Home Blog

ಕಾಂಗ್ರೆಸ್‌ಗೆ ಹೊಸ ತಲೆನೋವು; ಡಿಕೆ ಕನಸಿನ ಯೋಜನೆಗೆ ತಮ್ಮದೇ ಶಾಸಕರಿಂದ ಬಹಿರಂಗ ವಿರೋಧ!

0

ತುಮಕೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಕಾಂಗ್ರೆಸ್‌ನಲ್ಲೇ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ. ಗುಬ್ಬಿ ಕಾಂಗ್ರೆಸ್ ಶಾಸಕ ಎಸ್‌.ಆರ್‌. ಶ್ರೀನಿವಾಸ್, ಯೋಜನೆ ಜಾರಿಯಾದರೆ ಕಾಂಗ್ರೆಸ್‌ನಲ್ಲಿ ಮುಂದುವರಿಯಬೇಕೋ ಬೇಡವೋ ಯೋಚಿಸಬೇಕಾಗುತ್ತದೆ ಎಂದು ನೇರ ಎಚ್ಚರಿಕೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಈ ಹಿಂದೆ ಇದೇ ಲಿಂಕ್ ಕೆನಾಲ್ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದ ಕಾರಣ ಜೆಡಿಎಸ್ ತೊರೆದಿದ್ದೆ. ಈಗ ಮತ್ತೆ ಅದೇ ಯೋಜನೆ ಜಾರಿಗೆ ಬಂದರೆ ನನ್ನ ಮುಂದಿನ ರಾಜಕೀಯ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗುತ್ತದೆ” ಎಂದು ಹೇಳಿದರು.

ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ವೇಳೆ, ಎಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಹಾಗೂ ಡಿ.ಕೆ. ಶಿವಕುಮಾರ್ ಜಲಸಂಪನ್ಮೂಲ ಸಚಿವರಾಗಿದ್ದರು. ಆಗ ಯೋಜನೆಗೆ ಸಂಪುಟ ಅನುಮೋದನೆ ನೀಡಿದಾಗ ತಾವು ಕ್ಯಾಬಿನೆಟ್ ಸಭೆಯಲ್ಲೇ ತೀವ್ರ ವಿರೋಧ ವ್ಯಕ್ತಪಡಿಸಿ ಹೊರನಡೆದಿದ್ದೆ ಎಂದು ಅವರು ನೆನಪಿಸಿಕೊಂಡರು.

ಮುಖ್ಯಮಂತ್ರಿಗೆ ಈಗಾಗಲೇ ತಮ್ಮ ಅಭಿಪ್ರಾಯ ತಿಳಿಸಿರುವುದಾಗಿ ಹೇಳಿದ ಶ್ರೀನಿವಾಸ್, ನಾಲೆ ಮಾರ್ಗದ ಮೂಲಕ ಯೋಜನೆ ರೂಪಿಸುವಂತೆ ಸಲಹೆ ನೀಡಿದ್ದೇನೆ. ನಮ್ಮ ಮಾತಿಗೆ ಬೆಲೆ ಸಿಗುತ್ತದೆಯೇ ಎಂಬುದನ್ನು ನೋಡೋಣ ಎಂದರು.

“ಯೋಜನೆ ಆರಂಭವಾದರೆ ಸಾರ್ವಜನಿಕ ಹೋರಾಟಗಳು ಅನಿವಾರ್ಯ. ನಾನು ಕಾಂಗ್ರೆಸ್‌ನಲ್ಲಿ ಇದ್ದು ಬೀದಿಗಿಳಿದು ಪ್ರತಿಭಟನೆ ಮಾಡುವುದು ಸರಿಯಲ್ಲ. ಆದರೆ ನನ್ನ ವಿರೋಧವನ್ನು ತಲುಪಬೇಕಾದವರಿಗೆ ತಲುಪಿಸಿದ್ದೇನೆ. ಪರಿಸ್ಥಿತಿಗೆ ಅನುಗುಣವಾಗಿ ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ” ಎಂದು ಎಸ್‌.ಆರ್‌. ಶ್ರೀನಿವಾಸ್ ಸ್ಪಷ್ಟಪಡಿಸಿದರು.

ಮಳೆ ಬರುವವರೆಗೂ ಮೌನ ವ್ರತ!; ಊಟ-ನಿದ್ದೆ ತ್ಯಜಿಸಿ ಜಮೀನಿನಲ್ಲೇ ರೈತನ ಕಠಿಣ ಅನುಷ್ಠಾನ

ಗದಗ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಗದಗ ಜಿಲ್ಲೆಯಲ್ಲಿ ರೈತರ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಾಲ-ಸೋಲ ಮಾಡಿ ಬಿತ್ತನೆ ಮಾಡಿದ ಬೆಳೆಗಳು ಒಣಗಲಾರಂಭಿಸಿದ್ದು, ಸಂಕಷ್ಟಕ್ಕೀಡಾದ ರೈತರು ಈಗ ದೇವರ ಮೊರೆ ಹೋಗುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಶಿರಹಟ್ಟಿ ತಾಲೂಕಿನ ಬೂದಿಹಾಳ ಗ್ರಾಮದ ರೈತ ಭೀಮಪ್ಪ ಚಳ್ಳಿಕೇರಿ ಮಳೆ ಸುರಿಯುವವರೆಗೆ ಮೌನ ಅನುಷ್ಠಾನ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ.

