Home Blog

ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಯೋಗಾಭ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕೊಲೆ ಪ್ರಕರಣದ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಹಾಗೂ ಸಹ-ಆರೋಪಿಗಳು ಯೋಗಾಭ್ಯಾಸದಲ್ಲಿ ಭಾಗವಹಿಸಿ ಗಮನ ಸೆಳೆದಿದ್ದಾರೆ.

ಕಾರಾಗೃಹದಲ್ಲಿರುವ ಎಲ್ಲಾ ಕೈದಿಗಳಿಗಾಗಿ ಸಾಮೂಹಿಕ ಯೋಗಾಭ್ಯಾಸವನ್ನು ಹಮ್ಮಿಕೊಳ್ಳಲಾಗಿತ್ತು. ಆರಂಭದಲ್ಲಿ ತಮಗೆ ತೀವ್ರ ಬೆನ್ನುನೋವಿನ ಸಮಸ್ಯೆ ಇರುವುದಾಗಿ ತಿಳಿಸಿದ ನಟ ದರ್ಶನ್, ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಿಂದೇಟು ಹಾಕಿದ್ದರು.

ಈ ವಿಷಯ ತಿಳಿದ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಮಹಾನಿರ್ದೇಶಕ (ಡಿಜಿ) ಅಲೋಕ್ ಕುಮಾರ್ ಅವರು ದರ್ಶನ್ ಅವರನ್ನು ಕರೆಸಿ ಮಾತುಕತೆ ನಡೆಸಿದರು. “ಬೆನ್ನುನೋವಿನ ಸಮಸ್ಯೆಗೆ ಯೋಗ ಸಹಕಾರಿ. ಆರೋಗ್ಯ ಸುಧಾರಣೆಗೆ ಯೋಗಾಭ್ಯಾಸ ಅತ್ಯಂತ ಉಪಯುಕ್ತ” ಎಂದು ಮನವರಿಕೆ ಮಾಡಿ ಯೋಗದಲ್ಲಿ ಭಾಗವಹಿಸುವಂತೆ ಸಲಹೆ ನೀಡಿದರು.

ಡಿಜಿ ಅವರ ಸಲಹೆಯ ಬಳಿಕ ದರ್ಶನ್ ಯೋಗಾಭ್ಯಾಸಕ್ಕೆ ಒಪ್ಪಿಗೆ ಸೂಚಿಸಿದರು. ಆದರೆ ಜೈಲಿನ ಮುಖ್ಯ ಮೈದಾನದಲ್ಲಿ ನಡೆದ ಸಾಮೂಹಿಕ ಯೋಗದಲ್ಲಿ ಪಾಲ್ಗೊಳ್ಳದೆ, ತಮ್ಮ ಬ್ಯಾರಕ್‌ನ ಕಾರಿಡಾರ್‌ನಲ್ಲೇ ಸಹ-ಆರೋಪಿಗಳೊಂದಿಗೆ ಸುಮಾರು ಒಂದು ಗಂಟೆ ಯೋಗಾಭ್ಯಾಸ ನಡೆಸಿದರು.

ಈ ವೇಳೆ ದರ್ಶನ್ ಪ್ರಾಣಾಯಾಮ, ದೀರ್ಘದಂಡ ನಮಸ್ಕಾರ ಹಾಗೂ ಶವಾಸನ ಸೇರಿದಂತೆ ವಿವಿಧ ಯೋಗಾಸನಗಳನ್ನು ಅಭ್ಯಾಸ ಮಾಡಿದರು. ಯೋಗಾಭ್ಯಾಸ ಪೂರ್ಣಗೊಂಡ ಬಳಿಕ ದರ್ಶನ್ ಹಾಗೂ ಸಹ-ಆರೋಪಿಗಳು ತಮ್ಮ ಬ್ಯಾರಕ್‌ಗಳಿಗೆ ಮರಳಿದರು.

ಇದೇ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಪವಿತ್ರಾ ಗೌಡ ಅವರು ಮಹಿಳಾ ಕೈದಿಗಳ ವಿಭಾಗದಲ್ಲಿ ಆಯೋಜಿಸಿದ್ದ ಸಾಮೂಹಿಕ ಯೋಗಾಭ್ಯಾಸದಲ್ಲಿ ಭಾಗವಹಿಸಿದರು. ಇತರ ಮಹಿಳಾ ಕೈದಿಗಳೊಂದಿಗೆ ಸಾಲಿನಲ್ಲಿ ಕುಳಿತು ಯೋಗ ಮತ್ತು ಧ್ಯಾನ ನಡೆಸಿದರು.

ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ: ತಕ್ಷಣವೇ ನಿಯಂತ್ರಣಕ್ಕೆ ತಂದ ಅಗ್ನಿಶಾಮಕ ಸಿಬ್ಬಂದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ನಾಗಸಂದ್ರ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಗುರುವಾರ ಮಧ್ಯಾಹ್ನ ಸಣ್ಣ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಿಂದ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಸ್ಪಷ್ಟಪಡಿಸಿದೆ.

ಬಿಎಂಆರ್‌ಸಿಎಲ್ ಬಿಡುಗಡೆ ಮಾಡಿದ ಮಾಧ್ಯಮ ಪ್ರಕಟಣೆಯ ಪ್ರಕಾರ, ಮಧ್ಯಾಹ್ನ ಸುಮಾರು 1.30 ಗಂಟೆ ವೇಳೆಗೆ ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ (Emergency Exit) ಪ್ರದೇಶದ ಸಮೀಪ ಅಳವಡಿಸಲಾಗಿದ್ದ ಸೂಚನಾ ಫಲಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಮಾಹಿತಿ ದೊರೆಯುತ್ತಿದ್ದಂತೆಯೇ ಮೆಟ್ರೋ ಕಾರ್ಯಾಚರಣೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ತಂಡ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಕೆಲವೇ ಕ್ಷಣಗಳಲ್ಲಿ ನಂದಿಸಿದ್ದಾರೆ. ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಯಾವುದೇ ರೀತಿಯ ಅನಾಹುತ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಅಗ್ನಿ ಅವಘಡದ ಪರಿಣಾಮ ನಮ್ಮ ಮೆಟ್ರೋ ರೈಲು ಸಂಚಾರ ಸೇವೆಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಹಸಿರು ಮಾರ್ಗದ ಮಾದಾವರ–ಸಿಲ್ಕ್ ಇನ್‌ಸ್ಟಿಟ್ಯೂಟ್ ಮಾರ್ಗ ಸೇರಿದಂತೆ ಎಲ್ಲಾ ಮೆಟ್ರೋ ಸೇವೆಗಳು ಎಂದಿನಂತೆ ಸುಗಮವಾಗಿ ಸಂಚರಿಸುತ್ತಿವೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

