ಬೆಂಗಳೂರು: ನಗರದ ಪಾದಚಾರಿ ಮಾರ್ಗಗಳನ್ನು ಅತಿಕ್ರಮಣ ಮುಕ್ತಗೊಳಿಸುವ ಉದ್ದೇಶದಿಂದ ಬಿಬಿಎಂಪಿ ಹಾಗೂ ನಗರಾಡಳಿತ ಅಧಿಕಾರಿಗಳು ನಡೆಸಿದ ‘ಸುರಕ್ಷಿತ ಪಾದಚಾರಿ ಮಾರ್ಗ’ ಅಭಿಯಾನ ಯಶಸ್ವಿಯಾಗಿದ್ದು, ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳಲ್ಲಿದ್ದ ಅತಿಕ್ರಮಣಗಳನ್ನು ತೆರವುಗೊಳಿಸಲಾಗಿದೆ.
ಜುಲೈ 1ರಿಂದ ಜುಲೈ 31ರವರೆಗೆ ನಡೆದ ವಿಶೇಷ ಅಭಿಯಾನದಲ್ಲಿ ನಗರದ ವಿವಿಧ ಭಾಗಗಳಲ್ಲಿದ್ದ ಅಂಗಡಿಗಳು, ತಳ್ಳುಗಾಡಿಗಳು ಹಾಗೂ ಅಕ್ರಮ ನಿರ್ಮಾಣಗಳನ್ನು ತೆರವುಗೊಳಿಸಲಾಗಿದೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಸಾರ್ವಜನಿಕರು, ಹಿರಿಯ ನಾಗರಿಕರು ಹಾಗೂ ಮಕ್ಕಳಿಗೆ ಸುರಕ್ಷಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಈ ಕ್ರಮ ಕೈಗೊಳ್ಳಲಾಗಿದೆ. ತೆರವು ಕಾರ್ಯಾಚರಣೆ ಬಳಿಕ ಮತ್ತೆ ಅತಿಕ್ರಮಣವಾಗದಂತೆ ತಡೆಯಲು ಬಿಬಿಎಂಪಿ ವಲಯ ಅಧಿಕಾರಿಗಳು ಸಂಚಾರ ಪೊಲೀಸರು ಹಾಗೂ ಶಿಸ್ತು ಪಾಲನಾ ಸಿಬ್ಬಂದಿಯೊಂದಿಗೆ ಜಂಟಿಯಾಗಿ ದಿಢೀರ್ ತಪಾಸಣೆ ನಡೆಸಲು ಮುಂದಾಗಿದ್ದಾರೆ.
ವಲಯವಾರು ತೆರವು ಕಾರ್ಯಾಚರಣೆ:
- ಸೆಂಟ್ರಲ್ ವಲಯ: 195.85 ಕಿ.ಮೀ
- ಉತ್ತರ ವಲಯ: 175.75 ಕಿ.ಮೀ
- ಪಶ್ಚಿಮ ವಲಯ: 168.37 ಕಿ.ಮೀ
- ದಕ್ಷಿಣ ಮತ್ತು ಪೂರ್ವ ವಲಯ: ತಲಾ 116 ಕಿ.ಮೀಗೂ ಹೆಚ್ಚು
ಸೋಮವಾರ ಒಂದೇ ದಿನ 1.20 ಕಿ.ಮೀ ಪಾದಚಾರಿ ಮಾರ್ಗದ ಅತಿಕ್ರಮಣ ತೆರವುಗೊಳಿಸಲಾಗಿದ್ದು, ಜಯನಗರದ 9 ಮತ್ತು 10ನೇ ಮುಖ್ಯ ರಸ್ತೆ ಹಾಗೂ ಎಚ್ಎಸ್ಆರ್ ಲೇಔಟ್ನ 31ನೇ ಮುಖ್ಯ ರಸ್ತೆಯಲ್ಲಿ ತಳ್ಳುಗಾಡಿಗಳು ಮತ್ತು ತಾತ್ಕಾಲಿಕ ಶೆಡ್ಗಳನ್ನು ಜಪ್ತಿ ಮಾಡಲಾಗಿದೆ.
ಪೀಣ್ಯ ಮೇಲ್ಸೇತುವೆಯಲ್ಲಿ ರಾತ್ರಿ ಸಂಚಾರ ನಿರ್ಬಂಧ
ಇನ್ನೊಂದೆಡೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಡಾ. ಶ್ರೀ ಶಿವಕುಮಾರ ಸ್ವಾಮೀಜಿ (ಪೀಣ್ಯ) ಮೇಲ್ಸೇತುವೆಯಲ್ಲಿ ಡಾಂಬರೀಕರಣ ಕಾಮಗಾರಿ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಆಗಸ್ಟ್ 12ರವರೆಗೆ ರಾತ್ರಿ ವೇಳೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಸಂಚಾರ ನಿರ್ಬಂಧದ ಸಮಯ:
- ಸೋಮವಾರದಿಂದ ಶುಕ್ರವಾರದವರೆಗೆ: ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 5 ಗಂಟೆವರೆಗೆ
- ಶನಿವಾರ ಮತ್ತು ಭಾನುವಾರ: ಮಧ್ಯರಾತ್ರಿ 12 ಗಂಟೆಯಿಂದ ಬೆಳಗಿನ ಜಾವ 5 ಗಂಟೆವರೆಗೆ
ತುಮಕೂರು ಹಾಗೂ ನೆಲಮಂಗಲ ಕಡೆಗೆ ತೆರಳುವ ವಾಹನ ಸವಾರರು ಎಸ್ಆರ್ಎಸ್ ಅಪ್ಪರ್ ರಾಂಪ್ ಬಳಿ ಕೆಳಗಿಳಿದು ಎನ್ಎಚ್-4 ಸರ್ವೀಸ್ ರಸ್ತೆ, ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ, 8ನೇ ಮೈಲಿ ಹಾಗೂ ಪಾರ್ಲೆ-ಜಿ ಟೋಲ್ ಮಾರ್ಗವಾಗಿ ಸಂಚರಿಸುವಂತೆ ಸೂಚಿಸಲಾಗಿದೆ.

