Home Blog

ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ: ಶೀಘ್ರದಲ್ಲೇ ಆರಂಭವಾಗಲಿದೆ ಚತುಷ್ಪಥ ರೈಲು ಮಾರ್ಗ ಕಾಮಗಾರಿ

ತುಮಕೂರು: ಉದ್ಯೋಗ, ಶಿಕ್ಷಣ ಹಾಗೂ ವ್ಯಾಪಾರ ವಹಿವಾಟುಗಳಿಗಾಗಿ ತುಮಕೂರಿನಿಂದ ಬೆಂಗಳೂರಿಗೆ ಪ್ರತಿದಿನ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಬೆಂಗಳೂರು-ತುಮಕೂರು ರೈಲು ಮಾರ್ಗವನ್ನು ವಿಸ್ತರಿಸುವ ಮಹತ್ವದ ಯೋಜನೆಗೆ ವೇಗ ಸಿಕ್ಕಿದೆ. ಈ ಮಾರ್ಗದಲ್ಲಿ ಚತುಷ್ಪಥ (ನಾಲ್ಕು ಹಳಿ) ರೈಲು ಮಾರ್ಗ ನಿರ್ಮಾಣದ ಪೂರ್ವ ಸಿದ್ಧತೆಗಳು ಚುರುಕುಗೊಂಡಿವೆ ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಪ್ರಸ್ತುತ ಬೆಂಗಳೂರು-ತುಮಕೂರು ನಡುವೆ ಕೇವಲ ಎರಡು ರೈಲು ಹಳಿಗಳು ಮಾತ್ರ ಇರುವುದರಿಂದ ರೈಲುಗಳ ಸಂಚಾರದಲ್ಲಿ ವಿಳಂಬ ಉಂಟಾಗುತ್ತಿದ್ದು, ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ರೈಲ್ವೆ ಇಲಾಖೆ ಚತುಷ್ಪಥ ರೈಲು ಮಾರ್ಗ ನಿರ್ಮಾಣಕ್ಕೆ ಮುಂದಾಗಿದೆ.

ಈ ಮಹತ್ವಾಕಾಂಕ್ಷಿ ಯೋಜನೆಗಾಗಿ ಅಗತ್ಯವಿರುವ ವಿಸ್ತೃತ ಯೋಜನಾ ವರದಿ (ಡಿಪಿಆರ್) ಈಗಾಗಲೇ ಪೂರ್ಣಗೊಂಡಿದ್ದು, ರೈಲ್ವೆ ಇಲಾಖೆಯ ಉನ್ನತ ತಾಂತ್ರಿಕ ಸಮಿತಿಯಿಂದಲೂ ಅನುಮೋದನೆ ದೊರೆತಿದೆ. ಸದ್ಯ ಯೋಜನೆಯು ರೈಲ್ವೆ ಮಂಡಳಿಯ ಅಂತಿಮ ಅನುಮೋದನೆ ಹಂತದಲ್ಲಿದ್ದು, ಶೀಘ್ರದಲ್ಲೇ ಅಧಿಕೃತ ಮುದ್ರೆ ಬೀಳುವ ನಿರೀಕ್ಷೆಯಿದೆ ಎಂದು ಸಚಿವರು ತಿಳಿಸಿದ್ದಾರೆ.

ಅಂದಾಜು 6,000 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ಈ ಬೃಹತ್ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಯೋಜನೆ ಜಾರಿಯಾದರೆ ಬೆಂಗಳೂರು ಮತ್ತು ತುಮಕೂರು ನಡುವಿನ ರೈಲು ಸಂಚಾರ ಸಾಮರ್ಥ್ಯ ಗಣನೀಯವಾಗಿ ಹೆಚ್ಚಳವಾಗಲಿದ್ದು, ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಯೋಜನೆಗೆ ಅಗತ್ಯವಿರುವ ಹೆಚ್ಚುವರಿ ಭೂಮಿಯನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದ್ದು, ಮುಂದಿನ ಐದುರಿಂದ ಆರು ತಿಂಗಳ ಅವಧಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ ಎಂದು ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ.

ನಟಿ ರುಕ್ಮಿಣಿ ವಸಂತ ಡೀಪ್ ಫೇಕ್ ಪ್ರಕರಣ: ಹೈಟೆಕ್ ಕಿಲಾಡಿಗಳ ಹಿನ್ನೆಲೆ ತಿಳಿದು ಪೊಲೀಸರೇ ಶಾಕ್!

0

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರುಕ್ಮಿಣಿ ವಸಂತ ಅವರ ಹೆಸರಿನಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಡೀಪ್‌ಫೇಕ್ ಫೋಟೋ ಹಾಗೂ ವಿಡಿಯೋಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಹಿನ್ನೆಲೆ ಸೈಬರ್ ಪೊಲೀಸರನ್ನೇ ಬೆಚ್ಚಿಬೀಳಿಸಿದೆ. ಬಂಧಿತರೆಲ್ಲರೂ ಸುಶಿಕ್ಷಿತರಾಗಿದ್ದು, ಉತ್ತಮ ವೃತ್ತಿಜೀವನ ಹೊಂದಿದ್ದವರಾಗಿದ್ದಾರೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಮೂಲದ ರವಿಕುಮಾರ್ (24), ಬೆಂಗಳೂರಿನ ಸಾಫ್ಟ್‌ವೇರ್ ಇಂಜಿನಿಯರ್ ರಂಜಿತ್ ಕುಮಾರ್ (25) ಹಾಗೂ ತೀರ್ಥಹಳ್ಳಿ ಮೂಲದ ಚಂದ್ರಕಾಂತ್ (33) ಅವರನ್ನು ಸೈಬರ್ ಕಮಾಂಡ್ ಪೊಲೀಸರು ಬಂಧಿಸಿದ್ದಾರೆ.

ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ರವಿಕುಮಾರ್ ಬಿಎಸ್‌ಸಿ ನರ್ಸಿಂಗ್ ಪದವಿ ಪೂರ್ಣಗೊಳಿಸಿದ್ದು, ತನ್ನದೇ ಆದ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ. ಇತ್ತೀಚೆಗೆ ಯೂಟ್ಯೂಬ್ ಮೂಲಕ ಆದಾಯ ಗಳಿಸಲು ಆರಂಭಿಸಿದ್ದ ಆತ, ಹೆಚ್ಚಿನ ವೀಕ್ಷಣೆ ಹಾಗೂ ಆದಾಯದ ಆಸೆಯಿಂದ ನಟಿಯರ ಡೀಪ್‌ಫೇಕ್ ವಿಡಿಯೋಗಳನ್ನು ಸೃಷ್ಟಿಸಿ ಅಪ್‌ಲೋಡ್ ಮಾಡಲು ಆರಂಭಿಸಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಮತ್ತೊಬ್ಬ ಆರೋಪಿ ರಂಜಿತ್ ಕುಮಾರ್ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ವಾರ್ಷಿಕ ಸುಮಾರು ₹20 ಲಕ್ಷ ವೇತನ ಪಡೆಯುತ್ತಿದ್ದ. ತಾಂತ್ರಿಕ ಜ್ಞಾನವನ್ನು ದುರುಪಯೋಗಪಡಿಸಿಕೊಂಡು ಹಲವು ನಟಿಯರ ಎಐ ಆಧಾರಿತ ಡೀಪ್‌ಫೇಕ್ ವಿಡಿಯೋಗಳನ್ನು ಸೃಷ್ಟಿಸುತ್ತಿದ್ದ ಆತ, ಕೇವಲ ಮನರಂಜನೆ ಮತ್ತು ಮೋಜಿಗಾಗಿ ಈ ಕೃತ್ಯ ನಡೆಸಿದ್ದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಮೂರನೇ ಆರೋಪಿ ಚಂದ್ರಕಾಂತ್ ಬೆಂಗಳೂರಿನ ಪ್ರತಿಷ್ಠಿತ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ. ಉತ್ತಮ ಸಂಬಳ ಪಡೆಯುತ್ತಿದ್ದ ಆತ ಕೂಡ ನಟಿಯರ ಫೋಟೋಗಳನ್ನು ಡೀಪ್‌ಫೇಕ್ ಮಾಡಿ ವಿಕೃತ ಸಂತೋಷ ಪಡೆಯುತ್ತಿದ್ದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಬಂಧಿತರಿಂದ ಕೃತ್ಯಕ್ಕೆ ಬಳಸಲಾಗಿದ್ದ ಮೂರು ಹೈ-ಎಂಡ್ ಮೊಬೈಲ್ ಫೋನ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಆರೋಪಿಗಳು ವಿವಿಧ ಎಐ ಆ್ಯಪ್‌ಗಳು ಮತ್ತು ಸಾಫ್ಟ್‌ವೇರ್‌ಗಳ ನೆರವಿನಿಂದ ನಟಿಯರ ಮುಖಗಳನ್ನು ಅಶ್ಲೀಲ ವಿಡಿಯೋಗಳಿಗೆ ಜೋಡಿಸಿ ಡೀಪ್‌ಫೇಕ್ ಕಂಟೆಂಟ್ ಸೃಷ್ಟಿಸುತ್ತಿದ್ದರು ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.

ಸದ್ಯ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಸೈಬರ್ ಕಮಾಂಡ್ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ. ಡೀಪ್‌ಫೇಕ್ ಕಂಟೆಂಟ್ ಸೃಷ್ಟಿ ಮತ್ತು ಪ್ರಸಾರದ ಹಿಂದೆ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ.

ಆನ್ ಲೈನ್ ಟ್ರೇಡಿಂಗ್ ಹೆಸರಿನಲ್ಲಿ ₹20 ಲಕ್ಷ ದರೋಡೆ; ಸಿಐಡಿ ಇನ್ಸ್ಪೆಕ್ಟರ್ ಸೇರಿ ಮೂವರ ಬಂಧನ

0

ಬೆಂಗಳೂರು: ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹೆಚ್ಚಿನ ಲಾಭ ದೊರೆಯುತ್ತದೆ ಎಂದು ನಂಬಿಸಿ ಕೇರಳ ಮೂಲದ ಯುವಕರನ್ನು ಬೆಂಗಳೂರಿಗೆ ಕರೆಸಿ, ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಬೆದರಿಸಿ 20 ಲಕ್ಷ ರೂಪಾಯಿಗೂ ಅಧಿಕ ಹಣ ದೋಚಿದ ಪ್ರಕರಣದಲ್ಲಿ ಸಿಐಡಿ ಇನ್ಸ್‌ಪೆಕ್ಟರ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸಿಐಡಿ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ, ಕುಪೇಂದ್ರ ರೆಡ್ಡಿ ಹಾಗೂ ವಸಂತ್ ಕುಮಾರ್ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಆನ್‌ಲೈನ್ ಟ್ರೇಡಿಂಗ್‌ನಲ್ಲಿ 25 ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ 50 ಲಕ್ಷ ರೂಪಾಯಿ ಲಾಭ ಸಿಗುತ್ತದೆ ಎಂದು ಕೇರಳದ ಕೆಲ ಯುವಕರಿಗೆ ಆಮಿಷ ಒಡ್ಡಲಾಗಿತ್ತು. ಈ ಆಮಿಷಕ್ಕೆ ಒಳಗಾದ ಯುವಕರು ಹಣದೊಂದಿಗೆ ಬೆಂಗಳೂರಿನ ಮಡಿವಾಳದಲ್ಲಿರುವ ಖಾಸಗಿ ಹೋಟೆಲ್‌ಗೆ ಆಗಮಿಸಿದ್ದರು.

