Home Blog

ಕುಂಚದ ಮೂಲಕ ಕ್ರಾಂತಿ ಬರೆದ ಕಲಾ ದಿಗ್ಗಜ ಕೆ.ಟಿ. ಶಿವಪ್ರಸಾದ್ ನಿಧನ: ರೈತರ ಧ್ವನಿಯಾಗಿದ್ದ ಚಿತ್ರಕಲಾವಿದ ಇನ್ನು ನೆನಪು ಮಾತ್ರ

0

ಹಾಸನ: ಕರ್ನಾಟಕದ ಹೆಮ್ಮೆಯ ಅಂತಾರಾಷ್ಟ್ರೀಯ ಚಿತ್ರಕಲಾವಿದ ಕೆ.ಟಿ. ಶಿವಪ್ರಸಾದ್ ಅವರು ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಗ್ರಾಮೀಣ ಬದುಕು, ರೈತರ ಸಂಕಷ್ಟ, ತಳಸಮುದಾಯಗಳ ಹೋರಾಟ ಹಾಗೂ ಸಾಮಾಜಿಕ ಅಸಮಾನತೆಯನ್ನು ತಮ್ಮ ಕಲೆಯ ಮೂಲಕ ಜಾಗತಿಕ ಮಟ್ಟದಲ್ಲಿ ಪ್ರತಿಬಿಂಬಿಸಿದ್ದ ಈ ಮಹಾನ್ ಕಲಾವಿದರ ಅಗಲಿಕೆ ಭಾರತೀಯ ಚಿತ್ರಕಲಾ ಕ್ಷೇತ್ರಕ್ಕೆ ಭಾರೀ ಆಘಾತ ತಂದಿದೆ.

ಕೊಡಗಿನ ಮಡಿಕೇರಿ ತಾಲೂಕಿನ ಕೃಷಿಕ ಕುಟುಂಬದಲ್ಲಿ 1947ರಲ್ಲಿ ಜನಿಸಿದ್ದ ಶಿವಪ್ರಸಾದ್, ಬಾಲ್ಯದಲ್ಲೇ ಚಿತ್ರಕಲೆಯತ್ತ ಒಲವು ಬೆಳೆಸಿಕೊಂಡಿದ್ದರು. ಕುಟುಂಬದ ಆಶಯದಂತೆ ಇಂಜಿನಿಯರಿಂಗ್ ಶಿಕ್ಷಣ ಆರಂಭಿಸಿದರೂ, ಕಲೆಯ ಕರೆಗೆ ಸ್ಪಂದಿಸಿ ವ್ಯಾಸಂಗವನ್ನು ಅರ್ಧದಲ್ಲೇ ತೊರೆದು ಮುಂಬೈನ ಪ್ರತಿಷ್ಠಿತ ಸರ್ ಜೆ.ಜೆ. ಸ್ಕೂಲ್ ಆಫ್ ಆರ್ಟ್ನಲ್ಲಿ ಶಿಕ್ಷಣ ಪಡೆದು 1973ರಲ್ಲಿ ಚಿತ್ರಕಲೆಯಲ್ಲಿ ಡಿಪ್ಲೊಮಾ ಪಡೆದರು. ಅಲ್ಲಿಂದ ಆರಂಭವಾದ ಅವರ ಕಲಾ ಪಯಣ ಅಂತಾರಾಷ್ಟ್ರೀಯ ಮಟ್ಟದ ಗುರುತಿನವರೆಗೆ ಸಾಗಿತು.

ಸಾಮಾಜಿಕ ಬದ್ಧತೆಯೇ ಅವರ ಕಲೆಯ ಜೀವಾಳವಾಗಿತ್ತು. ರೈತರು, ಕಾರ್ಮಿಕರು, ದಲಿತರು ಹಾಗೂ ಶೋಷಿತರ ಬದುಕನ್ನು ತಮ್ಮ ಚಿತ್ರಗಳಲ್ಲಿ ಜೀವಂತಗೊಳಿಸಿದ ಅವರು, ಕಲೆಯನ್ನು ಸಮಾಜ ಪರಿವರ್ತನೆಯ ಸಾಧನವನ್ನಾಗಿ ಬಳಸಿದರು. ದಲಿತ, ರೈತ ಹಾಗೂ ಸೋಷಿಯಲಿಸ್ಟ್ ಚಳವಳಿಗಳೊಂದಿಗೆ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಅವರು, ಕುಂಚದ ಮೂಲಕವೇ ಸಾಮಾಜಿಕ ಜಾಗೃತಿ ಮೂಡಿಸುವ ಕೆಲಸ ಮಾಡಿದರು.