ಮೈಲಾರ ದೇವರ ಆರಾಧಕರಾಗಿರುವ ಭೀಮಪ್ಪ ಚಳ್ಳಿಕೇರಿ, ಗ್ರಾಮದ ಹೊರವಲಯದ ತಮ್ಮ ಜಮೀನಿನಲ್ಲಿರುವ ಮರದ ಕೆಳಗೆ ಮೌನ ವ್ರತ ಆರಂಭಿಸಿದ್ದಾರೆ. ಊಟ, ನಿದ್ದೆ ಸೇರಿದಂತೆ ಎಲ್ಲ ಸೌಕರ್ಯಗಳನ್ನು ತ್ಯಜಿಸಿ ದೇವರ ನಾಮಸ್ಮರಣೆಯಲ್ಲಿ ತೊಡಗಿರುವ ಅವರು, ಮಳೆ ಬಂದ ಬಳಿಕವೇ ಅನುಷ್ಠಾನ ಅಂತ್ಯಗೊಳಿಸುವ ಸಂಕಲ್ಪ ಮಾಡಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ ಶೇಕಡ 50ರಷ್ಟು ರೈತರು ಹೆಸರು, ಮೆಕ್ಕೆಜೋಳ ಸೇರಿದಂತೆ ವಿವಿಧ ಬೆಳೆಗಳ ಬಿತ್ತನೆ ಪೂರ್ಣಗೊಳಿಸಿದ್ದಾರೆ. ಆದರೆ ನಿರೀಕ್ಷಿತ ಮಳೆಯಿಲ್ಲದೆ ಬೆಳೆಗಳು ಒಣಗುತ್ತಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೇ ಕಾರಣಕ್ಕೆ ಭೀಮಪ್ಪ ಅವರು ಇತರ ರೈತರೊಂದಿಗೆ ಚರ್ಚಿಸಿ ಈ ವಿಶೇಷ ಅನುಷ್ಠಾನ ಆರಂಭಿಸಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಭೀಮಪ್ಪ ಅವರ ಮೌನ ತಪಸ್ಸು ನೋಡಲು ಸುತ್ತಮುತ್ತಲಿನ ಗ್ರಾಮಗಳಿಂದ ಜನರು ಆಗಮಿಸುತ್ತಿದ್ದಾರೆ. ಮಹಿಳೆಯರು ಜಾನಪದ ಗೀತೆಗಳನ್ನು ಹಾಡಿ ಮಳೆರಾಯನನ್ನು ಪ್ರಾರ್ಥಿಸುತ್ತಿದ್ದು, ಗ್ರಾಮದ ನೂರಾರು ಜನರು ರೈತನ ಸಂಕಲ್ಪಕ್ಕೆ ಬೆಂಬಲ ಸೂಚಿಸಿದ್ದಾರೆ.

ಇದೇ ವೇಳೆ, ಮಳೆ ಕೊರತೆಯಿಂದ ಗದಗ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ ರೈತರಿಗೆ ಸರ್ಕಾರ ತಕ್ಷಣ ನೆರವು ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ವರದಕ್ಷಿಣೆ ಕಿರುಕುಳ ಆರೋಪ: ದಪ್ಪ, ಕಪ್ಪಾಗಿದ್ದಳೆಂದು ಹೆಂಡ್ತಿಯನ್ನೇ ಕೊಲೆಗೈದ ಪತಿ!

ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ಹೆಂಡತಿಯನ್ನು ಪತಿ ಕತ್ತು ಹಿಸುಕಿ ಕೊಲೆ ಮಾಡಿದ ಭೀಕರ ಘಟನೆ ನಡೆದಿದೆ.

ಮೃತ ಮಹಿಳೆಯನ್ನು ಪ್ರಿಯಾಂಕ್ ಕಮಲಾಕರ್ (29) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಬಸವರಾಜ್ ವಡ್ಡರ್ ಎಂದು ಪೊಲೀಸರು ತಿಳಿಸಿದ್ದಾರೆ.

2024 ರಲ್ಲಿ ಪ್ರಿಯಾಂಕ್‌ಳನ್ನ ಮದುವೆಯಾಗಿದ್ದ ಬಸವರಾಜ್ ಮದುವೆಯಾದ ಒಂದೇ ವರ್ಷದಲ್ಲಿ ಬಂಗಾರ ತರುವಂತೆ ಕಿರುಕುಳ ನೀಡುತಿದ್ದ. ತವರು ‌ಮನೆಯಿಂದ ಬಂಗಾರ, ಹಣ ತರುವಂತೆ ಕಿರುಕುಳ ನೀಡಿದ್ದಲ್ಲದೇ ನೀನು ದಪ್ಪ ಇದ್ದಿ, ಗರ್ಭಿಣಿ ಆಗಲ್ಲ ಅಂತ ಕೊಲೆಗೈದಿದ್ದಾನೆ.‌