30 ಕೋಟಿ ಕಾಂಟ್ರಾಕ್ಟ್ ಆಮಿಷ; ಉದ್ಯಮಿಗೆ ₹2.66 ಕೋಟಿ ವಂಚನೆ ಮಾಡಿದ ಆ್ಯಕ್ಸಿಸ್ ಬ್ಯಾಂಕ್ ಮ್ಯಾನೇಜರ್ ಅರೆಸ್ಟ್

0

ನೆಲಮಂಗಲ: ಕೈತುಂಬಾ ಸಂಬಳ, ಸಮಾಜದಲ್ಲಿ ಗೌರವಾನ್ವಿತ ಹುದ್ದೆ ಇದ್ದರೂ ದುರಾಸೆಗೆ ಬಿದ್ದು ಉದ್ಯಮಿಯೊಬ್ಬರಿಗೆ ₹2.66 ಕೋಟಿ ವಂಚನೆ ಮಾಡಿದ ಆ್ಯಕ್ಸಿಸ್ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಸೇರಿ ಮೂವರು ಆರೋಪಿಗಳನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬೆಂಗಳೂರಿನ ಬಾಗಲಗುಂಟೆಯ ಆ್ಯಕ್ಸಿಸ್ ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ವಿನೋದ್ ಕುಮಾರ್, ಅರುಣ್ ಕುಮಾರ್ ಹಾಗೂ ಕಿರಣ್ ಎಂದು ಗುರುತಿಸಲಾಗಿದೆ.

ತನಿಖೆ ಪ್ರಕಾರ, ಪ್ರಮುಖ ಆರೋಪಿ ವಿನೋದ್ ಕುಮಾರ್ ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ಶಾಖೆಯಲ್ಲೇ ದೊಡ್ಡ ಪ್ರಮಾಣದ ವಹಿವಾಟು ನಡೆಸುತ್ತಿದ್ದ ಸುಬ್ರಮಣಿ ಎಂಬ ಉದ್ಯಮಿಯನ್ನು ಗುರಿಯಾಗಿಸಿಕೊಂಡಿದ್ದ. ಟ್ರಾನ್ಸ್‌ಪೋರ್ಟ್ ಹಾಗೂ ಮ್ಯಾನ್‌ಪವರ್ ಏಜೆನ್ಸಿ ನಡೆಸುತ್ತಿದ್ದ ಸುಬ್ರಮಣಿ ಅವರ ಖಾತೆಯಲ್ಲಿ ತಿಂಗಳಿಗೆ ₹10 ಕೋಟಿಗೂ ಅಧಿಕ ವಹಿವಾಟು ನಡೆಯುತ್ತಿತ್ತು. ಇದನ್ನೇ ಗಮನಿಸಿ ಆರೋಪಿ ವಂಚನೆಗೆ ಸಂಚು ರೂಪಿಸಿದ್ದಾನೆ.

ವಿನೋದ್ ಕುಮಾರ್ ಬೇರೆಯವರ ಹೆಸರಿನಲ್ಲಿ ನಕಲಿ ಸಿಮ್ ಕಾರ್ಡ್ ಪಡೆದು, ಇಬ್ಬರು ಅಮಾಯಕ ಕೂಲಿ ಕಾರ್ಮಿಕರ ಹೆಸರಿನಲ್ಲಿ ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದಿದ್ದಾನೆ ಎನ್ನಲಾಗಿದೆ. ಬಳಿಕ ಉದ್ಯಮಿ ಸುಬ್ರಮಣಿ ಅವರಿಗೆ ವಾಟ್ಸಾಪ್ ಕರೆ ಮಾಡಿ, ತನ್ನ ಪ್ರಭಾವ ಬಳಸಿ ಸುಮಾರು ₹30 ಕೋಟಿ ಮೌಲ್ಯದ ಬಿಸಿನೆಸ್ ಕಾಂಟ್ರಾಕ್ಟ್ ಕೊಡಿಸುವುದಾಗಿ ನಂಬಿಸಿದ್ದಾನೆ.

ಇದಕ್ಕೆ ಪ್ರತಿಯಾಗಿ ಒಪ್ಪಂದದ ಮೊತ್ತದಲ್ಲಿ ಶೇ.10ರಷ್ಟು ಕಮಿಷನ್ ನೀಡುವಂತೆ ಬೇಡಿಕೆ ಇಟ್ಟು, ಮುಂಗಡವಾಗಿ ₹2 ಕೋಟಿ 66 ಲಕ್ಷ ಹಣವನ್ನು ಆರ್‌ಟಿಜಿಎಸ್ (RTGS) ಮೂಲಕ ತಾನು ಸೃಷ್ಟಿಸಿದ್ದ ನಕಲಿ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾನೆ.

ಹಣ ಖಾತೆಗೆ ಜಮೆಯಾಗುತ್ತಿದ್ದಂತೆ ವಿನೋದ್ ಕುಮಾರ್ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಅನುಮಾನಗೊಂಡ ಉದ್ಯಮಿ ಸುಬ್ರಮಣಿ ಬ್ಯಾಂಕ್‌ಗೆ ತೆರಳಿ ವಿಚಾರಿಸಿದಾಗ ಮ್ಯಾನೇಜರ್‌ನಿಂದ ಸಮರ್ಪಕ ಉತ್ತರ ದೊರೆಯಲಿಲ್ಲ. ಇದರಿಂದ ತಮಗೆ ವಂಚನೆಯಾಗಿರುವುದು ಖಚಿತವಾದ ಹಿನ್ನೆಲೆಯಲ್ಲಿ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಾಂತ್ರಿಕ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿ ಕೇವಲ ಎರಡು ದಿನಗಳಲ್ಲೇ ಪ್ರಮುಖ ಆರೋಪಿ ವಿನೋದ್ ಕುಮಾರ್ ಹಾಗೂ ಆತನ ಸಹಚರರಾದ ಅರುಣ್ ಕುಮಾರ್ ಮತ್ತು ಕಿರಣ್ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣದಲ್ಲಿ ಭಾಗಿಯಾಗಿದ್ದ ಕಿರಣ್ ಪಿಗ್ಮಿ ಕಲೆಕ್ಟರ್ ಆಗಿದ್ದು, ವಂಚನೆಯ ಹಣವನ್ನು ನಗದು ರೂಪಕ್ಕೆ ಪರಿವರ್ತಿಸಲು ಸಹಕಾರ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಬಂಧಿತ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ವಂಚನೆ ಜಾಲದಲ್ಲಿ ಇನ್ನಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಕುರಿತು ತನಿಖೆ ಮುಂದುವರಿದಿದೆ.

