Home Blog

ಕರ್ನಾಟಕಕ್ಕೆ ಮತ್ತೆ ಸಂಕಷ್ಟ: ತಮಿಳುನಾಡಿಗೆ 15 ದಿನ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸಲು CWRC ಶಿಫಾರಸು

0

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 12,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕಕ್ಕೆ ಶಿಫಾರಸು ಮಾಡಿದೆ.

ಈ ಶಿಫಾರಸಿನ ಕುರಿತು ಇಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.

ದೆಹಲಿಯಲ್ಲಿರುವ CWMA ಕಚೇರಿಯಲ್ಲಿ ಇಂದು ಬೆಳಗ್ಗೆ ಅಧ್ಯಕ್ಷ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಕರ್ನಾಟಕದ ಪರವಾಗಿ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ (MD) ಮಹೇಶ್ ಅವರು ಖುದ್ದಾಗಿ ಹಾಜರಾಗಿ ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಹಾಗೂ ಪ್ರಸ್ತುತ ಜಲ ಪರಿಸ್ಥಿತಿಯ ಕುರಿತು ವಿವರಗಳನ್ನು ಪ್ರಾಧಿಕಾರದ ಮುಂದಿಟ್ಟರು.

ತಮಿಳುನಾಡಿನ ಹಿರಿಯ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಸುಮಾರು ಒಂದೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ ಪ್ರಸ್ತುತ ಜಲಾಶಯಗಳಲ್ಲಿರುವ ನೀರಿನ ಸಂಗ್ರಹ, ಮುಂದಿನ ದಿನಗಳಲ್ಲಿ ನಿರೀಕ್ಷಿಸಲಾಗಿರುವ ಮಳೆ ಸೇರಿದಂತೆ ಹಲವು ಅಂಶಗಳನ್ನು ಪರಿಗಣಿಸಿ CWRC ಈ ಶಿಫಾರಸು ಮಾಡಿದೆ.

ಬಿಳಿಗುಂಡ್ಲುವಿನಲ್ಲಿ ಈಗಾಗಲೇ 9 ಟಿಎಂಸಿ ನೀರು ದಾಖಲು

ಆಗಸ್ಟ್ 10ರವರೆಗಿನ ಮಾಹಿತಿಯ ಪ್ರಕಾರ, ಕರ್ನಾಟಕ-ತಮಿಳುನಾಡು ಗಡಿಯಲ್ಲಿರುವ ಬಿಳಿಗುಂಡ್ಲು ಮಾಪನ ಕೇಂದ್ರದಲ್ಲಿ ಈಗಾಗಲೇ ಸುಮಾರು 9 ಟಿಎಂಸಿ ನೀರು ಹರಿದು ಹೋಗಿರುವುದು ದಾಖಲಾಗಿದೆ.

ಇದೀಗ CWRC ಶಿಫಾರಸಿನಂತೆ ಮುಂದಿನ 15 ದಿನಗಳ ಕಾಲ ಪ್ರತಿದಿನ 12,000 ಕ್ಯೂಸೆಕ್ ನೀರು ಹರಿಸಿದರೆ, ತಮಿಳುನಾಡಿಗೆ ಹರಿಯುವ ಒಟ್ಟು ನೀರಿನ ಪ್ರಮಾಣ ಸುಮಾರು 16 ಟಿಎಂಸಿಗೆ ತಲುಪಲಿದೆ.

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ಮತ್ತೆ ಬಿಕ್ಕಟ್ಟು ಉಂಟಾಗುವ ಸಾಧ್ಯತೆ ಇರುವ ಸಂದರ್ಭದಲ್ಲೇ ಈ ಶಿಫಾರಸು ಹೊರಬಿದ್ದಿದೆ.

CWMA ಸಭೆಯತ್ತ ಕುತೂಹಲ

ಇಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ CWMA ಸಭೆಯಲ್ಲಿ CWRC ಮಾಡಿರುವ ಶಿಫಾರಸನ್ನು ಪ್ರಾಧಿಕಾರ ಯಾವ ಪ್ರಮಾಣದಲ್ಲಿ ಅಂಗೀಕರಿಸಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

ಒಂದು ವೇಳೆ CWRC ಶಿಫಾರಸನ್ನು CWMA ಅಂಗೀಕರಿಸಿದರೆ ಕರ್ನಾಟಕದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುವ ಅನಿವಾರ್ಯತೆ ಎದುರಾಗಬಹುದು. ಹೀಗಾಗಿ ರಾಜ್ಯದ ಹಿತಾಸಕ್ತಿ ಕಾಪಾಡಲು ಕರ್ನಾಟಕ ಯಾವ ನಿಲುವು ತೆಗೆದುಕೊಳ್ಳಲಿದೆ ಎಂಬುದರತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.

ನಾನು, ಸಚಿವರು ಸೇರಿ ಎಲ್ಲರೂ ಸರ್ಕಾರಿ ನೌಕರರು; ನಾವೆಲ್ಲರೂ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ’ ಎಂದ ಸಿಎಂ ಡಿಕೆ ಶಿವಕುಮಾರ್

0


ಬೆಂಗಳೂರು: “ನಾನು ಸೇರಿದಂತೆ ನನ್ನ ಮಂತ್ರಿ ಮಂಡಲ, ಅಧಿಕಾರಿಗಳು ಎಲ್ಲರೂ ಸರ್ಕಾರಿ ನೌಕರರು. ನಮ್ಮದು ಟೀಮ್ ಕರ್ನಾಟಕ. ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಕಲ್ಯಾಣ ಮಾಡುವುದೇ ನಮ್ಮ ಗುರಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಕರೆ ಕೊಟ್ಟರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಂಗಳವಾರ ನಡೆದ ಸರ್ಕಾರಿ ನೌಕರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ನೌಕರರನ್ನು ಉದ್ದೇಶಿಸಿ ಮಾತನಾಡಿದರು. “ನಮ್ಮನ್ನು ಸೇರಿದಂತೆ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿರುವುದು 5.50 ಲಕ್ಷ ಸರ್ಕಾರಿ ನೌಕರರಿಗೆ ಮಾತ್ರ. ನಾವು ನಮಗೆ ಸಿಕ್ಕ ಅವಕಾಶ ಬಳಸಿಕೊಳ್ಳಬೇಕು. ಕೆಂಗಲ್ ಹನುಮಂತಯ್ಯ ಅವರ ಕಾಲದಿಂದ ಇಲ್ಲಿಯವರೆಗೆ ಎಲ್ಲ ಸಿಎಂಗಳು ತಮ್ಮದೇ ರೀತಿಯಲ್ಲಿ,

ತಮ್ಮದೇ ಅನುಭವ ಸಿದ್ಧಾಂತದ ಮೇಲೆ ಆಡಳಿತ ಮಾಡಿದ್ದಾರೆ. ಕೆಂಗಲ್ ಹನುಮಂತಯ್ಯ ಅವರು ಜೈಲಿನ ಖೈದಿಗಳಿಂದ ವಿಧಾನಸೌಧ ಕಟ್ಟಿಸಿದರು. ಆಗ ಕೆಲವು ಖೈದಿಗಳು ಹನುಮಂತಯ್ಯ ಅವರ ಮೇಲೆ ಚಪ್ಪಲಿ ಎಸೆದಿದ್ದರು. ವಿಶ್ವೇಶ್ವರಯ್ಯ ಅವರು ₹1 ಗೆ ಕೆಲಸ ಮಾಡುತ್ತಿದ್ದರು ಎಂಬ ಇತಿಹಾಸ ಇದೆ. ನಾನು ಈ ಹಿಂದಿನವರ ಕೆಲಸಗಳನ್ನು ಟೀಕೆ ಮಾಡುವುದಿಲ್ಲ. ಟೀಕೆಗಳು ಸಾಯುತ್ತವೆ, ನಮ್ಮ ಕೆಲಸಗಳು ಉಳಿಯುತ್ತವೆ” ಎಂದು ತಿಳಿಸಿದರು.

