Home Blog

ಶಾಲೆಯಲ್ಲಿ ಏಕಾಏಕಿ ಕುಸಿದು ಬಿದ್ದ ಅತಿಥಿ ಶಿಕ್ಷಕ: ಹೃದಯಾಘಾತದಿಂದ 29 ವರ್ಷದ ಯುವಕ ಸಾವು

0

ರಾಯಚೂರು: ಮಸ್ಕಿ ತಾಲೂಕಿನ ಮೆದಿಕಿನಾಳ ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅತಿಥಿ ಶಿಕ್ಷಕರೊಬ್ಬರು ವಿದ್ಯಾರ್ಥಿಗಳೊಂದಿಗೆ ಆಟವಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ನಾಗರಬೆಂಚಿ ಗ್ರಾಮದ 29 ವರ್ಷದ ವೀರನಗೌಡ ಪಾಟೀಲ್ ಮೃತ ಶಿಕ್ಷಕರಾಗಿದ್ದಾರೆ. ಮಧ್ಯಾಹ್ನ ಊಟದ ನಂತರ ಶಾಲಾ ಆವರಣದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ವೇಳೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡು ನೆಲಕ್ಕುರುಳಿದ್ದಾರೆ.

ಸಹ ಶಿಕ್ಷಕರು ಹಾಗೂ ಸ್ಥಳೀಯರು ತಕ್ಷಣ ಅವರನ್ನು ಮಸ್ಕಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರೂ, ಆಸ್ಪತ್ರೆಗೆ ತಲುಪುವ ಮುನ್ನವೇ ಅವರು ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಯುವ ವಯಸ್ಸಿನಲ್ಲೇ ಶಿಕ್ಷಕರ ಅಕಾಲಿಕ ನಿಧನ ಶಾಲೆಯ ವಿದ್ಯಾರ್ಥಿಗಳು, ಸಹೋದ್ಯೋಗಿಗಳು ಹಾಗೂ ಗ್ರಾಮಸ್ಥರಲ್ಲಿ ತೀವ್ರ ದುಃಖ ಮತ್ತು ಆತಂಕ ಮೂಡಿಸಿದೆ.

ಜಿಲ್ಲಾ ನ್ಯಾಯಾಲಯಗಳ ಮೇಲೆ ಮತ್ತೆ ಬಾಂಬ್ ಭೀತಿ! ಹಾವೇರಿ, ಧಾರವಾಡ, ಕೊಡಗಿನಲ್ಲಿ ಹೈ ಅಲರ್ಟ್ – ಶಾಲೆಯೂ ಖಾಲಿ

0

ಹಾವೇರಿ: ಹಾವೇರಿ, ಧಾರವಾಡ ಹಾಗೂ ಕೊಡಗು ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ನ್ಯಾಯಾಲಯಗಳ ಜೊತೆಗೆ ಮಡಿಕೇರಿಯ ಕೇಂದ್ರೀಯ ವಿದ್ಯಾಲಯಕ್ಕೂ ಬೆದರಿಕೆ ಸಂದೇಶ ಬಂದಿರುವುದರಿಂದ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

ಹಾವೇರಿ ಜಿಲ್ಲಾ ನ್ಯಾಯಾಲಯಕ್ಕೆ ಎರಡನೇ ಬಾರಿ ಬೆದರಿಕೆ ಸಂದೇಶ ಬಂದ ತಕ್ಷಣ ಕಲಾಪಗಳನ್ನು ಸ್ಥಗಿತಗೊಳಿಸಿ, ನ್ಯಾಯಾಧೀಶರು, ವಕೀಲರು, ಸಿಬ್ಬಂದಿ ಹಾಗೂ ಕಕ್ಷಿದಾರರನ್ನು ಹೊರಗೆ ಸ್ಥಳಾಂತರಿಸಲಾಯಿತು. ಕೋರ್ಟ್ ಆವರಣ, ಕಟ್ಟಡ ಹಾಗೂ ಪಾರ್ಕಿಂಗ್ ಪ್ರದೇಶದಲ್ಲಿ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದಿಂದ ಸಂಪೂರ್ಣ ತಪಾಸಣೆ ನಡೆಸಲಾಗುತ್ತಿದೆ. ದುಷ್ಕರ್ಮಿಗಳು ಮಧ್ಯಾಹ್ನ 2.15ಕ್ಕೆ ಸ್ಫೋಟಿಸುವುದಾಗಿ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇ-ಮೇಲ್ ಕಳುಹಿಸಿದವರ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಶನಿವಾರದ ನ್ಯಾಯಾಂಗ ಕಲಾಪಗಳನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ಮಡಿಕೇರಿಯ ಕೇಂದ್ರೀಯ ವಿದ್ಯಾಲಯ ಮತ್ತು ಜಿಲ್ಲಾ ನ್ಯಾಯಾಲಯಕ್ಕೂ ಇದೇ ರೀತಿಯ ಬೆದರಿಕೆ ಇ-ಮೇಲ್ ಬಂದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲಾಯಿತು. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ಶಾಲಾ ಆವರಣದ ಸಂಪೂರ್ಣ ಶೋಧ ನಡೆಸಲಾಗಿದೆ. ಈ ಬೆಳವಣಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಿಬ್ಬಂದಿಯಲ್ಲಿ ಆತಂಕ ಸೃಷ್ಟಿಸಿತು.

ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಕಳೆದ ಎಂಟು ದಿನಗಳಲ್ಲಿ ಮೂರನೇ ಬಾರಿ ಬಾಂಬ್ ಬೆದರಿಕೆ ಬಂದಿದೆ. ಈ ಬಾರಿ ‘ಅನ್ನನಾಥಮ್ ಅರಿಯಪ್ಪನ್’ ಹೆಸರಿನಲ್ಲಿ ಕಳುಹಿಸಲಾದ ಇ-ಮೇಲ್‌ನಲ್ಲಿ ಮೂರು ಗಂಟೆಯೊಳಗೆ ಬಾಂಬ್ ಸ್ಫೋಟಿಸುವುದಾಗಿ ಉಲ್ಲೇಖಿಸಲಾಗಿದೆ. ಪ್ರತಿ ಬೆದರಿಕೆ ಸಂದೇಶದ ಬಳಿಕ ಪೊಲೀಸರು, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳ ಪರಿಶೀಲನೆ ನಡೆಸುತ್ತಿದ್ದು, ಇತ್ತೀಚಿನ ಪ್ರಕರಣದಲ್ಲೂ ತನಿಖೆ ಮುಂದುವರಿದಿದೆ.

ಶಿರಾದಲ್ಲಿ ಭೀಕರ ದುರಂತ! ಪ್ರೇಯಸಿಗೆ ಚಾಕು ಇರಿದು ಕಾರಿನಲ್ಲೇ ಪೆಟ್ರೋಲ್ ಬಾಂಬ್ ಸಿಡಿಸಿಕೊಂಡ ಯುವಕ ಸಜೀವ ದಹನ

0

ತುಮಕೂರು: ಶಿರಾ ತಾಲೂಕಿನ ಜೋಗಿಹಳ್ಳಿ ಸಮೀಪ ಪ್ರೇಮಿಗಳ ನಡುವಿನ ವೈಷಮ್ಯ ರಕ್ತರಂಜಿತ ದುರಂತಕ್ಕೆ ಕಾರಣವಾಗಿದ್ದು, ಯುವತಿಗೆ ಚಾಕುವಿನಿಂದ ಇರಿದ ಬಳಿಕ ಕಾರಿನೊಳಗೆ ಪೆಟ್ರೋಲ್ ಬಾಂಬ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತನನ್ನು ನಾಗೇಂದ್ರ (30) ಎಂದು ಗುರುತಿಸಲಾಗಿದ್ದು, ತುಮಕೂರು–ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನೊಳಗೆ ಸಂಭವಿಸಿದ ಸ್ಫೋಟದಲ್ಲಿ ಆತ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾನೆ. ಘಟನೆಯ ವೇಳೆ ಗಂಭೀರವಾಗಿ ಗಾಯಗೊಂಡ ಯುವತಿಯನ್ನು ತಕ್ಷಣ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಇಬ್ಬರೂ ಬೆಂಗಳೂರಿನಿಂದ ಅಂಕೋಲ ಕಡೆಗೆ ತೆರಳುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

ಆರೋಪಿ ನಾಗೇಂದ್ರ ಈ ಕೃತ್ಯವನ್ನು ಪೂರ್ವಯೋಜಿತವಾಗಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಆತ ಮೊದಲೇ ಬಾಡಿಗೆ ಕಾರು ಮಾಡಿಕೊಂಡು ಪೆಟ್ರೋಲ್ ಬಾಂಬ್‌ನ್ನು ಜೊತೆಗೆ ತಂದಿದ್ದ ಎಂದು ತನಿಖೆಯಲ್ಲಿ ಗೊತ್ತಾಗಿದೆ. ಪ್ರೇಮ ಸಂಬಂಧದ ಹಿನ್ನೆಲೆ ಘಟನೆ ನಡೆದಿರುವ ಸಾಧ್ಯತೆಯನ್ನು ಪೊಲೀಸರು ಎಲ್ಲ ಆಯಾಮಗಳಲ್ಲಿ ಪರಿಶೀಲಿಸುತ್ತಿದ್ದಾರೆ.

ತುಮಕೂರು ಎಸ್‌ಪಿ ಅಶೋಕ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಸತ್ಯಾಸತ್ಯತೆ ಬಯಲಿಗೆಳೆಯಲು ತನಿಖೆ ಚುರುಕುಗೊಳಿಸಲಾಗಿದೆ.

ಮುಳ್ಳಯ್ಯನಗಿರಿಯಲ್ಲಿ ಟ್ರಾಫಿಕ್‌ ಅಬ್ಬರ! ಆನ್‌ಲೈನ್ ಟಿಕೆಟ್ ನಿಯಮ ಉಲ್ಲಂಘನೆ ಆರೋಪ – ವಾಹನ ದಟ್ಟಣೆಯಿಂದ ಪ್ರವಾಸಿಗರ ಪರದಾಟ

ಚಿಕ್ಕಮಗಳೂರು: ಸಾಲು-ಸಾಲು ರಜೆ ಪ್ರಯುಕ್ತ ಮುಳ್ಳಯ್ಯನಗಿರಿ, ದತ್ತಪೀಠ ಹಾಗೂ ಗಾಳಿಕೆರೆ ಸೇರಿದಂತೆ ಚಿಕ್ಕಮಗಳೂರಿನ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ದಂಡೇ ಹರಿದು ಬಂದಿದೆ. ಏಕಾಏಕಿ ಸಾವಿರಾರು ವಾಹನಗಳು ಗಿರಿಭಾಗ ಪ್ರವೇಶಿಸಿದ ಪರಿಣಾಮ ಭಾರೀ ಟ್ರಾಫಿಕ್ ಉಂಟಾಗಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಪಂಡರವಳ್ಳಿ–ಸೀತಾಳಯ್ಯನಗಿರಿ ಮಾರ್ಗದ ಕಿರಿದಾದ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರವಾಸಿಗರು ಗಂಟೆಗಟ್ಟಲೇ ಟ್ರಾಫಿಕ್‌ನಲ್ಲಿ ಸಿಲುಕಿ ಹೈರಾಣಾಗಿದ್ದಾರೆ. ಸ್ಥಳದಲ್ಲಿ ವಾಹನಗಳ ಉದ್ದನೆಯ ಸಾಲು ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹಾಗೂ ಚೆಕ್‌ಪೋಸ್ಟ್ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ.