ಬೆಂಗಳೂರು ಶಾಲೆಗಳಲ್ಲಿ ಹೊಸ ನಿಯಮ ಜಾರಿ: ವಿದ್ಯಾರ್ಥಿಗಳಿಗೆ ಆನ್ ಲೈನ್ ಫುಡ್ ಡೆಲಿವರಿ ನಿಷೇಧ

ಬೆಂಗಳೂರು: ನಗರದ ಹಲವು ಪ್ರತಿಷ್ಠಿತ ಶಾಲೆಗಳು ತಮ್ಮ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಆಹಾರ ವಿತರಣೆಗೆ ಅವಕಾಶ ನೀಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿವೆ. ಸ್ವಿಗ್ಗಿ, ಜೊಮ್ಯಾಟೊ ಸೇರಿದಂತೆ ವಿವಿಧ ಫುಡ್ ಡೆಲಿವರಿ ಆ್ಯಪ್‌ಗಳ ಮೂಲಕ ಆಹಾರ ಆರ್ಡರ್ ಮಾಡುವುದನ್ನು ನಿಷೇಧಿಸಿ ಪೋಷಕರಿಗೆ ಸೂಚನೆ ನೀಡಲಾಗುತ್ತಿದೆ.

ಇತ್ತೀಚೆಗೆ ಬನಶಂಕರಿಯಲ್ಲಿರುವ ವಿದ್ಯಾಶಿಲ್ಪ ಶಾಲೆ ಈ ಕುರಿತು ಪೋಷಕರಿಗೆ ಸುತ್ತೋಲೆ ಹೊರಡಿಸಿದ್ದು, ಇದೇ ಮಾದರಿಯ ನಿಯಮವನ್ನು ನಗರದ ಇನ್ನೂ ಹಲವು ಪ್ರಮುಖ ಶಾಲೆಗಳು ಜಾರಿಗೆ ತರಲು ಮುಂದಾಗಿವೆ.

ಶಾಲಾ ಆಡಳಿತ ಮಂಡಳಿಗಳ ಪ್ರಕಾರ, ಹೊರಗಿನಿಂದ ತರಿಸುವ ಜಂಕ್ ಫುಡ್‌ಗಳಲ್ಲಿ ಅತಿಯಾದ ಎಣ್ಣೆ, ಉಪ್ಪು ಹಾಗೂ ಸಂರಕ್ಷಕ ಪದಾರ್ಥಗಳು (ಪ್ರಿಸರ್ವೇಟಿವ್ಸ್) ಬಳಸಲಾಗುತ್ತದೆ. ಇಂತಹ ಆಹಾರ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದ್ದು, ಆರೋಗ್ಯಕರ ಆಹಾರ ಪದ್ಧತಿಯನ್ನು ಉತ್ತೇಜಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇದಲ್ಲದೆ, ಒಬ್ಬ ವಿದ್ಯಾರ್ಥಿ ಮನೆಯಿಂದ ತಂದಿರುವ ಸಾಮಾನ್ಯ ಆಹಾರ ಸೇವಿಸುತ್ತಿರುವಾಗ, ಮತ್ತೊಬ್ಬ ವಿದ್ಯಾರ್ಥಿ ಪಿಜ್ಜಾ ಅಥವಾ ಬರ್ಗರ್‌ನಂತಹ ಆಹಾರವನ್ನು ಆನ್‌ಲೈನ್ ಮೂಲಕ ತರಿಸಿಕೊಂಡು ಸೇವಿಸಿದರೆ ಮಕ್ಕಳಲ್ಲಿ ಅನಗತ್ಯ ಹೋಲಿಕೆ, ಆಕರ್ಷಣೆ ಹಾಗೂ ತಾರತಮ್ಯದ ಭಾವನೆ ಮೂಡಬಹುದು. ಇದರಿಂದ ಪೋಷಕರ ಮೇಲೂ ಹೆಚ್ಚುವರಿ ಒತ್ತಡ ಉಂಟಾಗುತ್ತದೆ ಎಂದು ಶಾಲಾ ಆಡಳಿತಗಳು ಅಭಿಪ್ರಾಯಪಟ್ಟಿವೆ.

ಭದ್ರತೆಯ ದೃಷ್ಟಿಯಿಂದಲೂ ಈ ಕ್ರಮ ಮಹತ್ವದ್ದಾಗಿದೆ ಎಂದು ಶಾಲೆಗಳು ತಿಳಿಸಿವೆ. ಅಪರಿಚಿತ ಡೆಲಿವರಿ ಸಿಬ್ಬಂದಿ ಪದೇ ಪದೇ ಶಾಲಾ ಆವರಣಕ್ಕೆ ಪ್ರವೇಶಿಸುವುದು ಸುರಕ್ಷತಾ ದೃಷ್ಟಿಯಿಂದ ಸೂಕ್ತವಲ್ಲ. ಜೊತೆಗೆ ಪ್ರತಿನಿತ್ಯ ಹಲವು ಆಹಾರ ಪಾರ್ಸೆಲ್‌ಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ಪ್ರಕ್ರಿಯೆ ಶಾಲೆಯ ಶಿಸ್ತು ಹಾಗೂ ಕಲಿಕಾ ವಾತಾವರಣಕ್ಕೂ ಅಡ್ಡಿಯಾಗುತ್ತದೆ ಎಂದು ಹೇಳಲಾಗಿದೆ.

ಅನಿವಾರ್ಯ ಸಂದರ್ಭಗಳಲ್ಲಿ ಪೋಷಕರು ಮನೆಯಲ್ಲಿ ಆಹಾರ ತಯಾರಿಸಲು ಸಾಧ್ಯವಾಗದಿದ್ದರೆ, ಹೊರಗಿನಿಂದ ತರಿಸುವ ಆರೋಗ್ಯಕರ ಆಹಾರವನ್ನು ಸಾಮಾನ್ಯ ಲಂಚ್ ಬಾಕ್ಸ್‌ನಲ್ಲಿ ಪ್ಯಾಕ್ ಮಾಡಿ ಮಕ್ಕಳಿಗೆ ಕಳುಹಿಸುವಂತೆ ಶಾಲೆಗಳು ಮನವಿ ಮಾಡಿವೆ.