“ಅಂಬೇಡ್ಕರ್ ಅವರು ಇತಿಹಾಸ ಮರೆತವ ಇತಿಹಾಸ ಸೃಷ್ಟಿಸಲಾರ ಎಂದು ಹೇಳಿದ್ದಾರೆ. ನೀವು ಸಾಕಷ್ಟು ವಿದ್ಯೆ, ಅನುಭವ ಹೊಂದಿದ್ದೀರಿ. ನಾನು ಹೆಚ್ಚು ಓದಿಲ್ಲ, ಆದರೆ ಜಿಲ್ಲಾ ಪಂಚಾಯ್ತಿ ಸದಸ್ಯನಾಗಿ, ಶಾಸಕ, ಮಂತ್ರಿ, ಉಪಮುಖ್ಯಮಂತ್ರಿಯಾಗಿ ಅನುಭವ ಇದೆ. ನೀವು ಶ್ರಮಜೀವಿ, ಸರ್ಕಾರದ ನಾಡಿ ಮಿಡಿತ ಇಟ್ಟುಕೊಂಡು, ಜನ ಮತ್ತು ಸರ್ಕಾರದ ಸೇತುವೆಯಾಗಿದ್ದೀರಿ. ನಾವು ಅಧಿಕಾರದಲ್ಲಿ ಇದ್ದಾಗ ಯಾವ ಸಾಕ್ಷಿಗುಡ್ಡೆ ಬಿಟ್ಟು ಹೋಗುತ್ತೇವೆ ಎಂಬುದು ಮುಖ್ಯ” ಎಂದು ಕರೆ ಕೊಟ್ಟರು.

“ನಮ್ಮ ನಿಮ್ಮ ಮೇಲೆ ಜನರ ಬದುಕಿನಲ್ಲಿ, ಬದಲಾವಣೆ ತರುವ ಜವಾಬ್ದಾರಿ ಇದೆ. ನಾನು ಇತಿಹಾಸ ಓದಲು ಬರೆಯಲು ಇಚ್ಚಿಸುವುದಿಲ್ಲ. ಇತಿಹಾಸ ಸೃಷ್ಟಿಸಲು ಬಯಸುತ್ತೇನೆ. ಸರ್ಕಾರಿ ನೌಕರರ ಸೇವೆಯಿಂದಲೇ ನಮ್ಮ ರಾಜ್ಯ ಈ ಹಂತಕ್ಕೆ ಬೆಳೆದಿದೆ” ಎಂದರು.

ಮಹಾರಾಜರ ಕಾಲದಿಂದ ಪರಿಶುದ್ಧ ಆಡಳಿತದಿಂದ ರಾಜ್ಯದ ಪ್ರಗತಿ

“ಮೈಸೂರಿನ ಕಾರ್ಯಕ್ರಮದಲ್ಲಿ ನಾನು ಪ್ರಧಾನಮಂತ್ರಿಗಳ ಬಳಿ ಒಂದು ಮಾತು ಹೇಳಿದ್ದೆ. ಅಟಲ್ ಬಿಹಾರಿ ವಾಜಪೇಯಿ ಅವರು ಇದೆ ಹಾಲ್ ನಲ್ಲಿ, ವಿಶ್ವದ ನಾಯಕರು ಮೊದಲು ದೆಹಲಿಗೆ ಬಂದು ನಂತರ ದೇಶದಲ್ಲಿ ಬೇರೆ ನಗರಗಳಿಗೆ ಹೋಗುತ್ತಿದ್ದರು. ಆದರೆ ಈಗ ಮೊದಲು ಬೆಂಗಳೂರಿಗೆ ಬಂದು ನಂತರ ಬೇರೆ ನಗರಗಳಿಗೆ ಹೋಗುತ್ತಿದ್ದಾರೆ ಎಂದು ಹೇಳಿದ್ದರು. ಇದು ಕೇವಲ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ನಾನು ಹೇಳಲ್ಲ. ರಾಜ ಮಹಾರಾಜರ ಕಾಲದಿಂದ ಪರಿಶುದ್ಧ ಆಡಳಿತದ ಪರಿಣಾಮ, ನಮ್ಮ ವಿದ್ಯಾರ್ಥಿಗಳ ಜ್ಞಾನ, ಪ್ರತಿಭಾನ್ವಿತ ಮಾನವ ಸಂಪನ್ಮೂಲಗಳ ಕಾರಣ.ಮಹಾರಾಜರು ಬೆಂಗಳೂರಿನಲ್ಲೇ ಇಂಡಿಯನ್ ಇನ್ಸ್ಟಿಟ್ಯುಟ್ ಆಫ್ ಸೈನ್ಸ್ ಆರಂಭಿಸಿದರು” ಎಂದರು.

“ಪೋಲೆಂಡ್ ಪ್ರಧಾನಿಯನ್ನು ಭೇಟಿ ಮಾಡಿದಾಗ, ಸಿಲಿಕಾನ್ ವ್ಯಾಲಿಯಲ್ಲಿ 3ರಲ್ಲಿ ಇಬ್ಬರು ಭಾರತದವರು. ಹೀಗಾಗಿ ಬೆಂಗಳೂರಿನಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದೇವೆ ನಮಗೆ 60% ಉಳಿತಾಯವಾಗಿದೆ ಎಂದರು. ಗ್ಯಾರಂಟಿ ಯೋಜನೆಯಲ್ಲಿ ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ನಮ್ಮ ರಾಜ್ಯದವರಿಗೆ ನಾವು ಯೋಜನೆ ನೀಡಬೇಕು. ಬೇರೆಯವರಿಗೆ ನೀಡುವ ಅಗತ್ಯವಿಲ್ಲ” ಎಂದರು.

ಆತ್ಮಸಾಕ್ಷಿಗೆ ಒಪ್ಪುವಂತೆ ಕೆಲಸ ಮಾಡಿ

“ನಮ್ಮಲ್ಲಿರುವ ಶಿಕ್ಷಣ, ಆರೋಗ್ಯ ಸೌಲಭ್ಯ ಬೇರೆ ಎಲ್ಲೂ ಇಲ್ಲ. ನಾನು ನನ್ನ ಮೇಲೆ ಕಣ್ಣು ಇಟ್ಟುಕೊಂಡಿದ್ದೇನೆ. ತಾಲ್ಲೂಕು ಮಟ್ಟದಲ್ಲಿ ಅಧಿಕಾರಿಗಳು ಹಾಗೂ ಶಾಸಕರು ಯಾವ ರೀತಿ ಕೆಲಸ ಮಾಡುತ್ತಿದ್ದಾರೆ ಎಂದು ಪರಿಶೀಲನೆ ಮಾಡುತ್ತೇವೆ. ನಾವು ಕೆಲಸ ಮಾಡುವುದೇ ಜನರಿಗಾಗಿ. ಬೇರೆಯವರಿಗೆ ಒಪ್ಪಿಸದಿದ್ದರೂ ನಿಮ್ಮ ಆತ್ಮಸಾಕ್ಷಿಗೆ ಒಪ್ಪುವಂತೆ ಕೆಲಸ ಮಾಡಿ” ಎಂದರು.

“ಅಧಿಕಾರ ಜವಾಬ್ದಾರಿ ಸಂಕೇತ. ಇದು ಸಿಂಹಾಸನ ಅಲ್ಲ, ಅವಕಾಶ. ಮೂರ್ತಿಗೆ ಬೆಲೆ ಕಟ್ಟಿದರೂ ಭಗವಂತನಿಗೆ ಬೆಲೆ ಕಟ್ಟಲು ಆಗಲ್ಲ. ಜನರಲ್ಲೇ ದೇವರನ್ನು ಕಾಣಬಹುದು. ಗ್ಯಾರಂಟಿ ಬಗ್ಗೆ ಶಾಸಕರು, ವಿರೋಧ ಪಕ್ಷದವರು ಟೀಕೆ ಮಾಡುತ್ತಿದ್ದಾರೆ. ಪ್ರಧಾನಮಂತ್ರಿಗಳು ಟೀಕಿಸಿದರೂ ನಂತರ ಅವರೇ ಪಾಲಿಸುವಂತಾಗಿದೆ. ನಮ್ಮ ಮಾದರಿ ದೇಶಕ್ಕೆ ಮಾದರಿಯಾಗಿದೆ” ಎಂದು ಹೇಳಿದರು.

