Home Blog

ವಿಧಾನಸೌಧಕ್ಕೆ ಮರಳುವುದು ದೇವರ ಇಚ್ಛೆ: ಕೇಂದ್ರ ಸಚಿವ ಕುಮಾರಸ್ವಾಮಿ

ಬೆಂಗಳೂರು: ವಿಧಾನಸೌಧಕ್ಕೆ ಮತ್ತೆ ಮರಳುವುದು ಭಗವಂತನ ಇಚ್ಛೆ ಹಾಗೂ ಜನರ ಆಶೀರ್ವಾದದ ಮೇಲೆ ಅವಲಂಬಿತವಾಗಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತಿಳಿಸಿದ್ದಾರೆ.

ಎರಡು ವರ್ಷಗಳ ಬಳಿಕ ಕೈಗಾರಿಕಾ ಸಚಿವರ ಜೊತೆ ಸಭೆ ನಡೆಸಲು ವಿಧಾನಸೌಧಕ್ಕೆ ಆಗಮಿಸಿದ್ದ ವೇಳೆ, ಮಾಧ್ಯಮ ಪ್ರತಿನಿಧಿಗಳು ಮತ್ತೆ ಯಾವಾಗ ವಿಧಾನಸೌಧಕ್ಕೆ ಬರುತ್ತೀರಿ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅವರು, ಭವಿಷ್ಯವನ್ನು ಭಗವಂತನೇ ನಿರ್ಧರಿಸುತ್ತಾನೆ. ಜನರ ಆಶೀರ್ವಾದ ಹಾಗೂ ಭಗವಂತನ ಇಚ್ಛೆಯಂತೆ ನಾವು ಕೆಲಸ ಮಾಡಬೇಕಾಗುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದು ಭಗವಂತನ ನಿರ್ಧಾರ ಎಂದು ಹೇಳಿದ ಅವರು, ಅದನ್ನು ಕಾದು ನೋಡಬೇಕಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ, ನಾವು ಮೈತ್ರಿ ಪಕ್ಷಗಳ ಹೊಂದಾಣಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ. ದೆಹಲಿಯ ಬಿಜೆಪಿ ಹೈಕಮಾಂಡ್ ಹಾಗೂ ರಾಜ್ಯ ನಾಯಕರು ಒಟ್ಟಾಗಿ ಕೆಲಸ ಮಾಡುತ್ತಿದ್ದು, ಜನರ ಆಶೀರ್ವಾದದೊಂದಿಗೆ ಮುಂದಿನ ದಿನಗಳಲ್ಲಿ ವಿಧಾನಸೌಧಕ್ಕೆ ಮರಳಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.

ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ, ಅದು ಅವರ ಹಕ್ಕು: ಬಸವರಾಜ ರಾಯರೆಡ್ಡಿ

ಕೊಪ್ಪಳ: ಸಚಿವ ಸ್ಥಾನಕ್ಕಾಗಿ ಶಾಸಕರು ದೆಹಲಿಗೆ ತೆರಳಿರುವ ವಿಚಾರ ತಿಳಿದಿದ್ದು, ಅವರಿಗೆ ಶುಭವಾಗಲಿ. ಸಚಿವ ಸ್ಥಾನ ಕೇಳುವುದು ತಪ್ಪಲ್ಲ, ಅದು ಶಾಸಕರ ಹಕ್ಕು ಎಂದು ಶಾಸಕ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ಎರಡು ವರ್ಷಗಳವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ ಎಂದು ಹೇಳಿದರು.

ಸಂಪುಟ ಪುನರ್‌ರಚನೆ ಯಾವಾಗ ನಡೆಯಬೇಕು ಎಂಬುದು ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿಯವರ ನಿರ್ಧಾರಕ್ಕೆ ಒಳಪಟ್ಟದ್ದು ಎಂದು ತಿಳಿಸಿದ ಅವರು, ಮುಂದಿನ ಸಂಪುಟ ವಿಸ್ತರಣೆಯಲ್ಲಿ ಸಚಿವರಾಗುವವರಿಗೆ ಶುಭಾಶಯಗಳು,” ಎಂದರು.