ವಿದ್ಯಾರ್ಥಿಗಳಿಗೆ ಮಾದರಿಯಾಗುವ ಉದ್ದೇಶದಿಂದ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಗೂ ಆನ್‌ಲೈನ್ ಮೂಲಕ ಆಹಾರ ಆರ್ಡರ್ ಮಾಡುವುದಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಇದು ಆರಂಭ ಮಾತ್ರ, ಮುಂದೆ ದೊಡ್ಡ ಹೋರಾಟ: ಟೌನ್ ಶಿಪ್ ವಿರುದ್ಧ ಸರ್ಕಾರಕ್ಕೆ ನಿಖಿಲ್ ಎಚ್ಚರಿಕೆ

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ನೇತೃತ್ವದಲ್ಲಿ ಆಯೋಜಿಸಿರುವ ಬೃಹತ್ ಪಾದಯಾತ್ರೆಯಲ್ಲಿ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, “ಇದು ಕೇವಲ ಆರಂಭ ಮಾತ್ರ, ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ಮಟ್ಟದ ಹೋರಾಟ ನಡೆಯಲಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಜೆಡಿಎಸ್ ನೇತೃತ್ವದಲ್ಲಿ ಆರಂಭವಾದ ಈ ಪಾದಯಾತ್ರೆ ಯೋಜನೆ ವ್ಯಾಪ್ತಿಯ ಎಂಟು ಗ್ರಾಮಗಳಲ್ಲಿ ಸುಮಾರು 11 ಕಿಲೋಮೀಟರ್ ಸಂಚರಿಸಿತು. ಬೆಳಗ್ಗೆ ಅಂಚಿಪುರ ಗ್ರಾಮದ ದಂಡಿನ ಮಾರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಚಾಲನೆ ನೀಡಿದರು.

ಪಾದಯಾತ್ರೆಯು ಅಂಚಿಪುರ, ಅಂಚಿಪುರ ಕಾಲೋನಿ, ಬನ್ನಿಗಿರಿ, ಮೆರೆವೇಗೌಡನದೊಡ್ಡಿ, ಗುಂಡುತೋಪು, ಗೊಲ್ಲಹಳ್ಳಿ, ಕೋಡಿಪಾಳ್ಯ ಹಾಗೂ ಹೊಸೂರು ಗ್ರಾಮಗಳ ಮೂಲಕ ಸಾಗಿತು. ಸಾವಿರಾರು ರೈತರು, ಜೆಡಿಎಸ್ ಕಾರ್ಯಕರ್ತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದು, ಎಂಎಲ್ಸಿ ಜವರಾಯಿಗೌಡ ಮತ್ತು ಮಾಜಿ ಎಂಎಲ್ಸಿ ಶ್ರೀಕಂಠೇಗೌಡ ಕೂಡ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಈ ವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, “ಇದು ರಾಜಕೀಯ ಲಾಭ-ನಷ್ಟಕ್ಕಾಗಿ ನಡೆಸುತ್ತಿರುವ ಹೋರಾಟವಲ್ಲ. ರೈತರ ಬದುಕು, ಕೃಷಿ ಭೂಮಿ ಮತ್ತು ಅವರ ಹಕ್ಕುಗಳನ್ನು ಉಳಿಸುವ ಉದ್ದೇಶದಿಂದ ಈ ಪಾದಯಾತ್ರೆ ನಡೆಸಲಾಗುತ್ತಿದೆ” ಎಂದು ಹೇಳಿದರು.

“ಇದು ಒಂದು ದಿನದ ಹೋರಾಟವಲ್ಲ. ಕೇವಲ ಭಾಷಣಕ್ಕೆ ಸೀಮಿತವಾಗುವ ಕಾರ್ಯಕ್ರಮವೂ ಅಲ್ಲ. ಇದು ಆರಂಭ ಮಾತ್ರ. ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರ ಹೋರಾಟ ನಡೆಸುತ್ತೇವೆ” ಎಂದು ಅವರು ಎಚ್ಚರಿಕೆ ನೀಡಿದರು.

ಟೌನ್‌ಶಿಪ್ ಯೋಜನೆಗೆ ಒಪ್ಪಿಗೆ ಪಡೆಯಲು ರೈತರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ ನಿಖಿಲ್, “ಕೃಷಿ ಭೂಮಿ ಕಳೆದುಕೊಂಡರೆ ರೈತರ ಬದುಕು ಸಂಕಷ್ಟಕ್ಕೆ ಸಿಲುಕಲಿದೆ. ಈ ಯೋಜನೆಯಿಂದ ಸಣ್ಣ ರೈತರಿಗೆ ಹೆಚ್ಚಿನ ಅನ್ಯಾಯವಾಗಲಿದೆ. ರೈತರ ಭೂಮಿ ಕಬಳಿಸಲು ದಲ್ಲಾಳಿಗಳನ್ನು ಬಳಸಲಾಗುತ್ತಿದ್ದು, ರೈತರ ಒಗ್ಗಟ್ಟನ್ನು ಒಡೆಯುವ ಪ್ರಯತ್ನ ನಡೆಯುತ್ತಿದೆ” ಎಂದು ಸರ್ಕಾರದ ವಿರುದ್ಧ ಆರೋಪಿಸಿದರು.

ಅಡ್ಡ ಮತದಾನ ಆರೋಪ: ತನಿಖೆಗೆ ಸಿದ್ಧ, ಸಾಬೀತಾದರೆ ರಾಜೀನಾಮೆ – ಡಾ. ಚಂದ್ರು ಲಮಾಣಿ

0

ಗದಗ: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಯಾವುದೇ ತನಿಖೆ ಎದುರಿಸಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

ಲಕ್ಷ್ಮೇಶ್ವರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ನಿರ್ದೇಶನದಂತೆ ಎನ್‌ಡಿಎ ಅಭ್ಯರ್ಥಿಗೆ ಮತ ಚಲಾಯಿಸಿದ್ದೇನೆ. ಆದರೂ ನನ್ನ ಹೆಸರನ್ನು ಅನಗತ್ಯವಾಗಿ ಈ ವಿವಾದಕ್ಕೆ ಎಳೆದು ತಳಕು ಹಾಕಲಾಗುತ್ತಿದೆ. ಇದರಿಂದ ನನಗೆ ಹಾಗೂ ನನ್ನ ಕ್ಷೇತ್ರದ ಜನತೆಗೆ ನೋವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

“ನಾನು ಯಾವುದೇ ರೀತಿಯ ತನಿಖೆಗೆ ಸಿದ್ಧನಿದ್ದೇನೆ. ಧರ್ಮಸ್ಥಳ ಮಾತ್ರವಲ್ಲ, ಯಾವುದೇ ದೇವಸ್ಥಾನದಲ್ಲಿ ಆಣೆ-ಪ್ರಮಾಣ ಮಾಡಲು ಸಿದ್ಧ. ಅಡ್ಡ ಮತದಾನ ಮಾಡಿರುವುದು ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಷ್ಟೇ ಅಲ್ಲ, ರಾಜಕೀಯ ಜೀವನದಿಂದಲೇ ನಿವೃತ್ತಿಯಾಗಲು ಸಿದ್ಧನಿದ್ದೇನೆ” ಎಂದು ಸವಾಲು ಹಾಕಿದರು.