ಕಾನೂನು ಚೌಕಟ್ಟಿನಲ್ಲಿ ಜನರ ಸಮಸ್ಯೆಗೆ ಸ್ಪಂದಿಸಿ

ಸರ್ಕಾರ ನೌಕರರ ಸಂಘದವರು ಗ್ಯಾರಂಟಿ ಯೋಜನೆ ತ್ಯಜಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಅವರಿಗೆ ಅಭಿನಂದನೆಗಳು. ಕೇಂದ್ರ ಕಚೇರಿಯಲ್ಲಿ ಇದ್ದು ಕೆಲಸ ಮಾಡದಿದ್ದರೆ ಮತ್ತೆ ನಿಮಗೆ ಈ ಜವಾಬ್ದಾರಿ ಯಾಕೆ? ಪ್ರತಿ ತಾಲ್ಲೂಕಿನಲ್ಲಿ ಎಲ್ಲಾ ಅಧಿಕಾರಿಗಳು ಅಲ್ಲೇ ವಾಸ ಇರಬೇಕು. ಇಂದು 750 ಕಡೆ ಸಭೆ ಈ ಕಾರ್ಯಕ್ರಮ ನಡೆಯುತ್ತಿದೆ. ರಾಜ್ಯದ ಪ್ರಮುಖ ನೌಕರನಾಗಿ ಸರ್ಕಾರದ ಚಿಂತನೆ, ಮುಂದಿನ ದಿನಗಳಲ್ಲಿ ಸಾಗಬೇಕಾದ ದಾರಿ ಬಗ್ಗೆ ಮಾರ್ಗದರ್ಶನ ನೀಡಲು ಬಂದಿರುವೆ. ಮನಸ್ಸು ಶುದ್ಧವಾಗಿ, ಪಾರದರ್ಶಕವಾಗಿ ಕೆಲಸ ಮಾಡಿದರೆ ಸಮಸ್ಯೆಗೆ ಪರಿಹಾರ ನೀಡಬಹುದು” ಎಂದು ಕಿವಿಮಾತು ಹೇಳಿದರು.

 

ಓವರ್ ಟೇಕ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಜೆಸಿಬಿ ಚಾಲಕನ ಹೊಡೆತಕ್ಕೆ ಯುವಕ ಸ್ಥಳದಲ್ಲೇ ಸಾವು!

0

ಕಲಬುರಗಿ: ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಉಡಗಿ ಗ್ರಾಮದಲ್ಲಿ ನಡೆದಿದೆ. ಜೆಸಿಬಿ ಚಾಲಕನೊಬ್ಬ ಯುವಕನಿಗೆ ಹೊಡೆದಿದ್ದು, ಹೊಡೆತದ ರಭಸಕ್ಕೆ ಯುವಕ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ.

ಮೃತ ಯುವಕನನ್ನು ಉಡಗಿ ಗ್ರಾಮದ ಭಾಗ್ಯವಂತ (24) ಎಂದು ಗುರುತಿಸಲಾಗಿದೆ. ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಭಾಗ್ಯವಂತ ಹಾಗೂ ಜೆಸಿಬಿ ಚಾಲಕ ನಬೀ ನಡುವೆ ಜಗಳ ಆರಂಭವಾಗಿತ್ತು.

ಮಾತಿಗೆ ಮಾತು ಬೆಳೆದು ಜಗಳ ತೀವ್ರಗೊಂಡ ವೇಳೆ ಭಾಗ್ಯವಂತ, ನಬೀ ಅವರ ಶರ್ಟ್‌ನ ಕಾಲರ್ ಹಿಡಿದಿದ್ದಾನೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ನಬೀ, ಭಾಗ್ಯವಂತನ ಕೆನ್ನೆಗೆ ಜೋರಾಗಿ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ.

ಹೊಡೆತದ ರಭಸಕ್ಕೆ ಭಾಗ್ಯವಂತನ ಕೆನ್ನೆಗೆ ಗಂಭೀರ ಪೆಟ್ಟಾಗಿದ್ದು, ಕೂಡಲೇ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಘಟನೆ ಬಳಿಕ ಸೇಡಂ ಪೊಲೀಸರು ಆರೋಪಿ ನಬೀಯನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ವಾಹನ ಓವರ್‌ಟೇಕ್ ವಿಚಾರಕ್ಕೆ ಆರಂಭವಾದ ಕ್ಷುಲ್ಲಕ ಜಗಳ ಯುವಕನ ಸಾವಿನಲ್ಲಿ ಅಂತ್ಯವಾಗಿರುವುದು ಗ್ರಾಮದಲ್ಲಿ ಆತಂಕ ಮೂಡಿಸಿದೆ.

ಸ್ವಾತಂತ್ರ್ಯೋತ್ಸವಕ್ಕೂ ಮುನ್ನ ದೆಹಲಿಯಲ್ಲಿ ಹೈ ಅಲರ್ಟ್; 19 ಮೋಸ್ಟ್ ವಾಂಟೆಡ್ ಉಗ್ರರ ಪೋಸ್ಟರ್ ಬಿಡುಗಡೆ ಮಾಡಿದ ಪೊಲೀಸರು

0

ನವದೆಹಲಿ: ದೇಶಾದ್ಯಂತ ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಸ್ವಾತಂತ್ರ್ಯೋತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು 19 ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಸಾರ್ವಜನಿಕ ಸ್ಥಳಗಳು ಹಾಗೂ ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಈ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ. ಪೋಸ್ಟರ್‌ಗಳಲ್ಲಿ ಆರೋಪಿಗಳ ಛಾಯಾಚಿತ್ರ ಹಾಗೂ ಗುರುತಿನ ವಿವರಗಳನ್ನು ಪ್ರಕಟಿಸಲಾಗಿದ್ದು, ಇವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದರೆ ತಕ್ಷಣ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಲಾಗಿದೆ.

ಮೋಸ್ಟ್ ವಾಂಟೆಡ್ ಆರೋಪಿಗಳ ಬಂಧನಕ್ಕೆ ನೆರವಾಗುವಂತಹ ವಿಶ್ವಾಸಾರ್ಹ ಮಾಹಿತಿ ನೀಡುವವರಿಗೆ ಸೂಕ್ತ ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಘೋಷಿಸಿದ್ದಾರೆ. ಮಾಹಿತಿ ನೀಡುವವರ ಗುರುತನ್ನು ಗೌಪ್ಯವಾಗಿ ಇಡಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

ದೆಹಲಿ ಪೊಲೀಸರು ಕೇಂದ್ರದ ಭದ್ರತಾ ಸಂಸ್ಥೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ. ಸೂಕ್ಷ್ಮ ಪ್ರದೇಶಗಳು, ಪ್ರಮುಖ ಮಾರುಕಟ್ಟೆಗಳು, ರೈಲು ನಿಲ್ದಾಣಗಳು, ಬಸ್ ಟರ್ಮಿನಲ್‌ಗಳು ಸೇರಿದಂತೆ ಜನದಟ್ಟಣೆ ಹೆಚ್ಚಿರುವ ಸ್ಥಳಗಳಲ್ಲಿ ಕಣ್ಗಾವಲು ಹೆಚ್ಚಿಸಲಾಗಿದೆ.

ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಸಂಭವನೀಯ ಭದ್ರತಾ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ದೆಹಲಿಯಾದ್ಯಂತ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ಪೊಲೀಸರು ತೀವ್ರ ನಿಗಾ ಇರಿಸಿದ್ದಾರೆ.

ಪೋಸ್ಟರ್‌ನಲ್ಲಿ ಯಾರ್ಯಾರ ಹೆಸರು?