“ನನ್ನನ್ನು ಸಚಿವನಾಗಲು ಹೇಳಿದರೆ ಆಗುತ್ತೇನೆ, ಬೇಡ ಎಂದರೆ ಬಿಡುತ್ತೇನೆ. 2028ರಲ್ಲಿ ಮತ್ತೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಹೆಚ್ಚಿನ ಪ್ರಯೋಜನವಾಗಿದೆ. ಆದ್ದರಿಂದ ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಮಸೂದೆ ತರಲು ಮುಂದಾಗಿರುವುದನ್ನು ಸ್ವಾಗತಿಸಿದ ಅವರು, ಮಹಿಳೆಗಳಿಗೆ ಸೂಕ್ತ ಸ್ಥಾನಗಳು ಸಿಗಬೇಕು. ಆದರೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳುವುದು ಸರಿಯಲ್ಲ,” ಎಂದು ಹೇಳಿದರು.

ಈ ವಿಚಾರದಲ್ಲಿ ಪ್ರಧಾನಿ ಎಲ್ಲ ರಾಜಕೀಯ ಪಕ್ಷಗಳ ನಾಯಕರನ್ನು ಕರೆದು ಚರ್ಚೆ ನಡೆಸಬೇಕು. ಉತ್ತರ ಭಾರತಕ್ಕೆ ಹೆಚ್ಚು ಸ್ಥಾನ ನೀಡಿ, ದಕ್ಷಿಣಕ್ಕೆ ಕಡಿಮೆ ಸ್ಥಾನ ನೀಡುವಂತಾಗಬಾರದು ಎಂದು ಎಚ್ಚರಿಸಿದರು.

ತುಂಗಭದ್ರೆಯಲ್ಲಿ ಅಕ್ರಮ ಮರಳು ದಂಧೆ: ಪೊಲೀಸರ ದಾಳಿ! ಎಸ್ಪಿ ಖಡಕ್ ವಾರ್ನಿಂಗ್ ಬಳಿಕ ಟ್ರ್ಯಾಕ್ಟರ್ʼಗಳ ಸೀಜ್

0

ಗದಗ: ತುಂಗಭದ್ರಾ ನದಿಯಲ್ಲಿ ಎಗ್ಗಿಲ್ಲದೇ ಸಾಗುತ್ತಿದ್ದ ಅಕ್ರಮ ಮರಳು ದಂಧೆಗೆ ಗದಗ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ಎಸ್ಪಿ ರೋಹನ್ ಜಗದೀಶ್ ನೀಡಿದ ಖಡಕ್ ಎಚ್ಚರಿಕೆಯ ಬೆನ್ನಲ್ಲೇ ಮುಂಡರಗಿ ಪೊಲೀಸರು ಕಾರ್ಯಾಚರಣೆ ನಡೆಸಿ ಐದಕ್ಕೂ ಹೆಚ್ಚು ಟ್ರ್ಯಾಕ್ಟರ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಮುಂಡರಗಿ ತಾಲೂಕಿನ ಗಂಗಾಪೂರ, ಕೊರ್ಲಹಳ್ಳಿ ಹಾಗೂ ಸಿಂಗಟಾಲೂರು ಗ್ರಾಮಗಳ ಸುತ್ತಮುತ್ತ ತುಂಗಭದ್ರಾ ನದಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಯುತ್ತಿತ್ತು. ಈ ಅಕ್ರಮ ದಂಧೆಗೆ ಸ್ಥಳೀಯ ಮಟ್ಟದಲ್ಲಿ ತಾಲೂಕು ಆಡಳಿತದ ಸಾಥ್ ಇದೆ ಎಂಬ ಆರೋಪವೂ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಎಸ್ಪಿ ರೋಹನ್ ಜಗದೀಶ್ ಅಕ್ರಮ ಮರಳು ಸಾಗಾಟವನ್ನು ಕಟ್ಟುನಿಟ್ಟಾಗಿ ತಡೆಯುವಂತೆ ಸೂಚನೆ ನೀಡಿದ್ದರು. ಅದರಂತೆ ಅಲರ್ಟ್ ಆದ ಮುಂಡರಗಿ ಪೊಲೀಸರು ದಾಳಿ ನಡೆಸಿ ಅಕ್ರಮ ಸಾಗಾಟದಲ್ಲಿ ತೊಡಗಿದ್ದ ಟ್ರ್ಯಾಕ್ಟರ್‌ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಪೊಲೀಸ್ ಇಲಾಖೆಯ ಈ ಕ್ರಮದಿಂದ ಮರಳು ಮಾಫಿಯಾಗೆ ತಾತ್ಕಾಲಿಕ ಕಡಿವಾಣ ಬಿದ್ದಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವ ಸೂಚನೆ ದೊರೆತಿದೆ.

ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ಮರುಕಳಿಸುತ್ತಿರುವುದು ಪರಿಸರ ಹಾಗೂ ಆಡಳಿತದ ಮೇಲೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಪೊಲೀಸ್ ಇಲಾಖೆಯ ಕ್ರಮದಿಂದ ತಾತ್ಕಾಲಿಕ ತಡೆ ಕಂಡರೂ, ಶಾಶ್ವತ ಪರಿಹಾರಕ್ಕೆ ಕಟ್ಟುನಿಟ್ಟಿನ ನಿಯಂತ್ರಣ ಅಗತ್ಯ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಕಾಫಿನಾಡಲ್ಲಿ ಸಿಎಂ ದಂಪತಿ: ಪತ್ನಿಯಿಂದ ಟೆಂಪಲ್ ರನ್!

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರೆ, ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ದೇವಸ್ಥಾನ ಭೇಟಿ ಮೂಲಕ ‘ಟೆಂಪಲ್ ರನ್’ ನಡೆಸಿದ್ದಾರೆ.

ಜಿಲ್ಲೆಯ ಎನ್.ಆರ್.ಪುರದಲ್ಲಿ ಸಿಎಂ ದಂಪತಿ ವಾಸ್ತವ್ಯ ಹೂಡಿದ್ದರು. ನಿನ್ನೆ ಮಧ್ಯಾಹ್ನ ಸುಮಾರು 3 ಗಂಟೆಗೆ ಪಾರ್ವತಿ ಸಿದ್ದರಾಮಯ್ಯ ಅವರು ಹೊರನಾಡಿನ ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಬಳಿಕ ಶೃಂಗೇರಿಗೆ ತೆರಳಿ ಶಾರದಾಂಬೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಪೂಜೆ ನಂತರ ಶಾರದಾಂಬೆ ದೇವಸ್ಥಾನದ ಮಠದಲ್ಲೇ ವಾಸ್ತವ್ಯ ಹೂಡಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಎನ್.ಆರ್.ಪುರದ ಐಬಿಯಲ್ಲಿ ತಂಗಿದ್ದರು.

ಇಂದು ಎನ್.ಆರ್.ಪುರ–ಶೃಂಗೇರಿ ತಾಲೂಕಿನಲ್ಲಿ ಸುಮಾರು 38 ಕೋಟಿ ರೂ. ವೆಚ್ಚದ ಸೇತುವೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಸಿಎಂ ದಂಪತಿ ವಾಪಸ್ಸಾಗಲಿದ್ದಾರೆ.

ಮಹಿಳಾ ಮೀಸಲಾತಿ ಅಲ್ಲ, ಕ್ಷೇತ್ರ ಮರುವಿಂಗಡಣೆ ಅಸಲಿ ಉದ್ದೇಶ: ಸೋನಿಯಾ ಗಾಂಧಿ ಆರೋಪ

0

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಲು ಉದ್ದೇಶಿಸಿರುವ ಮಸೂದೆಗಳ ಹಿಂದಿರುವ ನಿಜವಾದ ಉದ್ದೇಶ ಮಹಿಳಾ ಮೀಸಲಾತಿ ಅಲ್ಲ, ಕ್ಷೇತ್ರಗಳ ಮರುವಿಂಗಡಣೆ ಎಂಬುದಾಗಿ ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ಕ್ಷೇತ್ರಗಳ ಮರುವಿಂಗಡಣೆ ಪ್ರಸ್ತಾಪವು ಸಂವಿಧಾನದ ಮೇಲೆ ದಾಳಿ ಸಮಾನವಾಗಿದ್ದು, ಅತ್ಯಂತ ಅಪಾಯಕಾರಿ ಎಂದು ಅವರು ಟೀಕಿಸಿದ್ದಾರೆ. ಈ ಕುರಿತು ಅವರು ಬರೆದ ಲೇಖನವನ್ನು ‘ದಿ ಹಿಂದೂ’ ಪತ್ರಿಕೆಯಲ್ಲಿ ಪ್ರಕಟಿಸಲಾಗಿದ್ದು, ಅದನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಲೋಕಸಭೆಯ ಬಲವರ್ಧನೆಗೆ ಸಂಬಂಧಿಸಿದ ಯಾವುದೇ ಗಡಿ ನಿರ್ಣಯವು ಗಣಿತದ ಆಧಾರದಲ್ಲಷ್ಟೇ ಅಲ್ಲ, ರಾಜಕೀಯ ಸಮತೋಲನದ ದೃಷ್ಟಿಯಿಂದಲೂ ಸಮಾನವಾಗಿರಬೇಕು ಎಂದು ಒತ್ತಿ ಹೇಳಿದ್ದಾರೆ.