ತಮ್ಮ ವಿರುದ್ಧ ಉದ್ದೇಶಪೂರ್ವಕ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿದ ಅವರು, “ಕಳೆದ ಒಂದು ವರ್ಷದಿಂದ ನನ್ನ ವಿರುದ್ಧ ಸಂಚು ರೂಪಿಸಲಾಗುತ್ತಿದೆ. ಇದರಲ್ಲಿ ಕಾಂಗ್ರೆಸ್ ನಾಯಕರಷ್ಟೇ ಅಲ್ಲ, ನಮ್ಮ ಪಕ್ಷದ ಕೆಲ ಮುಖಂಡರ ಕೈವಾಡವೂ ಇದೆ” ಎಂದು ಗಂಭೀರ ಆರೋಪ ಮಾಡಿದರು.

ಅಡ್ಡ ಮತದಾನ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ರಾಜಕೀಯ ವಲಯದಲ್ಲಿ ಚರ್ಚೆಗಳು ತೀವ್ರಗೊಂಡಿರುವ ನಡುವೆ ಡಾ. ಲಮಾಣಿ ನೀಡಿರುವ ಈ ಹೇಳಿಕೆ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಯಶ್ ಅಭಿಮಾನಿಗಳಿಗೆ ಸಿಹಿಸುದ್ದಿ: ವದಂತಿಗಳಿಗೆ ಫುಲ್ ಸ್ಟಾಪ್, ಆಗಸ್ಟ್ 26ಕ್ಕೆ ‘ಟಾಕ್ಸಿಕ್’ ವರ್ಲ್ಡ್ ವೈಡ್ ರಿಲೀಸ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಅಧಿಕೃತ ಬಿಡುಗಡೆಯ ದಿನಾಂಕ ಕೊನೆಗೂ ಘೋಷಣೆಯಾಗಿದೆ. ಹಲವು ದಿನಗಳಿಂದ ಹರಿದಾಡುತ್ತಿದ್ದ ಊಹಾಪೋಹಗಳಿಗೆ ತೆರೆ ಎಳೆದಿರುವ ಯಶ್, ತಮ್ಮ ಬಹುಕೋಟಿ ವೆಚ್ಚದ ಪ್ಯಾನ್-ವರ್ಡ್ ಸಿನಿಮಾವನ್ನು ಆಗಸ್ಟ್ 26ರಂದು ವಿಶ್ವದಾದ್ಯಂತ ಭರ್ಜರಿಯಾಗಿ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ.

ಮೂಲತಃ ಈ ಸಿನಿಮಾ ಜೂನ್ 4ರಂದು ಬಿಡುಗಡೆಯಾಗಬೇಕಿತ್ತು. ಆದರೆ ಜಾಗತಿಕ ಮಾರುಕಟ್ಟೆಯನ್ನು ಗಮನದಲ್ಲಿಟ್ಟುಕೊಂಡು ಚಿತ್ರತಂಡ ಬಿಡುಗಡೆ ದಿನಾಂಕವನ್ನು ಮುಂದೂಡಿತ್ತು. ಇತ್ತೀಚೆಗೆ ಅಮೆರಿಕದ ಲಾಸ್ ವೇಗಾಸ್‌ನಲ್ಲಿ ನಡೆದ ಪ್ರತಿಷ್ಠಿತ ಸಿನಿಮಾಕಾನ್ ಕಾರ್ಯಕ್ರಮದಲ್ಲಿ ಯಶ್ ಭಾಗವಹಿಸಿದ್ದು, ಅಲ್ಲಿ ಹಾಲಿವುಡ್ ಹಾಗೂ ಅಂತರರಾಷ್ಟ್ರೀಯ ವಿತರಕರಿಂದ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಈ ಬೆಳವಣಿಗೆಯ ಬಳಿಕ ಜಾಗತಿಕ ಮಟ್ಟದಲ್ಲಿ ಚಿತ್ರದ ವಿತರಣೆಯನ್ನು ಇನ್ನಷ್ಟು ವಿಸ್ತರಿಸಲು ನಿರ್ಮಾಪಕರು ಮತ್ತು ನಿರ್ದೇಶಕಿ ಗೀತು ಮೋಹನ್‌ದಾಸ್ ಹೊಸ ಯೋಜನೆ ರೂಪಿಸಿದರು. ಅಂತರರಾಷ್ಟ್ರೀಯ ವಿತರಣಾ ಸಂಸ್ಥೆಗಳೊಂದಿಗೆ ಒಪ್ಪಂದಗಳನ್ನು ಅಂತಿಮಗೊಳಿಸಲು ಹೆಚ್ಚುವರಿ ಸಮಯ ಬೇಕಾದ ಹಿನ್ನೆಲೆಯಲ್ಲಿ ಬಿಡುಗಡೆಯನ್ನು ಆಗಸ್ಟ್‌ಗೆ ಮುಂದೂಡಲಾಗಿದೆ.

ಚಿತ್ರದ ಬಿಡುಗಡೆ ತಡವಾದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಮರುಚಿತ್ರೀಕರಣ ನಡೆಯುತ್ತಿದೆ, ನಿರ್ದೇಶಕರೊಂದಿಗೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ವದಂತಿಗಳು ಹರಿದಾಡಿದ್ದವು. ಆದರೆ ಇದೀಗ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸುವ ಮೂಲಕ ಚಿತ್ರತಂಡ ಆ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದೆ. ಸಿನಿಮಾ ಸಂಪೂರ್ಣ ಸಿದ್ಧವಾಗಿದ್ದು, ಸದ್ಯ ಜಾಗತಿಕ ಪ್ರಚಾರ ಹಾಗೂ ಬಿಡುಗಡೆಯ ಅಂತಿಮ ಸಿದ್ಧತೆಗಳು ಮಾತ್ರ ನಡೆಯುತ್ತಿವೆ ಎಂದು ತಿಳಿಸಲಾಗಿದೆ.

ಗೀತು ಮೋಹನ್‌ದಾಸ್ ನಿರ್ದೇಶನದ ಈ ಆಕ್ಷನ್ ಥ್ರಿಲ್ಲರ್ ಚಿತ್ರ ಮತ್ತೊಂದು ವಿಶೇಷತೆಯನ್ನು ಹೊಂದಿದೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಏಕಕಾಲದಲ್ಲಿ ನೇರವಾಗಿ ಚಿತ್ರೀಕರಿಸಲಾಗಿದ್ದು, ಬಳಿಕ ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲೂ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ನಿರ್ಮಾಣದ ಈ ಚಿತ್ರದಲ್ಲಿ ಯಶ್ ಜೊತೆಗೆ ನಯನತಾರಾ, ಕಿಯಾರಾ ಅಡ್ವಾಣಿ ಮತ್ತು ತಾರಾ ಸುತಾರಿಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಭಾರೀ ನಿರೀಕ್ಷೆ ಮೂಡಿಸಿರುವ ‘ಟಾಕ್ಸಿಕ್’ ಆಗಸ್ಟ್ 26ರಂದು ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ ಬರೆಯುವ ವಿಶ್ವಾಸವನ್ನು ಚಿತ್ರತಂಡ ಹೊಂದಿದೆ.