ದೆಹಲಿ ಪೊಲೀಸರು ಬಿಡುಗಡೆ ಮಾಡಿರುವ ಪೋಸ್ಟರ್‌ನಲ್ಲಿ ಇಂಡಿಯನ್ ಮುಜಾಹಿದ್ದೀನ್, ಅಲ್-ಖೈದಾ ಹಾಗೂ ವಿವಿಧ ಖಲಿಸ್ತಾನಿ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪಿಗಳ ಮಾಹಿತಿ ಒಳಗೊಂಡಿದೆ.

ಇಂಡಿಯನ್ ಮುಜಾಹಿದ್ದೀನ್‌ಗೆ ಸಂಬಂಧಿಸಿದಂತೆ ರಿಯಾಜ್ ಭಟ್ಕಳ್ ಹಾಗೂ ಶಬಂದರಿ ಮೊಹಮ್ಮದ್ ಇಕ್ಬಾಲ್ ಅಲಿಯಾಸ್ ಇಕ್ಬಾಲ್ ಭಟ್ಕಳ್ ಅವರ ಹೆಸರುಗಳನ್ನು ಪೋಸ್ಟರ್‌ನಲ್ಲಿ ಉಲ್ಲೇಖಿಸಲಾಗಿದೆ.

ಅಲ್-ಖೈದಾ ಜತೆಗೆ ಸಂಪರ್ಕ ಹೊಂದಿರುವ ಆರೋಪಿಗಳ ಪಟ್ಟಿಯಲ್ಲಿ ಮೊಹಮ್ಮದ್ ಶಾರ್ಜೀಲ್ ಅಖ್ತರ್, ಅಬು ಸುಫಿಯಾನ್ ಹಾಗೂ ಸೈಯದ್ ಮೊಹಮ್ಮದ್ ಅರ್ಷಿಯಾನ್ ಅವರ ಹೆಸರುಗಳಿವೆ.

ಖಲಿಸ್ತಾನಿ ಭಯೋತ್ಪಾದಕ ಸಂಘಟನೆಗಳಿಗೆ ಸಂಬಂಧಿಸಿದಂತೆ ಖಲಿಸ್ತಾನ್ ಜಿಂದಾಬಾದ್ ಫೋರ್ಸ್‌ನ ರಂಜಿತ್ ಸಿಂಗ್ ಅಲಿಯಾಸ್ ನೀತಾ ಮತ್ತು ಪರಮಜಿತ್ ಸಿಂಗ್ ಪಮ್ಮಾ, ಖಲಿಸ್ತಾನ್ ಟೈಗರ್ ಫೋರ್ಸ್‌ನ ಅರ್ಶ್‌ದೀಪ್ ಸಿಂಗ್ ಅಲಿಯಾಸ್ ಅರ್ಶ್ ದಲಾ ಅವರ ಹೆಸರುಗಳನ್ನು ಪ್ರಮುಖವಾಗಿ ಉಲ್ಲೇಖಿಸಲಾಗಿದೆ.

ಇದಲ್ಲದೆ, ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್‌ಗೆ ಸಂಬಂಧಿಸಿದ ಹರ್ವಿಂದರ್ ಸಿಂಗ್ ಸಂಧು ಅಲಿಯಾಸ್ ರಿಂಡಾ, ವಾಧವಾ ಸಿಂಗ್ ಬಬ್ಬರ್ ಹಾಗೂ ಗುರ್ಮೀತ್ ಸಿಂಗ್ ಬಗ್ಗಾ ಸೇರಿದಂತೆ ಇತರ ಮೋಸ್ಟ್ ವಾಂಟೆಡ್ ಆರೋಪಿಗಳ ಮಾಹಿತಿಯನ್ನೂ ಪೊಲೀಸರು ಪ್ರಕಟಿಸಿದ್ದಾರೆ.

ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಿದ್ದು, ಸಾರ್ವಜನಿಕರು ಸಹ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ.

ರೇಣುಕಾಸ್ವಾಮಿ ಕೇಸ್‌ನಲ್ಲಿ ಟ್ವಿಸ್ಟ್‌ ಮೇಲೆ ಟ್ವಿಸ್ಟ್: ಪ್ರದೂಷ್ ಭದ್ರತೆಗೆ ಕೋರ್ಟ್ ಸೂಚನೆ, ಮಾಧ್ಯಮಗಳಿಗೆ ಕೋರ್ಟ್ ವಾರ್ನಿಂಗ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ14 ಆರೋಪಿ ಪ್ರದೂಷ್ ಸಲ್ಲಿಸಿರುವ ಮಾಫಿ ಸಾಕ್ಷಿ ಅರ್ಜಿ ಇದೀಗ ವಿಚಾರಣೆಯ ಕೇಂದ್ರಬಿಂದುವಾಗಿದೆ. 59ನೇ ಸಿಸಿಹೆಚ್ ಕೋರ್ಟ್‌ನ ನ್ಯಾಯಾಧೀಶೆ ಸುಜಾತ ಎಂ. ಸಾಂಬ್ರಾಣಿ ಅವರ ಮುಂದೆ ಅರ್ಜಿ ವಿಚಾರಣೆ ಆರಂಭವಾಗಿದ್ದು, ಪ್ರದೂಷ್ ಪರ ವಕೀಲ ದಿವಾಕರ್ ಹಾಗೂ ದರ್ಶನ್ ಪರ ವಕೀಲ ಹಷ್ಮತ್ ಪಾಷಾ ನಡುವೆ ತೀವ್ರ ವಾದ-ಪ್ರತಿವಾದ ನಡೆದಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿದ್ದು, ಪವಿತ್ರಾ ಗೌಡ, ದರ್ಶನ್, ಪ್ರದೂಷ್ ಸೇರಿದಂತೆ ಆರೋಪಿಗಳು ವಿಚಾರಣೆಯಲ್ಲಿ ಭಾಗಿಯಾಗಿದ್ದಾರೆ.

ಪ್ರದೂಷ್ ಪರ ವಕೀಲ ದಿವಾಕರ್ ಅವರು, ಪ್ರದೂಷ್ ಅಪ್ರೂವರ್ ಆಗಲು ಬಯಸಿದ್ದು, ಅವರ ಹೇಳಿಕೆಯನ್ನು ಕೋರ್ಟ್ ದಾಖಲಿಸಬೇಕು ಎಂದು ವಾದಿಸಿದ್ದಾರೆ. ಈ ಪ್ರಕರಣದಲ್ಲಿ ಕಿಡ್ನಾಪ್, ಕೊಲೆ ಮತ್ತು ಸಾಕ್ಷ್ಯ ನಾಶಕ್ಕೆ ಯತ್ನ ಎಂಬ ಮೂರು ಆಯಾಮಗಳಿವೆ. ಹೀಗಾಗಿ ಪ್ರದೂಷ್ ಅವರ ಅರ್ಜಿಯನ್ನು ವಿಳಂಬ ಮಾಡದೆ ಪರಿಗಣಿಸಿ, ಅವರ ಹೇಳಿಕೆ ದಾಖಲಿಸಲು ಅವಕಾಶ ನೀಡಬೇಕು ಎಂದು ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಅರ್ಜಿ ವಿಚಾರಣೆಯನ್ನು ವಿಳಂಬ ಮಾಡಿದರೆ ಪ್ರಕರಣದ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ. ಆದ್ದರಿಂದ ಸಾಧ್ಯವಾದಷ್ಟು ಬೇಗ ಅರ್ಜಿ ಪರಿಗಣಿಸಿ ಹೇಳಿಕೆ ದಾಖಲಿಸುವುದು ಅಗತ್ಯ ಎಂದು ದಿವಾಕರ್ ವಾದಿಸಿದ್ದಾರೆ.