ಅವರ ಕಲಾಕೃತಿಗಳು ಬ್ರಿಟನ್‌ನ ಖ್ಯಾತ ಕಲಾವಿದ ಲುಸಿಯನ್ ಫ್ರಾಯ್ಡ್ ಅವರ ಶೈಲಿಗೆ ಹೋಲಿಕೆ ಪಡೆಯುವಷ್ಟು ಪ್ರಭಾವ ಬೀರಿದ್ದವು. ಬೆಂಗಳೂರು, ಮೈಸೂರು, ಮುಂಬೈ, ನವದೆಹಲಿ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಕವ್ಯಕ್ತಿ ಪ್ರದರ್ಶನಗಳನ್ನು ಆಯೋಜಿಸಿದ್ದ ಅವರು, ಜಹಾಂಗೀರ್ ಆರ್ಟ್ ಗ್ಯಾಲರಿ, ಸಾಕ್ಷಿ ಗ್ಯಾಲರಿ, ಆರ್ಟ್ ಟುಡೇ ಸೇರಿದಂತೆ ಪ್ರತಿಷ್ಠಿತ ವೇದಿಕೆಗಳಲ್ಲಿ ತಮ್ಮ ಕಲೆಯನ್ನು ಅನಾವರಣಗೊಳಿಸಿದ್ದರು. ಭೋಪಾಲ್ ಬಿನ್ನಾಲೆ, ಬಾಂಬೆ ಆರ್ಟ್ ಸೊಸೈಟಿ ಶತಮಾನೋತ್ಸವ ಪ್ರದರ್ಶನ ಹಾಗೂ ಹಾಂಗ್‌ಕಾಂಗ್ ಸೇರಿದಂತೆ ಹಲವು ಅಂತರರಾಷ್ಟ್ರೀಯ ಪ್ರದರ್ಶನಗಳಲ್ಲೂ ಭಾಗವಹಿಸಿ ಜಾಗತಿಕ ಮನ್ನಣೆ ಗಳಿಸಿದ್ದರು.

ಚಿತ್ರಕಲೆಯ ಜೊತೆಗೆ ಛಾಯಾಗ್ರಾಹಕ ಹಾಗೂ ಆರ್ಕಿಟೆಕ್ಚರಲ್ ಕನ್ಸಲ್ಟೆಂಟ್ ಆಗಿಯೂ ಗುರುತಿಸಿಕೊಂಡಿದ್ದ ಶಿವಪ್ರಸಾದ್ ಅವರ ಸೇವೆಯನ್ನು ಗೌರವಿಸಿ ಕರ್ನಾಟಕ ಸರ್ಕಾರ 2001ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಿತ್ತು. ಸಾಮಾಜಿಕ ಕಳಕಳಿ, ಕಲಾತ್ಮಕ ವೈಶಿಷ್ಟ್ಯ ಹಾಗೂ ಜಾಗತಿಕ ಮನ್ನಣೆಯ ಮೂಲಕ ಕನ್ನಡ ನಾಡಿನ ಹೆಸರನ್ನು ವಿಶ್ವದಾದ್ಯಂತ ಪಸರಿಸಿದ್ದ ಈ ಮಹಾನ್ ಕಲಾವಿದರ ಅಗಲಿಕೆ ಕಲಾ ಲೋಕಕ್ಕೆ ಎಂದಿಗೂ ತುಂಬಲಾರದ ನಷ್ಟವಾಗಿದೆ.

ಶಿವಮೊಗ್ಗದಲ್ಲಿ ದುರಂತ: ಮದುವೆಯಾದ 2 ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆ

ಶಿವಮೊಗ್ಗ: ಮದುವೆಯಾದ ಕೇವಲ ಎರಡು ತಿಂಗಳಲ್ಲೇ ನವವಿವಾಹಿತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹಣಜಿ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಸ್ವಾತಿ (24) ಎಂದು ಗುರುತಿಸಲಾಗಿದೆ. ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಗ್ರಾಮದ ಸ್ವರೂಪ್ ಅವರನ್ನು ಸ್ವಾತಿ ಮದುವೆಯಾಗಿದ್ದರು.

ಮೂಲಗಳ ಪ್ರಕಾರ, ಸ್ವಾತಿಗೆ ಗರ್ಭಧಾರಣೆ ಹಿನ್ನೆಲೆಯಲ್ಲಿ ಆರೋಗ್ಯ ಸಮಸ್ಯೆಗಳು ಉಂಟಾಗಿದ್ದವು. ಕಳೆದ 20 ದಿನಗಳ ಹಿಂದೆ ಅವರು ತವರು ಮನೆ ಹಣಜಿ ಗ್ರಾಮಕ್ಕೆ ಬಂದಿದ್ದರು. ಘಟನೆ ನಡೆದ ವೇಳೆ ಪೋಷಕರು ಜಮೀನಿನ ಕೆಲಸಕ್ಕೆ ತೆರಳಿದ್ದಾಗ, ಸ್ವಾತಿ ಮನೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡಿದ್ದಾರೆ.

ಸ್ಥಳೀಯರು ಇದನ್ನು ಗಮನಿಸಿ ಕುಟುಂಬದವರಿಗೆ ಮಾಹಿತಿ ನೀಡಿದ್ದು, ಬಳಿಕ ಬಾಗಿಲು ಮುರಿದು ಅವರನ್ನು ಕೆಳಗಿಳಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸ್ವಾತಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಸೊರಬ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕುಟುಂಬದವರ ಪ್ರಕಾರ, ಸ್ವಾತಿಗೆ ತೀವ್ರ ವಾಂತಿ ಮತ್ತು ಆರೋಗ್ಯ ಸಮಸ್ಯೆ ಇದ್ದು, ಸರಿಯಾಗಿ ಆಹಾರ ಸೇವಿಸದ ಸ್ಥಿತಿಯಲ್ಲಿದ್ದರು. ಇದೇ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಗಿಡ ನೆಡುವ ಯೋಜನೆ ವೆಚ್ಚದಲ್ಲಿ ಭ್ರಷ್ಟಾಚಾರ ಆರೋಪ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕೃಷ್ಣಭೈರೇಗೌಡ!