ಬೆಂಗಳೂರು ನಿವಾಸಿಗಳೇ ಗಮನಿಸಿ: ಜೂನ್ 22 ಮತ್ತು 23ರಂದು ವಿದ್ಯುತ್ ವ್ಯತ್ಯಯ, ಈ ಪ್ರದೇಶಗಳಲ್ಲಿ ಪವರ್ ಕಟ್

ಬೆಂಗಳೂರು: ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ನಗರದ ವಿವಿಧ ಭಾಗಗಳಲ್ಲಿ ಜೂನ್ 22 (ಸೋಮವಾರ) ಮತ್ತು ಜೂನ್ 23 (ಮಂಗಳವಾರ) ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಕಡಿತವಾಗುವ ಸಾಧ್ಯತೆ ಇದೆ.

ಸೋಲದೇವನಹಳ್ಳಿ–ಹೆಸರಘಟ್ಟ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಸೋಲದೇವನಹಳ್ಳಿ, ಹೆಸರಘಟ್ಟ, ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿ.ಬಿ. ಕ್ರಾಸ್, ಬಿಲಿಜಾಜಿ ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ, ಗಣಪತಿ ನಗರ, ಬ್ರದರ್ಸ್ ಕಾಲೋನಿ, ಕೃಷ್ಣ ಕಾಲೇಜು ರಸ್ತೆ, ರಾಘವೇಂದ್ರ ಲೇಔಟ್, ಸಾಸುವೆಘಟ್ಟ, ಶಿವಕುಮಾರಸ್ವಾಮೀಜಿ ಲೇಔಟ್,

ಡ್ಯಾನಿಶ್ ಫಾರ್ಮ್, ಕೆಎಂಎಫ್, ಪಶುಸಂಗೋಪನೆ ಇಲಾಖೆ, ಶಿವಕೋಟೆ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಬ್ಯಾಲಕೆರೆ, ಆಚಾರ್ಯ ಕಾಲೇಜು ಮುಖ್ಯ ರಸ್ತೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಸೋಮವಾರ ವಿದ್ಯುತ್ ಕಡಿತವಾಗುವ ಪ್ರಮುಖ ಪ್ರದೇಶಗಳು

ಔಟರ್ ರಿಂಗ್ ರೋಡ್ (ORR) ವಲಯ

ಸೆಸ್ನಾ ಬಿಸಿನೆಸ್ ಪಾರ್ಕ್, ಎಕ್ಸೋರಾ ಬಿಸಿನೆಸ್ ಪಾರ್ಕ್, ಶೋಭಾ ಅಪಾರ್ಟ್‌ಮೆಂಟ್ಸ್, ವಿಕಾಸ್ ಟೆಲಿಕಾಂ, ಐಬಿಸ್ ಹೋಟೆಲ್, ತಕ್ಷಶಿಲಾ ಹೆಲ್ತ್‌ಕೇರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಪೂರ್ವ ವಲಯ

ಶೋಭಾ ಕ್ರಿಸಾಂಥಿಮಮ್, ಗೋವಿಂದಪುರ, ಕಾರ್ಲೆ, ಬೃಂದಾವನ ನಗರ, ಗಾಂಧಿನಗರ, ಹೆಗ್ಡೆ ನಗರ, ಚಂದ್ರಿಕಾ ಸೋಪ್ ಫ್ಯಾಕ್ಟರಿ, ಬಿಎಂಟಿಸಿ ಡಿಪೋ ಸೇರಿದಂತೆ ಹಲವು ಪ್ರದೇಶಗಳು.

ಕೇಂದ್ರ ವಲಯ

ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಮ್ಯೂಸಿಯಂ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ರೆಸಿಡೆನ್ಸಿ ರಸ್ತೆ, ಕಾನ್ವೆಂಟ್ ರಸ್ತೆ, ಕೇಂಬ್ರಿಡ್ಜ್ ಲೇಔಟ್, ಗೌತಮಪುರ, ಆರ್ಟಿಲರಿ ರಸ್ತೆ, ಎಂವಿ ಗಾರ್ಡನ್, ಜೋಗುಪಾಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ದಕ್ಷಿಣ ವಲಯ

ಅಂಜನಾಪುರ, ಆವಲಹಳ್ಳಿ, ರಾಘವನಪಾಳ್ಯ, ನಾರಾಯಣನಗರ, ಅಮೃತನಗರ, ವಡ್ಡರಪಾಳ್ಯ, ಕೆಂಬತ್ತಹಳ್ಳಿ, ತಲಘಟ್ಟಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.

ಪಶ್ಚಿಮ ವಲಯ

ಮಲ್ಲೇಶ್ವರಂ, ವೈಯಾಲಿಕಾವಲ್, ಕೋದಂಡರಾಮಪುರ, ಅಂಬೇಡ್ಕರ್ ನಗರ, ಮತ್ತಿಕೆರೆ, ಜೆ.ಪಿ. ಪಾರ್ಕ್, ಯಶವಂತಪುರ, ಎಚ್‌ಎಂಟಿ ಲೇಔಟ್, ಗೋಕುಲ 1ನೇ ಹಂತ, ಎಸ್‌ಬಿಎಂ ಕಾಲೋನಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಮಂಗಳವಾರ ವಿದ್ಯುತ್ ಕಡಿತವಾಗುವ ಪ್ರದೇಶಗಳು

ಕೋರಮಂಗಲ ಹಾಗೂ ಸುತ್ತಮುತ್ತ

ಕೋರಮಂಗಲ 3, 4, 5 ಮತ್ತು 6ನೇ ಬ್ಲಾಕ್, ಕೋರಮಂಗಲ ಕೈಗಾರಿಕಾ ಪ್ರದೇಶ, ಮಡಿವಾಳ, ವೆಂಕಟೇಶ್ವರ ಲೇಔಟ್, ಚಿಕ್ಕಡುಗೋಡಿ, ಜೋಗಿ ಕಾಲೋನಿ, ಆಡುಗೋಡಿ, ಸೇಂಟ್ ಜಾನ್ಸ್ ಆಸ್ಪತ್ರೆ ಮತ್ತು ಸಿಬ್ಬಂದಿ ಕ್ವಾರ್ಟರ್ಸ್, ಬನ್ನೇರುಘಟ್ಟ ರಸ್ತೆ, ಕೆಎಚ್‌ಬಿ ಕಾಲೋನಿ, ಕಾವೇರಿ ಲೇಔಟ್, ಎಸ್.ಜಿ. ಪಾಳ್ಯ, ಮಡಿವಾಳ ಮಾರುಕಟ್ಟೆ, ಜಕ್ಕಸಂದ್ರ ವಿಸ್ತರಣೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಸಾರ್ವಜನಿಕರಿಗೆ ಬೆಸ್ಕಾಂ ಮನವಿ