ಯುವಕರು ಹೋಟೆಲ್‌ಗೆ ಬಂದಿರುವ ಮಾಹಿತಿ ಪಡೆದ ಆರೋಪಿಗಳು ಬಳಿಕ ಪೊಲೀಸ್ ಅಧಿಕಾರಿಗಳಂತೆ ನಟಿಸಿ ಸ್ಥಳಕ್ಕೆ ತೆರಳಿದ್ದಾರೆ. ಪೊಲೀಸ್ ವಾಹನದಲ್ಲಿ ಬಂದ ಆರೋಪಿಗಳು ತಮ್ಮನ್ನು ಅಧಿಕಾರಿಗಳೆಂದು ಪರಿಚಯಿಸಿಕೊಂಡು ಗುರುತಿನ ಚೀಟಿಗಳನ್ನು ತೋರಿಸಿ ಯುವಕರನ್ನು ಬೆದರಿಸಿದ್ದಾರೆ ಎನ್ನಲಾಗಿದೆ.

ಬಳಿಕ ಯುವಕರ ಮೇಲೆ ಹಲ್ಲೆ ನಡೆಸಿ, ಅವರ ಬಳಿಯಿದ್ದ 20 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ಕಸಿದುಕೊಂಡು ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ಘಟನೆಯ ಬಳಿಕ ಪ್ರಮುಖ ಆರೋಪಿ ಹಣದೊಂದಿಗೆ ಪೊಲೀಸ್ ವಾಹನದಲ್ಲಿ ಸ್ಥಳದಿಂದ ತೆರಳಿದ್ದರೆ, ಉಳಿದವರು ಬೈಕ್‌ಗಳಲ್ಲಿ ಪರಾರಿಯಾಗಿದ್ದಾರೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಕೇರಳ ಮೂಲದ ಯುವಕರು ಮಡಿವಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ತನಿಖೆ ಆರಂಭಿಸಿದ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿಗಳ ವಿರುದ್ಧ ದರೋಡೆ, ಬೆದರಿಕೆ, ಹಲ್ಲೆ, ವಂಚನೆ ಹಾಗೂ ಒಳಸಂಚು ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ. ಮಡಿವಾಳ ಉಪವಿಭಾಗದ ಎಸಿಪಿ ವಾಸುದೇವ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಆರೋಪಿಗಳು ಈ ಹಿಂದೆ ಇದೇ ರೀತಿಯ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆಯೇ ಎಂಬುದನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಕೆಲಸ ಮುಗಿಸಿ ಮನೆಗೆ ಹೊರಟಿದ್ದ ಸ್ನೇಹಿತರು ಶವವಾಗಿ ಪತ್ತೆ: ಹಿಟ್‌ ಆ್ಯಂಡ್‌ ರನ್‌ಗೆ ಇಬ್ಬರು ಯುವಕರ ಬಲಿ

ಚಿಕ್ಕಬಳ್ಳಾಪುರ: ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಇಬ್ಬರು ಯುವಕರ ಜೀವವನ್ನು ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಹಿಟ್‌ ಆ್ಯಂಡ್‌ ರನ್‌ ಅಪಘಾತ ಕಸಿದುಕೊಂಡಿದೆ. ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿ ಗೇಟ್‌ ಸಮೀಪ ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಬಾದಗಾನಹಳ್ಳಿ ಗ್ರಾಮದ ವರುಣ್ (22) ಹಾಗೂ ಕುಣಿಗಲ್ ಮೂಲದ ಜೀವನ್ (22) ಎಂದು ಗುರುತಿಸಲಾಗಿದೆ. ಇಬ್ಬರೂ ಸೇಟ್‌ ದಿನ್ನೆ ಬಳಿಯ ಲಾಜಿಸ್ಟಿಕ್ ಕಂಪನಿಯಲ್ಲಿ ಉದ್ಯೋಗದಲ್ಲಿದ್ದು, ರಾತ್ರಿ ಪಾಳಿ ಮುಗಿಸಿ ವಾಪಸ್‌ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ವೇಗವಾಗಿ ಬಂದ ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕರು ರಸ್ತೆಗೆ ಎಸೆಯಲ್ಪಟ್ಟಿದ್ದು, ತೀವ್ರ ಗಾಯಗಳಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ಬಳಿಕ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಸುದ್ದಿ ತಿಳಿದ ಕೂಡಲೇ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾದ ವಾಹನದ ಪತ್ತೆಗಾಗಿ ಸಿಸಿಟಿವಿ ದೃಶ್ಯಗಳು ಹಾಗೂ ಇತರೆ ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ತನಿಖೆ ಕೈಗೊಂಡಿದ್ದಾರೆ.

ರೈಲು ಪ್ರಯಾಣಿಕರೇ ಎಚ್ಚರ: ಟಿಕೆಟ್ ಇಲ್ಲದೇ ಪ್ರಯಾಣಿಸಿದರೆ ಭಾರೀ ದಂಡ, ಜುಲೈ 1ರಿಂದ ಹೊಸ ನಿಯಮ ಜಾರಿ

0

ನವದೆಹಲಿ: ರೈಲ್ವೆಯಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಭಾರತೀಯ ರೈಲ್ವೆ ಮುಂದಾಗಿದ್ದು, ಜುಲೈ 1ರಿಂದ ಹೊಸ ದಂಡ ವ್ಯವಸ್ಥೆಯನ್ನು ಜಾರಿಗೆ ತರಲು ನಿರ್ಧರಿಸಿದೆ. ಟಿಕೆಟ್ ರಹಿತ ಪ್ರಯಾಣ ಸೇರಿದಂತೆ ವಿವಿಧ ನಿಯಮ ಉಲ್ಲಂಘನೆಗಳಿಗೆ ವಿಧಿಸಲಾಗುವ ದಂಡದ ಮೊತ್ತವನ್ನು ಹೆಚ್ಚಿಸಲಾಗಿದೆ.