ಬೆಂಗಳೂರು: ನಗರ ಹಸಿರೀಕರಣ ಹಾಗೂ ಗಿಡ ನೆಡುವ ಕಾರ್ಯಕ್ರಮಗಳಲ್ಲಿ ಬಿಬಿಎಂಪಿ ಅಧಿಕಾರಿಗಳು ಅತಿಯಾದ ವೆಚ್ಚ ಮತ್ತು ಅವ್ಯವಹಾರದಲ್ಲಿ ತೊಡಗಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಗಂಭೀರ ಆರೋಪ ಮಾಡಿದ್ದಾರೆ.

ಇತ್ತೀಚೆಗೆ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, ಬಿಬಿಎಂಪಿ ವತಿಯಿಂದ ಒಂದು ಗಿಡ ನೆಡಲು ಸುಮಾರು 3,300 ರೂಪಾಯಿ ವೆಚ್ಚವಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿರುವುದನ್ನು ಉಲ್ಲೇಖಿಸಿದರು. ಅದರಲ್ಲಿ ಕೇವಲ ಗುಂಡಿ ತೋಡಲು 300 ರೂಪಾಯಿ ಮೀಸಲಿಡಲಾಗಿದೆ ಎಂದು ತಿಳಿಸಲಾಗಿದೆ.

ಆದರೆ ತಮ್ಮ ಕ್ಷೇತ್ರದಲ್ಲಿ ನೆಡಲಾದ ಗಿಡಗಳ ಸ್ಥಳ ಪರಿಶೀಲನೆ ಮಾಡಿದಾಗ, ಯಾವುದೇ ಗಿಡಕ್ಕೆ ನಿಯಮಾನುಸಾರ ಗುಂಡಿ ತೋಡಿಲ್ಲ ಎಂದು ಸಚಿವರು ಆರೋಪಿಸಿದ್ದಾರೆ. ಫುಟ್‌ಪಾತ್ ಮತ್ತು ಮೀಡಿಯನ್‌ಗಳಲ್ಲಿ ಮೇಲ್ನೋಟಕ್ಕೆ ಮಾತ್ರ ಗಿಡಗಳನ್ನು ಇರಿಸಲಾಗುತ್ತಿದ್ದು, ನಿಗದಿತ ಮಾನದಂಡಗಳನ್ನು ಪಾಲಿಸಿಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಗುಂಡಿ ತೋಡಲು ಮೀಸಲಿಟ್ಟ ಹಣವನ್ನು ಅಧಿಕಾರಿಗಳು ದುರ್ಬಳಕೆ ಮಾಡಿಕೊಂಡಿರುವ ಶಂಕೆ ಇದೆ ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ, ಕಳೆದ 20 ವರ್ಷಗಳಲ್ಲಿ ಬಿಬಿಎಂಪಿ ಮತ್ತು ಹಿಂದಿನ ಬಿಬಿಎಂಪಿ ಎಷ್ಟು ಗಿಡಗಳನ್ನು ನೆಟ್ಟಿದೆ, ಮರಗಣತಿ ಎಷ್ಟು ಬಾರಿ ನಡೆದಿದೆ ಮತ್ತು ನೆಟ್ಟ ಗಿಡಗಳು ನಿಜವಾಗಿ ಉಳಿದಿವೆಯೇ ಎಂಬ ಬಗ್ಗೆ ಸಚಿವರು ಸರಣಿ ಪ್ರಶ್ನೆಗಳನ್ನು ಎತ್ತಿದ್ದಾರೆ.

ಆದರೆ ಈ ಪ್ರಶ್ನೆಗಳಿಗೆ ಅಧಿಕಾರಿಗಳಿಂದ ಸಮರ್ಪಕ ಉತ್ತರ ಸಿಗಲಿಲ್ಲ ಎಂದು ಸಚಿವರು ಹೇಳಿದ್ದಾರೆ. ಸಾರ್ವಜನಿಕ ಹಣದ ದುರ್ಬಳಕೆ ಮತ್ತು ನಿರ್ಲಕ್ಷ್ಯದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಈ ವಿಚಾರದಲ್ಲಿ ಪಾರದರ್ಶಕತೆ ಹಾಗೂ ಹೊಣೆಗಾರಿಕೆ ಕಡ್ಡಾಯವಾಗಬೇಕು ಎಂದು ಒತ್ತಾಯಿಸಿದ್ದಾರೆ.

ಕುರಿ ಕದಿಯಲು ಹೋಗಿ ಸಿಕ್ಕಿಬಿದ್ದ ಆರೋಪಿ, ಗ್ರಾಮಸ್ಥರಿಂದ ಥಳಿತ; ಇನ್ನಿಬ್ಬರು ಎಸ್ಕೇಪ್!