ಈ ನಡುವೆ ಪ್ರವಾಸೋದ್ಯಮ ಇಲಾಖೆಯ ಆನ್‌ಲೈನ್ ಟಿಕೆಟ್ ನಿಯಮ ಪಾಲನೆಯಾಗುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಅಧಿಕೃತ ವ್ಯವಸ್ಥೆಯನ್ನು ಕಡೆಗಣಿಸಿ, ಒಂದೊಂದು ಕಾರಿಗೆ ₹1,000ರಿಂದ ₹1,500 ವರೆಗೆ ಹಣ ಪಡೆದು ಗಿರಿಭಾಗಕ್ಕೆ ಪ್ರವೇಶ ಕಲ್ಪಿಸಲಾಗುತ್ತಿದೆ ಎನ್ನಲಾಗಿದ್ದು, ಇದರಿಂದಲೇ ವಾಹನಗಳ ಸಂಖ್ಯೆ ನಿಯಂತ್ರಣ ತಪ್ಪಿ ಟ್ರಾಫಿಕ್ ಸಮಸ್ಯೆ ಮತ್ತಷ್ಟು ಗಂಭೀರವಾಗಿದೆ ಎಂಬ ಆರೋಪಗಳು ವ್ಯಕ್ತವಾಗಿವೆ.

ಭಕ್ತಿಭಾವದ ಮೇಳ: ಮಂತ್ರಾಲಯದಲ್ಲಿ ‘ರಾಯರ ದರ್ಶನ’ ಆಲ್ಬಂ ಸಾಂಗ್ ಬಿಡುಗಡೆ

ರಾಯಚೂರು: ಮಂತ್ರಾಲಯದ ಗುರುರಾಘವೇಂದ್ರ ಸ್ವಾಮಿ ಸನ್ನಿಧಿಯಲ್ಲಿ ನಡೆದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ‘ರಾಯರ ದರ್ಶನ’ ಎಂಬ ಭಕ್ತಿಗೀತೆ ಆಲ್ಬಂ ಸಾಂಗ್ ಅದ್ದೂರಿಯಾಗಿ ಬಿಡುಗಡೆ ಮಾಡಲಾಗಿದೆ.

ರಾಯರ ಮಠದ ಆವರಣದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಭಕ್ತಿ ಮತ್ತು ಸಂಗೀತದ ಸಂಯೋಜನೆಯೊಂದಿಗೆ ವಿಶೇಷ ಸಾಂಸ್ಕೃತಿಕ ವಾತಾವರಣ ನಿರ್ಮಾಣವಾಯಿತು. ರಾಯರ ಮಠ, ಗುರು ರಾಘವೇಂದ್ರ ಸ್ವಾಮಿಗಳು ಹಾಗೂ ಪ್ರಸ್ತುತ ಪೀಠಾಧಿಪತಿಗಳ ಕುರಿತಾದ ಈ ಆಲ್ಬಂ ಸಾಂಗ್ ಭಕ್ತಿಭಾವವನ್ನು ಪ್ರತಿಬಿಂಬಿಸುವಂತೆ ನಿರ್ಮಿಸಲಾಗಿದೆ.

ಅಜನೀಶ್ ಬಿ ಲೋಕನಾಥ್, ಸಿಆರ್ ಬಾಬಿ ಹಾಗೂ ಎಬಿಬಿಎಸ್ ಸ್ಟುಡಿಯೋ ತಂಡದ ಸಹಯೋಗದಲ್ಲಿ ಲಕ್ಷ್ಮೀ ಗಣೇಶ ಪ್ರೊಡಕ್ಷನ್ಸ್ ಈ ಆಲ್ಬಂ ಸಾಂಗ್ ಅನ್ನು ರೂಪಿಸಿದ್ದು, ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು.

ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು ಸಾಂಗ್ ಅನ್ನು ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಹಿರಿಯ ಕಲಾವಿದರು ಶ್ರೀನಾಥ್, ತಾರಾ, ಗಿರಿಜಾ ಲೋಕೇಶ್, ಮುಖ್ಯಮಂತ್ರಿ ಚಂದ್ರು, ಸುಧಾರಾಣಿ ಮತ್ತು ನೆನಪಿರಲಿ ಪ್ರೇಮ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.

ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಕಲಾವಿದರು ಹಾಡು ಮತ್ತು ನೃತ್ಯ ಪ್ರದರ್ಶನಗಳ ಮೂಲಕ ಭಕ್ತಿಭಾವವನ್ನು ಜೀವಂತಗೊಳಿಸಿದರು.

ನಿಶ್ಚಿತಾರ್ಥ ಮಾಡ್ಕೊಂಡಿದ್ದ ಬಾ ಮಾ ಹರೀಶ್‌ ಪುತ್ರ ಉಲ್ಲಾಸ್‌ ಗೌಡ ನಿಧನ

ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಭಾ ಮಾ ಹರೀಶ್ ಅವರ ಪುತ್ರ ಉಲ್ಲಾಸ್ ಗೌಡ ಟ್ರೆಕ್ಕಿಂಗ್ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿವಮೊಗ್ಗದ ಕೊಡಚಾದ್ರಿ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ.