ಈವರೆಗೆ ಟಿಕೆಟ್ ಇಲ್ಲದೆ ಪ್ರಯಾಣಿಸಿದರೆ ಪ್ರಯಾಣ ದರದ ಜೊತೆಗೆ 250 ರೂಪಾಯಿ ದಂಡ ವಿಧಿಸಲಾಗುತ್ತಿತ್ತು. ಆದರೆ ಹೊಸ ನಿಯಮದ ಪ್ರಕಾರ, ಪ್ರಯಾಣ ದರದೊಂದಿಗೆ 500 ರೂಪಾಯಿ ದಂಡವನ್ನು ಪಾವತಿಸಬೇಕಾಗುತ್ತದೆ. ಸುಮಾರು 13 ವರ್ಷಗಳ ಬಳಿಕ ರೈಲ್ವೆ ಇಲಾಖೆ ದಂಡದ ಮೊತ್ತವನ್ನು ಪರಿಷ್ಕರಿಸಿದ್ದು, ಪ್ರಯಾಣಿಕರಲ್ಲಿ ಶಿಸ್ತು ಮೂಡಿಸುವುದು ಮತ್ತು ರೈಲು ಪ್ರಯಾಣದ ಸುರಕ್ಷತೆಯನ್ನು ಹೆಚ್ಚಿಸುವುದು ಇದರ ಉದ್ದೇಶವಾಗಿದೆ.

ಹೊಸ ಮಾರ್ಗಸೂಚಿಗಳ ಪ್ರಕಾರ ಮಹಿಳೆಯರಿಗಾಗಿ ಮೀಸಲಾದ ಕೋಚ್‌ಗಳಿಗೆ ಅನಧಿಕೃತವಾಗಿ ಪ್ರವೇಶಿಸುವ ಪುರುಷ ಪ್ರಯಾಣಿಕರಿಗೆ 2,500 ರೂಪಾಯಿವರೆಗೆ ದಂಡ ವಿಧಿಸಲಾಗುತ್ತದೆ. ಮಹಿಳಾ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.

ಇದೇ ವೇಳೆ ರೈಲ್ವೆ ನಿಲ್ದಾಣ ಅಥವಾ ರೈಲ್ವೆ ಆವರಣದಲ್ಲಿ ಪರವಾನಗಿ ಇಲ್ಲದೆ ವ್ಯಾಪಾರ ನಡೆಸುವುದು, ಅನಧಿಕೃತವಾಗಿ ವಸ್ತುಗಳ ಮಾರಾಟ ಮಾಡುವುದು ಅಥವಾ ಭಿಕ್ಷೆ ಬೇಡುವುದು ಕಂಡುಬಂದರೆ 2,000 ರೂಪಾಯಿ ದಂಡ ವಿಧಿಸಲಾಗುತ್ತದೆ.

ರೈಲಿನಲ್ಲಿ ನಿಷೇಧಿತ ಅಥವಾ ಅಪಾಯಕಾರಿ ವಸ್ತುಗಳನ್ನು ಸಾಗಿಸುವವರ ವಿರುದ್ಧವೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದ್ದು, ಇಂತಹ ಉಲ್ಲಂಘನೆಗಳಿಗೆ 10,000 ರೂಪಾಯಿವರೆಗೆ ದಂಡ ವಿಧಿಸುವ ಅವಕಾಶವನ್ನು ರೈಲ್ವೆ ಇಲಾಖೆ ಹೊಂದಿದೆ.

ಅಲ್ಲದೆ, ರೈಲ್ವೆ ನಿಲ್ದಾಣ ಅಥವಾ ರೈಲುಗಳಿಗೆ ಅನಧಿಕೃತವಾಗಿ ಪ್ರವೇಶಿಸುವವರಿಗೂ 500 ರೂಪಾಯಿ ದಂಡ ವಿಧಿಸಲಾಗುತ್ತದೆ. ಹೊಸ ನಿಯಮಗಳ ಮೂಲಕ ರೈಲು ಸೇವೆಗಳಲ್ಲಿ ಶಿಸ್ತು ಮತ್ತು ಭದ್ರತೆಯನ್ನು ಮತ್ತಷ್ಟು ಬಲಪಡಿಸಲು ಇಲಾಖೆ ಮುಂದಾಗಿದೆ.

ಮೈಸೂರು ಮೃಗಾಲಯಕ್ಕೆ ಕಳಿಸಿದ್ದೇವೆ ಎಂದಿದ್ದ ನರಭಕ್ಷಕ ಚಿರತೆ ಹನೂರು ಕಾಡಿನಲ್ಲಿ ಪತ್ತೆ! ಅರಣ್ಯ ಇಲಾಖೆ ವಿರುದ್ಧ ಜನರ ಕಿಡಿ

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ಈ ಹಿಂದೆ ಮಾನವ ಬಲಿ ಪಡೆದಿದ್ದ ನರಭಕ್ಷಕ ಚಿರತೆಯನ್ನು ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದ ಅಧಿಕಾರಿಗಳ ಹೇಳಿಕೆ ಪ್ರಶ್ನಾರ್ಥಕವಾಗಿದೆ. ಬೋನಿಗೆ ಬಿದ್ದ ಚಿರತೆಯ ಕತ್ತಿನಲ್ಲಿ ಪತ್ತೆಯಾದ ಕಾಲರ್ ಐಡಿ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ.