ಕೋಲಾರ: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗಡಿ ಗ್ರಾಮ ಎಬ್ಬರಿಯಲ್ಲಿ ಕುರಿ ಕದಿಯಲು ಹೋಗಿ ಸಿಕ್ಕಿಬಿದ್ದ ಯುವಕನನ್ನು ಗ್ರಾಮಸ್ಥರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿಯನ್ನು ಬಂಗಾರಪೇಟೆ ತಾಲೂಕಿನ ಚಿನ್ನಕೋಟೆ ಗ್ರಾಮದ ರಾಘವೇಂದ್ರ (36) ಎಂದು ಗುರುತಿಸಲಾಗಿದೆ. ಕುರಿ ಕದಿಯಲು ತೆರಳಿದ್ದ ಮೂವರ ಪೈಕಿ ಓರ್ವ ಸಿಕ್ಕಿಬಿದ್ದಿದ್ದು, ಇನ್ನಿಬ್ಬರು ಪರಾರಿಯಾಗಿದ್ದಾರೆ. ಪೊಲೀಸರು ಅವರಿಗಾಗಿ ಶೋಧ ನಡೆಸುತ್ತಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ರಾಘವೇಂದ್ರ ತನ್ನ ಇಬ್ಬರು ಸಹಚರರೊಂದಿಗೆ ದ್ವಿಚಕ್ರ ವಾಹನದಲ್ಲಿ ಎಬ್ಬಿರಿ ಗ್ರಾಮಕ್ಕೆ ತೆರಳಿ, ಗ್ರಾಮದ ಸುಂದರಪ್ಪ ಅವರಿಗೆ ಸೇರಿದ ಕುರಿಗಳ ಹಟ್ಟಿಯಿಂದ ಕುರಿಗಳನ್ನು ಕಳವು ಮಾಡಲು ಯತ್ನಿಸಿದ್ದಾನೆ. ಈ ವೇಳೆ ಹಟ್ಟಿಯಲ್ಲೇ ಮಲಗಿದ್ದ ಸುಂದರಪ್ಪ ಎಚ್ಚರಗೊಂಡು ಕೂಗಿಕೊಂಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರು ರಾಘವೇಂದ್ರನನ್ನು ಹಿಡಿದಿದ್ದಾರೆ. ಆತನೊಂದಿಗೆ ಬಂದಿದ್ದ ಉಳಿದ ಇಬ್ಬರು ಆರೋಪಿಗಳು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾರೆ. ಸಿಕ್ಕಿಬಿದ್ದ ಆರೋಪಿಯನ್ನು ಥಳಿಸಿ ಗ್ರಾಮಸ್ಥರು ವೆಪನಪಲ್ಲಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪರಾರಿಯಾಗಿರುವ ಇಬ್ಬರು ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.

ಘಟನೆ ಸಂಬಂಧ ವೆಪನಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುರಭಿ ಸಾವಿನ ತನಿಖೆಗೆ ಹೊಸ ತಿರುವು; ಸಂಜೀತ್ ಅಲಿಯಿಂದ ದೂರವಾದ ಬಳಿಕ ಬರೆದಿದ್ದ ಜರ್ನಲ್‌ನಲ್ಲಿ ಸ್ಪೋಟಕ ಸಾಲುಗಳು!

ಚಿಕ್ಕಬಳ್ಳಾಪುರ: ಮುದ್ದೇನಹಳ್ಳಿ ಹೋಂಸ್ಟೇನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಸಾಯಿ ಸುರಭಿ ಪ್ರಕರಣದಲ್ಲಿ ತನಿಖೆಗೆ ಮಹತ್ವದ ಸಾಕ್ಷ್ಯ ಸಿಕ್ಕಿದೆ. ಸಾವಿಗೂ ಮುನ್ನ ಆಕೆ ಬರೆದಿದ್ದ ಗ್ರಾಟಿಟ್ಯೂಡ್ ಜರ್ನಲ್ ಇದೀಗ ಬಹಿರಂಗವಾಗಿದ್ದು, ಆಕೆಯ ಮನಸ್ಥಿತಿ, ಭವಿಷ್ಯದ ಕನಸುಗಳು ಹಾಗೂ ಹಳೆಯ ಸಂಬಂಧದ ಬಗ್ಗೆ ಬರೆದಿರುವ ಸಾಲುಗಳು ತನಿಖೆಗೆ ಹೊಸ ತಿರುವು ನೀಡಿವೆ.

2025ರ ಡಿಸೆಂಬರ್ 30ರಂದು ಬರೆದಿರುವ ದಿನಚರಿಯಲ್ಲಿ, ಸಂಜೀತ್ ಅಲಿಯಿಂದ ದೂರವಾದ ಬಳಿಕ ತನ್ನ ಬದುಕು ಬದಲಾಗಿದೆ ಎಂದು ಸುರಭಿ ಉಲ್ಲೇಖಿಸಿದ್ದಾಳೆ. ಜೀವ ಉಳಿದಿರುವುದಕ್ಕೆ, ಮತ್ತೊಂದು ಅವಕಾಶ ಸಿಕ್ಕಿರುವುದಕ್ಕೆ ಹಾಗೂ ತಪ್ಪುಗಳನ್ನು ತಿದ್ದಿಕೊಳ್ಳುವ ಅವಕಾಶ ದೊರೆತಿರುವುದಕ್ಕೆ ದೇವರಿಗೆ ಧನ್ಯವಾದ ಅರ್ಪಿಸಿದ್ದಾಳೆ.