ಈ ಘಟನೆ ಜೂನ್ 29ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮೃತೆಯ ಪೋಷಕರು ಈ ಮಾಹಿತಿ ತಿಳಿದು ಕಲಬುರಗಿಯಿಂದ ನವಲಗುಂದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಈ ಪ್ರಕರಣ ಸಂಬಂಧ ಬಸವರಾಜ್ ಸೇರಿದಂತೆ ರೇಣವ್ವ, ಸುಭಾಷ್ ಮತ್ತು ಸಿದ್ದರಾಮೇಶ್ ಅವರನ್ನು ಕೂಡ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಆಷಾಢ ಶುಕ್ರವಾರ: ಚಾಮುಂಡಿಬೆಟ್ಟಕ್ಕೆ ಹೊಸ ಗೈಡ್‌ಲೈನ್; ₹300 ಟಿಕೆಟ್ ರದ್ದು, VIPಗಳಿಗೆ ಮಿತಿ!

0

ಮೈಸೂರು: ಚಾಮುಂಡಿಬೆಟ್ಟದ ಆಷಾಢ ಶುಕ್ರವಾರ ಮಹೋತ್ಸವಕ್ಕೆ ಜಿಲ್ಲಾಡಳಿತ ಈ ಬಾರಿ ಕಠಿಣ ನಿಯಮ ಜಾರಿಗೊಳಿಸಿದೆ. ಸಾಮಾನ್ಯ ಭಕ್ತರಿಗೆ ತೊಂದರೆಯಾಗದಂತೆ ₹300 ವಿಶೇಷ ದರ್ಶನ ಟಿಕೆಟ್ ರದ್ದು, ಶಿಫಾರಸು ಪತ್ರದ ಮೂಲಕ ದರ್ಶನಕ್ಕೆ ಅವಕಾಶ ಇಲ್ಲ, ವಿಐಪಿಗಳಿಗೆ ನಿಗದಿತ ಸಮಯ, ಖಾಸಗಿ ವಾಹನಗಳ ಪ್ರವೇಶ ನಿಷೇಧ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಲಾಗಿದೆ.

ಜುಲೈ 17ರಿಂದ ಆರಂಭವಾಗಲಿರುವ ವಿಶೇಷ ಪೂಜೆಗಳ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಿದ್ಧತಾ ಸಭೆ ನಡೆಸಿದರು.

ಸಭೆಯಲ್ಲಿ ₹300 ದರ್ಶನ ಟಿಕೆಟ್ ವ್ಯವಸ್ಥೆಯನ್ನು ಸಂಪೂರ್ಣ ರದ್ದುಗೊಳಿಸಿ, ₹2,000 ನೇರ ದರ್ಶನ ಟಿಕೆಟ್ ಮಾತ್ರ ಮುಂದುವರಿಸಲು ತೀರ್ಮಾನಿಸಲಾಯಿತು. ರಾಜಕೀಯ ನಾಯಕರು ಅಥವಾ ಅಧಿಕಾರಿಗಳ ಶಿಫಾರಸು ಪತ್ರದ ಆಧಾರದ ಮೇಲೆ ಯಾವುದೇ ವಿಶೇಷ ಪ್ರವೇಶ ನೀಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಆಷಾಢ ಶುಕ್ರವಾರಗಳಂದು ಬೆಳಿಗ್ಗೆ 5.30ರಿಂದ 9.30ರವರೆಗೆ ಮಾತ್ರ ವಿಐಪಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಕೇವಲ ಪ್ರೋಟೋಕಾಲ್ ವ್ಯಾಪ್ತಿಯ ಗಣ್ಯರಿಗೆ ಮಾತ್ರ ಈ ಸೌಲಭ್ಯ ದೊರೆಯಲಿದ್ದು, ಉಳಿದ ಸಮಯದಲ್ಲಿ ಸಂಪೂರ್ಣವಾಗಿ ಸಾಮಾನ್ಯ ಭಕ್ತರ ದರ್ಶನಕ್ಕೆ ಆದ್ಯತೆ ನೀಡಲಾಗುತ್ತದೆ.

ಸಂಚಾರ ನಿಯಂತ್ರಣಕ್ಕಾಗಿ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಲಲಿತ ಮಹಲ್ ಪಾರ್ಕಿಂಗ್‌ನಿಂದ ಕೆಎಸ್‌ಆರ್‌ಟಿಸಿಯ ಉಚಿತ ಬಸ್ ಸೇವೆ ಮೂಲಕ ಭಕ್ತರನ್ನು ಬೆಟ್ಟಕ್ಕೆ ಕರೆದೊಯ್ಯಲಾಗುತ್ತದೆ.

ಸಭೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಕಾರ್ಯದರ್ಶಿ ರೂಪಾ ಹಾಗೂ ಡಿಸಿಪಿ ಸುಂದರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿ ಭದ್ರತೆ ಮತ್ತು ವ್ಯವಸ್ಥೆಗಳ ಕುರಿತು ಅಂತಿಮ ಸಿದ್ಧತೆ ಪರಿಶೀಲಿಸಿದರು.

