Home Blog

ವಿಜಯ್ ಸರ್ಕಾರದಲ್ಲಿ 2%–4% ಕಮಿಷನ್ ವಸೂಲಿ: ತಮಿಳುನಾಡು ಸಚಿವರ ವಿರುದ್ಧ ಅಣ್ಣಾಮಲೈ ಬಾಂಬ್!

0

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಗಂಭೀರ ಆರೋಪ ಮಾಡಿದ್ದಾರೆ.

ಸರ್ಕಾರದ ಕೆಲ ಸಚಿವರು ಸರ್ಕಾರಿ ಟೆಂಡರ್‌ಗಳಲ್ಲಿ ಗುತ್ತಿಗೆದಾರರಿಂದ 2% ರಿಂದ 4% ವರೆಗೆ ಕಮಿಷನ್ ಕೇಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಚೆನ್ನೈನಲ್ಲಿ ‘ವೀ ದಿ ಲೀಡರ್ಸ್’ ಸಂಘಟನೆ ಆಯೋಜಿಸಿದ್ದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅಣ್ಣಾಮಲೈ, ಮುಖ್ಯಮಂತ್ರಿ ವಿಜಯ್ ಭ್ರಷ್ಟಾಚಾರದ ವಿರುದ್ಧ ನಿಲುವು ಹೊಂದಿದ್ದಾರೆ ಎಂದು ಹೇಳಿಕೊಂಡರೂ, ಅವರ ಸಂಪುಟದ ಕೆಲ ಸಚಿವರ ನಡೆ ಅದಕ್ಕೆ ವಿರುದ್ಧವಾಗಿದೆ ಎಂದು ಟೀಕಿಸಿದರು.

‘ಈಗ ಕಮಿಷನ್ ಕೇಳಲು ಆರಂಭಿಸಿದ್ದಾರೆ’:

ಈ ಹಿಂದೆ ಪ್ರಮುಖ ಸರ್ಕಾರಿ ಟೆಂಡರ್‌ಗಳಲ್ಲಿ ಕಿಕ್‌ಬ್ಯಾಕ್ ಪಡೆಯುವ ಪದ್ಧತಿ ಇರಲಿಲ್ಲ. ಆದರೆ ಈಗ ಕೆಲ ಸಚಿವರು ಗುತ್ತಿಗೆದಾರರಿಂದ 2% ರಿಂದ 4% ವರೆಗೆ ಕಮಿಷನ್ ಕೇಳಲು ಆರಂಭಿಸಿದ್ದಾರೆ ಎಂದು ಅಣ್ಣಾಮಲೈ ಆರೋಪಿಸಿದರು.

ಭ್ರಷ್ಟಾಚಾರದ ವಿರುದ್ಧ ಮುಖ್ಯಮಂತ್ರಿ ನಿಲುವು ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಸರ್ಕಾರದೊಳಗಿನ ಕೆಲ ಸಚಿವರ ನಡೆ ಬೇರೆ ಚಿತ್ರಣವನ್ನು ತೋರಿಸುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು.

ಅಣ್ಣಾಮಲೈ ಅವರ ಈ ಹೇಳಿಕೆ ತಮಿಳುನಾಡು ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಅವರ ಆರೋಪಗಳಿಗೆ ಸರ್ಕಾರದಿಂದ ಅಧಿಕೃತ ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ.

ಮನೆಯೊಳಗೆ ನುಗ್ಗಿ ಬೆದರಿಸಿ ದರೋಡೆ: ಹಾಸನದಲ್ಲಿ 8 ಮಂದಿಯನ್ನು ಬಂಧಿಸಿದ ಪೊಲೀಸರು!

0

ಹಾಸನ: ಜನರು ಮನೆಯಲ್ಲಿದ್ದಾಗಲೇ ಬೆದರಿಸಿ ದರೋಡೆ ನಡೆಸುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.

ಎರಡು ಪ್ರತ್ಯೇಕ ದರೋಡೆ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು, 19.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದ 8 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತ ಅವರ ನೇತೃತ್ವದಲ್ಲಿ ರಚಿಸಲಾದ ವಿಶೇಷ ತನಿಖಾ ತಂಡ ಸಿಸಿಟಿವಿ ದೃಶ್ಯಾವಳಿ ಹಾಗೂ ಮೊಬೈಲ್ ಕರೆಗಳ ಜಾಡು ಹಿಡಿದು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆಹಿಡಿದಿದೆ.

ಪೊಲೀಸರ ಮಾಹಿತಿ ಪ್ರಕಾರ, ಜೂನ್ 2ರಂದು ಆಲೂರು ತಾಲೂಕಿನ ಮಣಿಪುರ ಗ್ರಾಮದ ನಿವೃತ್ತ ನೌಕರ ಚಂದ್ರಶೇಖರಯ್ಯ ಅವರ ಮನೆಯಲ್ಲಿ ಮೊದಲ ದರೋಡೆ ನಡೆದಿತ್ತು. ಬಳಿಕ ಜುಲೈ 22ರಂದು ಈಶ್ವರಹಳ್ಳಿ ಕೂಡುಗೆ ಗ್ರಾಮದ ಮಂಜೆಗೌಡ ಅವರ ಮನೆಯಲ್ಲಿ ಮತ್ತೊಂದು ದರೋಡೆ ನಡೆದಿತ್ತು.