ತನ್ನ ಹಿಂದಿನ ನಿರ್ಧಾರಗಳಿಂದ ಪಾಠ ಕಲಿತಿರುವುದಾಗಿ, ಕುಟುಂಬದೊಂದಿಗೆ ಹೊಸ ಬದುಕು ಕಟ್ಟಿಕೊಳ್ಳುವ ಆಶಯವಿದ್ದುದಾಗಿ ಹಾಗೂ ದೇವರ ಮೇಲಿನ ನಂಬಿಕೆ ಮತ್ತಷ್ಟು ಗಟ್ಟಿಯಾಗಿರುವುದಾಗಿ ಜರ್ನಲ್‌ನಲ್ಲಿ ದಾಖಲಿಸಿದ್ದಾಳೆ. ಈ ಬರಹಗಳು ಆಕೆ ಹೊಸ ಆರಂಭದ ನಿರೀಕ್ಷೆಯಲ್ಲಿದ್ದಳು ಎಂಬುದನ್ನು ಸೂಚಿಸುತ್ತವೆ.

ಆದರೆ ತನಿಖಾಧಿಕಾರಿಗಳ ಗಮನ ಸೆಳೆದಿರುವುದು ಜರ್ನಲ್‌ನಲ್ಲಿರುವ ಒಂದು ಮಹತ್ವದ ಸಾಲು. “ನನ್ನ ತಪ್ಪಾದ ಆಯ್ಕೆಯಿಂದ ದೂರವಿಟ್ಟಿದ್ದಕ್ಕೆ ಹಾಗೂ ದುಷ್ಟ ವ್ಯಕ್ತಿಯನ್ನು ಮದುವೆಯಾಗದಂತೆ ಕಾಪಾಡಿದ್ದಕ್ಕೆ ದೇವರಿಗೆ ಕೃತಜ್ಞತೆ” ಎಂದು ಸುರಭಿ ಬರೆದಿದ್ದಾಳೆ.

ಈ ಜರ್ನಲ್ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ಹೊಸ ಆಯಾಮ ಸಿಕ್ಕಿದ್ದು, ಆಕೆಯ ಸಾವಿನ ಹಿಂದಿನ ನೈಜ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಎಲ್ಲಾ ಸಾಧ್ಯತೆಗಳನ್ನೂ ಪರಿಶೀಲಿಸುತ್ತಿದ್ದಾರೆ. ಹೊಸ ಬದುಕಿನ ಕನಸು ಕಂಡಿದ್ದ ಯುವತಿಯ ಅಂತ್ಯ ಅನುಮಾನಾಸ್ಪದ ಸಾವಿನಲ್ಲಿ ಆಗಿರುವುದು ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದೆ.

ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್!

ಧಾರವಾಡ: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣದ ಪ್ರಮುಖ ಆರೋಪಿ ಫಯಾಜ್‌ಗೆ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠದಿಂದ ಮತ್ತೆ ಹಿನ್ನಡೆಯಾಗಿದೆ.

ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ.

ಈ ಹಿಂದೆ ಹುಬ್ಬಳ್ಳಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವೂ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಆ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ ಆರೋಪಿ, ಜಾಮೀನು ನೀಡುವಂತೆ ಕೋರಿದ್ದನು.

ಪ್ರಕರಣಕ್ಕೆ ಸಂಬಂಧಿಸಿದಂತೆ ಉಭಯಪಕ್ಷಗಳ ವಾದ-ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಆರೋಪಿಗೆ ಜಾಮೀನು ನೀಡಲು ಯಾವುದೇ ಆಧಾರಗಳಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿದೆ.

ಮೃತ ನೇಹಾ ಹಿರೇಮಠ ಪರವಾಗಿ ಹಿರಿಯ ವಕೀಲ ರಾಘವೇಂದ್ರ ಮುತ್ತಗಿ ವಾದ ಮಂಡಿಸಿ, ಆರೋಪಿ ಎಸಗಿರುವ ಕೃತ್ಯ ಅತ್ಯಂತ ಕ್ರೂರವಾಗಿದ್ದು, ಜಾಮೀನು ನೀಡಿದರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುವುದರ ಜೊತೆಗೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆಯೂ ಇದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಈ ವಾದವನ್ನು ಪರಿಗಣಿಸಿದ ನ್ಯಾಯಪೀಠ ಜಾಮೀನು ಅರ್ಜಿಯನ್ನು ತಿರಸ್ಕರಿಸಿತು.