ಇದೇ ವೇಳೆ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ತೀವ್ರಗೊಂಡಿರುವ ಸಂದರ್ಭದಲ್ಲಿ, ಕೇಂದ್ರ ಸರ್ಕಾರ ವಿಶೇಷ ಅಧಿವೇಶನದಲ್ಲಿ ಮಂಡಿಸಲು ಬಯಸಿರುವ ಮಸೂದೆಗಳಿಗೆ ಬೆಂಬಲ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷಗಳಿಗೆ ಮನವಿ ಮಾಡುತ್ತಿರುವುದನ್ನು ಅವರು ಉಲ್ಲೇಖಿಸಿದ್ದಾರೆ.

2023ರ ಸೆಪ್ಟೆಂಬರ್‌ನಲ್ಲಿ ಸಂಸತ್ತಿನಲ್ಲಿ ‘ನಾರಿ ಶಕ್ತಿ ವಂದನ ಅಧಿನಿಯಮ–2023’ನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು. ಈ ಕಾಯ್ದೆಯ ಮೂಲಕ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ಕಲ್ಪಿಸಲು ಸಂವಿಧಾನದ 334ಎ ವಿಧಿ ಸೇರಿಸಲಾಗಿದೆ. ಆದರೆ ಈ ಮೀಸಲಾತಿ ಮುಂದಿನ ಜನಗಣತಿ ಹಾಗೂ ಕ್ಷೇತ್ರ ಮರುವಿಂಗಡಣೆಯ ನಂತರವೇ ಜಾರಿಗೆ ಬರಲಿದೆ.

ವಿಪಕ್ಷಗಳು ಈ ಷರತ್ತನ್ನು ಕೇಳಿರಲಿಲ್ಲ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು 2024ರ ಲೋಕಸಭಾ ಚುನಾವಣೆಯಿಂದಲೇ ಮೀಸಲಾತಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದರು. ಆದರೆ ಸರ್ಕಾರ ಅದನ್ನು ಒಪ್ಪಲಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಈಗ 2029ರಿಂದ ಮಹಿಳಾ ಮೀಸಲಾತಿ ಜಾರಿಗೆ ತರಲು 334ಎ ವಿಧಿಯಲ್ಲಿ ತಿದ್ದುಪಡಿ ಮಾಡಲು ಸರ್ಕಾರ ಮುಂದಾಗಿದೆ ಎಂಬ ಮಾಹಿತಿ ದೊರೆತಿದೆ. “ಪ್ರಧಾನಿ ಯೂ-ಟರ್ನ್ ತೆಗೆದುಕೊಳ್ಳಲು 30 ತಿಂಗಳು ಏಕೆ ಬೇಕಾಯಿತು? ವಿಶೇಷ ಅಧಿವೇಶನ ಕರೆಯಲು ಇನ್ನೂ ಕೆಲವು ವಾರ ಕಾಯಬಹುದಿರಲಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಏಪ್ರಿಲ್ 29ರಂದು ಪಶ್ಚಿಮ ಬಂಗಾಳದ ಕೊನೆಯ ಹಂತದ ಮತದಾನ ಮುಗಿದ ಬಳಿಕ ಹೊಸ ಪ್ರಸ್ತಾಪಗಳ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವಂತೆ ವಿಪಕ್ಷ ನಾಯಕರು ಮೂರು ಬಾರಿ ಪತ್ರ ಬರೆದಿದ್ದರೂ, ಸರ್ಕಾರ ಅದನ್ನು ನಿರಾಕರಿಸಿದೆ ಎಂದು ತಿಳಿಸಿದ್ದಾರೆ.

ಇದರ ಬದಲು ಪ್ರಧಾನಿ ಸಾರ್ವಜನಿಕ ಮನವಿ ಹಾಗೂ ಸಭೆಗಳಲ್ಲಿ ನಿರತರಾಗಿದ್ದು, ಇದು ಏಕಪಕ್ಷೀಯ ನಿರ್ಧಾರಗಳ ಸಂಕೇತವಾಗಿದೆ ಎಂದು ಸೋನಿಯಾ ಗಾಂಧಿ ಟೀಕಿಸಿದ್ದಾರೆ.