ಮೃತ ಉಲ್ಲಾಸ್ ಗೌಡ ಅವರ ಮದುವೆ ಚಂದನಾ ಗೌಡ ಅವರೊಂದಿಗೆ ನಿಶ್ಚಿತಗೊಂಡಿತ್ತು. ಕುಟುಂಬದವರು ಈಗಾಗಲೇ ನಿಶ್ಚಿತಾರ್ಥದ ಭಾಗವಾಗಿ ದೀಪದ ಶಾಸ್ತ್ರವನ್ನು ಸರಳವಾಗಿ ನೆರವೇರಿಸಿದ್ದರು. ಮದುವೆ ಇದೇ ವರ್ಷ ನಡೆಯಬೇಕಾಗಿತ್ತು ಎಂದು ಕುಟುಂಬದವರು ತಿಳಿಸಿದ್ದಾರೆ.

ಮದುವೆ ಸಿದ್ಧತೆಗಳು ಮುಂದುವರಿಯುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದ ಈ ಅಚಾನಕ್ ದುರಂತ ಕುಟುಂಬಕ್ಕೆ ಭಾರೀ ಆಘಾತವನ್ನುಂಟು ಮಾಡಿದೆ. ಭಾ ಮಾ ಹರೀಶ್ ಅವರು ಪುತ್ರನ ವಿವಾಹ ಸಂಭ್ರಮಕ್ಕಾಗಿ ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲೇ ಈ ದುರ್ಘಟನೆ ಸಂಭವಿಸಿದೆ.

ಟ್ರೆಕ್ಕಿಂಗ್ ವೇಳೆ ಉಲ್ಲಾಸ್ ಗೌಡ ಆರೋಗ್ಯ ಹದಗೆಟ್ಟಿದ್ದು, ನಂತರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯ ಕುರಿತು ಅಧಿಕೃತ ವಿವರಗಳು ಇನ್ನಷ್ಟೇ ನಿರೀಕ್ಷಿಸಲಾಗಿವೆ.

ಸಂಭ್ರಮದ ಕೆಂಪೇಗೌಡ ಜಯಂತಿ; ನಾಡಪ್ರಭುವಿಗೆ ವಂದಿಸಿದ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬೆಂಗಳೂರು ನಿರ್ಮಾತೃ, ಸರ್ವ ಜನಾಂಗದ ನಾಯಕ, ಬೆಂದಕಾಳೂರು ಕಟ್ಟಿದ ದೂರದೃಷ್ಟಿಯ ನಾಯಕ, ಕೆರೆಗಳನ್ನು ನಿರ್ಮಿಸಿದ ಮಣ್ಣಿನ ಮಗ, ಕೋಟೆ ಕೊತ್ತಲಗಳನ್ನು ಕಟ್ಟಿದ ಕಲಿ ವೀರ ಕೆಂಪೇಗೌಡರ 517 ನೇ ಜಯಂತಿಯನ್ನು ಸಿಎಂ‌ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ‌ಅತ್ಯಂತ ಅರ್ಥಪೂರ್ಣವಾಗಿ, ವಿಜೃಂಭಣೆಯಿಂದ ಆಚರಿಸಲಾಯಿತು.

ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಬೃಹತ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಡಿ.ಕೆ. ಶಿವಕುಮಾರ್ ಅವರು 517 ನೇ ಕೆಂಪೇಗೌಡ ಜಯಂತಿಗೆ ಚಾಲನೆ ನೀಡಿದರು.

ಪ್ರತಿಮೆಯ ಪಾದಗಳಿಗೆ ಸಾಂಕೇತಿಕವಾಗಿ ಡಿ.ಕೆ.ಶಿವಕುಮಾರ್ ಅವರು ಪುಷ್ಪಾರ್ಚನೆ ಮಾಡಿದರು. ಆದಿಚುಂಚನಗಿರಿಯ ಸ್ವಾಮೀಜಿಗಳಾದ ನಿರ್ಮಲಾನಂದನಾಥ ಸ್ವಾಮೀಜಿಯವರು ಹಾಗೂ ಸಿರಾ ತಾಲ್ಲೂಕಿನ ಸ್ಪಟಿಕಪುರಿಯ ನಂಜಾವಧೂತ ಸ್ವಾಮೀಜಿ ಹಾಗೂ ವಿಶ್ವ ಒಕ್ಕಲಿಗರ ಸಂಸ್ಥಾನದ ನಿಶ್ಚಲಾನಂದನಾಥ ಮಹಾಸ್ವಾಮೀಜಿ ಈ ವೇಳೆ ಜೊತೆಯಾದರು. ನಂತರ ಪ್ರತಿಮೆಯ ಪಕ್ಕದಲ್ಲಿ ನಿರ್ಮಾಣ‌ ಮಾಡಿರುವ ಥೀಮ್ ಪಾರ್ಕ್ ಅನ್ನು ವೀಕ್ಷಿಸಿದರು. ನಂತರ ಶಿವಕುಮಾರ್ ಅವರು ಮಾತನಾಡಿದರು.

“ನಾಡಿನ ಸಮಸ್ತ ಜನರಿಗೆ ಕೆಂಪೇಗೌಡ ಜಯಂತಿ ಶುಭಾಶಯಗಳು. ದೂರದೃಷ್ಟಿಯ ಮಹಾಚೇತನ ಕೆಂಪೇಗೌಡರನ್ನು ಸ್ಮರಿಸುವ ಭಾಗ್ಯ ನಮ್ಮೆಲ್ಲರಿಗೂ ಲಭಿಸಿದೆ. ಕೆಂಪೇಗೌಡರ, ಚಿಂತನೆ, ಆಚಾರ, ವಿಚಾರ ಎಲ್ಲವನ್ನು ಗಮನಲ್ಲಿಟ್ಟುಕೊಂಡು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮ್ಯಾರಥಾನ್ ಓಟ, ಬೆಂಗಳೂರಿನಲ್ಲಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ, ಮಾಗಡಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಕೆಂಪೇಗೌಡರ ಕೋಟೆ ಸಮಗ್ರ ಅಭಿವೃದ್ಧಿ ಕಾರ್ಯ ಹಮ್ಮಿಕೊಂಡಿದ್ದೇವೆ. ಮಾಗಡಿಯಲ್ಲಿರುವ ಕೆಂಪೇಗೌಡರ ಸಮಾಧಿ ಬಳಿ 10 ಎಕರೆ ಜಮೀನು ಸ್ವಾಧೀನ ಪ್ರಕ್ರಿಯೆ ಆರಂಭವಾಗಿದ್ದು, ಈಗಾಗಲೇ ಐದೂವರೆ ಎಕರೆ ಖರೀದಿ ಮಾಡಲಾಗಿದೆ” ಎಂದು ಮಾಹಿತಿ ನೀಡಿದರು.