ಆದರೆ ದರ್ಶನ್ ಪರ ವಕೀಲ ಹಷ್ಮತ್ ಪಾಷಾ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ‘ಎ14 ಇನ್ನೂ ಆರೋಪಿಯೇ ಹೊರತು ಸಾಕ್ಷಿಯಲ್ಲ. ಅವರು ಇನ್ನೂ ಸಾಕ್ಷಿಯಾಗಿಲ್ಲ. ಕೋರ್ಟ್ ಕೂಡ ಅವರ ಮಾಫಿ ಸಾಕ್ಷಿ ಅರ್ಜಿಯನ್ನು ಇನ್ನೂ ಪರಿಗಣಿಸಿಲ್ಲ’ ಎಂದು ವಾದಿಸಿದ್ದಾರೆ.

ಸೆಷನ್ಸ್ ಕೋರ್ಟ್‌ನ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲು ಅವಕಾಶವಿದೆ. ಒಂದು ವೇಳೆ ಹೈಕೋರ್ಟ್ ಸೆಷನ್ಸ್ ಕೋರ್ಟ್ ಆದೇಶವನ್ನು ಎತ್ತಿಹಿಡಿದರೆ, ನಂತರ ಮುಂದಿನ ಪ್ರಕ್ರಿಯೆ ಮುಂದುವರಿಸಬಹುದು. ಹೀಗಿರುವಾಗ ತಕ್ಷಣವೇ ಪ್ರದೂಷ್ ಅವರ ಹೇಳಿಕೆ ದಾಖಲಿಸುವುದು ಸೂಕ್ತವಲ್ಲ ಎಂದು ಹಷ್ಮತ್ ಪಾಷಾ ಪ್ರತಿವಾದಿಸಿದ್ದಾರೆ.

ಇದಕ್ಕೆ ದಿವಾಕರ್ ತಿರುಗೇಟು ನೀಡಿದ್ದು, ‘ನಾನು ಪ್ರದೂಷ್ ಸಾಕ್ಷಿ ಎಂದು ಹೇಳುತ್ತಿಲ್ಲ. ಅವರು ಸಾಕ್ಷಿಯಾಗಲು ಮನವಿ ಮಾಡಿದ್ದಾರೆ. ಅದಕ್ಕಾಗಿಯೇ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದಾರೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರದೂಷ್ ಅವರ ಅರ್ಜಿಯನ್ನು ಪುರಸ್ಕರಿಸಿ ಹೇಳಿಕೆ ದಾಖಲಿಸಲು ಅವಕಾಶ ನೀಡಬೇಕು ಎಂದು ದಿವಾಕರ್ ಮತ್ತೆ ಮನವಿ ಮಾಡಿದ್ದಾರೆ. ಪ್ರದೂಷ್ ಅವರ ಹೇಳಿಕೆ ಸಾಕ್ಷಿಯಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಪ್ರಾಸಿಕ್ಯೂಷನ್ ನಿರ್ಧರಿಸಲಿದೆ. ಅವರು ಸಾಕ್ಷಿಯಾಗದಿದ್ದರೆ ಆರೋಪಿಯಾಗಿಯೇ ಮುಂದುವರಿಯಲಿದ್ದಾರೆ ಎಂದು ವಾದಿಸಿದ್ದಾರೆ.

ಅಲ್ಲದೆ, ಪ್ರಾಸಿಕ್ಯೂಷನ್ ಈಗಾಗಲೇ ಮಾಫಿ ಸಾಕ್ಷಿಯಾಗಲು ಪ್ರದೂಷ್‌ಗೆ ಸಮ್ಮತಿ ನೀಡಿದೆ ಎಂಬುದನ್ನೂ ದಿವಾಕರ್ ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಹೀಗಾಗಿ ಅರ್ಜಿ ವಿಚಾರಣೆಯನ್ನು ಮುಂದೂಡದೆ, ಮಾಫಿ ಸಾಕ್ಷಿ ಅರ್ಜಿಯನ್ನು ಪುರಸ್ಕರಿಸಿ ಹೇಳಿಕೆ ದಾಖಲಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ವಿಚಾರಣೆಯ ನಡುವೆ ಪ್ರದೂಷ್ ಅವರ ಭದ್ರತೆಯ ಬಗ್ಗೆಯೂ ವಕೀಲ ದಿವಾಕರ್ ಕೋರ್ಟ್ ಮುಂದೆ ಮನವಿ ಮಾಡಿದ್ದಾರೆ. ಪ್ರದೂಷ್ ಅವರನ್ನು ಜೈಲಿನಲ್ಲಿ ಪ್ರತ್ಯೇಕವಾಗಿ ಇರಿಸಿ, ಸೂಕ್ತ ಭದ್ರತೆ ಒದಗಿಸಬೇಕು ಎಂದು ಮನವಿ ಮಾಡಲಾಗಿದೆ.

ಇದನ್ನು ಪರಿಗಣಿಸಿದ ನ್ಯಾಯಾಲಯ, ಪ್ರದೂಷ್‌ಗೆ ಸೂಕ್ತ ಭದ್ರತೆ ಒದಗಿಸುವಂತೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದೆ. ಈ ಸಂಬಂಧ ಒಂದು ವಾರ ಕಾಲಾವಕಾಶ ನೀಡಿರುವ ಕೋರ್ಟ್, ಪ್ರದೂಷ್ ಅವರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ಇದೇ ವೇಳೆ ಪ್ರಕರಣದ ಕುರಿತು ವರದಿ ಮಾಡುವ ಮಾಧ್ಯಮಗಳಿಗೂ ನ್ಯಾಯಾಲಯ ಖಡಕ್ ವಾರ್ನಿಂಗ್ ನೀಡಿದೆ. ಪ್ರಕರಣದ ಬಗ್ಗೆ ಸರಿಯಾದ ಮಾಹಿತಿಯನ್ನೇ ನೀಡಬೇಕು. ಇಲ್ಲಿ ಆಗಿರುವುದು ಒಂದು, ಅಲ್ಲಿ ಪ್ರಕಟವಾಗುವುದು ಮತ್ತೊಂದು ಆಗಬಾರದು ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.

ಹೀಗಾಗಿ ಇದೀಗ ಕೋರ್ಟ್‌ನ ಮುಂದಿರುವ ಪ್ರಮುಖ ಪ್ರಶ್ನೆ ಪ್ರದೂಷ್ ಅವರ ಮಾಫಿ ಸಾಕ್ಷಿ ಅರ್ಜಿಯೇ ಆಗಿದೆ. ಎ14 ಆರೋಪಿಗೆ ಅಪ್ರೂವರ್ ಆಗುವ ಅವಕಾಶ ಸಿಗುತ್ತಾ? ಮಾಫಿ ಸಾಕ್ಷಿ ಅರ್ಜಿಗೆ ಕೋರ್ಟ್ ಒಪ್ಪಿಗೆ ನೀಡುತ್ತಾ? ಅಥವಾ ದರ್ಶನ್ ಪರ ವಕೀಲರ ಆಕ್ಷೇಪದ ಹಿನ್ನೆಲೆಯಲ್ಲಿ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುತ್ತಾ? ಎಂಬ ಕುತೂಹಲ ಮೂಡಿದೆ.

ಬೆಂಗಳೂರು ಕಂಠೀರವ ಸ್ಟುಡಿಯೋ ಬಳಿ ಭೀಕರ ದುರಂತ: ಮಣ್ಣಿನ ತಡೆಗೋಡೆ ಕುಸಿದು ಕಾರ್ಮಿಕ ಸಾವು

0

ಬೆಂಗಳೂರು: ರಾಜಧಾನಿಯ ಕಂಠೀರವ ಸ್ಟುಡಿಯೋ ಮುಂಭಾಗ ಹಾಗೂ ಡಾ. ರಾಜ್‌ಕುಮಾರ್ ಪುಣ್ಯಭೂಮಿ ಬಳಿ ನಡೆಯುತ್ತಿದ್ದ ಅಂಡರ್‌ಪಾಸ್ ಕಾಮಗಾರಿ ವೇಳೆ ಭೀಕರ ದುರಂತ ಸಂಭವಿಸಿದೆ. ಸುಮಾರು 20 ಅಡಿ ಆಳಕ್ಕೆ ತೋಡಲಾಗಿದ್ದ ಗುಂಡಿಯ ಮಣ್ಣಿನ ತಡೆಗೋಡೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಓರ್ವ ಕಾರ್ಮಿಕ ಮೃತಪಟ್ಟಿದ್ದು, ಹಲವು ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ.