ಹನೂರು ತಾಲೂಕಿನ ಪೊನ್ನಾಚಿ ಬಳಿಯ ಕಕ್ಕೆಹೊಲ ಗ್ರಾಮದಲ್ಲಿ ಹಸು, ಮೇಕೆ ಸೇರಿದಂತೆ ಸಾಕುಪ್ರಾಣಿಗಳ ಮೇಲೆ ನಿರಂತರ ದಾಳಿ ನಡೆಸುತ್ತಿದ್ದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಬೋನು ಅಳವಡಿಸಿತ್ತು. ತಡರಾತ್ರಿ ಬೋನಿಗೆ ಸಿಕ್ಕಿಬಿದ್ದ ಚಿರತೆಯನ್ನು ಪರಿಶೀಲಿಸಿದ ವೇಳೆ ಅದರ ಕತ್ತಿನಲ್ಲಿ ಅಳವಡಿಸಿದ್ದ ಕಾಲರ್ ಐಡಿ ಪತ್ತೆಯಾಗಿದೆ.

ಈ ಚಿರತೆ ಈ ಹಿಂದೆ ತಾಳಬೆಟ್ಟ ಪ್ರದೇಶದಲ್ಲಿ ಪಾದಯಾತ್ರಿಕ ಪ್ರವೀಣ್ ಎಂಬುವವರನ್ನು ಬಲಿ ಪಡೆದಿದ್ದ ನರಭಕ್ಷಕ ಚಿರತೆಯೇ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆಯ ಬಳಿಕ ರಂಗಸ್ವಾಮಿವೊಡ್ಡು ಪ್ರದೇಶದಲ್ಲಿ ಸೆರೆ ಹಿಡಿದಿದ್ದ ಚಿರತೆಯನ್ನು ಮೈಸೂರಿನ ಚಾಮುಂಡಿ ಪುನರ್ವಸತಿ ಕೇಂದ್ರಕ್ಕೆ ರವಾನಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕೃತವಾಗಿ ತಿಳಿಸಿತ್ತು.

ಆದರೆ, ಈಗ ಅದೇ ಚಿರತೆ ಪೊನ್ನಾಚಿ ಪ್ರದೇಶದಲ್ಲಿ ಪತ್ತೆಯಾಗಿರುವುದು ಅರಣ್ಯ ಇಲಾಖೆಯ ಹೇಳಿಕೆಯನ್ನು ಅನುಮಾನಕ್ಕೆ ದೂಡಿದೆ. ಅಧಿಕಾರಿಗಳು ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ, ನರಭಕ್ಷಕ ಚಿರತೆಯನ್ನು ಆದಿವಾಸಿ ಹಾಡಿಗಳು ಮತ್ತು ಗ್ರಾಮಗಳ ಸಮೀಪದ ಅರಣ್ಯ ಪ್ರದೇಶದಲ್ಲಿ ಬಿಟ್ಟಿದ್ದಾರೆ ಎಂಬ ಆರೋಪ ತೀವ್ರಗೊಂಡಿದೆ.

ಈ ಬೆಳವಣಿಗೆಗೆ ಕಕ್ಕೆಹೊಲ ಗ್ರಾಮ ಹಾಗೂ ಸುತ್ತಮುತ್ತಲಿನ ಸೋಲಿಗ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ. “ಮಾನವ ಜೀವಕ್ಕೆ ಅಪಾಯಕಾರಿಯಾದ ಚಿರತೆಯನ್ನು ನಮ್ಮ ವಾಸಸ್ಥಳದ ಸಮೀಪ ಬಿಡುವುದು ಅತ್ಯಂತ ನಿರ್ಲಕ್ಷ್ಯದ ಕ್ರಮ. ಜಾನುವಾರು ನಷ್ಟದ ಜೊತೆಗೆ ಗ್ರಾಮಸ್ಥರ ಜೀವಕ್ಕೂ ಅಪಾಯ ತಂದೊಡ್ಡಲಾಗಿದೆ” ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಘಟನೆಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

ಇಂದು PM-KISAN 23ನೇ ಕಂತು ಬಿಡುಗಡೆ; 9.44 ಕೋಟಿ ರೈತರ ಖಾತೆಗೆ ₹18,880 ಕೋಟಿ ಜಮೆ

0

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 23ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಬಿಡುಗಡೆ ಮಾಡಲಿದ್ದಾರೆ. ಈ ಮೂಲಕ ದೇಶದ 9.44 ಕೋಟಿಗೂ ಅಧಿಕ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ತಲಾ 2,000 ರೂಪಾಯಿಯಂತೆ ಒಟ್ಟು 18,880 ಕೋಟಿ ರೂಪಾಯಿಗೂ ಹೆಚ್ಚು ಹಣ ನೇರವಾಗಿ ಜಮೆಯಾಗಲಿದೆ.

ಪ್ರಧಾನಿ ಮೋದಿ ಅವರು ಇಂದು ಮಧ್ಯಾಹ್ನ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಾರಕೇಶ್ವರದಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಹಲವು ಅಭಿವೃದ್ಧಿ ಮತ್ತು ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇದೇ ವೇದಿಕೆಯಲ್ಲಿ ಪಿಎಂ-ಕಿಸಾನ್ ಯೋಜನೆಯ 23ನೇ ಕಂತಿನ ಹಣವನ್ನು ರೈತರಿಗೆ ಬಿಡುಗಡೆ ಮಾಡಲಿದ್ದಾರೆ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ-ಕಿಸಾನ್ ಅಡಿಯಲ್ಲಿ ಅರ್ಹ ರೈತರಿಗೆ ವಾರ್ಷಿಕ 6,000 ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ. ಈ ಮೊತ್ತವನ್ನು ಮೂರು ಸಮಾನ ಕಂತುಗಳಲ್ಲಿ ರೈತರ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ. ಅದರ ಭಾಗವಾಗಿ ಇದೀಗ 23ನೇ ಕಂತಿನ ಹಣ ಬಿಡುಗಡೆಗೊಳ್ಳುತ್ತಿದೆ.