‘ಆರೋಪಿಗಳನ್ನು ಗುರುತಿಸಬೇಡ’… ರೇಣುಕಾಸ್ವಾಮಿ ಕೇಸ್‌ನಲ್ಲಿ ಸಾಕ್ಷಿಗೆ ವಾಟ್ಸಾಪ್ ಬೆದರಿಕೆ! ಕೋರ್ಟ್‌ನಿಂದ ಭದ್ರತೆಗೆ ಆದೇಶ

ಬೆಂಗಳೂರು: ನಟ ದರ್ಶನ್ ಆರೋಪಿ ಆಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಹೊಸ ತಿರುವು ಸಿಕ್ಕಿದೆ. ಪ್ರಕರಣದ ಪ್ರಮುಖ ಸಾಕ್ಷಿಯೊಬ್ಬರಿಗೆ ಅಪರಿಚಿತ ವ್ಯಕ್ತಿಯಿಂದ ವಾಟ್ಸಾಪ್ ಕರೆ ಮಾಡಿ ಆರೋಪಿಗಳ ಪರವಾಗಿ ಸಾಕ್ಷ್ಯ ನೀಡುವಂತೆ ಬೆದರಿಕೆ ಹಾಕಲಾಗಿದೆ ಎಂಬ ಆರೋಪ ನ್ಯಾಯಾಲಯದಲ್ಲಿ ಕೇಳಿಬಂದಿದೆ.

ವಿಚಾರಣೆ ವೇಳೆ ಸಾಕ್ಷಿ, ಅಪರಿಚಿತ ವ್ಯಕ್ತಿಯೊಬ್ಬ ‘ಆರೋಪಿಗಳನ್ನು ಗುರುತಿಸಲು ಸಾಧ್ಯವಿಲ್ಲ ಎಂದು ಹೇಳು, ಬಾರ್‌ನ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ವಶಪಡಿಸಿಕೊಂಡರು ಎಂದು ಹೇಳು, ಅಪಹರಣ ಮಾಡಿದವರನ್ನು ಗುರುತಿಸಲಾಗುವುದಿಲ್ಲ ಎಂದು ಹೇಳು, ಪೊಲೀಸ್ ಮಹಜರಿನ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳು’ ಎಂದು ಸೂಚಿಸಿದ್ದಾನೆ ಎಂದು ನ್ಯಾಯಾಧೀಶರ ಮುಂದೆ ತಿಳಿಸಿದ್ದಾರೆ.

ಇದರ ಜೊತೆಗೆ, ತಮ್ಮ ಬಾರ್ ಬಳಿ ಅಪರಿಚಿತ ವ್ಯಕ್ತಿಗಳ ಸಂಚಾರ ಹೆಚ್ಚಾಗಿದ್ದು, ನಿರಂತರ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಸಾಕ್ಷಿ ಹೇಳಿದ್ದಾರೆ.

ಈ ಹೇಳಿಕೆಯನ್ನು ದಾಖಲಿಸಿಕೊಂಡ 59ನೇ ಸಿಸಿಎಚ್ ನ್ಯಾಯಾಲಯ, ಸಾಕ್ಷ್ಯ ತಿರುಚುವ ಯತ್ನದ ಕುರಿತು ಪ್ರತ್ಯೇಕ ಪ್ರಮಾಣಪತ್ರ ಸಲ್ಲಿಸಲು ಸೂಚನೆ ನೀಡಿದೆ. ಜೊತೆಗೆ, ಸಾಕ್ಷಿಯ ಹೇಳಿಕೆ ಪೂರ್ಣಗೊಳ್ಳುವವರೆಗೆ ಭದ್ರತೆ ಒದಗಿಸುವಂತೆ ತನಿಖಾಧಿಕಾರಿಗೆ ನಿರ್ದೇಶನ ನೀಡಿದೆ.

ಪ್ರಕರಣದಲ್ಲಿ ನಟ ದರ್ಶನ್ ಎ2 ಆರೋಪಿಯಾಗಿದ್ದು, ನ್ಯಾಯಾಲಯದಲ್ಲಿ ಸಾಕ್ಷಿಗಳ ವಿಚಾರಣೆ ಮುಂದುವರಿದಿದೆ. ಇದೇ ವೇಳೆ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದ ಹಿಂದಿರುವ ವ್ಯಕ್ತಿಗಳು ಯಾರು ಎಂಬುದನ್ನು ಪತ್ತೆಹಚ್ಚಲು ತನಿಖೆ ನಡೆಸುವ ಸಾಧ್ಯತೆ ಹೆಚ್ಚಾಗಿದೆ.

ಮೀಟರ್ ರೀಡಿಂಗ್ ಸ್ಥಗಿತ: ಜುಲೈ ಬಿಲ್ ಸರಾಸರಿ ಆಧಾರದಲ್ಲಿ ನೀಡಲು ಬೆಸ್ಕಾಂ ನಿರ್ಧಾರ!