ಎರಡೂ ಪ್ರಕರಣಗಳಲ್ಲಿ ಸುಮಾರು 19.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಲಾಗಿತ್ತು. ಆರೋಪಿಗಳು ರಾಷ್ಟ್ರೀಯ ಹೆದ್ದಾರಿ-75ರ ಪಕ್ಕದಲ್ಲಿರುವ ಒಂಟಿ ಮನೆಗಳನ್ನು ಗುರಿಯಾಗಿಸಿಕೊಂಡು ದರೋಡೆ ನಡೆಸುತ್ತಿದ್ದರು ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಸಿಸಿಟಿವಿ, ಮೊಬೈಲ್ ಜಾಡು ಹಿಡಿದು ಕಾರ್ಯಾಚರಣೆ:

ಪ್ರಕರಣದ ಗಂಭೀರತೆ ಅರಿತ ಎಸ್‌ಪಿ ಶುಭಾನ್ವಿತ ವಿಶೇಷ ತಂಡ ರಚಿಸಿ ತನಿಖೆ ಆರಂಭಿಸಿದ್ದರು. ಸಿಸಿಟಿವಿ ದೃಶ್ಯಾವಳಿ ಹಾಗೂ ಮೊಬೈಲ್ ಕರೆಗಳ ಮಾಹಿತಿ ಆಧರಿಸಿ ಆಗಸ್ಟ್ 7ರಂದು ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರನ್ನು ದಕ್ಷಿಣ ಕನ್ನಡದ ಅಶ್ರಫ್, ಇಬ್ರಾಹಿಂ, ಹಾವೇರಿಯ ಈರಣ್ಣ, ಹಮೀದ್, ಸಂಕೇತ್, ರಘು, ಹಾಗೂ ಹಾಸನ ಮೂಲದ ಸುಲೈಮಾನ್ ಮತ್ತು ಭರತ್ ಎಂದು ಗುರುತಿಸಲಾಗಿದೆ.

ಬಂಧಿತ ಇಬ್ರಾಹಿಂ ಮತ್ತು ಈರಣ್ಣ ವಿರುದ್ಧ ಕರ್ನಾಟಕ ಹಾಗೂ ಕೇರಳ ರಾಜ್ಯಗಳಲ್ಲಿ ಹಲವು ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ನಾಗರ ಪಂಚಮಿ 2026: ಕರಾವಳಿಯಲ್ಲಿ ಈ ಹಬ್ಬ ಏಕೆ ಇಷ್ಟು ವಿಶೇಷ? ಇಲ್ಲಿದೆ ಅಪರೂಪದ ಸಂಪ್ರದಾಯ!

0

ಶ್ರಾವಣ ಮಾಸದ ಪಂಚಮಿ ತಿಥಿಯಂದು ಆಚರಿಸುವ ನಾಗರ ಪಂಚಮಿ ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ.

ನಾಗದೇವರ ಆರಾಧನೆಗೆ ಮೀಸಲಾದ ಈ ಹಬ್ಬವನ್ನು ಕರ್ನಾಟಕದಾದ್ಯಂತ ಆಚರಿಸಿದರೂ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಕರಾವಳಿ ಭಾಗದಲ್ಲಿ ವಿಶಿಷ್ಟ ಸಂಪ್ರದಾಯಗಳೊಂದಿಗೆ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಗುತ್ತದೆ.

ಕರಾವಳಿಯ ನಾಗಬನಗಳು, ನಾಗಸ್ಥಾನಗಳು ಹಾಗೂ ಪುರಾತನ ದೇವಾಲಯಗಳಲ್ಲಿ ಬೆಳಗಿನ ಜಾವದಿಂದಲೇ ಸಾವಿರಾರು ಭಕ್ತರು ಸೇರಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ. ಅಕ್ಕಿ, ಹಾಲು, ಎಳನೀರು, ತೆಂಗಿನಕಾಯಿ, ಅರಿಶಿನ, ಹೂವು, ಜೇನುತುಪ್ಪ ಸೇರಿದಂತೆ ವಿವಿಧ ಕಾಣಿಕೆಗಳನ್ನು ಅರ್ಪಿಸಿ ಆಶೀರ್ವಾದ ಪಡೆಯುತ್ತಾರೆ.

ಪರಶುರಾಮ ಮತ್ತು ನಾಗದೇವರ ಪೌರಾಣಿಕ ಕಥೆ:

ತುಳುನಾಡಿನಲ್ಲಿ ಪ್ರಸಿದ್ಧವಾಗಿರುವ ನಂಬಿಕೆಯ ಪ್ರಕಾರ, ಪರಶುರಾಮನು ಸಮುದ್ರದಿಂದ ಪಡೆದ ಭೂಮಿಯನ್ನು ಫಲವತ್ತಾಗಿಸಲು ನಾಗರಾಜನನ್ನು ಬೇಡಿಕೊಂಡನು. ನಾಗಗಳು ಪಾತಾಳದಿಂದ ಸಿಹಿನೀರು ಹಾಗೂ ಫಲವತ್ತಾದ ಮಣ್ಣನ್ನು ತಂದು ತುಳುನಾಡನ್ನು ಸಮೃದ್ಧಗೊಳಿಸಿದವು. ಈ ವೇಳೆ ಅವುಗಳಿಗೆ ಗಾಯಗಳಾದ ಕಾರಣ ತುಳುವರು ಅರಿಶಿನ ಹಚ್ಚಿ ಆರೈಕೆ ಮಾಡಿ, ನಾಗದೇವರನ್ನು ಕುಲದೇವರಾಗಿ ಪೂಜಿಸುವ ಸಂಪ್ರದಾಯ ಬೆಳೆಸಿದರು ಎನ್ನಲಾಗಿದೆ.