ಪಶ್ಚಿಮ ಬಂಗಾಳದಲ್ಲಿಯೂ ಈ ಯೋಜನೆಯ ಲಕ್ಷಾಂತರ ರೈತರು ಪ್ರಯೋಜನ ಪಡೆಯಲಿದ್ದು, ಸುಮಾರು 45 ಲಕ್ಷಕ್ಕೂ ಹೆಚ್ಚು ರೈತರಿಗೆ 907 ಕೋಟಿ ರೂಪಾಯಿಗೂ ಅಧಿಕ ಮೊತ್ತ ತಲುಪಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದ ರೈತರಿಗೆ ಕೇಂದ್ರದ ವಿವಿಧ ಕೃಷಿ ಯೋಜನೆಗಳ ಪ್ರಯೋಜನಗಳನ್ನು ತಲುಪಿಸುವ ಉದ್ದೇಶದಿಂದ ಹಲವು ಹೊಸ ಕಾರ್ಯಕ್ರಮಗಳಿಗೂ ಚಾಲನೆ ನೀಡಲಾಗುತ್ತಿದೆ.

ತಾರಕೇಶ್ವರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಡಿಜಿಟಲ್ ಕೃಷಿ ಮಿಷನ್ ಅಡಿಯಲ್ಲಿ ಅಗ್ರಿ ಸ್ಟ್ಯಾಕ್, ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ಹಾಗೂ ಪ್ರಧಾನ ಮಂತ್ರಿ ಧನ-ಧಾನ್ಯ ಕೃಷಿ ಯೋಜನೆ ಸೇರಿದಂತೆ ಹಲವು ಕೃಷಿ ಸಂಬಂಧಿತ ಉಪಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ತಾರಕೇಶ್ವರವು ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರೊಂದಿಗೆ ಐತಿಹಾಸಿಕ ನಂಟು ಹೊಂದಿದ್ದು, ಬಂಗಾಳದ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದರೆ, ಉಗುಳಿದರೆ ಭಾರಿ ದಂಡ; ಸೆಪ್ಟೆಂಬರ್ 1ರಿಂದ ಹೊಸ ನಿಯಮ ಜಾರಿ

0

ಕೊಲ್ಕತ್ತಾ: ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಮತ್ತು ಸೌಂದರ್ಯ ಕಾಪಾಡುವ ಉದ್ದೇಶದಿಂದ ಪಶ್ಚಿಮ ಬಂಗಾಳ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ರಸ್ತೆ, ಉದ್ಯಾನವನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವ ಮತ್ತು ಉಗುಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಹೊಸ ನಿಯಮಗಳು ಸೆಪ್ಟೆಂಬರ್ 1ರಿಂದ ಜಾರಿಗೆ ಬರಲಿವೆ.

ರಾಜ್ಯದ ಪ್ರಮುಖ ನಗರಗಳು ಹಾಗೂ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆಯುವುದು ಮತ್ತು ಗುಟ್ಕಾ, ಪಾನ್ ಸೇವಿಸಿ ರಸ್ತೆ ಹಾಗೂ ಗೋಡೆಗಳ ಮೇಲೆ ಉಗುಳುವುದು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇಂತಹ ಚಟುವಟಿಕೆಗಳಿಂದ ನಗರಗಳ ಸೌಂದರ್ಯ ಹಾಳಾಗುವುದರ ಜೊತೆಗೆ ಸಾಂಕ್ರಾಮಿಕ ರೋಗಗಳ ಹರಡುವಿಕೆಯ ಭೀತಿಯೂ ಹೆಚ್ಚುತ್ತಿದೆ ಎಂದು ಸರ್ಕಾರ ತಿಳಿಸಿದೆ.

ಹೊಸ ನಿಯಮದ ಪ್ರಕಾರ, ರಸ್ತೆ, ಫುಟ್‌ಪಾತ್, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಉದ್ಯಾನವನ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವುದು ಅಥವಾ ಉಗುಳುವುದು ಕಂಡುಬಂದರೆ ಸಂಬಂಧಿತ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸ್ಥಳದಲ್ಲೇ ದಂಡ ವಿಧಿಸಲಿದ್ದಾರೆ.

ನಿಯಮಗಳ ಪರಿಣಾಮಕಾರಿ ಜಾರಿಗೆ ಪ್ರಮುಖ ರಸ್ತೆಗಳು ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿಗಾ ವಹಿಸಲಾಗುತ್ತದೆ. ನಿಯಮ ಉಲ್ಲಂಘಿಸುವವರನ್ನು ಗುರುತಿಸಿ ದಂಡದ ನೋಟಿಸ್ ಕಳುಹಿಸುವ ವ್ಯವಸ್ಥೆಯನ್ನೂ ರೂಪಿಸಲಾಗಿದೆ.

