ನೆಲಮಂಗಲ: ಮನೆಗೆ ಪೇಂಟ್ ಕೆಲಸ ಮಾಡಲು ಬಂದಿದ್ದ ವ್ಯಕ್ತಿಗಳೇ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿಯ ರಾಮಾಂಜನೇಯ ಬಡಾವಣೆಯಲ್ಲಿ ನಡೆದಿದೆ.
ನಿತ್ಯಾ ಚಂದ್ರಶೇಖರ್ ದಂಪತಿಗೆ ಸೇರಿದ ಮನೆಯಲ್ಲಿ ಸುಮಾರು 254 ಗ್ರಾಂ ತೂಕದ, ಅಂದಾಜು 25 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಕಳ್ಳರು ದೋಚಿರುವುದಾಗಿ ಆರೋಪಿಸಲಾಗಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಹಿತಿಯ ಪ್ರಕಾರ, ನಿತ್ಯಾ ಚಂದ್ರಶೇಖರ್ ದಂಪತಿಗಳು ಎರಡು ಅಂತಸ್ತಿನ ಮನೆಯನ್ನು ನಿರ್ಮಿಸಿದ್ದು, ಕೆಲವು ತಿಂಗಳ ಹಿಂದೆ ಬಾಡಿಗೆದಾರರು ಮನೆ ಖಾಲಿ ಮಾಡಿದ್ದರು. ಇದನ್ನು ಗಮನಿಸಿದ್ದ ಪೇಂಟರ್ ಲಿಂಗರಾಜು, ಮನೆಗೆ ಬಂದು ಪೇಂಟ್ ಕೆಲಸ ಮಾಡಿಕೊಡುವುದಾಗಿ ಹೇಳಿ ತನ್ನ ಮೊಬೈಲ್ ಸಂಖ್ಯೆಯನ್ನು ನೀಡಿದ್ದನು.
ಕೆಲವು ದಿನಗಳ ಬಳಿಕ ಚಂದ್ರಶೇಖರ್ ಅವರು ಲಿಂಗರಾಜುವನ್ನು ಸಂಪರ್ಕಿಸಿ ಮನೆಯ ಮೊದಲ ಮಹಡಿಗೆ ಪೇಂಟ್ ಕೆಲಸ ನೀಡಿದ್ದರು. ಬಳಿಕ ವಾಸವಿದ್ದ ಭಾಗದ ಕಿಟಕಿ ಹಾಗೂ ಕೊಠಡಿಗಳಿಗೆ ಸಹ ಬಣ್ಣ ಬಳಿಯುವಂತೆ ಸೂಚಿಸಿದ್ದರು. ಅದರಂತೆ ಪವನ್ ಕುಮಾರ್, ಮಂಜುನಾಥ್ ಹಾಗೂ ವೆಂಕಟೇಶ್ ಎಂಬುವರು ಮನೆಗೆ ಬಂದು ಪೇಂಟ್ ಕೆಲಸ ನಡೆಸಿದ್ದಾರೆ ಎನ್ನಲಾಗಿದೆ.
ಈ ವೇಳೆ ಮನೆಯ ಒಂದು ಕೊಠಡಿಯಲ್ಲಿ ಪೇಂಟ್ ಕೆಲಸ ನಡೆಯುತ್ತಿದ್ದಾಗ, ಮಗುವಿನ ಅಳುವ ಶಬ್ದ ಕೇಳಿಬಂದ ಕಾರಣ ಮನೆಯವರು ಹೊರಗೆ ತೆರಳಿದ್ದಾರೆ. ಈ ಅವಕಾಶವನ್ನು ಬಳಸಿಕೊಂಡ ಆರೋಪಿಗಳು ಬೀರುವಿನಲ್ಲಿದ್ದ ಚಿನ್ನಾಭರಣವನ್ನು ಕಳವು ಮಾಡಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕಳವಾದ ಚಿನ್ನಾಭರಣದ ಒಟ್ಟು ತೂಕ 254 ಗ್ರಾಂ ಆಗಿದ್ದು, ಇದರ ಮೌಲ್ಯ ಸುಮಾರು 25 ಲಕ್ಷ ರೂಪಾಯಿಗಳಾಗುತ್ತದೆ ಎಂದು ಅಂದಾಜಿಸಲಾಗಿದೆ.
ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಕಳವಾದ ಚಿನ್ನಾಭರಣವನ್ನು ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸುವಂತೆ ಕುಟುಂಬಸ್ಥರು ಪೊಲೀಸರಿಗೆ ಮನವಿ ಮಾಡಿದ್ದಾರೆ.