ಕೆಂಪೇಗೌಡರ ಇತಿಹಾಸ ಪರಿಚಯಕ್ಕೆ ಕಾರ್ಯಯೋಜನೆ ರೂಪಿಸಲು ಸೂಚನೆ:

“ಬೆಂಗಳೂರಿಗೆ ಬರುವವರಿಗೆ ಕೆಂಪೇಗೌಡರ ಗುರುತು ಪರಿಚಯಿಸಲು, ಟ್ರಂಪೆಟ್ ವೃತ್ತದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ವಿಮಾನ ನಿಲ್ದಾಣ ಪ್ರಾಧಿಕಾರದವರಿಗೆ ಸೂಚನೆ ನೀಡಿದ್ದೇವೆ. ಅವರು ಸಧ್ಯದಲ್ಲೇ ಕಾರ್ಯಯೋಜನೆ ರೂಪಿಸಿ ಸರ್ಕಾರಕ್ಕೆ ಸಲ್ಲಿಸಲಿದ್ದಾರೆ. ಆ ಮೂಲಕ ಬೆಂಗಳೂರಿಗೆ ಬರುವವರು ಕೆಂಪೇಗೌಡರನ್ನು ಸ್ಮರಿಸುವಂತೆ ಮಾಡಲಾಗುವುದು” ಎಂದು ತಿಳಿಸಿದರು.

“ಕಳೆದ ವರ್ಷ ಸುಮ್ಮನಹಳ್ಳಿ ಬಳಿ ಕೆಂಪೇಗೌಡ ಭವನ ನಿರ್ಮಾಣಕ್ಕೆ ಐದು ಎಕರೆ ಜಾಗವನ್ನು ನೀಡಿ ಭೂಮಿ ಪೂಜೆ ಮಾಡಿದ್ದೆವು. ಜೊತೆಗೆ ಅಲ್ಲಿ ಕೆಂಪೇಗೌಡರ ಹೆಸರಿನಲ್ಲಿ ಟೌನ್ ಪ್ಲಾನಿಂಗ್ ಕಾಲೇಜು ಮಾಡಲು ಮಾರ್ಗದರ್ಶನ ನೀಡಲಾಗಿದೆ.

ಹಿಂದಿನ ಸರ್ಕಾರ ಈ ಪ್ರತಿಮೆಯನ್ನು ಚೆನ್ನಾಗಿ ಕಟ್ಟಿದೆ. ಆದರೆ ವಿಮಾನ ನಿಲ್ದಾಣಕ್ಕೆ ಬರುವವರಿಗೆ ಈ ಪ್ರತಿಮೆ ಕಾಣುತ್ತಿಲ್ಲ. ಇದರ ಬಗ್ಗೆ ಯಾವ ರೀತಿ ಕ್ರಮ ಕೈಗೊಳ್ಳಬಹುದು ಎಂದು ನಾನು, ಸ್ವಾಮೀಜಿಗಳು ಹಾಗೂ ಕೃಷ್ಣ ಬೈರೇಗೌಡರೊಂದಿಗೆ ಚರ್ಚೆ ಮಾಡಿ ವಿಮಾನ ನಿಲ್ದಾಣ ಪ್ರಾಧಿಕಾರವರಿಗೆ ನಿರ್ದೇಶನ ನೀಡಲಾಗಿದೆ” ಎಂದು ತಿಳಿಸಿದರು.

“108 ಅಡಿಯ ಈ ಕಂಚಿನ ಪ್ರತಿಮೆ ಬಳಿ ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ಹಸಿರು ರೂಪಿಸಲಾಗಿದೆ. ಇಲ್ಲಿನ ಕಾಮಗಾರಿ ಮುಗಿದ ಬಳಿಕ ಇದನ್ನು ಉದ್ಘಾಟನೆ ಮಾಡುತ್ತೇವೆ. ಈ ಥೀಮ್ ಪಾರ್ಕ್ ಅನ್ನು ವಿಮಾನ ನಿಲ್ದಾಣ ಪ್ರಾಧಿಕಾರ ನಿರ್ವಹಣೆ ಮಾಡಲು ಸೂಚಿಸಿದ್ದೇನೆ. ಇದಕ್ಕೆ ಪ್ರಾಧಿಕಾರವೂ ಒಪ್ಪಿದ್ದು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ” ಎಂದರು.