ಮೊದಲ ಬಾರಿಗೆ ತಪ್ಪು ಮಾಡಿದವರಿಗೆ ನಿಗದಿತ ದಂಡ ವಿಧಿಸಲಾಗುವುದು. ಅದೇ ವ್ಯಕ್ತಿ ಮತ್ತೆ ನಿಯಮ ಉಲ್ಲಂಘಿಸಿದರೆ ದಂಡದ ಮೊತ್ತವನ್ನು ಹೆಚ್ಚಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ನಿಯಮವನ್ನು ಜಾರಿಗೊಳಿಸಲು ಕೊಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್ ಸೇರಿದಂತೆ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯಿತಿಗಳಿಗೆ ಅಗತ್ಯ ಅಧಿಕಾರ ನೀಡಲಾಗಿದೆ. ವಾಣಿಜ್ಯ ಸಂಕೀರ್ಣಗಳು, ಮಾರುಕಟ್ಟೆಗಳು, ಹೋಟೆಲ್‌ಗಳು ಮತ್ತು ಇತರೆ ವ್ಯಾಪಾರ ಕೇಂದ್ರಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡದ ಮಾಲೀಕರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಇದೇ ವೇಳೆ, ಸೆಪ್ಟೆಂಬರ್ 1ರಿಂದ ದಂಡ ಪ್ರಕ್ರಿಯೆ ಆರಂಭವಾಗುವ ಮುನ್ನ ಇಡೀ ಆಗಸ್ಟ್ ತಿಂಗಳಲ್ಲಿ ರಾಜ್ಯಾದ್ಯಂತ ವಿಶೇಷ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲು ಸರ್ಕಾರ ಯೋಜಿಸಿದೆ. ಮೈಕ್‌ಗಳ ಮೂಲಕ ಪ್ರಚಾರ, ಪೋಸ್ಟರ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಹೊಸ ನಿಯಮಗಳ ಕುರಿತು ಮಾಹಿತಿ ನೀಡಲಾಗುವುದು.

ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಕಾಪಾಡುವುದು ಮತ್ತು ಆರೋಗ್ಯಕರ ವಾತಾವರಣ ನಿರ್ಮಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಪಿಡಿಎಸ್ ಅಕ್ಕಿ ಕಳ್ಳರ ಬೆನ್ನತ್ತಿದ ಆಹಾರ ಇಲಾಖೆ ಅಧಿಕಾರಿ: ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ!

0

ರೋಣ: ಬಡವರ ಹೊಟ್ಟೆ ತುಂಬಬೇಕಿದ್ದ ಅನ್ನಭಾಗ್ಯ ಅಕ್ಕಿಯನ್ನು ಕಾಳಸಂತೆಗೆ ಸಾಗಿಸಲು ಯತ್ನಿಸುತ್ತಿದ್ದ ಜಾಲದ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಲೆಗೆ ಬೀಳಿಸಿರುವ ಘಟನೆ ರೋಣ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.

ಆಹಾರ ನಿರೀಕ್ಷಕಿ ಸುವರ್ಣ ಜಮ್ಮನಕಟ್ಟಿ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಜೂನ್ 18ರಂದು ಬೆಳಿಗ್ಗೆ ರೋಣ-ನರಗುಂದ ರಸ್ತೆಯ ಬಸಲಾಪುರ ಕ್ರಾಸ್ ಬಳಿ ದಾಳಿ ನಡೆಸಲಾಯಿತು. ಈ ವೇಳೆ ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

ದಾಳಿಯ ವೇಳೆ ಗದಗ ತಾಲೂಕಿನ ಹುಯಿಲಗೋಳ ಗ್ರಾಮದ ನಾಗಪ್ಪ ಭಜಂತ್ರಿ (29) ಹಾಗೂ ಗದಗ-ಬೆಟಗೇರಿಯ ಶ್ರೀಕಾಂತ ಭಜಂತ್ರಿ ಎಂಬುವರು ಬಡವರಿಗೆ ಸರ್ಕಾರ ವಿತರಿಸುವ ಪಿಡಿಎಸ್ ಅಕ್ಕಿಯನ್ನು ಸಂಗ್ರಹಿಸಿ ಕಾಳಸಂತೆಗೆ ಸಾಗಿಸುತ್ತಿರುವುದು ಪತ್ತೆಯಾಗಿದೆ. ಅಧಿಕಾರಿಗಳು ತಕ್ಷಣವೇ ಆಟೋ ತಡೆದು ಪರಿಶೀಲನೆ ನಡೆಸಿದಾಗ 15 ಚೀಲಗಳಲ್ಲಿ ತುಂಬಿದ್ದ ಅಕ್ಕಿ ಪತ್ತೆಯಾಯಿತು.

ತನಿಖೆಯಲ್ಲಿ ಒಟ್ಟು 6 ಕ್ವಿಂಟಲ್ 10 ಕೆ.ಜಿ. ಪಿಡಿಎಸ್ ಅಕ್ಕಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು ಎಂಬುದು ಬಹಿರಂಗವಾಗಿದೆ. ಸರ್ಕಾರದ ಯೋಜನೆಯಡಿ ಬಡ ಕುಟುಂಬಗಳಿಗೆ ವಿತರಿಸಬೇಕಿದ್ದ ಅಕ್ಕಿಯನ್ನು ಮಧ್ಯವರ್ತಿಗಳ ಮೂಲಕ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದರೆಂಬ ಶಂಕೆ ವ್ಯಕ್ತವಾಗಿದೆ.

ದಾಳಿಯಲ್ಲಿ ₹13,725 ಮೌಲ್ಯದ 15 ಅಕ್ಕಿ ಚೀಲಗಳು, ₹1.50 ಲಕ್ಷ ಮೌಲ್ಯದ ಆಟೋ ರಿಕ್ಷಾ (ಕೆಎ-26/ಬಿ-6642) ಹಾಗೂ ಅಕ್ಕಿಯ ಮಾದರಿಯನ್ನು ಜಪ್ತಿ ಮಾಡಲಾಗಿದೆ. ಒಟ್ಟು ₹1,63,837 ಮೌಲ್ಯದ ವಸ್ತುಗಳು ಅಧಿಕಾರಿಗಳ ವಶಕ್ಕೆ ಬಂದಿವೆ.