ನಾಗಬನಗಳಲ್ಲಿ ವಿಶೇಷ ಪೂಜೆ:

ಕರಾವಳಿಯ ನಾಗಬನಗಳು ಕೇವಲ ಧಾರ್ಮಿಕ ಕೇಂದ್ರಗಳಲ್ಲ, ಪರಿಸರ ಸಂರಕ್ಷಣೆಯ ಪ್ರತೀಕಗಳಾಗಿವೆ. ಈ ಪವಿತ್ರ ವನಗಳಲ್ಲಿ ಮರಗಳನ್ನು ಕಡಿಯದೆ ಜೀವವೈವಿಧ್ಯತೆಯನ್ನು ಕಾಪಾಡುವ ಸಂಪ್ರದಾಯ ಇಂದಿಗೂ ಮುಂದುವರಿದಿದೆ. ಪಂಚಮಿಯಂದು ಸೂರ್ಯೋದಯಕ್ಕೂ ಮುನ್ನವೇ ಭಕ್ತರು ನಾಗರಕಲ್ಲಿಗೆ ಹಾಲು, ಎಳನೀರು, ಜೇನುತುಪ್ಪ, ಅರಿಶಿನ ಹಾಗೂ ಹೂವುಗಳನ್ನು ಅರ್ಪಿಸಿ ವಿಶೇಷ ಪೂಜೆ ಸಲ್ಲಿಸುತ್ತಾರೆ.

ಅರಿಶಿನ ಎಲೆ ಸಿಹಿ ಕಡುಬು ವಿಶೇಷ:

ನಾಗರ ಪಂಚಮಿಯಂದು ಕರಾವಳಿಯಲ್ಲಿ ಆಹಾರಕ್ಕೂ ವಿಶೇಷ ಸ್ಥಾನವಿದೆ. ಈ ದಿನ ಕರಿದ ಅಥವಾ ಉಪ್ಪಿನ ತಿನಿಸುಗಳನ್ನು ಮಾಡುವುದಿಲ್ಲ. ಬದಲಾಗಿ ಎಳ್ಳುಂಡೆ ಹಾಗೂ ಅರಿಶಿನ ಎಲೆ ಸಿಹಿ ಕಡುಬು ತಯಾರಿಸಿ ದೇವರಿಗೆ ನೈವೇದ್ಯ ಅರ್ಪಿಸಲಾಗುತ್ತದೆ. ತುಳುನಾಡಿನಲ್ಲಿ ಅರಿಶಿನ ಎಲೆ ಕಡುಬು ಈ ಹಬ್ಬದ ಪ್ರಮುಖ ವಿಶೇಷತೆಯಾಗಿ ಪರಿಗಣಿಸಲಾಗಿದೆ.

ಮೂಲ ನಾಗದೇವರ ದರ್ಶನದ ಸಂಪ್ರದಾಯ:

ನಗರಗಳಲ್ಲಿ ನೆಲೆಸಿರುವ ಕರಾವಳಿ ಮೂಲದ ಕುಟುಂಬಗಳು ನಾಗರ ಪಂಚಮಿಯಂದು ತಮ್ಮ ಊರಿಗೆ ತೆರಳಿ ಮೂಲ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸುವ ಸಂಪ್ರದಾಯವನ್ನು ಇಂದಿಗೂ ಪಾಲಿಸುತ್ತಿವೆ. ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಕರಾವಳಿಯ ಅನೇಕ ದೇವಾಲಯಗಳಲ್ಲಿ ಈ ದಿನ ನಾಗಾರಾಧನೆಗೆ ವಿಶೇಷ ಮಹತ್ವ ನೀಡಲಾಗುತ್ತದೆ.

ಶಾಲೆ ಪಕ್ಕದಲ್ಲೇ ಬಂಡೆ ಒಡೆಯಲು ಅಕ್ರಮ ಸ್ಫೋಟ? ಬೆಂಗಳೂರಿನಲ್ಲಿ 800 ಕೆಜಿಗೂ ಹೆಚ್ಚು ಜಿಲೆಟಿನ್ ಸೀಜ್

0

ಬೆಂಗಳೂರು: ನಗರದ ಬೆಳ್ಳಂದೂರು ಸಮೀಪದ ಭೋಗನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿಯಲ್ಲಿ ಅಕ್ರಮವಾಗಿ ಜಿಲೆಟಿನ್ ಬಳಸಿ ಬಂಡೆಗಳನ್ನು ಸ್ಫೋಟಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬೆಳ್ಳಂದೂರು ಪೊಲೀಸರು ಕಾರ್ಯಾಚರಣೆ ನಡೆಸಿ 800 ಕೆಜಿಗೂ ಹೆಚ್ಚು ಜಿಲೆಟಿನ್ ವಶಪಡಿಸಿಕೊಂಡಿದ್ದಾರೆ.

ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.