ಇರಾನ್ ಗೆ ದೊಡ್ಡ ಹೊಡೆತ: ಇಂದಿನಿಂದ ಬಂದರುಗಳಿಗೆ ದಿಗ್ಬಂಧನ ವಿಧಿಸಿದ ಅಮೆರಿಕ!

0

ಅಮೆರಿಕ: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೂಚನೆಯ ಮೇರೆಗೆ ಇರಾನ್ ಬಂದರುಗಳಿಗೆ ದಿಗ್ಬಂಧನ ಹೇರಲಾಗುತ್ತಿದೆ ಎಂದು ಅಮೆರಿಕ ಸೇನೆ ಘೋಷಿಸಿದೆ. ಈ ನಿರ್ಧಾರದ ಪರಿಣಾಮವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದೆ.

ಯುನೈಟೆಡ್ ಸ್ಟೇಟ್ಸ್ ಸೆಂಟ್ರಲ್ ಕಮಾಂಡ್ ನೀಡಿದ ಮಾಹಿತಿ ಪ್ರಕಾರ, ಈ ನಿರ್ಬಂಧವು ಇರಾನ್‌ನ ಬಂದರುಗಳು, ಕರಾವಳಿ ಪ್ರದೇಶಗಳು ಹಾಗೂ ಅದರ ಸುತ್ತಮುತ್ತ ಸಂಚರಿಸುವ ಎಲ್ಲಾ ದೇಶಗಳ ಹಡಗುಗಳಿಗೆ ಅನ್ವಯವಾಗುತ್ತದೆ.

ಎಕ್ಸ್ (X) ಜಾಲತಾಣದಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, ಏಪ್ರಿಲ್ 13ರಂದು ಬೆಳಗ್ಗೆ 10 ಗಂಟೆಯಿಂದ ಇರಾನ್ ಬಂದರುಗಳಿಗೆ ಪ್ರವೇಶಿಸುವ ಮತ್ತು ನಿರ್ಗಮಿಸುವ ಎಲ್ಲಾ ಹಡಗುಗಳ ಸಂಚಾರವನ್ನು ನಿಯಂತ್ರಿಸಲಾಗುತ್ತದೆ ಎಂದು ತಿಳಿಸಿದೆ.

ಅರೇಬಿಯನ್ ಕೊಲ್ಲಿ ಮತ್ತು ಒಮಾನ್ ಕೊಲ್ಲಿಯಲ್ಲಿರುವ ಇರಾನ್ ಬಂದರುಗಳಿಗೂ ಈ ನಿಯಮ ಅನ್ವಯವಾಗಲಿದ್ದು, ಎಲ್ಲ ದೇಶಗಳ ಹಡಗುಗಳಿಗೆ ಸಮಾನವಾಗಿ ನಿರ್ಬಂಧ ಜಾರಿಗೊಳಿಸಲಾಗುತ್ತದೆ ಎಂದು ಹೇಳಿದೆ. ಆದರೆ, ಹಾರ್ಮುಜ್ ಜಲಸಂಧಿಯಿಂದ ಇರಾನಿನ ಹೊರಗಿನ ಬಂದರುಗಳಿಗೆ ಸಾಗುವ ಹಡಗುಗಳ ಸಂಚಾರಕ್ಕೆ ಅಡ್ಡಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಇದಲ್ಲದೆ, ಒಮಾನ್ ಕೊಲ್ಲಿ ಮತ್ತು ಹಾರ್ಮುಜ್ ಜಲಸಂಧಿಯ ಸುತ್ತಮುತ್ತ ಕಾರ್ಯನಿರ್ವಹಿಸುವ ನೌಕಾಪಡೆಯವರು ಮ್ಯಾರಿನರ್‌ಗಳ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಬ್ರಿಡ್ಜ್-ಟು-ಬ್ರಿಡ್ಜ್ ಚಾನೆಲ್ 16 ಮೂಲಕ ಅಮೆರಿಕ ನೌಕಾಪಡೆಯೊಂದಿಗೆ ಸಂಪರ್ಕದಲ್ಲಿರಲು ಸೂಚಿಸಲಾಗಿದೆ.