ಪ್ರತಿ ವರ್ಷ ಒಂದೊಂದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕ್ರಮ

“ಇನ್ನು ಮುಂದೆ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಕೇವಲ ವಿಧಾನಸೌಧ ಹೊರತಾಗಿ, ಬೆಂಗಳೂರಿನ 28 ಕ್ಷೇತ್ರಗಳಲ್ಲಿ ಮಾಡಲು ತೀರ್ಮಾನಿಸಿದ್ದೇವೆ. ಇಂದು ಯಶವಂತಪುರದಲ್ಲಿ ಈ ಕಾರ್ಯಕ್ರಮ ಮಾಡುತ್ತಿದ್ದು, ಮುಂದಿನ ವರ್ಷ ಶಾಸಕರೊಂದಿಗೆ ಚರ್ಚಿಸಿ ಬ್ಯಾಟರಾಯನಪುರ, ಯಲಹಂಕ, ಕೆ.ಆರ್ ಪುರ ಅಥವಾ ಬೇರೆ ಕ್ಷೇತ್ರಗಳಲ್ಲಿ ಈ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು.

ಅದರೊಂದಿಗೆ ಮುಂದಿನ 28 ವರ್ಷಗಳ ಕಾಲ ಒಂದೊಂದು ಕ್ಷೇತ್ರದಲ್ಲಿ ಆಚರಣೆ ಮಾಡಲಾಗುವುದು. ಇನ್ನು ರಾಜ್ಯಾದ್ಯಂತ ಎಲ್ಲಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಾಗೂ ವಾರ್ಡ್ ಮಟ್ಟದಲ್ಲಿ ಈ ಕಾರ್ಯಕ್ರಮ ಆಚರಣೆಗೆ ಜಿಬಿಎ ವತಿಯಿಂದ ಆದೇಶ ಮಾಡಲಾಗಿದೆ. ಕೆಂಪೇಗೌಡರ ಆಚಾರ ವಿಚಾರ ಅಳವಡಿಸಿಕೊಂಡು ಬೆಂಗಳೂರಿನ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು. ಬೆಂಗಳೂರಿಗೆ ಹೊಸ ರೂಪ ನೀಡಲು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

ಕೆಂಪೇಗೌಡರು ಎಲ್ಲಾ ವರ್ಗದ ಆಸ್ತಿ

“ಬೆಂಗಳೂರಿನಲ್ಲಿ 1.40 ಕೋಟಿ ಜನಸಂಖ್ಯೆ ಇದ್ದು, 1.30 ಕೋಟಿ ವಾಹನಗಳ ಸಂಖ್ಯೆ ಇವೆ. ನಾವು ಎಷ್ಟೇ ಮೆಟ್ರೋ, ಸಾರ್ವಜನಿಕ ಸಾರಿಗೆ ತಂದರೂ ಒಬ್ಬರು ಒಂದೊಂದು ವಾಹನ ಇಟ್ಟುಕೊಂಡಿದ್ದಾರೆ. ಮುಂದಿನ ಒಂದು ವರ್ಷದಲ್ಲಿ ವಿಮಾನ ನಿಲ್ದಾಣಕ್ಕೆ ಮೆಟ್ರೋ ಸಂಪರ್ಕ ಸಾಧಿಸಲು ಮುಂದಾಗಿದ್ದೇವೆ.

ನಮ್ಮ ಮುಂದಿನ 2 ವರ್ಷಗಳ ಅವಧಿಯಲ್ಲಿ 500 ಕಿ.ಮೀ ಉದ್ದದ ಮೆಟ್ರೋ ವಿಸ್ತರಣೆಗೆ ಆಲೋಚನೆ ಮಾಡಿದ್ದು, ಕೃಷ್ಣ ಬೈರೇಗೌಡರು ಈ ಬಗ್ಗೆ ಚಿಂತನೆ ಮಾಡಲಿದ್ದಾರೆ. ಈ ಕಾರ್ಯಕ್ರಮ ಒಂದು ಜಾತಿಗೆ ಸೀಮಿತವಲ್ಲ. ಇದು ಕೆಂಪೇಗೌಡರ ದೂರದೃಷ್ಟಿ, ಆಚಾರ, ವಿಚಾರಗಳ, ನೀತಿಯನ್ನು ಬಳಸಿಕೊಳ್ಳುವ ಕಾರ್ಯಕ್ರಮವಾಗಿದೆ. ಕೆಂಪೇಗೌಡರು ಎಲ್ಲಾ ವರ್ಗದ ಆಸ್ತಿಯಾಗಿದ್ದಾರೆ” ಎಂದು ತಿಳಿಸಿದರು.

ಬೆಂಗಳೂರಿಗೆ ವಿಶ್ವಮಟ್ಟದ ಗುರುತು ತಂದವರು ನಾಡಪ್ರಭು ಕೆಂಪೇಗೌಡ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಬೆಂಗಳೂರು ನಗರವನ್ನು ರಾಷ್ಟ್ರಮಟ್ಟ ಮಾತ್ರವಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲೂ ಗುರುತಿಸುವಂತೆ ಮಾಡಿದ ಶ್ರೇಯಸ್ಸು ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಸದಾಶಿವನಗರದ ಕೆಂಪೇಗೌಡ ಗಡಿ ಗೋಪುರ ಉದ್ಯಾನವನದಲ್ಲಿ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ಆಯೋಜಿಸಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಸಮಾಜಸೇವಕ ಆರ್.ಪಿ. ರವಿಶಂಕರ್ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು,

517 ವರ್ಷಗಳ ಬಳಿಕವೂ ಕೆಂಪೇಗೌಡರನ್ನು ನಾವು ಸ್ಮರಿಸುತ್ತಿದ್ದೇವೆ ಎಂದರೆ, ಬೆಂಗಳೂರು ಹಾಗೂ ನಾಡಿಗೆ ಅವರು ನೀಡಿರುವ ಕೊಡುಗೆ ಎಷ್ಟೊಂದು ಮಹತ್ತರ ಎಂಬುದನ್ನು ಅರ್ಥಮಾಡಿಕೊಳ್ಳಬಹುದು ಎಂದು ಹೇಳಿದರು.