ಪ್ರಕರಣದ ತನಿಖೆಯನ್ನು ಸಿಐಡಿ ಮುಂದುವರಿಸಿದ್ದು, ಹೈಕೋರ್ಟ್‌ನ ಈ ಆದೇಶವು ನೇಹಾ ಕುಟುಂಬದ ಕಾನೂನು ಹೋರಾಟಕ್ಕೆ ಮಹತ್ವದ ಬೆಂಬಲವಾಗಿದೆ.

ಪ್ರಕರಣದ ಹಿನ್ನೆಲೆ:

2024ರ ಏಪ್ರಿಲ್ 18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ಹಾಗೂ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರನ್ನು ಆರೋಪಿ ಫಯಾಜ್ ಚಾಕುವಿನಿಂದ ಹಲವು ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದನು. ಪ್ರೀತಿಯನ್ನು ನಿರಾಕರಿಸಿದ್ದೇ ಕೊಲೆಗೆ ಕಾರಣ ಎಂದು ತನಿಖೆಯಲ್ಲಿ ತಿಳಿದುಬಂದಿತ್ತು.

ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದ ಪೊಲೀಸರು, ಬಳಿಕ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿದ್ದರು. ಹತ್ಯೆ ಪ್ರಕರಣದ ವಿಚಾರಣೆ ಮುಂದುವರಿದಿದೆ.

‘ಅಡ್ಡಮತದಾನ ಮಾಡಿಲ್ಲ, ಬಿಜೆಪಿಯಲ್ಲೇ ಇರುತ್ತೇನೆ’! ಧರ್ಮಸ್ಥಳದಲ್ಲಿ ಮಂಜುನಾಥನ ಮುಂದೆ ಪ್ರಮಾಣ ಮಾಡಿದ ಶಾಸಕ ಸುರೇಶ್

0

ಮಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಆರೋಪ ಎದುರಿಸುತ್ತಿರುವ ಹಾಸನ ಜಿಲ್ಲೆಯ ಬೇಲೂರು ಬಿಜೆಪಿ ಶಾಸಕ ಹೆಚ್.ಕೆ. ಸುರೇಶ್, ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಆಣೆ-ಪ್ರಮಾಣ ಮಾಡುವ ಮೂಲಕ ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿದ್ದಾರೆ.

ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ದೇವರ ಮುಂದೆ ಮುಷ್ಟಿ ಕಾಣಿಕೆ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ಸುರೇಶ್, “ನಾನು ಯಾವುದೇ ಅಡ್ಡಮತದಾನ ಮಾಡಿಲ್ಲ. ನನ್ನ ಮೇಲೆ ಕೇಳಿಬಂದಿರುವ ಆರೋಪಗಳು ಸತ್ಯವಲ್ಲ. ನಾನು ಈಗಲೂ ಬಿಜೆಪಿಯಲ್ಲಿದ್ದೇನೆ, ಮುಂದೆಯೂ ಬಿಜೆಪಿಯಲ್ಲೇ ಇರುತ್ತೇನೆ. ಶಾಸಕನಾದ ದಿನದಿಂದ ಪಕ್ಷದ ಪರವಾಗಿ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಪ್ರಮಾಣ ಮಾಡಿದರು.

ವಿಧಾನಪರಿಷತ್ ಚುನಾವಣೆಯ ಬಳಿಕ ಬಿಜೆಪಿ ಶಾಸಕರ ಕ್ರಾಸ್‌ ವೋಟಿಂಗ್ ಕುರಿತು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ, ಧರ್ಮಸ್ಥಳದಲ್ಲಿ ದೇವರ ಸನ್ನಿಧಿಯಲ್ಲಿ ಆಣೆ-ಪ್ರಮಾಣ ಮಾಡುವ ಮೂಲಕ ಸುರೇಶ್ ತಮ್ಮ ನಿಲುವನ್ನು ಬಹಿರಂಗಪಡಿಸಿದ್ದಾರೆ.

ನರೇಗಲ್ ಹಿಂಸಾಚಾರ ಖಂಡನೀಯ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಬೊಮ್ಮಾಯಿ ಆಗ್ರಹ

ಹಾವೇರಿ: ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಸೋಮವಾರ ನಡೆದ ಹಿಂಸಾತ್ಮಕ ಘಟನೆ ಅತ್ಯಂತ ಖಂಡನೀಯ ಹಾಗೂ ಹೇಯ ಕೃತ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ ಉದ್ದೇಶದಿಂದ ಯುವಕರ ಮೇಲೆ ಹಲ್ಲೆ ನಡೆದಿದೆ. ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಠಿಣ ಶಿಸ್ತಿನ ಕ್ರಮ ಕೈಗೊಂಡು ಅವರನ್ನು ಜೈಲಿಗೆ ಕಳುಹಿಸಬೇಕು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಹಾಗೂ ಸರ್ಕಾರದಿಂದ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜಿಲ್ಲೆಯಲ್ಲಿ ದ್ವೇಷದ ವಾತಾವರಣ ನಿರ್ಮಾಣವಾಗುತ್ತಿರುವುದು ರಾಜಕೀಯ ಪ್ರೋತ್ಸಾಹದಿಂದ ನಡೆಯುತ್ತಿದೆ ಎಂಬುದು ಸ್ಪಷ್ಟವಾಗಿದ್ದು, ಪೊಲೀಸ್ ಇಲಾಖೆ ಪ್ರಚೋದನೆ ಮಾಡುವವರ ಪ್ರಭಾವಕ್ಕೆ ಒಳಗಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಿಸಲು ವಿಫಲರಾಗಿದ್ದಾರೆ ಎಂದು ಟೀಕಿಸಿರುವ ಬೊಮ್ಮಾಯಿ, ಈ ಘಟನೆ ಹಿಂದೆ ಅಕ್ರಮ ಚಟುವಟಿಕೆಗಳು ಹಾಗೂ ಜೂಜಾಟದ ಚಟುವಟಿಕೆಗಳ ಕುಮ್ಮಕ್ಕು ಕೂಡ ಇರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ತಕ್ಷಣವೇ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು, ಗಾಯಾಳುಗಳಿಗೆ ಚಿಕಿತ್ಸೆ ಹಾಗೂ ಪರಿಹಾರ ನೀಡಬೇಕು ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಎಂದು ಅವರು ಗೃಹ ಸಚಿವರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.