ಆಹಾರ ಇಲಾಖೆ ಅಧಿಕಾರಿಗಳ ದೂರಿನ ಮೇರೆಗೆ ರೋಣ ಪೊಲೀಸ್ ಠಾಣೆಯಲ್ಲಿ ಅಗತ್ಯ ವಸ್ತುಗಳ ಕಾಯ್ದೆ-1955 ಹಾಗೂ ಪಿಡಿಎಸ್ ನಿಯಂತ್ರಣ ಆದೇಶ-1992ರ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ದಾಳಿಯ ರೂವಾರಿ ಸುವರ್ಣ ಜಮ್ಮನಕಟ್ಟಿ;

ಪಿಡಿಎಸ್ ಅಕ್ಕಿಯ ಅಕ್ರಮ ಸಾಗಾಟದ ಬಗ್ಗೆ ದೊರೆತ ಖಚಿತ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆಯ ರೂಪುರೇಷೆ ಸಿದ್ಧಪಡಿಸಿದ ರೋಣದ ಆಹಾರ ನಿರೀಕ್ಷಕಿ ಸುವರ್ಣ ಜಮ್ಮನಕಟ್ಟಿ ಸ್ಥಳಕ್ಕೆ ತೆರಳಿ ದಾಳಿ ನಡೆಸಿದರು. ಅವರ ಚುರುಕು ಕಾರ್ಯಾಚರಣೆಯಿಂದ ಕಾಳಸಂತೆಗೆ ಸಾಗುತ್ತಿದ್ದ ಅಕ್ಕಿ ಜಾಲ ಬಯಲಿಗೆ ಬಂದಿದ್ದು, ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ರಿಹ್ಯಾಬ್ ಮಾಲೀಕ ಹತ್ಯೆ: ಬೆಂಗಳೂರು ಪುನರ್ವಸತಿ ಕೇಂದ್ರಗಳಲ್ಲಿ ಶುರುವಾಯ್ತು ಭೀತಿ!

0

ಬೆಂಗಳೂರು: ಚಂದ್ರಲೇಔಟ್‌ನಲ್ಲಿರುವ ನ್ಯೂ ಲೈಫ್ ರಿಹ್ಯಾಬ್ ಸೆಂಟರ್ ಮಾಲೀಕ ಶಿವಲಿಂಗಯ್ಯ ಹತ್ಯೆ ಪ್ರಕರಣದ ಬಳಿಕ ನಗರದ ಇತರೆ ಪುನರ್ವಸತಿ ಕೇಂದ್ರಗಳ ಮಾಲೀಕರಲ್ಲಿ ಆತಂಕ ಮನೆ ಮಾಡಿದೆ.

ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು ಹಲವು ಆಯಾಮಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ರಿಹ್ಯಾಬ್ ಕೇಂದ್ರದಲ್ಲಿದ್ದ ನಿತಿನ್ ಎಂಬಾತನನ್ನು ಬಿಡಿಸಿಕೊಂಡು ಹೋಗುವ ಉದ್ದೇಶದಿಂದಲೇ ಹತ್ಯೆ ನಡೆಸಿರುವ ಸಾಧ್ಯತೆಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಈ ಕೃತ್ಯ ಪೂರ್ವನಿಯೋಜಿತವಾಗಿದ್ದು, ಎಂಟರಿಂದ ಒಂಬತ್ತು ಮಂದಿ ದುಷ್ಕರ್ಮಿಗಳು ಸಂಚಿನಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಹತ್ಯೆಯ ಬಳಿಕ ಆರೋಪಿಗಳು ಸ್ಥಳದಿಂದ ಒಂದು ಬ್ಯಾಗ್‌ನ್ನು ತೆಗೆದುಕೊಂಡು ಹೋಗಿರುವ ಮಾಹಿತಿ ಲಭ್ಯವಾಗಿದೆ. ಬ್ಯಾಗ್‌ನಲ್ಲಿ ಹಣ ಇತ್ತೇ ಅಥವಾ ರಿಹ್ಯಾಬ್‌ನಲ್ಲಿದ್ದ ವ್ಯಕ್ತಿಯ ಬಟ್ಟೆಗಳಿದ್ದವೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

ತುಂಬಾ ದಿನಗಳಿಂದಲೇ ಹತ್ಯೆಯ ಸಂಚು ರೂಪಿಸಲಾಗಿತ್ತು ಎಂಬ ಅನುಮಾನ ವ್ಯಕ್ತವಾಗಿದ್ದು, ಘಟನೆ ನಡೆದ ವೇಳೆ ಮಾಲೀಕನ ಪುತ್ರ ಹಾಗೂ ಚಾಲಕ ಸ್ಥಳದಲ್ಲಿ ಇರದಿರುವುದನ್ನು ಗಮನಿಸಿ ದುಷ್ಕರ್ಮಿಗಳು ದಾಳಿ ನಡೆಸಿರುವ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಪ್ರಕರಣದ ಬೆನ್ನಲ್ಲೇ ನಗರದ ಇತರೆ ಪುನರ್ವಸತಿ ಕೇಂದ್ರಗಳ ಕಾರ್ಯವೈಖರಿ ಹಾಗೂ ಭದ್ರತಾ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಲು ಸೂಚನೆ ನೀಡಲಾಗಿದೆ.

ಚಂದ್ರಲೇಔಟ್ ಪೊಲೀಸರು ಮೂರು ವಿಶೇಷ ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದು, ಹಂತಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

error: Content is protected !!