ನಾಡಪ್ರಭು ಕೆಂಪೇಗೌಡರ ಹೆಸರನ್ನು ಕರ್ನಾಟಕ ಮಾತ್ರವಲ್ಲದೆ ದೇಶ ಹಾಗೂ ವಿಶ್ವದಾದ್ಯಂತ ಪರಿಚಯಿಸುವ ಉದ್ದೇಶದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧ್ಯಯನ ಕೇಂದ್ರಕ್ಕೆ 50 ಕೋಟಿ ರೂಪಾಯಿ ಅನುದಾನ ನೀಡಿದ್ದರು ಎಂದು ವಿಜಯೇಂದ್ರ ತಿಳಿಸಿದರು.

ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಮಾತ್ರವಲ್ಲದೆ ಉದ್ಯಾನವನ ನಿರ್ಮಾಣಕ್ಕೂ ಯಡಿಯೂರಪ್ಪ ಅವರು ವಿಶೇಷ ಆದ್ಯತೆ ನೀಡಿದ್ದರು. ಅಲ್ಲದೆ, ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರನ್ನೇ ಇಡಬೇಕು ಎಂಬ ಮಹತ್ವದ ನಿರ್ಧಾರವನ್ನೂ ಅವರೇ ಕೈಗೊಂಡಿದ್ದರು ಎಂದು ಹೇಳಿದರು.

ರಾಜ್ಯದಲ್ಲಿ ಮತ್ತೆ ಬಸ್‌ ಟಿಕೆಟ್‌ ದರ ಏರಿಕೆಯಾಗುತ್ತಾ? ಸುಳಿವು ನೀಡಿದ ಸಚಿವ ಬೈರತಿ ಸುರೇಶ್‌

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್‌ಗಳ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಚಿಂತನೆ ನಡೆಸಿದ್ದು, ಈ ಕುರಿತು ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಜತೆ ಚರ್ಚಿಸಿದ ಬಳಿಕ ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತೈಲ ದರ ಏರಿಕೆಯಿಂದ ಸಾರಿಗೆ ನಿಗಮಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬಿದ್ದಿದ್ದು, ಅದಕ್ಕೆ ಅನುಗುಣವಾಗಿ ಬಸ್ ಟಿಕೆಟ್ ದರ ಪರಿಷ್ಕರಣೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂದು ಹೇಳಿದರು.

ಇದು ಕೇಂದ್ರ ಅಥವಾ ರಾಜ್ಯ ಸರ್ಕಾರದ ವಿಚಾರವಲ್ಲ. ದೇಶಾದ್ಯಂತ ತೈಲ ದರ ಏರಿಕೆಯಾಗಿದೆ. ಅದರ ಪರಿಣಾಮ ಸಾರಿಗೆ ನಿಗಮಗಳ ವೆಚ್ಚವೂ ಹೆಚ್ಚಾಗಿದೆ. ಪ್ರಸ್ತಾವನೆ ಇನ್ನೂ ಪರಿಶೀಲನೆಯಲ್ಲಿದ್ದು, ಮುಖ್ಯಮಂತ್ರಿ ಜತೆ ಚರ್ಚಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದರು.

ಬಸ್ ಟಿಕೆಟ್ ದರ ಹೆಚ್ಚಳವನ್ನು ವಿರೋಧಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ ಸಚಿವರು, “ತೈಲ ದರ ಏರಿಕೆಯ ಬಗ್ಗೆ ಬಿಜೆಪಿಗೂ ತಿಳಿದಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳು ಒಟ್ಟು ಸುಮಾರು ₹5 ಸಾವಿರ ಕೋಟಿ ನಷ್ಟದಲ್ಲಿ ಕಾರ್ಯನಿರ್ವಹಿಸುತ್ತಿವೆ. ಸಿಬ್ಬಂದಿಗೆ ವೇತನ ನೀಡಬೇಕು, ಬಸ್‌ಗಳಿಗೆ ಡೀಸೆಲ್ ಖರೀದಿಸಬೇಕು. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಚರ್ಚೆಯ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ವಿದ್ಯಾರ್ಥಿಗಳ ಬಸ್ ಪಾಸ್ ವಿತರಣೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, “ಪಾಸ್ ವಿತರಣಾ ವ್ಯವಸ್ಥೆಯನ್ನು ಇನ್ನಷ್ಟು ಸುಗಮಗೊಳಿಸಲಾಗುವುದು. ಎಲ್ಲ ಅರ್ಹ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡಲಾಗುತ್ತದೆ ಎಂದು ಹೇಳಿದರು.

ಪರಿಷತ್ ಚುನಾವಣೆಯ ಅಡ್ಡ ಮತದಾನ ಪ್ರಕರಣ: ಸಿ.ಟಿ. ರವಿ ನೇತೃತ್ವದ ಸಮಿತಿಯಿಂದ ಬಿ.ವೈ. ವಿಜಯೇಂದ್ರಗೆ ವರದಿ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣದ ಕುರಿತು ತನಿಖೆ ನಡೆಸಿದ್ದ ಬಿಜೆಪಿ ಸತ್ಯಶೋಧನಾ ಸಮಿತಿಯು ತನ್ನ ಮಧ್ಯಂತರ ವರದಿಯನ್ನು ಇಂದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಸಲ್ಲಿಸಿದೆ. ಪರಿಷತ್ ಸದಸ್ಯ ಸಿ.ಟಿ. ರವಿ ನೇತೃತ್ವದ ತ್ರಿಸದಸ್ಯ ಸಮಿತಿಯು ನಾಲ್ಕು ದಿನಗಳ ಆಂತರಿಕ ತನಿಖೆ ನಡೆಸಿ ವರದಿ ಸಿದ್ಧಪಡಿಸಿದೆ.