ಭಯ ಬೇಡ ಮತದಾರರ ಪಟ್ಟಿ ಪರಿಷ್ಕರಣೆ ಸುಲಭ ಪ್ರಕ್ರಿಯೆ: ಬಾನು ಮುಷ್ತಾಕ್ ಸ್ಪಷ್ಟನೆ

ಹಾಸನ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆಗೆ ಹಾಸನದಲ್ಲಿ ಅಧಿಕೃತವಾಗಿ ಚಾಲನೆ ದೊರೆತಿದೆ.

ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಮನೆಯಿಂದಲೇ ಈ ಪ್ರಕ್ರಿಯೆಗೆ ಆರಂಭ ನೀಡಲಾಗಿದ್ದು, ಅಧಿಕಾರಿಗಳು ಮನೆಮನೆಗೆ ತೆರಳಿ ಫಾರ್ಮ್ ಭರ್ತಿ ಕಾರ್ಯವನ್ನು ಆರಂಭಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಬಾನು ಮುಷ್ತಾಕ್, ಆರಂಭದಲ್ಲಿ ಈ ಪ್ರಕ್ರಿಯೆಯ ಬಗ್ಗೆ ತನಗೂ ಭಯ ಮತ್ತು ಗೊಂದಲವಿತ್ತು. ಆದರೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಬಳಿಕ ಅದು ಬಹಳ ಸರಳ ಹಾಗೂ ಸುಲಭವಾಗಿರುವುದು ತಿಳಿದು ಭಯ ನಿವಾರಣೆಯಾಗಿದೆ ಎಂದು ಅವರು ಹೇಳಿದ್ದಾರೆ.

ರಾಜಕೀಯ ಕಾರ್ಯಕರ್ತರು ಹಾಗೂ ಕೆಲವು ಪ್ರಮುಖರು ಈ ಪ್ರಕ್ರಿಯೆಯನ್ನು ಕಠಿಣವೆಂದು ಹೇಳಿರುವುದರಿಂದ ಸಾರ್ವಜನಿಕರಲ್ಲಿ ಅನಗತ್ಯ ಭಯ ಸೃಷ್ಟಿಯಾಗಿತ್ತು. ಅಧಿಕಾರಿಗಳೊಂದಿಗೆ ಎನ್ಯೂಮರೇಷನ್ ಫಾರ್ಮ್ ಭರ್ತಿ ಮಾಡಿದಾಗ, ಕೇವಲ ಆಧಾರ್ ಕಾರ್ಡ್ ಮತ್ತು ಹಳೆಯ ಮತದಾರರ ಗುರುತಿನ ಚೀಟಿ ಮಾತ್ರ ಬೇಕಾಗಿತ್ತು ಎಂದು ಅವರು ತಿಳಿಸಿದ್ದಾರೆ. ಈ ಪ್ರಕ್ರಿಯೆ ತುಂಬಾ ಸರಳವಾಗಿದ್ದು, ನಾಗರಿಕರು ಯಾವುದೇ ಗಾಬರಿಗೊಳ್ಳಬೇಕಾದ ಅಗತ್ಯವಿಲ್ಲ ಎಂದು ಬಾನು ಮುಷ್ತಾಕ್ ಸ್ಪಷ್ಟಪಡಿಸಿದ್ದಾರೆ.

ಅಧಿಕಾರಿಗಳು ಜನರಿಗೆ ತಾಳ್ಮೆಯಿಂದ ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದು, ಯಾವುದೇ ಸಮಸ್ಯೆ ಎದುರಾದರೆ ಸಂಬಂಧಿತ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಏಷ್ಯನ್ ಗೇಮ್ಸ್ 2026: ಭಾರತ ಮಹಿಳಾ ಕ್ರಿಕೆಟ್ ತಂಡದ ಸಂಪೂರ್ಣ ಪಟ್ಟಿ ಬಿಡುಗಡೆ!

