ತುಮಕೂರು: ಉದ್ಯೋಗ, ಶಿಕ್ಷಣ ಹಾಗೂ ವ್ಯಾಪಾರ ವಹಿವಾಟುಗಳಿಗಾಗಿ ತುಮಕೂರಿನಿಂದ ಬೆಂಗಳೂರಿಗೆ ಪ್ರತಿದಿನ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಬೆಂಗಳೂರು-ತುಮಕೂರು ರೈಲು ಮಾರ್ಗವನ್ನು ವಿಸ್ತರಿಸುವ ಮಹತ್ವದ ಯೋಜನೆಗೆ ವೇಗ ಸಿಕ್ಕಿದೆ. ಈ ಮಾರ್ಗದಲ್ಲಿ ಚತುಷ್ಪಥ (ನಾಲ್ಕು ಹಳಿ) ರೈಲು ಮಾರ್ಗ ನಿರ್ಮಾಣದ ಪೂರ್ವ ಸಿದ್ಧತೆಗಳು ಚುರುಕುಗೊಂಡಿವೆ ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಪ್ರಸ್ತುತ ಬೆಂಗಳೂರು-ತುಮಕೂರು ನಡುವೆ ಕೇವಲ ಎರಡು ರೈಲು ಹಳಿಗಳು ಮಾತ್ರ ಇರುವುದರಿಂದ ರೈಲುಗಳ ಸಂಚಾರದಲ್ಲಿ ವಿಳಂಬ ಉಂಟಾಗುತ್ತಿದ್ದು, ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ರೈಲ್ವೆ ಇಲಾಖೆ ಚತುಷ್ಪಥ ರೈಲು ಮಾರ್ಗ ನಿರ್ಮಾಣಕ್ಕೆ ಮುಂದಾಗಿದೆ.
ಈ ಮಹತ್ವಾಕಾಂಕ್ಷಿ ಯೋಜನೆಗಾಗಿ ಅಗತ್ಯವಿರುವ ವಿಸ್ತೃತ ಯೋಜನಾ ವರದಿ (ಡಿಪಿಆರ್) ಈಗಾಗಲೇ ಪೂರ್ಣಗೊಂಡಿದ್ದು, ರೈಲ್ವೆ ಇಲಾಖೆಯ ಉನ್ನತ ತಾಂತ್ರಿಕ ಸಮಿತಿಯಿಂದಲೂ ಅನುಮೋದನೆ ದೊರೆತಿದೆ. ಸದ್ಯ ಯೋಜನೆಯು ರೈಲ್ವೆ ಮಂಡಳಿಯ ಅಂತಿಮ ಅನುಮೋದನೆ ಹಂತದಲ್ಲಿದ್ದು, ಶೀಘ್ರದಲ್ಲೇ ಅಧಿಕೃತ ಮುದ್ರೆ ಬೀಳುವ ನಿರೀಕ್ಷೆಯಿದೆ ಎಂದು ಸಚಿವರು ತಿಳಿಸಿದ್ದಾರೆ.
ಅಂದಾಜು 6,000 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ಈ ಬೃಹತ್ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಯೋಜನೆ ಜಾರಿಯಾದರೆ ಬೆಂಗಳೂರು ಮತ್ತು ತುಮಕೂರು ನಡುವಿನ ರೈಲು ಸಂಚಾರ ಸಾಮರ್ಥ್ಯ ಗಣನೀಯವಾಗಿ ಹೆಚ್ಚಳವಾಗಲಿದ್ದು, ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.
ಯೋಜನೆಗೆ ಅಗತ್ಯವಿರುವ ಹೆಚ್ಚುವರಿ ಭೂಮಿಯನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದ್ದು, ಮುಂದಿನ ಐದುರಿಂದ ಆರು ತಿಂಗಳ ಅವಧಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ ಎಂದು ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ.