ಬೆಂಗಳೂರು: ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜುಲೈ ತಿಂಗಳಲ್ಲಿ ಬೆಸ್ಕಾಂ ಗ್ರಾಹಕರಿಗೆ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ. ಬದಲಾಗಿ ಕಳೆದ ಮೂರು ತಿಂಗಳ ವಿದ್ಯುತ್ ಬಳಕೆಯ ಸರಾಸರಿ ಆಧಾರದ ಮೇಲೆ ಬಿಲ್ ನೀಡಲಾಗುತ್ತದೆ.

ಬೆಸ್ಕಾಂ ಪ್ರಕಟಣೆ ಪ್ರಕಾರ, ಜುಲೈ ತಿಂಗಳ ವಿದ್ಯುತ್ ಬಿಲ್ ಅನ್ನು ಕಳೆದ ಮೂರು ತಿಂಗಳ ಸರಾಸರಿ ಬಳಕೆಯನ್ನು ಆಧರಿಸಿ ಸಿದ್ಧಪಡಿಸಿ, ಗ್ರಾಹಕರ ಮೊಬೈಲ್‌ಗೆ ಎಸ್‌ಎಂಎಸ್ ಮೂಲಕ ಕಳುಹಿಸಲಾಗುತ್ತದೆ.

ಆದರೆ ಎಚ್‌ಟಿ ಗ್ರಾಹಕರು, 40 ಎಚ್‌ಪಿ ಮತ್ತು ಅದಕ್ಕಿಂತ ಹೆಚ್ಚಿನ ಲೋಡ್ ಹೊಂದಿರುವ ಎಲ್‌ಟಿ ಗ್ರಾಹಕರು, ಸೋಲಾರ್ ರೂಫ್‌ಟಾಪ್ ಬಳಕೆದಾರರು ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕ ಹೊಂದಿರುವವರಿಗೆ ಎಂದಿನಂತೆ ನೈಜ ಮೀಟರ್ ರೀಡಿಂಗ್ ಆಧಾರದ ಮೇಲೆಯೇ ಬಿಲ್ ನೀಡಲಾಗುತ್ತದೆ.

ಸರಾಸರಿ ಬಿಲ್‌ನಲ್ಲಿ ಹೆಚ್ಚು ಅಥವಾ ಕಡಿಮೆ ಮೊತ್ತ ಬಂದಿದ್ದರೆ, ಆಗಸ್ಟ್ ತಿಂಗಳಿಂದ ನೈಜ ಮೀಟರ್ ರೀಡಿಂಗ್ ಆರಂಭವಾದ ಬಳಿಕ ಅದನ್ನು ಮುಂದಿನ ಬಿಲ್‌ನಲ್ಲಿ ಹೊಂದಾಣಿಕೆ ಮಾಡಲಾಗುತ್ತದೆ ಎಂದು ಬೆಸ್ಕಾಂ ತಿಳಿಸಿದೆ.

ಗೃಹ ಜ್ಯೋತಿ ಯೋಜನೆಯ ಪರಿಶೀಲನೆಗಾಗಿ ಮನೆಗಳಿಗೆ ಬರುವ ಬೆಸ್ಕಾಂ ಸಿಬ್ಬಂದಿ ಹಾಗೂ ಮೀಟರ್ ರೀಡರ್‌ಗಳಿಗೆ ಸಾರ್ವಜನಿಕರು ಸಹಕರಿಸಬೇಕು. ಈ ವೇಳೆ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಪಾನ್ ಕಾರ್ಡ್, ಪಡಿತರ ಚೀಟಿ ಅಥವಾ ಜಾತಿ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಪರಿಶೀಲನೆಗಾಗಿ ತೋರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

ಹಿಂದೂ ವಿವಾಹಕ್ಕೆ ನೋಂದಣಿ ಮಾತ್ರ ಸಾಕಾಗುವುದಿಲ್ಲ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು

ಅಹಮದಾಬಾದ್: ಕೇವಲ ವಿವಾಹ ನೋಂದಣಿ ಮಾಡಿಕೊಂಡರೆ ಹಿಂದೂ ವಿವಾಹ ಕಾನೂನುಬದ್ಧವಾಗುವುದಿಲ್ಲ. ಹಿಂದೂ ಸಂಪ್ರದಾಯದ ಪ್ರಕಾರ ಸಪ್ತಪದಿ ಸೇರಿದಂತೆ ಅಗತ್ಯ ವಿಧಿ-ವಿಧಾನಗಳು ನಡೆದಾಗ ಮಾತ್ರ ವಿವಾಹಕ್ಕೆ ಕಾನೂನು ಮಾನ್ಯತೆ ಸಿಗುತ್ತದೆ ಎಂದು ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಜೂನ್ 23ರಂದು ನ್ಯಾಯಮೂರ್ತಿಗಳಾದ ಇಲೇಶ್ ವೋರಾ ಮತ್ತು ಆರ್.ಟಿ. ವಚ್ಛಾನಿ ಅವರ ವಿಭಾಗೀಯ ಪೀಠ ಈ ತೀರ್ಪು ನೀಡಿದೆ. ಹಿಂದೂ ವಿವಾಹವು ಕೇವಲ ಔಪಚಾರಿಕ ಕಾರ್ಯಕ್ರಮವಲ್ಲ, ಅದು ಧಾರ್ಮಿಕ ಸಂಸ್ಕಾರ ಮತ್ತು ಪವಿತ್ರ ಬಂಧವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಈ ಪ್ರಕರಣದಲ್ಲಿ ಬ್ರಿಟನ್‌ನಲ್ಲಿ ನೆಲೆಸಿರುವ ಕೌಶಲ್ ಸೋನಾರ್ ಎಂಬುವರು, ಅಹಮದಾಬಾದ್‌ನ ಮಹಿಳೆಯೊಂದಿಗೆ ತಮ್ಮ ಹೆಸರಿನಲ್ಲಿ ನಡೆದಿರುವ ವಿವಾಹವನ್ನು ಅಮಾನ್ಯ ಎಂದು ಘೋಷಿಸುವಂತೆ ನ್ಯಾಯಾಲಯದ ಮೊರೆ ಹೋಗಿದ್ದರು.

