನಂತಪುರಂ: ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ವಿ.ಡಿ. ಸತೀಶನ್ ನೇತೃತ್ವದ ಸರ್ಕಾರ, ಅಧಿಕಾರ ಸ್ವೀಕರಿಸಿದ ತಕ್ಷಣವೇ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪಂಚ ಗ್ಯಾರಂಟಿಗಳ ಪೈಕಿ ಎರಡು ಮಹತ್ವದ ಭರವಸೆಗಳನ್ನು ಜಾರಿಗೆ ತರುವ ನಿರ್ಧಾರ ಕೈಗೊಂಡಿದೆ.

ರಾಜ್ಯದ ಎಲ್ಲಾ ಮಹಿಳೆಯರಿಗೆ ಜೂನ್ 15ರಿಂದ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ಘೋಷಿಸಿದ್ದಾರೆ. ಈ ಯೋಜನೆಗೆ ಸಂಬಂಧಿಸಿದ ಹೆಚ್ಚಿನ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಇದರ ಜೊತೆಗೆ ವೃದ್ಧರ ಕಲ್ಯಾಣಕ್ಕಾಗಿ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ವೃದ್ಧರಿಗಾಗಿ ಪ್ರತ್ಯೇಕ ಇಲಾಖೆಯನ್ನು ರಚಿಸುತ್ತಿರುವುದು ದೇಶದಲ್ಲೇ ಇದೇ ಮೊದಲು ಎಂಬುದಾಗಿ ಮುಖ್ಯಮಂತ್ರಿ ಹರ್ಷ ವ್ಯಕ್ತಪಡಿಸಿದ್ದಾರೆ.

ಮಹಿಳಾ ಹಾಗೂ ಕಾರ್ಮಿಕ ವರ್ಗದ ಕಲ್ಯಾಣಕ್ಕೆ ಒತ್ತು ನೀಡಿರುವ ಸರ್ಕಾರ, ಆಶಾ ಕಾರ್ಯಕರ್ತೆಯರ ಗೌರವಧನವನ್ನು ಮೊದಲ ಹಂತದಲ್ಲಿ 3,000 ರೂಪಾಯಿ ಹೆಚ್ಚಳ ಮಾಡಿದೆ. ಇದರಿಂದ ಅವರ ಒಟ್ಟು ಮಾಸಿಕ ವೇತನ 9,000 ರೂಪಾಯಿಯಿಂದ 12,000 ರೂಪಾಯಿಗೆ ಏರಿಕೆಯಾಗಲಿದೆ.

ಇದೇ ವೇಳೆ ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಸಿಬ್ಬಂದಿ, ಪೂರ್ವ ಪ್ರಾಥಮಿಕ ಶಿಕ್ಷಕರು ಹಾಗೂ ಆಯಾಗಳ ವೇತನವನ್ನು ತಲಾ 1,000 ರೂಪಾಯಿ ಹೆಚ್ಚಿಸುವುದಾಗಿ ಘೋಷಿಸಲಾಗಿದೆ.

ಚುನಾವಣಾ ಭರವಸೆಗಳನ್ನು ಹಂತ ಹಂತವಾಗಿ ಜಾರಿಗೊಳಿಸುವ ದಿಸೆಯಲ್ಲಿ ಸರ್ಕಾರ ಮೊದಲ ಹೆಜ್ಜೆ ಇಟ್ಟಿದ್ದು, ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಮುಖ್ಯಮಂತ್ರಿ ಸತೀಶನ್ ತಿಳಿಸಿದ್ದಾರೆ.

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಎಂದು ರಾಹುಲ್ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ

ಕಲಬುರಗಿ: ದೇಶ ಆರ್ಥಿಕ ಸಂಕಷ್ಟದತ್ತ ಸಾಗುತ್ತಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮೊದಲೇ ಎಚ್ಚರಿಸಿದ್ದರು. ಆದರೆ ಆಗ ಯಾರೂ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಇದೀಗ ಬಿಜೆಪಿಯವರು ಪೆಟ್ರೋಲ್ ಕಡಿಮೆ ಬಳಸಿ ಎಂದು ಹೇಳುತ್ತಿರುವುದು ವಿಪರ್ಯಾಸ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ತೈಲದ ಮಿತಬಳಕೆಗೆ ಕರೆ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ದೇಶದ ಇಂದಿನ ಪರಿಸ್ಥಿತಿಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಆರೋಪಿಸಿದರು.

“ದೇಶವನ್ನು ಈ ಸ್ಥಿತಿಗೆ ತಂದವರು ಯಾರು? ಬಿಜೆಪಿಯವರು ನಾಲ್ಕು ಜನ ಎಸ್ಕಾರ್ಟ್ ವಾಹನಗಳನ್ನು ಕಡಿಮೆ ಮಾಡಿದರೆ ದೇಶದ ಸಮಸ್ಯೆ ಪರಿಹಾರವಾಗುತ್ತದೆಯೇ?” ಎಂದು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ, ಇಷ್ಟು ದಿನ ಎಲ್ಲವೂ ಸರಿಯಾಗಿದೆ ಎಂದು ಹೇಳುತ್ತಿದ್ದ ಪ್ರಧಾನಿ ಮೋದಿ ಈಗ ಆರ್ಥಿಕ ಪರಿಸ್ಥಿತಿ ಆಪತ್ತಿನಲ್ಲಿದೆ ಎಂದು ಪರೋಕ್ಷವಾಗಿ ಒಪ್ಪಿಕೊಳ್ಳುತ್ತಿರುವುದು ಏಕೆ ಎಂದು ಪ್ರಶ್ನಿಸಿದರು.

