ಐಪಿಎಲ್ ಅಂಗಳದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಪಂದ್ಯ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ.
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ತಂಡದ ಡಿಜೆ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿ ಸಿಎಸ್ಕೆ ಮ್ಯಾನೇಜ್ಮೆಂಟ್ ಬಿಸಿಸಿಐಗೆ ಅಧಿಕೃತ ದೂರು ಸಲ್ಲಿಸಿದೆ.
ಏಪ್ರಿಲ್ 5ರಂದು ನಡೆದ ಪಂದ್ಯದಲ್ಲಿ ಸಿಎಸ್ಕೆ ಆಟಗಾರರು ಔಟಾದಾಗ “ದೋಸೆ, ಇಡ್ಲಿ, ಸಾಂಬಾರ್, ಚಟ್ನಿ…” ಎಂಬ ಹಾಡನ್ನು ಡಿಜೆ ಪದೇ ಪದೇ ಪ್ಲೇ ಮಾಡಿದ್ದಾಗಿ ಆರೋಪಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಹಾಡು ದಕ್ಷಿಣ ಭಾರತೀಯರನ್ನು, ವಿಶೇಷವಾಗಿ ತಮಿಳು ಜನರನ್ನು ಅಣಕಿಸಲು ಬಳಸಲಾಗುತ್ತದೆ ಎನ್ನಲಾಗಿದ್ದು, ಇದು ಸಿಎಸ್ಕೆ ತಂಡದ ಅಸಮಾಧಾನಕ್ಕೆ ಕಾರಣವಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಸಿಎಸ್ಕೆ ಮ್ಯಾನೇಜಿಂಗ್ ಡೈರೆಕ್ಟರ್ ಕಾಶಿ ವಿಶ್ವನಾಥನ್, ಆಟಗಾರರ ಹಾಗೂ ಅಭಿಮಾನಿಗಳ ಗೌರವಕ್ಕೆ ಧಕ್ಕೆ ಉಂಟುಮಾಡುವ ರೀತಿಯ ವರ್ತನೆ ಕ್ರೀಡಾ ಮನೋಭಾವಕ್ಕೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. ಅಲ್ಲದೇ, ಆಟಗಾರರು ಪೆವಿಲಿಯನ್ಗೆ ಹಿಂತಿರುಗುವ ವೇಳೆ ಡಿಜೆ ಮೈಕ್ನಲ್ಲಿ ಆಕ್ಷೇಪಾರ್ಹ ಕಾಮೆಂಟ್ಗಳನ್ನು ಮಾಡಿರುವುದಾಗಿ ಆರೋಪಿಸಿದ್ದಾರೆ.
“ತವರು ತಂಡವನ್ನು ಬೆಂಬಲಿಸುವುದು ಸರಿ, ಆದರೆ ಎದುರಾಳಿ ತಂಡವನ್ನು ಅವಮಾನಿಸುವುದು ತಪ್ಪು” ಎಂದು ಸಿಎಸ್ಕೆ ಸ್ಪಷ್ಟಪಡಿಸಿದೆ. ಕಳೆದ ಸೀಸನ್ನಲ್ಲಿಯೂ ಇದೇ ರೀತಿಯ ಘಟನೆಗಳ ಹಿನ್ನೆಲೆ ಇರುವುದರಿಂದ, ಈ ವಿವಾದ ಮತ್ತಷ್ಟು ತೀವ್ರವಾಗಿದೆ.
ಈ ದೂರನ್ನು ಬಿಸಿಸಿಐ ಗಂಭೀರವಾಗಿ ಪರಿಗಣಿಸಿದ್ದು, ಕ್ರೀಡಾಂಗಣಗಳಲ್ಲಿ ಮನರಂಜನೆಯ ಹೆಸರಿನಲ್ಲಿ ಯಾವುದೇ ಪ್ರಾದೇಶಿಕ ಅಥವಾ ಅವಹೇಳನಕಾರಿ ಅಂಶಗಳು ನಡೆಯದಂತೆ ಹೊಸ ಮಾರ್ಗಸೂಚಿಗಳನ್ನು ತರಲು ಚಿಂತನೆ ನಡೆಸುತ್ತಿದೆ. ಮುಂದಿನ ಪಂದ್ಯಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