ಠಾಣೆಯಲ್ಲೇ ಭ್ರಷ್ಟಾಚಾರ ದಂಧೆ? ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ ಸಿಬ್ಬಂದಿಗಳ ಪತ್ರ! ಪಿಎಸ್‌ಐ ವಿರುದ್ಧ ಆರೋಪ

ವಿಜಯಪುರ:  ನಗರದ ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಸೀತಾರಾಮ್ ಲಮಾಣಿ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ಠಾಣಾ ಸಿಬ್ಬಂದಿ ಹಾಗೂ ಅಧಿಕಾರಿಗಳು ಸಾಮೂಹಿಕ ದಯಾಮರಣ ಕೋರಿ ಪತ್ರ ಬರೆದಿರುವ ಘಟನೆ ಬೆಳಕಿಗೆ ಬಂದಿದೆ.

ಪತ್ರದಲ್ಲಿ, ಪಿಎಸ್‌ಐ ಲಮಾಣಿ ಭ್ರಷ್ಟಾಚಾರ ಹಾಗೂ ಕಿರುಕುಳದಿಂದ ಸಿಬ್ಬಂದಿಗೆ ತೀವ್ರ ಮಾನಸಿಕ ಒತ್ತಡ ಉಂಟುಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಆದರ್ಶನಗರ ಠಾಣೆಯಿಂದ ತಿಕೋಟ ಠಾಣೆಗೆ ವರ್ಗಾವಣೆಗಾಗಿ ಹಣ ಸಂಗ್ರಹಿಸಲು ಅವರು ವಿಪರೀತವಾಗಿ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಠಾಣೆಯಲ್ಲಿ ದಾಖಲಾಗುವ ಎಫ್‌ಐಆರ್ ಹಾಗೂ ದೂರುದಾರರಿಂದ ₹10,000 ರಿಂದ ₹1 ಲಕ್ಷದವರೆಗೆ ಹಣ ವಸೂಲಿ ಮಾಡುವಂತೆ ಸಿಬ್ಬಂದಿಗೆ ಒತ್ತಡ ಹೇರುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದಕ್ಕಾಗಿ ‘5.0’ ಎಂದರೆ ₹50,000 ಎಂಬ ಕೋಡ್ ಬಳಸಿ ಹಣ ವಸೂಲಿ ಮಾಡಲು ಸೂಚಿಸುತ್ತಿದ್ದಾರೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಇದರ ಜೊತೆಗೆ ಬಾರ್, ಸ್ಪಾ, ಸಿಗರೇಟ್, ಮಾವಾ (ತಂಬಾಕು) ಹಾಗೂ ವೇಶ್ಯಾವಾಟಿಕೆ ಸೇರಿದಂತೆ ವಿವಿಧ ಅಕ್ರಮ ಚಟುವಟಿಕೆಗಳಿಂದ ಹಣ ವಸೂಲಿ ಮಾಡಲು ಒತ್ತಡ ಹೇರುತ್ತಿದ್ದಾರೆ ಎಂದು ಸಿಬ್ಬಂದಿ ಆರೋಪಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ, ಗೃಹಸಚಿವ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಲಾಗಿದ್ದು, ಪ್ರಕರಣವು ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.

ರಾಜ್ಯ ರಾಜಕೀಯದಲ್ಲಿ ಹೊಸ ತಿರುವು: ನನಗೂ ಸಚಿವ ಸ್ಥಾನ ಬೇಕು ಎಂದ ರೋಣ ಶಾಸಕ! ಜಿ.ಎಸ್ ಪಾಟೀಲ್ ಹೇಳಿದ್ದೇನು?

0

ಗದಗ/ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಕುರಿತ ಚರ್ಚೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಅವರು ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೇಲೆ ಒತ್ತಡ ಹೆಚ್ಚಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾನು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದೇನೆ. ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡಿರುವ ನನಗೆ ಸಚಿವ ಸ್ಥಾನ ನೀಡುವುದು ನ್ಯಾಯಸಮ್ಮತ” ಎಂದು ಹೇಳಿದ್ದಾರೆ.

ಇದೇ ವೇಳೆ, ಕಾಂಗ್ರೆಸ್ ಸರ್ಕಾರ ರಚನೆಯಾಗುವಾಗ ಎರಡೂವರೆ ವರ್ಷಗಳ ಬಳಿಕ ಸಚಿವ ಸಂಪುಟ ಪುನರ್‌ರಚನೆ ಮಾಡುವ ಭರವಸೆ ನೀಡಲಾಗಿತ್ತು ಎಂದು ಅವರು ನೆನಪಿಸಿದರು. ಈಗಾಗಲೇ ಆ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಹಳೆಯ ಸಚಿವರಿಗೆ ಸಂಘಟನೆ ಜವಾಬ್ದಾರಿ ನೀಡಿ ಹೊಸ ಮುಖಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಅಭಿಪ್ರಾಯಪಟ್ಟರು.