ಪ್ರಧಾನಿಯವರು ದೇಶ ಜಾಗತಿಕ ಆರ್ಥಿಕ ಸಂಕಷ್ಟದ ಪರಿಣಾಮ ಎದುರಿಸುತ್ತಿದೆ ಎಂಬುದನ್ನು ಮುಂಚೆಯೇ ಸಂಸತ್ತಿನಲ್ಲಿ ಸ್ಪಷ್ಟವಾಗಿ ಹೇಳಬೇಕಿತ್ತು. ಜನರಿಗೆ ನಿಜ ಸ್ಥಿತಿ ತಿಳಿಸುವ ಜವಾಬ್ದಾರಿ ಕೇಂದ್ರ ಸರ್ಕಾರದ ಮೇಲಿದೆ ಎಂದು ಅವರು ಹೇಳಿದರು.

“ನಾವು ಮೋದಿ ಅವರು ಹೇಳುವುದಕ್ಕೂ ಮುಂಚೆಯೇ ವಾರದಲ್ಲಿ ಒಂದು ದಿನ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದೇವೆ. ಯಾವುದಾದರೂ ಒಳ್ಳೆಯ ಸುದ್ದಿ ಇದ್ದಾಗ ಮಾತ್ರ ರಾತ್ರಿ ಎಂಟು ಗಂಟೆಗೆ ಟಿವಿ ಮುಂದೆ ಬಂದು ಮಾತನಾಡುತ್ತಾರೆ. ಪರಿಸ್ಥಿತಿಯ ಗಂಭೀರತೆಯನ್ನು ಮೊದಲೇ ಜನರ ಮುಂದೆ ಇಡಲಿಲ್ಲವೇ?” ಎಂದು ಪ್ರಶ್ನಿಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿಗೆ ಬಾಂಗ್ಲಾ ವಲಸಿಗರ ಎಂಟ್ರಿ ಆರೋಪ: ಆಧಾರ್ ನೋಡಿ ಬಿಟ್ಟ ಪೊಲೀಸರಿಗೆ ಮುತಾಲಿಕ್ ಕಿಡಿ

0

ಹುಬ್ಬಳ್ಳಿ: ಅಕ್ರಮ ಬಾಂಗ್ಲಾ ವಲಸಿಗರು ಹುಬ್ಬಳ್ಳಿ ಸೇರಿದಂತೆ ದಕ್ಷಿಣ ಭಾರತದ ನಗರಗಳಿಗೆ ನುಸುಳುತ್ತಿದ್ದಾರೆ ಎಂಬ ಆರೋಪದ ನಡುವೆ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ರೈಲ್ವೇ ನಿಲ್ದಾಣದ ಎದುರು ಶ್ರೀರಾಮಸೇನೆ ಭಾರೀ ಪ್ರತಿಭಟನೆ ನಡೆಸಿತು. ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಶ್ಚಿಮ ಬಂಗಾಳದಿಂದ ಆಗಮಿಸುವವರ ಮೇಲೆ ಕಠಿಣ ನಿಗಾವಹಿಸಬೇಕೆಂದು ಆಗ್ರಹಿಸಲಾಯಿತು.

ಇತ್ತೀಚೆಗೆ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೆಲ ಶಂಕಿತರನ್ನು ರೈಲ್ವೆ ಪೊಲೀಸರು ಕೇವಲ ಆಧಾರ್ ಕಾರ್ಡ್ ಪರಿಶೀಲಿಸಿ ಬಿಡುಗಡೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಅವರು ಬಾಗಲಕೋಟೆಗೆ ಕೂಲಿ ಕೆಲಸಕ್ಕೆ ತೆರಳುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದರೂ, ನಕಲಿ ದಾಖಲೆಗಳ ಮೂಲಕ ದೇಶದೊಳಗೆ ಅಕ್ರಮ ಪ್ರವೇಶ ನಡೆಯುತ್ತಿರುವ ಸಾಧ್ಯತೆಯನ್ನು ನಿರ್ಲಕ್ಷ್ಯ ಮಾಡಬಾರದು ಎಂದು ಹಿಂದೂಪರ ಸಂಘಟನೆಗಳು ಎಚ್ಚರಿಸಿವೆ.

ಪ್ರಮೋದ್ ಮುತಾಲಿಕ್ ಮಾತನಾಡಿ, “ಆಧಾರ್ ಕಾರ್ಡ್ ತೋರಿಸಿದರೆ ಸಾಕು ಎಂಬ ರೀತಿಯ ತಪಾಸಣೆ ದೇಶದ ಭದ್ರತೆಗೆ ಅಪಾಯಕಾರಿಯಾಗಿದೆ. ಪಶ್ಚಿಮ ಬಂಗಾಳದಿಂದ ಆಗಮಿಸುವವರ ಹಿನ್ನೆಲೆ ಪರಿಶೀಲನೆ ಕಡ್ಡಾಯವಾಗಬೇಕು” ಎಂದು ಒತ್ತಾಯಿಸಿದರು.