0

ಜಪಾನ್‌ನ ಐಚಿ–ನಗೋಯಾದಲ್ಲಿ ನಡೆಯಲಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಕ್ರಿಕೆಟ್ ಟೂರ್ನಿಗಾಗಿ ಭಾರತ ಮಹಿಳಾ ತಂಡವನ್ನು ಪ್ರಕಟಿಸಲಾಗಿದೆ.

15 ಸದಸ್ಯರ ಈ ಬಲಿಷ್ಠ ತಂಡವನ್ನು ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದು, ಸ್ಮೃತಿ ಮಂಧಾನ ಉಪನಾಯಕಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಈ ಬಾರಿ ತಂಡದಲ್ಲಿ 17 ವರ್ಷದ ಯುವ ವಿಕೆಟ್ ಕೀಪರ್–ಬ್ಯಾಟರ್ ಜಿ. ಕಮಲಿನಿ ಅವರಿಗೆ ಸ್ಥಾನ ದೊರೆತಿದ್ದು, ಇದು ಪ್ರಮುಖ ಆಯ್ಕೆಯಾಗಿ ಗಮನ ಸೆಳೆದಿದೆ. ಮತ್ತೊಂದೆಡೆ, ಮಹಿಳಾ ಟಿ20 ವಿಶ್ವಕಪ್ ತಂಡದಲ್ಲಿದ್ದ ಯಾಸ್ತಿಕಾ ಭಾಟಿಯಾ ಅವರನ್ನು ಈ ಬಾರಿ ತಂಡದಿಂದ ಕೈಬಿಡಲಾಗಿದೆ.

ಬಿಸಿಸಿಐ ಮೂಲಗಳ ಪ್ರಕಾರ, ಕ್ರಾಂತಿ ಗೌಡ್, ರೇಣುಕಾ ಠಾಕೂರ್, ದೀಪ್ತಿ ಶರ್ಮಾ, ಜೆಮಿಮಾ ರೋಡ್ರಿಗಸ್ ಸೇರಿದಂತೆ ಅನುಭವ ಹಾಗೂ ಯುವಶಕ್ತಿಯ ಸಂಯೋಜನೆಯೊಂದಿಗೆ ಬಲಿಷ್ಠ ತಂಡವನ್ನು ರೂಪಿಸಲಾಗಿದೆ.

ಗಾಯದ ಕಾರಣದಿಂದ ಟಿ20 ವಿಶ್ವಕಪ್ ವೇಳೆ ಹೊರಗಿದ್ದ ಶ್ರೇಯಾಂಕಾ ಪಾಟೀಲ್ ಅವರನ್ನು ಕೂಡ ಆಯ್ಕೆ ಮಾಡಲಾಗಿದೆ. ಆದರೆ ಅವರು ಟೂರ್ನಿಗೆ ಮೊದಲು ಫಿಟ್‌ನೆಸ್ ಕ್ಲಿಯರೆನ್ಸ್ ಪಡೆಯಬೇಕಿದ್ದು, ಇಲ್ಲವಾದರೆ ಅವರ ಬದಲಿಗೆ ಮತ್ತೊಬ್ಬರನ್ನು ಆಯ್ಕೆ ಮಾಡಲಾಗುತ್ತದೆ.

ಭಾರತ ಮಹಿಳಾ ತಂಡ:

ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಜಿ. ಕಮಲಿನಿ (ವಿಕೆಟ್ ಕೀಪರ್), ಭಾರತಿ ಫುಲ್ಮಾಲಿ, ಶ್ರೀ ಚರಣಿ, ರೇಣುಕಾ ಠಾಕೂರ್, ಕ್ರಾಂತಿ ಗೌಡ್, ಅರುಂಧತಿ ರೆಡ್ಡಿ, ರಾಧಾ ಯಾದವ್, ನಂದಿನಿ ಶರ್ಮಾ, ಶ್ರೇಯಾಂಕಾ ಪಾಟೀಲ್.

ಈ ಏಷ್ಯನ್ ಗೇಮ್ಸ್ ಕ್ರಿಕೆಟ್ ಪಂದ್ಯಗಳು 2026ರ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 3ರವರೆಗೆ ಟಿ20 ಸ್ವರೂಪದಲ್ಲಿ ನಡೆಯಲಿವೆ. ಮಹಿಳಾ ವಿಭಾಗದಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿದ್ದು, ಭಾರತ ತಂಡ ನೇರವಾಗಿ ಕ್ವಾರ್ಟರ್ ಫೈನಲ್‌ನಿಂದ ತನ್ನ ಅಭಿಯಾನ ಆರಂಭಿಸಲಿದೆ.

ಮೊದಲ ಪಂದ್ಯದಲ್ಲಿ ಭಾರತ ತಂಡವು ಕ್ವಾಲಿಫೈಯರ್ ಹಂತದಿಂದ ಬಂದ ಕಡಿಮೆ ಶ್ರೇಯಾಂಕದ ತಂಡದ ವಿರುದ್ಧ (ಥಾಯ್ಲೆಂಡ್, ಮಲೇಷ್ಯಾ ಅಥವಾ ಚೀನಾ) ಎದುರಿಸಲಿದೆ ಎಂದು ನಿರೀಕ್ಷಿಸಲಾಗಿದೆ.