ಭೋಗನಹಳ್ಳಿಯಲ್ಲಿ ಆದರ್ಶ ಕಂಪನಿಯ ಕಟ್ಟಡ ಕಾಮಗಾರಿ ನಡೆಯುತ್ತಿರುವ ವೇಳೆ ಸ್ಥಳದಲ್ಲಿ ದೊಡ್ಡ ಕಲ್ಲಿನ ಬಂಡೆಗಳು ಪತ್ತೆಯಾಗಿದ್ದವು. ಅವುಗಳನ್ನು ತೆರವುಗೊಳಿಸಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಜಿಲೆಟಿನ್ ಬಳಸಿ ಬ್ಲಾಸ್ಟಿಂಗ್ ನಡೆಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ನಿರ್ಮಾಣ ಸ್ಥಳದ ಸಮೀಪದಲ್ಲೇ ಶಾಲೆ ಇರುವುದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ರಾತ್ರಿ 12 ಗಂಟೆಯ ಬಳಿಕ ಸ್ಫೋಟ ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ನಿವಾಸಿಗಳು, ಮಕ್ಕಳ ಸುರಕ್ಷತೆಗೂ ಅಪಾಯ ಉಂಟಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಹಲವು ಬಾರಿ ಬೆಳ್ಳಂದೂರು ಠಾಣೆಗೆ ದೂರು ನೀಡಿದ್ದರೂ ಸೂಕ್ತ ಕ್ರಮವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಪೊಲೀಸರಿಗೆ ನೀಡಿದ ದೂರಿನಲ್ಲಿ ಅರ್ಥ್‌ವರ್ಕ್ ಕೆಲಸ ಮಾಡುವ ಸತೀಶ್ ನಾಯಕ್, ಶ್ರೀನಿವಾಸ ಅರ್ಥ್ ಮೂವರ್ಸ್ ಮಾಲೀಕ ಅರುಣ್ ಕುಮಾರ್ ತಮ್ಮನ್ನು ಭೋಗನಹಳ್ಳಿಯ ವಿವಿಧ ಸರ್ವೆ ನಂಬರಿನ ಕಾಮಗಾರಿಗೆ ನೇಮಿಸಿದ್ದಾಗಿ ತಿಳಿಸಿದ್ದಾರೆ.

ಕಾಮಗಾರಿ ವೇಳೆ ದೊಡ್ಡ ಬಂಡೆಗಳು ಪತ್ತೆಯಾಗಿದ್ದರಿಂದ ಅವುಗಳನ್ನು ತೆರವುಗೊಳಿಸಲು ಕಾನೂನುಬಾಹಿರವಾಗಿ ಸ್ಫೋಟಕ ವಸ್ತುಗಳನ್ನು ಬಳಸುವಂತೆ ಒತ್ತಡ ಹೇರಲಾಗಿತ್ತು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಬಳಿಕ ಕೆಲಸದಿಂದ ದೂರವಿಟ್ಟು, ಹಣ ನೀಡದೆ ಪ್ರಾಣ ಬೆದರಿಕೆ ಹಾಕಲಾಗಿದೆ ಎಂದೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಶ್ರೀನಿವಾಸ ಅರ್ಥ್ ಮೂವರ್ಸ್ ಮಾಲೀಕ, ಸೈಟ್ ಇನ್‌ಚಾರ್ಜ್, ಸೈಟ್ ಎಂಜಿನಿಯರ್, ಆದರ್ಶ ಡೆವಲಪರ್ಸ್‌ನ ಮಾಲೀಕರು ಹಾಗೂ ಗುತ್ತಿಗೆದಾರರು ಕಾನೂನುಬಾಹಿರವಾಗಿ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿ ಬಳಸುತ್ತಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಸ್ಥಳೀಯರ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಬೆಳ್ಳಂದೂರು ಪೊಲೀಸರು ಕಾರ್ಯಾಚರಣೆ ನಡೆಸಿ 800 ಕೆಜಿಗೂ ಹೆಚ್ಚು ಜಿಲೆಟಿನ್ ವಶಪಡಿಸಿಕೊಂಡಿದ್ದಾರೆ. ನಿರ್ಮಾಣ ಸ್ಥಳದಲ್ಲಿ ಸ್ಫೋಟಕ ವಸ್ತುಗಳನ್ನು ಯಾವ ರೀತಿಯಲ್ಲಿ ಸಂಗ್ರಹಿಸಲಾಗಿತ್ತು, ಅವುಗಳ ಬಳಕೆಗೆ ಅಗತ್ಯ ಅನುಮತಿ ಇತ್ತೇ ಹಾಗೂ ನಿಜವಾಗಿಯೂ ಬ್ಲಾಸ್ಟಿಂಗ್ ನಡೆಸಲಾಗುತ್ತಿತ್ತೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದ ಆರೋಪಗಳ ಸತ್ಯಾಸತ್ಯತೆ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ.

ಇಂದು ಸಂಜೆ 4 ಗಂಟೆಯೊಳಗೆ SIR ಫಾರ್ಮ್ ಸಲ್ಲಿಸಿ: ಇಲ್ಲದಿದ್ದರೆ ಮತದಾರರ ಪಟ್ಟಿಯಿಂದ ಹೆಸರು ರದ್ದು?

0

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ ಗಣತಿ ನಮೂನೆ ವಾಪಸ್ ಸಲ್ಲಿಸಲು ಇಂದು ಸಂಜೆ 4 ಗಂಟೆಯವರೆಗೆ ಮಾತ್ರ ಅವಕಾಶ ಇದೆ.

ಈಗಾಗಲೇ ಬೂತ್ ಮಟ್ಟದ ಅಧಿಕಾರಿ (BLO) ಮೂಲಕ ಫಾರ್ಮ್ ಪಡೆದಿರುವ ಮತದಾರರು ಅಗತ್ಯ ಮಾಹಿತಿ ಭರ್ತಿ ಮಾಡಿ, ಸಹಿ ಹಾಕಿ ನಿಗದಿತ ಸಮಯದೊಳಗೆ BLOಗೆ ಸಲ್ಲಿಸಬೇಕು.

ನಿಮ್ಮ ಹೆಸರು ASDDO ಪಟ್ಟಿಯಲ್ಲಿದೆಯೇ?