ತಮ್ಮ ಪೋಷಕರಿಗೆ ವಿವಾಹ ಪ್ರಮಾಣಪತ್ರ ತೋರಿಸಿದ ಬಳಿಕವೇ ಈ ವಿಚಾರ ತಿಳಿಯಿತು. ತಮ್ಮ ಒಪ್ಪಿಗೆಯಿಲ್ಲದೆ ದಾಖಲೆಗಳಲ್ಲಿ ಸಹಿ ಪಡೆಯಲಾಗಿದೆ. ಯಾವುದೇ ಹಿಂದೂ ಸಂಪ್ರದಾಯದ ವಿವಾಹ ವಿಧಿ-ವಿಧಾನಗಳು ನಡೆದಿಲ್ಲ ಹಾಗೂ ಇಬ್ಬರೂ ಪತಿ-ಪತ್ನಿಯಾಗಿ ಎಂದಿಗೂ ಒಟ್ಟಿಗೆ ವಾಸಿಸಿಲ್ಲ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಪ್ರಕರಣದ ವಿಚಾರಣೆ ವೇಳೆ ಮಹಿಳೆಯೂ ಸಹ ಕುಟುಂಬ ನ್ಯಾಯಾಲಯದ ಮುಂದೆ ಯಾವುದೇ ವಿವಾಹ ವಿಧಿ-ವಿಧಾನಗಳು ನಡೆದಿಲ್ಲ ಹಾಗೂ ಇಬ್ಬರೂ ಪತಿ-ಪತ್ನಿಯಾಗಿ ಬದುಕಿಲ್ಲ ಎಂದು ಒಪ್ಪಿಕೊಂಡಿದ್ದರು. ಆದರೂ ಅರ್ಜಿಯನ್ನು ತಿರಸ್ಕರಿಸಿದ್ದ ಕುಟುಂಬ ನ್ಯಾಯಾಲಯದ ಆದೇಶ ಸರಿಯಲ್ಲ ಎಂದು ಹೈಕೋರ್ಟ್ ಹೇಳಿದೆ.

ಹಿಂದೂ ವಿವಾಹ ಕಾಯ್ದೆ-1955ರ ಸೆಕ್ಷನ್ 7 ಅನ್ನು ಉಲ್ಲೇಖಿಸಿದ ನ್ಯಾಯಾಲಯ, ಹಿಂದೂ ವಿವಾಹವು ಸಂಪ್ರದಾಯದ ಪ್ರಕಾರ ನಡೆಯಬೇಕು. ವಿಶೇಷವಾಗಿ ಸಪ್ತಪದಿ ಹಿಂದೂ ವಿವಾಹದ ಅತ್ಯಂತ ಪ್ರಮುಖ ವಿಧಿಯಾಗಿದ್ದು, ಅದು ನೆರವೇರಿದಾಗ ಮಾತ್ರ ವಿವಾಹಕ್ಕೆ ಧಾರ್ಮಿಕ, ಸಾಮಾಜಿಕ ಮತ್ತು ಕಾನೂನುಬದ್ಧ ಮಾನ್ಯತೆ ದೊರೆಯುತ್ತದೆ ಎಂದು ಸ್ಪಷ್ಟಪಡಿಸಿದೆ.

ಹಿಂದೂ ವಿವಾಹವು ಕೇವಲ ಆಚರಣೆ ಅಥವಾ ಔತಣಕೂಟವಲ್ಲ. ಅದು ಪರಸ್ಪರ ಗೌರವ, ನಂಬಿಕೆ ಮತ್ತು ಜೀವನಪರ್ಯಂತದ ಬಾಂಧವ್ಯದ ಮೇಲೆ ನಿರ್ಮಾಣವಾಗುವ ಪವಿತ್ರ ಸಂಬಂಧವಾಗಿದೆ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ತಿಳಿಸಿದೆ.