ಅಂಡರ್‌ಪಾಸ್ ನಿರ್ಮಾಣಕ್ಕಾಗಿ ರಸ್ತೆಯಲ್ಲಿ ಸುಮಾರು 20 ಅಡಿ ಆಳದವರೆಗೆ ಮಣ್ಣು ತೆಗೆಯಲಾಗಿತ್ತು. ಎಂದಿನಂತೆ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿಸಿಕೊಂಡಿದ್ದ ವೇಳೆ ಏಕಾಏಕಿ ಮೇಲ್ಭಾಗದಲ್ಲಿದ್ದ ಮಣ್ಣಿನ ತಡೆಗೋಡೆ ಕುಸಿದು ಬಿದ್ದಿದೆ. ಕ್ಷಣಾರ್ಧದಲ್ಲಿ ಮಣ್ಣು ಕುಸಿದ ಪರಿಣಾಮ ಸ್ಥಳದಲ್ಲಿದ್ದ ಐವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಉಸಿರಾಡಲಾಗದೆ ಪರದಾಡಿದ್ದಾರೆ.

ದುರಂತದ ಬೆನ್ನಲ್ಲೇ ಸಿಬ್ಬಂದಿ ಹಾಗೂ ಸಾರ್ವಜನಿಕರು ತಕ್ಷಣ ಕಾರ್ಯಾಚರಣೆಗೆ ಮುಂದಾಗಿದ್ದು, ಮಣ್ಣಿನಡಿ ಸಿಲುಕಿದ್ದ ಮೂವರು ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ಘಟನೆಯಲ್ಲಿ ಓರ್ವ ಕಾರ್ಮಿಕ ಮೃತಪಟ್ಟಿರುವುದು ದೃಢಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಮಣ್ಣಿನಡಿ ಸಿಲುಕಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಹೆಚ್ಚುವರಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಮಣ್ಣಿನಡಿ ಇನ್ನೂ ಯಾರಾದರೂ ಸಿಲುಕಿಕೊಂಡಿದ್ದಾರೆಯೇ ಎಂಬ ಅನುಮಾನ ಹಿನ್ನೆಲೆಯಲ್ಲಿ ರಕ್ಷಣಾ ಸಿಬ್ಬಂದಿ ವ್ಯಾಪಕ ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನಾ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.

‘ನನ್ನ ಮತವನ್ನೇ ತೆಗೆದುಹಾಕಿದ್ದಾರೆ’: ಎಸ್‌ಐಆರ್‌ ವಿರುದ್ಧ ನಟ ಪ್ರಕಾಶ್ ರೈ ಕಿಡಿ

ಬೆಂಗಳೂರು: ಎಸ್‌ಐಆರ್‌ ಪ್ರಕ್ರಿಯೆ ನಡುವೆ ನಟ ಪ್ರಕಾಶ್ ರೈ ಅವರ ಮತದಾರರ ಪಟ್ಟಿಯಲ್ಲಿನ ಹೆಸರು ಡಿಲೀಟ್ ಆಗಿರುವ ವಿಚಾರ ಮುನ್ನೆಲೆಗೆ ಬಂದಿದೆ. ಬೆಂಗಳೂರಿನಿಂದ ಎಸ್‌ಐಆರ್‌ ಅಡಿಯಲ್ಲಿ ಡಿಲೀಟ್ ಆಗಿರುವ 65 ಲಕ್ಷ ಮತದಾರರಲ್ಲಿ ತಾನೂ ಒಬ್ಬ ಎಂದು ಹೇಳಿಕೊಂಡಿರುವ ಪ್ರಕಾಶ್ ರೈ, ತಮ್ಮ ಹುಟ್ಟೂರು ಹಾಗೂ ಬೆಳೆದ ಕ್ಷೇತ್ರದಿಂದಲೇ ಮತದಾನದ ಹಕ್ಕು ಕಳೆದುಕೊಂಡಿರುವುದಾಗಿ ಇನ್‌ಸ್ಟಾಗ್ರಾಂ ವಿಡಿಯೊ ಮೂಲಕ ತಿಳಿಸಿದ್ದಾರೆ.

2024ರಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್‌ನಲ್ಲಿ ಮತ ಚಲಾಯಿಸಿದ್ದಾಗಿ ಹೇಳಿರುವ ಪ್ರಕಾಶ್ ರೈ, ಇದೇ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದೆ. ಹೀಗಿದ್ದರೂ ತಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಪ್ರಶ್ನಿಸಿದ್ದಾರೆ.

ಪ್ರಕಾಶ್ ರೈ ಅವರ ಮತದಾರರ ಪಟ್ಟಿಯಲ್ಲಿನ ಹೆಸರು ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಇರುವ ಆರೋಪ ಹೊಸದಲ್ಲ. 2019ರಲ್ಲೇ ಅವರ ವಿರುದ್ಧ ಈ ಸಂಬಂಧ ದೂರು ದಾಖಲಾಗಿತ್ತು. ಬೆಂಗಳೂರಿನ ಶಾಂತಿನಗರದಲ್ಲಿ ಒಂದು, ಚೆನ್ನೈನ ವಲಚೇರಿಯಲ್ಲಿ ಎರಡು ಹಾಗೂ ತೆಲಂಗಾಣದ ಸೆರಿಲಿಂಗಂಪಲ್ಲಿ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಇದೆ ಎಂದು ಆರೋಪಿಸಲಾಗಿತ್ತು.

ಈ ಪ್ರಕರಣದ ವಿಚಾರಣೆಗೆ ಗೈರಾಗಿದ್ದ ಹಿನ್ನೆಲೆಯಲ್ಲಿ 2025ರಲ್ಲಿ ನ್ಯಾಯಾಲಯ ವಾರೆಂಟ್ ಹೊರಡಿಸಿತ್ತು. ಬಳಿಕ ಜುಲೈ 10, 2026ರಂದು ಪ್ರಕಾಶ್ ರೈ ಷರತ್ತುಬದ್ಧ ಜಾಮೀನು ಪಡೆದಿದ್ದಾರೆ. ಪ್ರಕರಣ ಇನ್ನೂ ವಿಚಾರಣೆಯಲ್ಲಿದೆ. ಈ ಹಿನ್ನೆಲೆಯಲ್ಲಿ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವ ಆರೋಪವೇ ಎಸ್‌ಐಆರ್‌ ವೇಳೆ ಅವರ ಮತ ಡಿಲೀಟ್ ಆಗಲು ಕಾರಣವಾಗಿರಬಹುದೇ ಎಂಬ ಚರ್ಚೆ ನಡೆಯುತ್ತಿದೆ.

ಈ ನಡುವೆ ತಮ್ಮ ಮತವನ್ನು ಮರಳಿ ಪಡೆಯಲು ಹೋರಾಟ ನಡೆಸುವುದಾಗಿ ಪ್ರಕಾಶ್ ರೈ ಸ್ಪಷ್ಟಪಡಿಸಿದ್ದಾರೆ. ಎಷ್ಟು ದಾಖಲೆಗಳನ್ನು ನೀಡಬೇಕಾದರೂ ನೀಡುವುದಾಗಿ ಹೇಳಿರುವ ಅವರು, ತಮ್ಮ ಮತವನ್ನು ಡಿಲೀಟ್ ಮಾಡಿರುವ ವಿಚಾರದಲ್ಲಿ ಸುಮ್ಮನೆ ಕೂರುವುದಿಲ್ಲ ಎಂದು ತಿಳಿಸಿದ್ದಾರೆ.