SIR ಪ್ರಕ್ರಿಯೆಯಲ್ಲಿ ಕೆಲವು ಮತದಾರರನ್ನು ASDDO ವರ್ಗಕ್ಕೆ ಸೇರಿಸಲಾಗಿದೆ. ಇದರಲ್ಲಿ:

  • Absent (A) – 15,30,449

  • Permanently Shifted (S) – 65,62,586

  • Death (D) – 16,38,600

  • Duplicate (D) – 7,07,095

  • Others (O) – 3,95,865

ನಿಮ್ಮ ಹೆಸರು ಈ ಪಟ್ಟಿಯಲ್ಲಿದ್ದರೆ ತಕ್ಷಣ BLO ಅಥವಾ ಚುನಾವಣಾ ನೋಂದಣಾಧಿಕಾರಿ (ERO) ಅವರನ್ನು ಸಂಪರ್ಕಿಸಿ ಗಣತಿ ನಮೂನೆ ಸಲ್ಲಿಸಿ ರೋಲ್‌ಬ್ಯಾಕ್ ಮಾಡಿಸಿಕೊಳ್ಳಬೇಕು. ಇಲ್ಲವಾದರೆ ನಿಮ್ಮ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಕಾಣಿಸಿಕೊಳ್ಳದೇ ಹೋಗುವ ಸಾಧ್ಯತೆ ಇದೆ.

1.08 ಕೋಟಿ ಹೆಸರು ರದ್ದಾಗುವ ಸಾಧ್ಯತೆ:

ರಾಜ್ಯದಲ್ಲಿ ಒಟ್ಟು 5,54,32,314 ಮತದಾರರಿದ್ದಾರೆ. ಇವರಲ್ಲಿ 1,08,34,595 (19.55%) ಮಂದಿಯನ್ನು ASDDO ವರ್ಗಕ್ಕೆ ಸೇರಿಸಲಾಗಿದೆ. ಉಳಿದ 4,45,97,719 ಮತದಾರರ ಹೆಸರು ಕರಡು ಪಟ್ಟಿಯಲ್ಲಿ ಮುಂದುವರಿಯಲಿದೆ.

ಸ್ಥಳಾಂತರವಾಗಿದ್ದರೆ Form-6 ಅವಕಾಶ:

ಶಾಶ್ವತವಾಗಿ ಸ್ಥಳಾಂತರಗೊಂಡಿರುವ 65.62 ಲಕ್ಷ ಮಂದಿ ಅಗತ್ಯ ದಾಖಲೆಗಳೊಂದಿಗೆ Form-6 ಸಲ್ಲಿಸಿದರೆ ಪರಿಶೀಲನೆಯ ಬಳಿಕ ಮತದಾರರ ಪಟ್ಟಿಗೆ ಮತ್ತೆ ಹೆಸರು ಸೇರಿಸಿಕೊಳ್ಳಬಹುದು. ಹೊಸ ಮತದಾರರಿಗೂ Form-6 ಮೂಲಕ ನೋಂದಣಿ ಅವಕಾಶವಿದೆ.

ಮುಂದಿನ ವೇಳಾಪಟ್ಟಿ:

  • ಆ.17: ಮನೆ-ಮನೆ ಭೇಟಿ ಹಾಗೂ ರೋಲ್‌ಬ್ಯಾಕ್ ಅಂತಿಮ ದಿನ

  • ಆ.24: ಕರಡು ಮತದಾರರ ಪಟ್ಟಿ ಪ್ರಕಟ

  • ಆ.24 ರಿಂದ ಸೆ.23: ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಕೆ

  • ಅ.27: ಅಂತಿಮ ಮತದಾರರ ಪಟ್ಟಿ ಪ್ರಕಟ

ಮತದಾರರು ತಮ್ಮ ಹೆಸರು ಯಾವ ವರ್ಗದಲ್ಲಿ ದಾಖಲಾಗಿದೆ ಎಂಬುದನ್ನು ತಕ್ಷಣ ಪರಿಶೀಲಿಸಿ, ಅಗತ್ಯವಿದ್ದರೆ ಇಂದು ಸಂಜೆ 4 ಗಂಟೆಯೊಳಗೆ ಕ್ರಮ ಕೈಗೊಳ್ಳುವುದು ಸೂಕ್ತ.

ಹನೂರು ಎನ್‌ಕೌಂಟರ್‌ ಪ್ರಕರಣ: 15 ಲಕ್ಷ ಪರಿಹಾರದ ಭರವಸೆ ಬಳಿಕ ಅಂತ್ಯಗೊಂಡ ಪ್ರತಿಭಟನೆ

0
ಚಾಮರಾಜನಗರ: ಕಾವೇರಿ ವನ್ಯಧಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟ ಪ್ರಕರಣ ಖಂಡಿಸಿ ಹನೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಕೊನೆಗೂ ಅಂತ್ಯಗೊಂಡಿದೆ.
ಮೃತರ ಕುಟುಂಬಗಳಿಗೆ ₹15 ಲಕ್ಷ ಪರಿಹಾರ ಹಾಗೂ ಸರ್ಕಾರಿ ಉದ್ಯೋಗದ ಭರವಸೆ ನೀಡಿದ ಬಳಿಕ ಪ್ರತಿಭಟನಾಕಾರರು ಹೋರಾಟ ಕೈಬಿಟ್ಟಿದ್ದಾರೆ.

ಹನೂರು ಶಾಸಕ ಎಂ.ಆರ್. ಮಂಜುನಾಥ್ ಅವರು ಮೃತರ ಕುಟುಂಬಸ್ಥರು, ಚರ್ಚ್ ಫಾದರ್ ಹಾಗೂ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಸಂಧಾನ ಸಭೆ ನಡೆಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ನಡೆಸಿದರು.