ಫುಟ್‌ಪಾತ್ ಅತಿಕ್ರಮಣ ಬಿಡಿ, ಇಲ್ಲದಿದ್ದರೆ ಕಠಿಣ ಕ್ರಮ: ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ

ಬೆಂಗಳೂರು: ನಗರದ ಫುಟ್‌ಪಾತ್‌ಗಳನ್ನು ಒತ್ತುವರಿ ಮಾಡಿಕೊಂಡಿರುವವರು ಸ್ವಯಂಪ್ರೇರಿತವಾಗಿ ತೆರವುಗೊಳಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ನಡೆಯುತ್ತಿರುವ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ಮಾತನಾಡಿದ ಅವರು, ಪಾದಚಾರಿ ಮಾರ್ಗಗಳಲ್ಲಿ ಸುರಕ್ಷಿತವಾಗಿ ಸಂಚರಿಸುವುದು ಪ್ರತಿಯೊಬ್ಬ ನಾಗರಿಕನ ಹಕ್ಕು. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನಗರದಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆಯನ್ನು ಕಟ್ಟುನಿಟ್ಟಾಗಿ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ವ್ಯಾಪಾರಿಗಳು ತಮ್ಮ ಅಂಗಡಿಗಳ ವ್ಯಾಪ್ತಿಯಲ್ಲೇ ವ್ಯಾಪಾರ ಮಾಡಬೇಕು. ಆದರೆ ಸಾರ್ವಜನಿಕರಿಗಾಗಿ ನಿರ್ಮಿಸಿರುವ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿ ವ್ಯಾಪಾರ ನಡೆಸುವುದು ಕಾನೂನುಬಾಹಿರ. ಆದ್ದರಿಂದ ಒತ್ತುವರಿ ಮಾಡಿಕೊಂಡಿರುವವರು ತಕ್ಷಣವೇ ಅದನ್ನು ತೆರವುಗೊಳಿಸಬೇಕು ಎಂದು ಸಚಿವರು ಹೇಳಿದರು.

ನಗರದಲ್ಲಿ ಅನೇಕ ಫುಟ್‌ಪಾತ್‌ಗಳು ಅಂಗಡಿಗಳು, ವಾಹನ ನಿಲುಗಡೆ ಹಾಗೂ ಇತರೆ ಅತಿಕ್ರಮಣಗಳಿಂದ ಸಾರ್ವಜನಿಕರಿಗೆ ಬಳಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಪಾದಚಾರಿಗಳು ರಸ್ತೆಯಲ್ಲೇ ನಡೆದು ಅಪಘಾತಗಳಿಗೆ ತುತ್ತಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ವರ್ಷಕ್ಕೆ ಸರಾಸರಿ 300 ಮಂದಿ ಪಾದಚಾರಿಗಳು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಫುಟ್‌ಪಾತ್‌ಗಳನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಮುಕ್ತಗೊಳಿಸುವಂತೆ ನಾಗರಿಕರಿಂದ ಸಾಕಷ್ಟು ಬೇಡಿಕೆ ಬಂದ ಹಿನ್ನೆಲೆಯಲ್ಲಿ ಈ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.

ಸುಪ್ರೀಂ ಕೋರ್ಟ್ ಆದೇಶದಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (GBA) ಹಾಗೂ ಪೊಲೀಸರು ಜಂಟಿಯಾಗಿ ನಗರದ ವಿವಿಧ ಭಾಗಗಳಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮೊದಲ ಹಂತದಲ್ಲಿ ಹೆಚ್ಚು ಜನಸಂದಣಿ ಇರುವ ಪ್ರಮುಖ ರಸ್ತೆಗಳಲ್ಲಿ ಈ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ತಿಳಿಸಿದರು.

ನಾಗುರಿ ದುರಂತದ ಹಿಂದೆ ನಿರ್ಲಕ್ಷ್ಯ? ಮನೆ ಮೇಲೆ ಕುಸಿದ ಕಾಂಪೌಂಡ್ ಗೋಡೆ; ಮೂವರು ಬಲಿ: 5 ಲಕ್ಷ ಪರಿಹಾರ

0

ಮಂಗಳೂರು: ಮಂಗಳೂರಿನ ನಾಗುರಿಯಲ್ಲಿ ಸಂಭವಿಸಿದ ಭೂಕುಸಿತ ದುರಂತದಲ್ಲಿ ಇಬ್ಬರು ಪುಟ್ಟ ಬಾಲಕಿಯರು ಸೇರಿ ಮೂವರು ಮೃತಪಟ್ಟ ಪ್ರಕರಣದಲ್ಲಿ ಭಾರಿ ನಿರ್ಲಕ್ಷ್ಯದ ಶಂಕೆ ವ್ಯಕ್ತವಾಗಿದೆ. ಮನೆಯ ಮೇಲೆ ಕುಸಿದ ಕಾಂಪೌಂಡ್ ಗೋಡೆಯೇ ದುರಂತಕ್ಕೆ ಕಾರಣವಾಗಿರಬಹುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಮನೆಯ ಹಿಂಭಾಗದ ಕಾಂಪೌಂಡ್ ಗೋಡೆ ಮಳೆ ನೀರಿನ ಒತ್ತಡಕ್ಕೆ ಕುಸಿದು ನೇರವಾಗಿ ಮನೆಯ ಮೇಲೆ ಬಿದ್ದಿದೆ. ಪರಿಣಾಮ ಮನೆಯೊಳಗಿದ್ದ ಆರು ಮಂದಿ ಮಣ್ಣಿನಡಿ ಸಿಲುಕಿಕೊಂಡರು. ತುರ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಓರ್ವ ಪುರುಷ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ರಕ್ಷಿಸಲಾಗಿದ್ದರೂ, ಓರ್ವ ಮಹಿಳೆ ಹಾಗೂ ನಾಲ್ಕು ವರ್ಷದ ಪರಿ, ಎಂಟು ವರ್ಷದ ಅನಾಮಿಕ ಮೃತಪಟ್ಟಿದ್ದಾರೆ.