‘ಮಂಗಳ ಗೌರಿ ಮದುವೆ’ ಧಾರಾವಾಹಿಯ ಕಾನ್‌ಸ್ಟೇಬಲ್‌ ಇನ್ನಿಲ್ಲ: ಹಿರಿಯ ನಟ ವಿಜಯಕುಮಾರ್ ಜಿತೂರಿ ಕೊನೆಯುಸಿರು

ಗದಗ: ‘ಮಂಗಳ ಗೌರಿ ಮದುವೆ’ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿ ಕಿರುತೆರೆ ಪ್ರೇಕ್ಷಕರಿಗೆ ಪರಿಚಿತರಾಗಿದ್ದ ಹಿರಿಯ ಕಲಾವಿದ ವಿಜಯಕುಮಾರ್ ಜಿತೂರಿ ನಿಧನರಾಗಿದ್ದಾರೆ. ಸೋಮವಾರ ಸಂಜೆ ಗದಗದ ಬೆಟಗೇರಿಯಲ್ಲಿ ಅವರು ಕೊನೆಯುಸಿರೆಳೆದಿದ್ದು, ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು ಎನ್ನಲಾಗಿದೆ.

ವಿಜಯಕುಮಾರ್ ಜಿತೂರಿ ಅವರದ್ದು ಬಹುಮುಖ ಪ್ರತಿಭೆ. ನಟನೆಯೊಂದಿಗೆ ಗಾಯನದಲ್ಲೂ ಆಸಕ್ತಿ ಹೊಂದಿದ್ದ ಅವರು ಕಿರುತೆರೆ ಮಾತ್ರವಲ್ಲದೆ ಹಿರಿತೆರೆ ಹಾಗೂ ರಂಗಭೂಮಿಯಲ್ಲೂ ಅಭಿನಯಿಸಿದ್ದರು. ಹಲವು ವರ್ಷಗಳ ಕಾಲ ಬಣ್ಣದ ಲೋಕದೊಂದಿಗೆ ನಂಟು ಹೊಂದಿದ್ದ ಅವರು, ವಿವಿಧ ಪಾತ್ರಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು.

ಗಗನ್ ಚಿನ್ನಪ್ಪ ಅಭಿನಯದ ‘ಮಂಗಳ ಗೌರಿ ಮದುವೆ’ ಧಾರಾವಾಹಿಯಲ್ಲಿ ಕಾನ್‌ಸ್ಟೇಬಲ್ ಪಾತ್ರದಲ್ಲಿ ವಿಜಯಕುಮಾರ್ ಜಿತೂರಿ ಕಾಣಿಸಿಕೊಂಡಿದ್ದರು. ಧಾರಾವಾಹಿಯ ಹಲವು ಪ್ರಮುಖ ಸನ್ನಿವೇಶಗಳಲ್ಲಿ ಗಗನ್ ಚಿನ್ನಪ್ಪ ಅವರೊಂದಿಗೆ ಅಭಿನಯಿಸಿ ಗುರುತಿಸಿಕೊಂಡಿದ್ದರು.

ಕಲಾ ಕ್ಷೇತ್ರದಲ್ಲಿ ಹಲವು ವರ್ಷಗಳ ಅನುಭವ ಹೊಂದಿದ್ದರೂ ಇತ್ತೀಚಿನ ದಿನಗಳಲ್ಲಿ ಅವರಿಗೆ ಹೆಚ್ಚಿನ ನಟನಾ ಅವಕಾಶಗಳು ದೊರೆಯಲಿಲ್ಲ ಎನ್ನಲಾಗಿದೆ. ಇದರ ಪರಿಣಾಮವಾಗಿ ಆರ್ಥಿಕ ಸಂಕಷ್ಟ ಎದುರಾಗಿತ್ತು. ಬೆಂಗಳೂರಿನಲ್ಲಿ ಮನೆ ಬಾಡಿಗೆ ಸೇರಿದಂತೆ ಜೀವನ ನಿರ್ವಹಣೆಯ ಸವಾಲುಗಳಿಂದಾಗಿ ಅವರು ಹುಟ್ಟೂರಾದ ಗದಗಕ್ಕೆ ವಾಪಸ್ ಆಗಿದ್ದರು.

ಇದೀಗ ವಿಜಯಕುಮಾರ್ ಜಿತೂರಿ ಅವರ ನಿಧನದಿಂದ ಅವರ ಕುಟುಂಬ, ಆಪ್ತರು ಹಾಗೂ ಕಲಾ ಕ್ಷೇತ್ರದ ಸಹೋದ್ಯೋಗಿಗಳು ಆಘಾತಕ್ಕೊಳಗಾಗಿದ್ದಾರೆ. ನಟ, ಗಾಯಕ ಹಾಗೂ ರಂಗಭೂಮಿ ಕಲಾವಿದನಾಗಿ ಅವರು ನೀಡಿದ ಕೊಡುಗೆಯನ್ನು ಸ್ಮರಿಸುತ್ತಾ ಹಲವರು ಸಂತಾಪ ಸೂಚಿಸಿದ್ದಾರೆ.

ನಮ್ಮ ಮೆಟ್ರೋದಲ್ಲಿ ಹೊಸ ರೆಕಾರ್ಡ್: ಒಂದೇ ದಿನ 11.19 ಲಕ್ಷ ಮಂದಿ ಪ್ರಯಾಣ, ಹಿಂದಿನ ದಾಖಲೆ ಉಡೀಸ್

0

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ಹೊಸ ದಾಖಲೆ ನಿರ್ಮಿಸಿದೆ. ಒಂದೇ ದಿನ 11.19 ಲಕ್ಷಕ್ಕೂ ಅಧಿಕ ಮಂದಿ ಮೆಟ್ರೋದಲ್ಲಿ ಸಂಚರಿಸುವ ಮೂಲಕ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ.

ಆಗಸ್ಟ್ 10ರಂದು, ಸೋಮವಾರ ಒಂದೇ ದಿನ ನಮ್ಮ ಮೆಟ್ರೋದಲ್ಲಿ ಬರೋಬ್ಬರಿ 11,19,815 ಮಂದಿ ಪ್ರಯಾಣಿಸಿದ್ದಾರೆ. ಈ ಮೂಲಕ ಮೆಟ್ರೋ ಆರಂಭವಾದ ಬಳಿಕದ ಅತಿ ಹೆಚ್ಚಿನ ರೈಡರ್‌ಶಿಪ್ ದಾಖಲಾಗಿದ್ದು, ಹೊಸ ಮೈಲಿಗಲ್ಲು ನಿರ್ಮಾಣವಾಗಿದೆ.

ಇದಕ್ಕೂ ಮುನ್ನ ಕಳೆದ ಐದು ತಿಂಗಳ ಹಿಂದೆ, ಯುಗಾದಿ ಹಬ್ಬದ ಸಂದರ್ಭದಲ್ಲಿ ನಮ್ಮ ಮೆಟ್ರೋದಲ್ಲಿ 10.73 ಲಕ್ಷ ಮಂದಿ ಪ್ರಯಾಣಿಸಿದ್ದು ದಾಖಲೆಯಾಗಿತ್ತು. ಇದೀಗ ಈ ದಾಖಲೆಯನ್ನು ಮೀರಿಸುವ ಮೂಲಕ ಹೊಸ ದಾಖಲೆ ಸೃಷ್ಟಿಯಾಗಿದೆ.

ನಮ್ಮ ಮೆಟ್ರೋ ಆರಂಭವಾಗಿ 15 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನ 11 ಲಕ್ಷಕ್ಕೂ ಅಧಿಕ ಪ್ರಯಾಣಿಕರು ಮೆಟ್ರೋ ಸೇವೆ ಬಳಸಿದ್ದಾರೆ.

ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ, ಸಾರ್ವಜನಿಕ ಸಾರಿಗೆಯ ಮೇಲಿನ ಅವಲಂಬನೆ ಹಾಗೂ ಮೆಟ್ರೋ ಜಾಲದ ವಿಸ್ತರಣೆಯಿಂದಾಗಿ ಪ್ರಯಾಣಿಕರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಇದೀಗ ಒಂದೇ ದಿನ 11,19,815 ಮಂದಿ ಮೆಟ್ರೋದಲ್ಲಿ ಸಂಚರಿಸಿರುವುದು ಬೆಂಗಳೂರಿನಲ್ಲಿ ಮೆಟ್ರೋ ಸೇವೆಯ ಮೇಲಿನ ಜನರ ಅವಲಂಬನೆ ಹೆಚ್ಚುತ್ತಿರುವುದಕ್ಕೆ ಸಾಕ್ಷಿಯಾಗಿದೆ.