15 ಲಕ್ಷ ಪರಿಹಾರ, ಸರ್ಕಾರಿ ಉದ್ಯೋಗದ ಭರವಸೆ:

ಸಂಧಾನ ಸಭೆಯಲ್ಲಿ ಮೃತಪಟ್ಟ ಮೂವರ ಕುಟುಂಬಗಳಿಗೆ ಸರ್ಕಾರದಿಂದ ತಲಾ ₹5 ಲಕ್ಷ ಪರಿಹಾರ ಹಾಗೂ ವೈಯಕ್ತಿಕವಾಗಿ ತಲಾ ₹10 ಲಕ್ಷ ನೀಡುವುದಾಗಿ ಶಾಸಕ ಮಂಜುನಾಥ್ ಭರವಸೆ ನೀಡಿದರು. ಇದರೊಂದಿಗೆ ಪ್ರತಿ ಕುಟುಂಬಕ್ಕೂ ಒಟ್ಟು ₹15 ಲಕ್ಷ ಪರಿಹಾರ ದೊರೆಯಲಿದೆ ಎಂದು ತಿಳಿಸಿದರು.

ಇದಲ್ಲದೆ, ಮೃತರ ಅಂತ್ಯಸಂಸ್ಕಾರದ ವೆಚ್ಚವನ್ನು ಭರಿಸುವುದು, ಅವರ ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಖರ್ಚನ್ನು ನೋಡಿಕೊಳ್ಳುವುದು ಹಾಗೂ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಎನ್‌ಕೌಂಟರ್‌ನಲ್ಲಿ ಭಾಗಿಯಾಗಿರುವ ಅರಣ್ಯಾಧಿಕಾರಿಗಳ ಅಮಾನತಿಗೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಹನೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಣ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯ ವರ್ಗಾವಣೆಗೆ ಕ್ರಮ ಕೈಗೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಮಂಜುನಾಥ್ ಹೇಳಿದರು.

ಶಾಸಕರ ಭರವಸೆಯ ಬೆನ್ನಲ್ಲೇ ಪ್ರತಿಭಟನಾಕಾರರು ಹೋರಾಟವನ್ನು ಹಿಂಪಡೆದಿದ್ದು, ಹನೂರಿನಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ. ರಸ್ತೆ ತಡೆ ತೆರವಾಗಿದ್ದು, ವಾಹನ ಸಂಚಾರವೂ ಸುಗಮವಾಗಿದೆ.

ಹನೂರು ಶೂಟೌಟ್‌ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆ ಬೇಡ, ನ್ಯಾಯಾಂಗ ತನಿಖೆ ಆಗಲಿ ಎಂದ ಆರ್. ಅಶೋಕ್

0

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ಸಮೀಪ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದಾರೆ.

ಸರ್ಕಾರ ನೀಡುತ್ತಿರುವ ಮಾಹಿತಿ ಹಾಗೂ ವಿವಿಧ ಅಧಿಕಾರಿಗಳ ಹೇಳಿಕೆಗಳಲ್ಲಿ ವ್ಯತ್ಯಾಸವಿರುವುದರಿಂದ ಪ್ರಕರಣದಲ್ಲಿ ಸತ್ಯ ಹೊರಬರಬೇಕಾದರೆ ನ್ಯಾಯಾಂಗ ತನಿಖೆಯೇ ಸೂಕ್ತ ಎಂದು ಅವರು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ್, ಕಾಂಗ್ರೆಸ್ ಸರ್ಕಾರದ ಉತ್ತರಗಳು ಪರಸ್ಪರ ತಾಳೆಯಾಗುತ್ತಿಲ್ಲ. ಅರಣ್ಯ ಇಲಾಖೆ ಒಂದು ರೀತಿಯ ಹೇಳಿಕೆ ನೀಡಿದರೆ, ಸ್ಥಳೀಯ ಜನಪ್ರತಿನಿಧಿಗಳು ಮತ್ತೊಂದು ರೀತಿಯ ಮಾಹಿತಿ ನೀಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ಹೇಳಿಕೆಗಳಲ್ಲೂ ಸ್ಪಷ್ಟತೆ ಇಲ್ಲ. ಹಾಗಾದರೆ ನಿಜ ಯಾವುದು, ಯಾರ ಮಾತನ್ನು ನಂಬಬೇಕು ಎಂದು ಪ್ರಶ್ನಿಸಿದರು.

ಅರಣ್ಯ ಇಲಾಖೆ ಪ್ರಾಣಿ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದವರ ಮೇಲೆ ಕ್ರಮ ಕೈಗೊಂಡಿದ್ದೇವೆ ಎಂದು ಹೇಳುತ್ತಿದೆ. ಆದರೆ ಮೃತರ ಕುಟುಂಬಸ್ಥರು ಇದನ್ನು ನಕಲಿ ಎನ್‌ಕೌಂಟರ್ ಎಂದು ಆರೋಪಿಸುತ್ತಿದ್ದಾರೆ ಎಂದು ಅಶೋಕ್ ಹೇಳಿದರು.

ಗುಂಡಿನ ದಾಳಿ ನಡೆಸಬೇಕಾದ ಪರಿಸ್ಥಿತಿ ಇದ್ದರೂ ಮೊದಲು ಕಾಲಿಗೆ ಗುಂಡು ಹಾರಿಸುವುದು ಸಾಮಾನ್ಯ ಕ್ರಮವಾಗಿರುತ್ತದೆ. ಆದರೆ ಎದೆಗೆ ಗುಂಡು ತಗುಲಿದೆ ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ. ಈ ಕುರಿತು ಸಂಪೂರ್ಣ ತನಿಖೆ ಅಗತ್ಯ ಎಂದು ಅವರು ಒತ್ತಾಯಿಸಿದರು.