ಪಶ್ಚಿಮ ಬಂಗಾಳ ಚುನಾವಣೆಯ ಬಳಿಕ ಅಕ್ರಮ ಬಾಂಗ್ಲಾ ವಲಸಿಗರ ವಿಚಾರ ದೇಶವ್ಯಾಪಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ದಕ್ಷಿಣ ಭಾರತದ ನಗರಗಳತ್ತ ವಲಸೆ ಹೆಚ್ಚಾಗಿದೆ ಎಂಬ ಆರೋಪ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಪ್ರತಿಭಟನೆಯ ನಂತರ ಶಾಲಿಮಾರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬಂದ ಪ್ರಯಾಣಿಕರ ತಪಾಸಣೆಗೆ ರೈಲ್ವೆ ಮತ್ತು ಸ್ಥಳೀಯ ಪೊಲೀಸರು ಮುಂದಾದರೂ, ಹೆಚ್ಚಿನ ಸಂಖ್ಯೆಯ ಪ್ರಯಾಣಿಕರ ನಡುವೆ ಸಮಗ್ರ ಪರಿಶೀಲನೆ ಸಾಧ್ಯವಾಗಲಿಲ್ಲ. ಈ ಕುರಿತು ಮೇಲಾಧಿಕಾರಿಗಳ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ರಮ ವಲಸಿಗರ ಕುರಿತ ಆರೋಪಗಳ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಭದ್ರತಾ ಚರ್ಚೆ ತೀವ್ರಗೊಂಡಿದ್ದು, ಕಟ್ಟುನಿಟ್ಟಿನ ತನಿಖೆಗೆ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

KPCC ಕಚೇರಿಯಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ; ಕೈಕೈ ಮಿಲಾಯಿಸಿದ ಬೆಂಬಲಿಗರು

ಬೆಂಗಳೂರು: ರಾಜಧಾನಿಯ ಕೆಪಿಸಿಸಿ ಕಚೇರಿಯಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಗಲಾಟೆ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ನಡೆದಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್ ಕೆಲವು ಪದಾಧಿಕಾರಿಗಳನ್ನು ಹುದ್ದೆಯಿಂದ ವಜಾಗೊಳಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ರಾಷ್ಟ್ರೀಯ ಯುವ ಕಾಂಗ್ರೆಸ್ ನಿನ್ನೆ ಹಲವು ಪದಾಧಿಕಾರಿಗಳನ್ನು ಸ್ಥಾನದಿಂದ ತೆರವುಗೊಳಿಸಿತ್ತು. ಈ ವಿಚಾರಕ್ಕೆ ಸಂಬಂಧಿಸಿದ ಅಸಮಾಧಾನ ಇಂದು ಕೆಪಿಸಿಸಿ ಕಚೇರಿಯಲ್ಲಿ ಬಹಿರಂಗಗೊಂಡಿದ್ದು, ಪದಾಧಿಕಾರಿಗಳ ಬೆಂಬಲಿಗರ ನಡುವೆ ತೀವ್ರ ವಾಗ್ವಾದ ನಡೆದಿದೆ.

NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಸಂಬಂಧ ಪೂರ್ವಭಾವಿ ಸಭೆ ಕರೆಯಲಾಗಿತ್ತು. ಈ ಸಭೆಯ ವೇಳೆ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಹಾಗೂ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಬೆಂಬಲಿಗರ ನಡುವೆ ಮಾತಿನ ಚಕಮಕಿ ಶುರುವಾಗಿದೆ.

ವಾದ-ಪ್ರತಿವಾದ ತೀವ್ರಗೊಂಡ ಪರಿಣಾಮ, ಉಭಯ ಗುಂಪಿನ ಕಾರ್ಯಕರ್ತರು ಪರಸ್ಪರ ತಳ್ಳಾಟ-ನೂಕಾಟ ನಡೆಸಿದ್ದು, ಬಳಿಕ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದಾರೆ ಎನ್ನಲಾಗಿದೆ.

ಕಚೇರಿಯಲ್ಲಿದ್ದ ಹಿರಿಯ ಮುಖಂಡರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಿಂದ ಕೆಲಕಾಲ ಕೆಪಿಸಿಸಿ ಕಚೇರಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಪಕ್ಷದ ಆಂತರಿಕ ಬೆಳವಣಿಗೆ ಹಾಗೂ ಪದಾಧಿಕಾರಿಗಳ ವಜಾ ನಿರ್ಧಾರವೇ ಈ ಗಲಾಟೆಗೆ ಕಾರಣ ಎನ್ನಲಾಗುತ್ತಿದ್ದು, ಈ ಬಗ್ಗೆ ಪಕ್ಷದ ನಾಯಕರು ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

error: Content is protected !!