ಬೈಕ್ ಟ್ಯಾಕ್ಸಿಗಳಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್; ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಗೆ ಅಫಿಡವಿಟ್

0

ಬೆಂಗಳೂರು: ನಗರದಲ್ಲಿ ಸದ್ದಿಲ್ಲದೆ ಕಾರ್ಯಾಚರಣೆ ನಡೆಸುತ್ತಿರುವ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಕರ್ನಾಟಕ ಸರ್ಕಾರ ಹಾಗೂ ಸಾರಿಗೆ ಇಲಾಖೆ ಬಿಗ್ ಶಾಕ್ ನೀಡಿದೆ. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವ ರಾಜ್ಯ ಸರ್ಕಾರ, ದ್ವಿಚಕ್ರ ವಾಹನಗಳನ್ನು ವಾಣಿಜ್ಯ ಉದ್ದೇಶದ ಟ್ಯಾಕ್ಸಿಗಳಾಗಿ ಬಳಸಲು ಅನುಮತಿ ನೀಡಲು ಸಾಧ್ಯವಿಲ್ಲ ಎಂಬ ತನ್ನ ನಿಲುವನ್ನು ನ್ಯಾಯಾಲಯದ ಮುಂದೆ ಸ್ಪಷ್ಟಪಡಿಸಿದೆ.

ಬೈಕ್ ಟ್ಯಾಕ್ಸಿಗೆ ಸರ್ಕಾರದ ವಿರೋಧಕ್ಕೆ ಕಾರಣಗಳೇನು?

ಬೈಕ್ ಟ್ಯಾಕ್ಸಿ ಸೇವೆಯಿಂದ ಪ್ರಯಾಣಿಕರ ಸುರಕ್ಷತೆಗೆ ಅಪಾಯವಿದೆ ಎಂಬುದನ್ನು ರಾಜ್ಯ ಸರ್ಕಾರ ಪ್ರಮುಖ ಕಾರಣವಾಗಿ ಮುಂದಿಟ್ಟಿದೆ. ಸುರಕ್ಷತೆ ಮತ್ತು ವಿಮೆ ಕೊರತೆ: ಬೈಕ್ ಟ್ಯಾಕ್ಸಿಗಳಲ್ಲಿ ಪ್ರಯಾಣಿಸುವ ಸಾರ್ವಜನಿಕರಿಗೆ ಸೂಕ್ತ ಸುರಕ್ಷತಾ ವ್ಯವಸ್ಥೆ ಇರುವುದಿಲ್ಲ. ಇಂತಹ ವಾಹನಗಳಿಗೆ ಅಧಿಕೃತ ವಾಣಿಜ್ಯ ವಿಮಾ ರಕ್ಷಣೆ ಇಲ್ಲದಿರುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಪ್ರಯಾಣಿಕರ ಹಿತಾಸಕ್ತಿ ಕಾಪಾಡುವುದು ಕಷ್ಟವಾಗಲಿದೆ ಎಂದು ಸರ್ಕಾರ ಹೇಳಿದೆ.

ಅಪಘಾತದ ಅಪಾಯ: ದ್ವಿಚಕ್ರ ವಾಹನಗಳಿಗೆ ಸಂಬಂಧಿಸಿದಂತೆ ಅಪಘಾತಗಳು ಹಾಗೂ ಅವುಗಳಿಂದ ಉಂಟಾಗುವ ಸಾವು-ನೋವುಗಳ ಪ್ರಮಾಣ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸರ್ಕಾರ ವಾದಿಸಿದೆ.

ಕೇಂದ್ರ ಕಾಯ್ದೆಯಲ್ಲಿ ಸ್ಪಷ್ಟ ಉಲ್ಲೇಖವಿಲ್ಲ: ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ‘ಬೈಕ್ ಟ್ಯಾಕ್ಸಿ’ ಎಂಬುದಕ್ಕೆ ಯಾವುದೇ ಸ್ಪಷ್ಟ ವ್ಯಾಖ್ಯಾನ ಅಥವಾ ಪ್ರತ್ಯೇಕ ನಿಯಮಾವಳಿಗಳಿಲ್ಲ. ಹೀಗಾಗಿ ದ್ವಿಚಕ್ರ ವಾಹನಗಳನ್ನು ವಾಣಿಜ್ಯ ಟ್ಯಾಕ್ಸಿ ಸೇವೆಗೆ ಬಳಸಲು ಅನುಮತಿ ನೀಡುವ ಕಾನೂನು ಆಧಾರವಿಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ಎರಡನೇ ದಿನವೂ ಮುಂದುವರಿದ ಸಾರಿಗೆ ಇಲಾಖೆ ಕಾರ್ಯಾಚರಣೆ

ಒಂದೆಡೆ ಬೈಕ್ ಟ್ಯಾಕ್ಸಿ ವಿಚಾರವಾಗಿ ಸುಪ್ರೀಂಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಯುತ್ತಿದ್ದರೆ, ಮತ್ತೊಂದೆಡೆ ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ಸಾರಿಗೆ ಇಲಾಖೆಯ ಜಾರಿ ವಿಭಾಗದ ಕಾರ್ಯಾಚರಣೆ ಮತ್ತಷ್ಟು ಚುರುಕುಗೊಂಡಿದೆ.

ಪ್ರಾದೇಶಿಕ ಸಾರಿಗೆ ಕಚೇರಿ (RTO) ಅಧಿಕಾರಿಗಳು ಓಲಾ, ಊಬರ್ ಹಾಗೂ ರಾಪಿಡೋ ಸೇರಿದಂತೆ ವಿವಿಧ ಆ್ಯಪ್ ಆಧಾರಿತ ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ದಾಳಿ ನಡೆಸುತ್ತಿದ್ದಾರೆ.

ಬೆಂಗಳೂರಿನ ಕೋರಮಂಗಲ ಆರ್‌ಟಿಒ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ತೀವ್ರಗೊಂಡಿದ್ದು, ಒಂದೇ ದಿನ 85ಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಅನಧಿಕೃತ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಕಡಿವಾಣ ಹಾಕಲು ಸಾರಿಗೆ ಇಲಾಖೆ ಒಟ್ಟು 11 ವಿಶೇಷ ತಂಡಗಳನ್ನು ರಚಿಸಿದೆ. ಈ ತಂಡಗಳು ನಗರದ ವಿವಿಧ ಪ್ರದೇಶಗಳಲ್ಲಿ ತಪಾಸಣೆ ನಡೆಸುತ್ತಿವೆ.

ಈ ಹಿಂದೆ ಕಾರ್ಯಾಚರಣೆಯ ಮೊದಲ ದಿನವೇ 256 ಬೈಕ್ ಟ್ಯಾಕ್ಸಿಗಳನ್ನು ಸೀಜ್ ಮಾಡಲಾಗಿತ್ತು ಎನ್ನಲಾಗಿದೆ. ಇದೀಗ ಎರಡನೇ ದಿನವೂ 85ಕ್ಕೂ ಹೆಚ್ಚು ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕೇವಲ ಎರಡು ದಿನಗಳಲ್ಲಿ ನೂರಾರು ಬೈಕ್ ಟ್ಯಾಕ್ಸಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಬೈಕ್ ಟ್ಯಾಕ್ಸಿ ಸೇವೆಯ ಕಾನೂನು ಮಾನ್ಯತೆ ಕುರಿತು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೇ ಸಾರಿಗೆ ಇಲಾಖೆಯ ಈ ಕಾರ್ಯಾಚರಣೆ ಮಹತ್ವ ಪಡೆದುಕೊಂಡಿದೆ.