ಪ್ರಕರಣದ ಕುರಿತು ಎಸ್‌ಪಿ ಅವರೊಂದಿಗೆ ಮಾತನಾಡಿದ್ದಾಗಿ ತಿಳಿಸಿದ ಅಶೋಕ್, ಮಹಜರು ಪೂರ್ಣಗೊಳ್ಳುವ ಮೊದಲೇ ಮೃತದೇಹಗಳನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಸ್ಥಳಾಂತರ ಮಾಡಿದ್ದೇಕೆ ಎಂದು ಪ್ರಶ್ನಿಸಿದರು.

ಇದಲ್ಲದೆ, ಮೂವರ ಹಿನ್ನೆಲೆ ಕುರಿತು ಇನ್ನೂ ಸ್ಪಷ್ಟ ಮಾಹಿತಿ ಹೊರಬಂದಿಲ್ಲ. ಗುಂಡಿನ ದಾಳಿ ನಡೆಸಿದ ಅರಣ್ಯ ಸಿಬ್ಬಂದಿಯೂ ಸದ್ಯ ಸಾರ್ವಜನಿಕರ ಮುಂದೆ ಕಾಣಿಸುತ್ತಿಲ್ಲ. ಅವರು ಪೊಲೀಸರಿಗೆ ಮಾಹಿತಿ ನೀಡಿ ಕಾನೂನು ಪ್ರಕ್ರಿಯೆಗೆ ಒಳಗಾಗಬೇಕಿತ್ತು ಎಂದು ಹೇಳಿದರು.

“ಮ್ಯಾಜಿಸ್ಟ್ರೇಟ್ ತನಿಖೆ ಸಾಲದು”:

ಮುಖ್ಯಮಂತ್ರಿ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿರುವುದು ಸಾಕಾಗುವುದಿಲ್ಲ. ನ್ಯಾಯ ಸಿಗಬೇಕಾದರೆ ನ್ಯಾಯಾಂಗ ತನಿಖೆ ನಡೆಯಬೇಕು. ತನಿಖೆ ಪೂರ್ಣಗೊಳ್ಳುವವರೆಗೆ ಸಂಬಂಧಪಟ್ಟ ಸಿಬ್ಬಂದಿಯನ್ನು ಕರ್ತವ್ಯದಿಂದ ದೂರವಿಡಬೇಕು ಎಂದು ಅಶೋಕ್ ಆಗ್ರಹಿಸಿದರು.

ಮೂರು ಮಂದಿಯ ಮೇಲೆ ಗುಂಡು ಹಾರಿಸುವ ಅನಿವಾರ್ಯತೆ ನಿಜವಾಗಿಯೂ ಇತ್ತೇ? ಎಲ್ಲರ ಕೈಯಲ್ಲೂ ಆಯುಧ ಇತ್ತೇ? ಎಂಬ ಪ್ರಶ್ನೆಗಳಿಗೆ ಉತ್ತರ ಸಿಗಬೇಕು ಎಂದು ಅವರು ಹೇಳಿದರು.

ಈ ಪ್ರಕರಣದಲ್ಲಿ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಬೇಕಿತ್ತು. ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ನ್ಯಾಯ ದೊರಕುವ ಭರವಸೆ ನೀಡಬೇಕಿತ್ತು ಎಂದು ಅಶೋಕ್ ಟೀಕಿಸಿದರು.

‘ನನ್ನ ಮಗುವನ್ನು ಅಪ್ಪ-ಅಮ್ಮನಿಗೆ ಕೊಡಿ’; ಡೆತ್‌ನೋಟ್ ಬರೆದು 26 ವರ್ಷದ ಗೃಹಿಣಿ ಆತ್ಮಹತ್ಯೆ!

0

ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಗೃಹಿಣಿಯೊಬ್ಬರು ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ನಡೆದಿದೆ.

ಮೃತರನ್ನು ಮಮತಾಶ್ರೀ (26) ಎಂದು ಗುರುತಿಸಲಾಗಿದೆ. ಐದು ವರ್ಷಗಳ ಹಿಂದೆ ಮಮತಾಶ್ರೀ ಅವರು ಮೋಹನ್ ರೆಡ್ಡಿ ಅವರನ್ನು ವಿವಾಹವಾಗಿದ್ದು, ದಂಪತಿಗೆ ನಾಲ್ಕು ವರ್ಷದ ಗಂಡು ಮಗು ಇದೆ. ಅವರು ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ವಾಸವಾಗಿದ್ದರು.

ಕಳೆದ ಕೆಲವು ದಿನಗಳಿಂದ ಪತಿ-ಪತ್ನಿಯ ನಡುವೆ ವೈಮನಸ್ಸು ಹಾಗೂ ಕೌಟುಂಬಿಕ ಕಲಹ ಮುಂದುವರಿದಿದ್ದು, ಇದರಿಂದ ಮನನೊಂದ ಮಮತಾಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಡೆತ್‌ನೋಟ್‌ನಲ್ಲಿ ಏನಿದೆ?

ಮಮತಾಶ್ರೀ ಬರೆದಿದ್ದಾರೆ ಎನ್ನಲಾದ ಡೆತ್‌ನೋಟ್‌ನಲ್ಲಿ, ತಮ್ಮ ನಾಲ್ಕು ವರ್ಷದ ಮಗುವನ್ನು ತಮ್ಮ ಪೋಷಕರ ವಶಕ್ಕೆ ಒಪ್ಪಿಸಬೇಕು ಹಾಗೂ ತಮ್ಮ ಅಂತ್ಯಸಂಸ್ಕಾರದಲ್ಲಿ ಪತಿ ಭಾಗವಹಿಸಬಾರದು ಎಂದು ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.