ಸಿ.ಟಿ. ರವಿ, ಶಾಸಕ ಮಹೇಶ್ ಟೆಂಗಿನಕಾಯಿ ಹಾಗೂ ಎನ್. ಮಹೇಶ್ ಅವರನ್ನೊಳಗೊಂಡ ಸಮಿತಿಯು ಸಾಂದರ್ಭಿಕ ಸಾಕ್ಷ್ಯಗಳು, ಮೂಲಗಳಿಂದ ಸಂಗ್ರಹಿಸಿದ ಮಾಹಿತಿ, ಅನುಮಾನಾಸ್ಪದ ಬೆಳವಣಿಗೆಗಳು ಹಾಗೂ ಶಂಕಿತ ಶಾಸಕರಿಂದ ಪಡೆದ ಮಾಹಿತಿಯ ಆಧಾರದ ಮೇಲೆ ಮೂರು ಪುಟಗಳ ವರದಿ ಸಿದ್ಧಪಡಿಸಿದೆ. ಈ ವರದಿಯನ್ನು ಬಿಜೆಪಿ ರಾಜ್ಯ ಕಚೇರಿಯಲ್ಲಿ ಸೀಲ್ಡ್ ಕವರ್‌ನಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸಲ್ಲಿಸಲಾಯಿತು.

ವರದಿ ಸಲ್ಲಿಕೆಯ ಬಳಿಕ ಸಿ.ಟಿ. ರವಿ ಹಾಗೂ ಬಿ.ವೈ. ವಿಜಯೇಂದ್ರ ಅವರು ಪ್ರತ್ಯೇಕವಾಗಿ ಸಭೆ ನಡೆಸಿ ವರದಿಯ ಪ್ರಮುಖ ಅಂಶಗಳ ಕುರಿತು ಚರ್ಚೆ ನಡೆಸಿದರು.

ಸಮಿತಿ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ ಮೈತ್ರಿ ಪಕ್ಷಗಳ ಒಟ್ಟು 12 ಶಾಸಕರು ಅಡ್ಡ ಮತದಾನ ನಡೆಸಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಈ ಪೈಕಿ ಒಂದು ಅಸಿಂಧು ಮತ ದಾಖಲಾಗಿದ್ದು, ಬಿಜೆಪಿಯಿಂದ ಒಂದು ಅಸಿಂಧು ಮತ ಸೇರಿದಂತೆ ಒಟ್ಟು ನಾಲ್ಕು ಅಡ್ಡ ಮತಗಳು ದಾಖಲಾಗಿವೆ ಎಂದು ಉಲ್ಲೇಖಿಸಲಾಗಿದೆ. ಉಳಿದ ಅಡ್ಡ ಮತಗಳು ಜೆಡಿಎಸ್‌ನಿಂದ ಆಗಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.

ಆದರೆ, ಅಡ್ಡ ಮತದಾನ ಮಾಡಿದ ಶಾಸಕರ ಹೆಸರುಗಳನ್ನು ವರದಿಯಲ್ಲಿ ಉಲ್ಲೇಖಿಸಿಲ್ಲ. ಕೇವಲ ಅಡ್ಡ ಮತಗಳ ಸಂಖ್ಯೆಯನ್ನು ಮಾತ್ರ ದಾಖಲಿಸಲಾಗಿದ್ದು, ಅನುಮಾನ ಇರುವ ಶಾಸಕರ ಮೇಲೆ ಮುಂದಿನ ದಿನಗಳಲ್ಲಿ ತೀವ್ರ ನಿಗಾ ವಹಿಸುವಂತೆ ಸಮಿತಿ ಶಿಫಾರಸು ಮಾಡಿದೆ.

ವರದಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ, “ಅಡ್ಡ ಮತದಾನ ಪ್ರಕರಣದ ಕುರಿತು ಆಂತರಿಕ ಸತ್ಯಶೋಧನೆ ನಡೆಸಲು ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದರು. ಶೀಘ್ರ ವರದಿ ಸಲ್ಲಿಸುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ನಾಲ್ಕು ದಿನಗಳಲ್ಲೇ ತನಿಖೆ ಪೂರ್ಣಗೊಳಿಸಿ ವರದಿ ನೀಡಿದ್ದೇವೆ. ಸಮಿತಿಯ ಮೂವರು ಸದಸ್ಯರಿಗೂ ಒಮ್ಮತವಾಗಿರುವ ಅಂಶಗಳನ್ನು ಮಾತ್ರ ವರದಿಯಲ್ಲಿ ದಾಖಲಿಸಿದ್ದೇವೆ” ಎಂದು ತಿಳಿಸಿದರು.

“ಅಡ್ಡ ಮತದಾನ ಪ್ರಜಾಪ್ರಭುತ್ವ ವಿರೋಧಿ ನಡೆ. ಇಂತಹ ಘಟನೆಗಳ ಬಗ್ಗೆ ಕಾಂಗ್ರೆಸ್ ಪ್ರಶ್ನಿಸುವ ನೈತಿಕತೆ ಹೊಂದಿಲ್ಲ. ಮುಂದಿನ ಕ್ರಮದ ಬಗ್ಗೆ ರಾಜ್ಯಾಧ್ಯಕ್ಷರು ಹಾಗೂ ಬಿಜೆಪಿ ಕೋರ್ ಕಮಿಟಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ಅಗತ್ಯವಿದ್ದರೆ ವರದಿಯನ್ನು ಪಕ್ಷದ ಹೈಕಮಾಂಡ್‌ಗೂ ಸಲ್ಲಿಸಲಾಗುತ್ತದೆ” ಎಂದು ಸಿ.ಟಿ. ರವಿ ಹೇಳಿದರು.