ವಿದ್ಯುತ್ ವ್ಯತ್ಯಯದ ಅವಧಿಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ವಿದ್ಯುತ್ ಆಧಾರಿತ ಕೆಲಸಗಳನ್ನು ಮುಂಚಿತವಾಗಿ ಯೋಜಿಸಿಕೊಳ್ಳುವಂತೆ ಬೆಸ್ಕಾಂ ಸಾರ್ವಜನಿಕರಿಗೆ ಮನವಿ ಮಾಡಿದೆ.

5 ಸಿಕ್ಸ್, 5 ಫೋರ್ ಗಳ ಅಬ್ಬರ: ಕೇವಲ 11 ಎಸೆತಗಳಲ್ಲಿ ವಿಶ್ವದಾಖಲೆ ಬರೆದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ

0

ಡಾಂಬುಲಾ: ಕಳೆದ ಪಂದ್ಯದಲ್ಲಿ ಶ್ರೀಲಂಕಾ ಆಟಗಾರರು ನಡೆಸಿದ್ದ ಸ್ಲೆಡ್ಜಿಂಗ್‌ಗೆ ಭಾರತ ‘ಎ’ ತಂಡದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಬ್ಯಾಟ್‌ನಲ್ಲೇ ತಕ್ಕ ಉತ್ತರ ನೀಡಿದ್ದಾರೆ. ಶ್ರೀಲಂಕಾದಲ್ಲಿ ನಡೆಯುತ್ತಿರುವ ತ್ರಿಕೋನ ಏಕದಿನ ಸರಣಿಯ ಫೈನಲ್‌ನಲ್ಲಿ ಲಂಕಾ ಬೌಲರ್‌ಗಳ ಮೇಲೆ ಮುಗಿಬಿದ್ದ ಸೂರ್ಯವಂಶಿ, ಬೌಂಡರಿ ಮತ್ತು ಸಿಕ್ಸರ್‌ಗಳ ಸುರಿಮಳೆಗೈದು ಎದುರಾಳಿಗಳ ಲೆಕ್ಕಾಚಾರವನ್ನು ಸಂಪೂರ್ಣವಾಗಿ ಹಾಳು ಮಾಡಿದರು.

ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತಕ್ಕೆ ಸೂರ್ಯವಂಶಿ ಸ್ಫೋಟಕ ಆರಂಭ ನೀಡಿದರು. ಕೇವಲ 29 ಎಸೆತಗಳಲ್ಲಿ 10 ಬೌಂಡರಿ ಹಾಗೂ 8 ಸಿಕ್ಸರ್‌ಗಳ ನೆರವಿನಿಂದ 94 ರನ್ ಸಿಡಿಸಿ ಶತಕದ ಅಂಚಿನಲ್ಲಿ ಔಟಾದರು. ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಅವರು ಶ್ರೀಲಂಕಾ ಬೌಲರ್‌ಗಳಿಗೆ ಯಾವುದೇ ಅವಕಾಶ ನೀಡಲಿಲ್ಲ.

ಇನಿಂಗ್ಸ್‌ನ ಆರಂಭದಲ್ಲೇ ಅಬ್ಬರಿಸಿದ ಸೂರ್ಯವಂಶಿ ಕೇವಲ 11 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಹೊಸ ದಾಖಲೆ ಬರೆದರು. ಐದು ಬೌಂಡರಿ ಮತ್ತು ಐದು ಸಿಕ್ಸರ್‌ಗಳೊಂದಿಗೆ ಅರ್ಧಶತಕ ಪೂರೈಸಿದ ಅವರು, ಲಿಸ್ಟ್ ‘ಎ’ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ ಅರ್ಧಶತಕ ಸಿಡಿಸಿದ ಅತಿ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಬಳಿಕದ 18 ಎಸೆತಗಳಲ್ಲಿ ಇನ್ನೂ 44 ರನ್ ಸೇರಿಸಿ ಲಂಕಾ ಬೌಲಿಂಗ್ ದಾಳಿಯನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದರು.

ಕಳೆದ ಪಂದ್ಯದ ಸ್ಲೆಡ್ಜಿಂಗ್‌ಗೆ ಉತ್ತರ ನೀಡುವಂತೆ ಆಡಿದ ಸೂರ್ಯವಂಶಿ, ನಾಲ್ಕನೇ ಓವರ್‌ನಲ್ಲಿ ಸಮುದಿತಾ ಬೌಲಿಂಗ್‌ನಲ್ಲಿ 20 ರನ್, ಏಳನೇ ಓವರ್‌ನಲ್ಲಿ ಕುಗಥಾಸ್ ಮಥುಲನ್ ಬೌಲಿಂಗ್‌ನಲ್ಲಿ 16 ರನ್ ಕಲೆಹಾಕಿ ಮೈದಾನದಲ್ಲಿ ಸಿಕ್ಸರ್‌ಗಳ ಮಳೆಗರೆದರು.

ಸೂರ್ಯವಂಶಿಗೆ ಮತ್ತೊಬ್ಬ ಆರಂಭಿಕ ಬ್ಯಾಟರ್ ಪ್ರಿಯಾಂಶ್ ಆರ್ಯ ಉತ್ತಮ ಸಾಥ್ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ ಕೇವಲ 53 ಎಸೆತಗಳಲ್ಲಿ 132 ರನ್‌ಗಳ ಭರ್ಜರಿ ಜೊತೆಯಾಟ ನಿರ್ಮಿಸಿತು. ಪ್ರಿಯಾಂಶ್ ಆರ್ಯ 24 ಎಸೆತಗಳಲ್ಲಿ 35 ರನ್ (5 ಬೌಂಡರಿ, 1 ಸಿಕ್ಸರ್) ಗಳಿಸಿ ಭಾರತಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟರು.