ಈ ಸಂಬಂಧ ಮೃತೆಯ ತಂದೆ ನೀಡಿದ ದೂರಿನ ಮೇರೆಗೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವರದಕ್ಷಿಣೆ ಕಿರುಕುಳ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಹೃದಯವಿದ್ರಾವಕ ಘಟನೆ: ಈಶಾ ಆದಿಯೋಗಿ ದರ್ಶನ ಮುಗಿಸಿ ಬರುತ್ತಿದ್ದ ಯುವಕ-ಯುವತಿ ದಾರುಣ ಅಂತ್ಯ!

0

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಲಿಂಗಶೆಟ್ಟಿಪುರ ಗೇಟ್ ಬಳಿ ಲಾರಿ ಡಿಕ್ಕಿಯಾಗಿ ಬೈಕ್‌ನಲ್ಲಿ ತೆರಳುತ್ತಿದ್ದ ಯುವಕ ಮತ್ತು ಯುವತಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಮೃತರು ಉತ್ತರ ಪ್ರದೇಶ ಮೂಲದವರಾಗಿದ್ದು, ಚಿಕ್ಕಬಳ್ಳಾಪುರ ಸಮೀಪದ ಈಶಾ ಆದಿಯೋಗಿ ದರ್ಶನ ಪಡೆದು ಬೈಕ್‌ನಲ್ಲಿ ವಾಪಸ್ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಲಿಂಗಶೆಟ್ಟಿಪುರ ಗೇಟ್ ಬಳಿ ವೇಗವಾಗಿ ಬಂದ ಲಾರಿಯೊಂದು ಬೈಕ್‌ಗೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನೆ ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನ ವಿರುದ್ಧ ಮುಂದಿನ ತನಿಖೆ ಮುಂದುವರಿದಿದೆ.

ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನಲ್ಲಿ ದೂರು, ಎಫ್‌ಐಆರ್‌ಗೆ ಬಿಜೆಪಿ ಒತ್ತಾಯ

0

ಮಂಗಳೂರು: ವಂದೇ ಮಾತರಂಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನ ಉರ್ವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಈ ದೂರು ಸಲ್ಲಿಸಿದ್ದು, ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿದ್ದಾರೆ.

ದೂರು ದಾಖಲಿಸದಿದ್ದರೆ ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸುವುದಾಗಿ ವಿಕಾಸ್ ಪುತ್ತೂರು ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ನಾಯಕನ ಆರೋಪವೇನು?

ದೂರು ನೀಡಿದ ಬಳಿಕ ಮಾತನಾಡಿದ ವಿಕಾಸ್ ಪುತ್ತೂರು, ದೇಶ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಚೇರಿಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ವಂದೇ ಮಾತರಂಗೆ ಅಪಮಾನವಾಗಿದೆ ಎಂದು ಆರೋಪಿಸಿದರು.

ಧ್ವಜಾರೋಹಣ ವೇಳೆ ಸೋನಿಯಾ ಗಾಂಧಿ ಅವರು ವಂದೇ ಮಾತರಂ ಹಾಡುವ ಬಗ್ಗೆ ಸೂಚನೆ ನೀಡಿದ ಕ್ರಮ ರಾಷ್ಟ್ರದ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಅವರು ಆರೋಪಿಸಿದರು. ವಂದೇ ಮಾತರಂ ಸ್ವಾತಂತ್ರ್ಯ ಹೋರಾಟಕ್ಕೆ ಸ್ಫೂರ್ತಿ ನೀಡಿದ ಗೀತೆ ಆಗಿರುವುದರಿಂದ ಅದಕ್ಕೆ ಗೌರವ ಸಲ್ಲಿಸಬೇಕು ಎಂದು ಹೇಳಿದರು.

ಕಾನೂನು ಕ್ರಮಕ್ಕೆ ಒತ್ತಾಯ:

ರಾಷ್ಟ್ರೀಯ ಚಿಹ್ನೆಗಳು ಮತ್ತು ಸಂಕೇತಗಳಿಗೆ ಅಪಮಾನ ಮಾಡುವುದು ಕಾನೂನಿನ ಪ್ರಕಾರ ಅಪರಾಧ ಎಂದು ವಿಕಾಸ್ ಪುತ್ತೂರು ಹೇಳಿದ್ದಾರೆ. ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಸೂಕ್ತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪೊಲೀಸರು ಯಾವುದೇ ಕಾರಣಕ್ಕೂ ಎಫ್‌ಐಆರ್ ದಾಖಲಿಸದಿದ್ದರೆ ಖಾಸಗಿ ದೂರು ಸಲ್ಲಿಸಿ ಹೈಕೋರ್ಟ್ ಮೊರೆ ಹೋಗುವುದಾಗಿ ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಹಿಂದಿನಿಂದಲೂ ವಂದೇ ಮಾತರಂ ಕುರಿತು ವಿರೋಧದ ನಿಲುವು ಹೊಂದಿದೆ ಎಂದು ವಿಕಾಸ್ ಪುತ್ತೂರು ಆರೋಪಿಸಿದ್ದು, 1937ರಲ್ಲಿಯೇ ವಂದೇ ಮಾತರಂ ಅನ್ನು ಪೂರ್ಣ ಪ್ರಮಾಣದಲ್ಲಿ ಹಾಡಬಾರದು ಎಂಬ ನಿರ್ಧಾರ ಕೈಗೊಂಡಿತ್ತು ಎಂದು ಹೇಳಿದ್ದಾರೆ.

ಸದ್ಯ ಈ ಪ್ರಕರಣದಲ್ಲಿ ಪೊಲೀಸರ ಮುಂದಿನ ಕ್ರಮದತ್ತ ಗಮನ ನೆಟ್ಟಿದೆ.