ಮಂಗಳೂರು: ಅಕ್ರಮವಾಗಿ ಭಾರತಕ್ಕೆ ನುಸುಳಿ ಮಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ 11 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದು, ನಾಲ್ವರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳದ ಮೇಲೆ ದಾಳಿ ನಡೆಸಿದಾಗ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗಳು ಪತ್ತೆಯಾಗಿದ್ದಾರೆ. ಬಂಧಿತರನ್ನು ಎಂ.ಡಿ. ಕೌಸರ್ ಅಲಿ, ಎಂ.ಡಿ. ನೂರ್ ಅಮೀನ್, ಎಂ.ಡಿ. ನಾಹಿದುಲ್ ಇಸ್ಲಾಂ, ಹುಮಾಯೂನ್ ಕಬೀರ್, ರೊಮ್ಜಾನ್ ಅಲಿ, ಅಬ್ದುಲ್ ರಹಮಾನ್ ರೊಯೆಲ್ ಹಾಗೂ ನೋಯಾನ್ ಎಂದು ಗುರುತಿಸಲಾಗಿದೆ. ನಾಲ್ವರು ಅಪ್ರಾಪ್ತರ ವಿರುದ್ಧ ಅಗತ್ಯ ಕಾನೂನು ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ.
ಪಶ್ಚಿಮ ಬಂಗಾಳದ ನಕಲಿ ವಿಳಾಸ ಬಳಕೆ:
ಆರೋಪಿಗಳು ಅಕ್ರಮವಾಗಿ ಭಾರತ ಪ್ರವೇಶಿಸಿ, ಪಶ್ಚಿಮ ಬಂಗಾಳದ ನಕಲಿ ವಿಳಾಸಗಳನ್ನು ಬಳಸಿಕೊಂಡು ಮಂಗಳೂರಿಗೆ ಬಂದಿದ್ದರು ಎನ್ನಲಾಗಿದೆ. ಬಳಿಕ ಕಟ್ಟಡ ನಿರ್ಮಾಣ ಕಾಮಗಾರಿಗಳಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮೂಲದ ಏಜೆಂಟ್ ಒಬ್ಬರ ವಿರುದ್ಧ ಉರ್ವಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಬಾಂಗ್ಲಾದೇಶದ ಗುರುತಿನ ಚೀಟಿ ವಶ:
ಕಾರ್ಯಾಚರಣೆ ವೇಳೆ ಆರೋಪಿಗಳ ಬಳಿಯಿಂದ ಬಾಂಗ್ಲಾದೇಶದ ರಾಷ್ಟ್ರೀಯ ಗುರುತಿನ ಚೀಟಿ, ಜನನ ಪ್ರಮಾಣಪತ್ರ ಹಾಗೂ ಕುಟುಂಬಕ್ಕೆ ಸಂಬಂಧಿಸಿದ ಇತರ ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಾಖಲೆಗಳ ಆಧಾರದ ಮೇಲೆ ಬಂಧಿತರು ಬಾಂಗ್ಲಾದೇಶದ ನಿವಾಸಿಗಳೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.
ಇತ್ತೀಚೆಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲೂ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಪೊಲೀಸರು ಪತ್ತೆಹಚ್ಚಿದ್ದರು. ಇದೀಗ ಉರ್ವಾದಲ್ಲಿ ಮತ್ತೆ 11 ಮಂದಿ ಪತ್ತೆಯಾಗಿರುವುದು ಅಕ್ರಮ ವಲಸೆ ಜಾಲದ ಕುರಿತು ಅನುಮಾನ ಮೂಡಿಸಿದೆ.
ಪ್ರಕರಣದ ವರದಿಯನ್ನು ಬೆಂಗಳೂರಿನ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ (FRRO) ಸಲ್ಲಿಸಲಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ. ಅಕ್ರಮ ವಲಸೆ ಜಾಲದಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳ ಬಗ್ಗೆಯೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.