ಪರಿ ಮನೆಯ ಮುಂದೆ ಆಟವಾಡುತ್ತಿದ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಂದಮ್ಮನ ದುರಂತ ಸಾವಿಗೆ ಸಾರ್ವಜನಿಕರು ಕಂಬನಿ ಮಿಡಿಯುತ್ತಿದ್ದಾರೆ.

ದುರಂತದ ಬೆನ್ನಲ್ಲೇ ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಕಾಂಪೌಂಡ್ ಗೋಡೆಯ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ನಡೆದಿದೆಯೇ ಎಂಬ ಬಗ್ಗೆ ತಾಂತ್ರಿಕ ತಜ್ಞರಿಂದ ಪರಿಶೀಲನೆ ಆರಂಭಿಸಲಾಗಿದೆ. ಅನಧಿಕೃತ ಗುಡ್ಡ ಅಗೆತ ಅಥವಾ ಕಾಮಗಾರಿ ದೋಷ ಪತ್ತೆಯಾದರೆ ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಜಿಲ್ಲಾಧಿಕಾರಿ ನಿಧಿಯಿಂದ ತಲಾ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದ್ದು, ಪ್ರಕರಣದ ಎಲ್ಲ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.

ಆಷಾಢ ಮಾಸ! ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಗಮನಕ್ಕೆ: ಈ ದಿನಗಳಂದು ಖಾಸಗಿ ವಾಹನಗಳ ಪ್ರವೇಶ ನಿರ್ಬಂಧ

ಮೈಸೂರು: ಮೈಸೂರಿನ ಪ್ರಸಿದ್ಧ ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಲಕ್ಷಾಂತರ ಭಕ್ತರು ದೇವಿ ಚಾಮುಂಡೇಶ್ವರಿಯ ದರ್ಶನಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ.

ಈ ವರ್ಷ ಜುಲೈ 17ರಿಂದ ಆಗಸ್ಟ್ 7ರವರೆಗೆ ನಡೆಯುವ ವಿಶೇಷ ಪೂಜಾ ದಿನಗಳಿಗೆ ಭಕ್ತರಿಗೆ ಸುಗಮ ದರ್ಶನ ಕಲ್ಪಿಸಲು ಅಧಿಕಾರಿಗಳು ಸಭೆ ನಡೆಸಿ ಸಿದ್ಧತೆಗಳನ್ನು ಅಂತಿಮಗೊಳಿಸಿದ್ದಾರೆ.

ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪಾರ್ಕಿಂಗ್, ದರ್ಶನ ವ್ಯವಸ್ಥೆ ಹಾಗೂ ಮೂಲ ಸೌಕರ್ಯಗಳ ಬಗ್ಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಹಾಗೂ ಇತರ ಅಧಿಕಾರಿಗಳು ಭಾಗವಹಿಸಿದ್ದರು.

ಈ ಕುರಿತು ಮಾತನಾಡಿದ ಸಚಿವರು, ಕಳೆದ ಬಾರಿ ವಿಐಪಿಗಳ ಸಂಚಾರದಿಂದ ಸಾಮಾನ್ಯ ಭಕ್ತರಿಗೆ ತೊಂದರೆ ಆಗಿದ್ದ ಹಿನ್ನೆಲೆಯಲ್ಲಿ ಈ ಬಾರಿ ವ್ಯವಸ್ಥೆ ಸುಧಾರಣೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮುಖ್ಯವಾಗಿ ಆಷಾಢ ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ಚಾಮುಂಡಿಬೆಟ್ಟದ ಮೇಲ್ಭಾಗಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶ ನಿರ್ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಭಕ್ತರು ತಮ್ಮ ವಾಹನಗಳನ್ನು ಲಲಿತ ಮಹಲ್ ಬಳಿ ನಿಲ್ಲಿಸಬೇಕಾಗಿದ್ದು, ಅಲ್ಲಿಂದ ಚಾಮುಂಡಿಬೆಟ್ಟಕ್ಕೆ ಕೆಎಸ್‌ಆರ್‌ಟಿಸಿ ಬಸ್‌ಗಳ ಮೂಲಕ ಸಾಗುವ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.