ಈ ಬೆಳವಣಿಗೆಯ ಭಾಗವಾಗಿ, ಜಿ.ಎಸ್. ಪಾಟೀಲ್ ಸೇರಿದಂತೆ ಸುಮಾರು 25ರಿಂದ 35 ಮಂದಿ ಹಿರಿಯ ಶಾಸಕರು ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಯನ್ನು ಮಂಡಿಸಲು ತೀರ್ಮಾನಿಸಿದ್ದಾರೆ.

ರಾಜಕೀಯ ವಿಶ್ಲೇಷಕರ ಪ್ರಕಾರ, ಸಚಿವ ಸ್ಥಾನ ಹಂಚಿಕೆಯಲ್ಲಿ ಸಮತೋಲನ ಸಾಧಿಸುವುದು ಕಾಂಗ್ರೆಸ್ ನಾಯಕತ್ವಕ್ಕೆ ಸವಾಲಾಗಿದ್ದು, ಪ್ರಾದೇಶಿಕ, ಜಾತಿ ಹಾಗೂ ಅನುಭವದ ಆಧಾರದ ಮೇಲೆ ಒತ್ತಡಗಳು ಹೆಚ್ಚಾಗುತ್ತಿವೆ. ಹಿರಿಯ ಶಾಸಕರು ಒಟ್ಟಾಗಿ ಧ್ವನಿ ಎತ್ತಿರುವುದು ಮುಂದಿನ ದಿನಗಳಲ್ಲಿ ಸಂಪುಟ ಪುನರ್‌ರಚನೆಗೆ ವೇಗ ನೀಡುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಚಿವ ಸ್ಥಾನಗಳ ಹಂಚಿಕೆ ಕುರಿತು ಅಸಮಾಧಾನ ವ್ಯಕ್ತವಾಗುತ್ತಿದ್ದು, ಈಗ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹಿರಿಯ ಶಾಸಕರು ತಮ್ಮ ಹಕ್ಕಿಗಾಗಿ ಮುಂದಾಗಿದ್ದಾರೆ.

ಗ್ಯಾರೇಜ್ ನಲ್ಲಿ ಅಗ್ನಿ ಅವಘಡ: ಸುಟ್ಟು ಕರಕಲಾದ ಐಷಾರಾಮಿ ಕಾರುಗಳು!

ಬೆಂಗಳೂರು:  ನಗರದ ಬೊಮ್ಮನಹಳ್ಳಿ ಸಮೀಪದ ಹೊಂಗಸಂದ್ರ ಪ್ರದೇಶದಲ್ಲಿರುವ ಕಾರು ಗ್ಯಾರೇಜ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಲವು ಐಷರಾಮಿ ಕಾರುಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ.

ರಾತ್ರಿ ಸುಮಾರು 9 ಗಂಟೆ ವೇಳೆಗೆ ಈ ಅವಘಡ ಸಂಭವಿಸಿದ್ದು, ಗ್ಯಾರೇಜ್‌ನಲ್ಲಿ ನಿಲುಗಡೆ ಮಾಡಲಾಗಿದ್ದ BMW ಸೇರಿ ನಾಲ್ಕು–ಐದು ಕಾರುಗಳು ಬೆಂಕಿಗಾಹುತಿಯಾಗಿವೆ. ಬೆಂಕಿ ಹೊತ್ತಿಕೊಂಡ ಕ್ಷಣಾರ್ಧದಲ್ಲೇ ಜ್ವಾಲೆಗಳು ವ್ಯಾಪಕವಾಗಿ ಹರಡಿದ ಪರಿಣಾಮ ವಾಹನಗಳು ಸಂಪೂರ್ಣವಾಗಿ ಕರಕಲಾಗಿವೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದಲೇ ಬೆಂಕಿ ಕಾಣಿಸಿಕೊಂಡಿರಬಹುದೆಂದು ಶಂಕಿಸಲಾಗಿದೆ. ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಎರಡು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಕೆಲಕಾಲದ ಪರಿಶ್ರಮದ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತಂದವು.

ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಈ ಘಟನೆ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬೆಂಕಿ ಅವಘಡದ ನಿಖರ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬೇಸಿಗೆಯಲ್ಲಿ ಬಿಸಿ ನೀರಾ ಅಥವಾ ತಣ್ಣೀರು? ಆರೋಗ್ಯಕ್ಕೆ ಯಾವುದು ಉತ್ತಮ ಎಂಬುದನ್ನು ತಿಳಿದುಕೊಳ್ಳಿ

0

ಬೇಸಿಗೆಯ ಉಷ್ಣತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಹ ಹೈಡ್ರೇಟ್ ಆಗಿರುವುದು ಅತ್ಯಂತ ಮುಖ್ಯವಾಗಿದೆ. ಆದರೆ ಈ ಸಮಯದಲ್ಲಿ ಯಾವ ರೀತಿಯ ನೀರು ಕುಡಿಯಬೇಕು ಎಂಬುದರ ಬಗ್ಗೆ ಆರೋಗ್ಯ ತಜ್ಞರು ಪ್ರಮುಖ ಸಲಹೆಗಳನ್ನು ನೀಡಿದ್ದಾರೆ.

ತಜ್ಞರ ಪ್ರಕಾರ, ತಣ್ಣೀರು ತಕ್ಷಣ ತಂಪು ನೀಡಿದರೂ ಅದನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದು ಜೀರ್ಣಕ್ರಿಯೆಗೆ ತೊಂದರೆ ಉಂಟುಮಾಡಬಹುದು. ವಿಶೇಷವಾಗಿ ಊಟದ ನಂತರ ತಣ್ಣೀರು ಕುಡಿದರೆ ಆಹಾರ ಸರಿಯಾಗಿ ಜೀರ್ಣವಾಗದೆ ಅಜೀರ್ಣ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಇದಕ್ಕೆ ವಿರುದ್ಧವಾಗಿ, ಬಿಸಿ ಅಥವಾ ಉಗುರು ಬೆಚ್ಚಗಿನ ನೀರು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಕಾರಿಯಾಗಿದೆ. ಇದು ರಕ್ತಸಂಚಾರವನ್ನು ಹೆಚ್ಚಿಸಿ ದೇಹದ ವಿಷಕಾರಿ ಅಂಶಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ. ಬೆಳಿಗ್ಗೆ ಬೆಚ್ಚಗಿನ ನೀರು ಕುಡಿಯುವುದು ಮೆಟಾಬಾಲಿಸಂ ಹೆಚ್ಚಿಸಲು ಸಹಕಾರಿ ಎಂದು ತಜ್ಞರು ತಿಳಿಸಿದ್ದಾರೆ.

ಆದರೆ, ಬೇಸಿಗೆಯಲ್ಲಿ ತುಂಬಾ ಬಿಸಿ ಅಥವಾ ತುಂಬಾ ತಣ್ಣೀರು ಬದಲು ಸಾಮಾನ್ಯ ತಾಪಮಾನದಲ್ಲಿರುವ ನೀರನ್ನು ಕುಡಿಯುವುದು ಅತ್ಯುತ್ತಮ ಆಯ್ಕೆ ಎಂದು ತಜ್ಞರು ಹೇಳಿದ್ದಾರೆ. ಇದು ದೇಹದ ಸಮತೋಲನವನ್ನು ಕಾಪಾಡಿ ಜೀರ್ಣಕ್ರಿಯೆಯ ಮೇಲೂ ಯಾವುದೇ ಕೆಟ್ಟ ಪರಿಣಾಮ ಬೀರುವುದಿಲ್ಲ.

ದೇಹದಲ್ಲಿ ನೀರಿನ ಕೊರತೆ ತಪ್ಪಿಸಲು ದಿನಕ್ಕೆ ಕನಿಷ್ಠ 2.5 ರಿಂದ 3 ಲೀಟರ್ ನೀರು ಕುಡಿಯಬೇಕು. ಹೆಚ್ಚು ಬೆವರು ಬರುವವರು ಇನ್ನಷ್ಟು ನೀರು ಸೇವಿಸುವುದು ಅಗತ್ಯ. ಜೊತೆಗೆ ಹಣ್ಣಿನ ರಸ, ಜ್ಯೂಸ್ ಹಾಗೂ ಎಳನೀರು ಸೇವಿಸುವುದೂ ಆರೋಗ್ಯಕ್ಕೆ ಲಾಭಕರವಾಗಿದೆ.

error: Content is protected !!