ಕಳೆದ ಪಂದ್ಯದಲ್ಲಿ ಕೆಣಕಿದ್ದ ಶ್ರೀಲಂಕಾ ಆಟಗಾರರಿಗೆ ಫೈನಲ್‌ನಲ್ಲೇ ವೈಭವ್ ಸೂರ್ಯವಂಶಿ ತಮ್ಮ ಬ್ಯಾಟ್ ಮೂಲಕ ಮರೆಯಲಾಗದ ಉತ್ತರ ನೀಡಿದ್ದಾರೆ. ಅವರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ಭಾರತದ ಪರ ಪಂದ್ಯದ ದಿಕ್ಕನ್ನೇ ಬದಲಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿತು.

ಕೇರಳ ಉದ್ಯಮಿಯಿಂದ ₹20 ಲಕ್ಷ ದರೋಡೆ ಕೇಸ್: ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿಗೆ 14 ದಿನ ನ್ಯಾಯಾಂಗ ಬಂಧನ

0

ಬೆಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರಿಂದ ₹20 ಲಕ್ಷ ದರೋಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ಅವರನ್ನು ಬಂಧಿಸಿರುವ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಪ್ರಕರಣದಲ್ಲಿ ಮಹೇಶ್ ಕನಕಗಿರಿ ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಕುಪೇಂದ್ರ ರೆಡ್ಡಿ ಮತ್ತು ವಸಂತ್ ಕುಮಾರ್ ಬಂಧಿತ ಇತರ ಆರೋಪಿಗಳಾಗಿದ್ದು, ಅವರನ್ನು ಪೊಲೀಸ್ ಕಸ್ಟಡಿಗೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಮಡಿವಾಳ ಪೊಲೀಸರ ವಿಚಾರಣೆ ವೇಳೆ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ, “ಕುಪೇಂದ್ರ ರೆಡ್ಡಿ ಪರಿಚಯದ ವ್ಯಕ್ತಿ. ಆತನೊಂದಿಗೆ ಹೋಗಿದ್ದೇ ಹೊರತು ದರೋಡೆ ಪ್ರಕರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ. ಪೊಲೀಸರು ವಿಚಾರಿಸಿದ ನಂತರವೇ ಈ ಪ್ರಕರಣದ ಬಗ್ಗೆ ತಿಳಿಯಿತು” ಎಂದು ಹೇಳಿರುವುದಾಗಿ ತಿಳಿದುಬಂದಿದೆ.

ಇನ್ನು, ತಮ್ಮ ಗುರುತಿನ ಚೀಟಿ (ಐಡಿ ಕಾರ್ಡ್) ದುರ್ಬಳಕೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಐಡಿ ಕಾರ್ಡ್‌ನ್ನು ವಾಹನದ ಡ್ಯಾಶ್‌ಬೋರ್ಡ್‌ನಲ್ಲಿ ಇಟ್ಟಿದ್ದೆ. ನನ್ನ ಗಮನಕ್ಕೆ ಬಾರದೆ ಅದನ್ನು ತೆಗೆದುಕೊಂಡು ದುರ್ಬಳಕೆ ಮಾಡಲಾಗಿದೆ. ಅಗತ್ಯವಿದ್ದರೆ ಐಡಿ ಕಾರ್ಡ್ ದುರ್ಬಳಕೆ ಕುರಿತು ನಾನು ಕೂಡ ದೂರು ನೀಡುತ್ತೇನೆ” ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ಆದರೆ, ಪ್ರಕರಣದ ಇತರ ಆರೋಪಿಗಳು ವಿಚಾರಣೆ ವೇಳೆ ಮಹೇಶ್ ಕನಕಗಿರಿ ವಿರುದ್ಧವೇ ಆರೋಪ ಮಾಡಿದ್ದಾರೆ. “ಎಲ್ಲವೂ ಅವರಿಗೆ ಗೊತ್ತಿತ್ತು. ಅವರ ಸೂಚನೆಯಂತೆ ನಾವು ನಡೆದುಕೊಂಡಿದ್ದೇವೆ” ಎಂದು ಅವರು ಪೊಲೀಸರಿಗೆ ಹೇಳಿರುವುದಾಗಿ ತಿಳಿದುಬಂದಿದೆ.

ಇದರಿಂದಾಗಿ ಮಹೇಶ್ ಕನಕಗಿರಿ ಅವರ ಪಾತ್ರದ ಕುರಿತು ತನಿಖೆ ಮತ್ತಷ್ಟು ಮಹತ್ವ ಪಡೆದುಕೊಂಡಿದ್ದು, ಅವರ ಹೇಳಿಕೆ ಮತ್ತು ಸಹಆರೋಪಿಗಳ ಹೇಳಿಕೆಗಳ ನಡುವಿನ ವ್ಯತ್ಯಾಸವನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಮಹೇಶ್ ಕನಕಗಿರಿ ಅವರ ಮೊಬೈಲ್ ಫೋನ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದು, ದರೋಡೆಗೆ ಸಂಬಂಧಿಸಿದಂತೆ ಯಾವುದೇ ಕರೆ, ಸಂದೇಶ ಅಥವಾ ಚಾಟಿಂಗ್ ನಡೆದಿದೆಯೇ ಎಂಬುದನ್ನು ತಾಂತ್ರಿಕವಾಗಿ ಪರಿಶೀಲಿಸಲಾಗುತ್ತಿದೆ. ತನಿಖೆ ವೇಳೆ ಅವರು ಕುಪೇಂದ್ರ ರೆಡ್ಡಿ ಜೊತೆ ನಿರಂತರ ಸಂಪರ್ಕದಲ್ಲಿದ್ದ ಮಾಹಿತಿ ಕೂಡ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಇದಲ್ಲದೆ, ಘಟನೆ ನಡೆದ ಸ್ಥಳದ ಹೋಟೆಲ್ ಸಿಸಿಟಿವಿ ದೃಶ್ಯಗಳು ಸೇರಿದಂತೆ ಹಲವು ತಾಂತ್ರಿಕ ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಶಫಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಶಫಿ ವಿರುದ್ಧ ಈ ಹಿಂದೆಯೂ ದರೋಡೆ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ, ಆ ಪ್ರಕರಣಗಳಿಗೂ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ಅವರಿಗೆ ಯಾವುದೇ ಸಂಬಂಧವಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಪ್ರಕರಣದ ಸಮಗ್ರ ತನಿಖೆ ನಡೆಸಿ ಮಹೇಶ್ ಕನಕಗಿರಿ ಅವರ ಪಾತ್ರದ ಕುರಿತು ಸಂಪೂರ್ಣ ಮಾಹಿತಿ ಕಲೆಹಾಕುವಂತೆ ನಗರ ಪೊಲೀಸ್ ಆಯುಕ್ತರು ಡಿಸಿಪಿ ಸುಜಿತಾ ಅವರಿಗೆ ಸೂಚನೆ ನೀಡಿದ್ದಾರೆ. ಪ್ರಕರಣದ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.

error: Content is protected !!